ದಿನದ ಸುದ್ದಿ
ಕೋವಿದ್19-ಪಾಠ ಕಲಿಯದ ಸಮಾಜ, ದಾರಿ ತಿಳಿಯದ ಸರ್ಕಾರ..!
- ನಾ ದಿವಾಕರ
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲೇ ಭಾರತ ಮತ್ತೊಮ್ಮೆ ಸಾಂಕೇತಿಕ ಆಚರಣೆಗಳಿಗೆ ಮೊರೆ ಹೋಗುತ್ತಿದೆ. ಕರ್ನಾಟಕ ಸರ್ಕಾರ ಮಾಸ್ಕ್ ದಿನಾಚರಣೆ ಆಚರಿಸುವ ಮೂಲಕ ಜಾಗೃತಿ ಮೂಡಿಸಲು ಮುಂದಾಗುತ್ತಿದೆ. ಕೇಂದ್ರ ಸರ್ಕಾರ ಯೋಗದಿನವನ್ನು ಮನೆಯಲ್ಲೇ ಆಚರಿಸಲು ನಿರ್ಧರಿಸಿದೆ.
ಜೂನ್ 1 ರಿಂದ ಆರ್ಥಿಕ ಪುನಶ್ಚೇತನದ ದೃಷ್ಟಿಯಿಂದ ಲಾಕ್ ಡೌನ್ ಸಡಿಲಗೊಳಿಸಿರುವುದು ಕೊರೋನಾ ಕ್ಷಿಪ್ರ ಗತಿಯಲ್ಲಿ ವ್ಯಾಪಿಸಲು ನೆರವಾಗುತ್ತಿರುವುದು ಸ್ಪಷ್ಟ. ಅರ್ಥವ್ಯವಸ್ಥೆಯನ್ನು ಸುಸ್ಥಿತಿಯಲ್ಲಿಡುವ ದೃಷ್ಟಿಯಿಂದ ಲಾಕ್ ಡೌನ್ ಸಡಿಲಗೊಳಿಸಿರುವುದನ್ನು ಆಕ್ಷೇಪಿಸಲಾಗುವುದಿಲ್ಲ. ಆದರೆ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ ಆರೋಗ್ಯ ರಕ್ಷಣೆಯ ಬಗ್ಗೆಯೂ ಗಮನಹರಿಸುವುದು ಅತ್ಯವಶ್ಯ.
ಎರಡು ತಿಂಗಳ ಕಟ್ಟುನಿಟ್ಟಿನ ಲಾಕ್ ಡೌನ್ ಅವಧಿಯಲ್ಲಿ ಜನರು ಮತ್ತು ಸರ್ಕಾರಗಳು ಸಾಕಷ್ಟು ಪಾಠ ಕಲಿಯಬಹುದಿತ್ತು. ಒಂದು ಸಾಂಕ್ರಾಮಿಕ ರೋಗ ಹೇಗೆ ಇಡೀ ವ್ಯವಸ್ಥೆಯ ಬುಡವನ್ನೇ ಅಲುಗಾಡಿಸಿಬಿಡುತ್ತದೆ ಎನ್ನುವುದನ್ನು ಸರ್ಕಾರ ಈ ವೇಳೆಗೆ ಅರ್ಥಮಾಡಿಕೊಂಡಿರಬೇಕು. ಸ್ವತಂತ್ರ ಭಾರತದಲ್ಲಿ ಯಾವ ಸರ್ಕಾರಗಳೂ ಎದುರಿಸದ ಸಂದರ್ಭವನ್ನು ಇಂದು ನಾವು ಎದುರಿಸುತ್ತಿದ್ದೇವೆ.
ಈ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಗೆ ಅನುಭವದ ಕೊರತೆ ಎದ್ದು ಕಾಣುವುದು ಸಹಜ. ಅಧಿಕಾರದಲ್ಲಿರುವ ಸರ್ಕಾರಗಳಲ್ಲಿ ಗೊಂದಲ ಇರುವುದೂ ಸಹಜ. ಈ ಆತಂಕ ಮತ್ತು ಗೊಂದಲಗಳನ್ನು ನಿವಾರಿಸುವ ಮಾರ್ಗೋಪಾಯಗಳು ನಮ್ಮ ನಡುವೆಯೇ ಇವೆ. ಸರ್ಕಾರದ ಮತ್ತು ಜನತೆಯ ಕಣ್ಣು ಕಿವಿ ಸಕ್ರಿಯವಾಗಿರಬೇಕಷ್ಟೇ.
ಕೊರೋನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಅತಿ ಮುಖ್ಯವಾದ ಎಚ್ಚರಿಕೆಯ ಮಾರ್ಗ. ಆದರೆ ಲಾಕ್ ಡೌನ್ ಸಡಿಲಿಕೆಯಾದ ಕೂಡಲೇ ಜನರು ಧರಿಸುತ್ತಿರುವ ಮಾಸ್ಕ್ ಸಹ ಸಡಿಲವಾಗಿ, ಕುತ್ತಿಗೆಗೆ ಜಾರುತ್ತಿರುವುದನ್ನು ಎಲ್ಲೆಡೆ ಕಾಣಬಹುದು. ಯುವ ಜನತೆ ಈ ನಿಟ್ಟಿನಲ್ಲಿ ಬಹುದೊಡ್ಡ ಅಪರಾಧಿಗಳಂತೆ ಕಾಣುತ್ತಾರೆ.
ಶೇ 80ರಷ್ಟು ಜನರು ಮಾಸ್ಕ್ ಧರಿಸದೆಯೇ ಓಡಾಡುವುದನ್ನು ಎಲ್ಲೆಡೆ ಕಾಣಬಹುದು. ಮಾರುಕಟ್ಟೆಗಳಲ್ಲಿ, ಸಂತೆಪೇಟೆಗಳಲ್ಲಿ ಯಾವುದೇ ವ್ಯಾಪಾರಿ ಮಾಸ್ಕ್ ಧರಿಸುವುದನ್ನು ಕಾಣಲಾಗುವುದಿಲ್ಲ. ಹೆಚ್ಚು ಜಾಗೃತರಾಗಬೇಕಾದ ವಿದ್ಯಾರ್ಥಿ ಯುವಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎನ್ನುವ ಎಚ್ಚರಿಕೆ ಬಹುಶಃ ಹಾಳೆಯ ಮೇಲೆ ಉಳಿದಿದೆ. ಮಾರುಕಟ್ಟೆಯ ಮಳಿಗೆಗಳತ್ತ ಒಮ್ಮೆ ಗಮನ ಹರಿಸಿದರೆ ದಂಡದ ಹೊಳೆಯೇ ಹರಿದುಬಿಡುತ್ತದೆ.
ಲಾಕ್ ಡೌನ್ ಅವಧಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ವಾಹನಗಳು ಈಗ ಸ್ತಬ್ಧವಾಗಿವೆ. ಅಂಗಡಿ ಮುಂಗಟ್ಟುಗಳ ಮುಂದೆ ಅನುಸರಿಸಬೇಕಾದ ದೈಹಿಕ ಅಂತರದ ನಿಯಮಗಳು ಮಾಯವಾಗಿವೆ. ಸಮಾರಂಭಗಳಿಗೆ ವಿಧಿಸಿದ್ದ ನಿರ್ದಿಷ್ಟ ಜನರ ಹಾಜರಿಯ ನಿಯಮ ಬಹುಶಃ ಅಧಿಕಾರಶಾಹಿಯ ನಿರ್ಲಕ್ಷ್ಯತೆ ಮತ್ತು ಪಕ್ಷಪಾತ ಧೋರಣೆಗೆ ಬಲಿಯಾಗಿದೆ.
ಸುತ್ತಲೂ ನಡೆಯುತ್ತಿರುವ ವಿವಾಹ, ನಿಶ್ಚಿತಾರ್ಥ ಮುಂತಾದ ಸಮಾರಂಭಗಳನ್ನು ಗಮನಿಸಿದರೆ ಸರ್ಕಾರದ ನಿಯಮಗಳು ಜಾರಿಯಲ್ಲಿವೆಯೇ ಎಂದು ಅನುಮಾನ ಮೂಡುತ್ತದೆ. ಇನ್ನು ಈ ನಿಯಮಗಳನ್ನು ಉಲ್ಲಂಘಿಸುವುದರಲ್ಲಿ ನಮ್ಮ ರಾಜಕೀಯ ನಾಯಕರೇ ಮುಂಚೂಣಿಯಲ್ಲಿದ್ದಾರೆ. ರಾಜ್ಯ ಆರೋಗ್ಯ ಸಚಿವರೇ ಮುಂದಾಳತ್ವ ವಹಿಸಿರುವುದನ್ನು ಕಂಡಿದ್ದೇವೆ.
ಕಾನೂನು ನಿಯಮ ರೂಪಿಸುವ ಜನಪ್ರತಿನಿಧಿಗಳೇ ನಿಯಮ ಉಲ್ಲಂಘಿಸಿದರೆ ಜನಸಾಮಾನ್ಯರು ಹೇಗೆ ಪಾಲಿಸಲು ಸಾಧ್ಯ ? ಮಾಸ್ಕ್ ದಿನಾಚರಣೆ ಆಚರಿಸುವ ಮುನ್ನ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಕುರಿತು ಯೋಚಿಸಬೇಕಲ್ಲವೇ ? ಸರ್ಕಾರ ಒಂದಾದಮೇಲೊಂದರಂತೆ ಕರಾಳ ಶಾಸನಗಳನ್ನು ಜಾರಿಗೊಳಿಸುತ್ತಾ ರೈತರ, ಕಾರ್ಮಿಕರ, ಬಡ ಜನರ ಕತ್ತುಹಿಸುಕುತ್ತಿರುವ ಸಂದರ್ಭದಲ್ಲಿ ಪ್ರತಿಭಟನಕಾರರು ಸರ್ಕಾರದ ನಿಯಮಗಳನ್ನು ಬದ್ಧತೆಯಿಂದ ಅನುಸರಿಸುತ್ತಿದ್ದಾರೆ. ಆದರೆ ನಿಯಮ ರೂಪಿಸುವ ಸಚಿವರು, ರಾಜಕೀಯ ನಾಯಕರು ಉಲ್ಲಂಘಿಸುತ್ತಿದ್ದಾರೆ. ಇದು ಹೊಣೆಗೇಡಿತನದ ಪರಮಾವಧಿ ಅಲ್ಲವೇ ?
ಕೃಷಿ ಕ್ಷೇತ್ರವನ್ನೇ ಸಾರಾ ಸಗಟಾಗಿ ಹರಾಜು ಹಾಕಲು ಸಜ್ಜಾಗಿರುವ ಸರ್ಕಾರದ ನೀತಿಯ ವಿರುದ್ಧ ದನಿ ಎತ್ತುವ ರೈತ ಸಮುದಾಯದ ಪ್ರತಿಭಟನೆಗೆ , ಲಾಕ್ ಡೌನ್ ನಿಯಮ ಮುಂದಿಟ್ಟುಕೊಂಡು, ಅವಕಾಶ ನೀಡದ ಸರ್ಕಾರ ರಾಜಕೀಯ ನಾಯಕರ ಕೌಟುಂಬಿಕ ಸಮಾರಂಭಗಳಿಗೆ, ಪಕ್ಷದ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರ್ಕಾರದ ಹೊಣೆಗೇಡಿತನ ಅಲ್ಲವೇ ?
ಕೋವಿದ್ ವಿರುದ್ಧದ ಹೋರಾಟದಲ್ಲಿ ಮುಂದಾಳತ್ವ ವಹಿಸಬೇಕಾದ ಆರೋಗ್ಯ ಸಚಿವರು ಯಾವುದೇ ಲಾಕ್ ಡೌನ್ ನಿಯಮ ಪಾಲಿಸದೆ ಮೆರವಣಿಗೆ ನಡೆಸುತ್ತಾರೆ. ಮತ್ತೊಬ್ಬ ಶಾಸಕರು ನೂರಾರು ಜನರನ್ನು ಸೇರಿಸಿ ಮಗಳ ಮದುವೆ ನಡೆಸುತ್ತಾರೆ. ಮುಖ್ಯಮಂತ್ರಿಯೇ ಕೊರೋನಾ ಹೋಗಲಾಡಿಸಲು ಧನ್ವಂತರಿ ಹೋಮ ನಡೆಸುತ್ತಾರೆ. ಈ ರೀತಿಯ ಹೊಣೆಗೇಡಿತನದ ನಡುವೆ ಜನಸಾಮಾನ್ಯರಿಂದ ನಿಯಮ ಪಾಲನೆ ಅಪೇಕ್ಷಿಸುವುದಾದರೂ ಹೇಗೆ ?
ಲಾಕ್ ಡೌನ್ ಕೊರೋನಾ ಹರಡುವುದನ್ನು ತಡೆಗಟ್ಟುವ ಒಂದು ಮಾರ್ಗ ಮಾತ್ರ ಎನ್ನುವುದು ಸರ್ಕಾರಕ್ಕೂ ತಿಳಿದಿದೆ. ಕೊರೋನಾ ವಿರುದ್ಧ ಹೋರಾಡಲು ಬೇಕಿರುವುದು ವೈದ್ಯಕೀಯ ಸೌಲಭ್ಯ ಮತ್ತು ಜನಸಾಮಾನ್ಯರ ಜಾಗೃತಿ. ಈ ಜಾಗೃತಿ ಮೂಡಿಸಲು ಸಾಕಷ್ಟು ಮಾನವ ಶ್ರಮವೂ ಅಗತ್ಯ. ಒಂದು ದಿನ ಎಲ್ಲರೂ ಮಾಸ್ಕ್ ಧರಿಸಿದರೆ ಅಂದು ಶಂಖ ಜಾಗಟೆ ಸದ್ದು ಮಾಡಿದಂತೆಯೇ ಆಗುತ್ತದೆ.
ಅಥವಾ ಧನ್ವಂತರಿ ಹೋಮದಿಂದ ಕೊರೋನಾ ಹೋಗುವುದೇ ಆಗಿದ್ದರೆ ಎರಡು ತಿಂಗಳ ಕಾಲ ದೇವಸ್ಥಾನಗಳ ಬಾಗಿಲು ಬಡಿದಿದ್ದೇಕೆ ? ಮೊದಲ ದಿನವೇ ಎಲ್ಲೆಡೆ ಹೋಮ ನಡೆಸಿದ್ದರೆ ಭಾರತದಲ್ಲಿ 9000 ಜನರ ಪ್ರಾಣವಾದರೂ ಉಳಿಯುತ್ತಿತ್ತಲ್ಲವೇ ? ದೇವಸ್ಥಾನದ ದರ್ಶನವಿಲ್ಲದೆಯೂ ಮನುಷ್ಯ ಬದುಕಬಹುದು ಎಂದು ನಿರೂಪಿಸಿರುವ ಆ ಸೂಕ್ಷ್ಮ ವೈರಾಣುವಿನ ವಿರುದ್ಧ ಹೋಮ ಯಜ್ಞದ ಮೂಲಕ ಹೋರಾಡುವುದನ್ನು ನೋಡಿದರೆ ನಮಗಿಂತಲೂ ಕೊರೋನಾ ಹೆಚ್ಚು ಬುದ್ಧಿಮತ್ತೆ ಹೊಂದಿದೆ ಎನ್ನಬಹುದೇನೋ !
ಯಾವುದೇ ಸರ್ಕಾರಕ್ಕೆ ಒಂದು ಸಾರ್ವಜನಿಕ ನೀತಿ ನಿಯಮಗಳನ್ನು ರೂಪಿಸುವ ಮುನ್ನ ಸಮಾಜದ ಗ್ರಹಿಕೆಯ ಸಾಮಥ್ರ್ಯದ ಅರಿವೂ ಇರಬೇಕು. ನಮ್ಮ ಸುತ್ತಲಿನ ಸಮಾಜ ವೈಜ್ಞಾನಿಕ ಅಂಶಗಳನ್ನು ಎಷ್ಟರ ಮಟ್ಟಿಗೆ ಅರ್ಥಮಾಡಿಕೊಳ್ಳುತ್ತದೆ ಎನ್ನುವ ಪ್ರಜ್ಞೆಯೂ ಆಡಳಿತ ವ್ಯವಸ್ಥೆಗೆ ಇರಬೇಕು.
ಸರ್ಕಾರದ ವತಿಯಿಂದ ಕೊರೋನಾ ಹೋಗಲಾಡಿಸಲು ಹೋಮ ಯಜ್ಞ ನಡೆಸಿ, ಸಾಮಾನ್ಯ ಜನರಿಗೆ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದರೆ ಹೇಗೆ ತಾನೇ ಕೇಳಿಯಾರು ? ಅವರೂ ದೇವಸ್ಥಾನಗಳ ಮೊರೆ ಹೋಗುತ್ತಾರೆ.
ಜ್ಯೋತಿಷಿಗಳ, ಪಂಡಿತರ ಮೊರೆ ಹೋಗುತ್ತಾರೆ. ಮೂರು ತಿಂಗಳಿಂದ ವ್ಯಾಪಾರ ಇಲ್ಲದೆ ಬಸವಳಿದಿರುವ ದೇವಾಲಯಗಳಿಗೆ ಲಾಭ ಹೆಚ್ಚಾಗುತ್ತದೆ. ವೈಚಾರಿಕತೆ ಸಾಯುತ್ತದೆ. ಕೊರೋನಾ ಶಾಶ್ವತವಾಗಿ ನಮ್ಮ ನಡುವೆ ಉಳಿಯುತ್ತದೆ. ಈ ಪರಿಜ್ಞಾನ ಸರ್ಕಾರಕ್ಕೆ, ಅಧಿಕಾರಶಾಹಿಗೆ ಇರಬೇಕಲ್ಲವೇ ?
ಮೂರು ತಿಂಗಳ ನಂತರ ಕೊರೋನಾ ಸಮಾಜದ ಎಲ್ಲ ವರ್ಗಗಳನ್ನೂ ಕಾಡುತ್ತಿದೆ. ಭಾರತದ 600ಕ್ಕೂ ಹೆಚ್ಚು ಜಿಲ್ಲೆಗಳಿಗೆ ವ್ಯಾಪಿಸಿದೆ. ಗ್ರಾಮಗಳಿಗೂ ವ್ಯಾಪಿಸುತ್ತಿದೆ. ನಗರ ಪ್ರದೇಶಗಳಲ್ಲಿ ಹಿತವಲಯಗಳನ್ನೂ ಪ್ರವೇಶಿಸಿದೆ. ಇತ್ತೀಚಿನ ದಿನಗಳಲ್ಲಿ ಸಿ ಆರ್ ಪಿ ಎಫ್ ಯೋಧರು, ಪೊಲೀಸ್ ಸಿಬ್ಬಂದಿ, ಸರ್ಕಾರಿ ನೌಕರರು, ಆಶಾ ಕಾರ್ಯಕರ್ತೆಯರು, ವೈದ್ಯರು, ಶುಶ್ರೂಷಕಿಯರು ಹೀಗೆ ಕೊರೋನಾ ವಾರಿಯರ್ಸ್ ಎಂದು ಹೆಮ್ಮೆಯಿಂದ ಕರೆಯಲ್ಪಡುವವರಿಗೂ ಕೊರೋನಾ ಸೋಂಕು ಕಾಡುತ್ತಿದೆ.
ಇದು ಆಡಳಿತ ವ್ಯವಸ್ಥೆಯ ನಿರ್ಲಜ್ಜ ನಿರ್ಲಕ್ಷ್ಯದ ದ್ಯೋತಕ ಎನಿಸುವುದಿಲ್ಲವೇ ? ಮುಂಚೂಣಿಯಲ್ಲಿ ನಿಂತು ಕೊರೋನಾ ಹರಡದಂತೆ ಎಚ್ಚರ ವಹಿಸುವ ಸಿಬ್ಬಂದಿಗೆ ಸೂಕ್ತ ರಕ್ಷಣಾ ಉಪಕರಣಗಳನ್ನು ಒದಗಿಸಿದ್ದಲ್ಲಿ ಈ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿತ್ತಲ್ಲವೇ ?
ತನ್ನೊಳಗಿನ ಕೊರತೆಯ ಪರಿಜ್ಞಾನ ಇಲ್ಲದಿದ್ದರೆ ಅಥವಾ ಇದ್ದರೂ ಸ್ವೀಕರಿಸುವ ಮನಸ್ಥಿತಿ ಇಲ್ಲದಿದ್ದರೆ ಯಾವುದೇ ವ್ಯಕ್ತಿಯೂ ಊರ್ಜಿತವಾಗುವುದಿಲ್ಲ. ಇದು ಒಂದು ದೇಶದ ಸರ್ಕಾರ, ಆಡಳಿತ ವ್ಯವಸ್ಥೆಗೂ ಅನ್ವಯಿಸುತ್ತದೆ. ಭಾರತ ಸರ್ಕಾರ ಇದೇ ಪ್ರಮಾದ ಎಸಗುತ್ತಿದೆ.
ಕೊರೋನ ವೈರಾಣುವಿನ ಸಮುದಾಯ ಪ್ರಸರಣ ಮಾರ್ಚ್ ತಿಂಗಳಲ್ಲೇ ಅರಂಭವಾಗಿದೆ ಎಂದು ಹಲವಾರು ವೈದ್ಯಕೀಯ ತಜ್ಞ ವರದಿಗಳು ಹೇಳುತ್ತಲೇ ಇದ್ದರೂ ನಿರಾಕರಿಸುತ್ತಲೇ ಇರುವ ಸರ್ಕಾರ , ಸಮುದಾಯ ಪ್ರಸರಣದ ವಿರುದ್ಧ ಹೋರಾಡಲು ಅಗತ್ಯವಾದ ರೂಪುರೇಷೆಗಳನ್ನೂ ರೂಪಿಸದೆ ಜನಸಾಮಾನ್ಯರನ್ನು ಅಪಾಯದ ಕೂಪಕ್ಕೆ ತಳ್ಳುತ್ತಿದೆ. ಭಾರತದಲ್ಲಿ ಅಥವಾ ಕರ್ನಾಟಕದಲ್ಲಿ ಇತರೆಡೆಗೆ ಹೋಲಿಸಿದರೆ ಸಾವಿನ ಪ್ರಮಾಣ, ಸೋಂಕಿನ ಪ್ರಮಾಣ ಕಡಿಮೆ ಇದೆ ಎಂದು ಬೆನ್ನುತಟ್ಟಿಕೊಳ್ಳಲು ಇದು ಐಪಿಎಲ್ ಕ್ರಿಕೆಟ್ ಪಂದ್ಯ ಅಲ್ಲ, ಅಲ್ಲವೇ ?
ಇದು ಅಮಾಯಕ ಜೀವಗಳ ಪ್ರಶ್ನೆ. ಅಸಹಜ ಸಾವಿನ ಪ್ರಶ್ನೆ. 9000 ಸಾವುಗಳು ಸಾವೇ ಅಲ್ಲ ಎನ್ನಲಾಗುವುದೇ ? ಒಂದು ಜೀವ ಅಸಹಜವಾಗಿ ಅಸುನೀಗಿದರೂ ಮಿಡಿಯುವ ಮನಸು ಮಾತ್ರ ಸಂಯಮಶೀಲ ಸಮಾಜವನ್ನು ಕಟ್ಟಲು ಸಾಧ್ಯ, ಸಂವೇದನಾಶೀಲ ಸಮಾಜವನ್ನು ರೂಪಿಸಲು ಸಾಧ್ಯ. ಒಂದು ಚುನಾಯಿತ ಸರ್ಕಾರಕ್ಕೂ ಇದೇ ವ್ಯವಧಾನ, ಸಂಯಮ, ಸಂವೇದನೆ ಇರಬೇಕು.
ಸಾವನ್ನು ಲೆಕ್ಕಿಸದ ಸರ್ಕಾರ ಮಾರುಕಟ್ಟೆಯ ದಲ್ಲಾಳಿಯಂತೆ ಕಾಣುತ್ತವೆ. ಭಾರತದಂತಹ ಸಮಾಜದಲ್ಲಿ ಇಂತಹ ಸರ್ಕಾರಗಳು ಇನ್ನೂ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತವೆ. ಪ್ರಾಥಮಿಕ ಆರೋಗ್ಯ ರಕ್ಷಣೆಯ ಪರಿವೆಯೇ ಇಲ್ಲದ ಅಸಂಖ್ಯಾತ ಜನಸಮುದಾಯ ನಮ್ಮ ನಡುವೆ ಇದೆ ಏಕೆಂದರೆ ಈ ಅರಿವು ಮೂಡಿಸುವ ಪ್ರಯತ್ನವನ್ನು ನಮ್ಮ ಸರ್ಕಾರಗಳು ಮಾಡಿಯೇ ಇಲ್ಲ.
ಇಂತಹ ಒಂದು ಸಂದರ್ಭದಲ್ಲಿ ನಾವು ಕೊರೋನಾದಂತಹ ಮಾರಣಾಂತಿಕ ಪಿಡುಗು ಎದುರಿಸುತ್ತಿದ್ದೇವೆ. ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರೂ ಸಾಕಷ್ಟು ಪಾಠ ಕಲಿಯಬಹುದಿತ್ತು. ಆದರೆ ಸುಶಿಕ್ಷಿತರೂ ಪಾಠ ಕಲಿತಿಲ್ಲ ಎನ್ನುವುದು ಮೇಲ್ನೋಟಕ್ಕೇ ತಿಳಿಯುತ್ತಿದೆ. ಸಭೆ, ಸಮಾರಂಭ, ಕೌಟುಂಬಿಕ ಸಂಭ್ರಮಗಳಿಗೆ ಸೇರುವ ಜನದಟ್ಟಣೆಯನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ.
ಜಿಲ್ಲಾಧಿಕಾರಿಗಳೋ, ಪೊಲೀಸ್ ಆಯುಕ್ತರೋ ಶಿಫಾರಸು ಮಾಡಿಬಿಟ್ಟರೆ ಎಷ್ಟು ಜನರನ್ನು ಬೇಕಾದರೂ ಜಮಾಯಿಸಬಹುದು ಎನ್ನುವ ಭ್ರಷ್ಟ ಚಿಂತನೆಯ ನಡುವೆಯೇ ಈ ಸಮಾರಂಭಗಳು ನಡೆಯುತ್ತಿವೆ. ಆದರೆ ಕೊರೋನಾ ವೈರಾಣುವಿಗೆ ಇದರ ಪರಿಜ್ಞಾನ ಇರುವುದಿಲ್ಲ. ಮದುವೆ ಮನೆಯಲ್ಲಿ ಹರಡುವ ವೈರಾಣು ಧನ್ವಂತರಿ ಹೋಮದ ನಡುವೆಯೂ ಹರಡುತ್ತದೆ ರಾಜಕೀಯ ಸಭೆಯಲ್ಲೂ ಹರಡುತ್ತದೆ. ಬಹುಪಾಲು ಜನರು ಮಾಸ್ಕ್ ಧರಿಸುವುದನ್ನು ಮರೆತಿದ್ದಾರೆ, ದೈಹಿಕ ಅಂತರ ಸಂಪೂರ್ಣ ಇಲ್ಲವಾಗಿದೆ.
ಇದನ್ನು ಜಾರಿಗೊಳಿಸುವುದು ಹೇಗೆ ? ಇದು ಸರ್ಕಾರದ ಮುಂದಿರುವ ಸವಾಲು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವುದಾಗಿ ಘೋಷಿಸಲಾಗಿದ್ದರೂ ಇದನ್ನು ಗಮನಿಸುವವರಾರು ? ಅಷ್ಟು ಪೊಲೀಸ್ ಸಿಬ್ಬಂದಿ ನಮ್ಮಲ್ಲಿದೆಯೇ ? ಲಾಕ್ ಡೌನ್ ಅವಧಿಯಲ್ಲಿ ಲಭ್ಯವಿದ್ದ ಪೊಲೀಸ್ ಸಿಬ್ಬಂದಿ ಈಗ ತಮ್ಮ ನಿತ್ಯ ಕರ್ತವ್ಯದಲ್ಲಿ ನಿರತರಾಗಿರುತ್ತಾರೆ.
ಆಸ್ಪತ್ರೆಗಳಲ್ಲೂ ಈ ನಿಯಮಗಳ ಉಲ್ಲಂಘನೆಯಾಗುತ್ತಿರುವುದನ್ನು ಗಮನಿಸಬಹುದು. ಇಲ್ಲಿ ಜನತೆಗೆ ಬುದ್ಧಿ ಇಲ್ಲ ಎನ್ನುವುದೊಂದೇ ಮಂತ್ರವಾಗಬಾರದು. ಜನರಲ್ಲಿ ವಿಶ್ವಾಸ ಮೂಡಿಸುವಂತಹ ಜಾಗೃತಿಯ ಪ್ರಯತ್ನಗಳು ನಡೆಯುತ್ತಿವೆಯೇ ಎಂದು ಯೋಚಿಸಬೇಕಾಗುತ್ತದೆ. ನಿಯಮ ಪಾಲನೆಯನ್ನು ಗಮನಿಸುವ ಸಿಬ್ಬಂದಿಯನ್ನು ನಿಯೋಜಿಸಲಾಗಿದೆಯೇ ಎನ್ನುವುದೂ ಮುಖ್ಯವಾಗುತ್ತದೆ.
ಸರ್ಕಾರಕ್ಕೆ ಎಲ್ಲೆಡೆಯೂ ಕಾಡುವುದು ಸಿಬ್ಬಂದಿಯ ಕೊರತೆ. ಆರೋಗ್ಯ ಕ್ಷೇತ್ರದಲ್ಲಿ ವೈದ್ಯರ ಕೊರತೆಯೇ ತೀವ್ರವಾಗಿದೆ. ಇಡೀ ಭಾರತದಲ್ಲಿ ಒಟ್ಟು 19 ಲಕ್ಷ ಆಸ್ಪತ್ರೆಯ ಹಾಸಿಗೆಗಳಿವೆ, 95 ಸಾವಿರ ಐಸಿಯು ಹಾಸಿಗೆಗಳಿವೆ, 47 ಸಾವಿರ ವೆಂಟಿಲೇಟರ್ ಗಳಿವೆ. ಇವುಗಳ ಪೈಕಿ ಶೇ 60ರಷ್ಟು ಖಾಸಗಿ ಆಸ್ಪತ್ರೆಗಳಲ್ಲಿವೆ. ಶೇ 74ರಷ್ಟು ವೈದ್ಯರು ನಗರಗಳಲ್ಲಿನ ಶೇ 28ರಷ್ಟು ಜನತೆಗೆ ಸೇವೆ ಸಲ್ಲಿಸುತ್ತಿದ್ದಾರೆ.
ಇನ್ನುಳಿದ ಶೇ 26ರಷ್ಟು ವೈದ್ಯರು ಶೇ 72 ಜನರ ಕಾಳಜಿ ವಹಿಸಬೇಕಿದೆ. ಒಂದು ಅಂದಾಜಿನ ಪ್ರಕಾರ ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ನಕಲಿ ವೈದ್ಯರಿದ್ದಾರೆ. ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಬ್ಬಂದಿಯ ಸಂಖ್ಯೆ ಅವಶ್ಯಕತೆಗೆ ಅನುಗುಣವಾಗಿಲ್ಲ ಎನ್ನುವುದು ಸ್ಪಷ್ಟ. ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕೊರೋನಾ ಸಂದರ್ಭದಲ್ಲೂ ಯಾವುದೇ ಪ್ರಯತ್ನ ನಡೆಯದಿರುವುದು ಈ ದೇಶದ ದುರಂತ.
ಈ ಗೊಂದಲಗಳು ಮತ್ತು ನಿರಾಕರಣೆಯ ರಾಜಕಾರಣದ ನಡುವೆಯೇ ದೇಶ ಸಹಜ ಸ್ಥಿತಿಗೆ ಮರಳುತ್ತಿದೆ. ಜನಸಾಮಾನ್ಯರ ಆತಂಕಗಳನ್ನು ಎಂದಿಗೂ ಗಂಭೀರವಾಗಿ ಪರಿಗಣಿಸದ ನಮ್ಮ ದೇಶದ ಆಡಳಿತ ವ್ಯವಸ್ಥೆ ಕೊರೊನಾ ಸಂದರ್ಭದಲ್ಲೂ ಇದೇ ನೀತಿ ಅನುಸರಿಸುತ್ತಿದೆ. ಗಡಿ ಸಂಘರ್ಷ, ಯುದ್ಧೋನ್ಮಾದ, ಆತ್ಮನಿರ್ಭರತೆ ಇವೆಲ್ಲದರ ನಡುವೆಯೂ ನಾವು ಒಂದು ವಿನಾಶಕಾರಿ ವೈರಾಣುವಿನೊಡನೆ ಸೆಣಸಬೇಕಿದೆ.
ಹೆಚ್ಚುತ್ತಿರುವ ಸಾವು, ಸೋಂಕಿತರ ಸಂಖ್ಯೆ ಜನಸಾಮಾನ್ಯರನ್ನು ಆತಂಕಕ್ಕೆ ದೂಡಿದೆ. ಈ ಆತಂಕದ ನಡುವೆಯೇ ಜನರು ಬದುಕು ಸವೆಸಬೇಕಿದೆ. ಬಹುಶಃ ಶಾಲಾ ಮಕ್ಕಳೂ ಈ ಸನ್ನಿವೇಶವನ್ನು ಎದುರಿಸಲಿದ್ದಾರೆ. ಒಂದು ದೇಶದ ಆರೋಗ್ಯ ವ್ಯವಸ್ಥೆ ಸುಸ್ಥಿತಿಯಲ್ಲಿ ಇಲ್ಲದಿದ್ದರೆ ಏನಾಗುತ್ತದೆ ಎಂಬ ಪ್ರಶ್ನೆಗೆ ಕೊರೋನಾ ಉತ್ತರ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ಅಂತರಂಗ4 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ19 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

