ದಿನದ ಸುದ್ದಿ
ಯಾರ ವಿರುದ್ಧ ದನಿ ಎತ್ತಬೇಕು ಸಂಸದರೇ..?
- ನಾ ದಿವಾಕರ
ಮುಂಬಯಿಯಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಅವರ ರಾಜಗೃಹದ ಮೇಲೆ ಇತ್ತೀಚೆಗೆ ನಡೆದ ಆಕ್ರಮಣ ಬದಲಾಗುತ್ತಿರುವ ಭಾರತದ ಸೂಚನೆಯನ್ನು ನೀಡುತ್ತಿದೆ. ಈ ಕುರಿತು ಸ್ವಲ್ಪ ತಡವಾದರೂ ಮೌನ ಮುರಿದಿರುವ ದಲಿತ ಪ್ರತಿನಿಧಿಗಳು ತಮ್ಮ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಸಂಸದರಾದ ಸನ್ಮಾನ್ಯ ಶ್ರೀನಿವಾಸ ಪ್ರಸಾದ್ ಅವರು ಈ ದಾಳಿಯನ್ನು ಖಂಡಿಸಿದ್ದು “ ಅಂಬೇಡ್ಕರ್ ಮನೆ ಮೇಲೆ ಕಲ್ಲು ತೂರಿ ವಿಧ್ವಂಸಕ ಕೃತ್ಯ ಎಸಗಿರುವ ವಿಚಾರದಲ್ಲಿ ದಲಿತೇತರ ರಾಜಕಾರಣಿಗಳು ಮತ್ತು ಸಂಘ ಸಂಸ್ಥೆಗಳು ದನಿ ಎತ್ತದಿರುವುದು ಶೋಚನೀಯ ” (ಪ್ರವಾ 14-7-20) ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತರ ಮೇಲೆ ಯಾವುದೇ ರೀತಿಯ ದಾಳಿ ನಡೆದಾಗಲೂ ಈ ವಿಷಾದ ಇದ್ದೇ ಇರುತ್ತದೆ.
ಊನ, ಖೈರ್ಲಾಂಜಿ, ಕಂಬಾಲಪಲ್ಲಿ ನಡೆದಾಗಲೇ ಎಷ್ಟೋ ದಲಿತೇತರ ಸಂಘಟನೆಗಳು ಮೌನಕ್ಕೆ ಶರಣಾಗಿದ್ದವು. ಇಲ್ಲಿ ಯಾರು ಪ್ರತಿಭಟಿಸಬೇಕು ಎನ್ನುವುದಕ್ಕಿಂತಲೂ ಯಾವ ಶಕ್ತಿಗಳ ವಿರುದ್ಧ ದನಿ ಎತ್ತಬೇಕು ಎನ್ನುವುದು ಮುಖ್ಯವಾಗುತ್ತದೆ.
ಇದೇ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ಈ ಕೃತ್ಯದ ಹಿಂದೆ ಕೆಲವು “ಕಿಡಿಗೇಡಿಗಳನ್ನು” ಗುರುತಿಸಿದ್ದಾರೆ. ಹಾಗಾಗಿ ದಲಿತ ಸಂಘಟನೆಗಳು ಪುರಾವೆ ಇಲ್ಲದೆ ಯಾರ ಮೇಲೂ ಆರೋಪ ಮಾಡಕೂಡದು, ರಾಜಕೀಯ ಬೆರೆಸಬಾರದು ಎಂದೂ ಹೇಳಿದ್ದಾರೆ. ಇದು ಸರಿಯೇ. ಈ ದೇಶದಲ್ಲಿ ಶಂಕಿತರನ್ನು ಗುರುತಿಸಲೂ ಅಸ್ಮಿತೆಗಳು ಮುಖ್ಯವಾಗುತ್ತವೆ.
ರಾಜಗೃಹದ ಮೇಲೆ ನಡೆದ ದಾಳಿಯಲ್ಲಿ ಅಲ್ಪಸಂಖ್ಯಾತರು ಯಾರಾದರೂ ಇದ್ದಿದ್ದರೆ “ ಪುರಾವೆ ಇಲ್ಲದೆ ಆರೋಪ ಮಾಡಕೂಡದು” ಎನ್ನುವ ಉಪದೇಶ ಬರುತ್ತಿರಲಿಲ್ಲ. ಶಂಕಿತರು, ಉಗ್ರರು, ಕಿಡಿಗೇಡಿಗಳು, ದುಷ್ಕರ್ಮಿಗಳು, ಮಾನಸಿಕ ಅಸ್ವಸ್ಥರು, ತಿಳಿಗೇಡಿಗಳು ಈ ಎಲ್ಲ ಪದಗಳೂ ಸಾಪೇಕ್ಷ ನೆಲೆಯಲ್ಲಿ ರಾಜಕೀಯ ಅನುಕೂಲತೆಗೆ ತಕ್ಕಂತೆ ಬಳಕೆಯಾಗುತ್ತಿರುವುದನ್ನು ದಶಕಗಳಿಂದ ಗಮನಿಸುತ್ತಲೇ ಬಂದಿದ್ದೇವೆ.
ಇರಲಿ, ರಾಜಗೃಹದ ಮೇಲೆ ದಾಳಿ ನಡೆಸಿದವರು ಯಾರು ಎನ್ನುವುದು ವ್ಯಕ್ತಿಗತ ಪ್ರಶ್ನೆ. ಅಪರಾಧಿಗಳಿಗೆ ಶಿಕ್ಷೆಯಾಗುವುದೋ ಇಲ್ಲವೋ ಕಾದು ನೋಡೋಣ. ಆದರೆ ರಾಜಗೃಹದ ಘಟನೆ ಏಕಾಏಕಿ ನಡೆದ ವಿಕ್ಷಿಪ್ತ ಘಟನೆ ಅಲ್ಲ ಎನ್ನುವುದು ಸಂಸದರ ಗಮನಕ್ಕೆ ಬರಬೇಕಿತ್ತಲ್ಲವೇ ? ದಲಿತೇತರ ರಾಜಕಾರಣಿಗಳು, ಸಂಘಟನೆಗಳು ಈ ಘಟನೆಯನ್ನು ಖಂಡಿಸಿಲ್ಲ , ನಿಜ.
ಇದೇನೂ ಅಚ್ಚರಿಯ ವಿಚಾರ ಅಲ್ಲ. ರಾಜಗೃಹ ಬಾಬ್ರಿ ಮಸೀದಿಯಂತೆ, ರಾಮಮಂದಿರಂತೆ ಮತಗಳಿಕೆಯ ಸ್ಥಾವರ ಅಲ್ಲ. ಅದು ದಲಿತ ಸಮುದಾಯದ ಅಸ್ಮಿತೆಯನ್ನು ಬಿಂಬಿಸುವ ಸ್ಥಾವರ. ಈ ಅಸ್ಮಿತೆಯ ಮೇಲೆ ದಾಳಿ ನಡೆದಾಗ ದಲಿತ ರಾಜಕಾರಣಿಗಳಾದರೂ ಎಲ್ಲಿದ್ದಾರೆ ? ಕರ್ನಾಟಕದ ದಲಿತ ಸಂಸದರ ಮತ್ತು ಶಾಸಕರ ಒಕ್ಕೊರಲ ದನಿ ಏಕೆ ಕೇಳಿಸಿಯೇ ಇಲ್ಲ.
ಈ ದಾಳಿ ಏಕೆ ನಡೆದಿದೆ, ಅಂಬೇಡ್ಕರ್, ಪೆರಿಯಾರ್ ಮೇಲೆ ಈ ರೀತಿಯ ದಾಳಿ ಏಕೆ ನಡೆಯುತ್ತಿದೆ ಎನ್ನುವುದು ನುರಿತ ರಾಜಕಾರಣಿಯಾದ ಮಾನ್ಯ ಶ್ರೀನಿವಾಸಪ್ರಸಾದ್ ಅವರಿಗೆ ತಿಳಿದಿರಬೇಕಲ್ಲವೇ ? ಈ ದೇಶದ ಮತೀಯ ಮೂಲಭೂತವಾದಿಗಳಿಗೆ ಪ್ರೇರಣೆ ನೀಡುವ ಒಂದು ಸಿದ್ಧಾಂತ ಮತ್ತು ತತ್ವವನ್ನು ಅಪ್ಪಿಕೊಂಡು, ಈ ಮತೀಯ ಶಕ್ತಿಗಳು ನಿರಂತರವಾಗಿ ಭಾರತದ ಶೋಷಿತ, ದಮನಿತ ಜನಸಮುದಾಯಗಳ ಮೇಲೆ ನಡೆಸುತ್ತಿರುವ ದಾಳಿಯನ್ನು “ಕಿಡಿಗೇಡಿಗಳ” ಕೃತ್ಯ ಎಂದು ಬಣ್ಣಿಸುವುದರ ಔಚಿತ್ಯವನ್ನು ಪ್ರಶ್ನಿಸಲೇಬೇಕಾಗುತ್ತದೆ.
ರಾಜಗೃಹದ ಮೇಲಿನ ದಾಳಿಗೂ, ತಮಿಳುನಾಡಿನಲ್ಲಿ ಪೆರಿಯಾರ್ ಅಂಬೇಡ್ಕರ್ ಗ್ರಂಥಾಲಯದ ಮೇಲೆ ನಡೆದ ದಾಳಿಗೂ, ಹಲವೆಡೆ ಅಂಬೇಡ್ಕರ್ ಪ್ರತಿಮೆಗಳ ಮೇಲೆ ನಡೆಯುತ್ತಿರುವ ದಾಳಿಗೂ ಮತ್ತು ಅಂಬೇಡ್ಕರ್ ಅವರ ಸಾಂವಿಧಾನಿಕ ಮೌಲ್ಯಗಳ ವಿರುದ್ಧ ಆಡಳಿತ ನೀತಿಗಳನ್ನು ಜಾರಿಗೊಳಿಸುತ್ತಿರುವುದಕ್ಕೂ ಪರಸ್ಪರ ಸಂಬಂಧ ಇರುವುದನ್ನು ಮಾನ್ಯ ಶ್ರೀನಿವಾಸ ಪ್ರಸಾದ್ ಅವರಿಗೆ ತಿಳಿಸಿ ಹೇಳಬೇಕಿಲ್ಲ. ಅಲ್ಲವೇ ?
ತಮ್ಮ ಅಂತರಂಗದ ಅವ್ಯಕ್ತ ಭಾವನೆಯನ್ನು ರಾಜಕೀಯ ಅನಿವಾರ್ಯಗಳಿಂದ ಅದುಮಿಟ್ಟು ಮಾತನಾಡುವುದು ಹಿರಿಯ ನಾಯಕರಿಗೆ ಶೋಭೆ ತರುವಂತಹುದಲ್ಲ . ಅಂಬೇಡ್ಕರ್ ಆರಾಧನೆಗೊಳಗಾದಷ್ಟೇ ದಾಳಿಗೂ ಒಳಗಾಗುತ್ತಿರುವುದನ್ನು ಕಳೆದ ಹಲವು ದಶಕಗಳಿಂದ ನೋಡುತ್ತಲೇ ಇದ್ದೇವೆ.
ಪ್ರತಿಯೊಬ್ಬ ದಲಿತ ವ್ಯಕ್ತಿಯ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರ, ಹಲ್ಲೆ, ಆಕ್ರಮಣವೂ ಸಹ ಅಂಬೇಡ್ಕರ್ ಪ್ರತಿಪಾದಿಸಿದ ದಲಿತ ಅಸ್ಮಿತೆಯ ಮೇಲಿನ ದಾಳಿಯೇ ಅಲ್ಲವೇ ? ಇಂತಹ ಅಮಾನುಷ ದಾಳಿಗಳಿಗೆ ದಲಿತ ರಾಜಕಾರಣಿಗಳು ಹೇಗೆ ಸ್ಪಂದಿಸಿದ್ದಾರೆ ? ಇತ್ತೀಚಿನ ಇತಿಹಾಸದ ಪುಟಗಳನ್ನು ತಿರುವಿಹಾಕಿದರೆ ನಿರಾಸೆ ಮೂಡುತ್ತದೆ. ಅಧಿಕಾರ ರಾಜಕಾರಣ ಮತ್ತು ರಾಜಕೀಯ ಅವಕಾಶವಾದ, ಅಸ್ಮಿತೆಗಳನ್ನು ನುಂಗಿ ವ್ಯಕ್ತಿಗತ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನೆಲೆಗಳಾಗಿ ರೂಪುಗೊಂಡು ದಶಕಗಳೇ ಕಳೆದಿವೆ.
ಈ ರಾಜಕಾರಣದ ರಾಡಿಯಲ್ಲಿ ನಿಂತು ವಾಸ್ತವಕ್ಕೆ ಬೆನ್ನು ತಿರುಗಿಸಿ ಅನುಕಂಪದ ಮಾತುಗಳನ್ನಾಡುವುದು ಬೇಕಿಲ್ಲ. ಅಂಬೇಡ್ಕರ್ ಅವರಿಗಾಗಲೀ, ದಲಿತ ಸಮುದಾಯಗಳಿಗಾಗಲೀ ಅನುಕಂಪ, ಮರುಕ ಅಗತ್ಯವಿಲ್ಲ. ಇದು ಶತಮಾನಗಳಿಂದಲೂ ವ್ಯಕ್ತವಾಗುತ್ತಲೇ ಇದೆ. ಈಗ ಬೇಕಿರುವುದು ಸಾಮಾಜಿಕ ಘನತೆ.
ಅಂಬೇಡ್ಕರ್ ಅವರನ್ನು ಪ್ರತಿನಿಧಿಸುವ ಸ್ಥಾವರಗಳ ಮೇಲಿನ ದಾಳಿಗಳು ಈ ಘನತೆಯನ್ನು ಪ್ರಶ್ನಿಸುವ ಒಂದು ವಿಧಾನ ಎನ್ನುವುದನ್ನು ಹೇಳಬೇಕಿಲ್ಲ. ಇದು ಅಸ್ಮಿತೆಯ ಪ್ರಶ್ನೆ. ಅಸ್ತಿತ್ವದ ಪ್ರಶ್ನೆ. ದಲಿತ ಅಸ್ಮಿತೆಯನ್ನು ನುಂಗಿಹಾಕಿ ತನ್ನದೇ ಆದ ಸಾಮ್ರಾಜ್ಯವನ್ನು ನಿರ್ಮಿಸಲು ಸಜ್ಜಾಗುತ್ತಿರುವ ಮತೀಯ ಶಕ್ತಿಗಳ ಮಡಿಲಲ್ಲಿ ಕುಳಿತು ನ್ಯಾಯ ಕೇಳುವುದು, ತೋಳದ ಬೆನ್ನ ಮೇಲೇರಿ ಸಿಂಹದ ಬಳಿ ನ್ಯಾಯ ಕೇಳಿದಂತಾಗುವುದಿಲ್ಲವೇ ? ಸಂಸದರೇ ಯೋಚಿಸಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

