ಅಂತರಂಗ
ಧರ್ಮ ಮರ್ಮ – 06 : ಸ್ವರ್ಗದ ಆಸೆ, ನರಕದ ಭಯ
- ಯೋಗೇಶ್ ಮಾಸ್ಟರ್
ಯಾವುದೇ ಸ್ಥಾಪಿತ ಧರ್ಮವಾಗಲಿ, ಯಾವುದೇ ಮತದ ಕವಲುಗಳಾಗಲಿ ಹುಟ್ಟುವುದೇ ಸಂಘರ್ಷದ ಫಲವಾಗಿ. ಆಯಾ ಕಾಲಘಟ್ಟದ ಮೌಢ್ಯ, ಧಾರ್ಮಿಕ ಅಥವಾ ಸಾಂಪ್ರದಾಯಕ ವಿಧಿ ವಿಧಾನಗಳು ಸಮಂಜಸವಾಗಿಲ್ಲ ಎಂದು ಎತ್ತಿದ ದನಿಗಳು ಮತ್ತು ಪರ್ಯಾಯ ಮಾರ್ಗಗಳು ಹೊಸ ಧರ್ಮಗಳಾದವು ಅಥವಾ ಹೊಸ ಪಂಥಗಳಾದವು.
ಸ್ಥಾಪಿತ ವ್ಯಕ್ತಿ ಅಥವಾ ಸಮೂಹದ ಜೀವಿತಾವಧಿಯ ನಂತರದ ಕಾಲಘಟ್ಟಗಳಲ್ಲಿ ಅದೇ ಹೊಸ ಪಂಥದ ಸದಸ್ಯರೇ ಕಟ್ಟರ್ ಧೋರಣೆಗಳನ್ನು ಅನುಸರಿಸುತ್ತಾ, ತಮ್ಮದೇ ಪಂಥ ಅಥವಾ ಧರ್ಮ ಉದಸಿದ್ದ ವೈಶಾಲ್ಯದ ಕಾರಣವನ್ನು ಒಂದು ಚೌಕಟ್ಟಿಗೆ ಒಳಪಡಿಸಿ ಸಂಕುಚಿತಗೊಳಿಸುತ್ತಾರೆ.
ಹೊಸತರ ಆಕರ್ಷಣೆ ಅಥವಾ ಅದರಲ್ಲಿರುವ ವ್ಯಕ್ತಿಗಳ ಮೇಲಿನ ತಮ್ಮ ಗೌರವದಿಂದ ಪಂಥವನ್ನು ಪ್ರವೇಶಿಸಿದ್ದರೂ ಹಳೆಯ ಸಾಂಪ್ರಾದಯಕ ಮನಸ್ಥಿತಿಗಳು ಬದಲಾಗಿರುವುದಿಲ್ಲ. ಹಾಗಾಗಿ ಹಳೆಯ ಪಂಥದಲ್ಲಿದ್ದಂತಹ ಮನಸ್ಥಿತಿಗಳನ್ನು ಹೊಸದರಲ್ಲೂ ಮುಂದುವರಿಸುತ್ತಾರೆ. ಮುಖ್ಯವಾಗಿ ಅವರಿಗೆ ಸ್ಥಾಪಕರ ಮೂಲ ಆಶಯವೇ ಅವರಿಗೆ ತಿಳಿದಿರುವುದಿಲ್ಲ.
ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ, ಲಿಂಗಾಯತ ಮೊದಲಾದ ಧರ್ಮಗಳು, ಹಿಂದೂ ಜೀವನ ಪದ್ಧತಿಯ ಪಂಥಗಳು ಎಲ್ಲವೂ ಇದೇ ರೀತಿಯಲ್ಲಿ ಸೊರಗಿವೆ. ತಮ್ಮ ಮೂಲ ಆಶಯವನ್ನು ಜೀವಂತವಾಗಿರಿಸಿಕೊಳ್ಳಲು ವಿಫಲವಾಗಿವೆ. ಆದರೆ ಇಲ್ಲಿ ನಾವು ವಿಚಾರ ಮಾಡಬೇಕಾದ ಅಂಶವೆಂದರೆ ಸೋತಿರುವುದು ಅಥವಾ ವಿಫಲವಾಗಿರುವುದು ಧರ್ಮ ಅಥವಾ ಧರ್ಮದ ಸ್ಥಾಪಕರು ಅಲ್ಲ. ಆಯಾ ಧರ್ಮಗಳ ಧಾರ್ಮಿಕರು.
ಸಾಮಾನ್ಯವಾಗಿ ಧರ್ಮಗಳಲ್ಲಿ ಆಶಯದ ಅನುಷ್ಠಾನಕ್ಕೆ ಅಗತ್ಯವಿರುವ ನೇಮ, ನಿಯಮಗಳನ್ನು ಸಂಪ್ರದಾಯಗಳನ್ನಾಗಿಸಿ, ಅವುಗಳನ್ನು ಉಳಿಸಿಕೊಳ್ಳಲು ಅವುಗಳ ಬಗ್ಗೆ ಭಯ ಮತ್ತು ಆಸೆಗಳನ್ನು ಹುಟ್ಟುಹಾಕುವುದು ಆ ಸಂಪ್ರದಾಯಸ್ಥ ಮನಸ್ಥಿತಿಗಳ ಕೆಲಸ. ಭಯ ಮತ್ತು ಆಸೆಗಳನ್ನು ಹುಟ್ಟು ಹಾಕಲು ಅವರು ಬಳಸುವ ತಂತ್ರವೇ ಕಥನಕಲೆ. ಸಾಮಾನ್ಯವಾಗಿ ಕಥನ ನಿರೂಪಣೆಗಳಿಗೆ ಸಾಮಾನ್ಯರ ಮನಸ್ಸುಗಳು ಸೋಲುತ್ತವೆ.
ಅದರಲ್ಲೂ ಆ ನಿರೂಪಣೆಗಳು ಭಾವನಾತ್ಮಕವಾಗಿ ನಾಟಕೀಯವಾಗಿ ಪ್ರಸ್ತುತವಾಗಿಬಿಟ್ಟರಂತೂ ಅವರು ಸಂಪೂರ್ಣ ಮರುಳಾಗಿಬಿಡುತ್ತಾರೆ. ತಮ್ಮದೇ ಬದುಕಿನ ಪ್ರತಿಫಲನದಂತೆ ಆರಂಭವಾಗುವ ಆ ಕಥೆಗಳು ಯಾರದ್ದೋ ಆಗಿರುತ್ತವೆ. ಆದರೆ ನೋವು, ಸಂಕಟ, ಕಷ್ಟಗಳ ಸಾಮ್ಯತೆ ಇರುತ್ತವೆ. ಆ ಕಥೆಗಳಲ್ಲಿ ಅದ್ಯಾವುದೋ ಮಾರ್ಗದಿಂದ ಆ ಕಷ್ಟ ನೋವುಗಳು ಪರಿಹಾರವಾಗುತ್ತವೆ. ಹಾಗಾಗಿ ತಾವೂ ಅಂತೆಯೇ ವ್ರತವನ್ನು ಮಾಡಬೇಕು ಎಂದು ಜನ ತಿಳಿಯುತ್ತಾರೆ. ವ್ರತ ಎಂದರೇನೇ ನೇಮ. ನಿಯಮವನ್ನು ಅಚ್ಚುಕಟ್ಟಾಗಿ ಪಾಲಿಸುವುದು. ಇದರಿಂದ ಸಾಂಪ್ರದಾಯಕ ಚೌಕಟ್ಟುಗಳು ಬಲಗೊಳ್ಳುತ್ತಾ ಬರುವವು.
ಹಾಗೆಂದು ನೇಮ ನಿಷ್ಟೆಗಳನ್ನು ನಕಾರಾತ್ಮಕವಾಗಿ ನೋಡುವ ಅಗತ್ಯವಿಲ್ಲ. ಯಾವುದೇ ಸಂದರ್ಭದಲ್ಲಿ ಕೇಡಿನೊಂದಿಗೆ, ಅಸತ್ಯದೊಂದಿಗೆ, ಪರಿಸ್ಥಿತಿಗೆ ಅನುಗುಣವಾಗಿ ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳದೇ ತನ್ನ ಜೀವನ್ಮುಖಿ ಧೋರಣೆಯನ್ನು, ಸತ್ಯ ನಿಷ್ಟತೆಯನ್ನು, ನ್ಯಾಯಪರತೆಯನ್ನು ಕಾದುಕೊಳ್ಳುತ್ತಾ ಬರುವುದು ಕೂಡ ನೇಮವೇ. ಅದೇ ಇಲ್ಲಿ ನಾವು ಸ್ಪಷ್ಟತೆಯನ್ನು ಕಂಡುಕೊಳ್ಳಬೇಕಾಗಿರುವುದು. ಯಾವ ನೇಮವನ್ನು ಮಾಡಿಕೊಂಡಿದ್ದೇವೆ.
ಅದರ ಆಶಯವೇನು? ಅದು ಯಾವ ಪರವಾಗಿದೆ? ಅದು ವಿಶಾಲಾರ್ಥದಲ್ಲಿ ಸಮಾಜಮುಖಿಯಾಗಿದೆಯೋ,ಜೀವನ್ಮುಖಿಯಾಗಿದೆಯೋ, ಜೀವಪರವಾಗಿದೆಯೋ, ತಮ್ಮದೇ ಪಂಥದ ಪ್ರತಿಷ್ಠೆ ಅಥವಾ ಅಹಂಭಾವದ ಧೋರಣೆಯಾಗಿದೆಯೋ, ಶ್ರೇಷ್ಟತೆಯ ವ್ಯಸನದಿಂದ ಕೂಡಿದೆಯೋ; ಇಂಥವನ್ನೆಲ್ಲಾ ತಿಳಿಯಬೇಕಾದರೆ ಒಬ್ಬಾತನಿಗೆ ವ್ಯಕ್ತಿಗತವಾಗಿ ಪರಾಮರ್ಶೆ ಮಾಡಿಕೊಳ್ಳುವ ಗುಣವಿರಬೇಕು. ತಾನೇ ನಿರ್ಧಾರಗಳನ್ನು ತೆಗೆದುಕೊಳ್ಳುವಂತಹ ಆತ್ಮವಿಶ್ವಾಸದಿಂದ ಕೂಡಿರುವ ಧೈರ್ಯವಿರಬೇಕು.
ತನ್ನ ಒಲವು, ನಿಲುವುಗಳಲ್ಲಿ ಸ್ಪಷ್ಟತೆ ಇದ್ದ ಪಕ್ಷದಲ್ಲಿ ಯಾವುದೇ ಧರ್ಮ, ಮತ ಅಥವಾ ಪಂಥದಲ್ಲಿದ್ದರೂ ಅದರ ಕೆಲವು ಅಂಶಗಳನ್ನು ಒಪ್ಪುವ ಅಥವಾ ನಿರಾಕರಿಸುವ, ಕೆಲವನ್ನು ಅಚ್ಚುಕಟ್ಟಾಗಿ ಪಾಲಿಸುವ ಅಥವಾ ತಿರಸ್ಕರಿಸುವ ನಿರ್ಧಾರಗಳನ್ನು ತಾನೇ ತೆಗೆದುಕೊಳ್ಳುತ್ತಾನೆ. ಅಲ್ಲದೇ ತನ್ನ ಧೋರಣೆ ಮತ್ತು ಆಶಯದ ಬಗ್ಗೆ ಸ್ಪಷ್ಟತೆಯನ್ನು ತಳೆದಿರುವ ಕಾರಣ ಕಾಳು ಹೊಟ್ಟುಗಳನ್ನು ಬೇರ್ಪಡಿಸುವ, ಅಗತ್ಯ ಮತ್ತು ಅನಗತ್ಯಗಳನ್ನು ಸ್ಪಷ್ಟವಾಗಿ ನೋಡುವಂತಹ ದೃಷ್ಟಿಯನ್ನು ಹೊಂದಿರುತ್ತಾರೆ.
ಇದರಿಂದಾಗಿಯೇ ಸ್ಥಾಪಿತ ಧರ್ಮಗಳಲ್ಲಿದ್ದು, ಅದೇ ಧರ್ಮದ ನೇಮ ನಿಷ್ಟೆ ಶ್ರದ್ಧೆಗಳನ್ನು ಹೊಂದಿದ್ದರೂ ಅವರು ಕ್ರಾಂತಿಕಾರಿಗಳಂತೆ ಕಾಣುತ್ತಾರೆ. ಏಕೆಂದರೆ ಬರಿಯ ಸಾಂಪ್ರದಾಯಿಕ ಮನಸ್ಥಿತಿಗಳ ಸಮೂಹವು ನಡೆದುಕೊಳ್ಳುವುದಕ್ಕಿಂದ ಭಿನ್ನವಾಗಿ ಇವರು ಕಾಣುತ್ತಾರೆ. ಅವರನ್ನು ಒಪ್ಪಬಹುದು, ನಿರಾಕರಿಸಬಹುದು, ನಿವಾರಿಸಿಯೇಬಿಡಬಹುದು. ಅದು ಸಾಂಪ್ರದಾಯಕ ಮನಸ್ಥಿತಿಯವರ ರೋಗಗ್ರಸ್ಥದ ಗಾಢತೆ ಮತ್ತು ಪ್ರಭಾವಗಳ ಮೇಲೆ ಆಧಾರಿತವಾಗಿರುತ್ತದೆ.
ಸ್ಪಷ್ಟವಾಗಿ ನಮಗೆ ಎಲ್ಲಾ ಧರ್ಮಗಳಲ್ಲೂ ಕಾಣಬರುವುದೇನೆಂದರೆ ಅದೇ ಧರ್ಮದ ನೇಮವನ್ನು ಆಚರಿಸುತ್ತಲೇ ಅದೇ ಧರ್ಮದ ಸಾಂಪ್ರದಾಯಿಕ ಧೋರಣೆಗಳ ಬಗ್ಗೆ ಧ್ವನಿ ಎತ್ತಿರುವಂತಹದ್ದು. ಆದರೆ ಇವರ ಸಂಖ್ಯೆ ಬಹಳ ಕಡಿಮೆ. ಕೆಲವೊಮ್ಮೆ ಇಲ್ಲವೇ ಇಲ್ಲ ಎಂದೆನಿಸುವಷ್ಟೂ ಕಡಿಮೆ. ಸ್ವರ್ಗ ನರಕಗಳ ಜನಕರು ಸಂಪ್ರದಾಯವಾದಿಗಳು ಮೂಲಭೂತ ಆಶಯವನ್ನು ಉಳಿಸಿಕೊಳ್ಳಲು ಹಾಕಿಕೊಟ್ಟಿರುವ ಮಾರ್ಗವನ್ನು ಬಿಡಲೇಬಾರದೆಂಬಂತಹ ವಿಚಾರಕ್ಕೆ ಬದ್ಧರಾಗಿರುವ ಕಾರಣದಿಂದ ಸಂಪ್ರದಾಯಕ್ಕೆ ಶರಣು ಹೋಗುವುದು. ಇತರರನ್ನು ಅದರ ತೆಕ್ಕೆಯಲ್ಲಿ ಸೆಳೆಯಲು ಅಥವಾ ಈಗಾಗಲೇ ಇರುವವರು ಬಿಟ್ಟು ಹೋಗದಿರಲು ಸ್ವರ್ಗದ ಗಳಿಕೆ ಮತ್ತು ನರಕದ ಭೀತಿಯನ್ನು ಇಟ್ಟಿರುವರು.
ಕನ್ನಡದ ನಾಗರಹೊಳೆ ಚಿತ್ರದಲ್ಲಿ “ಇಲ್ಲೇ ಸ್ವರ್ಗ, ಇಲ್ಲೇ ನರಕ ಮೇಲೆ ಇಲ್ಲ ಸುಳ್ಳು. ಹುಟ್ಟು ಸಾವು ಎರಡರ ಮಧ್ಯೆ ಮೂರು ದಿನದ ಬಾಳು” ಎಂಬ ಹಾಡು ಬಹಳ ಜನಪ್ರಿಯ. ಈ ಸ್ವರ್ಗ ಮತ್ತು ನರಕ ಸುಳ್ಳು ಎಂಬ ಧೋರಣೆ ತಳೆಯುವಂತಹ ಇಂತಹದ್ದೊಂದು ವಿಚಾರ ಬರಲು ಬಹಳಷ್ಟು ಕಾಲ ಬೇಕಾಯ್ತು. ಈಗ, ಈ ಕಾಲಘಟ್ಟದಲ್ಲಂತೂ ಸ್ವರ್ಗ ಮತ್ತು ನರಕದ ಭಯ ಬಹುತೇಕ ಯಾರಿಗೂ ಇಲ್ಲ. ಈಗ ಮಾಡಿದ್ದು ಈಗಲೇ ಎಂಬ ಮನಸ್ಥಿತಿಗೆ ತಲುಪಿಯಾಗಿದೆ. ಮರಣಾನಂತರದ ಜೀವನದಲ್ಲಿ, ದೇವರ ಸಾಮ್ರಾಜ್ಯದಲ್ಲಿ ಎಂದೇನೆಲ್ಲಾ ಯಾರಾದರೂ ಸತ್ತಾಗ ಹೇಳಬಹುದು.
ಅದು ಬರಿಯ ಆಗಿನ ನಂಬಿಕೆಯ ಉಳಿಕೆಯ ಮಾತಾಗಿದೆಯೇ ಹೊರತು ಯಾರಿಗೂ ಅದರ ಮೇಲೆ ಗಾಢವಾದ ನಂಬಿಕೆಯೇನೂ ಅಷ್ಟಿಲ್ಲ. ಕನಿಷ್ಟಪಕ್ಷ ಸಂಖ್ಯಾವಾರು ದೃಷ್ಟಿಯಿಂದಾದರೂ ಈ ಹಿಂದೆಲ್ಲಾ ಇರುವಷ್ಟು ಪ್ರಮಾಣದಲ್ಲಿ ಖಂಡಿತ ಇಲ್ಲ. ಆದರೆ, ಕಾಯುವ, ಮುನಿಯುವ ದೇವರ ಕಲ್ಪನೆ ಮಾತ್ರ ಜೀವಂತವಾಗಿದೆ. ಅದೂ ನಾವು ಮಾಡುವ ಭಕ್ತಿ ಅಥವಾ ದೇವರಿಗೆ ವಿಮುಖವಾಗಿ ಮಾಡುವಂತಹ ಕೆಲಸ “ದೋಸೆ ಮುಗುಚಿ ಹಾಕಿದಂತೆ” ಈಗಲೇ, ಈ ಒಂದು ಜನ್ಮದಲ್ಲೇ ಅನುಭವಕ್ಕೆ ಬರುತ್ತದೆ ಎಂಬ ನಂಬಿಕೆ ಗಾಢವಾಗಿದೆ. ಇದು ನೇರ ಕರ್ಮ ಸಿದ್ಧಾಂತದ ಪ್ರಭಾವ.
ಕರ್ಮ ಸಿದ್ಧಾಂತದ ಬೇರು
ಕರ್ಮ ಸಿದ್ಧಾಂತವು ಭಾರತದ ಕೊಡುಗೆ ಎಂದು ಬಹಳಷ್ಟು ವಿದ್ವಾಂಸರು ಹೇಳುವುದುಂಟು, ಹಾಗೆಯೇ ಸಾಮಾನ್ಯರಲ್ಲಿ ಒಂದು ನಂಬುಗೆ ಉಂಟು. ಆದರೆ ಹಾಗೇನೂ ಇಲ್ಲ. ಕರ್ಮ ಸಿದ್ಧಾಂತದ ಬೇರು ಪ್ರಪಂಚದ ಶ್ರದ್ಧಾಕ್ಷೇತ್ರದ ಮೂಲೆ ಮೂಲೆಯಲ್ಲಿದೆ. ಎಲ್ಲಾ ಧಾರ್ಮಿಕತೆಗಳಲ್ಲೂ, ಸಂಸ್ಕೃತಿ, ಆಧ್ಯಾತ್ಮಿಕತೆಗಳಲ್ಲೂ ಕರ್ಮ ಸಿದ್ಧಾಂತವು ಒಂದಿಲ್ಲೊಂದು ರೀತಿಯಲ್ಲಿ ನುಸುಳಿಕೊಂಡಿವೆ. ಆದರೆ ಈ ಕರ್ಮ ಸಿದ್ಧಾಂತದ ಮೂಲವನ್ನು ಮನಸ್ಸಿನ ಮೂಲದೊಂದಿಗೆ ಗುರುತಿಸಿದವನು ಮತ್ತು ಸಮೀಕರಿಸಿದವನು ಬುದ್ಧ.
ಭಗವತ್ಗೀತೆಯ ಕರ್ಮಯೋಗದಲ್ಲಿ ಮತ್ತು ಇತರ ಅಧ್ಯಾಯಗಳಲ್ಲಿ ಕರ್ಮಸಿದ್ಧಾಂತವನ್ನು ಬಹಳ ಸೂಕ್ಷ್ಮವಾಗಿ ಮತ್ತು ಯೋಗ್ಯವಾಗಿ, ಕೆಲವೊಮ್ಮೆ ಆಗ್ರಹಕ್ಕೊಳಗಾಗಿ ಚಿತ್ರಿಸಿದ್ದಾರೆ. ಅವು ನಿಜಕ್ಕೂ ಅಧ್ಯಯನ ಯೋಗ್ಯ. ಅದರಿಂದ ನಮ್ಮ ಪೂರ್ವಿಕರ ಒಲವು ನಿಲುವುಗಳು ಹಾಗೂ ಗೀತೆಯನ್ನು ತಮ್ಮ ಬಳಕೆಗೆ ತಂದುಕೊಳ್ಳುವಂತಹ ಮನಸ್ಥಿತಿಯವರ ಗುಪ್ತ ಆಶಯ ಅಥವಾ ಗೀಳುಗಳೂ ನಮಗೆ ಅರಿವಾಗುತ್ತಾ ಹೋಗುತ್ತದೆ. ಅಂತಹ ಅರಿವಿಗೆ ತೆರೆದುಕೊಳ್ಳುವುದರಿಂದಲೇ ಮಾರ್ಗಕ್ಕೆ ಸ್ಪಷ್ಟತೆಯೂ, ಗಮ್ಯಕ್ಕೆ ನಿಖರತೆಯೂ ಲಭ್ಯವಾಗುತ್ತದೆ.
ಅತ್ಯಂತ ಆಶ್ಚರ್ಯದ ಸಂಗತಿಯೆಂದರೆ ಸ್ವರ್ಗ ನರಕಗಳ ಪರಿಕಲ್ಪನೆ ಮತ್ತು ನರಕದಲ್ಲಿ ಇರುವಂತಹ ಒಂದು ಕೆಟ್ಟದಾದ ನದಿಯ ಪರಿಕಲ್ಪನೆಯು ವಿಶ್ವದ ಬಹುಪಾಲು ಎಲ್ಲಾ ಸಂಸ್ಕೃತಿಗಳಲ್ಲಿ ಇರುವುದು. ಹಾಗೆಯೇ ಬಹುಪಾಲು ಪ್ರಾಚೀನ ಧಾರ್ಮಿಕ ಅಥವಾ ಆಧ್ಯಾತ್ಮಿಕ ಸಿದ್ಧಾಂತಗಳಲ್ಲಿ ಮತ್ತು ಪೌರಾಣಿಕ ನಿರೂಪಣೆಗಳಲ್ಲಿ ಜಗತ್ತಿನ ಸೃಷ್ಟಿ ಮತ್ತು ಪ್ರಳಯಗಳ ಬಗ್ಗೆ ಜಿಜ್ಞಾಸೆಗಳಿವೆ. ಅಂದರೆ ಎಲ್ಲರೂ ಒಂದು ಉತ್ಪತ್ತಿ ಮತ್ತು ನಾಶದ ಬಗ್ಗೆ ಅವಧಾನವನ್ನು ಹೊಂದಿದ್ದು, ಪ್ರಸ್ತುತ ಸ್ಥಿತಿಯಲ್ಲಿ ಹೆಚ್ಚಿನ ಮಟ್ಟದ ಗಮನ ನೀಡುವ ಅಭಿಲಾಷೆಯನ್ನು ಹೊಂದಿದ್ದರು.
ಅದರಿಂದಾಗಿಯೇ ತಮ್ಮ ಕಣ್ಣಿಗೆ ಕಾಣುವ ಜೀವ ಸೃಷ್ಟಿಯ ಹಿಂದಿನದುರ ಬಗ್ಗೆ ಮತ್ತು ಜೀವ ನಾಶದ ನಂತರದ ಬಗ್ಗೆ ಅತೀವ ಆಸಕ್ತಿಯನ್ನೂ ಹೊಂದಿದ್ದಲ್ಲದೇ, ಅವರ ಕಾಲಘಟ್ಟದ ದಾರ್ಶನಿಕರು, ಬುದ್ಧಿವಂತರು, ಸೂಕ್ಷ್ಮವಿಚಾರವಾದಿಗಳು ಹೇಳುವುದನ್ನು ಶ್ರದ್ಧಾ ಭಕ್ತಿಗಳಿಂದ ಕೇಳಿದ್ದೇ ಅಲ್ಲದೇ ಒಪ್ಪಿರುತ್ತಿದ್ದರು.
ಜಡ್ಜ್ಮೆಂಟ್ ಡೇ ಸ್ಪಷ್ಟವಾಗಿ ದಾಖಲಾಗಿರುವ ಯಾವುದೇ ಧಾರ್ಮಿಕ ಗ್ರಂಥಗಳಲ್ಲಿ ತೀರ್ಮಾನದ ದಿನ (ಜಡ್ಜ್ಮೆಂಟ್ ಡೇ) ಎಂಬುದು ಜಗತ್ತಿಗೂ ಇರುತ್ತದೆ. ಹಾಗೆಯೇ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಆ ಜಡ್ಜ್ಮೆಂಟ್ ಅವಧಿ ಬಂದಿರುತ್ತದೆ. ಅದೇ ಅವನ ಪಾಪ ಪುಣ್ಯಗಳ ವಿಚಾರಣಾ ದಿನವೂ ಹೌದು.
ಅವನು ಮಾಡಿರುವ ಪಾಪ ಪುಣ್ಯಗಳ ಅನುಸಾರವಾಗಿ ಅವನು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುವನು. ಹಾಗೆಯೇ ಎರಡನ್ನೂ ತೂಕ ಮಾಡಿ ನೋಡಲು ಮಾಡಿರುವ ಪಾಪಕ್ಕಿಂತ ಪುಣ್ಯವೇ ಹೆಚ್ಚಾಗಿದ್ದ ಪಕ್ಷದಲ್ಲಿ ಸ್ವರ್ಗಕ್ಕೆ ಹೋಗುವನು. ಕೆಲವೊಮ್ಮೆ ಮಾಡಿರುವ ಪಾಪಕ್ಕೆ ಶಿಕ್ಷೆ ಅನುಭವಿಸುವಂತೆ ಮಾಡಿ, ಆ ಪಾಪಕರ್ಮದ ಫಲವನ್ನು ಕಳೆದುಕೊಂಡು ಸ್ವರ್ಗಕ್ಕೆ ಕಳುಹಿಸಲಾಗುವುದು. ಕೆಲವೊಮ್ಮೆ ಮಾಡಿದ ಪಾಪಗಳನ್ನೆಲ್ಲಾ ಒಮ್ಮಿಂದೊಮ್ಮೆಲೇ ಶುದ್ಧಗೊಳಿಸಿ, ಆತ್ಮವನ್ನು ಶುದ್ಧಾತ್ಮವನ್ನಾಗಿಸಿ ಏಕ್ದಂ ಸ್ವರ್ಗಕ್ಕೆ ಕಳುಹಿಸುವಂತಹ ಕೆಲವು ಸೂಕ್ಷ್ಮ ತಂತ್ರಗಾರಿಕೆಗಳು ಉಂಟು. ಅವೇನೇ ಇರಲಿ.
ಈ ಪಾಪ ಪುಣ್ಯ ಮತ್ತು ಸ್ವರ್ಗ ನರಕಗಳ ಪರಿಕಲ್ಪನೆಯು ಮನುಷ್ಯನನ್ನು ಅತ್ಯಂತ ಸುದೀರ್ಘ ಕಾಲ, ಸಾವಿರಾರು ವರ್ಷಗಳ ಕಾಲ ಆಳಿದೆ ಎಂಬುದು ಸುಳ್ಳಲ್ಲ. ಈ ಪರಿಕಲ್ಪನೆಗಳನ್ನು ಒಮ್ಮಿಂದೊಮ್ಮೆಲೇ ಸುಳ್ಳು ಎಂದು ತಳ್ಳಿ ಹಾಕಿಬಿಡುವುದರಿಂದ ಸಮಸ್ಯೆಯೇ ಇಲ್ಲ, ಕೆಲಸವೇ ಇಲ್ಲ. ಆದರೆ, ಇಂತಹದ್ದೊಂದು ಸುಳ್ಳು ಏಕಾಗಿ ಮತ್ತು ಹೇಗೆ ಇಷ್ಟೂ ಕಾಲ, ಅಷ್ಟು ವ್ಯಾಪಕವಾಗಿ ಸಮೂಹಗಳಲ್ಲಿ ಜೀವಂತವಾಗಿತ್ತು, ಅವರನ್ನು ಆಳುತ್ತಿತ್ತು, ಅವರ ಮನಸ್ಸುಗಳನ್ನು, ಬದುಕುಗಳನ್ನು, ಶಕ್ತಿಗಳನ್ನು ತನ್ನ ಅಧೀನದಲ್ಲಿಟ್ಟುಕೊಂಡಿತ್ತು ಎಂದು ವಿಚಾರಿಸಲು ಹೋದರೆ ಬಹಳ ಸೂಕ್ಷ್ಮವಾದ ವಿಷಯಗಳು ಅನಾವರಣಗೊಳ್ಳುತ್ತಾ ಹೋಗುವವು.
ಅದೇನೇ ಆಗಲಿ, ಒಬ್ಬ ವ್ಯಕ್ತಿಯ ಜೀವನಾವಧಿಯಲ್ಲಿ ವಿಕಾಸದ ಘಟ್ಟಗಳನ್ನು ಗುರುತಿಸಿಕೊಳ್ಳುತ್ತಾ, ಹಿಂದಕ್ಕೆ ನಡೆಯುತ್ತಾ ಭೂತದಲ್ಲಿ ಆದ ಪ್ರಭಾವಗಳನ್ನು ಗುರುತಿಸುವಷ್ಟೇ ಸುಂದರವಾದ ಮತ್ತು ಅಗತ್ಯವಾದ ಕೆಲಸ ಇದಾಗಿರುತ್ತದೆ. ಸ್ವರ್ಗ ಮತ್ತು ನರಕಗಳ ಪರಿಕಲ್ಪನೆಗಳನ್ನು ಉಪಚರಿಸಿದ ಬಗೆಗಳಲ್ಲಿ ನಾನಾ ರೀತಿಗಳಿವೆ. ಆದರೆ ಪ್ರಾಚೀನ ಸಮಾಜಗಳು ಅವನ್ನು ಸ್ವೀಕರಿಸಿದ್ದವು. ಅವನ್ನು ಗ್ರಹಿಸುತ್ತಿದ್ದ ರೀತಿಗಳಲ್ಲಿ ಮತ್ತು ಪರಿಗಣಿಸುತ್ತಿದ್ದ ಮತಿಗಳಲ್ಲಿ ವೈರುಧ್ಯತೆಗಳಿರುತ್ತಿದ್ದವು.
ನಾನು ಸಣ್ಣವನಿರುವಾಗ ಅನೇಕ ವಿಷಯಗಳನ್ನು ಕೇಳುತ್ತಿದ್ದೆ. “ಯಾರಾದರೂ ಸತ್ತಾಗ ಅತಿಯಾಗಿ ಅಳಬಾರದು. ನಮ್ಮೆಲ್ಲರ ಕಣ್ಣೀರು ಸತ್ತವರ ಸ್ವರ್ಗಾವರೋಹಣಕ್ಕೆ ಪ್ರವಾಹವಾಗಿ ಅಡ್ಡ ಬಂದು ತೊಡಕಾಗುವುದು.”
“ವಿಚಾರಣಾ ಸ್ಥಳದಿಂದ (ಯಮಲೋಕ) ಸ್ವರ್ಗಕ್ಕೆ ಹೋಗುವ ದಾರಿ ಬಹಳ ಸೂಕ್ಷ್ಮ. ಬೆಕ್ಕು ಅದನ್ನು ಕಡಿದು ಹಾಕಿದರೆ, ನಾಯಿಯು ತನ್ನ ಬಾಲದಿಂದ ದಾರಿಯು ತುಂಡಾಗದಂತೆ ಅಥವಾ ನಡೆಯುವಿಕೆಗೆ ತೊಡಕಾಗದಂತೆ ನೋಡಿಕೊಳ್ಳುತ್ತದೆ.”
“ಸತ್ತಮೇಲೆ ಮಾಡುವ ಸರಿಯಾದ ಸಂಸ್ಕಾರದಿಂದ, ಅವರ ಹೆಸರಿನಲ್ಲಿ ಮಾಡುವ ದಾನ ಧರ್ಮಗಳ ಪುಣ್ಯ ಸಂಚಯದಿಂದ ವಿಚಾರಣೆಯಲ್ಲಿರುವ ಮೃತವ್ಯಕ್ತಿಯ ಖಾತೆಗೆ ಪುಣ್ಯವು ಜಮಾಆಗಿ ಅವನು ಸ್ವರ್ಗಕ್ಕೆ ಹೋಗುವಂತಹ ಅರ್ಹತೆಗಳನ್ನು ಪಡೆಯುತ್ತಾನೆ.”
“ದೇವಸ್ಥಾನದಲ್ಲಿ ದೇವರ ದುಡ್ಡನ್ನು ಕದಿಯುವವನು, ದೈವೀಕಾರ್ಯದಲ್ಲಿ ವಂಚಿಸಿ ಧನ ಸಂಗ್ರಹ ಮಾಡುವವನು ಮುಂದಿನ ಜನ್ಮದಲ್ಲಿ ನಾಯಿಯಾಗುತ್ತಾನೆ.” (ನಾನು ಸಣ್ಣವನಿದ್ದಾಗ ಇದನ್ನು ತಿಳಿದ ಮೇಲೆ ಬಹಳ ಗಂಭೀರವಾಗಿ ನಂಬಿದ್ದೇ ಅಲ್ಲದೇ ಎದುರಾಗುವ ಪ್ರತಿ ನಾಯಿಗೂ ಯಾವ ದೇವಸ್ಥಾನದ ಪೂಜಾರಿಯಾಗಿದ್ದೆ? ಯಾವ ದೇವರ ಅರ್ಚಕನಾಗಿದ್ದೆ? ಎಂದು ವಿಚಾರಿಸುತ್ತಿದ್ದೆ.)
“ಕಬ್ಬಿಣವನ್ನು ಕದ್ದವನು ಮುಂದಿನ ಜನ್ಮದಲ್ಲಿ ಬಿಳಿಯ ಮಚ್ಚೆಗಳನ್ನು ಹೊಂದಿರುವಂತಹ ತೊನ್ನಿನ ರೋಗವನ್ನು ಪಡೆಯುತ್ತಾನೆ.” ಇತ್ಯಾದಿ. ಈ ಬಗೆಯ ಮಾತುಗಳೆಲ್ಲದರ ಹಿಂದೆ ಕಾರಣಗಳಿವೆ, ಪ್ರಭಾವಗಳಿವೆ ಮತ್ತು ಉದ್ದೇಶಗಳೂ ಸ್ಪಷ್ಟವಾಗಿವೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



