ದಿನದ ಸುದ್ದಿ
ಕೋವಿದ್ 19 | ಆಶಯ ಮತ್ತು ಪ್ರಾರ್ಥನೆಗಳ ನಡುವೆ
- ಮೂಲ : ಅನುರಾಧ ರಮಣ್, ಅನುವಾದ : ನಾ ದಿವಾಕರ
ಆಶಾ ಕಾರ್ಯಕರ್ತೆ ‘ಅನಿತಾ ಶರ್ಮ’ ತಮ್ಮ ಟ್ವಿಟರ್ ಖಾತೆಯನ್ನು ಹೊಂದಿದ್ದರು. ಆಕೆ ಮನಸ್ಸು ಮಾಡಿದ್ದಲ್ಲಿ ತಮ್ಮ ಟ್ವಿಟರ್ ಖಾತೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಟ್ಯಾಗ್ ಮಾಡಿ ತಮ್ಮನ್ನು ಹೀಗೆ ಪರಿಚಯಿಸಿಕೊಳ್ಳಬಹುದಿತ್ತು : “ನನ್ನ ಹೆಸರು ಅನಿತಾ, ಕೊರೋನಾ ವೈರಾಣು ವ್ಯಾಪಿಸಿದ ದಿನದಿಂದ ನನ್ನ ನೌಕರಿಯ ಚಿತ್ರಣವೇ ಬದಲಾಗಿಹೋಗಿದೆ. ಇತ್ತೀಚೆಗೆ ನಾನು ದಿನಕ್ಕೆ 12 ಗಂಟೆಗಳ ಕಾಲ ದುಡಿಯುತ್ತೇನೆ. ನನ್ನ ಅಲ್ಪ ವೇತನ ಮಾಸಿಕ 2000 ರೂಗಳು ಮಾತ್ರ. ಕಳೆದ ವರ್ಷ ಇದನ್ನು 4000 ರೂಗಳಿಗೆ ಹೆಚ್ಚಿಸಲಾದರೂ ಇದುವರೆಗೂ ಹೆಚ್ಚುವರಿ ವೇತನ ನೀಡಿಲ್ಲ. ನಿಜ ಹೇಳಬೇಕೆಂದರೆ ಈ ವರ್ಷದ ಫೆಬ್ರವರಿಯಿಂದ ನನಗೆ ವೇತನವನ್ನೇ ನೀಡಲಾಗಿಲ್ಲ .”
ಈ ಟ್ವಿಟರ್ ಸಂದೇಶವೇನಾದರೂ ಕಂಡಿದ್ದಲ್ಲಿ ಸಾಮಾಜಿಕ ಮಾಧ್ಯಮಗಳು ಆಕೆಯ ದನಿಗೆ ಮತ್ತಷ್ಟು ದನಿ ಸೇರಿಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುತ್ತಿದ್ದವು. ಹಾಗಾಗಿದ್ದಲ್ಲಿ ಕೂಡಲೇ ಅನುಕಂಪ, ಕರುಣೆ, ಮರುಕದ ಸಂದೇಶಗಳ ಮಹಾಪೂರವೇ ಹರಿದುಬರುತ್ತಿತ್ತು. ಈ ಸಂದೇಶದಿಂದ ನಾಗರಿಕ ಸಮಾಜದಲ್ಲಿ ಸೃಷ್ಟಿಯಾಗುತ್ತಿದ್ದ ಆಕ್ರೋಶ ಮತ್ತು ಸಿಗುತ್ತಿದ್ದ ಪ್ರಚಾರದಿಂದ ಆಕೆಯ ವೇತನ ಬಾಕಿಯನ್ನು ಒಂದೇ ಕಂತಿನಲ್ಲಿ ಪಾವತಿ ಮಾಡುವ ಪ್ರಕ್ರಿಯೆಯನ್ನೂ ನಿರೀಕ್ಷಿಸಬಹುದಿತ್ತು.
ಆದರೆ ಹಾಗಾಗಲಿಲ್ಲ. ಅನಿತಾ ಈಗಲೂ ತಲೆ ತಗ್ಗಿಸಿ ಕೆಲಸ ಮಾಡುತ್ತಲೇ ಇದ್ದಾರೆ. ತಮ್ಮದೇ ಹಳೆಯ ಬಟ್ಟೆಯಿಂದ ಹೊಲಿದ ಮುಖಗವುಸನ್ನು ಧರಿಸಿ ದುಡಿಯುತ್ತಿದ್ದಾರೆ. ಸಾಧ್ಯವಾದಷ್ಟು ಬಾರಿ ತಮ್ಮ ಕೈ ತೊಳೆಯುತ್ತಲೇ ಇರುತ್ತಾರೆ. (ಆಕೆಗೆ ಸರ್ಕಾರ ನೀಡಿರುವ 500 ಮಿಲಿ ಲೀಟರಿನ ಸ್ಯಾನಿಟೈಸರ್ ಖಾಲಿಯಾಗದಂತೆ ಎಚ್ಚರ ವಹಿಸುತ್ತಾರೆ). ಹೀಗೆಯೇ ಹರಿಯಾಣದಲ್ಲಿ ತಮ್ಮ ನಿತ್ಯ ಕಾಯಕದಲ್ಲಿ ತೊಡಗುತ್ತಾರೆ. ಸದಾ ಪ್ರಾರ್ಥನೆ ಮಾಡುತ್ತಲೇ ದುಡಿಮೆಯಲ್ಲಿ ನಿರತರಾಗುತ್ತಾರೆ. “ ನಾವು ಎಲ್ಲ ರೀತಿಯ ಕೆಲಸಗಳನ್ನೂ ನಿರ್ವಹಿಸಬೇಕು ಎಂದು ಅವರು ಅಪೇಕ್ಷಿಸುತ್ತಾರೆ ಆದರೆ ಆದರೆ ನಮಗೆ ಕನಿಷ್ಟ ರಕ್ಷಣೆಯನ್ನೂ ನೀಡುವುದಿಲ್ಲ ” ಎಂದು ಬೇಸರದಿಂದ ಹೇಳುತ್ತಲೇ ತಮ್ಮ ಕೆಲಸದಲ್ಲಿ ನಿರತರಾಗುತ್ತಾರೆ.
ಅನಿತ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಹೊರಡುತ್ತಾರೆ. ಪ್ರತಿನಿತ್ಯ ಮಕ್ಕಳು, ವೃದ್ಧರು, ಮಹಿಳೆಯರು, ವಿಶೇಷವಾಗಿ ಗರ್ಭಿಣಿಯರನ್ನು ತಪಾಸಣೆಗೊಳಪಡಿಸುವುದು ಅವರ ಕಾಯಕ. ಪ್ರತಿನಿತ್ಯ ಸರಾಸರಿ 25 ಮನೆಗಳಿಗೆ ಭೇಟಿ ನೀಡುವ ಅನಿತ ಪ್ರತಿನಿತ್ಯ ಭೇಟಿ ಮಾಡುವವರ ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಸುತ್ತಾರೆ. ಅನೇಕರಿಗೆ ಸಾವು ಬದುಕಿನ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಸುವಲ್ಲಿ ಅನಿತ ಯಶಸ್ವಿಯಾಗುತ್ತಾರೆ.
ತಳಮಟ್ಟದ ಕಾಯಕ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರೂಪಿಸುವ ಪ್ರತಿಯೊಂದು ಆರೋಗ್ಯ ಯೋಜನೆಯ ಯಶಸ್ಸಿನ ಹಿಂದೆ ಅನಿತ ಅವರಂತಹ ತಳಮಟ್ಟದ ಕಾರ್ಯಕರ್ತೆಯರ ಪರಿಶ್ರಮ ಮತ್ತು ದುಡಿಮೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಕಬ್ಬಿಣಾಂಶ ಇರುವ ಮಾತ್ರೆ ಕೊಡುವುದರಿಂದ, ಎಳೆ ಮಕ್ಕಳಿಗೆ ಲಸಿಕೆ ಹಾಕುವ ವೇಳಾಪಟ್ಟಿಯನ್ನು ಗಮನಿಸುವುದು, ಗರ್ಭಿಣಿಯರಿಗೆ ಲಸಿಕೆ ನೀಡುವುದು, ಕ್ಷಯರೋಗಿಗಳಿಗೆ ತಪಾಸಣೆ ನಡೆಸುವುದು ಈ ಕೆಲಸಗಳ ಜೊತೆಗೇ ಈಗ ಅನಿತ ಕೋವಿದ್ 19 ಸೋಂಕಿನ ಲಕ್ಷಣಗಳನ್ನು ಗುರುತಿಸಿ ಜನರಿಗೆ ಸಲಹೆ ನೀಡುವ ಕೆಲಸವನ್ನೂ ನಿರ್ವಹಿಸಬೇಕಿದೆ.
ತಮ್ಮ ಬದುಕಿನ ನೆಲೆಯನ್ನೇ ಕಳೆದುಕೊಂಡು ಸ್ವಗ್ರಾಮಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರ ಬಗ್ಗೆಯೂ ಅನಿತ ಕಾಳಜಿ ವಹಿಸಬೇಕಾಗುತ್ತದೆ. ಈ ವಲಸೆ ಕಾರ್ಮಿಕರು ತಮಗೆ ನಿಗದಿಪಡಿಸಲಾದ ಕೇಂದ್ರಗಳಲ್ಲಿ ಕ್ವಾರಂಟೈನ್ ಅವಧಿಯನ್ನು ಸರಿಯಾಗಿ ಪೂರೈಸುವರೋ ಇಲ್ಲವೋ ಎನ್ನುವುದನ್ನೂ ಗಮನಿಸಬೇಕಾಗುತ್ತದೆ. ಇವೆಲ್ಲ ಕೆಲಸಗಳೊಟ್ಟಿಗೆ ಅನಿತ ತಮ್ಮ ಕುಟುಂಬ ಮತ್ತು ನೆರೆಹೊರೆಯವರಿಗೆ ಕೊರೋನಾ ಸೋಂಕಿನ ಕುರಿತು ಮಾಹಿತಿಯನ್ನು ನೀಡುತ್ತಿರಬೇಕು.
ಕೊರೋನಾ ನಂತರದಲ್ಲಿ ಹೆಚ್ಚಿನ ಒತ್ತಡ ಮತ್ತು ಜವಾಬ್ದಾರಿಯನ್ನು ಎದುರಿಸುತ್ತಿರುವ ಭಾರತದ ಆರೋಗ್ಯ ಸೇವೆಯ ಕ್ಷೇತ್ರದ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ 9 ಲಕ್ಷದಷ್ಟಿದೆ. ಅನಿತಾ ಅವರಂತಹ ಸೇನಾನಿಗಳು, ಯಾವುದೇ ರಕ್ಷಣಾ ಕವಚ ಇಲ್ಲದೆ, ಸಮರ್ಪಕ ವೇತನ ಇಲ್ಲದೆ, ಯಾವುದೇ ಸಂರಕ್ಷಕ ಅಸ್ತ್ರಗಳಿಲ್ಲದೆ, ಸೂಕ್ತ ಮಾನ್ಯತೆಯೂ ಇಲ್ಲದೆ ದುಡಿಯುತ್ತಿದ್ದಾರೆ.
ಅನೇಕ ಆಶಾ ಕಾರ್ಯಕರ್ತೆಯರು ಜನರ ಆಕ್ರೋಶವನ್ನೂ ಎದುರಿಸಬೇಕಾಗಿದೆ. “ಕಲ್ಲಿಕೋಟೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರಸ್ತೆಯಲ್ಲಿ ನೆರೆದಿದ್ದ ಜನರ ಗುಂಪನ್ನು ಚದುರಿಸಲು ಮುಂದಾದಾಗ ಓರ್ವ ಕಾರ್ಯಕರ್ತೆಯ ದ್ವಿಚಕ್ರ ವಾಹನವನ್ನು ಜಖಂಗೊಳಿಸಲಾಗಿದೆ. ಕೆಲವರು, ನಾವೇಕೆ ಒಬ್ಬ ಮಹಿಳೆ ಹೇಳಿದಂತೆ ಕೇಳಬೇಕು ಎನ್ನುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ಕೇರಳದ ಆಶಾ ಕಾರ್ಯಕರ್ತೆ ಪಿ ಪಿ ಪ್ರೇಮ.
ಇನ್ನೂ ಅಘಾತಕಾರಿ ವಿಚಾರ ಎಂದರೆ ಈವರೆಗೂ ದೇಶಾದ್ಯಂತ 20ಕ್ಕೂ ಹೆಚ್ಚು ಆಶಾಕಾರ್ಯಕರ್ತೆಯರು ಕೊರೋನಾಗೆ ಬಲಿಯಾಗಿದ್ದಾರೆ. ಮೇ 13ರಂದು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬದನಕಟ್ಟೆ ಗ್ರಾಮದಲ್ಲಿ 51 ವರ್ಷದ ಆಶಾ ಕಾರ್ಯಕರ್ತೆ ಭೀಮಕ್ಕ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಮೃತಪಟ್ಟಿದ್ದರು. ಇಡೀ ದಿನ ಆಕೆಯ ಶವವನ್ನು , ಅವರ ಸಂಬಂಧಿಕರು ಆಸ್ಪತ್ರೆಯಲ್ಲೇ ಇಟ್ಟಿದ್ದರು. ಈ ಕೊರೋನಾ ಸೇನಾನಿಗೆ ವಿಮೆ ಸೌಲಭ್ಯ ಒದಗಿಸಬೇಕು ಎನ್ನುವುದು ಅವರ ಆಗ್ರಹವಾಗಿತ್ತು.
ಆದರೆ ವೈದ್ಯರು, ಆಕೆಗೆ ಕೊರೋನಾ ನೆಗಟೀವ್ ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ಸತ್ತಿರುವುದರಿಂದ ವಿಮೆ ನೀಡಲಾಗುವುದಿಲ್ಲ ಎಂದು ವಾದಿಸಿದ್ದರು. ಸ್ಥಳೀಯ ಶಾಸಕರು ಮತ್ತು ಇತರ ನಾಯಕರು ಆಕೆಯ ವಿಚಾರವನ್ನು ಮುಖ್ಯಮಂತ್ರಿಯೊಡನೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಆಶ್ವಾಸನೆ ನೀಡಿದ್ದರೂ, ಈವರೆಗೂ ಈಡೇರಿಸಿಲ್ಲ. ಈ ಲೇಖನ ಬರೆಯುವ ವೇಳೆಗೆ ಇಬ್ಬರು ಆಶಾ ಕಾರ್ಯಕರ್ತೆಯರು, ಓರ್ವ ಅಂಗನವಾಡಿ ಕಾರ್ಯಕರ್ತೆ, ಓರ್ವ ಆರೋಗ್ಯ ಸಹಾಯಕಿ ಕೊರೋನಾ ಸೋಂಕಿತರಾಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯ ನಂತರ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.
ಕರ್ನಾಟಕದ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ ಅಂಗನವಾಡಿ ಕಾರ್ಯಕರ್ತೆ ರೇಣುಕಾ ರೇಣುಕೇಗೌಡರ್ ಇತ್ತೀಚೆಗೆ ತಾನೇ ಕೋವಿದ್ 19 ನಿಂದ ಚೇತರಿಸಿಕೊಂಡಿದ್ದಾರೆ. ಕಂಟೈನ್ಮೆಂಟ್ ವಲಯಗಳಲ್ಲಿ ಸಂಬಂಧಪಟ್ಟ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯೂ ಸಹ ಪ್ರತಿನಿತ್ಯ ಸೋಂಕಿತರ ಮತ್ತಿತರರ ಮನೆಗಳಿಗೆ ಭೇಟಿ ನೀಡಬೇಕು ಎಂಬ ನಿಯಮ ಇದ್ದರೂ ಸಹ ಯಾರೊಬ್ಬರೂ ತಿರುಗಿ ನೋಡುವುದಿಲ್ಲ.
“ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಪ್ರತಿನಿತ್ಯ ಮನೆ ಮನೆ ಸಮೀಕ್ಷೆ ನಡೆಸುವುದು, ಪಾಸಿಟಿವ್ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವುದು, ಪ್ರಾಥಮಿಕ ಮತ್ತು ತರುವಾಯದ ಸೋಂಕು ತಗುಲಿದವರನ್ನು ಪತ್ತೆ ಹಚ್ಚುವುದು, ಕಂಟೈನ್ಮೆಂಟ್ ವಲಯಗಳಲ್ಲಿ ಗಸ್ತು ತಿರುಗುವುದು, ಆಹಾರ ಮತ್ತು ಔಷಧ ಪದಾರ್ಥಗಳನ್ನು ವಿತರಿಸುವುದು ಈ ಎಲ್ಲ ಕೆಲಸಗಳನ್ನೂ ನಿರ್ವಹಿಸಬೇಕಾಗುತ್ತದೆ. ಕೆಲವು ಗ್ರಾಮಗಳಲ್ಲಿ ನೆರೆಹೊರೆಯವರು, ಗುಣಮುಖರಾದ ಕೊರೋನಾ ಸೋಂಕಿತರಿಗೆ ಹಾಲು ಮತ್ತಿತರ ಪದಾರ್ಥಗಳನ್ನು ಒದಗಿಸಲು ನಿರಾಕರಿಸಿದಾಗ ಪಕ್ಕದ ಹಳ್ಳಿಯಿಂದ ತಂದು ನೀಡಬೇಕಾಗುತ್ತದೆ ” ಎನ್ನುತ್ತಾರೆ ರೇಣುಕಾ ರೇಣುಕೇಗೌಡರ್.
ಬಹಿಷ್ಕೃತರಾದಾಗ
ರೇಣುಕಾ ಅವರಿಗೆ ಕೊರೋನಾ ಸೋಂಕು ತಗುಲಿದ ಸಂದರ್ಭದಲ್ಲಿ ಆಕೆ 20 ಪಾಸಿಟೀವ್ ಪ್ರಕರಣಗಳಿದ್ದ, ಹೆಚ್ಚಿನ ಅಪಾಯ ಇದ್ದ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗುಣಮುಖರಾದ ನಂತರ ಮನೆಗೆ ಹಿಂದಿರುಗಿದಾಗ ಗ್ರಾಮಸ್ಥರು ಆಕೆಯನ್ನು ಬಹಿಷ್ಕರಿಸಿದ್ದರು. “ ನನ್ನ ನೆರೆಹೊರೆಯವರು ನನ್ನಿಂದ ಮತ್ತು ನನ್ನ ಮಗಳಿಂದ ದೂರ ಉಳಿದರು, ನಾನು ಕೆಲಸ ಮಾಡುವಲ್ಲಿಯೂ ಸಹ ಕಳಂಕ ಹೊತ್ತುಕೊಂಡೇ ಇರಬೇಕಾಯಿತು, ಈ ರೋಗದ ಬಗ್ಗೆ ಬಹಳಷ್ಟು ಜನರಿಗೆ ಅನಗತ್ಯವಾದ ಭೀತಿ ಆವರಿಸಿದೆ ಹಾಗಾಗಿ ನೀವು ಗುಣಮುಖರಾಗಿದ್ದರೂ ಬಹಳಷ್ಟು ಜನರು ನಿಮ್ಮಿಂದ ದೂರವೇ ಇರುತ್ತಾರೆ ” ಎಂದು ವಿಷಾದದಿಂದ ಹೇಳುತ್ತಾರೆ ರೇಣುಕ.
ರೇಣುಕಾ ಅಂಗನವಾಡಿ ಕಾರ್ಯಕರ್ತೆಯಾಗಿ 19 ವರ್ಷ ಸೇವೆ ಸಲ್ಲಿಸಿದ್ದಾರೆ. ತಿಂಗಳಿಗೆ 500 ರೂ ಸಂಬಳದಿಂದ ಆರಂಭವಾದ ಅವರ ನೌಕರಿಯಲ್ಲಿ ಈಗ ತಿಂಗಳಿಗೆ 10 ಸಾವಿರ ರೂ ವೇತನ ಪಡೆಯುತ್ತಿದ್ದಾರೆ. ಮುಂಚೂಣಿಯಲ್ಲಿ ನಿಂತು ಆರೋಗ್ಯ ಸೇವೆ ಸಲ್ಲಿಸುವ ಸೇನಾನಿಗಳನ್ನು ರಾಜ್ಯ ಸರ್ಕಾರ ಸಂವೇದನೆಯೇ ಇಲ್ಲದೆ ನಿರ್ವಹಿಸುತ್ತಿರುವ ರೀತಿಗೆ ರಾಜ್ಯದ ಕಾರ್ಮಿಕ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿವೆ.
ಈ ಕುರಿತು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಹೀಗೆ ಹೇಳುತ್ತಾರೆ ; “ ಭೀಮಕ್ಕ ತಮ್ಮ ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ಸಾಯಲಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ ಆಕೆ ಕುಸಿದು ಬಿದ್ದ ಸಂದರ್ಭದಲ್ಲಿ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದರು. ಇದನ್ನು ಕರ್ತವ್ಯದ ವೇಳೆಯ ಸಾವು ಅಲ್ಲ ಎಂದು ಹೇಗೆ ನಿರ್ಧರಿಸಲು ಸಾಧ್ಯ ? ಎಲ್ಲ ಆಶಾ ಕಾರ್ಯಕರ್ತೆಯರನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಆರೋಗ್ಯ ಸಹಾಯಕರನ್ನು ಕೂಡಲೇ ಖಾಯಂ ನೌಕರರು ಎಂದು ಘೋಷಿಸಿ ಇತರ ಸರ್ಕಾರಿ ನೌಕರರಿಗೆ ಒದಗಿಸುವ ವೇತನ ಮತ್ತು ವಿಮೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ನಾವು ಆಗ್ರಹಿಸುತ್ತೇವೆ. ”
ಆಶಾ ಕಾರ್ಯಕರ್ತೆಯರನ್ನು ಪ್ರತಿನಿಧಿಸುವ ಪ್ರಬಲ ಕಾರ್ಮಿಕ ಸಂಘಟನೆಗಳು ಇರುವೆಡೆಯೆಲ್ಲಾ ಅವರ ಆಗ್ರಹಗಳಿಗೆ ಕಿವಿಗೊಡಲಾಗುತ್ತದೆ. ಮಹಾರಾಷ್ಟ್ರದಲ್ಲಿ ಕಳೆದ ಸೆಪ್ಟಂಬರ್ ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನ ಪಾವತಿ ಮಾಡಿರಲಿಲ್ಲ. ಆಶಾ ಕಾರ್ಯಕರ್ತೆಯರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿತ್ತು. ಕೂಡಲೇ ಸ್ಪಂದಿಸಿದ ಸರ್ಕಾರ ವೇತನ ಪಾವತಿಸಲು ಒಪ್ಪಿಕೊಂಡಿತ್ತು. ಆದರೆ ತೆಲಂಗಾಣ ಮತ್ತು ಕೇರಳ ಸರ್ಕಾರದಂತೆ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವುದು ಇನ್ನೂ ಸ್ಪಷ್ಟವಾಗಿಲ್ಲ.
ಕೊರೋನಾ ವ್ಯಾಪಿಸುತ್ತಿರುವುದರಿಂದ ಕಾರ್ಯಕರ್ತೆಯರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿರುವುದನ್ನು ಕಂಡು ಕೇರಳ ಮತ್ತು ತೆಲಂಗಾಣ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಮಾಸಿಕ ವೇತನವನ್ನು 7000 ರೂಗಳಿಗೆ ಹೆಚ್ಚಿಸಿವೆ. ಕರ್ನಾಟಕದಲ್ಲಿ 10 ಸಾವಿರ ವೇತನ ನೀಡಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಲ್ಲೂ ವೇತನ ಪಾವತಿಯಲ್ಲಿ ವಿಳಂಬ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 2000 ರೂ ಮತ್ತು ರಾಜ್ಯ ಸರ್ಕಾರಗಳು 2000 ರೂ ವೇತನ ನಿಗದಿಪಡಿಸಿವೆ.
ಘನತೆಯ ಹಕ್ಕು
ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ವರದಿಯೊಂದರ ಪ್ರಕಾರ ಏಪ್ರಿಲ್ 28ರ ವೇಳೆಗೇ ವಿಶ್ವ ಆರೋಗ್ಯ ಸಂಸ್ಥೆಯು ಎಲ್ಲ ದೇಶಗಳಿಗೂ ಸಂದೇಶವನ್ನು ರವಾನಿಸಿದ್ದು, ಎಲ್ಲ ಸರ್ಕಾರಗಳು, ಉದ್ಯೋಗದಾತರು, ಕಾರ್ಮಿಕ ಸಂಘಟನೆಗಳು ಮತ್ತು ಜಾಗತಿಕ ಸಮುದಾಯದ ಸಂಘ ಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರ ವೃತ್ತಿಪರ ಆರೋಗ್ಯ ರಕ್ಷಣೆ ಮತ್ತು ಸುಭದ್ರತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆಯೂ, ಅವರಿಗೆ ಗೌರವಯುತವಾದ ಕಾರ್ಯಕ್ಷೇತ್ರದ ಪರಿಸರವನ್ನು ಒದಗಿಸುವಂತೆಯೂ, ಅವರ ರಕ್ಷಣೆಗಾಗಿ ರಾಷ್ಟ್ರೀಯ ಯೋಜನೆಗಳನ್ನು ರೂಪಿಸುವಂತೆಯೂ ಆಗ್ರಹಿಸಿತ್ತು.
ಈಗ ಕೋವಿದ್ 19 ನಿಯಂತ್ರಣ ತಪ್ಪಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ನಿರೀಕ್ಷೆಯನ್ನೂ ಮೀರಿ ಹೆಚ್ಚಾಗಿದೆ. ಕೋವಿದ್ 19 ಸ್ಥಳೀಯ ಮಟ್ಟದಲ್ಲಿ ಪ್ರಸರಣವಾಗದಂತೆ ತಡೆಗಟ್ಟಲು ರೂಪಿಸಲಾದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾದರಿ ಯೋಜನೆಯ ಅನುಸಾರ, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುವುದೇ ಅಲ್ಲದೆ ದಿನನಿತ್ಯ ಸೊಂಕು ಲಕ್ಷಣಗಳಿರುವ ಮತ್ತು ಲಕ್ಷಣಗಳಿಲ್ಲದಿರುವವರ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ.
ಜನವರಿಯಲ್ಲಿ ದೇಶದ ಪ್ರಪ್ರಥಮ ಕೋವಿದ್ ಪ್ರಕರಣ ದಾಖಲಾದ ಕೇರಳದ ತ್ರಿಸೂರ್ ಜಿಲ್ಲೆಯಲ್ಲಿ ಫೆಬ್ರವರಿಯಿಂದಲೇ ಹೊರ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಎಚ್ಚರವಹಿಸಲು ಅಜಿತಾ ರಾಜನ್ ಅವರಂತಹ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.
ಕಲ್ಲಿಕೋಟೆಯಲ್ಲಿ ಸಿಐಟಿಯು ಸಂಯೋಜಿತ ಆಶಾ ಕಾರ್ಯಕರ್ತೆಯರ ಸಂಘದ ಕೇರಳ ರಾಜ್ಯಾಧ್ಯಕ್ಷೆಯಾದ ಪ್ರೇಮ “ ನಾವು ದಿನವಿಡೀ ಕೆಲಸ ಹೊಂದಿರುತ್ತೇವೆ, ಹೊರ ರಾಜ್ಯಗಳಿಂದ ಬರುವವರು ಮಧ್ಯರಾತ್ರಿ ಬಂದರೂ,, ನೆರೆಹೊರೆಯವರು ನಮಗೆ ದೂರವಾಣಿ ಮೂಲಕ ರಾತ್ರಿ ವೇಳೆಯೇ ಮಾಹಿತಿ ನೀಡುತ್ತಾರೆ, ಇದರೊಂದಿಗೆ ಕ್ವಾರಂಟೈನ್ನಲ್ಲಿರುವವರಿಗೆ ನಾವು ಸಾಂತ್ವನ ನೀಡುವುದೂ ಅಷ್ಟೇ ಮುಖ್ಯವಾಗಿರುತ್ತದೆ ” ಎಂದು ಹೇಳುತ್ತಾರೆ.
ಕೊಚಿ ನಗರದಲ್ಲಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆ ಲತಾ ರಾಜು ಮನೆಯಲ್ಲೇ ಕ್ವಾರಂಟೈನ್ ಆಗಿರುವ ಸೋಂಕಿತರ ಎಲ್ಲ ವಿವರಗಳನ್ನೂ ನೋಟ್ ಪುಸ್ತಕಗಳಲ್ಲಿ ದಾಖಲಿಸಿದ್ದಾರೆ. ಇವರು ಎಲ್ಲಿ ನೆಲೆಸಿದ್ದಾರೆ, ಎಲ್ಲಿಗೆ ಅಥವಾ ಎಲ್ಲಿಂದ ಪ್ರಯಾಣ ಮಾಡಿದ್ದಾರೆ, ಅವರ ಸಂಪರ್ಕ ಸಂಖ್ಯೆ ಹೀಗೆ ಎಲ್ಲವನ್ನೂ ದಾಖಲಿಸಿ ಹಲವು ಪುಸ್ತಕಗಳನ್ನು ತುಂಬಿಸಿದ್ದಾರೆ.
ಇದರೊಟ್ಟಿಗೆ ಒಂಟಿಯಾಗಿ ಜೀವನ ನಡೆಸುತ್ತಿರುವ ವೃದ್ಧರು, ಈಗಾಗಲೇ ಇತರ ಅನಾರೋಗ್ಯ ಸಮಸ್ಯೆ ಹೊಂದಿರುವವರು, ಗರ್ಭಿಣಿ ಮಹಿಳೆಯರು ಎಲ್ಲರ ಮಾಹಿತಿಯನ್ನು ಸಂಗ್ರಹಿಸಿ ದಾಖಲಿಸಿದ್ದಾರೆ. ಸಂಜೆ ವೇಳೆ ಈ ಅಂಕಿಅಂಶಗಳನ್ನು ಸಾರ್ವಜನಿಕ ಆರೋಗ್ಯ ಶುಶ್ರೂಷಕಿಯರಿಗೆ ಮತ್ತು ಆರೋಗ್ಯ ಪರೀಕ್ಷಕರಿಗೆ ಕಳುಹಿಸುವ ಮೂಲಕ ರಾಜ್ಯ ಮಟ್ಟದ ಮಾಹಿತಿ ಕೋಶಕ್ಕೆ ಲತಾರಾಜು ತಮ್ಮ ಕೊಡುಗೆ ಸಲ್ಲಿಸುತ್ತಾರೆ.
ಕೇರಳದ ಆಶಾ ಕಾರ್ಯಕರ್ತೆಯರು ಅನೇಕರ ಮನೆಗಳಿಗೆ ಆಹಾರ ಪದಾರ್ಥಗಳು, ದವಸ ಧಾನ್ಯಗಳು, ಔಷಧಿಗಳನ್ನು ಮತ್ತು ಸಮುದಾಯ ಅಡುಗೆ ಮನೆಯಿಂದ ಊಟ ತಿಂಡಿಯನ್ನೂ ತಲುಪಿಸುತ್ತಿದ್ದಾರೆ. ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳಿಗೆ , ಮನೆಗಳಿಗೆ ಹಿಂದಿರುಗಲು ಆರಂಭಿಸಿದಾಗ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಾಗಿತ್ತು. ಮನೆಯಲ್ಲೇ ಕ್ವಾರಂಟೈನ್ ಆಗಿದ್ದವರ ಬಗ್ಗೆ ನಿಗಾವಹಿಸಲು ರೂಪಿಸಲಾಗಿದ್ದ ವಾರ್ಡ್ಮಟ್ಟದ ಸಮಿತಿಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿತ್ತು.
ಸಮಿತಿಯ ಸದಸ್ಯರೊಡನೆ ಕ್ವಾರಂಟೈನ್ಗೆ ಒಳಗಾದವರನ್ನು ಭೇಟಿಯಾಗುವುದೇ ಅಲ್ಲದೆ ಅಲ್ಲಿ ಕ್ವಾರಂಟೈನ್ ಮಾಡಲು ಅನುಕೂಲಕರ ಪರಿಸ್ಥಿತಿ ಇದೆಯೇ, ಮನೆಯೊಳಗೆ ಬಚ್ಚಲು ಮತ್ತು ಶೌಚಾಲಯ ಇದೆಯೇ ಎನ್ನುವುದನ್ನು ಖಚಿತಪಡಿಸಿಕೊಂಡು ವರದಿ ಮಾಡುವುದು ಇವರ ಜವಾಬ್ದಾರಿಯಾಗಿತ್ತು. ನಂತರ ಕುಟುಂಬದ ಇತರ ಸದಸ್ಯರಿಗೆ ಸುರಕ್ಷತಾ ವಿಧಾನಗಳ ಬಗ್ಗೆ ತಿಳುವಳಿಕೆ ನೀಡುವುದೂ ಇವರ ಹೊಣೆಯಾಗಿತ್ತು.
ದುರದೃಷ್ಟಕರ ಸಂಗತಿ ಎಂದರೆ ಅನೇಕ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಖಾಸಗಿ ಸುರಕ್ಷತಾ ಉಪಕರಣಗಳಾದ ಮಾಸ್ಕ್, ಕೈಗವುಸು ಮತ್ತು ಮುಖ ರಕ್ಷಕಗಳನ್ನು ಒದಗಿಸಿಲ್ಲ. ಅನೇಕರು ಮನೆಯಲ್ಲಿ ತಾವೇ ಹೊಲಿದ ಬಟ್ಟೆಯ ಮಾಸ್ಕ್ ಗಳನ್ನು ಧರಿಸುತ್ತಿದ್ದು, ಕೆಲವರು ತಮ್ಮ ದುಪ್ಪಟ್ಟ ಬಳಸುತ್ತಿದ್ದಾರೆ. ಕೇರಳದ ತಿರುವನಂತಪುರಂ, ಪಥನಮತಿಟ್ಟ, ಮಾಲಪ್ಪುರಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರೇ ಸೋಂಕಿಗೆ ಒಳಗಾದಾಗ ಇವರಲ್ಲೂ ಆತಂಕ ಹೆಚ್ಚಾಗಿದೆ.
“ನಮ್ಮಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿ ಪಾಸಿಟೀವ್ ಕಂಡುಬಂದರೆ ನಮ್ಮ ಸಂಪರ್ಕದಲ್ಲಿರುವವರನ್ನು ಗುರುತಿಸುವ ಪ್ರಕ್ರಿಯೆ ಭೀಕರವಾಗಿರುತ್ತದೆ ” ಎನ್ನುತ್ತಾರೆ ಲತಾ ರಾಜು. ಆಶಾ ಕಾರ್ಯಕರ್ತೆಯರ ಕಾರ್ಯಕ್ಷಮತೆ ಮತ್ತು ಅವರ ವರದಿಗಾರಿಕೆಯೇ ದೇಶದ ಕೋವಿದ್ 19 ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಿನ್ನೆಲೆಯಲ್ಲಿ ನೋಡಿದಾಗ, ಈ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ಆಡಳಿತ ವ್ಯವಸ್ಥೆ ಅಸಡ್ಡೆ ತೋರುತ್ತಿರುವುದು ನಿಜಕ್ಕೂ ದುರದೃಷ್ಟಕರ.
ಇತ್ತೀಚಿನ ತಮ್ಮ ಲೇಖನವೊಂದರಲ್ಲಿ ಡಾ ಎಮ್ ಎಸ್ ಶೇಷಾದ್ರಿ ಮತ್ತು ಟಿ ಜಾಕಬ್ ಹೇಳುವಂತೆ “ಮುಂಬರುವ ದಿನಗಳಲ್ಲಿ ಆಡಳಿತ ವ್ಯವಸ್ಥೆ ಕೈಗೊಳ್ಳಬೇಕಾದ ಅತ್ಯಂತ ಮುಖ್ಯ ಕ್ರಮ ಎಂದರೆ ನಮ್ಮ ಬಳಿ ಇರುವ ಎಲ್ಲ ಸಾಧನಗಳನ್ನೂ ಬಳಸಿ ಗ್ರಾಮೀಣ ಜನತೆಯಲ್ಲಿ ಜಾಗೃತಿ , ತಿಳುವಳಿಕೆ ಮೂಡಿಸುವುದು. ನಾವು ಅವರಿಗೆ ಸೂಕ್ತವಾದ ಮಾಹಿತಿಯನ್ನು ಒದಗಿಸಬೇಕು ”(ದ ಹಿಂದೂ ಪತ್ರಿಕೆ). ಈ ಮಹತ್ಕಾರ್ಯವನ್ನು ನಿರ್ವಹಿಸಲು ಬಹುಶಃ ದೇಶದ ಯಾವುದೇ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರನ್ನು ಹೊರತುಪಡಿಸಿ ಮತ್ತಾರೂ ನೆನಪಾಗುವುದಿಲ್ಲ.
ಏತನ್ಮಧ್ಯೆ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣವಿಲ್ಲದೆ ಹೆಚ್ಚಾಗುತ್ತಲೇ ಹೋಗುತ್ತಿರುವುದರಿಂದ ಅತಿಯಾದ ಎಚ್ಚರಿಕೆ ವಹಿಸಬೇಕಾದ ಸಂದರ್ಭವನ್ನೂ ಈ ಸೇನಾನಿಗಳು ಎದುರಿಸುತ್ತಿದ್ದಾರೆ. ಆದರೆ ಆಶಾ ಕಾರ್ಯಕರ್ತೆ ಪ್ರೇಮಾ ಹೇಳುವಂತೆ “ ಒಂದು ಸಣ್ಣ ಪ್ರಮಾದ ತಿಂಗಳಗಟ್ಟಳೆ ಮಾಡಿದ ಉತ್ತಮ ಕೆಲಸವನ್ನು ಮಣ್ಣುಪಾಲು ಮಾಡಿಬಿಡುತ್ತದೆ ”. ಹೀಗೆಯೇ ಈ ಸೇನಾನಿ ಪಡೆಗಳು ಶ್ರಮವಹಿಸುತ್ತಲೇ ಇರುತ್ತವೆ.
( ಕೆಲವು ಹೆಸರುಗಳನ್ನು ಗೋಪ್ಯತೆಯ ದೃಷ್ಟಿಯಿಂದ ಬದಲಿಸಲಾಗಿದೆ. ರಿಷಿಕೇಷ್ ಬಹದ್ದೂರ್ ದೇಸಾಯಿ ಮತ್ತು ಅಭಿನಯ ಹರಿಗೋವಿಂದ್ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ)
ಕೃಪೆ: ಜುಲೈ 7 ತಾರೀಖು ‘ದಿ ಹಿಂದೂ’ ಇಂಗ್ಲಿಷ್ ದೈನಿಕ ದಲ್ಲಿ ಪ್ರಖಟವಾದ ಲೇಖನದ ಕನ್ನಡ ಅನುವಾದ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

