Connect with us

ಬಹಿರಂಗ

ಬಣ್ಣ, ರುಚಿ ಮತ್ತು ಶಕ್ತಿ

Published

on

  • ಡಾ.ಎನ್.ಕೆ.ಪದ್ಮನಾಭ,ಸಹಾಯಕ ಪ್ರಾಧ್ಯಾಪಕರು,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೊತ್ತರ ಕೇಂದ್ರ,ಉಜಿರೆ

ಬರಹದ ಶೀರ್ಷಿಕೆಯ ಮೂರೂ ಪದಗಳು ಹಲವರ ನೆನಪಿನ ಪುಟಗಳಲ್ಲಿ ದಾಖಲಾಗಿರಬಹುದು. ಚಹಾಪುಡಿಯನ್ನು ಜನಜನಿತವಾಗಿಸಲು ಟಿ.ವಿ ಮೂಲಕ ತಲುಪಿಕೊಳ್ಳುತ್ತಿದ್ದ ಜಾಹಿರಾತು ಈ ಪದಗಳನ್ನು ನಮ್ಮ ನೆನಪಿನ ಕೋಶದೊಂದಿಗೆ ಬೆರೆಸುವಲ್ಲಿ ಯಶಸ್ವಿಯಾಗಿತ್ತು. ಅದಷ್ಟೇ ಆಗಿದ್ದಿದ್ದರೆ ಈ ಪದಗಳನ್ನು ಪ್ರಸ್ತಾಪಿಸುವುದರ ಮೂಲಕ ಈ ಲೇಖನವನ್ನು ಪ್ರಾರಂಭಿಸುವ ಪ್ರಮೇಯವೇ ಬರುತ್ತಿರಲಿಲ್ಲ.

ವರ್ತಮಾನದ ಸುದ್ದಿಯ ಟ್ರೆಂಡ್ ಮತ್ತು ಆ ಮೂಲಕ ವಿಜೃಂಭಿಸುತ್ತಿರುವ ವಿಕೃತಿಗಳ ಸ್ವರೂಪ ಅರಿತುಕೊಳ್ಳುವುದಕ್ಕೆ ಸಹಾಯಕ ಪದಗಳಾಗಿ ಇವು ನನಗೆ ಮುಖ್ಯವೆನ್ನಿಸುತ್ತಿವೆ. ಸುದ್ದಿ ಮಾಧ್ಯಮದವರು ತಾವು ಮಾಹಿತಿ, ಶಿಕ್ಷಣ ಮತ್ತು ಮನರಂಜನೆಯ ಕಟ್ಟಾ ವಾರಸುದಾರರು ಎಂದು ಬೀಗಿಕೊಂಡು ಅಹಂಕಾರದ ಬೃಹತ್ ರೂಪ ತಾಳಿರುವಾಗ ಈ ಮೂರೂ ಪದಗಳ ಒಳಗೇ ಅಣಕವಾಡುವ ಬಹುದೊಡ್ಡ ಅರ್ಥವಿನ್ಯಾಸ ಅಡಗಿದೆಯೇನೋ ಎಂದೆನ್ನಿಸುತ್ತದೆ.

ಈಗಾಗಲೇ ಅಗಿಹೋದ ದಶಕಗಳಲ್ಲಿನ ಜನಬದುಕಿನಲ್ಲಿ ಆದ್ಯತೆ ಪಡೆದುಕೊಂಡ ಉತ್ಪನ್ನವೊಂದು ಅನಿವಾರ್ಯ ಅವಿಭಾಜ್ಯ ಅಂಶವಾಗಿ ಮಾರ್ಪಟ್ಟಿದ್ದಷ್ಟೇ ಅಲ್ಲದೇ ಪ್ರತಿಷ್ಠೆಯ ಮಾಪಕವಾಗಿಯೂ ಬಳಕೆಯಾದ ಕ್ರಮಾನುಗತ ಇತಿಹಾಸದ ವಿವರಗಳನ್ನೂ ಈ ಮೂರೂ ಪದಗಳು ಅನಾವರಣಗೊಳಿಸುತ್ತವೆ. ಮನೆಗೆ ಬಂದವರಿಗೆ ನೀರು, ನಿಂಬೆಹಣ್ಣಿನ ಪಾನಕ ಅಥವಾ ಮಜ್ಜಿಗೆಯನ್ನು ನೀಡುತ್ತಿದ್ದ ಆತಿಥ್ಯದ ಪರಿಕಲ್ಪನೆಗೆ ಈ ಮೂರು ಪದಗಳೊಂದಿಗೆ ಬಿಂಬಿತವಾದ ಚಹಾಪುಡಿ ಉತ್ಪನ್ನದ ಜಾಹಿರಾತು ಸವಾಲೆಸೆದಿತ್ತು. ಇದರೊಂದಿಗೆ ಇದೇ ತೆರನಾದ ಪಾನೀಯ ಉತ್ಪನ್ನದ ಜಾಹಿರಾತುಗಳು ದೇಶೀ ಆತಿಥ್ಯದಲ್ಲಿ ಪ್ರಾಮುಖ್ಯತೆ ವಹಿಸಿದ್ದ ಪಾನೀಯಗಳನ್ನು ಹಿನ್ನೆಲೆಗೆ ಸರಿಸಿದ್ದವು.

ತದನಂತರದ ತರಹೇವಾರಿ ಜಾಹಿರಾತುಗಳು ನಮ್ಮದಲ್ಲದ ಜೀವನಶೈಲಿಯ ಉತ್ಪನ್ನಗಳ ಬಗೆಗಿನ ವ್ಯಾಮೋಹವನ್ನು ಹಂತಹಂತವಾಗಿ ಹೆಚ್ಚಿಸುತ್ತಲೇ ಬಂದವು. ದೇಶೀಯ ಪಾನೀಯಗಳಿಗೆ ಬಣ್ಣವೂ ಇತ್ತು. ರುಚಿಯೂ ಇತ್ತು. ಶಕ್ತಿಯೂ ಇತ್ತು. ಅವೆಲ್ಲವನ್ನೂ ಅಲ್ಲಗಳೆದು ಹೊಸ ಉತ್ಪನ್ನದ ಕಡೆಗೆ ಆಕರ್ಷಣೆಯಾದದ್ದಕ್ಕೆ ಟೆಲಿವಿಷನ್ ಮಾಧ್ಯಮದ ಪ್ರಭಾವ ಕಾರಣವಾಗಿತ್ತು.

ಇದೇ ಬಗೆಯ ಮಾಧ್ಯಮ ಪ್ರಭಾವವೇ ಈಗ ಜನಜೀವನದ ಕ್ರಮಗಳನ್ನು, ಆಲೋಚನೆಯ ಧಾಟಿಯನ್ನು ನಿಯಂತ್ರಿಸುವಷ್ಟರ ಮಟ್ಟಿಗೆ ಬೆಳೆದುನಿಂತಿದೆ. ಈಗಿನ ನವಮಾಧ್ಯಮಗಳ ಪ್ರಭಾವಳಿಯಂತೂ ಜನರಿಂದ ವಿವೇಚನೆಯನ್ನು ಕಸಿದುಕೊಂಡು ಬಣ್ಣ, ರುಚಿ ಮತ್ತು ಶಕ್ತಿಯ ಕುರಿತ ಅಪವ್ಯಾಖ್ಯಾನಗಳನ್ನು ಮುನ್ನೆಲೆಗೆ ತಂದಿದ್ದಲ್ಲದೇ ಅವೇ ಅಂತಿಮ ಎಂಬ ಭ್ರಮೆಯನ್ನೂ ಬಿತ್ತಿದೆ.

ಬಣ್ಣ, ರುಚಿ ಮತ್ತು ಶಕ್ತಿ ಎಂಬ ಪದಗಳು ಸ್ವತಃ ತಾವೇ ಮುಜುಗರಕ್ಕೊಳಗಾಗುವಂತೆ ಅವುಗಳನ್ನು ಸತ್ವಹೀನ ಸರಕುಗಳಿಗೆ ಅನ್ವಯಿಸುವ ಜಾಯಮಾನ ವ್ಯಾಪಕವಾಗಿದೆ. ಈ ವ್ಯಾಪ್ತಿಯಲ್ಲಿಯೇ ನಾವು ‘ಸುದ್ದಿ’ಯನ್ನಿಟ್ಟು ನೋಡಬೇಕು. ಸುದ್ದಿ ಮಾಧ್ಯಮಗಳನ್ನು ಗ್ರಹಿಸಬೇಕು.

ಈಗ ಸುದ್ದಿಯು ಬರೀ ಸುದ್ದಿಯಾಗಷ್ಟೇ ಉಳಿದಿಲ್ಲ. ಇದಕ್ಕೀಗ ಬಣ್ಣಗಳ ಹಂಗು ಹೆಚ್ಚಾಗಿದೆ. ಸದಭಿರುಚಿಯ ಮನಸ್ಥಿತಿಯನ್ನು ಹಿಂಸೆ, ಸಂಕುಚಿತತೆ ಮತ್ತು ದ್ವೇಷದ ವಿಕೃತಿಗಳ ಕಡೆಗೆ ತಿರುಗಿಸುವ ಅಪಾಯಕಾರಿ ರುಚಿಯ ವ್ಯಾಮೋಹವನ್ನು ಮೂಡಿಸುತ್ತಿದೆ. ಇವೆರಡರೊಂದಿಗೇ ಗುರುತಿಸಿಕೊಳ್ಳುವ ಹಾಗೆಯೇ ನೋಡಿಕೊಂಡು ಅದೇ ವ್ಯಕ್ತಿಯ ನಿಜವಾದ ಶಕ್ತಿ ಎಂಬುದನ್ನು ಭಾವುಕ ವಿಜೃಂಭಣೆಯಲ್ಲಿ ಮಿನುಗಿಸುತ್ತಿದೆ.

ಮಾಹಿತಿ ನೀಡುವ ಮೂಲಕ ಸುಶಿಕ್ಷಿತ ಪರಂಪರೆಗೆ ಕೊಡುಗೆ ನೀಡಿ ರಂಜನೆಗೆ ವಿವೇಚನಾತ್ಮಕ ಆಯಾಮ ನೀಡುತ್ತಿದ್ದ ಸುದ್ದಿಯ ಪಾತ್ರವು ಇದೀಗ ವಿಷದ ಸೋಂಕಿಗೀಡಾಗಿದೆ.‌ ಕೋವಿಡ್-19 ಸೃಷ್ಟಿಸಿದ ಬಿಕ್ಕಟ್ಟಿನ ಅವಧಿಯಲ್ಲಿ ಚರ್ಚಿತವಾದ ಅಮೆರಿಕ ಪೊಲೀಸರ ದ್ವೇಷಕ್ಕೆ ಬಲಿಯಾದ ಜಾರ್ಜ್ ಫ್ಲಾಯ್ಡ್‍ನ ಕುರಿತ ಸುದ್ದಿ ವ್ಯಕ್ತವಾದಾಗ ಖಂಡನೆಯ ಮಹಾಪೂರವೇ ಸೋಷಿಯಲ್ ಮೀಡಿಯಾದಲ್ಲಿ ಹರಡಿತ್ತು.

ಬಣ್ಣದ ಕಾರಣಕ್ಕಾಗಿಯೇ ನಿರ್ಲಕ್ಷಿತರಾಗುಳಿದು ಆಗಾಗ ಶೋಷಣೆಗೆ ಒಳಗಾಗುತ್ತಲೇ ದುಃಖದುಮ್ಮಾನಗಳನ್ನೆಲ್ಲಾ ಒಡಲೊಳಗಿರಿಸಿಕೊಂಡೇ ಬದುಕು ದೂಡುವ ಜನರ ನಿತ್ಯ ಯಾತನೆಯ ಸುದ್ದಿಬಿಂಬಗಳು ತಾರ್ಕಿಕ ಪರಿಹಾರದ ನಿರೀಕ್ಷೆಯ ಬದ್ಧತೆಯ ಬೆಂಬಲದ ಸ್ಪರ್ಶದೊಂದಿಗೆ ಕಾಣಿಸಿಕೊಳ್ಳುವುದೇ ಇಲ್ಲ. ಬಿಂಬಿತವಾದರೂ ಅನುಕಂಪ ಹುಟ್ಟಿಸುವ ಮತ್ತು ಬದಲಾವಣೆ ಆಗಬೇಕು ಎಂಬ ನಿಲುವುಗಳನ್ನು ಕೃತಕವಾಗಿ ದಾಖಲಿಸಿಬಿಡುವ ಭಾವಗಳನ್ನಷ್ಟೇ ಬಿತ್ತುವುದಕ್ಕಷ್ಟೇ ಸೀಮಿತವಾಗುತ್ತವೆ.

ನನ್ನದೇ ಮನೆಯ ಪಕ್ಕದ ಅಥವಾ ಸಮೀಪದ ಗುಡಿಸಿಲಿನವರನ್ನು ಇನ್ನುಮೇಲೆಯಾದರೂ ಮನುಷ್ಯರನ್ನಾಗಿ ನೋಡಬೇಕು ಎಂಬ ದೃಷ್ಟಿಕೋನವನ್ನು ಬಿತ್ತುವಲ್ಲಿ ಇವು ಸೋಲುತ್ತವೆ. ಅಲ್ಲಿಗೇ ಬಣ್ಣದ ನೆಲೆಯಲ್ಲಿಯೇ ರೂಪುಗೊಳ್ಳುವ ಅಸಮಾನತೆಯ ಜಗತ್ತಿನ ವಿಕೃತ ಸ್ವರೂಪದ ಬೇರು ಇನ್ನಷ್ಟು ಗಟ್ಟಿಯಾಗಿಯೇ ಉಳಿದುಕೊಂಡುಬಿಡುವ ಲಕ್ಷಣಗಳು ದಟ್ಟವಾಗಿಬಿಡುತ್ತವೆ.

ರೈತನ ಆತ್ಮಹತ್ಯೆಗೆ ಸುದ್ದಿ ಮಾಧ್ಯಮಗಳು ಬಳಿಯುವ ಬಣ್ಣ ಕೃತಕವಾದುದು. ಮುದ್ರಿತ ದಿನಪತ್ರಿಕೆಗಳ ಪುಟಗಳ ಬ್ಲಾಕ್ ಆ್ಯಂಡ್ ವೈಟ್ ಬಣ್ಣದಲ್ಲಿ ಕಾಣಿಸಿಕೊಳ್ಳುವ ಸುದ್ದಿ ಓದುಗನಲ್ಲಿ ಆ ಕ್ಷಣಕ್ಕೆ ಅಯ್ಯೋ ಎಂಬ ಭಾವವನ್ನು ಮೂಡಿಸುತ್ತದೆ. ಇತ್ತೀಚೆಗೆ ಕೆಲವು ಪತ್ರಿಕೆಗಳು ಇದೇ ತರಹದ ಸುದ್ದಿಯನ್ನು ವರ್ಣಮುದ್ರಣದೊಂದಿಗೆ ಕಟ್ಟಿಕೊಟ್ಟಾಗ ಅಯ್ಯೋ ಎನ್ನುವ ಆಂತರಿಕ ಭಾವ ಇನ್ನಷ್ಟು ತೀವ್ರಗೊಳಿಸಬಹುದು ಎಂಬ ನಿರೀಕ್ಷೆಯಿರಿಸಿಕೊಂಡಿರುತ್ತವೆ. ‘ದಿ ಹಿಂದೂ’ ಸೇರಿದಂತೆ ಕೆಲವೇ ಕೆಲವು ಪತ್ರಿಕೆಗಳು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ವಾಸ್ತವಿಕವಾದ ಯಥಾವತ್ ವಿವರಗಳನ್ನು ಯಾವುದೇ ಬಗೆಯ ವರ್ಣರಂಜಿತ ನಿರೂಪಣೆ ಇಲ್ಲದೇ ನಮ್ಮ ವಿವೇಚನೆಯ ಅಂತರಿಕ ಶಕ್ತಿಯನ್ನು ವಿಸ್ತರಿಸುವ ರೀತಿಯಲ್ಲಿ ಪ್ರಸ್ತಾಪಿಸುತ್ತವೆ. ಇದೇ ಸುದ್ದಿ ಟೆಲಿವಿಷನ್ ಮಾಧ್ಯಮದ ಮೂಲಕ ಬಂದರೆ ಮಣಭಾರದ ಮೇಕಪ್ ಹೊರೆ ಹೊತ್ತುಕೊಂಡ ಆ್ಯಂಕರ್‍ಗಳ ಧ್ವನಿಯಲ್ಲಿ ಕೃತಕತೆಯನ್ನು ಪಡೆದುಕೊಂಡುಬಿಡುತ್ತದೆ.

ಹಿಂಸೆ, ಸೆಕ್ಸ್, ರಾಜಕೀಯ ವೈಚಿತ್ರ್ಯಗಳನ್ನು ಬಿಂಬಿಸುವಾಗ ಬಳಸುವ ಧ್ವನಿಶೈಲಿಯನ್ನೇ ರೈತನ ಆತ್ಮಹತ್ಯೆ, ನೈಸರ್ಗಿಕ ವಿಕೋಪ ಸಂದರ್ಭದ ಸಾವು-ನೋವುಗಳನ್ನು ಬಿಂಬಿಸುವಾಗ ಬಳಸುತ್ತಾರೆ. ಅನೇಕ ಅತಿಥಿ ಉಪನ್ಯಾಸಕರು ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೊಂದರೆಗೀಡಾಗಿದ್ದಾರೆ. ಕೆಲವರು ಆತ್ಮಹತ್ಯೆಯನ್ನೇ ಪರಿಹಾರವಾಗಿಸಿಕೊಂಡರು.

ಈ ಬಿಂಬಗಳು ರೋಚಕ ರೀತಿಯಲ್ಲಿಯೇ ಇರುತ್ತವೆ. ಪತ್ರಿಕೆಗಳಲ್ಲಿ ಕಂಡುಬರುವ ವೈಚಾರಿಕ ನೋಟಗಳೊಂದಿಗಿನ ವಿಶ್ಲೇಷಣೆಯ ಮಾದರಿ ದೃಶ್ಯಮಾಧ್ಯಮದಲ್ಲಿ ಕಾಣಿಸಿಕೊಳ್ಳುವುದೇ ಇಲ್ಲ. ಕಾಣಿಸುವ ಇರಾದೆಯೂ ಸುದ್ದಿ ಚಾನಲ್‍ಗಳವರಿಗೆ ಇರುವುದಿಲ್ಲ. ಆತ್ಮಹತ್ಯೆ ಮತ್ತು ಸಾವು ಕೂಡಾ ಅವರಿಗೆ ಉತ್ಪನ್ನಗಳ ಹಾಗೆಯೇ ಮಾರಾಟ ಮಾಡಬಹುದಾದ ಅಂಶಗಳು. ಹಾಗಾಗಿಯೇ ಸುದ್ದಿಬಿಂಬಿಸುವಿಕೆಯ ವೇಳೆ ಕೃತಕತೆಯ ಬಣ್ಣ ಆವರಿಸಿಕೊಂಡುಬಿಡುತ್ತದೆ. ಈ ರೀತಿಯ ವರ್ಣರಂಜಿತ ಸುದ್ದಿಬಿಂಬಗಳು ಪ್ರಭುತ್ವವನ್ನು ಎಚ್ಚರಿಸುವುದು ಒತ್ತಟ್ಟಿಗಿರಲಿ, ಜನರೊಳಗೆ ಪ್ರತಿರೋಧದ ಯಾವ ಆಲೋಚನೆಯನ್ನೂ ನೆಲೆಗೊಳಿಸುವುದಿಲ್ಲ.

ಒಬ್ಬರು ಮತ್ತೊಬ್ಬರನ್ನು ಟೀಕಿಸುತ್ತಾರೆ, ಅಮಾಯಕರೊಬ್ಬರು ಅತ್ಯಾಚಾರಕ್ಕೀಡಾಗುತ್ತಾರೆ, ಯಾರದೋ ಮನೆಯ ಕೋಟಿಗಟ್ಟಲೆ ಹಣ ದೋಚಲ್ಪಡುತ್ತದೆ, ವಿಕೃತನೊಬ್ಬ ಹಲವರನ್ನು ಕೊಲೆಗೈದು ಅಟ್ಟಹಾಸಗೈಯ್ಯುತ್ತಾನೆ, ಯಾರೋ ಮತ್ತಿನ್ಯಾರಿಗೂ ಕಿರುಕುಳವನ್ನು ನೀಡುತ್ತಾರೆ, ಒಬ್ಬರು ಮತ್ತೊಬ್ಬರಿಗೆ ಕೊಲೆಗೈಯ್ಯುವ ಧಮ್ಕಿ ಹಾಕುತ್ತಾರೆ, ಇನ್ನೂ ಅದ್ಭುತ ಭವಿಷ್ಯವಿರುವ ಖ್ಯಾತ ನಟ ಅಕಾಲಿಕ ಮರಣಕ್ಕೀಡಾಗುತ್ತಾನೆ, ಕೊರೊನಾ ವೈರಸ್ ಜಗತ್ತನ್ನು ಸ್ತಬ್ದಗೊಳಿಸಿ ಜನಜೀವನದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತದೆ – ಇವೆಲ್ಲ ಸಂದರ್ಭಗಳಲ್ಲಿ ಅತ್ಯಂತ ಸಂಯಮದ ಧಾಟಿಯಲ್ಲಿ ಸುದ್ದಿ ನಿರೂಪಣೆ ಇರಬೇಕಾಗುತ್ತದೆ. ಆದರೆ, ಸುದ್ದಿ ಮಾಧ್ಯಮಗಳು ಅದರ ಬದಲು ಸುದ್ದಿಗಿರುವ ಸದಭಿರುಚಿಯ ಸ್ವರೂಪಕ್ಕೆ ಕೊಡಲಿಪೆಟ್ಟು ನೀಡುವ ಹಾಗೆ ನಡೆದುಕೊಳ್ಳುತ್ತವೆ.

ಇದನ್ನು ದೃಢಪಡಿಸುವಂತೆಯೇ ಸುದ್ದಿ ಚಾನಲ್‍ಗಳು ಕೋವಿಡ್-19 ಬಿಕ್ಕಟ್ಟು ತೀವ್ರವಾಗಿದ್ದ ದಿನಗಳಲ್ಲಿ ನಡೆದುಕೊಂಡಿವೆ. ಈಗಲೂ ಅವುಗಳದ್ದು ಅದೇ ಧಾಟಿ. ಹೀಗಾಗಿಯೇ ಸೋಷಿಯಲ್ ಮೀಡಿಯಾ ಮೂಲಕ ಸುದ್ದಿ ಚಾನಲ್‍ಗಳ ವಿಚಿತ್ರ ನಡಾವಳಿಗಳನ್ನು ವ್ಯಂಗ್ಯಕ್ಕೀಡು ಮಾಡುವ ಮಾತು, ಚರ್ಚೆಗಳು ವ್ಯಕ್ತವಾಗುತ್ತಲೇ ಇವೆ. ವೈರಸ್‍ವೊಂದು ಜಗತ್ತನ್ನೇ ತಲ್ಲಣಗೊಳಿಸಿದ ಸಂದರ್ಭದಲ್ಲಿ ಮನುಷ್ಯಸಹಜ ವಿಕೃತಿಗಳು ಬೇರೆ ಬೇರೆ ರೂಪದಲ್ಲಿ ಕಾಣಿಸಿಕೊಳ್ಳುತ್ತವೆ.

ನಾವಿರುವ ದೇಶ, ಇಲ್ಲಿಯ ಧರ್ಮ, ಧರ್ಮವನ್ನು ಅಪಭ್ರಂಶಗೊಳಿಸಿದ ಶಕ್ತಿಗಳು, ಅವುಗಳ ನೆರವಿನೊಂದಿಗೇ ಪ್ರಭುತ್ವವನ್ನು ಪ್ರತಿನಿಧಿಸುವ ವರ್ಗ, ಸಮಾನತೆಯ ಸದಾಶಯಗಳನ್ನೇ ನೆಚ್ಚಿಕೊಂಡು ಅಧಿಕಾರಕ್ಕೆ ಬಂದವರ ವಲಯ – ಎಲ್ಲರೂ ಅವರವರ ಮೂಗಿನ ನೇರಕ್ಕೆ ಯೋಚಿಸುತ್ತಾ ವಿತಂಡವಾದಗಳನ್ನು ಮಂಡಿಸುವ ಉತ್ಸಾಹ ವ್ಯಕ್ತಪಡಿಸುತ್ತಾರೆ.

ಅವರ ಈ ವಿಚಿತ್ರ ಉತ್ಸಾಹವನ್ನು ಹೆಚ್ಚಿಸುವ ಹಾಗೆ ಸುದ್ದಿಯ ಕಂಟೆಂಟ್ ಪ್ರಸ್ತುತಪಡಿಸಲ್ಪಟ್ಟರೆ ಪ್ರಯೋಜನವಿಲ್ಲ ಎಂದು ಸುದ್ದಿಮಾಧ್ಯಮಗಳು ಯೋಚಿಸುವ ಆಶಾದಾಯಕ ವಾತಾವರಣ ಈಗಿಲ್ಲ ಎಂಬುದೇ ಆತಂಕಕಾರಿ ಸಂಗತಿ. ಇದರ ಮಧ್ಯೆ ಕೆಲವರಾದರೂ ಅಗತ್ಯವಿದ್ದವರಿಗೆ ಚಾನಲ್‍ನ ವೇದಿಕೆಯ ಮೂಲಕ ನೆರವಾದರು ಎಂಬ ಸಮಾಧಾನವಿದ್ದರೂ ಅದೇ ತೆರನಾದ ಸಹಾಯಕ ಪಾತ್ರ ಬಹುಸಂಖ್ಯಾತ ಸುದ್ದಿಮಾಧ್ಯಮಗಳಿಂದ ಏಕೆ ಆಗಲಿಲ್ಲ ಎಂಬ ಪ್ರಶ್ನೆಗೆ ಮತ್ತದೇ ಬಣ್ಣ-ರುಚಿಯ ಕುರಿತದ ಅಪವ್ಯಾಖ್ಯಾನದ ವ್ಯಾಮೋಹದ ಕಾರಣವೇ ಉತ್ತರವಾಗುತ್ತದೆ.

ಮಾಹಿತಿ ಮತ್ತು ಶಿಕ್ಷಣ ಇವೆರಡೂ ಜನಬದುಕಿಗೆ ಹೊಸ ಹೊಳಪು ನೀಡುವ, ಹೊಸ ಬಗೆಯ ಅಭಿರುಚಿಯನ್ನು ನೆಲೆಗೊಳಿಸುವಂಥವು. ಬದಲಾವಣೆಗೆ ಕಾರಣವಾಗುವಂಥವು. ಹೀಗೆಯೇ ಅವುಗಳು ಸುದ್ದಿಯಲ್ಲಿ ಪ್ರತಿಫಲನಗೊಳ್ಳಬೇಕಿತ್ತು. ಅದೇ ಆಧಾರದಲ್ಲಿಯೇ ಸುದ್ದಿಯು ಜೀವಪರವಾಗಿ ಯೋಚಿಸುವ ಶಕ್ತಿಯಾಗಿ ಪರಿವರ್ತಿತವಾಗಬೇಕಿತ್ತು.

ಆದರೆ, ಭ್ರಮೆಗಳನ್ನು ಬಿತ್ತುವ ಕೃತಕತೆಯ ಬಣ್ಣ, ದೇಹ-ಮನಸ್ಸನ್ನು ಕಲುಷಿತಗೊಳಿಸಿ ಅಪಾಯಕಾರಿಯಾಗುವ ರುಚಿ ಮತ್ತು ಬಲವೇ ಇಲ್ಲದ ನಿಶ್ಯಕ್ತ ತಾತ್ಪೂರ್ತಿಕ ಶಕ್ತಿಯನ್ನೇ ಮುಖ್ಯ ಎಂದು ಬಿಂಬಿಸುವ ಸರಕು ವಿಕೃತಿಯ ಜಾಡ್ಯ ಸುದ್ದಿಗೂ ಅಂಟಿಕೊಂಡಿರುವುದು ಅಪಾಯಕಾರಿ ಎಂದೆನ್ನಿಸುತ್ತದೆ.

ಓದುಗ, ನೋಡುಗ ಮತ್ತು ಕೇಳುಗ ಸಮೂಹಕ್ಕೆ ಇರುವ ಒಂದೇ ಒಂದು ದಾರಿ ಎಂದರೆ ಬಣ್ಣ, ರುಚಿ ಮತ್ತು ಶಕ್ತಿಯಲ್ಲದ ಶಕ್ತಿಯ ಹುಸಿಬಿಂಬಗಳಿಗೆ ಮಾರುಹೋಗದೇ ಇರುವುದು. ಹಾಗೆ ಮಾರುಹೋಗದೇ ನಮ್ಮನ್ನು ದಾರಿತಪ್ಪಿಸುವ ಹುನ್ನಾರಗಳನ್ನು ಬಹುಬೇಗ ಅರ್ಥೈಸಿಕೊಳ್ಳುವುದು. ಸದ್ಯಕ್ಕೆ ಮತ್ತು ಭವಿಷ್ಯಕ್ಕೆ ಬೇಕಾಗುವ ಬದಲಾವಣೆಯನ್ನು ತಂದುಕೊಳ್ಳುವುದು ಹೇಗೆ ಎಂದು ರಚನಾತ್ಮಕವಾಗಿ ಯೋಚಿಸುವುದು.

ಈ ದಾರಿಯಲ್ಲಿ ಇಡೀ ಜನಸಮೂಹ ನಡೆದರೆ ಸುದ್ದಿ ಮಾಧ್ಯಮಗಳ ಮೇಲೆ ಸಕಾರಾತ್ಮಕ ಒತ್ತಡ ಬೀಳುತ್ತದೆ. ಅಂತರಂಗದ ವಿವೇಚನಾತ್ಮಕ ಹೊಂಬಣ್ಣವನ್ನು ಹೆಚ್ಚಿಸಿಕೊಳ್ಳುವ, ಬೌದ್ಧಿಕ ಸದಭಿರುಚಿಯನ್ನು ನೆಲೆಗೊಳಿಸಿಕೊಳ್ಳುವ ಮತ್ತು ಆ ಕಾರಣಕ್ಕಾಗಿಯೇ ನಮ್ಮ ಕಾಲವನ್ನು ಎಲ್ಲ ತಲ್ಲಣಗಳಿಂದ ವಿಮುಕ್ತಗೊಳಿಸುವ ಸ್ವಯಂಶಕ್ತಿಯನ್ನು ಜಾಗೃತಗೊಳಿಸಿಕೊಳ್ಳುವ ಮನೆಮದ್ದಾಗಿ ಸುದ್ದಿ ರೂಪುಗೊಳ್ಳುತ್ತದೆ ಎಂದು ನಿರೀಕ್ಷಿಸುವ ಆಶಾಭಾವ ಚಿಗುರೊಡೆಯುತ್ತದೆ. ಬಣ್ಣ, ರುಚಿ ಮತ್ತು ಶಕ್ತಿಯ ಅಪವ್ಯಾಖ್ಯಾನ ತಪ್ಪುತ್ತದೆ. ಪ್ರತಿವರ್ಷವೂ ಆಚರಿಸಲ್ಪಡುವ ‘ಪತ್ರಿಕಾ ದಿನಾಚರಣೆ’ಯು ಹಳೆಯದ್ದರ ಆರಾಧನಾ ಮಹೋತ್ಸವವಾಗದೇ ಅರ್ಥಪೂರ್ಣತೆ ದಕ್ಕಿಸಿಕೊಳ್ಳುತ್ತದೆ.

ತಂತ್ರಜ್ಞಾನವೊಂದು ಆವಿಷ್ಕøತವಾಗುತ್ತದೆ. ಆ ಕಾರಣಕ್ಕಾಗಿಯೇ ಪ್ರಯೋಗಶೀಲರೊಬ್ಬರು ಹೊಸದೊಂದನ್ನು ಪ್ರತಿಷ್ಠಾಪಿಸುತ್ತಾರೆ. ಆ ಪ್ರತಿಷ್ಠಾಪನೆಯ ಸುಸಂದರ್ಭವನ್ನು ಸ್ಮರಣೀಯವಾಗಿಸಿಕೊಳ್ಳುವ ಮತ್ತು ಆಯಾ ಕಾಲದಲ್ಲಿ ಹೊಸ ಆಯಾಮ ಪಡೆದುಕೊಳ್ಳುವ ಸಾಧ್ಯತೆಗಳು ವಿಸ್ತಾರವಾಗುತ್ತಾ ಹೋಗುತ್ತವೆ. ಮುದ್ರಣ ತಂತ್ರಜ್ಞಾನ ಭಾರತಕ್ಕೆ ಕಾಲಿಟ್ಟ ನಂತರ ಕನ್ನಡದ್ದೇ ಆದ ಸುದ್ದಿ ಪರಂಪರೆ ಶುರುವಾದ ಐತಿಹಾಸಿಕತೆಯ ಮೆಲುಕಿನ ಸಂದರ್ಭವಾಗಿ ಮಾತ್ರ ಪತ್ರಿಕಾ ದಿನಾಚರಣೆ ಗ್ರಹಿಸಲ್ಪಡಬಾರದು.

ಬದಲಾಗಿ ಸದ್ಯದ ಬಿಕ್ಕಟ್ಟು, ಭವಿಷ್ಯದ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯವನ್ನು ಕನ್ನಡದ ಸುದ್ದಿ ಮಾಧ್ಯಮಗಳು ರೂಢಿಸಿಕೊಳ್ಳಬಹುದಾದ ಸದಭಿರುಚಿಯ ಸಾಧ್ಯತೆಗಳ ಅನ್ವೇಷಣೆಯೊಂದಿಗೆ ಸ್ವಯಂಮೌಲ್ಯಮಾಪನದ ಮಹತ್ವದ ಅವಕಾಶವಾಗಿ ಪ್ರೇರಣೆಯಾಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending