ನೆಲದನಿ
ದಮನಿತರ ಬದುಕಿನ ಆಶಾಕಿರಣ ಮಂಜಮ್ಮ ಜೋಗತಿಯ ಕಲಾ ಬದುಕು
ಜಾನಪದ ಸಿರಿವಂತಿಕೆ ಎಂಬುದು ಒಂದು ನಾಡಿನ ಪ್ರಾದೇಶಿಕ ವೈಶಿಷ್ಟ್ಯತೆಯ ಪ್ರತೀಕವಾಗಿರುತ್ತದೆ. ಇಂತಹ ಜಾನಪದವು ಪ್ರಾದೇಶಿಕ ಸತ್ವವನ್ನು ಅರಿಯುವುದಕ್ಕೆ, ಗುರುತಿಸುವುದಕ್ಕೆ ಸಹಕಾರಿಯಾಗುತ್ತದೆ. ಒಂದು ನಾಡಿನ ಜನರ ಜೀವಂತ ಸಾಹಿತ್ಯವಾಗಿರುವ ಜನಪದವು ಸಾಮಾನ್ಯರ ಬದುಕಿನೊಂದಿಗೆ ಬೆರೆತುಕೊಂಡಿರುತ್ತದೆ. ಇಂತಹ ಜಾನಪದಕ್ಕೂ ಬಡತನದ ಬದುಕಿಗೂ ಅವಿನಾಭಾವ ಸಂಬಂಧವಿದೆ. ಜಾನದಪ ಕಲೆಗಳು ಇಂದಿಗೂ ಜೀವಂತವಾಗಿರುವುದು ಬಡವರ ಗುಡಿಸಲುಗಳಲ್ಲೆ. ಹೀಗಾಗಿ ಜಾನಪದ ಸಿರಿವಂತಿಕೆಗೆ ಆಶ್ರಯ ತಾಣಗಳಾಗಿರುವುದು ಬಡವರ ಗುಡಿಸಲುಗಳೆ. ಆದ್ದರಿಂದ ಜಾನಪದಕ್ಕೂ ಬಡತನದ ಬದುಕಿಗೂ ಬಿಡಿಸಲಾರದ ಬಂಧವೊಂದಿದೆ. ಈ ಬಂಧವು ಚರಿತೆಯುದ್ಧಕ್ಕೂ ತನ್ನ ನಿರಂತರವಾದ ಪಯಣವನ್ನು ಮುಂದುವರೆಸಿಕೊಂಡು ಬಂದಿದೆ.
ಇಂತಹ ನಾಡಿನ ಜೀವನಾಡಿಯಾದ ಜಾನಪದ ಕಲೆಯನ್ನು ತಮ್ಮ ಬದುಕಿನ ಭಾಗವಾಗಿ ಕಾಪಾಡಿಕೊಂಡು ಬಂದವರಲ್ಲಿ ಮಂಜಮ್ಮ ಜೋಗತಿಯವರು ಒಬ್ಬರಾಗಿದ್ದಾರೆ. ಇವರು ಜಾನಪದದ ವಿವಿಧ ಪ್ರಕಾರಗಳಲ್ಲಿ ಒಂದಾಗಿರುವ ಜೋಗತಿ ನೃತ್ಯ ಹಾಗೂ ಹಾಡುಗಾರಿಕೆ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದು ಮಾತ್ರವಲ್ಲದೆ ಈ ಸಾಹಿತ್ಯ ಪ್ರಕಾರದ ಉಳಿವಿಗಾಗಿ ಅವಿರತ ಶ್ರಮವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಜಮ್ಮ ಜೊಗತಿಯು ನಾಡು ಕಂಡ ‘ಜೋಗತಿ ಸಿರಿ’ಯಾಗಿ ಕಂಡುಬರುತ್ತಾರೆ. ಇಂತಹ ಜಾನಪದ ಸಿರಿಯ ಕಲಾ ಬದುಕಿನ ಸುತ್ತ ಅಂತರ್ಗತವಾಗಿರುವ ಸಂಕಥನವನ್ನು ಗುರುತಿಸುವ ಉದ್ಧೇಶವನ್ನು ಪ್ರಸ್ತುತ ಲೇಖನವು ಒಳಗೊಂಡಿದೆ.
ಜಗತ್ತಿನ ಪ್ರತಿಯೊಂದು ಕುಟುಂಬಗಳಲ್ಲಿ ತಂದೆ ತಾಯಂದಿರು ಕೂಡ ತಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು. ಯಾರ ಮುಂದೆಯೂ ತಗ್ಗಿ ನಡೆಯುವಂತಾಗಬಾರದು ಎಂದೆಲ್ಲ ಕನಸು ಕಟ್ಟಿರುತ್ತಾರೆ. ತಮ್ಮ ಮಕ್ಕಳು ಸಮಾಜ ಘಾತುಕರಿರಲಿ, ಬರೀ ಸುಳ್ಳು ಹೇಳಿದರೂ ತಂದೆ ತಾಯಿಗಳು ಸಹಿಸಿಕೊಳ್ಳುವುದಿಲ್ಲ. ವಾಸ್ತವ ಹೀಗಿರುವಾಗ ತಮ್ಮ ವಂಶವನ್ನು ಬೆಳಗಬೇಕಾದ ಗಂಡು ಮಗ ಹೆಣ್ಣಾಗಿ ವರ್ತಿಸುತ್ತಿದ್ದಾನೆ, ಇಲ್ಲವೇ ಹೆಣ್ಣಾಗಿ ಪರಿವರ್ತನೆಯಾಗುತ್ತಾನೆ ಎಂದರೆ ಯಾರು ತಾನೇ ಸಹಿಸಿಕೊಳ್ಳಲು ಸಾಧ್ಯ. ಅದೂ ಭಾರತದಂತಹ ಸಾಂಪ್ರದಾಯಿಕ ನಾಡಿನಲ್ಲಿ ಊಹಿಸಿಕೊಳ್ಳುವುದು ಕಷ್ಟವೆ. ಇಂತಹ ಸಂಕಷ್ಟವೊಂದು ಬಾಲ್ಯದ ದಿನಗಳಲ್ಲಿ ಮಂಜಮ್ಮ ಜೋಗತಿಯ ಕುಟುಂಬವನ್ನು ಪ್ರವೇಶಿಸಿತು. ಮಂಜಮ್ಮನ ದೈಹಿಕ ಕ್ರಿಯೆಯಲ್ಲಾದ ಈ ಬದಲಾವಣೆಯು ಜೈವಿಕ ಕ್ರಿಯೆಯಾಗಿರಬಹುದು. ಆದರೆ ಸಾಂಪ್ರದಾಯಿಕ ಸಮಾಜದಲ್ಲಿ ಇದನ್ನು ನೋಡುವ ದೃಷ್ಟಿಕೋನ ತುಂಬಾ ತಮ್ಮ ಕೆಳ ಮಟ್ಟದ್ದಾಗಿರುತ್ತದೆ. ಮಂಜುನಾಥ ತನ್ನ ಜೈವಿಕ ಒತ್ತಡಗಳಿಂದ ಮಂಜಮ್ಮನಾಗುವ ಸನ್ನವೇಶದಲ್ಲಿ ಅನುಭವಿಸಿದ ಯಾತನೆಗಳು ತುಂಬಾ ತ್ರಾಸದಾಯಕವಾಗಿದ್ದವು. ಇಲ್ಲಿ ಮಂಜಮ್ಮನನ್ನು ಕಾಡಿದ, ಸಂಕಷ್ಟಕ್ಕೆ ದೂಡಿದ ಘಟನೆಗಳಿಗೆ ಮಂಜಮ್ಮನ್ನ ಕುಟುಂಬ ನೇರ ಹೊಣೆಯಲ್ಲ. ಮಂಜುನಾಥ ತನ್ನ ಸಹಜ ಜೈವಿಕ ಸ್ವಭಾವಗಳಲ್ಲಿ ಹೆಣ್ಣಾಗಿ ಪರಿವರ್ತನೆಯಾಗುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ತನ್ನ ಕುಟುಂಬಕ್ಕೆ ಸಂಪೂರ್ಣವಾದ ಅರಿವಿದೆ. ಆದರೆ ತನ್ನ ಕುಟುಂಬದ ಸುತ್ತಮುತ್ತಲಿನ ಸಮಾಜದಲ್ಲಿ ಅಪಮಾನಕ್ಕೆ ಗುರಿಯಾಗಬೇಕಾದ ಒತ್ತಡಗಳಲ್ಲಿ ಉಂಟಾದ ಸಂಘರ್ಷವೇ ಮಂಜಮ್ಮನನ್ನು ಗಂಡಸ್ಸಾಗಿಯೇ ಉಳಿಯುವಂತೆ ಒತ್ತಾಯ ನಡೆದಿವೆ. ಈ ಒತ್ತಾಯದ ಭಾಗವಾದ ಹಿಂಸೆ ಮತ್ತು ಅವಮಾನಗಳು ಅವರ ಬದುಕಿನಲ್ಲಿ ಹಲವಾರು ತಲ್ಲಣಗಳನ್ನು ಮೂಡಿಸಿವೆ.
ಮಂಜಮ್ಮ ಜೋಗತಿಯು ಶ್ರೀ ಹನುಮಂತಯ್ಯ ಶೆಟ್ಟಿ, ಶ್ರೀಮತಿ ಜಯಲಕ್ಷ್ಮೀಯವ ಪುತ್ರನಾಗಿ ಬಳ್ಳಾರಿ ಜಿಲ್ಲೆಯ ಕಲ್ಲುಕಂಬ ಗ್ರಾಮದಲ್ಲಿ ಜನಿಸಿದವರು. ಇವರ ತಂದೆ ತಾಯಿಗೆ ಇಪ್ಪತ್ತೊಂದು ಜನ ಮಕ್ಕಳಲ್ಲಿ ಮಂಜಮ್ಮ ಜೋಗತಿಯು ಒಬ್ಬರಾಗಿದ್ದರು. ಈ ಇಪ್ಪತ್ತೊಂದು ಜನ ಮಕ್ಕಳಲ್ಲಿ ಉಳಿದುಕೊಂಡಿದ್ದು ಮಾತ್ರ ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು ಮಾತ್ರ. ಈ ಇಬ್ಬರು ಗಂಡು ಸಂತಾನಗಳಲ್ಲಿ ಮಂಜಮ್ಮ (ಮಂಜುನಾಥ) ಒಬ್ಬರಾಗಿದ್ದರು. ಆದ್ದರಿಂದ ಇಲ್ಲಿ ಉಳಿದ ಎರಡು ಗಂಡು ಸಂತಾನಗಳಲ್ಲಿ ಒಬ್ಬರಾಗಿರುವ ಮಂಜುನಾಥ ಕೃಷ್ಣನಂತಾಗಿ ತಮ್ಮ ವಂಶವನ್ನು ಬೆಳಗುತ್ತಾನೆ ಎಂಬುದು ತಂದೆ ತಾಯಿಗಳ ಆದಮ್ಯ ಬಯಕೆಯಾಗಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಕೃಷ್ಣನಂತಾಗಿ ವಂಶ ಬೆಳಗಬೇಕಾದ ಮಗ ಬೃಹನ್ನಳೆಯಂತಾದಾಗ ತಂದೆ ತಾಯಿಗಳಿಗೆ ತೀವ್ರತರವಾದ ಆಘಾತವನ್ನು ಮೂಡಿತ್ತು. ತಮ್ಮ ಬಾಲ್ಯದ ದಿನಗಳಿಂದಲೆ ಮಂಜಮ್ಮ ಗಂಡು ಹುಡುಗರ ಜೊತೆಯಲ್ಲಿ ಬೆರೆಯದೆ ಹೆಚ್ಚಾಗಿ ಹುಡುಗಿಯರೊಂದಿಗೆ ಬೆರೆಯುತ್ತಿದ್ದರು. ಹೆಂಗಸರು ಮಾಡುವ ಕೆಲಸಗಳಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಸಮಾಜದ ಜನರಿಂದ ಹಲವಾರು ಕುಹಕದ ಮಾತುಗಳು ಹೊರಬಿದ್ದು, ಮಂಜಮ್ಮನ ಮನಸ್ಸನ್ನು ಘಾಸಿಗೊಳಿಸುತ್ತಿದ್ದವು. ಕೆಲವು ಹೆಣ್ಣು ಮಕ್ಕಳು “ಅವನ್ಯಾಕೆ ನಮ್ಮ ಜತೆ ಬರುತ್ತಾನೆ? ಈ ವಯಸ್ಸಿಗೆ ಅವನಿಗೇನು ಚಪಲ. ನೋಡೋಕೆ ಹೆಣ್ಣಿನಂಗಾಡ್ತಾನೆ, ಹೆಣ್ಣಿನ ಚಪಲ ಬ್ಯಾರೆ” ಎಂದೆಲ್ಲ ನೇರವಾಗಿ ನಿಂದಿಸುತ್ತಿದ್ದರು. ಆದರೆ ವಾಸ್ತವವಾಗಿ ಮಂಜುನಾಥನಲ್ಲಿ ಮಂಜವ್ವ ಒಡಮೂಡುತ್ತಿದ್ದಳು. ಆದರೆ ಈ ಸೂಕ್ಷ್ಮ ಅಳಲನ್ನು ಅರ್ಥೈಸುವ ಮನಸ್ಥಿತಿಯು ಯಾರಿಗೂ ಇರಲಿಲ್ಲ. ಇಂತಹ ಸಂದರ್ಭದಲ್ಲಿ ತನ್ನೆಲ್ಲ ನೋವುಗಳನ್ನು ತಾನೆ ನುಂಗಿಕೊಂಡು ಬದುಕಿನ ಹಾದಿಯನ್ನು ಕಂಡುಕೊಳ್ಳುವ ಸಾಹಸಮಯ ಬದುಕಿಗಾಗಿ ಮಂಜಮ್ಮ ತವಕಿಸಿದ್ದಾರೆ.
ಮಂಜಮ್ಮ ತನ್ನಲ್ಲಿ ಮೂಡಿದ ಹೆಣ್ತನವನ್ನು ಹೊತ್ತು ನಡೆಸಿದ ಹೋರಾಟದಲ್ಲಿ ಅವಮಾನಗಳೆ ಹೆಚ್ಚು. ಮಂಜಮ್ಮನ ದೇಹದಲ್ಲಿ ಒಡಮೂಡಿದ್ದು ಜೈವಿಕ ಕ್ರಿಯೆ. ಈ ಜೈವಿಕವಾದ ಬದಲಾವಣೆಯ ಒತ್ತಡದ ಭಾಗವಾಗಿ ಮಂಜಮ್ಮ ತಮ್ಮ ಹೆಣ್ತನವನ್ನು ಪ್ರದರ್ಶಿಸಿದರು. ಆದರೆ ಈ ಸಮಾಜದ ಕಣ್ಣಿಗೆ ಅದು ಸಹಜವಾದ ಜೈವಿಕ ಬದಲಾವಣೆಯಾಗಿರಲಿಲ್ಲ. ಅದನ್ನು ದೇವರಿಗೆ ಆರೋಪಿಸಲಾಯಿತು. ‘ಶೆಟ್ರು ಹುಡುಗ ಮಂಜುನಾಥನ ಮೈಯಾಗೆ ಹುಲಿಗೆಮ್ಮ ಬರಕತ್ಯಾಳೆ’ ಎಂದು ಆರೋಪಿಸಿದರು. ಆದರೆ ಇದರಿಂದ ಮಂಜಮ್ಮನ ಮೇಲೆ ಕುಟುಂಬದವರಿಂದ ಒತ್ತಡಗಳು ತೀವ್ರವಾದಾಗ ಮಂಜಮ್ಮ ಈ ಜೀವದ ಅಂತ್ಯಕ್ಕೆ ನಾಂದಿ ಹಾಡಲು ಮುಂದಾಗಿ ವಿಷ ಸೇವನೆ ಮಾಡಿದರು. ಆದರೆ ಅದೃಷ್ಟವಶತ್ ಇವರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಿದ ಪರಿಣಾಮವಾಗಿ ಬದುಕುಳಿದರು. ದಾವಣಗೆರೆಯ ಸರ್ಕಾರಿ ಆಸ್ಪತ್ರೆಗೆ ಇವರನ್ನು ಸೇರಿಸಿದ ನಂತರ ಇವರ ಯೋಗಕ್ಷೇಮ ನೋಡಿಕೊಳ್ಳಲು ಯಾರು ಮುಂದೆ ಬರುವುದಿಲ್ಲ. ಇಂತಹ ಸಂದಿಗ್ಧ ಸಂದರ್ಭದಲ್ಲಿ ತನ್ನ ಜೀವನ ಹಾಗೂ ಹಸಿವನ್ನು ಪೂರೈಸಿಕೊಳ್ಳುವುದಕ್ಕಾಗಿ ಆಸ್ಪತ್ರೆಯ ರೋಗಿಗಳ ಎದುರು ದೇವಿಯ ಹಾಡು ನೃತ್ಯ ಮಾಡಿ ಜೀವನವನ್ನು ಸಾಗಿಸಿದರು. ನಂತರದಲ್ಲಿ ಸಂಪ್ರದಾಯದಂತೆ ದೇವಿಯ ದೀಕ್ಷೆ ತೆಗೆದುಕೊಂಡು ಮನೆಯಿಂದ ಹೊರ ನಡೆದ ಮಂಜವ್ವ ದಾವಣಗೆರೆಯಲ್ಲಿ ಪ್ರತ್ಯೇಕವಾದ ವಾಸ್ತವ್ಯ ಹೂಡಿದರು. ಹಲವು ಕಡೆ ನಡೆಯುವ ಸಂತೆ, ಜಾತ್ರೆಗಳಲ್ಲಿ ದೇವಿಯನ್ನು ಹೊತ್ತೊಯ್ದು ತನ್ನ ಜೀವನ ನಿರ್ವಹಣೆಗೆ ಮುಂದಾದರು.

ಮನೆಯಿಂದ ಹೊರಬಂದ ಮಂಜಮ್ಮ ತನ್ನ ಜೀವನವನ್ನು ತಾನು ಸಾಗಿಸಿಕೊಂಡು ಸ್ವಲ್ಪ ನೆಮ್ಮದಿಯನ್ನು ಕಂಡುಕೊಳ್ಳುವ ಸಂದರ್ಭದಲ್ಲಿ ಇವರ ಬದುಕನ್ನು ಘಾಸಿಗೊಳಿಸುವಂತಹ ಘಟನೆಯೊಂದು ನಡೆದು ಹೋಗಿತ್ತು. ತಾನು ಸಂಗ್ರಹಿಸಿದ ಹಣವನ್ನೆಲ್ಲ ಕೂಡಿಟ್ಟುಕೊಂಡು ಮನೆ ಬಾಡಿಗೆ ಕಟ್ಟಲು ಸಿದ್ಧ ಮಾಡಿಕೊಂಡು ಬರುವಾಗ ದಾವಣಗೆರೆಯ ಹೈಸ್ಕೂಲು ಮೈದಾನದಲ್ಲಿ ಇವರ ಮೇಲೆ ಪುಢಾರಿಗಳ ಗುಂಪೊಂದು ಅತ್ಯಾಚಾರಕ್ಕೆ ಮುಂದಾಗಿ, ಸೀರೆ ಉಟ್ಟ ಗಂಡು ದೇಹದ ಮೇಲೆ ದೌರ್ಜನ್ಯವೆಸಗಿ, ಇವರ ಬಳಿಯಿದ್ದ ಹಣವನ್ನೆಲ್ಲ ಕಸಿದುಕೊಳ್ಳುತ್ತಾರೆ. ಈ ಘಟನೆಯಿಂದ ಇವರಲ್ಲಿ ತೀವ್ರ ಮುಜುಗರ ಉಂಟಾಗುತ್ತದೆ. ಈ ಎಲ್ಲಾ ಘಟನೆಗಳನ್ನು ಮೆಟ್ಟಿನಿಂತ ಮಂಜಮ್ಮ ಸಾಧಿಸುವ ಛಲವೊತ್ತು ಮುನ್ನಡೆಯುತ್ತಾರೆ.
ಮಂಜಮ್ಮ ನಿರಂತರವಾಗಿ ತನ್ನ ಬದುಕಿನ ಹೋರಾಟವನ್ನು ಮುಂದುವರೆಸಿಕೊಂಡು ಬಂದವರು. ಇವರು ದೇವತೆಯ ದೀಕ್ಷೆ ಪಡೆದು ಮನೆಯಿಂದ ಹೊರಬಂದ ಸಂದರ್ಭದಲ್ಲಿ ಜೀವನವು ತುಂಬಾ ದುಸ್ತರವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಂಜಮ್ಮ ಆಯ್ದುಕೊಂಡಿದ್ದು ಸ್ವಾಭಿಮಾನದ ಬದುಕಿಗೆ ಪೂರಕವಾದ ಕಲೆಯನ್ನು. ಆರಂಭಿಕ ಹಂತದ ಈ ಕಲೆಗೆ ಪ್ರಚೋದಕ ಶಕ್ತಿಯಾದವರು ಬಸಪ್ಪನವರು. ಈ ಗುರುವಿನ ಆಶ್ರಯ ಪಡೆದು, ಅವರ ಶಿಷ್ಯಳಾಗಿ ಶಿರಸಾವಹಿಸಿ ದುಡಿದ ಮಂಜಮ್ಮ ನಂತರ ದಿನಗಳಲ್ಲಿ ಈ ಕಲೆಯೊಂದಿಗೆ ತನ್ನ ನಿರಂತದ ಬಂಧವನ್ನು ಕಾಯ್ದುಕೊಳ್ಳುತ್ತಾರೆ. ನಂತರದ ದಿನಗಳಲ್ಲಿ ಹಲವಾರು ಏಳುಬೀಳುಗಳನ್ನು ಅನುಭವಿಸಿದ ಮಂಜಮ್ಮ ಜೋಗತಿ ಮುಂದೆ ಕಾಳವ್ವ ಜೋಗತಿಯನ್ನು ಗುರುವಾಗಿ ಪಡೆಯುತ್ತಾಳೆ. ಈ ಕಾಳವ್ವ ಜೋಗತಿಯು ಮಂಜವ್ವನಿಗೆ ಕೇವಲ ಗುರುವಾಗಿರುವುದಿಲ್ಲ. ಅದರಾಚೆ ತಂದೆ ತಾಯಿ, ಬಂಧು ಬಳಗ ಮತ್ತು ಸರ್ವಸ್ವವಾಗಿಯೂ ಮಂಜವ್ವನಿಗೆ ಅಭಯ ನೀಡುತ್ತಾರೆ. ಕಾಳವ್ವ ಜೋಗತಿಯಿಂದ ಒಂದು ನೆಲೆಯನ್ನು ಕಂಡುಕೊಂಡ ಮಂಜವ್ವ ಜೋಗತಿಯು ತನ್ನ ಬದುಕಿಗಾಗಿ ಸ್ವಾರ್ಥವನ್ನು ಬೆಳೆಸಿಕೊಳ್ಳದೆ, ತನ್ನ ಗುರು ಕಾಳವ್ವ ಜೋಗತಿಯ ಮಾರ್ಗದರ್ಶನದಲ್ಲಿ ತನ್ನಂತೆ ಸಮಾಜ ಮತ್ತು ಕುಟುಂಬದಿಂದ ವಂಚಿತರಾದ ಹಲವಾರು ಅಬಲರಿಗೆ ಆಶ್ರಯ ನೀಡುವ ಮಹಾತಾಯಿಯಾಗಿ ದುಡಿಯುತ್ತಾರೆ.
ಮಂಜಮ್ಮನದು ಯಾವಾಗಲೂ ಒಂಟಿ ಬದುಕಲ್ಲ. ಮಂಜವ್ವ ಎಂಬುದೇ ಕೂಡು ಕುಟುಂಬದ ಮೂರ್ತ ಸ್ವರೂಪ. ಈ ಮಹಾತಾಯಿಯದು ಮಾತೃ ಹೃದಯ. ಕಷ್ಟ ಎಂದು ಬಂದವರಿಗೆ ಅಭಯ ನೀಡಿ ಆಶ್ರಯ ಕಲ್ಪಿಸುವುದೆ ಈ ತಾಯಿಯ ಗುಣವಾಗಿದೆ. ಮಂಜಮ್ಮ ತಾನು ಅನುಭವಿಸಿದ ಎಲ್ಲಾ ಸಂಕಷ್ಟಗಳನ್ನು ಎಂದು ಮರೆತವರಲ್ಲ. ಹೀಗಾಗಿ ಸಮಾಜದಲ್ಲಿ ಮಂಗಳಮುಖಿಯರು ಅನುಭವಿಸುತ್ತಿರುವ ಯಾತನೆಯ ಬಿಸಿಯನ್ನು ಸ್ವತಃ ಅನುಭವಿಸಿದವರಾಗಿದ್ದಾರೆ. ಹೀಗಾಗಿ ಯಾವುದೇ ಮಂಗಳಮುಖಿಯರು ಸಮಾಜದಿಂದ ತಿರಸ್ಕರಿಸಲ್ಪಟ್ಟಿದ್ದರು ಕೂಡ ಅಂತಹವರಿಗೆ ಆಶ್ರಯ ಕಲ್ಪಿಸಿಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ದೀನ ದಲಿತರಿಗೆ ಆಶ್ರಯಧಾತರಾಗಿ ಮಂಜಮ್ಮ ತಮ್ಮ ಸೇವೆಯನ್ನು ನೀಡುತ್ತಿದ್ದಾರೆ. ಮಂಜಮ್ಮ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ಪುಟ್ಟ ಮನೆಯೊಂದನ್ನು ನಿರ್ಮಿಸಿಕೊಂಡು ದಮನಿತರ ಸೇವೆಯನ್ನು ಮಾಡುವ ಕಾಯಕದಲ್ಲಿ ಸದಾ ತಲ್ಲಿನರಾಗಿದ್ದಾರೆ. ಇದು ಅವರ ಮಾತೃ ಮೌಲ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ.
ಮಂಜಮ್ಮನದು ಬಹುಮುಖಿ ವ್ಯಕ್ತಿತ್ವ. ಯಾವುದೆ ಒಂದು ಕಾರ್ಯದಲ್ಲಿ ಮಾತ್ರ ತನ್ನನ್ನು ತೊಡಗಿಸಿಕೊಂಡು ಸುಮ್ಮನಿರುವವರಲ್ಲ. ಕಲಾ ಕ್ಷೇತ್ರಕ್ಕೆ ಬಂದರೆ ಅವರು ಒಬ್ಬ ಜೋಗತಿಯಾಗಿ, ದೇವತೆಯನ್ನು ಆರಾಧಿಸುವುದರೊಂದಿಗೆ, ಜೋಗತಿ ನೃತ್ಯದಲ್ಲಿ ತನ್ನದೆ ಆದ ಛಾಪು ಮೂಡಿಸಿದ ಕೀರ್ತಿ ಇವರದಾಗಿದೆ. ಜೋಗತಿ ನೃತ್ಯದಲ್ಲಿನ ಇವರ ಸಾಧನೆಯು ಇವರನ್ನು ಉತ್ತುಂಗ ಶಿಖರದತ್ತ ಕೊಂಡೊಯ್ದಿದೆ. ಈ ಜೋಗತಿ ಕಲೆಯು ಅವಸಾನದ ಅಂಚಿನಲ್ಲಿರುವಾಗ ಇದಕ್ಕೆ ಮರುಜೀವ ನೀಡಿದವರು ಮಂಜಮ್ಮ ಎಂದರೆ ತಪ್ಪಾಗಲಾರದು. ಈ ಜೋಗತಿ ಕಲೆಯನ್ನು ಪ್ರಚಾರಾತ್ಮಕವಾದ ನೆಲೆಯಲ್ಲಿ ಹಲವಾರ ಸಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಇದನ್ನು ಬಳಸಿಕೊಂಡ ಕೀರ್ತಿಗೆ ಇವರು ಭಾಜನರಾಗಿದ್ದಾರೆ. ಆಧುನಿಕ ಸಂಗೀತಾ ಮತ್ತು ನೃತ್ಯಗಳ ಪ್ರಭಾವದಿಂದ ಮೂಲೆಗುಂಪಾಗಿದ್ದ ಮತ್ತು ಯುವಜನತೆ ಮನದ ಮೂಸೆಯಿಂದ ಮರೆಯಾಗುತ್ತಿದ್ದ ಈ ಜೋಗತಿ ನೃತ್ಯ ಮತ್ತು ಕಲೆಯನ್ನು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಮೂಲಕ ಪ್ರದರ್ಶನ ನೀಡಿ, ಇದರ ಬಗೆಗೆ ಅರಿವು ಮೂಡಿಸುವಲ್ಲಿ ಮಂಜಮ್ಮ ಜೋಗತಿಯ ಕಾಣ್ಕೆಯು ಅಪಾರವಾಗಿದೆ. ಹಾಗೆಯೇ ಈ ಜೋಗತಿ ನೃತ್ಯವನ್ನು ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಈ ಕಲೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನೆಲೆಯಲ್ಲಿ ತಮ್ಮ ಹೋರಾಟವನ್ನು ಮಂಜಮ್ಮ ಮುಂದುವರೆಸಿಕೊಂಡು ಬಂದಿದ್ದಾರೆ.
ಮಂಜಮ್ಮನ ಕಲಾಸೇವೆ ಜೋಗತಿ ನೃತ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಅದರಾಚೆ ನಾಟಕ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದೆ. ಆರಂಭಿಕ ಹಂತದಲ್ಲಿ ತಮ್ಮ ಹಸಿವನ್ನು ನೀಗಿಸಲು ದೇವಿಯ ಮಹಾತ್ಮೆಯನ್ನು ಪ್ರಧಾನವಾಗಿಟ್ಟುಕೊಂಡು ಬೀದಿ ನಾಟಕಗಳನ್ನು ಪ್ರದರ್ಶನ ಮಡುವ ಮೂಲಕ ಜೀವನವನ್ನು ಆರಂಭಿಸಿದ ಮಂಜಮ್ಮ ಜೋಗತಿಯು ರೇಣುಕೆಯ ಪಾತ್ರಕ್ಕೆ ಜೀವ ತುಂಬಿದರು. ಹೀಗೆ ಬೀದಿ ನಾಟಕಗಳ ಮೂಲಕ ಪ್ರದರ್ಶನವನ್ನು ಆರಂಭಿಸಿದ ಮಂಜಮ್ಮ ಸಾಮಾಜಿಕ ಅರಿವು ಮೂಡಿಸುವ ನೆಲೆಯಲ್ಲಿ ಏಡ್ಸ್, ಮಲೇರಿಯಾ, ಪೋಲಿಯೊ, ಸ್ವಚ್ಚತೆಯ ಅರಿವು ಮೂಡಿಸುವ ಹಲವಾರು ನಾಟಕಗಳನ್ನು ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಹಾಗೆಯೇ ಮುಂದುವರೆದು ಹಲವಾರು ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರಧಾರಿಯಾಗಿ ತನ್ನ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ದೃಢ ದೇಹಕಾಯರಾದ ಮಂಜಮ್ಮ ಭೀಮ, ದುರ್ಯೋಧನ, ಹಿರಣ್ಯಕಶ್ಯಪು ಪಾತ್ರಗಳ ಮೂಲಕ ಪುರುಷ ಪಾತ್ರಧಾರಿಗಳು ನಾಚುವಂತೆ ಪ್ರದರ್ಶನ ನೀಡುತ್ತ ಬಂದಿದ್ದಾರೆ. ಹೀಗೆ ಮುಂದುವರೆದ ಇವರ ಸಾಧನೆಯು ಇಂದಿಗೂ ತನ್ನ ಜೀವಂತಿಕೆಯನ್ನು ಕಾಯ್ದುಕೊಂಡಿದ್ದು, ಹಲವಾರು ನಾಟಕಗಳ ಪ್ರದರ್ಶನದ ಜೊತೆಗೆ ಯುವ ಸಮುದಾಯಕ್ಕೆ ನಾಟಕ ತರಬೇತಿ ನೀಡುವ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಜೋಗತಿ ನೃತ್ಯ ಮತ್ತು ನಾಟಕ ಕ್ಷೇತ್ರಗಳಲ್ಲಿ ಮಂಜಮ್ಮನ ಸಾಧನೆಯು ಅಪಾರವಾದುದಾಗಿದೆ.
ಮಂಜಮ್ಮ ಗಂಡಾಗಿ ಹುಟ್ಟಿ ಹೆಣ್ಣಾಗಿ ಪರಿವರ್ತನೆಯಾದವರು. ಇದು ಅವರ ದೇಹದಲ್ಲಾದ ಜೈವಿಕ ಬದಲಾವಣೆ. ಆದರೆ ಈ ಜೈವಿಕ ಕ್ರಿಯೆಯಿಂದ ಉಂಟಾದ ಬದಲಾವಣೆಯ ಪರಿಣಾಮವಾಗಿ ಸಮಾಜದಲ್ಲಿ ಹಲವಾರು ಸಂಕಷ್ಟಗಳನ್ನು ಅನುಭವಿಸಿದರು. ಈ ಸಂಕಷ್ಟಗಳು ಅತಿಯಾದಾಗ ಸಾವಿಗೆ ಶರಣಾಗಲು ಮುಂದಾದರು. ಆದರೆ ಸಾವನ್ನು ಜಯಿಸಿದ ಮಂಜಮ್ಮ ಇಂದು ಸಾಧನೆಯ ಶಿಖರದಲ್ಲಿದ್ದಾರೆ. ಅಂದು ತಾವು ಹೆಣ್ಣಾಗಿ ಮನೆಯನ್ನು ತೊರೆದಾಗ ಒಂದು ಕಾಟನ್ ಸೀರೆ ಮಾತ್ರ ಇವರ ಬಳಿ ಇದ್ದಿದ್ದು. ಆದರೆ ಈ ಬಡತನಕ್ಕೆ ಅಂಜದ ಮಂಜಮ್ಮ ನಿಷ್ಠೆ ಮತ್ತು ಪ್ರಾಮಾಣಿಕತೆಯ ಮೂಲಕ ಇಂದು ಸಮಾಜದಲ್ಲಿ ಉತ್ತಮವಾದ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಅಂದು ಕೇವಲ ಒಂದು ಸೀರೆಯನ್ನುಟ್ಟು ಹೊರಬಂದ ಈ ಮಹಾತಾಯಿಯು ಇಚಿದು ತನ್ನಲ್ಲಿ ಹಲವಾರು ಸೀರೆಗಳು ಇರುವುದನ್ನು ನೆನೆದು ಸಂತೋಷ ಪಡುತ್ತಾರೆ. ಮಂಜಮ್ಮ ಆಸ್ತಿಪಾಸ್ತಿಯನ್ನು ಸಂಪಾದಿಸಿದವರಲ್ಲ. ದೀನ ದಲಿತರ ಹಾರೈಕೆ ಮತ್ತು ಅವರ ಪ್ರೀತಿಯನ್ನು ಸಂಪಾದಿಸುವುದೆ ಆಸ್ತಿಯೆಂದು ಭಾವಿಸಿದವರು. ಸೀರೆಯೊಂದಿಗಿನ ಇವರ ನಂಟು ಹೆಣ್ತನದ ಪ್ರತಿರೂಪವಾಗಿದೆ. ಇದರೊಂದಿಗಿನ ಅವರ ನಂಟು ಭಾವನಾತ್ಮಕ ಸ್ವರೂಪದಿಂದ ಕೂಡಿದೆ.
ಮಂಜಮ್ಮನವರ ಕಲಾಕ್ಷೇತ್ರದ ಸಾಧನೆಗಾಗಿ ಕರ್ನಾಟಕ ಸರ್ಕಾರವು ನೀಡುವ ಉನ್ನತ ಪುರಸ್ಕಾರವಾಗಿರುವ ‘ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯು ಇವರ ಮುಡಿಗೇರಿದೆ. ಹಾಗೆಯೇ ಇವರ ಕಲಾಸೇವೆ ಹಾಗೂ ಸಾಮಾಜಿಕ ಕಳಕಳಿಯನ್ನು ಗಮನಿಸಿದಂತಹ ಹಲವಾರು ಸಂಘ ಸಂಸ್ಥೆಗಳು ಹಲವಾರು ಪುರಸ್ಕಾರ ಹಾಗೂ ಸನ್ಮಾನದ ಮೂಲಕವಾಗಿ ಇವರನ್ನು ಗೌರವಿಸಿವೆ. ಸಾಧನೆಗೆ ಹೆಣ್ಣು ಗಂಡು, ಮೇಲು ಕೀಳು, ಶ್ರೇಷ್ಠ ಕನಿಷ್ಟವೆಂಬ ಯಾವುದೇ ಅಡ್ಡಿ ಆತಂಕಗಳಿಲ್ಲ. ಸಾಧಿಸುವ ಛಲವೊಂದಿದ್ದರೆ ಎಂಥ ಪರ್ವತವನ್ನು ಶ್ರಮದ ಮೂಲಕ ಹೇರಿ ಸಾಧಿಸಬಹುದು ಎಂಬುದನ್ನು ಮಂಜಮ್ಮ ಸಾಧಿಸಿ ತೋರಿಸಿದ್ದಾರೆ. ಮಂಜಮ್ಮನದು ಸದಾ ತುಡಿಯುವ ಮಾತೃ ಹೃದಯ. ಈ ಮಹಾತಾಯಿಯ ಮಾತೃ ಹೃದಯವು ಕೇವಲ ದಮನಿತ ಸಮುದಾಯದ ಮಾನವ ಲೋಕಕ್ಕೆ ಮಾತ್ರ ಮಿಡಿಯುತ್ತ ಬಂದಿಲ್ಲ. ಅದರಾಚೆಗಿನ ಪ್ರಾಣಿ ಪಕ್ಷಿ ಸಂಕುಲಕ್ಕೂ ತನ್ನ ಅಂತಃಕರಣದ ತುಡಿತವನ್ನು ವ್ಯಕ್ತಪಡಿಸಿಕೊಂಡು ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಈ ತಾಯಿಯು ತನ್ನ ಕುಟೀರದೊಳಗೆ ವಿವಿಧ ಪ್ರಾಣಿ ಸಂಕುಲಕ್ಕೆ ಆಶ್ರಯ ನೀಡಿ, ತನ್ನ ಮಕ್ಕಳಂತೆ ಪ್ರೀತಿಯುಣಿಸುತ್ತಾ ಬಂದು, ಅವುಗಳ ನೋವಿಗೆ ಮಿಡಿದಿದ್ದಾರೆ. ಮಂಜಮ್ಮ ಎಂಬ ಈ ಮಹಾತಾಯಿಯು ತನ್ನಂತೆ ಹಲವಾರು ಮಂಗಳಮುಖಿಯರಿಗೆ ಆಶ್ರಯ ನೀಡುವುದರ ಜೊತೆಗೆ, ಆಶ್ರಯ ಕಳೆದುಕೊಂಡ ವೃದ್ಧರು ಹಾಗೂ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಅನಾಥ ಮಕ್ಕಳಿಗೆ ಆಶ್ರಯಧಾತೆಯಾಗಿ ತನ್ನ ಮಾತೃ ಶ್ರೀಮಂತಿಕೆಯನ್ನು ಹಾಗೂ ತಾಯ್ತನವನ್ನು ಹೆಚ್ಚಿಸಿಕೊಂಡಿದ್ದಾರೆ. ಇದು ಮಂಜಮ್ಮ ಜೋಗತಿಯ ಬದುಕಿನ ಕಿರು ಪರಿಚಯ ಮಾತ್ರವಾಗಿದೆ. ಇವರ ಸಾಧನೆಯು ನಿಸ್ವಾರ್ಥದಿಂದ ಕೂಡಿದ್ದು, ಮಾತು ಕೃತಿಯಾಗಿ, ಕಾರ್ಯವಾಗಿ ಹೊರಹೊಮ್ಮಿದೆ. ಆದ ಕಾರಣ ಇವರನ್ನು, ಇವರ ಕಾರ್ಯವನ್ನು ಎಷ್ಟು ವರ್ಣಿಸಿದರೂ ಅತಿಶಯೋಕ್ತಿಯಾಗಲಾರದು. ಮಂಜಮ್ಮ ಜೋಗತಿಯೆಂಬ ಈ ಮಹಾತಾಯಿಯು ಕಲಾಕ್ಷೇತ್ರಕ್ಕೆ ಇನ್ನಷ್ಟು ಸೇವೆಯನ್ನು ನೀಡಲಿ, ಇವರ ಸಾಮಾಜಿಕ ಕಳಕಳಿ ಸದಾ ಹೀಗೆ ಮುಂದುವರೆಯುವಂತಹ ಆರೋಗ್ಯವನ್ನು ದೇವರು ಕರಣಿಸಲಿ ಎಂಬುದೆ ನಮ್ಮ ಹಾರೈಕೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ1 day agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ1 day agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!




