ಅಂತರಂಗ
ದಾಸೋಹ ಪರಿಕಲ್ಪನೆ..!
- ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ್
ಜಗತ್ತಿನಲ್ಲಿಯೇ ಮೊದಲು ನಡೆದ ಸಾಮಾಜಿಕ ಚಳುವಳಿಗಳಲ್ಲಿ ಹನ್ನೆರಡನೇ ಶತಮಾನದ ವಚನ ಚಳವಳಿ ಅಪರೂಪವಾದುದು ಅಷ್ಟೇ ಪ್ರಮುಖವಾದುದು. ಐತಿಹಾಸಿಕ ಮಹತ್ವವುಳ್ಳ ಈ ಚಳವಳಿ ಭಾರತದಲ್ಲಿ ನಡೆದ ಮೊದಲ ಸಂಘಟಿತ ಸಾಮಾಜಿಕ ಚಳುವಳಿಯಾಗಿದೆ.
ಇದರಲ್ಲಿ ಸಮಾಜದ ಯಾವುದೋ ಒಂದು ಮುಖದ ದೋಷಗಳನ್ನು ಪ್ರಸ್ತಾಪಿಸಿ ಅವುಗಳ ನಿವಾರಣೆಗೆ ಪ್ರಯತ್ನಿಸದೇ ಸಮಾಜ ಎದುರಿಸುತ್ತಿದ್ದ ಎಲ್ಲಾ ರೀತಿಯ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ನಿವಾರಿಸಿ ಸಮಾಜದ ಸಮಗ್ರ ಅಭಿವೃದ್ಧಿಯ ಬಗ್ಗೆ ಚಿಂತಿಸಿತು. ಅದಕ್ಕಾಗಿ ಅನೇಕ ಮಹತ್ವದ ಪರಿಕಲ್ಪನೆಗಳನ್ನು ಸೃಷ್ಟಿಸಿಕೊಂಡಿತು. ಅಂಥ ಪರಿಕಲ್ಪನೆಗಳಲ್ಲಿ ಮುಖ್ಯವಾದವುಗಳೆಂದರೆ..
- ಷಟ್ಸ್ತಲ
- ಗುರು-ಲಿಂಗ-ಜಂಗಮ
- ಕಾಯಕ-ಪ್ರಸಾದ-ದಾಸೋಹ
ಇವುಗಳಲ್ಲಿ ಬಹಳ ಮುಖ್ಯವಾದ ದಾಸೋಹದ ಬಗ್ಗೆ ವಚನಕಾರರ ರಚನೆಗಳನ್ನು ಆಧರಿಸಿ ಕೆಲವು ವಿಚಾರಗಳನ್ನು ತಿಳಿಯಬಹುದು. ವಚನಕಾರರ ವಿಚಾರಗಳು ಸಮಕಾಲೀನ ಸಮಾಜದ ಸಂದರ್ಭದಲ್ಲಿ ಹೇಗೆ ಪ್ರಸ್ತುತವಾಗಿವೆ ಎಂಬುದನ್ನು ತಿಳಿಯುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದ್ದು ಅಂಥ ಪ್ರಯತ್ನ ಇಲ್ಲಿ ಮಾಡಲಾಗಿದೆ. ದಾಸೋಹದ ತತ್ವವನ್ನು ಕುರಿತು ಬಹುತೇಕ ಎಲ್ಲಾ ಶಿವಶರಣರು ಮಾತನಾಡಿರುವುದು ಅವರ ವಚನಗಳಿಂದ ನಮಗೆ ತಿಳಿದು ಬರುತ್ತದೆ.
ಕಾಯಕವಳಿದ ಠಾವಿನಲ್ಲಿ ಜೀವನ ಸುಳಿವುಂಟೆ ?
ದಾಸೋಹವಳಿದ ಠಾವಿನಲ್ಲಿ ದೇವರ ಕೃಪೆಯುಂಟೆ ?
ಕಾಯಕ ದಾಸೋಹವಳಿದ ಠಾವಿನಲ್ಲಿ ದೇವರಕೃಪೆಯುಂಟೇ
ಕಾಯಕ ದಾಸೋಹಗಳುಕೂಡಿದಲ್ಲಿ ಅದೇ
ಶಿವ ಜೀವೈಕ್ಯವು ; ಮಾರಯ್ಯ ಪ್ರಿಯ ಅಮರೇಶ್ವರ ಲಿಂಗದಲ್ಲಿ.
ಎನ್ನುವ ಈ ವಚನ ಶಿವಶರಣೆ ಆಯ್ದಕ್ಕಿ ಲಕ್ಕಮ್ಮನ ದಾಗಿದೆ. ದಾಸೋಹದ ಪರಿಕಲ್ಪನೆಯನ್ನು ಎಳೆ ಎಳೆಯಾಗಿ, ಜನಸಾಮಾನ್ಯರಿಗೆ ತಿಳಿಯುವಂತೆ ವಚನ ರಚನೆ ಮಾಡಿದ್ದಾರೆ.ಕಾಯಕವು ಎಲ್ಲಿ ಇಲ್ಲವೋ ಅಲ್ಲಿ ಜೀವನಕ್ಕೆ ಅರ್ಥವಿಲ್ಲ ; ದಾಸೋಹ ಇಲ್ಲದಿದ್ದಲ್ಲಿ ಸೃಷ್ಟಿಕರ್ತನ ಕೃಪೆ ಸೀಗುವುದಿಲ್ಲಾ, ಕಾಯಕ-ದಾಸೋಹಗಳು ಎಲ್ಲಿ ಇರುತ್ತವೋ ಅಲ್ಲಿ ಸೃಷ್ಟಿಕರ್ತನ ಕೃಪೆ ಸದಾ ಇರುತ್ತದೆ, ನೆಮ್ಮದಿ – ಸಂತೋಷ ಹಾಗೂ ಸ್ನೇಹ ಮಯ ಸಾಮರಸ್ಯ ಜೀವನ ಸಹ ನಮ್ಮದಾಗುತ್ತದೆ ಎಂದು ವಿವರಿಸಿದ್ದಾರೆ.
ಹಾಗಾಗಿ ನಾವೆಲ್ಲರೂ ಕಾಯಕ ಮಾಡಬೇಕು. ಕಾಯಕವೆಂದರೆ ಸತ್ಯದ ನೆಲೆಗಟ್ಟಿನ ಮೇಲೆ ಶುದ್ಧವಾಗಿ , ಲೋಕ ಹಿತಕ್ಕಾಗಿ ಉತ್ಪಾದನೆಯಲ್ಲಿ ತೊಡಗುವ ಕ್ರಿಯೆ. ಮಾನವ ಕುಲಕ್ಕೆ ಹಾನಿಯುಂಟುಮಾಡುವ ಯಾವುದೇ ಕೆಲಸ ಕಾಯಕವಲ್ಲ. ನಿಜವಾದ ಕಾಯಕದಿಂದ ಬಂದಿದ್ದನ್ನು ದೇವರ ಪ್ರಸಾದವೆಂದು ತಿಳಿಯಬೇಕು. ಗಳಿಸಿದ್ದನ್ನೆಲ್ಲ ನಮಗಾಗಿ ಬಳಸದೇ ಅಥವಾ ಸಂಗ್ರಹಿಸದೇ ಸಾಮಾಜಿಕ ಜವಾಬ್ಧಾರಿಯನ್ನು ಪ್ರದರ್ಶಿಸಬೇಕು. ಎಷ್ಟು ಬೇಕೋ ಅಷ್ಟು ಐಹಿಕ ವಸ್ತುಗಳನ್ನು ಪ್ರಸಾದದ ಹಾಗೆ ಸ್ವೀಕರಿಸಬೇಕು. ಅದಕ್ಕಿಂತ ಹೆಚ್ಚಿನದು ವಿಷ ವಸ್ತುವಾಗಿ ಪರಿಣಮಿಸುತ್ತದೆ.
ಅವುಗಳ ಬಳಕೆಯಿಂದ ಭವರೋಗ ಬರುವುದು. ಆದ್ದರಿಂದ ಅವಶ್ಯಕತೆಗಿಂತ ಹೆಚ್ಚಿನ ವಸ್ತುಗಳನ್ನು ವಿಷ ವಸ್ತುವಾಗಿಸದೇ ದಾಸೋಹ ರೂಪದಲ್ಲಿ ಸಮಾಜಕ್ಕೆ ಅರ್ಪಿಸುವುದೇ ಭವ ರೋಗದಿಂದ ಮುಕ್ತವಾಗುವ ಕ್ರಮ.ಆ ದಿಸೆಯಲ್ಲಿ ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುವುದು ಶ್ರೇಷ್ಠ ಸನ್ಮಾರ್ಗ ಎಂಬುದು ನಾವೆಲ್ಲರೂ ನೆನಪಿಡಬೇಕಾದದ್ದು ಅತಿ ಮುಖ್ಯ.
ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯಾ ಎಂಬ ಬಸವ ವಾಣಿಯಂತೆ ನಾವೆಲ್ಲರೂ ಹೆಜ್ಜೆ ಹಾಕುವುದು ಸೊಕ್ತ, ಕೇವಲ ತೋರಿಕೆಗಾಗಿ ದಾಸೋಹ ಸೇವೆ ಮಾಡದೇ ಅಂತರಂಗದ ಆತ್ಮ ಶಾಂತಿಗಾಗಿ ದಾಸೋಹ ಮಾಡುವ ಮೂಲಕ ಹಸಿದವರ ಹಸಿವನ್ನು ನೀಗಿಸುವ ಕೆಲಸವನ್ನು ನಿರಂತರವಾಗಿ ನಮ್ಮ ಜೀವಿತಾವಧಿಯಲ್ಲಿ ಮಾಡೋಣ.
ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಸರ್ವರ ಹಿತವನ್ನು ಬಯಸುವ ದಿಸೆಯಲ್ಲಿ ಕಾಯಕ ಮಾಡುತ್ತಾ,ಕಾಯಕದಲ್ಲಿ ಬರುವ ಸ್ವಲ್ಪ ಹಣದಲ್ಲಿ ದಾಸೋಹ ಮಾಡೋಣ, ಮಾಡುವ ಮೂಲಕ ಇತರರಿಗೆ ಅಂದರೆ ಜಗತ್ತಿಗೆ ಮಾದರಿಯಾಗೋಣ.
ಶರಣರ ದಾಸೋಹ ಕಲ್ಪನೆ
ವ್ಯಕ್ತಿ ಮತ್ತು ಸಮಾಜಕ್ಕೆ ಕಾಯಕದ ಮೂಲಕ ದಾಸೋಹಕ್ಕೆ ಬೆಸುಗೆ ಹಾಕಿದವರು ಶರಣರು. ಇಂದು ಉದ್ಯೋಗ ಅಥವಾ ವರ್ಕ್ ಎನ್ನುವುದಕ್ಕೆ ಪರ್ಯಾಯವಾಗಿ ಬಳಸಲಾಗುವ ಕಾಯಕ ಎಂಬ ಶಬ್ದಕ್ಕೆ ವಿಭಿನ್ನ ಆಯಾಮಗಳಿವೆ. ವಿಭಿನ್ನ ಅರ್ಥ ಪರಂಪರೆಗಳಿವೆ. ಉದ್ಯೋಗಕ್ಕೂ ಮತ್ತು ಶರಣರು ಬಳಸಿದ ಕಾಯಕಕ್ಕೂ ಅಗಾಧವಾದ ಅಂತರವಿದೆ.
ಉದರ ಪೋಷಣೆಗಾಗಿ, ತನ್ನ ಸಂಸಾರಕ್ಕಾಗಿ ದುಡಿಯುವುದು ಉದ್ಯೋಗವಾದರೆ, ತನ್ನ ಹಿತಾಸಕ್ತಿಯ ಜೊತೆಗೆ ಸಮಷ್ಟಿಯ ಹಿತವನ್ನು ಬಯಸುವ ದಾಸೋಹ ಮನೋಭಾವದಿಂದ ದುಡಿಯುವುದು, ಆತ್ಮೋದ್ಧಾರದ ಜೊತೆಗೆ ಸಮಾಜೋದ್ಧಾರವನ್ನು ಸಾಧಿಸುವ ಉದ್ಯೋಗವೇ ಕಾಯಕ. ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ವಲಯಗಳನ್ನು ಒಂದು ಕಟ್ಟಿನಲ್ಲಿ ಸುಭದ್ರವಾಗಿ ಕಟ್ಟಬಲ್ಲ ತತ್ವ ಇದು.
ಸತ್ಯಶುದ್ಧ ಹಾದಿಯಲ್ಲಿ ದುಡಿಯುವುದರಿಂದ ಆರಂಭವಾಗಿ ದಾಸೋಹವ ಮಾಡುವಲ್ಲಿ ಕಾಯಕದ ಅರ್ಥ ಪೂರ್ಣವಾಗುವುದು. ದಾಸೋಹದಲ್ಲಿ ಕೊಡುವವನ ಕೈ ಮೇಲಾಗಿರುವುದಿಲ್ಲ; ಪಡೆಯುವವನ ಕೈ ಕೀಳಾಗಿರುವುದಿಲ್ಲ. ಅದೊಂದು ಸಾಮಾಜಿಕ ಜವಾಬ್ದಾರಿಯ ಕಾರ್ಯ. ಹೀಗೆ ‘ಕಾಯಕ’ ಪದಕ್ಕೆ ಪರ್ಯಾಯವೇ ಇಲ್ಲವೆನಿಸುವಷ್ಟು ಅದರ ಅರ್ಥ ವಿಶಾಲವಾಗಿದೆ. “ಅಂದಂದಿನ ಕಾಯಕ ಅಂದಂದು ಮಾಡಿ ಶುದ್ಧವಾಗಿರಬೇಕು” ಎಂದ ಶರಣರು ಅಂತೆಯೇ ನಿಶ್ಚಿಂತವಾಗಿ ಬದುಕಿ ತೋರಿದರು.
ಮಾಡುವ ಕೆಲಸಕ್ಕೆ ಕರ್ಮವಾದವನ್ನು ಹಚ್ಚಿ ಶೋಷಣೆ ಮಾಡುತ್ತಿದ್ದವರಿಗೆ ಈ ನಡೆ ಅನಿರೀಕ್ಷಿತ ಆಘಾತ ತಂದಿತ್ತು. ಕಾಯಕದೊಂದಿಗೆ ಅಸಂಗ್ರಹ ಗುಣವನ್ನೂ, ದಾಸೋಹ ಭಾವವನ್ನೂ ಜೊತೆ ಮಾಡಿದ ಬಗೆ ಅಸಾಧಾರಣ ಬದಲಾವಣೆಗೆ ನಾಂದಿ ಹಾಡಿತು. ಕಾಯಕದಲ್ಲಿ ಸತ್ಯಶುದ್ಧ ಮನಸ್ಸಿನ ಜೊತೆಯಿದೆ. ಪ್ರಾಮಾಣಿಕತೆ ಮೇಳೈಸಿದೆ. ಸಂಗ್ರಹ ಮನೋಭಾವದ ವಾಸನೆಯಿಲ್ಲ. ಚಿತ್ತ ಚಾಂಚಲ್ಯಕ್ಕೆ ಜಾಗವಿಲ್ಲ.ಇಹ-ಪರಗಳ ಉನ್ನತಿಯನ್ನು ಸಾಧಿಸಬಲ್ಲ ಸಾಮರ್ಥ್ಯವಿದೆ ಮತ್ತು ಶರಣರ ಪ್ರಮುಖ ದಂಡನಾಯಕ ಬಸವಣ್ಣನವರು ಖ್ಯಾತ ಅರ್ಥಶಾಸ್ತ್ರಜ್ಞರಾಗಿ – ಸಮಾಜವಾದಿ ಚಿಂತಕರಾಗಿ ಮಾಡಿರುವ ದಾಸೋಹ ಸೇವೆ ಅಪಾರ.
ಹಾಗಾಗಿ ಅವರ ದಾಸೋಹ ವಿಚಾರದಲ್ಲಿ ಸಮಗ್ರ ಸಮಾಜದ ದೃಷ್ಟಿಕೋನವಿರುತ್ತಿತ್ತು. ಕಲ್ಯಾಣವು ಸಮೃದ್ಧಿಯ ಬೀಡಾಗಲು ಕಾರಣವಾದದ್ದು ದಾಸೋಹ ಮಾಡುವ ಕಾಯಕ ಜೀವಿಗಳೇ. ಕಾಯಕದ ತುಡಿತ ಸ್ವಾವಲಂಬಿ ಸಮಾಜ ನಿರ್ಮಾಣ. ಹೊಟ್ಟೆಪಾಡಿಗಾಗಿ ಅಥವಾ ಕುಟುಂಬದ ಪೋಷಣೆಗಾಗಿ ಕೈಗೊಳ್ಳುವ ದುಡಿಮೆ ಕಾಯಕವಾಗಲಾರದು. ಅದೇ ರೀತಿ ಕೀರ್ತಿ- ಪ್ರತಿಷ್ಠೆಗಳಿಗಾಗಿ ಮಾಡುವ ಜನಕಲ್ಯಾಣದ ದಾಸೋಹ ಕಾರ್ಯವೂ ಕಾಯಕ – ದಾಸೋಹವಾಗಲಾರದು. “ಎನ್ನೊಡಲ ಅವಸರಕ್ಕೆ ಕುದಿದೆನಾದಡೆ ತಲೆದಂಡ” ಎನ್ನುತ್ತಾರೆ ಬಸವಣ್ಣನವರು.
ಹೀಗೆ ನಮ್ಮ ಹಿತದೊಂದಿಗೆ ಸಮಷ್ಟಿಯ ಹಿತವನ್ನೂ ಕಾಯುವ ಶಕ್ತಿ ಕಾಯಕ – ದಾಸೋಹದ್ದು. ಸತ್ಯ ಶುದ್ಧದಿಂದ ಗಳಿಸಿದ ಆದಾಯದಲ್ಲಿ ಒಂದು ಪಾಲು ದಾಸೋಹ ರೂಪದಲ್ಲಿ ಸಮಾಜಕ್ಕೂ, ಇನ್ನೊಂದು ಪಾಲು ತೆರಿಗೆಯ ರೂಪದಲ್ಲಿ ರಾಜ್ಯಕ್ಕೂ ಸಂದಾಯವಾಗಬೇಕೆಂಬ ನಿಯಮ ಶರಣರದು. ಇದು ಸಮಷ್ಟಿಯ ಏಳ್ಗೆಯಲ್ಲಿ ತನ್ನ ಅಭಿವೃದ್ಧಿಯನ್ನೂ, ಸಮಷ್ಟಿಯ ಹಿತದಲ್ಲಿ ತನ್ನ ಹಿತವನ್ನೂ ಕಾಣುವ ಶರಣರ ಕಾಯಕ ದಾಸೋಹದ ನಡೆ ಎನ್ನಬಹುದು.ಆದ್ದರಿಂದ ತನು ಮನ ಬಳಲಿಸಿ ತಂದು ದಾಸೋಹವ ಮಾಡುವ ಸದ್ಭಕ್ತನ ತೋರಯ್ಯ ಎನ್ನುತ್ತಾರೆ ಬಸವಣ್ಣನವರು. ಹೀಗೆ ದಾಸೋಹ ತತ್ವವು ಶರಣರು ಜಗತ್ತಿಗೆ ನೀಡಿದ ಶ್ರೇಷ್ಠ ಬಹುದೊಡ್ಡ ಕೊಡುಗೆ.
ಕೊನೆಯದಾಗಿ
12 ನೇ ಶತಮಾನದಲ್ಲಿ ತಾಂಡವವಾಡುತ್ತಿದ್ದ ಸಾಮಾಜಿಕ ಅಸಮಾನತೆ, ಮೌಢ್ಯ, ಕಂದಾಚಾರಗಳನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಬಸವಣ್ಣನವರು ಸೇರಿದಂತೆ ಸಕಲ ಶರಣರು ಮಾಡಿದ ಕ್ರಾಂತಿ ಅದ್ಬುತ. ಪ್ರತಿಯೊಬ್ಬರು ತಾವು ದುಡಿದು ಇತರರಿಗೂ ನೀಡಬೇಕು ಎಂಬುದು ಎಲ್ಲಾ ಶಿವಶರಣರ ಕನಸಾಗಿತ್ತು. ಅಂದರಂತೆ 12 ನೇ ಶತಮಾನದಲ್ಲೇ ದಾಸೋಹದ ಪರಿಕಲ್ಪನೆಯ ಕುರಿತು ಜಾಗೃತಿ ಮೂಡಿಸಿ ನುಡಿದಂತೆ ನಡೆದ್ದರು ಜೊತೆಗೆ ಸಾಮಾಜಿಕ ಅಸಮಾನತೆ, ಜಾತೀಯತೆ ಹೋಗಲಾಡಿಸಲು ಮುಂದಾದರು.
ಬಸವಣ್ಣನವರು ಸ್ಥಾಪನೆ ಮಾಡಿದ ಅನುಭವಮಂಟಪದಲ್ಲಿ ಶೇ. 90 ಮಂದಿ ಕೆಳವರ್ಗದ ಶರಣರೇ ಇದ್ದರು. ಲಿಂಗಭೇದ,ಅಸಮಾನತೆ, ಆಸ್ತಿಯ ಅಸಮಾನಹಂಚಿಕೆಯ ವಿರುದ್ಧವೇ ಅಂದು ಬಸವಣ್ಣನವರು ಧ್ವನಿ ಎತ್ತಿ ಹೋರಾಟ ಮಾಡಿದ ಕಾರಣದಿಂದಲೇ ಇಂದು ಕೇಲವರಿಗೆ ನ್ಯಾಯ ಸೀಗುತ್ತಿದೇ ಎನ್ನುವದಂತು ಸುಳ್ಳಲ್ಲ.ಸಕಲ ಜೀವಾತ್ಮರಿಗೂ ಲೇಸನೇ ಬಯಸಿದ್ದರು. ಅಂದರಂತೆ ನಡೆದು ತೋರಿಸಿದ್ದಾರೆ.
ಮಾನವರೆಲ್ಲರೂ ಸಮಾನರು ಎಂದು ಜಾಗತಿಕ ಮಟ್ಟದಲ್ಲಿ ಸಾರಿದ್ದಾರೆ. ಹೀಗಾಗಿ ಅವರ ಆದರ್ಶ ನಿಲುವು – ದಾಸೋಹ ತತ್ವಗಳು ಪಾಲನೆ ಮಾಡುವುದು ಇಂದಿನ ಸಮಾಜಕ್ಕೆ ಅಗತ್ಯವಾಗಿದೆ.ಮಹಿಳೆ ಮತ್ತು ಪುರುಷರು ಎಂಬ ಭೇದ ಭಾವ ಬದಿಗೊತ್ತಿ ಪ್ರತಿಯೊಬ್ಬರು ಕಾಯಕ ಮಾಡಿ, ಜೀವನ ನಡೆಸಬೇಕು ಎನ್ನುವ ಬಸವಣ್ಣನವರ ದಾಸೋಹದ ಪರಿಕಲ್ಪನೆ ಜಗತ್ತಿಗೆ ಮಾದರಿ ಎನ್ನುವುದು ನಾವೆಲ್ಲರೂ ಯಾವತ್ತೂ – ಎಂದೆಂದಿಗೂ ಮರೆಯಬಾರದು ಶರಣ ಬಂಧುಗಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ16 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ಅಂತರಂಗ1 hour agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು


