ದಿನದ ಸುದ್ದಿ
ವಿಚಾರವಾದಿ ಡಾ.ಎಚ್. ನರಸಿಂಹಯ್ಯ ಬದುಕು : ಮಿಸ್ ಮಾಡ್ದೆ ಓದಿ ಈ ಲೇಖನ
- ಸಂಗಮೇಶ ಎನ್ ಜವಾದಿ
ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,
ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ, ಬದುಕಿನೂದ್ದಕ್ಕೂ ಸರಳತೆ ಜೀವನ
ಸಾಗಿಸಿದ ಸಾಧಕ.
ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದ
ಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿ
ಶಿಸ್ತು ಮತ್ತು ಸರಳತೆಗೆ ಎಚ್ಚೆನ್ ರವರು ಹೆಚ್ಚು ಆದ್ಯತೆ ನೀಡಿದವರು.
ಜೊತೆಗೆ ಕರ್ನಾಟಕದ ಮೂಡಲಸೀಮೆಯ ಹುಡುಗನೊಬ್ಬ ಅಮೆರಿಕ್ಕೆ ಹೋದರೂ ಉಪ್ಪಿಟ್ಟು ತಿನ್ನುವ, ಗಾಂಧಿಟೊಪ್ಪಿಯನ್ನೇ ತೊಡುವ ಮೂಲಕ ಭಾರತದ ಹಿರಿಮೆಯನ್ನು ಕಾಪಾಡಿಕೊಂಡು ಬಂದ ಶಿಕ್ಷಣಪ್ರೇಮಿ ಎನ್ನುವುದು ನಾವ್ಯಾರು ಮರೆಯುವಂತಿಲ್ಲ.
ಸರಳತೆ, ಪ್ರಾಮಾಣಿಕತೆ, ಸಮಾಜಿಕ ಚಿಂತನೆ, ಪರಿಶುದ್ಧತೆಯನ್ನು ತಮ್ಮ ಬಾಳಿನುದ್ದಕ್ಕೂ ಒಂದು ವ್ರತದಂತೆ ಕಾಯ್ದುಕೊಂಡು ಬಂದ ಎಚ್ಚೆನ್ರ ಬದುಕು ಇಂದಿನ ಸಮಾಜಕ್ಕೆ ಆದರ್ಶ ಮತ್ತು ಮಾರ್ಗದರ್ಶನ ಎಂಬುವುದರಲ್ಲಿ ಎರಡು ಮಾತಿಲ್ಲ ಬಂಧುಗಳೆ.
ಡಾ. ಎಚ್ ಎನ್ ಜನನ – ಜೀವನ
ಎಚ್.ನರಸಿಂಹಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದ ತಂದೆ ಹನುಮಂತಪ್ಪ, ತಾಯಿ ವೆಂಕಟಮ್ಮ ದಂಪತಿಗಳ ಮಗನಾಗಿ 06-06-1920 ರಲ್ಲಿ ಜನಿಸಿದರು.
ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಹೊಸೂರಿನಲ್ಲಿಯೇ ಮುಗಿಸಿದರು. 1935ರಲ್ಲಿ ಬೆಂಗಳೂರಿನ ನ್ಯಾಷನಲ್ ಹೈಸ್ಕೂಲಿಗೆ ಸೇರಿದರು.ತದನಂತರ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್) ಮತ್ತು ಎಂ.ಎಸ್ಸಿ., ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಓದಿದರು. ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ (ಪ್ರಥಮ) ದರ್ಜೆಯಲ್ಲಿ ಉತ್ತೀರ್ಣರಾದರು. 1946ರಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕರಾದರು.
ಅಲ್ಲಿಯೇ ಪ್ರಾಧ್ಯಾಪಕರಾಗಿ, ಆಮೇಲೆ ಹನ್ನೆರಡು ವರ್ಷಗಳ ಕಾಲ ಪ್ರಿನ್ಸಿಪಾಲರಾಗಿದ್ದರು.ಹಾಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ್ದ ಶ್ರೇಯಸ್ಸಿನ ಜೊತೆಗೆ ಆ ಸಮಯದಲ್ಲಿ ಶಿಕ್ಷಣ ರಂಗದಲ್ಲಿ ಮಹತ್ವಪೂರ್ಣ ಬದಲಾವಣೆಗಳು ಮಾಡುವ ಮೂಲಕ ಸುಧಾರಣೆಗಳನ್ನು ಕೈಗೊಂಡ ಹೆಗ್ಗಳಿಕೆ ಇವರದಾಗಿತ್ತು. ಜೊತೆಗೆ ಕನ್ನಡವೆಂದರೆ ಹೆಚ್ಚು ಪ್ರೀತಿ, ಹಾಗೂ ಪ್ರಾವೀಣ್ಯತೆಯನ್ನು ಸಹ ಹೊಂದಿದರು.
ಇವರ ಇಡೀ ಜೀವನ ಶಿಕ್ಷಣಕ್ಕೆ ಮತ್ತು ನಾಲ್ಕು ನ್ಯಾಷನಲ್ ಕಾಲೇಜು, ಐದು ನ್ಯಾಷನ ಲ್ ಹೈಸ್ಕೂಲ್ ಮತ್ತು ಎರಡು ಪ್ರೈಮರಿ ಶಾಲೆಗಳನ್ನೊಳಗೊಂಡ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ ಮೀಸಲಿಟ್ಟಿದ್ದರು.ಜಯನಗರದ ನ್ಯಾಷನಲ್ ಕಾಲೇಜಿನಲ್ಲಿರುವ ಬೆಂಗಳೂರು ಲಲಿತಕಲಾ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿ ಸಂಸ್ಥೆಗಳ ಉನ್ನತಿಗಾಗಿ ಶ್ರಮಿಸಿದ್ದಾರೆ. ಹಾಗೂ ಎಚ್.ಎನ್.ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಹಿರಿಮೆಗೆ ಸಾಕ್ಷಿಯಾಗಿದಾರೆ.
ಇದಲ್ಲದೆ ಬೆಂಗಳೂರು ವಿಶ್ವವಿದ್ಯಾಲಯದ ಪ್ರಗತಿ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಬೆಳವಣಿಗೆ, ಭಾರತದ ಸ್ವಾತಂತ್ರ್ಯ ಚಳುವಳಿ, ಮೈಸೂರು ರಾಜ್ಯದ ಸ್ಥಾಪನೆಗಾಗಿ ಹೋರಾಟ ಹೀಗೆ ಅನೇಕ ವಿಷಯಗಳಲ್ಲಿ ಹೋರಾಟ ಮಾಡಿದ್ದ ಜೀವನದ ಬದುಕು ಇವರದು.
ಮತ್ತೆ ವಿಜ್ಞಾನದಲ್ಲಿ, ವೈಜ್ಞಾನಿಕ ಮನೋಭಾವದಲ್ಲಿ ಅವರಿಗೆ ಅಚಲವಾದ ನಂಬಿಕೆ.ಮೂಢನಂಬಿಕೆ, ಮೌಢ್ಯದ ವಿರುದ್ಧ ಸತತ ಹೋರಾಟ. ಮೂವತ್ತು ವರ್ಷಗಳ ಹಿಂದೆ ಅವರು ಬೆಂಗಳೂರು ವಿಜ್ಞಾನ ವೇದಿಕೆ (Bangalore Science forum) ಎಂಬ ವಿಜ್ಞಾನವೇದಿಕೆಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿದರು. ಸಂಗೀತ, ನಾಟಕ, ನೃತ್ಯ ಮುಂತಾದ ಲಲಿತ ಕಲೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಿರುತ್ತಾರೆ ಹಾಗೂ
ಸರಳ ಕಟ್ಟುನಿಟ್ಟಾದ ಬದುಕನ್ನು ಪಾಲಿಸಿದರು.
ಡಾ.ಎಚ್ ಎನ್ ರವರ ಸರಳತೆ
ಡಾ.ಎಚ್ ಎನ್ ರವರ ಬದುಕಿನಲ್ಲಿ ಅವರು ಕಂಡ ನೋವು, ಸಂಕಟ, ಅನುಭವಿಸಿದ ಬಡತನ, ತಂದೆಯ ಸಾವು, ಓದಿಗಾಗಿ ಊರೂರು ಅಲೆದದ್ದು, ಬರಿಗಾಲಿನಲ್ಲಿ ನಡೆದುಕೊಂಡೆ ಬೆಂಗಳೂರು ತಲುಪಿದ್ದು, ಬದುಕಿಗೊಂದು ಹೊಸ ತಿರುವು ನೀಡಿದ ನ್ಯಾಷನಲ್ ಹೈಸ್ಕೂಲು, ಉಚಿತ ಪ್ರಸಾದ ನಿಲಯದಲ್ಲಿ ಪ್ರವೇಶ ಪಡೆಯಲು ಮಾಡಿದ ಹೋರಾಟ, ಬರೀ ನೀರು ಕುಡಿದೇ ದಿನಗಳನ್ನು ನೂಕಿದ್ದು, ಫೇಲಾದರೆ ಮತ್ತೆ ಮರಳಿ ಊರಿಗೆ ಹೋಗಬೇಕಲ್ಲ ಎನ್ನುವ ಭೀತಿಯಿಂದ ಓದಿದ್ದು, ಪ್ರತಿ ತರಗತಿಯಲ್ಲೂ ಪಟ್ಟಣದ ಹುಡುಗರಿಗೆ ಸ್ಪರ್ಧೆ ಒಡಿದ್ದು ಹೀಗೆ ಹತ್ತು ಹಲವು ಸಂಗತಿಗಳು ಅವರ ಸರಳತೆಗೆ ಸಾಕ್ಷಿಯಾಗಿದೆ.
ಅವರು ಬಾಲ್ಯದಲ್ಲಿ ಅನುಭವಿಸಿದ ಕಡು ಬಡತನ ಮತ್ತು ವಿದ್ಯಾಭ್ಯಾಸಕ್ಕಾಗಿ ಮಾಡಿದ ಹೋರಾಟ ನಂತರದ ಪ್ರಾಮಾಣಿಕ ಸರಳತೆಯ ಬದುಕಿಗೆ ಗಟ್ಟಿ ಅಡಿಪಾಯ ಒದಗಿಸಿತು ಎನ್ನುವುದು ಸುಳ್ಳಲ್ಲ.ನಂತರದ ಭಾಗ ಶಿಕ್ಷಕರಾಗಿ ಎಚ್.ನರಸಿಂಹಯ್ಯನವರು ಮಾಡಿದ ಸಾಧನೆಗಳು ಅದ್ಭುತ. ತಮ್ಮ ಇಡೀ ಬದುಕನ್ನು ಶಿಕ್ಷಕ ವೃತ್ತಿಗಾಗಿ ಮುಡಿಪಾಗಿಟ್ಟ ನರಸಿಂಹಯ್ಯನವರ ಸರಳ ಬದುಕು ಇಂದಿನ ಜನರಿಗೆ ಪ್ರೇರಣೆ ನೀಡುತ್ತದೆ.
ಅಮೇರಿಕಾದಂಥ ಆಕರ್ಷಕ ರಾಷ್ಟ್ರದಲ್ಲಿ ಅಧ್ಯಯನ ಮಾಡಿಯೂ ತಾಯ್ನಾಡಿನಲ್ಲಿ ಸೇವೆ ಸಲ್ಲಿಸಬೇಕೆನ್ನುವ ಅವರ ಹಂಬಲ, ವಿದ್ಯೆ ಕೊಟ್ಟು ಬದುಕು ರೂಪಿಸಿದ ನ್ಯಾಷನಲ್ ಶಿಕ್ಷಣ ಸಂಸ್ಥೆಯಲ್ಲೆ ಕೆಲಸ ಮಾಡಬೇಕೆನ್ನುವ ಅವರ ತುಡಿತ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನಿವೃತ್ತಿಯ ನಂತರ ನ್ಯಾಷನಲ್ ಕಾಲೇಜಿಗೆ ಮರಳಿ ಬಂದ ಅವರ ಸರಳತೆಯ ನಿಷ್ಠೆ, ದೊಡ್ಡ ಹುದ್ಧೆಯಲ್ಲಿದ್ದೂ ವಿದ್ಯಾರ್ಥಿಗಳ ವಸತಿ ಗೃಹದ ಸಣ್ಣ ಕೋಣೆಯಲ್ಲಿ ವಾಸಿಸುತ್ತಿದ್ದ ಅವರ ಸರಳತೆ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಬದುಕಿನುದ್ದಕ್ಕೂ ಶ್ರಮಿಸಿದ್ದು, ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಸೇವೆಗಳು, ಪವಾಡಗಳ ದುರುಪಯೋಗವನ್ನು ವಿರೋಧಿಸಿದ ಅವರ ವೈಚಾರಿಕ ಕ್ರಾಂತಿ, ತಮ್ಮ ಅಂತ್ಯಕ್ರಿಯೆಯನ್ನು ಅತ್ಯಂತ ಸರಳವಾಗಿ ಮಾಡಬೇಕೆಂದು ಅವರು ಬರೆದಿಟ್ಟ ಉಯಿಲು ಹೀಗೆ ಅನೇಕ ಸಂಗತಿಗಳ ಮೂಲಕ ಎಚ್ಚೆನ್ ಅವರ ಅಗಾಧ ಸರಳ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ ಎನ್ನಬಹುದು.
ಅತ್ಯಂತ ಪ್ರಜ್ಞಾಪೂರ್ವಕವಾಗಿ ಅವರು ರೂಢಿಸಿಕೊಂಡಿದ್ದ ಸರಳ ಬದುಕು ಎಚ್ಚೆನ್ ಯವರು ಇಂದಿನ ಆಧುನಿಕ ಸಮಾಜಕ್ಕೆ ಇಷ್ಟವಾಗಲು ಮುಖ್ಯಕಾರಣವಾಗುತ್ತದೆ. ಸರಳತೆಗೆ ಇನ್ನೊಂದು ಹೆಸರೇ ಎಚ್.ನರಸಿಂಹಯ್ಯನವರು ಎನ್ನುವಂತೆ ಅವರು ಬದುಕಿ ಬಾಳಿದರು. ಧರಿಸುವ ಬಟ್ಟೆ, ಸೇವಿಸುವ ಆಹಾರ, ವಾಸಿಸುವ ಕೋಣೆ ಹೀಗೆ ಪ್ರತಿಯೊಂದು ಅವರ ಸರಳ ಬದುಕಿಗೆ ಸಾಕ್ಷಿಯಾಗಿದ್ದವು. ಸರಳತೆಗೂ ಮತ್ತು ಅವರ ಬದುಕಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದಾಗಲೂ ಅವರು ತಮ್ಮ ವೇಶ ಭೂಷಣಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿಲ್ಲ.
ಒಂದು ಹಂತದಲ್ಲಿ ಅಂಥದ್ದೊಂದು ಒತ್ತಡ ಬಂದಾಗ ಹುದ್ದೆಯನ್ನು ತ್ಯಜಿಸಲು ಮುಂದಾದರೆ ವಿನಹ ಸರಳತೆಯನ್ನು ಬಿಟ್ಟುಕೊಡಲು ಸ್ವಲ್ಪವೂ ಯೋಚಿಸಲಿಲ್ಲ. ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಯೋರ್ವ ತನ್ನ ಬದುಕಿನುದ್ದಕ್ಕೂ ವಿದ್ಯಾರ್ಥಿಗಳ ವಸತಿ ನಿಲಯದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದರೆನ್ನುವುದು ಕಲ್ಪನೆಗೂ ನಿಲುಕದ ಸಂಗತಿ. ಆ ಕೋಣೆಯಲ್ಲಾದರೂ ಏನಿತ್ತು ಮಲಗಲು ಒಂದೆರಡು ಹಾಸಿಗೆಗಳು, ಬರೆಯಲು ಸಣ್ಣ ಮೇಜು, ಅತಿಥಿಗಳಿಗಾಗಿ ಕೂಡಲು ಎರಡು ಕುರ್ಚಿಗಳು. ವಿಲಾಸಿ ಜೀವನವನ್ನು ನಡೆಸುತ್ತ ಸರಳತೆಯನ್ನು ಕೇವಲ ಉಪದೇಶವಾಗಿಟ್ಟುಕೊಂಡವರಿಗೆ ಎಚ್ಚೆನ್ ಅವರ ಸರಳ ಬದುಕು ಒಂದು ನೀತಿ ಪಾಠವಾಗುತ್ತದೆ.
ಡಾ.ಎಚ್ ಎನ್ ರವರಿಗೆ ಸಂಧ
ಪ್ರಶಸ್ತಿ-ಗೌರವಗಳು
ಅವರ ಸರಳತೇಯ ಹೋರಾಟ, ಸಮಾಜಿಕ ಚಿಂತನೆಯ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1968),ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನೀಡಿದ ತಾಮ್ರಪತ್ರ ಪ್ರಶಸ್ತಿ (1973), ಭಾರತ ಸರ್ಕಾರದ
ಪದ್ಮಭೂಷಣ ಪ್ರಶಸ್ತಿ (1984),
ಕಲ್ಬುರ್ಗಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ(1988), ದೇವರಾಜ ಅರಸು ಪ್ರಶಸ್ತಿ (1994) ಗಳು ದೊರೆಕಿವೆ. ಮತ್ತು
ಫೆಲೋಗಳಾಗಿರುವ ಕಮಿಟಿ ಫಾರ್ ದಿ ಸೈಂಟಿಪಿಕ್ ಇನ್ವೆಸ್ಟಿಗೇಷನ್ ಆಫ್ ದಿ ಕ್ಲೈಮ್ಸ್ ಆಫ್ ದಿ ಪ್ಯಾರಾ ನಾರ್ಮಲ್` ( Committee for Scientific Investigation of the claims of the Paranomal) ಸಂಸ್ಥೆಯು ಭಾರತದ ಏಕೈಕ ಫೆಲೋ ಎಂಬ ಗೌರವಕ್ಕೆ ಎಚ್ ಎನ್ ರವರು ಪಾತ್ರರಾಗಿದ್ದಾರೆ. 2004ರ ದಸರಾ ಮಹೋತ್ಸವದ ಉದ್ಘಾಟನೆ ಮಾಡುವ ಹಿರಿಮೆಗೆ ಭಾಜನರಾಗಿದ್ದಾರೆ . ಹೀಗೆ ಹತ್ತು ಹಲವು ಪ್ರಶಸ್ತಿ, ಗೌರವ, ಸನ್ಮಾನಗಳು ಸಂಧಿವೆ.
ಕೊನೆಯ ಮಾತು
ಎಚ್ಚೆನ್ ರವರ ನಿರ್ಮಲ ವ್ಯಕ್ತಿತ್ವ ಅದ್ಭುತ ಗುಣಗಳ ಒಂದು ಗಣಿ. ಕುಗ್ರಾಮವೊಂದರ ಅತ್ಯಂತ ಬಡತನದ ಕುಟುಂಬದಲ್ಲಿ ಹುಟ್ಟಿ ಬಂದ ಹಳ್ಳಿಯ ಹುಡುಗನೊಬ್ಬ ನಿರಂತರವಾದ ಸರಳತೆಯ,ಸಮಾಜಿಕ ಚಿಂತನೆಯ ಶ್ರಮದಿಂದ ಜೊತೆಗೆ ಅಚಲವಾದ ವಿಶ್ವಾಸದಿಂದ, ತನ್ನ ವೈಚಾರಿಕ ಮನೋಭಾವದಿಂದ ಅತ್ಯಂತ ಪ್ರತಿಭಾವಂತನಾಗಿ ಬೆಳೆದು ನಿಂತು ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿದ ಅಪ್ರತಿಮ ಸಾಧನೆ ನಮ್ಮಗೆಲ್ಲರಿಗೂ ಬೆರಗು ಹುಟ್ಟಿಸುತ್ತದೆ. ಜೊತೆಗೆ ಅವರ ಸರಳತೆಯ ಬದುಕು ಅನೇಕರಿಗೆ ಸ್ಪೂರ್ತಿಯ ಸೆಲೆಯಾಗುತ್ತದೆ.
ಮನುಷ್ಯ ಹೇಗೆ ಬದುಕಬೇಕೆನ್ನುವುದಕ್ಕೆ ಎಚ್ಚೆನ್ ಸದಾಕಾಲ ಮಾದರಿಯಾಗಿ ನಿಲ್ಲುತ್ತಾರೆ. ಎಚ್ಚೆನ್ ನಮಗೆಲ್ಲ ಇಷ್ಟವಾಗಲು ಅನೇಕ ಸಂಗತಿಗಳು ಕಾರಣವಾಗುತ್ತವೆ. ಅವರ ಸರಳ ಜೀವನ ಶೈಲಿ, ಅನನ್ಯ ರಾಷ್ಟ್ರ ಪ್ರೇಮ, ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಯ ಮೇಲಿನ ನಿಷ್ಠೆ, ಕಡು ಬಡತನದ ಬದುಕಿನೊಂದಿಗಿನ ಹೋರಾಟ, ಅವರಲ್ಲಿನ ಅಚಲವಾದ ಆತ್ಮವಿಶ್ವಾಸ, ವೈಚಾರಿಕ ಮನೋಭಾವ, ಬದುಕಿನ ಒಂದು ಭಾಗ ಎನ್ನುವಂತೆ ಬೆಳೆಸಿಕೊಂಡು ಬಂದ ನಿಷ್ಟೂರತೆ ಹೀಗೆ ಅನೇಕ ಕಾರಣಗಳಿಂದ ನರಸಿಂಹಯ್ಯನವರ ವ್ಯಕ್ತಿತ್ವ ನಮಗೆ ಆಪ್ತವಾಗುತ್ತದೆ.ಹಳ್ಳಿಯಿಂದ ಬಂದ ಅನಾಥ ಬಾಲಕ ನ್ಯಾಷನಲ್ ಹೈಸ್ಕೂಲಿನಲ್ಲಿ ಪ್ರವೇಶ ಪಡೆದು ತನ್ನ ಸ್ವಂತ ಪರಿಶ್ರಮದಿಂದ ಆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆರಿದ್ದು ಅವರ ಬದುಕಿನ ಮಹತ್ವದ ಸಾಧನೆಗಳಲ್ಲೊಂದು.
ವಿಶ್ವವಿದ್ಯಾಲಯದ ಉಪಕುಲಪತಿ, ಮೇಲ್ಮನೆಯ ಶಾಸಕ ಸ್ಥಾನ, ಕನ್ನಡ ಪ್ರಾಧಿಕಾರದ ಅಧ್ಯಕ್ಷತೆ, ಪದ್ಮಭೂಷಣ ಪ್ರಶಸ್ತಿ, ಗೌರವ ಡಾಕ್ಟರೇಟ್ ಈ ಎಲ್ಲವು ಎಚ್ಚೆನ್ ಅವರ ಪ್ರತಿಭೆಗೆ ಸಂದ ಗೌರವಗಳು. ಯಾವುದನ್ನೂ ಅವರು ಅಪೇಕ್ಷಿಸಿದವರಲ್ಲ. ಯಾವ ಪ್ರಶಸ್ತಿ, ಗೌರವಗಳ ಹಿಂದೆ ಬಿದ್ದವರಲ್ಲ. ಒಂದು ಪ್ರಶಸ್ತಿ, ಉನ್ನತ ಹುದ್ದೆ ದೊರೆತಾಗಲೂ ಅವರದು ನಿರ್ವಿಕಾರ ಭಾವ.
ತನ್ನದು ಎನ್ನುವ ಒಂದು ಕೌಟಂಬಿಕ ಚೌಕಟ್ಟನ್ನೂ ಕಟ್ಟಿ ಕೊಳ್ಳದ ವ್ಯಕ್ತಿಗೆ ಅನೇಕ ಸ್ಥಾನ ಮಾನಗಳು ಹುಡುಕಿಕೊಂಡು ಬಂದವು. ಪ್ರತಿಭೆ, ನಿರಂತರ ಪರಿಶ್ರಮ, ಪ್ರಾಮಾಣಿಕತೆ ಈ ಗುಣಗಳಿಂದ ಮನುಷ್ಯನೋರ್ವನ ಜೀವನದಲ್ಲಿ ಏನೆಲ್ಲ ಪವಾಡಗಳಾಗಬಹುದೆನ್ನುವುದಕ್ಕೆ ಎಚ್.ನರಸಿಂಹಯ್ಯನವರ ಸರಳತೆ ಬದುಕು, ಸಮಾಜಿಕ ಚಿಂತನೆಗಳು ಸಾಕ್ಷಿ ಹಾಗೂ ನಮಗೆಲ್ಲರಿಗೂ ಪ್ರೇರಣೆಯಾಗಿವೆ.
(ಲೇಖಕರು : ಸಂಗಮೇಶ ಎನ್ ಜವಾದಿ, ಕೊಡಂಬಲ.
ತಾಲೂಕು – ಚಿಟಗುಪ್ಪ, ಬೀದರ ಜಿಲ್ಲೆ.-9663809340.
Email I’d : snjawadi2009@gmail.com)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


