Connect with us

ಬಹಿರಂಗ

ದೇವರಿಗೊಂದು ಮಂದಿರ ಕಟ್ಟಿ , ಸ್ವರ್ಗಕ್ಕೊಂದು ರೈಲು ಹಾಕಿದಾಗ..?

Published

on

ಎಡ್ಮಂಡ್ ಬ್ರೂಕ್ ಎಂಬ ವ್ಯಕ್ತಿಯಿದ್ದನು. ಆತನಿಗೆ ದೇವರ ಮೇಲೆ ನಂಬಿಕೆಯೇ ಇರಲಿಲ್ಲ. ಆದರೂ ಪ್ರತಿ ಭಾನಿವಾರ ಆತ ಚರ್ಚ್ ಗೆ ಹೋಗಿ ಅಲ್ಲಿನ ಫಾದರ್ ಬೋಧನೆಗಳನ್ನು ಕೇಳುತ್ತಿದ್ದನು. ಇದನ್ನು ಕಂಡ ಒಬ್ಬ ವ್ಯಕ್ತಿ ” ನಿನಗೆ ದೇವರ ಮೇಲೆ ನಂಬಿಕೆಯೇ ಇಲ್ಲ. ಹಾಗಿರುವಾಗ ಚರ್ಚಿಗೆ ಬರುವುದಾದರೂ ಏತಕ್ಕೆ ?” ಎಂದು ಕೇಳುತ್ತಾನೆ. ಅದಕ್ಕೆ ಎಡ್ಮಂಡ್ ಬ್ರೂಕ್ ” ನನಗೆ ನಂಬಿಕೆಯಿಲ್ಲ. ಆದರೆ ಈ ಫಾದರ್ ತುಂಬಾ ಅದ್ಬುತವಾದ ವ್ಯಕ್ತಿ.

ಏಕೆಂದರೆ ಈತನು ದೇವರ ಮೇಲೆ ಇಟ್ಟ ನಂಬಿಕೆಯಲ್ಲೂ ಈತ ತುಂಬಾ ಒಳ್ಳೆಯ ಮಾತುಗಳಿಂದ ಒಳ್ಳೆಯದನ್ನು ಪ್ರೇರೇಪಿಸುತ್ತಾನೆ.‌ ನಾನು ನಾಸ್ತಿಕ , ಈತ ಆಸ್ತಿಕ. ಈತನ ನಂಬಿಕೆ ಮೌಡ್ಯವಾಗಿರಬಹುದು, ತಪ್ಪಾಗಿರಬಹುದು. ಅದು ನನಗೆ ಮುಖ್ಯವಲ್ಲ ಬದಲಿಗೆ ಆತ ಮಾಡುತ್ತಿರುವ ಕೆಲಸ ತುಂಬಾ ಸುಂದರವಾಗಿದೆ. ಮೌಡ್ಯವಿದ್ದರೂ ಆತ ಒಳ್ಳೆಯದನ್ನು ಒಲಿಸಿಕೊಂಡಿದ್ದಾನೆ. ಅದೇ ನನಗೆ ಮುಖ್ಯ. ಆದ್ದರಿಂದಲೇ ನಾನು ಪ್ರತಿ ಭಾನುವಾರ ಆತನ ಮಾತುಗಳನ್ನು ಕೇಳಲು ಬರುತ್ತೇನೆ” ಎಂದನು.

ಹೀಗೆ ಕೆಲವು ದಿನಗಳ ನಂತರ ಫಾದರ್ ತನ್ನ ಬೋಧನೆಯಲ್ಲಿ ” ಯಾರು ಒಳ್ಳೆಯ ಗುಣ, ನಡತೆ ಮತ್ತು ದೇವರ ಮೇಲೆ ನಂಬಿಕೆ ಹೊಂದಿರುತ್ತಾರೋ , ಅವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ” ಎಂದು ಹೇಳುತ್ತಾರೆ. ಇದನ್ನು ಕೇಳಿಸಿಕೊಂಡ ಎಡ್ಮಂಡ್ ಬ್ರೂಕ್ ಬೋಧನೆ ಮುಗಿದ ನಂತರ ಫಾದರ್ ಅನ್ನು ಭೇಟಿ ಮಾಡಿ ” ನೀವು ಬೋಧಿಸುತ್ತಾ ಒಂದು ಮಾತು ಹೇಳಿದ್ದೀರಿ.

ಯಾರು ಒಳ್ಳೆಯ ಗುಣ, ನಡತೆ ಮತ್ತು ದೇವರ ಮೇಲೆ ನಂಬಿಕೆ ಹೊಂದಿರುತ್ತಾರೋ ಅವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎಂದು. ಹಾಗಾದರೆ ಒಳ್ಳೆಯ ಗುಣ, ನಡತೆ ಇದ್ದು ದೇವರ ಮೇಲೆ ನಂಬಿಕೆ ಇಲ್ಲದಿದ್ದವರು ಎಲ್ಲಿಗೆ ಹೋಗುತ್ತಾರೆ?.

ಸ್ವರ್ಗಕ್ಕಾ ಅಥವಾ ನರಕಕ್ಕಾ?. ಒಂದು ವೇಳೆ ಒಳ್ಳೆಯ ಗುಣ,ನಡೆತೆಯೇ ಮುಖ್ಯವಾದರೆ ದೇವರ ಮೇಲೆ ನಂಬಿಕೆ ಏಕೆ ಬೇಕು? ಅಥವಾ ದೇವರ ಮೇಲೆ ನಂಬಿಕೆ ಮಾತ್ರ ಇದ್ದರೆ ಸಾಕು ಎನ್ನುವುದಾದರೆ ಒಳ್ಳೆಯ ಗುಣ, ನಡತೆಗಳ ಅಗತ್ಯವಾದರೂ ಏನು?. ಈ ಗೊಂದಲವನ್ನು ನೀವು ಬಿಡಿಸಿ ಹೇಳಿ” ಎಂದು ಕೇಳುತ್ತಾರೆ.

ಇಂತಹಾ ಪ್ರಶ್ನೆ ನಿರೀಕ್ಷಿಸದ ಫಾದರ್ ಸ್ವಲ್ಪ ಗೊಂದಲಕ್ಕೆ ಒಳಗಾಗಿ ” ನನಗೆ ಒಂದು ವಾರ ಸಮಯ ಕೊಡಿ. ನಾನು ಈ ಕುರಿತು ಪರಿಶೀಲಿಸಿ ಹೇಳುತ್ತೇನೆ” ಎಂದರು. ಸರಿ ಎಂದು ಎಡ್ಮಂಡ್ ಕೂಡಾ ಅಲ್ಲಿಂದ ಹೊರಡುತ್ತಾರೆ. ಈ ಒಂದು ವಾರದ ಕಾಲ ಫಾದರ್ ಗೆ ಹೆಚ್ಚು ಒತ್ತಡವನ್ನು ತರುತ್ತದೆ.

ಬೈಬಲಿನ ಎಲ್ಲಾ ಪುಟ ಪುಟವೂ ಓದುತ್ತಾರೆ. ಪುನಃ ಪುನಃ ಮರುಪರೀಕ್ಷಿಸುತ್ತಾರೆ. ಕೊನೆಗೂ ಸಮಾಧಾನಕರವಾದ ಉತ್ತರ ದೊರೆಯುವುದಿಲ್ಲ. ಕೊನೆಗೆ ಉತ್ತರಿಸಲೇಬೇಕಾದ ದಿನವೂ ಬರುತ್ತದೆ. ಅದೇ ಸಮಯದಲ್ಲಿ ಬೋಧನೆಗೂ ಮೊದಲು ಸ್ವಲ್ಪ ವಿಶ್ರಾಂತಿಯಲ್ಲಿ ಕುಳಿತಿದ್ದ ಫಾದರ್ ಉತ್ತರದ ಗುಂಗಿನಲ್ಲೇ ಹಾಗೇ ನಿದ್ದೆಗೆ ಜಾರುತ್ತಾರೆ. ನಿದ್ದೆಯಲ್ಲಿ ಒಂದು ಕನಸು ಕೂಡಾ ಬರುತ್ತದೆ.

ಕನಸಿನಲ್ಲಿ ಫಾದರ್ ಒಂದು ರೈಲಿನಲ್ಲಿ ಪ್ರಯಾಣಿಸುತ್ತಿರುತ್ತಾರೆ. ಕೂಡಲೇ ಅಲ್ಲಿದ್ದವರನ್ನು ಕುರಿತು ” ಈ ರೈಲು ಎಲ್ಲಿಗೆ ಹೋಗುತ್ತಿದೆ?” ಎಂದು ಕೇಳುತ್ತಾನೆ. ಅಲ್ಲಿದ್ದವರು ” ಸ್ವರ್ಗಕ್ಕೆ” ಎಂದು ಹೇಳುತ್ತಾರೆ. ಫಾದರ್ ” ತುಂಬಾ ಸಂತೋಷ, ಒಳ್ಳೆಯದಾಯ್ತು” ಎಂದು ಸಂತೋಷಗೊಳ್ಳುತ್ತಾನೆ. ಕೂಡಲೇ ಅಲ್ಲಿದ್ದವರನ್ನು ” ಇಷ್ಟಕ್ಕೂ ಇವರೆಲ್ಲಿ?. ಅದೇ ಸಾಕ್ರೆಟಿಸ್ ನಂತಹವರು. ಒಳ್ಳೆಯ ಗುಣ, ನಡತೆ ಹೊಂದಿರುತ್ತಾರೆ.

ಆದರೆ ದೇವರ ಮೇಲೆ ನಂಬಿಕೆ ಇಲ್ಲದಂತವರು?” ಕೇಳುತ್ತಾನೆ. ಅವರು ” ಗೊತ್ತಿಲ್ಲ. ಈ ರೈಲಿನಲ್ಲಂತೂ ಇಲ್ಲ” ಎಂದು ಹೇಳುತ್ತಾರೆ. ಅಷ್ಟರಲ್ಲಿ ಸ್ವರ್ಗ ತಲುಪುತ್ತಾರೆ. ಆದರೆ ಚರ್ಚಿನ ಫಾದರ್ ಗೆ ಸ್ವರ್ಗ ಅಷ್ಟಾಗಿ ಹಿಡಿಸಲಿಲ್ಲ. ಸ್ವರ್ಗ ತುಂಬಾ ನೀರಸವಾಗಿದೆ, ಹಾಳಾದಂತಿದೆ, ಅಷ್ಟು ಆಕರ್ಷಕವಾಗಿರಲಿಲ್ಲ. ಹಾಗಾಗಿ ಫಾದರ್ ಪುನಃ ನರಕಕ್ಕೆ ಹೋಗುವ ರೈಲು ಬರುವುದನ್ನು ನೋಡಿ ಹತ್ತುತ್ತಾರೆ. ನರಕಕ್ಕೆ ಹೋದ ತಕ್ಷಣ ಫಾದರ್ ಗೆ ತುಂಬಾ ಆಶ್ಚರ್ಯವಾಗುತ್ತದೆ.

ಎಲ್ಲಿ ನೋಡಿದರೂ ದೊಡ್ಡ ಮರಗಳು, ಹಸಿರಿನಿಂದ ಕಂಗೊಳಿಸುತ್ತಾ ತುಂಬಾ ಸಂತೋಷದಿಂದ ತುಂಬಿರುತ್ತದೆ. ಅನುಮಾನಗೊಂಡ ಫಾದರ್ ಅಲ್ಲಿದ್ದ ಕೆಲವರನ್ನು “ಇದು ನಿಜವಾಗಿಯೂ ನರಕವೇ? ” ಎಂದು ಕೇಳುತ್ತಾರೆ. ” ಹೌದು” ಎಂದು ಉತ್ತರ ಸಿಗುತ್ತದೆ. ಹಾಗೇ ” ಇಲ್ಲಿ ಸಾಕ್ರೆಟಿಸ್ ಇದ್ದಾನಾ?” ಎಂದು ಅನುಮಾನದಿಂದ ಪ್ರಶ್ನಿಸುತ್ತಾನೆ. ಅದಕ್ಕೆ ಅವರು ” ಅಗೋ ಅಲ್ಲಿ ಹೊಲದಲ್ಲಿ ಕೆಲಸ ಮಾಡ್ತಾ ಇದ್ದಾನೆ” ಎಂದು ತೋರಿಸುತ್ತಾರೆ.

ಫಾದರ್ ಕಾತುರದಿಂದ ಸಾಕ್ರೆಟಿಸ್ ಬಳಿ ಓಡುತ್ತಾನೆ. ಹತ್ತಿರ ಹೋಗಿ ” ನೀನು ಇಲ್ಲಿದ್ದೀಯ. ನಿನಗೆ ಒಳ್ಳೆಯ ಗುಣ, ನಡತೆ ಇದೆ. ಆದರೆ ದೇವರ ಮೇಲೆ ನಂಬಿಕೆ ಇಲ್ಲ ಹಾಗಾಗಿ ನಿನ್ನನ್ನ ನರಕದಲ್ಲಿ ಬಿಟ್ಟಿದ್ದಾರೆಯೇ? ” ಎಂದು ಕೇಳುತ್ತಾನೆ. ಅದಕ್ಕೆ ಕೆಲಸ ಮಾಡುತ್ತಲೇ ಸಾಕ್ರೆಟಿಸ್ ” ನನಗೆ ನರಕದ ಬಗ್ಗೆ ಏನೂ ಗೊತ್ತಿಲ್ಲ, ನಂಬಿಕೆಯೂ ಇಲ್ಲ. ಹೇಗೂ ಇಲ್ಲಗೆ ಬಂದನಲ್ಲ ಹಾಗಾಗಿ ಇದನ್ನು ಸ್ವರ್ಗವಾಗಿ ಮಾಡಿದೆ ಅಷ್ಟೇ” ಎಂದನು.

ಕೂಡಲೇ ತಟ್ ಎಂದು ಕಣ್ಣು ಬಿಟ್ಟು ಕನಸಿನಿಂದ ಹೊರಬರುತ್ತಾರೆ ಫಾದರ್. ಉತ್ತರಕ್ಕಾಗಿ ಕಾಯುತ್ತಿದ್ದ ಎಡ್ಮಂಡ್ ಬ್ರೂಕ್ ನನ್ನ ಉದ್ದೇಶಿಸುತ್ತಾ ” ನಾನು ಉತ್ತರಿಸುವುದಕ್ಕೂ ಮೊದಲು ನನಗೆ ಬಂದ ಕನಸಿನ ಬಗ್ಗೆ ಹೇಳಬೇಕು. ಈ ಕನಸಿನಿಂದ ನನಗೆ ಒಂದು ಅರಿವಾಯಿತು.

ಏನೆಂದರೆ ಒಳ್ಳೆಯ ಗುಣ, ನಡತೆ ಇದ್ದವರು ಯಾವ ಪ್ರದೇಶಕ್ಕೆ ಹೋದರೂ ಅದನ್ನು ಸ್ವರ್ಗವಾಗಿ ಮಾರ್ಪಡಿಸುತ್ತಾರೆ. ಆದರೆ ಒಳ್ಳೆಯ ಗುಣ, ನಡತೆ ಇಲ್ಲದೆ ದೇವರ ಮೇಲೆ ನಂಬಿಕೆ ಇದ್ದವರು ಯಾವ ಪ್ರದೇಶಕ್ಕೆ ಹೋದರೂ ಅದು ನರಕವಾಗಿ ಮಾರ್ಪಡುತ್ತದೆ ಎಂದು ಒಂದು ಕನಸಿನ ಮೂಲಕ ನನಗೆ ಅರಿವಾಯಿತು” ಎಂದು ಹೇಳುತ್ತಾರೆ.

ಸ್ನೇಹಿತರೆ ನಾವು ಸ್ವತಃ ನಾಸ್ತಿಕರಾಗಿರಬಹುದು ಅಥವಾ ಆಸ್ತಿಕರಾಗಿರಬಹುದು. ಆದರೆ ಒಬ್ಬ ವ್ಯಕ್ತಿಯು ದೇವರ ಮೇಲೆ ನಂಬಿಕೆ ಇಟ್ಟದ್ದಾನೋ ಇಲ್ಲವೋ ಎಂಬ ಕಾರಣದಿಂದ ಆತನನ್ನು ನಾವು ನಿರ್ಧರಿಸುವುದು ಅಥವಾ ನಿಂಧಿಸುವುದು ತಪ್ಪಾಗುತ್ತದೆ. ಬದಲಿಗೆ ಆತ ಆಸ್ತಿಕನಾಗಿರಲಿ ನಾಸ್ತಿಕನಾಗಿರಲಿ ಒಳ್ಳೆಯ ಗುಣ ನಡತೆ ಇದ್ದರೆ ಮಾತ್ರ ಆತನ ವ್ಯಕ್ತಿತ್ವ ಸರಿಯೆಂದು ಒಪ್ಪಬೇಕು.

ದೇವರ ಮೇಲಿನ ನಂಬಿಕೆಯೇ ಮೌಡ್ಯವಾಗಿರಬಹುದು ಆದರೆ ಆ ನಂಬಿಕೆ ಹೊಂದಿರುವ ವ್ಯಕ್ತಿಯ ನಡತೆ ಮುಖ್ಯವಾಗುತ್ತದೆ. ನಾಸ್ತಿಕತೆಯೇ ಸರಿ ಅಥವಾ ವಾಸ್ತವ ಆಗಿರಬಹುದು ಆದರೆ ನಡೆತೆಯಿಲ್ಲದಿದ್ದರೆ ತಪ್ಪಾಗುತ್ತದೆ.

ಇನ್ನು ಮಂದಿರ ನಿರ್ಮಾಣವೇ ದೊಡ್ಡ ಸಾಧನೆ ಎಂದು ಹೇಳುವವರಿಗೆ ನನ್ನ ಮನವಿ ಇಷ್ಟೆ. ಗುಣ, ನಡತೆ, ಸಾಮರಸ್ಯ,ಸಮಾನತೆ, ಸಹೋದರತೆ ಇಂತಹಾ ಗುಣಗಳನ್ನು ಬೆಳಸದ ಎಷ್ಟು ದೊಡ್ಡ ಮಂದಿರ ಕಟ್ಟಿದರೂ, ಮಸೀದಿ, ಚರ್ಚು ಕಟ್ಟಿದರೂ ಅದು ನರಕವನ್ನಷ್ಟೇ ಸೃಷ್ಟಿಸುತ್ತದೆ. ನೀವು ನಂಬಿಕೆ ಇಡುವ ದೇವರು ಕೂಡಾ ಮೆಚ್ಚುವುದಿಲ್ಲ. ಕೊನೆಗೆ ಇಂತಹಾ ನರಕವನ್ನು ಕೂಡಾ ಒಳ್ಳೆಯ ಗುಣ, ನಡತೆಗಳಿರುವವರು ಮಾತ್ರವೇ ಸ್ವರ್ಗವಾಗಿಸಬಲ್ಲರು. ಅವರು ಆಸ್ತಿಕರಾಗಿರಲಿ , ನಾಸ್ತಿಕರಾಗಿರಲಿ.

ಜನಾ ನಾಗಪ್ಪ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

Trending