ದಿನದ ಸುದ್ದಿ
‘ಸಂಜೀವಿನಿ’ ಕೆರೆ ಗೌಡರು..!
- ನಾಗರಾಜ ಸಿರಿಗೆರೆ
ಕಳೆದ ಎರಡೂ ದಿನಗಳಿಂದ ತುಂಬಾ ಹತ್ತಿರದ, ಪರಿಚಿತರ, ಆತ್ಮೀಯರ ಸಾವಿನ ಸುದ್ದಿಗಳು ಬೇಡವಂದರೂ ಕಿವಿಗೆ ಅಪ್ಪಳಿಸುತ್ತಿದ್ದವು. “ಈ ಸುದ್ದಿ ಸುಳ್ಳಾಗಲಿ” ಎಂಬ ಪ್ರಾರ್ಥನೆ “ನರಿ ಕೂಗು ಗಿರಿಗೆ ಕೇಳೀತೆ” ಎನ್ನುವಂತಾಯಿತು. ನಿನ್ನೆ ಬೆಳಗಿನಿಂದ “ಡಾ. ಮಂಜುನಾಥ ಗೌಡರ ಆರೋಗ್ಯದ ಸ್ಥಿತಿ ಗಂಭೀರ” ಎಂಬ ಸುದ್ದಿ ಸುಳ್ಳಾಗಲಿ ಎಂದು ಹಂಬಲಿಸಿದ ಮನಸ್ಸುಗಳೆಷ್ಟೊ. ಕ್ಷಣ ಕ್ಷಣಕ್ಕೂ ಪೊನ್ ಕರೆಗಳು. ”ಗೌಡರ ಆರೋಗ್ಯ ಸುಧಾರಿಸಲಿ” ಎಂಬ ಒಂದೇ ಮಂತ್ರ ಎಲ್ಲರ ಬಾಯಲ್ಲೂ.
ಆದರೆ ಕ್ರೂರ ವಿಧಿ ಹಾಗೆ ಮಾಡಲಿಲ್ಲ. “ಜವರಾಯ ಬಂದರೆ ಬರಿಗೈಲಿ ಬರಲಿಲ್ಲ ಒಳ್ಳೊಳ್ಳೆ ಮರಗಳ ಕಡಿಯುತ ಬಂದ” ಎಂಬ ಜನಪದ ಗೀತೆಯಂತೆ ಸಮಾಜದ ಬಹುದೊಡ್ಡ ಆಸ್ತಿಯಾಗಿದ್ದ ಮಂಜುನಾಥ ಗೌಡರನ್ನು ಕ್ರೂರ ವಿಧಿ ಬಲಿತೆಗೆದುಕೊಂಡಿತು. ಅವರ ಸಾವು ಕೇವಲ ಯಾವುದೊ ಒಂದು ವರ್ಗದವರಿಗೆ ಮಾತ್ರವಲ್ಲ. ಎಲ್ಲಾ ವರ್ಗಕ್ಕೂ ತುಂಬಲಾರದ ನಷ್ಟ ಎಂದರೆ ಕ್ಷೀಷೆಯಾಗಲಾರದು. ನೂರಾರು ಜನಕ್ಕೆ ಅನ್ನ, ಆಶ್ರಯ ನೀಡಿದ್ದರು. ರೈತರಿಗೆ, ಯುವಕರಿಗೆ ಆದರ್ಶಪ್ರಾಯರಾಗಿದ್ದರು.
ಗೌಡರು ಗುಜರಾತಿನಲ್ಲಿ
ಮೆಡಿಕಲ್ ಸೈನ್ಸ್ ಓದುತ್ತಿರುವಾಗ ಅಲ್ಲಿಯ ಏತ ನೀರಾವರಿ ಯೋಜನೆಗಳನ್ನು ಹತ್ತಿರದಿಂದ ಕಂಡಿದ್ದರು. ಆ ಮಾದರಿಯಲ್ಲಿ ಕರ್ನಾಟಕದಲ್ಲೂ ನೀರಾವರಿ ಯೋಜನೆ ರೂಪಿಸಬೇಕು ಎಂದು ದಶಕಗಳ ಹಿಂದೆ ಕನಸು ಕಂಡಿದ್ದರು. ಮೊದಲ ಹಂತದಲ್ಲಿ ದಾವಣಗೆರೆ ಜಿಲ್ಲೆಯ 22 ಕೆರೆಗಳನ್ನು ತುಂಬಿಸಲು ರೈತರನ್ನು ಸಂಘಟಿಸಿ, ವಿಧಾನ ಸೌಧದ ಮೆಟ್ಟಿಲೇರಿದ್ದರು.
ಹಗಲಿರಳೆನ್ನದೆ ಅವಿರತ ಹೋರಾಟಕ್ಕಿಳಿದರು. ಆಡಳಿತ ವರ್ಗ ಕಿವಿಗೊಡದಿದ್ದಾಗ ಉಪವಾಸ ಸತ್ಯಾಗ್ರಹಕ್ಕೂ ಇಳಿದರು. ಆನಂತರ ಸಿರಿಗೆರೆಯ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಯಶಸ್ವಿಯಾದರು. ತಮ್ಮ ಊರಾದ ತುಪ್ಪದಳ್ಳಿಯ ಕೆರೆಗೆ ಈ ಯೋಜನೆಯಲ್ಲಿ ತುಂಬಿಸಲು ಆಗದಿದ್ದಾಗ ಸ್ಥಿತಪ್ರಜ್ಞರಾಗಿದ್ದರು.
ಕೆರೆ ಯೋಜನೆಗಳ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರು. ಲಯನ್ಸ್ ಕ್ಲಬ್ ಮತ್ತಿತರ ಸಂಘಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು. ರಾಜಕೀಯ ನಾಯಕತ್ವದ ಕನಸು ಕಂಡರು. ದಾವಣಗೆರೆ ನಗರದಲ್ಲಿ ‘ಸಂಜೀವಿನಿ ನರ್ಸಿಂಗ್ ಹೋಂ’ ಮತ್ತು ‘ಸಂಜೀವಿನಿ ಆಸ್ಪತ್ರೆ’ ಎಂಬ ಎರಡು ಆಸ್ಪತ್ರೆಗಳನ್ನು ತೆರೆದು ಗ್ರಾಮೀಣ ಜನರ ನೋವಿಗೆ ಸ್ಪಂದಿಸುತ್ತಿದ್ದರು. ಎಲ್ಲರನ್ನೂ ಸದಾ ನಗುಮೊಗದಿಂದ ಮಾತನಾಡಿಸುತ್ತಿದ್ದರು.
ಸಿರಿಗೆರೆ ಗುರುಗಳ ನಿಕಟವರ್ತಿಯಾಗಿ ಪೂಜ್ಯರುಗಳೊಂದಿಗೆ ಸದಾ ಸಮಾಜದ ಹಿತಚಿಂತನೆಯಲ್ಲಿದ್ದರು. ಎರಡು ವರ್ಷಗಳ ಹಿಂದೆ ಜಗಳೂರಿನಲ್ಲಿ ಜರುಗಿದ ‘ತರಳಬಾಳು ಹುಣ್ಣಿಮೆ’ಯ ಪ್ರಧಾನ ಕಾರ್ಯದರ್ಶಿಯಾಗಿ ಅದರ ಸಂಪೂರ್ಣ ಯಶಸ್ಸಿಗೆ ಕಾರಣರಾಗಿದ್ದವರು. ಕಳೆದ ವರ್ಷ ಗೋಕಾಕ್ ಮತ್ತು ಹಾವೇರಿ ತಾಲ್ಲೂಕಿನ ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂದರ್ಭದಲ್ಲಿ ಶ್ರೀಗಳೊಂದಿಗೆ ಮುಂಚೂಣಿಯಲ್ಲಿದ್ದರು.
ಶಾಶ್ವತ ಬರಪೀಡಿತ ತಾಲ್ಲೂಕು ಎನಿಸಿದ ಜಗಳೂರನ್ನು ಸಮೃದ್ಧ ನೆಲವನ್ನಾಗಿಸಬೇಕೆಂದು ತುಂಗಭದ್ರಾ ನದಿಯಿಂದ ನೀರು ಹರಿಸುವ ಕಾರ್ಯಕ್ಕೆ ಸಿರಿಗೆರೆ ಶ್ರೀಗಳಿಗೆ ಬೆನ್ನೆಲೆಬಾಗಿದ್ದರು.
ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದ ಗೌಡರ ಮನೆತನದವರಾದ ಮಂಜುನಾಥ್ ಆರುಜನ ಅಕ್ಕತಂಗಿಯರ ನಡುವೆ ಒಬ್ಬನೇ ಗಂಡುಮಗ. ಸೋದರ ಸೊಸೆಯನ್ನೇ ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದರು.
ಇವರ ಕಾರ್ಯ ಯೋಜನೆಗಳ ಬಗ್ಗೆ ಒಂದು ಲೇಖನ ಬರೆಯಲು ಸಂದರ್ಶನಕ್ಕೆ ಸಮಯ ಕೇಳಿದಾಗಲೆಲ್ಲ “ನಾನೇ ಕರೆಮಾಡಿ ಹೇಳುತ್ತೇನೆ” ಎಂದಿದ್ದರು. ಅಷ್ಟೊತ್ತಿಗೆ ಕೊರೊನಾ ಮಾರಿ ಒಕ್ಕರಿಸಿ, ಸಮಯ ಹೊಂದಿಸಿಕೊಳ್ಳಲು ಅವಕಾಶ ನೀಡಲೇಯಿಲ್ಲ. ಬನಶಂಕರಿ ಬಡಾವಣೆಯಲ್ಲಿ ಬೆಳಗಿನ ವಾಕಿಂಗ್ ನಲ್ಲಿ ಕೊರೊನಾ ಕಾರಣಕ್ಕೆ ದೂರದಿಂದಲೇ ಶುಭಾಶಯಗಳ ವಿನಿಮಯ ಅನಿವಾರ್ಯವಾಗಿತ್ತು.
ತಲೆತುಂಬ ಕನಸುಗಳು ಹೊತ್ತು, ರೈತಪರ ಚಿಂತಕರಾಗಿ, ಯುವಜನಾಂಗಕ್ಕೆ ಸ್ಫೂರ್ತಿಯಾಗಿದ್ದ ಗೌಡರಿಗೆ 52 ನಿಜಕ್ಕೂ ಸಾವಿನ ವಯಸ್ಸಲ್ಲ.ಆದರೆ ಸ್ವತಃ ವೈದ್ಯರಾಗಿ ತಮ್ಮ ಸಾವನ್ನು ಅರಿಯದೆ ಹೋಗಿದ್ದು ವಿಧಿಯ ಅಟ್ಟಹಾಸ. ಈ ಹಿಂದೆ ರೈತ ನಾಯಕ ಎನ್ ಡಿ ಸುಂದರೇಶ್, ಕಾರ್ಮಿಕ ನಾಯಕ ಬಿ ಕೆ ಸುಂದರೇಶ್ ಹೀಗೆ ಅಕಾಲ ಮೃತ್ಯುವಿಗೆ ಈಡಾದರು. ಸಮಾಜಕ್ಕೆ ಬೇಕಾದ ಇಂತಹ ಕಳಕಳಿಯ ನಾಯಕರು ನಡುವಿನಲ್ಲಿಯೇ ತುತ್ತಾಗುತ್ತಾರೆ. ಎಸ್ ಪಿ ಬಿ ಯಂತೆ ಗೌಡರ ಆರೋಗ್ಯ ಸುಧಾರಿಸಬಹುದು ಎಂಬ ಕನವರಿಕೆ ಕನವರಿಕೆಯಾಗಿಯೇ ಉಳಿಯಿತು.
ಸುದ್ದಿದಿನ.ಕಾಂ|ವಾಟ್ಸಾಪ್ |9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

