Connect with us

ದಿನದ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಪಣತೊಟ್ಟ ಮಹಿಳಾ ಅಧಿಕಾರಿಗಳು

Published

on

ಸುದ್ದಿದಿನ,ಧಾರವಾಡ : ತೊಟ್ಟಿಲು ತೂಗುವ ಕೈ ಜಗತ್ತನ್ನೇ ತೂಗಬಲ್ಲದು. ಮಹಿಳೆ ಅಬಲೆಯಲ್ಲ, ಆಕೆ ಪುರುಷನಷ್ಟೇ ಸಬಲಳು ಎಂಬುದನ್ನು ಜಿಲ್ಲೆಯ ಐವರು ಮಹಿಳಾ ವೈದ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ ಕಳೆದ ಸುಮಾರು ಮೂರುವರೆ ತಿಂಗಳಿನಿಂದ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ.

ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಾಣು ಎಂತಹ ಜಗಜಟ್ಟಿಗಳನ್ನೂ ಕೂಡಾ ನಡುಗಿಸಿದೆ. ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಕೊಂಚವೂ ಹಿಂಜರಿಯದೇ ಮುನ್ನುಗ್ಗಿರುವ ಮಹಿಳಾ ಕೊರೊನಾ ಸೇನಾಪಡೆಯೊಂದು ಧಾರವಾಡ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ನಿಕಟಪೂರ್ವ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಸಮರ್ಥ ನಾಯಕತ್ವ ಹಾಗೂ ಪ್ರೋತ್ಸಾಹದೊಂದಿಗೆ ಈ ತಂಡವು ಕೋವಿಡ್ ಸೋಂಕಿತರ ಪತ್ತೆ, ಚಿಕಿತ್ಸೆ, ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ, ವೈರಾಲಜಿ ಪ್ರಯೋಗಾಲಯ, ಕೆಪಿಎಂಇ ನೋಂದಾಯಿತ ಆಸ್ಪತ್ರೆಗಳಲ್ಲಿ ವರದಿಯಾಗುವ ತೀವ್ರ ಉಸಿರಾಟದ ತೊಂದರೆ ಹಾಗೂ ನೆಗಡಿ, ಕೆಮ್ಮು ಮತ್ತು ಜ್ವರ ಲಕ್ಷಣಗಳಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ಹಾಗೂ ಕಂಟೈನ್‍ಮೆಂಟ್ ವಲಯಗಳ ಜನರ ಆರೋಗ್ಯ ಸಮೀಕ್ಷೆ ಕಾರ್ಯಗಳನ್ನು ಪ್ರತಿನಿತ್ಯ ಜಾಗರೂಕತೆಯಿಂದ ನಿರ್ವಹಿಸುತ್ತಿದೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿರುವ ಡಾ: ಸುಜಾತಾ ಹಸವೀಮಠ ಅವರು ಇಡೀ ಕೊರೊನಾ ನಿಯಂತ್ರಣದ ಹೋರಾಟದ ಪ್ರಮುಖ ಸೇನಾನಿಯಾಗಿದ್ದಾರೆ. ಕಳೆದ ಜನವರಿಯಿಂದಲೇ ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ (ಕೋವಿಡ್) ನಿಯಂತ್ರಣ ಕಾಯ್ದೆಯಡಿ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಎಲ್ಲ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಕೋವಿಡ್ ಸೋಂಕಿತರು, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಗುರುತಿಸಿ ತಪಾಸಣೆ ಮತ್ತು ಚಿಕಿತ್ಸೆಗೆ ಒಳಪಡಿಸುವ ಮಹತ್ವದ ಕಾರ್ಯವನ್ನು ಅವಿರತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಯಾಗಿರುವ ಡಾ: ಶಶಿ ಪಾಟೀಲ ಅವರು ಕೋವಿಡ್ ಸೋಂಕಿತರ ಸಂಪರ್ಕ ಹೊಂದಿದವರು, ಹೊರರಾಜ್ಯಗಳಿಂದ ಆಗಮಿಸಿದ ಜನರು ಸೇರಿದಂತೆ ಕ್ವಾರಂಟೈನ್ ಅಗತ್ಯವಿರುವ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ ಕೇಂದ್ರಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸುವ ಕಾರ್ಯ ಮಾಡುತ್ತಿದ್ದಾರೆ.

ಕ್ವಾರಂಟೈನ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೆ ತರಬೇತಿ ಕೂಡಾ ನೀಡುತ್ತಿದ್ದಾರೆ. ಇದೀಗ ಹೊಸ ಮಾರ್ಗಸೂಚಿಗಳಂತೆ ಗುರುತಿಸಲಾಗಿರುವ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಅಗತ್ಯ ಸೌಲಭ್ಯ ವೈದ್ಯಕೀಯ ಏರ್ಪಾಡುಗಳನ್ನು ನಿರ್ಮಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಿಮ್ಸ್‍ನ ಮೈಕ್ರೋಬಯೋಲಾಜಿ ವಿಭಾಗದ ಮುಖ್ಯಸ್ಥೆಯಾಗಿರುವ ಡಾ: ಆಶಾ ಪಾಟೀಲ ಅವರು ಈ ಭಾಗದಲ್ಲಿ ಮೊದಲ ಕೋವಿಡ್ ಪ್ರಯೋಗಾಲಯ ಸ್ಥಾಪಿಸಲು ವಿಶೇಷ ಮುತುವರ್ಜಿ ವಹಿಸಿ ಕಿಮ್ಸ್‍ನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಐಸಿಎಂಆರ್ ಅನುಮೋದನೆ ಪಡೆಯಲು ಶ್ರಮಿಸಿದ್ದಾರೆ. ವೈರಾಲಜಿ ಪ್ರಯೋಗಾಲಯದ ತಾಂತ್ರಿಕ ಸಿದ್ಧತೆ ಹಾಗೂ ಮಾನವ ಸಂಪನ್ಮೂಲ ನಿರ್ವಹಣೆಯಂತಹ ಸವಾಲಿನ ಕಾರ್ಯಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ: ಶಶಿಕಲಾ ನಿಂಬಣ್ಣವರ ಅವರು ಕೆಪಿಎಂಇ ಅಡಿ ನೋಂದಣಿಯಾಗಿರುವ ಆಸ್ಪತ್ರೆಗಳಲ್ಲಿ ಪ್ರತಿನಿತ್ಯ ವರದಿಯಾಗುವ ತೀವ್ರ ಉಸಿರಾಟದ ತೊಂದರೆ ಮತ್ತು ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವ ವ್ಯಕ್ತಿಗಳ ಪರಿಶೀಲನೆ ಮಾಡಿ ಕೋವಿಡ್ ತಪಾಸಣೆಗೆ ಒಳಪಡಿಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಯಾಗಿರುವ ಡಾ: ತನುಜಾ ಕೆ.ಎನ್. ಅವರು ಜಿಲ್ಲೆಯ ಕಂಟೈನ್‍ಮೆಂಟ್ ವಲಯಗಳಲ್ಲಿ ವಾಸಿಸುವ ವ್ಯಕ್ತಿಗಳ ಆರೋಗ್ಯ ಸಮೀಕ್ಷೆ ಹಾಗೂ ಜಿಲ್ಲೆಯಾದ್ಯಂತ ಇರುವ ಗರ್ಭಿಣಿಯರು, ಬಾಣಂತಿಯರ, ಮಕ್ಕಳು, ಮಧುಮೇಹ, ರಕ್ತದೊತ್ತಡ, ಕುಷ್ಠರೋಗ, ಕ್ಷಯರೋಗ, ಹೆಚ್‍ಐವಿ ಏಡ್ಸ್, ಕ್ಯಾನ್ಸರ್, ಪಾಶ್ರ್ವವಾಯು ಮತ್ತಿತರ ದುರ್ಬಲ ಆರೋಗ್ಯ ಹೊಂದಿರುವ ಜನರ ಆರೋಗ್ಯ ಸಮೀಕ್ಷೆ ನಡೆಸಿ ಅವರಿಗೆ ಅಗತ್ಯ ಚಿಕಿತ್ಸೆಗಳು ಲಭ್ಯವಾಗುವಂತೆ ಎಚ್ಚರ ವಹಿಸುತ್ತಿದ್ದಾರೆ.

ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ನಾಯಕತ್ವದಲ್ಲಿ ಇದುವರೆಗೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿರುವ ಈ ಮಹಿಳಾ ಕೊರೊನಾ ಸೇನಾನಿಗಳ ತಂಡ ಇದೀಗ ನೂತನ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರ ಮಾರ್ಗದರ್ಶನದಲ್ಲಿ ತಮ್ಮ ಕಾರ್ಯ ಮುಂದುವರೆಸಲು ಉತ್ಸುಕರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending