Connect with us

ದಿನದ ಸುದ್ದಿ

ಕೋವಿದ್ 19 | ಆಶಯ ಮತ್ತು ಪ್ರಾರ್ಥನೆಗಳ ನಡುವೆ

Published

on

  • ಮೂಲ : ಅನುರಾಧ ರಮಣ್, ಅನುವಾದ : ನಾ ದಿವಾಕರ

ಆಶಾ ಕಾರ್ಯಕರ್ತೆ ‘ಅನಿತಾ ಶರ್ಮ’ ತಮ್ಮ ಟ್ವಿಟರ್ ಖಾತೆಯನ್ನು ಹೊಂದಿದ್ದರು. ಆಕೆ ಮನಸ್ಸು ಮಾಡಿದ್ದಲ್ಲಿ ತಮ್ಮ ಟ್ವಿಟರ್ ಖಾತೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಟ್ಯಾಗ್ ಮಾಡಿ ತಮ್ಮನ್ನು ಹೀಗೆ ಪರಿಚಯಿಸಿಕೊಳ್ಳಬಹುದಿತ್ತು : “ನನ್ನ ಹೆಸರು ಅನಿತಾ, ಕೊರೋನಾ ವೈರಾಣು ವ್ಯಾಪಿಸಿದ ದಿನದಿಂದ ನನ್ನ ನೌಕರಿಯ ಚಿತ್ರಣವೇ ಬದಲಾಗಿಹೋಗಿದೆ. ಇತ್ತೀಚೆಗೆ ನಾನು ದಿನಕ್ಕೆ 12 ಗಂಟೆಗಳ ಕಾಲ ದುಡಿಯುತ್ತೇನೆ. ನನ್ನ ಅಲ್ಪ ವೇತನ ಮಾಸಿಕ 2000 ರೂಗಳು ಮಾತ್ರ. ಕಳೆದ ವರ್ಷ ಇದನ್ನು 4000 ರೂಗಳಿಗೆ ಹೆಚ್ಚಿಸಲಾದರೂ ಇದುವರೆಗೂ ಹೆಚ್ಚುವರಿ ವೇತನ ನೀಡಿಲ್ಲ. ನಿಜ ಹೇಳಬೇಕೆಂದರೆ ಈ ವರ್ಷದ ಫೆಬ್ರವರಿಯಿಂದ ನನಗೆ ವೇತನವನ್ನೇ ನೀಡಲಾಗಿಲ್ಲ .”

ಈ ಟ್ವಿಟರ್ ಸಂದೇಶವೇನಾದರೂ ಕಂಡಿದ್ದಲ್ಲಿ ಸಾಮಾಜಿಕ ಮಾಧ್ಯಮಗಳು ಆಕೆಯ ದನಿಗೆ ಮತ್ತಷ್ಟು ದನಿ ಸೇರಿಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುತ್ತಿದ್ದವು. ಹಾಗಾಗಿದ್ದಲ್ಲಿ ಕೂಡಲೇ ಅನುಕಂಪ, ಕರುಣೆ, ಮರುಕದ ಸಂದೇಶಗಳ ಮಹಾಪೂರವೇ ಹರಿದುಬರುತ್ತಿತ್ತು. ಈ ಸಂದೇಶದಿಂದ ನಾಗರಿಕ ಸಮಾಜದಲ್ಲಿ ಸೃಷ್ಟಿಯಾಗುತ್ತಿದ್ದ ಆಕ್ರೋಶ ಮತ್ತು ಸಿಗುತ್ತಿದ್ದ ಪ್ರಚಾರದಿಂದ ಆಕೆಯ ವೇತನ ಬಾಕಿಯನ್ನು ಒಂದೇ ಕಂತಿನಲ್ಲಿ ಪಾವತಿ ಮಾಡುವ ಪ್ರಕ್ರಿಯೆಯನ್ನೂ ನಿರೀಕ್ಷಿಸಬಹುದಿತ್ತು.

ಆದರೆ ಹಾಗಾಗಲಿಲ್ಲ. ಅನಿತಾ ಈಗಲೂ ತಲೆ ತಗ್ಗಿಸಿ ಕೆಲಸ ಮಾಡುತ್ತಲೇ ಇದ್ದಾರೆ. ತಮ್ಮದೇ ಹಳೆಯ ಬಟ್ಟೆಯಿಂದ ಹೊಲಿದ ಮುಖಗವುಸನ್ನು ಧರಿಸಿ ದುಡಿಯುತ್ತಿದ್ದಾರೆ. ಸಾಧ್ಯವಾದಷ್ಟು ಬಾರಿ ತಮ್ಮ ಕೈ ತೊಳೆಯುತ್ತಲೇ ಇರುತ್ತಾರೆ. (ಆಕೆಗೆ ಸರ್ಕಾರ ನೀಡಿರುವ 500 ಮಿಲಿ ಲೀಟರಿನ ಸ್ಯಾನಿಟೈಸರ್ ಖಾಲಿಯಾಗದಂತೆ ಎಚ್ಚರ ವಹಿಸುತ್ತಾರೆ). ಹೀಗೆಯೇ ಹರಿಯಾಣದಲ್ಲಿ ತಮ್ಮ ನಿತ್ಯ ಕಾಯಕದಲ್ಲಿ ತೊಡಗುತ್ತಾರೆ. ಸದಾ ಪ್ರಾರ್ಥನೆ ಮಾಡುತ್ತಲೇ ದುಡಿಮೆಯಲ್ಲಿ ನಿರತರಾಗುತ್ತಾರೆ. “ ನಾವು ಎಲ್ಲ ರೀತಿಯ ಕೆಲಸಗಳನ್ನೂ ನಿರ್ವಹಿಸಬೇಕು ಎಂದು ಅವರು ಅಪೇಕ್ಷಿಸುತ್ತಾರೆ ಆದರೆ ಆದರೆ ನಮಗೆ ಕನಿಷ್ಟ ರಕ್ಷಣೆಯನ್ನೂ ನೀಡುವುದಿಲ್ಲ ” ಎಂದು ಬೇಸರದಿಂದ ಹೇಳುತ್ತಲೇ ತಮ್ಮ ಕೆಲಸದಲ್ಲಿ ನಿರತರಾಗುತ್ತಾರೆ.

ಅನಿತ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಹೊರಡುತ್ತಾರೆ. ಪ್ರತಿನಿತ್ಯ ಮಕ್ಕಳು, ವೃದ್ಧರು, ಮಹಿಳೆಯರು, ವಿಶೇಷವಾಗಿ ಗರ್ಭಿಣಿಯರನ್ನು ತಪಾಸಣೆಗೊಳಪಡಿಸುವುದು ಅವರ ಕಾಯಕ. ಪ್ರತಿನಿತ್ಯ ಸರಾಸರಿ 25 ಮನೆಗಳಿಗೆ ಭೇಟಿ ನೀಡುವ ಅನಿತ ಪ್ರತಿನಿತ್ಯ ಭೇಟಿ ಮಾಡುವವರ ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಸುತ್ತಾರೆ. ಅನೇಕರಿಗೆ ಸಾವು ಬದುಕಿನ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಸುವಲ್ಲಿ ಅನಿತ ಯಶಸ್ವಿಯಾಗುತ್ತಾರೆ.

ತಳಮಟ್ಟದ ಕಾಯಕ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರೂಪಿಸುವ ಪ್ರತಿಯೊಂದು ಆರೋಗ್ಯ ಯೋಜನೆಯ ಯಶಸ್ಸಿನ ಹಿಂದೆ ಅನಿತ ಅವರಂತಹ ತಳಮಟ್ಟದ ಕಾರ್ಯಕರ್ತೆಯರ ಪರಿಶ್ರಮ ಮತ್ತು ದುಡಿಮೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಕಬ್ಬಿಣಾಂಶ ಇರುವ ಮಾತ್ರೆ ಕೊಡುವುದರಿಂದ, ಎಳೆ ಮಕ್ಕಳಿಗೆ ಲಸಿಕೆ ಹಾಕುವ ವೇಳಾಪಟ್ಟಿಯನ್ನು ಗಮನಿಸುವುದು, ಗರ್ಭಿಣಿಯರಿಗೆ ಲಸಿಕೆ ನೀಡುವುದು, ಕ್ಷಯರೋಗಿಗಳಿಗೆ ತಪಾಸಣೆ ನಡೆಸುವುದು ಈ ಕೆಲಸಗಳ ಜೊತೆಗೇ ಈಗ ಅನಿತ ಕೋವಿದ್ 19 ಸೋಂಕಿನ ಲಕ್ಷಣಗಳನ್ನು ಗುರುತಿಸಿ ಜನರಿಗೆ ಸಲಹೆ ನೀಡುವ ಕೆಲಸವನ್ನೂ ನಿರ್ವಹಿಸಬೇಕಿದೆ.

ತಮ್ಮ ಬದುಕಿನ ನೆಲೆಯನ್ನೇ ಕಳೆದುಕೊಂಡು ಸ್ವಗ್ರಾಮಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರ ಬಗ್ಗೆಯೂ ಅನಿತ ಕಾಳಜಿ ವಹಿಸಬೇಕಾಗುತ್ತದೆ. ಈ ವಲಸೆ ಕಾರ್ಮಿಕರು ತಮಗೆ ನಿಗದಿಪಡಿಸಲಾದ ಕೇಂದ್ರಗಳಲ್ಲಿ ಕ್ವಾರಂಟೈನ್ ಅವಧಿಯನ್ನು ಸರಿಯಾಗಿ ಪೂರೈಸುವರೋ ಇಲ್ಲವೋ ಎನ್ನುವುದನ್ನೂ ಗಮನಿಸಬೇಕಾಗುತ್ತದೆ. ಇವೆಲ್ಲ ಕೆಲಸಗಳೊಟ್ಟಿಗೆ ಅನಿತ ತಮ್ಮ ಕುಟುಂಬ ಮತ್ತು ನೆರೆಹೊರೆಯವರಿಗೆ ಕೊರೋನಾ ಸೋಂಕಿನ ಕುರಿತು ಮಾಹಿತಿಯನ್ನು ನೀಡುತ್ತಿರಬೇಕು.

ಕೊರೋನಾ ನಂತರದಲ್ಲಿ ಹೆಚ್ಚಿನ ಒತ್ತಡ ಮತ್ತು ಜವಾಬ್ದಾರಿಯನ್ನು ಎದುರಿಸುತ್ತಿರುವ ಭಾರತದ ಆರೋಗ್ಯ ಸೇವೆಯ ಕ್ಷೇತ್ರದ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ 9 ಲಕ್ಷದಷ್ಟಿದೆ. ಅನಿತಾ ಅವರಂತಹ ಸೇನಾನಿಗಳು, ಯಾವುದೇ ರಕ್ಷಣಾ ಕವಚ ಇಲ್ಲದೆ, ಸಮರ್ಪಕ ವೇತನ ಇಲ್ಲದೆ, ಯಾವುದೇ ಸಂರಕ್ಷಕ ಅಸ್ತ್ರಗಳಿಲ್ಲದೆ, ಸೂಕ್ತ ಮಾನ್ಯತೆಯೂ ಇಲ್ಲದೆ ದುಡಿಯುತ್ತಿದ್ದಾರೆ.

ಅನೇಕ ಆಶಾ ಕಾರ್ಯಕರ್ತೆಯರು ಜನರ ಆಕ್ರೋಶವನ್ನೂ ಎದುರಿಸಬೇಕಾಗಿದೆ. “ಕಲ್ಲಿಕೋಟೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರಸ್ತೆಯಲ್ಲಿ ನೆರೆದಿದ್ದ ಜನರ ಗುಂಪನ್ನು ಚದುರಿಸಲು ಮುಂದಾದಾಗ ಓರ್ವ ಕಾರ್ಯಕರ್ತೆಯ ದ್ವಿಚಕ್ರ ವಾಹನವನ್ನು ಜಖಂಗೊಳಿಸಲಾಗಿದೆ. ಕೆಲವರು, ನಾವೇಕೆ ಒಬ್ಬ ಮಹಿಳೆ ಹೇಳಿದಂತೆ ಕೇಳಬೇಕು ಎನ್ನುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ಕೇರಳದ ಆಶಾ ಕಾರ್ಯಕರ್ತೆ ಪಿ ಪಿ ಪ್ರೇಮ.

ಇನ್ನೂ ಅಘಾತಕಾರಿ ವಿಚಾರ ಎಂದರೆ ಈವರೆಗೂ ದೇಶಾದ್ಯಂತ 20ಕ್ಕೂ ಹೆಚ್ಚು ಆಶಾಕಾರ್ಯಕರ್ತೆಯರು ಕೊರೋನಾಗೆ ಬಲಿಯಾಗಿದ್ದಾರೆ. ಮೇ 13ರಂದು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬದನಕಟ್ಟೆ ಗ್ರಾಮದಲ್ಲಿ 51 ವರ್ಷದ ಆಶಾ ಕಾರ್ಯಕರ್ತೆ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಮೃತಪಟ್ಟಿದ್ದರು. ಇಡೀ ದಿನ ಆಕೆಯ ಶವವನ್ನು , ಅವರ ಸಂಬಂಧಿಕರು ಆಸ್ಪತ್ರೆಯಲ್ಲೇ ಇಟ್ಟಿದ್ದರು. ಈ ಕೊರೋನಾ ಸೇನಾನಿಗೆ ವಿಮೆ ಸೌಲಭ್ಯ ಒದಗಿಸಬೇಕು ಎನ್ನುವುದು ಅವರ ಆಗ್ರಹವಾಗಿತ್ತು.

ಆದರೆ ವೈದ್ಯರು, ಆಕೆಗೆ ಕೊರೋನಾ ನೆಗಟೀವ್ ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ಸತ್ತಿರುವುದರಿಂದ ವಿಮೆ ನೀಡಲಾಗುವುದಿಲ್ಲ ಎಂದು ವಾದಿಸಿದ್ದರು. ಸ್ಥಳೀಯ ಶಾಸಕರು ಮತ್ತು ಇತರ ನಾಯಕರು ಆಕೆಯ ವಿಚಾರವನ್ನು ಮುಖ್ಯಮಂತ್ರಿಯೊಡನೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಆಶ್ವಾಸನೆ ನೀಡಿದ್ದರೂ, ಈವರೆಗೂ ಈಡೇರಿಸಿಲ್ಲ. ಈ ಲೇಖನ ಬರೆಯುವ ವೇಳೆಗೆ ಇಬ್ಬರು ಆಶಾ ಕಾರ್ಯಕರ್ತೆಯರು, ಓರ್ವ ಅಂಗನವಾಡಿ ಕಾರ್ಯಕರ್ತೆ, ಓರ್ವ ಆರೋಗ್ಯ ಸಹಾಯಕಿ ಕೊರೋನಾ ಸೋಂಕಿತರಾಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯ ನಂತರ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.

ಕರ್ನಾಟಕದ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ ಅಂಗನವಾಡಿ ಕಾರ್ಯಕರ್ತೆ ರೇಣುಕಾ ರೇಣುಕೇಗೌಡರ್ ಇತ್ತೀಚೆಗೆ ತಾನೇ ಕೋವಿದ್ 19 ನಿಂದ ಚೇತರಿಸಿಕೊಂಡಿದ್ದಾರೆ. ಕಂಟೈನ್‍ಮೆಂಟ್ ವಲಯಗಳಲ್ಲಿ ಸಂಬಂಧಪಟ್ಟ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯೂ ಸಹ ಪ್ರತಿನಿತ್ಯ ಸೋಂಕಿತರ ಮತ್ತಿತರರ ಮನೆಗಳಿಗೆ ಭೇಟಿ ನೀಡಬೇಕು ಎಂಬ ನಿಯಮ ಇದ್ದರೂ ಸಹ ಯಾರೊಬ್ಬರೂ ತಿರುಗಿ ನೋಡುವುದಿಲ್ಲ.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಪ್ರತಿನಿತ್ಯ ಮನೆ ಮನೆ ಸಮೀಕ್ಷೆ ನಡೆಸುವುದು, ಪಾಸಿಟಿವ್ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವುದು, ಪ್ರಾಥಮಿಕ ಮತ್ತು ತರುವಾಯದ ಸೋಂಕು ತಗುಲಿದವರನ್ನು ಪತ್ತೆ ಹಚ್ಚುವುದು, ಕಂಟೈನ್‍ಮೆಂಟ್ ವಲಯಗಳಲ್ಲಿ ಗಸ್ತು ತಿರುಗುವುದು, ಆಹಾರ ಮತ್ತು ಔಷಧ ಪದಾರ್ಥಗಳನ್ನು ವಿತರಿಸುವುದು ಈ ಎಲ್ಲ ಕೆಲಸಗಳನ್ನೂ ನಿರ್ವಹಿಸಬೇಕಾಗುತ್ತದೆ. ಕೆಲವು ಗ್ರಾಮಗಳಲ್ಲಿ ನೆರೆಹೊರೆಯವರು, ಗುಣಮುಖರಾದ ಕೊರೋನಾ ಸೋಂಕಿತರಿಗೆ ಹಾಲು ಮತ್ತಿತರ ಪದಾರ್ಥಗಳನ್ನು ಒದಗಿಸಲು ನಿರಾಕರಿಸಿದಾಗ ಪಕ್ಕದ ಹಳ್ಳಿಯಿಂದ ತಂದು ನೀಡಬೇಕಾಗುತ್ತದೆ ” ಎನ್ನುತ್ತಾರೆ ರೇಣುಕಾ ರೇಣುಕೇಗೌಡರ್.

ಬಹಿಷ್ಕೃತರಾದಾಗ

ರೇಣುಕಾ ಅವರಿಗೆ ಕೊರೋನಾ ಸೋಂಕು ತಗುಲಿದ ಸಂದರ್ಭದಲ್ಲಿ ಆಕೆ 20 ಪಾಸಿಟೀವ್ ಪ್ರಕರಣಗಳಿದ್ದ, ಹೆಚ್ಚಿನ ಅಪಾಯ ಇದ್ದ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗುಣಮುಖರಾದ ನಂತರ ಮನೆಗೆ ಹಿಂದಿರುಗಿದಾಗ ಗ್ರಾಮಸ್ಥರು ಆಕೆಯನ್ನು ಬಹಿಷ್ಕರಿಸಿದ್ದರು. “ ನನ್ನ ನೆರೆಹೊರೆಯವರು ನನ್ನಿಂದ ಮತ್ತು ನನ್ನ ಮಗಳಿಂದ ದೂರ ಉಳಿದರು, ನಾನು ಕೆಲಸ ಮಾಡುವಲ್ಲಿಯೂ ಸಹ ಕಳಂಕ ಹೊತ್ತುಕೊಂಡೇ ಇರಬೇಕಾಯಿತು, ಈ ರೋಗದ ಬಗ್ಗೆ ಬಹಳಷ್ಟು ಜನರಿಗೆ ಅನಗತ್ಯವಾದ ಭೀತಿ ಆವರಿಸಿದೆ ಹಾಗಾಗಿ ನೀವು ಗುಣಮುಖರಾಗಿದ್ದರೂ ಬಹಳಷ್ಟು ಜನರು ನಿಮ್ಮಿಂದ ದೂರವೇ ಇರುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ರೇಣುಕ.

ರೇಣುಕಾ ಅಂಗನವಾಡಿ ಕಾರ್ಯಕರ್ತೆಯಾಗಿ 19 ವರ್ಷ ಸೇವೆ ಸಲ್ಲಿಸಿದ್ದಾರೆ. ತಿಂಗಳಿಗೆ 500 ರೂ ಸಂಬಳದಿಂದ ಆರಂಭವಾದ ಅವರ ನೌಕರಿಯಲ್ಲಿ ಈಗ ತಿಂಗಳಿಗೆ 10 ಸಾವಿರ ರೂ ವೇತನ ಪಡೆಯುತ್ತಿದ್ದಾರೆ. ಮುಂಚೂಣಿಯಲ್ಲಿ ನಿಂತು ಆರೋಗ್ಯ ಸೇವೆ ಸಲ್ಲಿಸುವ ಸೇನಾನಿಗಳನ್ನು ರಾಜ್ಯ ಸರ್ಕಾರ ಸಂವೇದನೆಯೇ ಇಲ್ಲದೆ ನಿರ್ವಹಿಸುತ್ತಿರುವ ರೀತಿಗೆ ರಾಜ್ಯದ ಕಾರ್ಮಿಕ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿವೆ.

ಈ ಕುರಿತು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಹೀಗೆ ಹೇಳುತ್ತಾರೆ ; “ ಭೀಮಕ್ಕ ತಮ್ಮ ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಸಾಯಲಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ ಆಕೆ ಕುಸಿದು ಬಿದ್ದ ಸಂದರ್ಭದಲ್ಲಿ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದರು. ಇದನ್ನು ಕರ್ತವ್ಯದ ವೇಳೆಯ ಸಾವು ಅಲ್ಲ ಎಂದು ಹೇಗೆ ನಿರ್ಧರಿಸಲು ಸಾಧ್ಯ ? ಎಲ್ಲ ಆಶಾ ಕಾರ್ಯಕರ್ತೆಯರನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಆರೋಗ್ಯ ಸಹಾಯಕರನ್ನು ಕೂಡಲೇ ಖಾಯಂ ನೌಕರರು ಎಂದು ಘೋಷಿಸಿ ಇತರ ಸರ್ಕಾರಿ ನೌಕರರಿಗೆ ಒದಗಿಸುವ ವೇತನ ಮತ್ತು ವಿಮೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ನಾವು ಆಗ್ರಹಿಸುತ್ತೇವೆ. ”

ಆಶಾ ಕಾರ್ಯಕರ್ತೆಯರನ್ನು ಪ್ರತಿನಿಧಿಸುವ ಪ್ರಬಲ ಕಾರ್ಮಿಕ ಸಂಘಟನೆಗಳು ಇರುವೆಡೆಯೆಲ್ಲಾ ಅವರ ಆಗ್ರಹಗಳಿಗೆ ಕಿವಿಗೊಡಲಾಗುತ್ತದೆ. ಮಹಾರಾಷ್ಟ್ರದಲ್ಲಿ ಕಳೆದ ಸೆಪ್ಟಂಬರ್ ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನ ಪಾವತಿ ಮಾಡಿರಲಿಲ್ಲ. ಆಶಾ ಕಾರ್ಯಕರ್ತೆಯರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿತ್ತು. ಕೂಡಲೇ ಸ್ಪಂದಿಸಿದ ಸರ್ಕಾರ ವೇತನ ಪಾವತಿಸಲು ಒಪ್ಪಿಕೊಂಡಿತ್ತು. ಆದರೆ ತೆಲಂಗಾಣ ಮತ್ತು ಕೇರಳ ಸರ್ಕಾರದಂತೆ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವುದು ಇನ್ನೂ ಸ್ಪಷ್ಟವಾಗಿಲ್ಲ.

ಕೊರೋನಾ ವ್ಯಾಪಿಸುತ್ತಿರುವುದರಿಂದ ಕಾರ್ಯಕರ್ತೆಯರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿರುವುದನ್ನು ಕಂಡು ಕೇರಳ ಮತ್ತು ತೆಲಂಗಾಣ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಮಾಸಿಕ ವೇತನವನ್ನು 7000 ರೂಗಳಿಗೆ ಹೆಚ್ಚಿಸಿವೆ. ಕರ್ನಾಟಕದಲ್ಲಿ 10 ಸಾವಿರ ವೇತನ ನೀಡಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಲ್ಲೂ ವೇತನ ಪಾವತಿಯಲ್ಲಿ ವಿಳಂಬ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 2000 ರೂ ಮತ್ತು ರಾಜ್ಯ ಸರ್ಕಾರಗಳು 2000 ರೂ ವೇತನ ನಿಗದಿಪಡಿಸಿವೆ.

ಘನತೆಯ ಹಕ್ಕು

ಅಮ್ನೆಸ್ಟಿ ಇಂಟರ್‍ನ್ಯಾಷನಲ್ ಸಂಸ್ಥೆಯ ವರದಿಯೊಂದರ ಪ್ರಕಾರ ಏಪ್ರಿಲ್ 28ರ ವೇಳೆಗೇ ವಿಶ್ವ ಆರೋಗ್ಯ ಸಂಸ್ಥೆಯು ಎಲ್ಲ ದೇಶಗಳಿಗೂ ಸಂದೇಶವನ್ನು ರವಾನಿಸಿದ್ದು, ಎಲ್ಲ ಸರ್ಕಾರಗಳು, ಉದ್ಯೋಗದಾತರು, ಕಾರ್ಮಿಕ ಸಂಘಟನೆಗಳು ಮತ್ತು ಜಾಗತಿಕ ಸಮುದಾಯದ ಸಂಘ ಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರ ವೃತ್ತಿಪರ ಆರೋಗ್ಯ ರಕ್ಷಣೆ ಮತ್ತು ಸುಭದ್ರತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ, ಅವರಿಗೆ ಗೌರವಯುತವಾದ ಕಾರ್ಯಕ್ಷೇತ್ರದ ಪರಿಸರವನ್ನು ಒದಗಿಸುವಂತೆಯೂ, ಅವರ ರಕ್ಷಣೆಗಾಗಿ ರಾಷ್ಟ್ರೀಯ ಯೋಜನೆಗಳನ್ನು ರೂಪಿಸುವಂತೆಯೂ ಆಗ್ರಹಿಸಿತ್ತು.

ಈಗ ಕೋವಿದ್ 19 ನಿಯಂತ್ರಣ ತಪ್ಪಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ನಿರೀಕ್ಷೆಯನ್ನೂ ಮೀರಿ ಹೆಚ್ಚಾಗಿದೆ. ಕೋವಿದ್ 19 ಸ್ಥಳೀಯ ಮಟ್ಟದಲ್ಲಿ ಪ್ರಸರಣವಾಗದಂತೆ ತಡೆಗಟ್ಟಲು ರೂಪಿಸಲಾದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾದರಿ ಯೋಜನೆಯ ಅನುಸಾರ, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುವುದೇ ಅಲ್ಲದೆ ದಿನನಿತ್ಯ ಸೊಂಕು ಲಕ್ಷಣಗಳಿರುವ ಮತ್ತು ಲಕ್ಷಣಗಳಿಲ್ಲದಿರುವವರ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ.

ಜನವರಿಯಲ್ಲಿ ದೇಶದ ಪ್ರಪ್ರಥಮ ಕೋವಿದ್ ಪ್ರಕರಣ ದಾಖಲಾದ ಕೇರಳದ ತ್ರಿಸೂರ್ ಜಿಲ್ಲೆಯಲ್ಲಿ ಫೆಬ್ರವರಿಯಿಂದಲೇ ಹೊರ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಎಚ್ಚರವಹಿಸಲು ಅಜಿತಾ ರಾಜನ್ ಅವರಂತಹ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.

ಕಲ್ಲಿಕೋಟೆಯಲ್ಲಿ ಸಿಐಟಿಯು ಸಂಯೋಜಿತ ಆಶಾ ಕಾರ್ಯಕರ್ತೆಯರ ಸಂಘದ ಕೇರಳ ರಾಜ್ಯಾಧ್ಯಕ್ಷೆಯಾದ ಪ್ರೇಮ “ ನಾವು ದಿನವಿಡೀ ಕೆಲಸ ಹೊಂದಿರುತ್ತೇವೆ, ಹೊರ ರಾಜ್ಯಗಳಿಂದ ಬರುವವರು ಮಧ್ಯರಾತ್ರಿ ಬಂದರೂ,, ನೆರೆಹೊರೆಯವರು ನಮಗೆ ದೂರವಾಣಿ ಮೂಲಕ ರಾತ್ರಿ ವೇಳೆಯೇ ಮಾಹಿತಿ ನೀಡುತ್ತಾರೆ, ಇದರೊಂದಿಗೆ ಕ್ವಾರಂಟೈನ್‍ನಲ್ಲಿರುವವರಿಗೆ ನಾವು ಸಾಂತ್ವನ ನೀಡುವುದೂ ಅಷ್ಟೇ ಮುಖ್ಯವಾಗಿರುತ್ತದೆ ” ಎಂದು ಹೇಳುತ್ತಾರೆ.

ಕೊಚಿ ನಗರದಲ್ಲಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆ ಲತಾ ರಾಜು ಮನೆಯಲ್ಲೇ ಕ್ವಾರಂಟೈನ್ ಆಗಿರುವ ಸೋಂಕಿತರ ಎಲ್ಲ ವಿವರಗಳನ್ನೂ ನೋಟ್ ಪುಸ್ತಕಗಳಲ್ಲಿ ದಾಖಲಿಸಿದ್ದಾರೆ. ಇವರು ಎಲ್ಲಿ ನೆಲೆಸಿದ್ದಾರೆ, ಎಲ್ಲಿಗೆ ಅಥವಾ ಎಲ್ಲಿಂದ ಪ್ರಯಾಣ ಮಾಡಿದ್ದಾರೆ, ಅವರ ಸಂಪರ್ಕ ಸಂಖ್ಯೆ ಹೀಗೆ ಎಲ್ಲವನ್ನೂ ದಾಖಲಿಸಿ ಹಲವು ಪುಸ್ತಕಗಳನ್ನು ತುಂಬಿಸಿದ್ದಾರೆ.

ಇದರೊಟ್ಟಿಗೆ ಒಂಟಿಯಾಗಿ ಜೀವನ ನಡೆಸುತ್ತಿರುವ ವೃದ್ಧರು, ಈಗಾಗಲೇ ಇತರ ಅನಾರೋಗ್ಯ ಸಮಸ್ಯೆ ಹೊಂದಿರುವವರು, ಗರ್ಭಿಣಿ ಮಹಿಳೆಯರು ಎಲ್ಲರ ಮಾಹಿತಿಯನ್ನು ಸಂಗ್ರಹಿಸಿ ದಾಖಲಿಸಿದ್ದಾರೆ. ಸಂಜೆ ವೇಳೆ ಈ ಅಂಕಿಅಂಶಗಳನ್ನು ಸಾರ್ವಜನಿಕ ಆರೋಗ್ಯ ಶುಶ್ರೂಷಕಿಯರಿಗೆ ಮತ್ತು ಆರೋಗ್ಯ ಪರೀಕ್ಷಕರಿಗೆ ಕಳುಹಿಸುವ ಮೂಲಕ ರಾಜ್ಯ ಮಟ್ಟದ ಮಾಹಿತಿ ಕೋಶಕ್ಕೆ ಲತಾರಾಜು ತಮ್ಮ ಕೊಡುಗೆ ಸಲ್ಲಿಸುತ್ತಾರೆ.

ಕೇರಳದ ಆಶಾ ಕಾರ್ಯಕರ್ತೆಯರು ಅನೇಕರ ಮನೆಗಳಿಗೆ ಆಹಾರ ಪದಾರ್ಥಗಳು, ದವಸ ಧಾನ್ಯಗಳು, ಔಷಧಿಗಳನ್ನು ಮತ್ತು ಸಮುದಾಯ ಅಡುಗೆ ಮನೆಯಿಂದ ಊಟ ತಿಂಡಿಯನ್ನೂ ತಲುಪಿಸುತ್ತಿದ್ದಾರೆ. ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳಿಗೆ , ಮನೆಗಳಿಗೆ ಹಿಂದಿರುಗಲು ಆರಂಭಿಸಿದಾಗ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಾಗಿತ್ತು. ಮನೆಯಲ್ಲೇ ಕ್ವಾರಂಟೈನ್ ಆಗಿದ್ದವರ ಬಗ್ಗೆ ನಿಗಾವಹಿಸಲು ರೂಪಿಸಲಾಗಿದ್ದ ವಾರ್ಡ್‍ಮಟ್ಟದ ಸಮಿತಿಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿತ್ತು.

ಸಮಿತಿಯ ಸದಸ್ಯರೊಡನೆ ಕ್ವಾರಂಟೈನ್‍ಗೆ ಒಳಗಾದವರನ್ನು ಭೇಟಿಯಾಗುವುದೇ ಅಲ್ಲದೆ ಅಲ್ಲಿ ಕ್ವಾರಂಟೈನ್ ಮಾಡಲು ಅನುಕೂಲಕರ ಪರಿಸ್ಥಿತಿ ಇದೆಯೇ, ಮನೆಯೊಳಗೆ ಬಚ್ಚಲು ಮತ್ತು ಶೌಚಾಲಯ ಇದೆಯೇ ಎನ್ನುವುದನ್ನು ಖಚಿತಪಡಿಸಿಕೊಂಡು ವರದಿ ಮಾಡುವುದು ಇವರ ಜವಾಬ್ದಾರಿಯಾಗಿತ್ತು. ನಂತರ ಕುಟುಂಬದ ಇತರ ಸದಸ್ಯರಿಗೆ ಸುರಕ್ಷತಾ ವಿಧಾನಗಳ ಬಗ್ಗೆ ತಿಳುವಳಿಕೆ ನೀಡುವುದೂ ಇವರ ಹೊಣೆಯಾಗಿತ್ತು.

ದುರದೃಷ್ಟಕರ ಸಂಗತಿ ಎಂದರೆ ಅನೇಕ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಖಾಸಗಿ ಸುರಕ್ಷತಾ ಉಪಕರಣಗಳಾದ ಮಾಸ್ಕ್, ಕೈಗವುಸು ಮತ್ತು ಮುಖ ರಕ್ಷಕಗಳನ್ನು ಒದಗಿಸಿಲ್ಲ. ಅನೇಕರು ಮನೆಯಲ್ಲಿ ತಾವೇ ಹೊಲಿದ ಬಟ್ಟೆಯ ಮಾಸ್ಕ್ ಗಳನ್ನು ಧರಿಸುತ್ತಿದ್ದು, ಕೆಲವರು ತಮ್ಮ ದುಪ್ಪಟ್ಟ ಬಳಸುತ್ತಿದ್ದಾರೆ. ಕೇರಳದ ತಿರುವನಂತಪುರಂ, ಪಥನಮತಿಟ್ಟ, ಮಾಲಪ್ಪುರಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರೇ ಸೋಂಕಿಗೆ ಒಳಗಾದಾಗ ಇವರಲ್ಲೂ ಆತಂಕ ಹೆಚ್ಚಾಗಿದೆ.

ನಮ್ಮಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿ ಪಾಸಿಟೀವ್ ಕಂಡುಬಂದರೆ ನಮ್ಮ ಸಂಪರ್ಕದಲ್ಲಿರುವವರನ್ನು ಗುರುತಿಸುವ ಪ್ರಕ್ರಿಯೆ ಭೀಕರವಾಗಿರುತ್ತದೆ ” ಎನ್ನುತ್ತಾರೆ ಲತಾ ರಾಜು. ಆಶಾ ಕಾರ್ಯಕರ್ತೆಯರ ಕಾರ್ಯಕ್ಷಮತೆ ಮತ್ತು ಅವರ ವರದಿಗಾರಿಕೆಯೇ ದೇಶದ ಕೋವಿದ್ 19 ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಿನ್ನೆಲೆಯಲ್ಲಿ ನೋಡಿದಾಗ, ಈ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ಆಡಳಿತ ವ್ಯವಸ್ಥೆ ಅಸಡ್ಡೆ ತೋರುತ್ತಿರುವುದು ನಿಜಕ್ಕೂ ದುರದೃಷ್ಟಕರ.

ಇತ್ತೀಚಿನ ತಮ್ಮ ಲೇಖನವೊಂದರಲ್ಲಿ ಡಾ ಎಮ್ ಎಸ್ ಶೇಷಾದ್ರಿ ಮತ್ತು ಟಿ ಜಾಕಬ್ ಹೇಳುವಂತೆ “ಮುಂಬರುವ ದಿನಗಳಲ್ಲಿ ಆಡಳಿತ ವ್ಯವಸ್ಥೆ ಕೈಗೊಳ್ಳಬೇಕಾದ ಅತ್ಯಂತ ಮುಖ್ಯ ಕ್ರಮ ಎಂದರೆ ನಮ್ಮ ಬಳಿ ಇರುವ ಎಲ್ಲ ಸಾಧನಗಳನ್ನೂ ಬಳಸಿ ಗ್ರಾಮೀಣ ಜನತೆಯಲ್ಲಿ ಜಾಗೃತಿ , ತಿಳುವಳಿಕೆ ಮೂಡಿಸುವುದು. ನಾವು ಅವರಿಗೆ ಸೂಕ್ತವಾದ ಮಾಹಿತಿಯನ್ನು ಒದಗಿಸಬೇಕು ”(ದ ಹಿಂದೂ ಪತ್ರಿಕೆ). ಈ ಮಹತ್ಕಾರ್ಯವನ್ನು ನಿರ್ವಹಿಸಲು ಬಹುಶಃ ದೇಶದ ಯಾವುದೇ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರನ್ನು ಹೊರತುಪಡಿಸಿ ಮತ್ತಾರೂ ನೆನಪಾಗುವುದಿಲ್ಲ.

ಏತನ್ಮಧ್ಯೆ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣವಿಲ್ಲದೆ ಹೆಚ್ಚಾಗುತ್ತಲೇ ಹೋಗುತ್ತಿರುವುದರಿಂದ ಅತಿಯಾದ ಎಚ್ಚರಿಕೆ ವಹಿಸಬೇಕಾದ ಸಂದರ್ಭವನ್ನೂ ಈ ಸೇನಾನಿಗಳು ಎದುರಿಸುತ್ತಿದ್ದಾರೆ. ಆದರೆ ಆಶಾ ಕಾರ್ಯಕರ್ತೆ ಪ್ರೇಮಾ ಹೇಳುವಂತೆ “ ಒಂದು ಸಣ್ಣ ಪ್ರಮಾದ ತಿಂಗಳಗಟ್ಟಳೆ ಮಾಡಿದ ಉತ್ತಮ ಕೆಲಸವನ್ನು ಮಣ್ಣುಪಾಲು ಮಾಡಿಬಿಡುತ್ತದೆ ”. ಹೀಗೆಯೇ ಈ ಸೇನಾನಿ ಪಡೆಗಳು ಶ್ರಮವಹಿಸುತ್ತಲೇ ಇರುತ್ತವೆ.

( ಕೆಲವು ಹೆಸರುಗಳನ್ನು ಗೋಪ್ಯತೆಯ ದೃಷ್ಟಿಯಿಂದ ಬದಲಿಸಲಾಗಿದೆ. ರಿಷಿಕೇಷ್ ಬಹದ್ದೂರ್ ದೇಸಾಯಿ ಮತ್ತು ಅಭಿನಯ ಹರಿಗೋವಿಂದ್ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ)

ಕೃಪೆ: ಜುಲೈ 7 ತಾರೀಖು ‘ದಿ ಹಿಂದೂ’ ಇಂಗ್ಲಿಷ್ ದೈನಿಕ ದಲ್ಲಿ ಪ್ರಖಟವಾದ ಲೇಖನದ ಕನ್ನಡ ಅನುವಾದ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

Continue Reading

ದಿನದ ಸುದ್ದಿ

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

Published

on

ಮುಖ್ಯಾಂಶಗಳು


ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ

​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ

ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್

ಸುದ್ದಿದಿನ,​ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ಎದುರಿಸುತ್ತಿರುವವರು

ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.

ಕಚೇರಿಯಲ್ಲಿ ತಪಾಸಣೆ

ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.

​ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending