ದಿನದ ಸುದ್ದಿ
ಆನೆಯನ್ನು ಕುಣಿಯಲು ಆಹ್ವಾನಿಸಿದ ಡ್ರ್ಯಾಗನ್ : ಪಿ ಚಿದಂಬರಂ ಅವರ ವಿಶೇಷ ಬರಹ
ಕಳೆದ ವಾರವಷ್ಟೇ ನಾವು ಭಾರತದ ಭೌಗೋಳಿಕ ಪ್ರದೇಶಗಳ ಬಗ್ಗೆ ಇನ್ನಷ್ಟು ತಿಳಿದುಕೊಂಡೆವು. ನಮಗೇ ಗೊತ್ತಿಲ್ಲದೆ ದೇಶದ ಭೂಪಟದಲ್ಲಿರುವ ಊರುಗಳ ಹೆಸರನ್ನು ಕೇಳಿದ್ದೆವು. ಗಲ್ವಾನ್ ಕಣಿವೆ, ಪ್ಯಾಂಗೋಂಗ್, ಗೊರ್ಗಾ ಇವೇ ಮೊದಲಾದ ಸ್ಥಳಗಳ ಬಗ್ಗೆ ನಾವು ಯಾವತ್ತಾದರೂ ಹುಡುಕಿದ್ದೆವಾ? ಈ ಪ್ರದೇಶಗಳ ಹೆಸರು ಇನ್ಮುಂದೆ ನಮಗೆ ಬಾಯಿ ಪಾಠವಾಗಲಿದೆ.
ಒಳನುಸುಳುವಿಕೆ
ಭಾರತ-ಚೀನಾ ನಡುವಿನ ಸಂಬಂಧ ಹಳಸಿರುವುದನ್ನು ಮೇ 5ರಂದು ಪ್ಯಾಂಗಾಂಗ್ ಟಿಎಸ್ಒನಲ್ಲಿ ನಡೆದ ಘರ್ಷಣೆಯಿಂದ ಅರಿಯಬಹುದು. ಈದಿನದವರೆಗೂ ಉಭಯ ದೇಶಗಳ ನಡುವಿನ ಸಂಘರ್ಷ ಮುಂದುವರಿಯುತ್ತಲೇ ಬಂದಿದೆ. ಆದರೆ, ಚೀನಾ ಸೇನೆ ಭಾರತದ ಭೂಪ್ರದೇಶದೊಳಗೆ ಬಂದಿದೆ ಎಂಬುದನ್ನು ಸರ್ಕಾರ ಒಪ್ಪಿಕೊಳ್ಳಲು ಸಿದ್ಧವಿಲ್ಲ.
ಚೀನಾ ಸೇನಯು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗುಲ್ವಾನ್, ಪ್ಯಾಂಗಾಂಗ್ ಟಿಎಸ್ಒ ಹಾಗೂ ಲಡಾಖ್ನ ಗೊರ್ಗಾ ಪ್ರದೇಶಕ್ಕೆ ನುಗ್ಗಿದೆ. ಲಡಾಖ್ನಲ್ಲಿರುವ ಗಲ್ವಾನ್, ಸಿಕ್ಕಿಂನ ನಕು ಲಾ ಪ್ರದಶಗಳನ್ನು ಈವರೆಗೆ ಚೀನಾ ವಿವಾದಿತ ಪ್ರದೇಶ ಎಂದು ಘೋಷಿಸಿಲ್ಲ. ಈ ಹಿಂದೆ ಈ ಪ್ರದೇಶಗಳಿಗಾಗಿ ಯಾವಾಗಲೂ ಭಾರತ- ಚೀನಾ ನಡುವೆ ಬಿಕ್ಕಟ್ಟು ಉದ್ಭವಿಸಿಲ್ಲ. ಇದರಿಂದ ತಿಳಿದುಬರುವ ಒಂದೇ ವಿಷಯವೆಂದರೆ ಚೀನಾ ತನ್ನ ವಿವಾದಿತ ಪ್ರದೇಶಗಳನ್ನು ವಿಸ್ತರಿಸುತ್ತಾ ಬರುತ್ತಿದೆ.
ಉಭಯ ದೇಶಗಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಈ ಬೃಹತ್ ಪ್ರದೇಶವನ್ನು ತನ್ನದೆಂದು ಚೀನಾ ತನ್ನದೆಂದು ಹೇಳಿಕೊಂಡರೆ, ಭಾರತ ತನ್ನದೆಂದು ಹೇಳಿಕೊಳ್ಳುತ್ತಿದೆ. ಇದೇ ಮೊದಲಬಾರಿಗೆ ಉಭಯ ದೇಶಗಳ ಸೇನಾ ಮುಖ್ಯಸ್ಥರ ನಡುವೆ ನಡೆಯುತ್ತಿದ್ದ ಶಾಂತಿ ಮಾತುಕತೆ ವಿಶೇಷ ರಾಜತಾಂತ್ರಿಕ ಪ್ರತಿನಿಧಿಗಳ ನಡುವೆ ನಡೆದಿದೆ.
ಪೂರ್ಣ ಪ್ರಮಾಣದ ಯುದ್ಧವಲ್ಲ
ಭಾರತ ಹಾಗೂ ಚೀನಾ ಪೂರ್ಣ ಪ್ರಮಾಣದ ಯುದ್ಧ ಮಾಡಲು ಈಗ ಸಿದ್ಧವಾಗಿವೆ ಎಂದು ನಂಬುವುದು ಕಷ್ಟ. ಈ ಸಮಯದಲ್ಲಿ ಗಡಿ ಸಮಸ್ಯೆ ಒಂದು ತಲೆನೋವೇ ಹೊರತು ಇನ್ನೇನೂ ಅಲ್ಲ. ಉಭಯ ದೇಶಗಳ ನಡುವಿನ ಗಡಿ ಬಿಕ್ಕಟ್ಟನ್ನು ನೋಡುವುದಾದರೆ 1962ರಲ್ಲಿ ನಡೆದ ಪೂರ್ಣ ಪ್ರಮಾಣದ ಯುದ್ಧ ನೆನಪಾಗುತ್ತದೆ. ಆ ಸಮಯದಿಂದ ಆಗಾಗ್ಗೆ ಗಡಿ ಸಮಸ್ಯೆ ಸೃಷ್ಟಿಯಾಗುತ್ತಲೇ ಇದೆ.
ಆದರೆ, ಮಾತುಕತೆಯಲ್ಲೇ ಅದು ಮುಗಿದುಹೋಗುತ್ತಿದೆ. ಈಗ ಕೊರೊನಾ ವಿರುದ್ಧ ಹೋರಾಡುತ್ತಿರುವ ಎರಡು ದೇಶಗಳು 2020-21ರ ವಿತ್ತೀಯ ವರ್ಷದಲ್ಲಿ ಆರ್ಥಿಕ ಸಮಸ್ಯೆ ಎದುರಿಸುವ ಭೀತಿಯಲ್ಲಿವೆ. ಹಾಗಾಗಿ ಎರಡೂ ದೇಶಗಳೂ ವಿಶ್ವದ ಯಾವುದೇ ದೇಶವನ್ನು ಎದುರುಹಾಕಿಕೊಳ್ಳದೇ ಶಾಂತ ರೀತಿಯಲ್ಲಿ ಇತ್ಯರ್ಥಮಾಡಿಕೊಳ್ಳಲು ನಿರ್ಧರಿಸುತ್ತವೆ.
ಚೀನಾಗೆ ತನ್ನ ಮಿಲಿಟರಿ ಸಾಮರ್ಥ್ಯದ ಬಗ್ಗೆ ಅಗಾಧವಾದ ವಿಶ್ವಾಸವಿದೆ. ಹಾಗೆಯೇ ಭಾರತಕ್ಕೂ ಕೂಡ. ಭಾರತ 1962ರಲ್ಲಿ ಶಸ್ತ್ರಾಸ್ತ್ರಗಳು, ಸೈನಿಕರ ಕೊರತೆ ಎದುರಿಸುತ್ತಿತ್ತು. ಆಗ ಚೀನಾ ಯುದ್ಧದಲ್ಲಿ ಗೆದ್ದಿದೆ ಎಂದು ಸ್ಪಷ್ಟವಾಗಿ ಹೇಳಿಕೊಂಡಿತ್ತು.
ಆದರೆ, ಇದೀಗ ಆ ಪರಿಸ್ಥಿತಿ ಇಲ್ಲ. ಚೀನಾದ ಸೇನಾ ತಜ್ಞರ ಪ್ರಕಾರ ಈಗಿರುವ ಪರಿಸ್ಥಿತಿಯಲ್ಲಿ ಚೀನಾ ಪೂರ್ಣ ಪ್ರಮಾಣದ ಯುದ್ಧ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಿನ್ನಾಭಿಪ್ರಾಯಗಳು-ಬಿಕ್ಕಟ್ಟು
ಭಾರತ ಚೀನಾ ನಡುವೆ ಜೂನ್ 6ರಂದು ಮಾತುಕತೆ ನಡೆದಿದೆ. ಆದರೆ, ಎರಡೂ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳ ನಡುವೆ ಭಿನ್ನಾಭಿಪ್ರಾಯಗಳಿರುವುದು ಸ್ಪಷ್ಟವಾಗಿದೆ. ಈ ಭಿನ್ನಾಭಿಪ್ರಾಯಗಳೇ ಬಿಕ್ಕಟ್ಟಾಗಿ ಪರಿಣಮಿಸಿವೆ. ಮೇ.5ರಂದು ಲಡಾಖ್ನಲ್ಲಿ ಬಿಕ್ಕಟ್ಟು ಉದ್ಭವಿಸುವ ಮುನ್ನವೂ ಇದೇ ರೀತಿ ಭಿನ್ನಾಭಿಪ್ರಾಯಗಳಿದ್ದವು. ಆದರೆ ಆ ಪೈಕಿ ಗಲ್ವಾನ್ ಹಾಗೂ ನಕು ಲಾ ಪಾಸ್ ಸೇರ್ಪಡೆಗೊಂಡಿರಲಿಲ್ಲ.
ಗಡಿ ಬಿಕ್ಕಟ್ಟಿಗಿಂತ ವ್ಯಾಪಾರವೇ ಹೆಚ್ಚಾಯಿತಾ?
2018ರಲ್ಲಿ ವುಹಾನ್ ಹಾಗೂ 2019ರಲ್ಲಿ ಮಹಾಬಲಿಪುರಂನಲ್ಲಿ ಬಿಟ್ಟರೆ ಮೋದಿ ಹಾಗೂ ಕ್ಸಿ ಜಿನ್ಪಿಂಗ್ ಅವರು ಇನ್ಯಾವುದೇ ಮಾತುಕತೆಯಲ್ಲಿ ಪಾಲ್ಗೊಳ್ಳಲಿಲ್ಲ. ಭಾರತ, ಚೀನಾ ಎರಡೂ ದೇಶಗಳು ಮಾತುಕತೆ ವ್ಯಾಪಾರಕ್ಕಷ್ಟೇ ಸೀಮಿತವಾಗಿತ್ತೇ ಹೊರತು ಅದರ ಹೊರತಾದ ಇನ್ಯಾವುದೇ ಪ್ರಗತಿ ಸಾಧಿಸಲಿಲ್ಲ.
ಚೀನಾಗೆ ತನ್ನ ಉತ್ಪನ್ನಗಳ ಮಾರಾಟಕ್ಕೆ ಭಾರತದಂತಹ ದೇಶ ಬೇಕಾಗಿತ್ತು. ಭಾರತಕ್ಕೂ ಕಡಿಮೆ ಬೆಲೆಯಲ್ಲಿ ಅಗತ್ಯ ಉತ್ಪನ್ನಗಳನ್ನು ಪೂರೈಸಲು ಚೀನಾ ನೆರವು ಬೇಕಾಗಿತ್ತು. ಎರಡು ದೇಶಗಳ ನಡುವಿನ ಮಾತುಕತೆ ವ್ಯಾಪಾರಕ್ಕಷ್ಟೇ ಸೀಮಿತವಾಗಿ ಅದು ಗಡಿ ಬಿಕ್ಕಟ್ಟನ್ನು ತಲುಪಲಿಲ್ಲ. ಈ ಮಧ್ಯೆ ಚೀನಾ ತನ್ನ ರಾಜಕೀಯ ಪ್ರಭಾವ ಬೀರಲು ನೇಪಾಳವನ್ನು ಬಳಸಿಕೊಂಡರೆ, ಆರ್ಥಿಕತೆ ಬಿಗಿಗೊಳಿಸಲು ಶ್ರೀಲಂಕಾವನ್ನು ನೆಲೆಯಾಗಿಸಿಕೊಂಡಿತು.
ಈ ಪ್ರಕ್ರಿಯೆಯಲ್ಲಿ ಭಾರತವನ್ನು ಚೀನಾ ಕಡೆಗಣಿಸಿತು. ಭಾರತ ಈ ಮಧ್ಯೆ ಮಾಲ್ಡೀವ್ಸ್ ಜೊತೆಗಿನ ತನ್ನ ಸಂಬಂಧವನ್ನು ಗಟ್ಟಿಗೊಳಿಸಿಕೊಂಡಿತು. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ತನ್ನ ಪ್ರದೇಶದಲ್ಲಿ ಅಕ್ರಮವಾಗಿ ಸಂಚರಿಸುತ್ತಿರುವುದನ್ನು ಭಾರತ ಆಕ್ಷೇಪಿಸುತ್ತಲೇ ಇದೆ ಆದರೆ, ಚೀನಾ ಅದಕ್ಕೆ ಕ್ಯಾರೆ ಎನ್ನುತ್ತಿಲ್ಲ.
ಡಿಸ್ಪಾಂಗ್ ಅಥವಾ ದೋಕ್ಲಾಮ್?
ಭಾರತ ಹಾಗೂ ಚೀನಾ ಶಾಂತಿಯುತವಾಗಿ ಮಾತುಕತೆ ನಡೆಸಬೇಕೆಂದರೆ ಚೀನಾ ಮೇ 5ರಂದು ಅತಿಕ್ರಮಿಸಿಕೊಂಡಿರುವ ಭಾರತದ ಭೂಪ್ರದೇಶದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು. (ಸ್ಟೇಟಸ್ ಕ್ಯೂ ಆಂಟೆ- ಅಂತಿಮ ನಿರ್ಧಾರಬರುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವುದು) ಹಾಗೇನಾದರೂ ಆದರೆ ಚೀನಾಗಿಂತ ಪರಮಸುಖಿ ಇನ್ನೊಬ್ಬರಿಲ್ಲ. 2013ರಲ್ಲಿ ಡಿಸ್ಪಾಂಗ್ ಹಾಗೂ 2017ರಲ್ಲಿ ದೊಕ್ಲಾಮ್ನಲ್ಲಿ ಆಗಿದ್ದು ಅದೇ. ನಾನು ಹೇಳುವುದನ್ನು ಬರೆದಿಟ್ಟುಕೊಳ್ಳಿ, ಡ್ರ್ಯಾಗನ್ ಮತ್ತು ಆನೆ ಎರಡೂ ಗಲ್ವಾನ್, ಹಾಟ್ ಸ್ಪ್ರಿಂಗ್ಸ್ ಮತ್ತು ಪ್ಯಾಂಗಾಂಗ್ ಟಿಎಸ್ಓನಲ್ಲಿ ಪರಸ್ಪರ ಗುರಾಯಿಸುತ್ತಿವೆ.
ಹಾಗೆ ನೋಡಿದರೆ ಮೋದಿ ಹಾಗೂ ಕ್ಸಿ ಜಿನ್ಪಿಂಗ್ ಅವರು ಕೆಲವು ಸಾಮ್ಯತೆಗಳನ್ನು ಹೊಂದಿದ್ದಾರೆ. ಇಬ್ಬರೂ ನಾಯಕರನ್ನು ಬದಲಾಯಿಸುವುದು ಅಸಾಧ್ಯ. ಮೋದಿ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸುವುದು ಸ್ಪಷ್ಟ. ಆದರೆ, ಕ್ಸಿ ಅವರು ಪಿಎಲ್ಎ ಪಕ್ಷದ ಪಾಲಿಟ್ ಬ್ಯೂರೊ ಬೆಂಬಲಿಸುವವರೆಗೆ ಮಾತ್ರ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಎರಡೂ ದೇಶಗಳಲ್ಲಿ ನಾಯಕರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದರೂ ಅವರು ಅದನ್ನು ಕಡೆಗಣಿಸುತ್ತಿದ್ದಾರೆ.
ಭಾರತ ಹಾಗೂ ಚೀನಾದಲ್ಲಿ ಪ್ರತ್ಯೇಕ ಕಾನೂನುಗಳಡಿ ಆಳಲ್ಪಟ್ಟಿವೆ. ಯಾವುದೇ ಸಂದರ್ಭದಲ್ಲಿ ಸರ್ಕಾರವನ್ನು ಬೆಂಬಲಿಸುವ ಸಂಪ್ರದಾಯವನ್ನು ಮೊದಲಿನಿಂದಲೂ ಪಾಲಿಸಿಕೊಂಡು ಬಂದಿದೆ. ಅದೇ ಬೆಂಬಲದಿಂದ ಮೋದಿ ಅವರು ಭಾರತ-ಚೀನಾ ನಡುವಿನ ಬಿಕ್ಕಟ್ಟನ್ನು ಇತ್ಯರ್ಥ ಮಾಡಿಕೊಳ್ಳುತ್ತಾರೆ. ಆದರೆ, ಗಡಿಯಲ್ಲಿ ಏನಾಗುತ್ತಿದೆ ಎಂಬ ಪಾರದರ್ಶಕತೆಯನ್ನು ಮೋದಿ ಅವರು ಕಾಪಾಡಿಕೊಳ್ಳಬೇಕು. ವಾಸ್ತವ ಸ್ಥಿತಿ ಏನಿದೆಯೋ ಅದನ್ನು ದೇಶದ ಜನರಿಗೆ ತಿಳಿಸಬೇಕು.
ಈ ಚದುರಂಗದ ಆಟದಲ್ಲಿ ಚೀನಾ ರಹಸ್ಯವನ್ನು ಕಾಯ್ದುಕೊಂಡಿದೆ. ಅದರ ಫಲ ಇನ್ನಷ್ಟು ರಹಸ್ಯವಾಗಿಯೇ ಉಳಿಯಲಿದೆ.
ಕೃಪೆ: pchidambaram.in, Indian express
Twitter @Pchidambaram_IN
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


