ಬಹಿರಂಗ
ಶಿಕ್ಷಣದ ಮಾರುಕಟ್ಟೆಯೂ ಆನ್ ಲೈನ್ ಹರಾಜುಕಟ್ಟೆಯೂ
- ನಾ ದಿವಾಕರ
ಕೋವಿದ್ 19 ಭಾರತದ ಸಾಮಾಜಿಕ ಚೌಕಟ್ಟಿನಲ್ಲಿರುವ ಎಲ್ಲ ರೀತಿಯ ತಾರತಮ್ಯ, ದೌರ್ಜನ್ಯ, ಕ್ರೌರ್ಯ ಮತ್ತು ಅನಿಷ್ಟಗಳನ್ನೂ ಹೊರಹಾಕಿರುವಂತೆಯೇ, ನಮ್ಮ ಆಡಳಿತ ವ್ಯವಸ್ಥೆಯಲ್ಲಿರುವ ದೌರ್ಬಲ್ಯ, ನಿಷ್ಕ್ರಿಯತೆ ಮತ್ತು ವ್ಯವಧಾನದ ಕೊರತೆಯನ್ನೂ ಹೊರಹಾಕಿಬಿಟ್ಟಿದೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ ಭಾರತೀಯ ಸಮಾಜ ಎದುರಿಸಿರುವ ಕ್ಲಿಷ್ಟ ಸನ್ನಿವೇಶಗಳು ಜನಸಾಮಾನ್ಯರನ್ನು ಗೊಂದಲಕ್ಕೆ ಸಿಲುಕಿಸಿದ್ದರೆ ಅದಕ್ಕೆ ಮೂಲ ಕಾರಣ ಕೊರೋನಾ ಅಲ್ಲ. ಸಮಗ್ರ ಚಿಂತನೆ ಇಲ್ಲದೆ, ಪೂರ್ವಭಾವಿ ನೀಲನಕ್ಷೆಯಿಲ್ಲದೆ, ವ್ಯಾಪಕ ಅಧ್ಯಯನ ಮತ್ತು ಗ್ರಹಿಕೆ ಇಲ್ಲದೆ, ಆ ಕ್ಷಣದ ಅನಿವಾರ್ಯತೆಗಳನ್ನೇ ಆದ್ಯತೆಗಳೆಂದು ಪರಿಗಣಿಸುವ ಯಾವುದೇ ಆಡಳಿತ ವ್ಯವಸ್ಥೆ ಈ ರೀತಿಯ ಗೊಂದಲ ಸೃಷ್ಟಿಸುವುದು ಸಹಜ.
ಕೊರೋನಾ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಜ್ಜೆ ಹೆಜ್ಜೆಗೂ ಇದೇ ಪ್ರಮಾದ ಎಸಗುತ್ತಿರುವುದನ್ನು ಗಮನಿಸುತ್ತಲೇ ಬಂದಿದ್ದೇವೆ. ಲಾಕ್ ಡೌನ್ ಜಾರಿಗೊಳಿಸುವುದರಿಂದ ಹಿಡಿದು ಸಡಿಲಗೊಳಿಸುವವರೆಗೂ ಸರ್ಕಾರಗಳ ನಿರ್ಧಾರಗಳು ಅವೈಜ್ಞಾನಿಕತೆಯ ನೆಲೆಯಲ್ಲೇ ಕಂಡುಬರುತ್ತಿವೆ.
ಇದರ ಒಂದು ಪರಿಣಾಮವನ್ನು ವಲಸೆ ಕಾರ್ಮಿಕರ ಬವಣೆಯಲ್ಲಿ ಕಾಣುತ್ತಿದ್ದೇವೆ. ಕೊರೋನಾಗೂ ವಲಸೆ ಕಾರ್ಮಿಕರಿಗೂ ಸಂಬಂಧ ಇಲ್ಲ, ಆದರೆ ಲಾಕ್ ಡೌನ್ ಘೋಷಣೆಗೂ ವಲಸೆ ಕಾರ್ಮಿಕರ ಸಮಸ್ಯೆಗೂ ಸಂಬಂಧವಿದೆ. ನಿತ್ಯ ಸಾವಿನ ಪಯಣ ನಡೆಸುತ್ತಿರುವ ಲಕ್ಷಾಂತರ ಶ್ರಮಜೀವಿಗಳಿಗೆ ಕೊರೋನಾ ಸಂಬಂಧಿತ ಲಾಕ್ ಡೌನ್ ಮಾರಕವಾಗಿರುವುದಂತೂ ಸತ್ಯ.
ಭಾರತ ಎರಡು ತಿಂಗಳಿಗೂ ಹೆಚ್ಚು ಕಾಲ ಲಾಕ್ ಡೌನ್ ಅನುಭವಿಸಿದೆ. ಇನ್ನೂ ಒಂದು ತಿಂಗಳು ಮುಂದುವರೆಯಲಿದೆ. ಅರ್ಥವ್ಯವಸ್ಥೆಯ ವ್ಯತ್ಯಯಗಳನ್ನು ಗಮನದಲ್ಲಿಟ್ಟುಕೊಂಡು ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸುವುದು ತಪ್ಪೇನಲ್ಲ. ಆದರೆ ಅರ್ಥವ್ಯವಸ್ಥೆ ಎಂದರೆ ಕೇವಲ ಮಾರುಕಟ್ಟೆ ಮಾತ್ರವೇ ಅಲ್ಲ. ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ತರುವ ಚಟುವಟಿಕೆಗಳಷ್ಟೇ ಆರ್ಥಿಕತೆ ಅಲ್ಲ. ಹಣಕಾಸು ಬಂಡವಾಳ, ಸರಕುಗಳ ಮಾರುಕಟ್ಟೆಯಲ್ಲಿ ಕಾಣುವ ವಿದ್ಯಮಾನ.
ಔದ್ಯಮಿಕ ಬಂಡವಾಳ ಉತ್ಪಾದನೆಯ ಮಾರುಕಟ್ಟೆಯಲ್ಲಿ ಕಾಣುವ ವಿದ್ಯಮಾನ. ಇದನ್ನೂ ಮೀರಿದ ಒಂದು ವಿದ್ಯಮಾನ ಸಾಮಾಜಿಕ ಬಂಡವಾಳ. ಈ ಸಾಮಾಜಿಕ ಬಂಡವಾಳವೇ ಸಮಾಜದ ಅಭ್ಯುದಯಕ್ಕೆ ಸುಭದ್ರ ತಳಪಾಯ ಒದಗಿಸುತ್ತದೆ. ಇತಿಹಾಸದ ಎಲ್ಲ ಕಾಲಘಟ್ಟಗಳಲ್ಲೂ ಈ ಅಗೋಚರ ಬಂಡವಾಳವನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಕಾಣುತ್ತಲೇ ಬಂದಿದ್ದೇವೆ.
ಈ ಸಾಮಾಜಿಕ ಬಂಡವಾಳದ ಮೂಲ ಆಕರ ಇರುವುದು ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯಲ್ಲಿ. ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯ ಸುಸ್ಥಿತಿಯಲ್ಲಿರುವ ಯಾವುದೇ ದೇಶ ಶೀಘ್ರಗತಿಯಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯ ಎನ್ನುವುದಕ್ಕೆ ಇಂದಿಗೂ ಹಲವು ರಾಷ್ಟ್ರಗಳು ಸಾಕ್ಷಿಯಾಗಿವೆ.
ಅನೇಕ ಬಂಡವಾಳಶಾಹಿ ರಾಷ್ಟ್ರಗಳಲ್ಲೂ ಸಹ ಈ ಎರಡೂ ವಲಯಗಳಲ್ಲಿ ಸಾರ್ವಜನಿಕ ಬಂಡವಾಳಹೂಡಿಕೆ ಹೆಚ್ಚಾಗಿರುತ್ತದೆ, ಸರ್ಕಾರದ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದನ್ನು ಇಂದಿಗೂ ಗಮನಿಸಬಹುದು. ಭಾರತದಂತಹ ಅಭಿವೃದ್ಧಿಶೀಲ ದೇಶಗಳಲ್ಲಿ ಇದು ಪ್ರಥಮ ಆದ್ಯತೆಯಾಗಬೇಕಿತ್ತು.
ಭಾರತದ ಸಂವಿಧಾನದಲ್ಲಿ ಪ್ರಾಥಮಿಕ ಆರೋಗ್ಯ ಮತ್ತು ಸಾರ್ವತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವ ಮೂಲ ಉದ್ದೇಶವೂ ಇದೇ ಆಗಿತ್ತು. ಆದರೆ ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಈ ಎರಡೂ ವಲಯಗಳು ಅಕ್ಷರಶಃ ಹರಾಜು ಮಾರುಕಟ್ಟೆಗಳಾಗಿವೆ. ಆರೋಗ್ಯ ವ್ಯವಸ್ಥೆಯ ದುರವಸ್ಥೆ ಕೊರೋನಾ ಸಂದರ್ಭದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಈಗ ವಾಣಿಜ್ಯೀಕರಣಗೊಂಡ ಶಿಕ್ಷಣ ವ್ಯವಸ್ಥೆ ಮತ್ತೊಮ್ಮೆ ಬಲಿಪೀಠದಲ್ಲಿ ಕುಳಿತಿದೆ. ಶಿಕ್ಷಣ ಎಂದರೆ ಕೇವಲ ಬೋಧನೆ ಮತ್ತು ಕಲಿಕೆಯ ಪ್ರಕ್ರಿಯೆ ಅಲ್ಲ, ಅಥವಾ ಮಕ್ಕಳಿಗೆ ಅರ್ಥವಾಗದ್ದನ್ನು ಅರ್ಥಮಾಡಿಸುವ ಪ್ರಕ್ರಿಯೆಯೂ ಅಲ್ಲ. ಜ್ಞಾನಾರ್ಜನೆಯ ಮಾರ್ಗವಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಶಿಕ್ಷಣ ವ್ಯವಸ್ಥೆ ಒಂದೆಡೆ ಬದುಕು ಕಲಿಸಿದರೆ ಮತ್ತೊಂದೆಡೆ ಬದುಕಲು ಕಲಿಸುತ್ತದೆ.
ಬದುಕು ಕಲಿಸುವ ಮಾರ್ಗ ಸಾಮಾಜಿಕ ಬಂಡವಾಳ ವೃದ್ಧಿಗೆ ಬುನಾದಿ ಹಾಕುತ್ತದೆ. ಬದುಕಲು ಕಲಿಸುವ ಮಾರ್ಗ ಆರ್ಥಿಕ ಬಂಡವಾಳಕ್ಕೆ ಅಡಿಪಾಯ ಹಾಕುತ್ತದೆ. ಕಳೆದ ಮೂರು ನಾಲ್ಕು ದಶಕಗಳಿಂದಲೂ ಭಾರತದ ಶಿಕ್ಷಣ ವ್ಯವಸ್ಥೆ ಎರಡನೆಯ ಮಾರ್ಗವನ್ನೇ ಅಧಿಕೃತವಾಗಿ ಅನುಸರಿಸುತ್ತಿದೆ. ಭಾರತದ ಶಾಲಾ ಕಾಲೇಜುಗಳಿಂದ ಹೊರಹೊಮ್ಮುತ್ತಿರುವ ಜ್ಞಾನಾರ್ಜನೆಯ ಭೌತಿಕ ಸರಕುಗಳು ಆರ್ಥಿಕ ಮಾರುಕಟ್ಟೆಗೆ ಬೃಹತ್ ಪ್ರಮಾಣದ ಕಚ್ಚಾ ವಸ್ತುಗಳನ್ನು ಒದಗಿಸುತ್ತಿದೆ.
ಹಣಕಾಸು ಬಂಡವಾಳ ವ್ಯವಸ್ಥೆಗೆ ಈ ಕಚ್ಚಾವಸ್ತುಗಳೇ ಸುಭದ್ರ ಬುನಾದಿಯಾಗಿದೆ. ಆದರೆ ಸಾಮಾಜಿಕ ವ್ಯವಸ್ಥೆಯಲ್ಲಿನ ಲೋಪಗಳತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ. ಕ್ಷಣಮಾತ್ರದಲ್ಲಿ ಜಗತ್ತಿನ ಮತ್ತೊಂದು ತುದಿಗೆ ಜಿಗಿದು ಎಲ್ಲವನ್ನೂ ಗ್ರಹಿಸುವ ಒಂದು ವರ್ಗ ತಮ್ಮ ಮೂಗಿನಡಿಯಲ್ಲೇ ಇರುವ ಕ್ರೌರ್ಯ ಮತ್ತು ದೌರ್ಜನ್ಯಗಳನ್ನು ಗುರುತಿಸಲು ಸಾಧ್ಯವಾಗದಿರುವುದನ್ನು ಈ ಹಿನ್ನೆಲೆಯಲ್ಲೇ ನೋಡಬೇಕಿದೆ.
ಈ ಜ್ಞಾನಾರ್ಜನೆಯ ಮಾರ್ಗಗಳು ಭಾರತೀಯ ಸಮಾಜಕ್ಕೆ ಬದುಕು ಕಲಿಸುತ್ತಿವೆಯೇ ಎನ್ನುವ ಪ್ರಶ್ನೆ ಎದುರಾದಾಗ ನಿರುತ್ತರರಾಗುತ್ತೇವೆ. ನಿಜ, ಸಮಾಜದ ಒಂದು ವರ್ಗಕ್ಕೆ ಬದುಕಲು ಕಲಿಸುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆ ಜಾಗತಿಕ ಮಟ್ಟದ ಜ್ಞಾನ ಭಂಡಾರಗಳನ್ನು ಸೃಷ್ಟಿಸಿದೆ. ಪ್ರತಿವರ್ಷ ಲಕ್ಷಾಂತರ ಕಾಲೇಜುಗಳಿಂದ ಮಾರುಕಟ್ಟೆಯ ಜಗುಲಿಯಲ್ಲಿ ಬಂದು ಬೀಳುವ ಬೌದ್ಧಿಕ ಸರಕುಗಳು ಈ ದೇಶದ ಜಿಡಿಪಿ ವೃದ್ಧಿಸಲು, ಮಾರುಕಟ್ಟೆ ವಿಸ್ತರಿಸಲು ಮತ್ತು ಮಾರುಕಟ್ಟೆ ಸೂಚ್ಯಂಕನ್ನು ಹೆಚ್ಚಿಸಲು ನೆರವಾಗುತ್ತಿವೆ.
ಆದರೆ ಒಂದು ಪ್ರಬುದ್ಧ ಸಮಾಜದ ನಿರ್ಮಾಣಕ್ಕೆ ಅಗತ್ಯವಾದ ಸಂಯಮ, ಸೌಜನ್ಯ, ಸೌಹಾರ್ದತೆ ಮತ್ತು ಬೌದ್ಧಿಕ ಕ್ಷಮತೆಯನ್ನು ಕಲಿಸುತ್ತಿಲ್ಲ. ಸಮಾಜ ನಿರ್ಮಾಣಕ್ಕೆ ಅತ್ಯಗತ್ಯವಾದ ಕಚ್ಚಾವಸ್ತುಗಳು ಇವು. ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸುವ ಸಲುವಾಗಿಯೇ ಸಿದ್ಧಪಡಿಸಲಾಗುವ ಪಠ್ಯಕ್ರಮಗಳು ಕೀಲಿಮಣೆಯ ಕೂಲಿಗಳನ್ನು ಸೃಷ್ಟಿಸುತ್ತಿವೆ, ಸಂವೇದನಾಶೀಲ ಸಮಾಜವನ್ನು ರೂಪಿಸುತ್ತಿಲ್ಲ ಎನ್ನುವುದು ವಾಸ್ತವ.
ಮೂರು ವರ್ಷದ ಮಗು ಶಾಲೆಯ ಮೊದಲ ಮೆಟ್ಟಿಲು ಏರಿದ ಕ್ಷಣದಿಂದ 25 ನೆಯ ವರ್ಷದಲ್ಲಿ ಯಾವುದೋ ಒಂದು ವೃತ್ತಿಪರ ಶಿಕ್ಷಣದ ಪ್ರಮಾಣಪತ್ರ ಗಳಿಸಿ ಹೊರಬರುವವವರೆಗೂ ನಾವು ಕಾಣುತ್ತಿರುವುದು ಒಂದು ವಿಸ್ತಾರವಾದ, ವಿಶಾಲವಾಗಿರುವ, ಬೃಹತ್ ಷಾಪಿಂಗ್ ಮಾಲ್ ಮಾತ್ರ,. ಸರ್ಕಾರಿ ಶಾಲೆಗಳು ಇನ್ನೂ ಉಸಿರಾಡುತ್ತಿವೆಯಾದರೂ, ಖಾಸಗಿ ಶಾಲೆಗಳ ದಂಧೆ ಗ್ರಾಮೀಣ ಮಕ್ಕಳನ್ನೂ ಆವರಿಸಿದೆ.
ಜನ ಏಕೆ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಬೇಕು ಎನ್ನುವ ಪ್ರಶ್ನೆ ಸಹಜವಾದದ್ದೇ. ಆದರೆ ಪಠ್ಯಕ್ರಮವನ್ನಾಧರಿಸಿದ ಶಿಕ್ಷಣ ಮತ್ತು ಈ ಶೈಕ್ಷಣಿಕ ವ್ಯವಸ್ಥೆಯ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳೇ ಮಕ್ಕಳ ಬದುಕನ್ನು ರೂಪಿಸುವ ಏಕೈಕ ಮಾರ್ಗ ಎನ್ನುವ ಒಂದು ಪರಿಸ್ಥಿತಿಯನ್ನು ಮಾರುಕಟ್ಟೆ ವ್ಯವಸ್ಥೆ ಸೃಷ್ಟಿಸಿದೆ. ಈ ವ್ಯವಸ್ಥೆಯಲ್ಲಿ ಬದುಕಬೇಕಾದವರು ಸಿದ್ಧಸೂತ್ರವನ್ನೇ ಅನುಸರಿಸುವುದು ಸಹಜ.
ಅತಿ ಹೆಚ್ಚಿನ ಅಂಕ ಗಳಿಸುವುದು, ನೂರಕ್ಕೆ ನೂರು ಅಂಕ ಗಳಿಸುವುದು, ಸಕಲ ವಿದ್ಯಾಪಾರಂಗತರಾಗಿ ಹೊರಹೊಮ್ಮುವುದು, ಸ್ಪರ್ಧಾತ್ಮಕ ಮಾರುಕಟ್ಟೆಗೆ ಸಿದ್ಧರಾಗುವುದು ಈ ಎಲ್ಲ ಲಕ್ಷಣಗಳು ಮಕ್ಕಳನ್ನು ವಸ್ತುಶಃ ಯಂತ್ರಗಳನ್ನಾಗಿ ಮಾಡಿಬಿಟ್ಟಿವೆ. ಈ ಯಂತ್ರಗಳನ್ನು ಸಂಸ್ಕರಿಸಿ, ಪರಿಷ್ಕೃತಗೊಳಿಸಿ, ತಿದ್ದಿ ತೀಡಿ ಶಿಲ್ಪಕಲೆಯಂತೆ ಸಿದ್ಧಪಡಿಸಲು ಖಾಸಗಿ ವಿದ್ಯಾ ಸಂಸ್ಥೆಗಳು ನಾಯಿಕೊಡೆಗಳಂತೆ ತಲೆಎತ್ತುತ್ತಿವೆ.
ಅತ್ಯಂತ ಶ್ರೇಷ್ಠ ಬೋಧನೆ, ಅತ್ಯಂತ ಪರಿಣತ ಬೋಧಕರು, ಅತ್ಯಾಧುನಿಕ ಸುಸಜ್ಜಿತ ಮೂಲ ಸೌಕರ್ಯಗಳು ಮತ್ತು ವಿಶ್ವ ಶ್ರೇಷ್ಠ ಶೈಕ್ಷಣಿಕ ಪರಿಸರ ಇರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳೂ ಸಹ ಮತ್ತೊಂದು ಕೋಚಿಂಗ್ ಕೇಂದ್ರದ ಮೊರೆ ಹೋಗದಿದ್ದರೆ ಅಂಕಪಟ್ಟಿ ಮೂಲೆಗುಂಪಾಗಿಬಿಡುತ್ತದೆ. ಈ ಪರಿಸ್ಥಿತಿಗೆ ಕಾರಣ ಬಂಡವಾಳ ಮಾರುಕಟ್ಟೆಯ ಲಾಭಕೋರತನ ಮತ್ತು ಈ ದೇಶದ ಆಡಳಿತ ವ್ಯವಸ್ಥೆ.
ಶಿಕ್ಷಣ ಮತ್ತು ಕಲಿಕೆಯ ಮೂಲ ಉದ್ದೇಶ ಜ್ಞಾನಾರ್ಜನೆಯೇ ಆದರೂ ಅದು ಬದುಕಲು ಅವಕಾಶ ಒದಗಿಸುವ ಜೊತೆಗೆ ಬದುಕು ಕಲಿಸುವ ಧ್ಯೇಯ ಹೊಂದಿರಬೇಕು. ಕಳೆದ ನಾಲ್ಕು ದಶಕಗಳಲ್ಲಿ ಭಾರತದ ಶೈಕ್ಷಣಿಕ ವ್ಯವಸ್ಥೆ ತಯಾರಿಸುತ್ತಿರುವ ಜ್ಞಾನಯಂತ್ರಗಳಲ್ಲಿ ಸಾಧನೆಯ ಹಪಹಪಿ, ಪ್ರಗತಿಯ ಉತ್ಸುಕತೆ ಮತ್ತು ಅಭಿವೃದ್ಧಿಯ ಮುನ್ನೋಟ ಹೇರಳವಾಗಿ ಕಂಡುಬಂದರೂ, ಸುತ್ತಲಿನ ಸಮಾಜದತ್ತ ಕಣ್ಣೆತ್ತಿ ನೋಡುವ ವ್ಯವಧಾನವನ್ನು ಕಾಣಲಾಗುವುದಿಲ್ಲ. ಇದಕ್ಕೆ ಕಾರಣ ಖಾಸಗಿ ವಿದ್ಯಾಸಂಸ್ಥೆಗಳ ಸ್ಪರ್ಧಾತ್ಮಕ ಧೋರಣೆ ಮತ್ತು ಮಾರುಕಟ್ಟೆ ಕೇಂದ್ರಿತ ಬೋಧನೆ. ಆಧುನಿಕ ಮಾರುಕಟ್ಟೆ ವ್ಯವಸ್ಥೆಯಲ್ಲಿ ಬಂಡವಾಳ ಹೂಡಿಕೆ ಮತ್ತು ಲಾಭಗಳಿಕೆಯೇ ಔದ್ಯಮಿಕ ಮಂತ್ರವಾಗಿರುವುದರಿಂದ ಶಿಕ್ಷಣವೂ ಸಹ ಲಾಭಗಳಿಕೆಯ ಕ್ಷೇತ್ರಗಳಾಗಿವೆ.
ಕೊರೋನಾ ಸಂದರ್ಭದಲ್ಲಿ ಈ ಕಡುಲೋಭಿಗಳ ಮೂಲ ಲಕ್ಷಣಗಳು ಸ್ಪಷ್ಟವಾಗಿ ಹೊರಹೊಮ್ಮುತ್ತಿವೆ. ಸಿಕ್ಕ ಅವಕಾಶವನ್ನು ಬಾಚಿಕೊಂಡು ಸಾಧ್ಯವಾದಷ್ಟೂ ಲಾಭಗಳಿಸುವ ಮಾರುಕಟ್ಟೆ ತಂತ್ರಕ್ಕೆ ಶಿಕ್ಷಣ ಕ್ಷೇತ್ರವೂ ಬಲಿಯಾಗುತ್ತಿದೆ. ಈ ದೇಶದ ಹಿತವಲಯದ ವರ್ಗಗಳೂ ಸಹ ಈ ಪೈಪೋಟಿಯಲ್ಲಿ ತಮಗೆ ಬೇಕಾದ್ದನ್ನು ಬಾಚಿಕೊಳ್ಳುವ ಮೂಲಕ ಭವಿಷ್ಯದ ಬುನಾದಿಯನ್ನು ಭದ್ರಪಡಿಸಿಕೊಳ್ಳುತ್ತಿವೆ.
ಇಲ್ಲಿ ಅವಕಾಶವಂಚಿತ ಸಮುದಾಯಗಳು ಅಬ್ಬೇಪಾರಿಗಳಂತೆ ಅಂಚಿಗೆ ತಳ್ಳಲ್ಪಡುತ್ತಿದ್ದಾರೆ. ಇವರೇ ಬಹುಸಂಖ್ಯಾತರು ಎನ್ನುವುದು ವಾಸ್ತವ. ಈ ಅವಕಾಶವಂಚಿತರಿಗೆ ಆಸರೆಯಾಗಿ ನಿಲ್ಲಬೇಕಾದ ಪ್ರಭುತ್ವ ಮತ್ತು ಸರ್ಕಾರಗಳು ತಮ್ಮ ನೈತಿಕ-ಸಾಂವಿಧಾನಿಕ ಹೊಣೆಗಾರಿಕೆಯನ್ನೇ ಮರೆತು, ಮಾರುಕಟ್ಟೆಯ ತಾಳಕ್ಕೆ ಹೆಜ್ಜೆ ಹಾಕುತ್ತಿರುವುದು ದುರಂತ.
ಕೊರೋನಾ ಸಂದರ್ಭದಲ್ಲಿ ಕಾಣುತ್ತಿರುವ ಆನ್ ಲೈನ್ ಶಿಕ್ಷಣದ ದಂಧೆ ಮಾರುಕಟ್ಟೆ ವ್ಯವಸ್ಥೆಯ ಕರಾಳ ಮುಖವನ್ನು ಶೈಕ್ಷಣಿಕ ವಲಯದಲ್ಲಿ ಅನಾವರಣಗೊಳಿಸಿದೆ. ಒಂದನೆ ತರಗತಿಯ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒದಗಿಸುವ ಮಟ್ಟಿಗೆ ಶಿಕ್ಷಣ ಸಂಸ್ಥೆಗಳು ಧನದಾಹಿಗಳಾಗಿವೆ.
ರಾಜ್ಯ ಸರ್ಕಾರ ಪ್ರಸ್ತುತ ಶೈಕ್ಷಣಿಕ ವರ್ಷವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿಂದ ಆರಂಭಿಸಿದರೂ ರಜಾ ದಿನಗಳನ್ನು ಕಡಿಮೆ ಮಾಡುವ ಮೂಲಕ ಪಠ್ಯಕ್ರಮ ಬೋಧನೆಯನ್ನು ಪೂರೈಸಬಹುದು. ಆದರೆ ಖಾಸಗಿ ಶಾಲೆಗಳಿಗೆ ಶುಲ್ಕದ ಚಿಂತೆ. ಆನ್ ಲೈನ್ ಶಿಕ್ಷಣದ ಮೂಲಕ ವರ್ಷದ ಶುಲ್ಕವನ್ನು ವಸೂಲಿ ಮಾಡಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಖಾತರಿಪಡಿಸಿಕೊಳ್ಳುವ ದುರುದ್ದೇಶದ ಹೊರತಾಗಿ ಈ ಪ್ರಯತ್ನದಲ್ಲಿ ಮತ್ತಾವ ಪುರುಷಾರ್ಥವನ್ನೂ ಕಾಣಲಾಗುವುದಿಲ್ಲ.
ಈ ಸಂದರ್ಭದಲ್ಲಿ ಸರ್ಕಾರ ಪ್ರಬುದ್ಧತೆ ತೋರಬಹುದಿತ್ತು. ಶಿಕ್ಷಣ ವ್ಯವಸ್ಥೆಯನ್ನು ರಾಷ್ಟ್ರೀಕರಣ ಮಾಡುವ ಆತ್ಮಸ್ಥೈರ್ಯವನ್ನು ಕಳೆದುಕೊಂಡಿರುವ ಆಳುವ ವರ್ಗಗಳು ಕನಿಷ್ಟ ಖಾಸಗಿ ವಿದ್ಯಾಸಂಸ್ಥೆಗಳ ಮೇಲೆ ನಿಯಂತ್ರಣ ಸಾಧಿಸಲಾದರೂ ಮುಂದಾಗಬಹುದು. ಹತ್ತನೆ ತರಗತಿಯ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಈಗಾಗಲೇ ಬೇರೂರಿರುವ ತಾರತಮ್ಯಗಳನ್ನು ಮತ್ತಷ್ಟು ಒರೆಹಚ್ಚಿ ನೋಡಿರುವ ರಾಜ್ಯಸರ್ಕಾರ ಎಲ್ಲ ಮಕ್ಕಳಿಗೂ ಉಚಿತ ಲ್ಯಾಪ್ ಟಾಪ್ ಅಥವಾ ಟ್ಯಾಬ್ ಒದಗಿಸುವ ಮೂಲಕ ಎಲ್ಲ ವರ್ಗಗಳಿಗೂ ನೆರವಾಗಬಹುದು.
ಅಂತರ್ಜಾಲ ಸಿಗ್ನಲ್ ಸಮಸ್ಯೆಯನ್ನು ಬಗೆಹರಿಸುವುದು ಕಷ್ಟವೇನಲ್ಲ. ಆದರೆ ನಮ್ಮ ಸರ್ಕಾರಗಳಿಗೆ ಒಂದೆಡೆ ಇಚ್ಚಾಶಕ್ತಿಯ ಕೊರತೆ ಇದ್ದರೆ ಮತ್ತೊಂದೆಡೆ ಖಾಸಗಿ ವಿದ್ಯಾಸಂಸ್ಥೆಗಳ ವಿರೋಧ ಕಟ್ಟಿಕೊಳ್ಳುವ ಧೈರ್ಯವೂ ಇಲ್ಲ. ಬಹುಪಾಲು ಶೈಕ್ಷಣಿಕ ಸಂಸ್ಥೆಗಳು ರಾಜಕೀಯ ನಾಯಕರುಗಳ ಒಡೆತನದಲ್ಲಿರುವುದು ಅಥವಾ ಈ ಪಕ್ಷಗಳನ್ನು ಪೋಷಿಸುವ ಮಠಗಳ ಮಾಲಿಕತ್ವದಲ್ಲಿರುವುದು ಇದಕ್ಕೆ ಕಾರಣ.
ಈ ದುರಂತದ ನಡುವೆಯೇ ಖಾಸಗಿ ಶಾಲೆಗಳು ಆನ್ ಲೈನ್ ಶಿಕ್ಷಣದ ನೆಪ ಹೂಡಿ ಪೋಷಕರಿಂದ ಹಣ ವಸೂಲಿ ಮಾಡುವ ದಂಧೆಗೆ ಇಳಿದಿವೆ. 8-9ನೆಯ ತರಗತಿ ಮಕ್ಕಳಿಗೆ ಸ್ಮಾರ್ಟ್ಫೋನ್ ನೀಡಿದರೆ ಏನಾಗುತ್ತದೆಯೋ ಎನ್ನುವ ಆತಂಕ ಪ್ರತಿಯೊಬ್ಬ ಪೋಷಕರಲ್ಲೂ ಇರುವುದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕಿದೆ. ಈ ಆತಂಕಕ್ಕೆ ಕಾರಣಗಳೂ ಇಲ್ಲದಿಲ್ಲ.
ಖಾಸಗಿ ಶಾಲೆಯಲ್ಲಿ ಮಕ್ಕಳನ್ನು ಸೇರಿಸುವವರೆಲ್ಲರೂ ಸ್ಮಾರ್ಟ್ಫೋನ್ ಹೊಂದಿರುತ್ತಾರೆ ಎನ್ನುವ ಭ್ರಮೆಯಿಂದಲೂ ಖಾಸಗಿ ಶಿಕ್ಷಣೋದ್ಯಮಿಗಳು ಹೊರಬರಬೇಕಿದೆ. ನಗರವಾಸಿ ಹಿತವಲಯಗಳಿಗೆ, ಶ್ರೀಮಂತರಿಗೆ ಶಿಕ್ಷಣ ಎನ್ನುವುದು ಮುನ್ನಡೆಯ ಮೆಟ್ಟಿಲಾಗಿ ಮಾತ್ರವೇ ಕಾಣುತ್ತದೆ. ಹಾಗಾಗಿಯೇ ಅಂಕಪಟ್ಟಿಯ ವ್ಯಸನ, ಪೈಪೋಟಿಯ ಧಾವಂತ ಮತ್ತು ಮಾರುಕಟ್ಟೆಯ ತವಕ. ಆದರೆ ಭಾರತದ ಬಹುಪಾಲು ಜನತೆಗೆ ಶಿಕ್ಷಣ ಬದುಕು ಕಟ್ಟಿಕೊಡಬೇಕಾದ ಒಂದು ಮಾರ್ಗ.
ಭವಿಷ್ಯದ ಸಮಾಜವನ್ನು ನಿರ್ಮಿಸುವ ಒಂದು ಸಾಧನ. ಈ ಸಮಾಜವೇ ಈ ಬಹುಜನರ ಭವಿಷ್ಯದ ಭೂಮಿಕೆಯಾಗುತ್ತದೆ. ಹಣ ಮತ್ತು ಬಂಡವಾಳ ಜೀವನದ ಅನಿವಾರ್ಯತೆಗಳೇ ಆಗಿದ್ದರೂ ಆದ್ಯತೆ ಆಗಕೂಡದು. ಇದು ಶಿಕ್ಷಣ ವ್ಯವಸ್ಥೆ ಜನತೆಗೆ ಕಲಿಸಬೇಕಾದ ಪಾಠ.
ದುರಂತ ಎಂದರೆ ಶಿಕ್ಷಣದ ವಾಣಿಜ್ಯೀಕರಣ ಶಾಲೆಗಳನ್ನು ಹರಾಜು ಮಾರುಕಟ್ಟೆಗಳನ್ನಾಗಿ ಪರಿವರ್ತಿಸಿದೆ. ಒಂದೆಡೆ ವಿದ್ಯಾಸಂಸ್ಥೆಗಳ ದಂಧೆ ಮತ್ತೊಂದೆಡೆ ಕೋಚಿಂಗ್ ದಂಧೆಯ ನಡುವೆ ಮಧ್ಯಮ ವರ್ಗಗಳೂ ಸಹ ಬಸವಳಿದು ಹೋಗಿರುವುದನ್ನು ಗಮನಿಸಬಹುದು. ಸದೃಢ ಭಾರತ, ವಿಶ್ವಗುರು ಭಾರತ, ಬಲಿಷ್ಟ ಭಾರತ ನಿರ್ಮಿಸುವ ಕನಸು ಕಾಣುತ್ತಿರುವ ಆಳುವ ವರ್ಗಗಳಿಗೆ ಈ ಸೂಕ್ಷ್ಮ ಅರಿವಾಗಿದ್ದರೆ ಕೋವಿದ್ ಸಂದರ್ಭದಲ್ಲಾದರೂ ಶಿಕ್ಷಣದ ವಾಣಿಜ್ಯೀಕರಣದ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದವು.
ಕೋವಿದ್ 19 ಸಮಸ್ಯೆಯ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಒದಗಿಸಿ, ಮಕ್ಕಳ ಆರೋಗ್ಯ ಕಾಪಾಡುವುದೇ ಸರ್ಕಾರದ ಆದ್ಯತೆಯಾಗಿದ್ದಲ್ಲಿ, ಸಾರ್ವತ್ರಿಕ ಶಿಕ್ಷಣದ ರಾಷ್ಟ್ರೀಕರಣಕ್ಕೆ ಮುಂದಾಗುತ್ತಿತ್ತು. ತಾರತಮ್ಯ ಇಲ್ಲದೆ ಎಲ್ಲ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣ ಒದಗಿಸಲು ಮುಂದಾಗುತ್ತಿತ್ತು.
ಆದರೆ ಈಗಾಗಲೇ ದೇಶದ ಆರ್ಥಿಕತೆಯನ್ನು ಕಾರ್ಪೋರೇಟ್ ಉದ್ಯಮಿಗಳಿಗೆ ಒಪ್ಪಿಸಿರುವ ಭಾರತದ ಆಳುವ ವರ್ಗಗಳು ಬಹುಶಃ ಕೊರೋನಾ ನಾಶವಾಗುವ ಮುನ್ನವೇ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನೂ ವಿನಾಶದತ್ತ ಕೊಂಡೊಯ್ಯುವ ಸಾಧ್ಯತೆಗಳಿವೆ. ಆರ್ಥಿಕ ಬಿಕ್ಕಟ್ಟು, ಬಂಡವಾಳದ ಕೊರತೆ, ಬಿಗಡಾಯಿಸಿರುವ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತರುವ ಹೊರೆ, ಸರ್ಕಾರದ ವೆಚ್ಚ ಮತ್ತು ಬಂಡವಾಳ ಹೂಡಿಕೆಯಲ್ಲಿ ಕಡಿತ ಈ ಎಲ್ಲ ಕಾರಣಗಳನ್ನು ಮುಂದೊಡ್ಡಿ ದೇಶದ ಶೈಕ್ಷಣಿಕ ವ್ಯವಸ್ಥೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ನೀಲನಕ್ಷೆ ಸಿದ್ಧವಾಗಿದ್ದರೂ ಅಚ್ಚರಿಯೇನಿಲ್ಲ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಳುಗಿಸುವ ಹುನ್ನಾರದೊಂದಿಗೇ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಇದನ್ನೇ ಸೂಚಿಸುತ್ತದೆ.
ಔದ್ಯಮಿಕ ವಲಯದಲ್ಲಿ ಶೈಕ್ಷಣಿಕ ಪರಿಸರ ಇದ್ದರೆ ಸಮಾಜದ ಮುನ್ನಡೆಗೆ ನೆರವಾಗುತ್ತದೆ. ಶೈಕ್ಷಣಿಕ ವಲಯದಲ್ಲಿ ಔದ್ಯಮಿಕ ಪರಿಸರ ಇದ್ದರೆ ಸಮಾಜ ವಿನಾಶದತ್ತ ಸಾಗುತ್ತದೆ. ಕೊರೋನಾ ಭಾರತೀಯ ಸಮಾಜದಲ್ಲಿ ಆತ್ಮನಿರ್ಭರತೆಯನ್ನು ಸೃಷ್ಟಿಸಿದೆಯೋ ಇಲ್ಲವೋ ಹೇಳಲಾಗದು, ಆದರೆ ಆಳುವ ವರ್ಗಗಳಲ್ಲಿ ಆತ್ಮಸಾಕ್ಷಿ ಇಲ್ಲ ಎನ್ನುವುದನ್ನು ಸ್ಪಷ್ಟವಾಗಿ ನಿರೂಪಿಸಿದೆ. ಹಾಗಾಗಿಯೇ ಶಿಕ್ಷಣದಿಂದ ವಂಚಿತರಾದ ಮಕ್ಕಳೂ ನಮಗೆ ಕಾಣುವುದಿಲ್ಲ, ಹಸಿವಿನಿಂದ ಸಾಯುವ ಮಕ್ಕಳೂ ಕಾಣುವುದಿಲ್ಲ. ಸರ್ಕಾರಕ್ಕೆ ಕಣ್ಣಿಲ್ಲ, ಸಮಾಜಕ್ಕೆ ಇರಬೇಕಲ್ಲವೇ ? ಆದ್ಯತೆಯ ಮಸೂರಗಳನ್ನು ತೆರೆದಿಟ್ಟು ಒಮ್ಮೆ ನೋಡೋಣವೇ ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


