Connect with us

ದಿನದ ಸುದ್ದಿ

ನುಡಿಯ ಒಡಲು – 14 | ನುಡಿ ವರ್ಸಸ್ ಒಳನುಡಿ

Published

on

  • ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ನುಡಿ ಮತ್ತು ಒಳನುಡಿಗಳ ನಡುವಣ ಅಂತರಗಳನ್ನು ಗುರುತಿಸಲು ಎರಡು ಬಗೆಯ ಒರೆಗಲ್ಲುಗಳನ್ನು ಬಳಸುತ್ತಾರೆ. ಒಂದು ನುಡಿಯರಿಮೆಯ ನೆಲೆಗಟ್ಟನ್ನು ಪಡೆದಿದ್ದರೆ, ಮತ್ತೊಂದು ಸಾಮಾಜಿಕ ರಾಜಕೀಯ ನೆಲೆಗಳ ಮೇಲೆ ನಿರ್ಧಾರಗೊಳ್ಳುತ್ತದೆ. ಎತ್ತುಗೆಗಾಗಿ ನುಡಿಯರಿಮೆಯ ನೆಲೆಗಳನ್ನು ಇಲ್ಲೀಗ ನೋಡಬಹುದು;

1. ಪರಸ್ಪರ ಅರ್ಥಗ್ರಾಹ್ಯತೆಯ ಸಾಧ್ಯವೇ?

ಹೌದು? = ಒಳನುಡಿ

ಇಲ್ಲ? = ನುಡಿ

ಒಂದೇ ನುಡಿಯ ಬೇರೆ ಬೇರೆ ಬಗೆಗಳನ್ನು ಒಬ್ಬರಿಗೊಬ್ಬರು ಅರಿಯುವಂತಾದರೆ ಅದು ಒಳನುಡಿ. ಇಲ್ಲವಾದರೆ ಅವುಗಳನ್ನು ಬೇರೆ ಬೇರೆ ನುಡಿಗಳನ್ನಾಗಿ ಗುರುತಿಸಲಾಗುತ್ತದೆ. ಅಂದರೆ ಈ ಕೆಳಗಿನ ಸೂತ್ರದ ಮೂಲಕ ಇದನ್ನು ಇನ್ನೂ ನಿಚ್ಚಳವಾಗಿ ತಿಳಿಯಬಹುದು. ಉದಾ.ಗಳು;

1. ಧಾರವಾಡ ವರ್ಸಸ್ ಮೈಸೂರು ವರ್ಸಸ್ ಮಂಗಳೂರು ವರ್ಸಸ್ ಬೀದರ ವರ್ಸಸ್ ಚಾಮರಾಜ ನಗರ ವರ್ಸಸ್ ಬಳ್ಳಾರಿ = ಒಳನುಡಿಗಳು

2. ಬ್ರಿಟಿಶ್ ವರ್ಸಸ್ ಅಮೇರಿಕನ್ ವರ್ಸಸ್ ಐರಿಶ್ ವರ್ಸಸ್ ಆಸ್ಟ್ರೇಲಿಯಾ = ಒಳನುಡಿಗಳು

ಈ ಮೇಲಿನ ಎರಡೂ ಸನ್ನಿವೇಶದಲ್ಲಿ ಆಯಾ ಗುಂಪಿನ ಒಳನುಡಿಗಳಲ್ಲಿ ಪರಸ್ಪರ ಸಂವಹನ ಸಾಧ್ಯವಾಗುವುದರಿಂದ ಇವುಗಳ ನಡುವಣ ನಂಟಸ್ತಿಕೆಯನ್ನು ಅಖಂಡತೆಯ ತತ್ವದ ನೆಲೆಯಲ್ಲಿ ಕಾಣಬಹುದು. ಈ ಒಳನುಡಿಗಳ ರಾಚನಿಕ ಯಾವ ನಿಲುವುಗಳು ಒಂದನ್ನು ಇನ್ನೊಂದರಿಂದ ಹೇಗೆ ಬೇರ್ಪಡಿಸುತ್ತವೆ? ಈ ರಾಚನಿಕ ನೆಲೆಗಳು ಪ್ರಾದೇಶಿಕವಾಗಿ ಹೇಗೆ ಹರಡಿಕೊಂಡಿವೆ? ಹಾಗೂ ಪ್ರದೇಶ ಮತ್ತು ಒಳನುಡಿಗಳ ನಂಟಸ್ತಿಕೆಯ ಅಂತರ್ಸಂಬಂಧಗಳು ಯಾವ ಬಗೆಯವು? ಎಂಬೆಲ್ಲ ಸಂಗತಿಗಳನ್ನು ಲೆಕ್ಕಿಸದೆಯೂ, ಕೇವಲ ಪರಸ್ಪರ ಸಂವಹನ ಸಾಧ್ಯತೆಯ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಒಳನುಡಿಗಳು ರೂಪುಗೊಳ್ಳುವ ಬಗೆಯನ್ನು ಇಲ್ಲಿ ಕಾಣಬಹುದು.

2. ಸಾಮಾಜಿಕ ಮತ್ತು ರಾಜಕೀಯ ನಿಲುವುಗಳು ಕಾರಣವಾದರೇ?

1. ನಾರ್ವೇ ವರ್ಸಸ್ ಸ್ವೀಡನ್ ವರ್ಸಸ್ ಡೆನಿಶ್ = ನುಡಿಗಳು (ಇಲ್ಲಿ ಪರಸ್ಪರ ಗ್ರಾಹ್ಯತೆ ಸಾಧ್ಯವಿದೆ).

2. ತುಳು ವರ್ಸಸ್ ಕೊಡವ ವರ್ಸಸ್ ಬಡಗ ವರ್ಸಸ್ ಕನ್ನಡ = ನುಡಿಗಳು (ಇಲ್ಲಿ ಪರಸ್ಪರ ಸಂವಹನ ಸಾಧ್ಯವಿಲ್ಲ).

3. ಕಾಂಟೀಸ್ ವರ್ಸಸ್ ಮಂಡೋರಿಯನ್ ವರ್ಸಸ್ ಹಕ್ಕ ವರ್ಸಸ್ ಹೊಕ್ಕ್‍ಯಿನ್ = ಒಳನುಡಿ (ಇಲ್ಲಿ ಪರಸ್ಪರ ಸಂವಹನಸಾಧ್ಯವಿಲ್ಲ, ಆದರೂ ಇವುಗಳನ್ನು ಚೈನಿಸ್ ನುಡಿಯ ಒಳನುಡಿಗಳೆಂದು ಗುರುತಿಸಿದ್ದಾರೆ).

4. ಡೆನಿಶ್ ವರ್ಸಸ್ ಸ್ವೀಡಿಶ್ = ನುಡಿಗಳು (ಡೆನಿಶ್ ನುಡಿಯಿಗರು ಸ್ವೀಡಿಶ್‍ನ್ನು ಅರಿತುಕೊಳ್ಳುತ್ತಾರೆ, ಆದರೆ ಸ್ವೀಡಿಶ್ ನುಡಿಯಿಗರು ಡೆನಿಶ್‍ನ್ನು ಅರಿತುಕೊಳ್ಳಲಾರರು ಹಾಗಾದರೆ ಇಂತಹ ನೆಲೆಯನ್ನು ಹೇಗೆ ಗುರುತಿಸುವುದು).

5. ಮರಾಠಿ ವರ್ಸಸ್ ಕೊಂಕಣಿ = ಒಳನುಡಿಗಳು (ಪರಸ್ಪರ ಸಂವಹನ ನಿರೀಕ್ಷಿತ ಮಟ್ಟದಲ್ಲಿಲ್ಲ).

6. ಬಡಗ ವರ್ಸಸ್ ಸೋಲಿಗ = ಒಳನುಡಿ (ಇವುಗಳ ನಡುವೆ ಪರಸ್ಪರ ಸಂವಹನ ಸಾಧ್ಯವಿಲ್ಲ. ಆದಾಗ್ಯೂ ಅವುಗಳನ್ನು ಕನ್ನಡದ ಒಳನುಡಿಗಳೆಂದು ಕರೆಯುತ್ತಾರೆ).

ಈ ಎರಡನೇ ಸನ್ನಿವೇಶದಲ್ಲಿ ನುಡಿ ಹಾಗೂ ಒಳನುಡಿಗಳ ನಡುವಣ ವ್ಯತ್ಯಾಸಗಳನ್ನು ಗುರುತಿಸಲು ಪರಸ್ಪರ ಅರ್ಥಗ್ರಾಹ್ಯ ತತ್ವವನ್ನೇ ಮುಖ್ಯ ಮಾನದಂಡವನ್ನಾಗಿ ಇಟ್ಟುಕೊಂಡಿಲ್ಲ ಎಂಬುದು ಇಲ್ಲಿ ನಿಚ್ಚಳವಾಗಿ ಕಾಣುತ್ತದೆ. ಈ ಕೆಳಗಿನ ಚಿತ್ರದ ಮೂಲಕ ಈ ತೊಡಕನ್ನು ಇನ್ನಷ್ಟು ವಿವರವಾಗಿ ನೋಡಬಹುದು;

ಚಿತ್ರ- 01

ಇವುಗಳ ಸಂವಹನದ ಗ್ರಹಿಕೆಯಲ್ಲಿ ಸಮಾನತೆಯಿಲ್ಲಿ. ಗ್ರಹಿಕೆಯಲ್ಲಿ ಇಂತಹ ಅಸಮಾನ ಮಟ್ಟವಿದ್ದರೂ, ಬೇರೆ ನುಡಿಯೆಂದು ಕರೆಯದೇ ಒಳನುಡಿಯೆಂದು ಗುರುತಿಸುವುದಕ್ಕೆ ಸಾಮಾಜಿಕ, ಚಾರಿತ್ರಿಕ, ಪ್ರಾದೇಶಿಕ ಮತ್ತು ರಾಜಕೀಯ ನಿಲುವುಗಳೇ ಕಾರಣ. ನುಡಿ ಮತ್ತು ಒಳನುಡಿಗಳ ನಡುವೆ ಯಾವುದೇ ಬಗೆಯ ಖಚಿತ ಭಿನ್ನತೆಗಳನ್ನು ಪಟ್ಟಿ ಮಾಡಲು ಸಾಧ್ಯವಿಲ್ಲ ಎಂಬ ಸಂಗತಿ ಈ ಚರ್ಚೆಗಳಿಂದಲೇ ಮನವರಿಕೆಯಾಗುತ್ತದೆ.

ಸಾಂಸ್ಕೃತಿಕ ಅಸಮಾನ ತತ್ವಗಳು, ರಾಜಕೀಯ ಮತ್ತು ಆರ್ಥಿಕ ರಚನೆಗಳು ಹಾಗೂ ಚಾರಿತ್ರಿಕವಾಗಿ ನೆಲೆನಿಂತಿರುವ ಅಧಿಕಾರ ಸಂಬಂಧಗಳೇ ನುಡಿ ಮತ್ತು ಒಳನುಡಿ ಎಂಬಂತಹ ಡೈಕಾಟಮಿಯನ್ನು ಹುಟ್ಟು ಹಾಕುತ್ತವೆ. ನುಡಿಯೆಂದರೆ ಅತ್ಯಂತ ಮೇಲು (ಸೂಪರ್‍ಆರ್ಡಿನೇಟ್) ಎಂದೋ, ಒಳನುಡಿಯೆಂದರೆ ಅತ್ಯಂತ ಕೀಳು (ಸಬ್‍ಆರ್ಡಿನೇಟ್) ಎಂದೋ ನಿರ್ವಚಿಸಲಾಗಿದೆ. ಒಳನುಡಿಗಳಿಗೆ ಅಂಟಿರುವ ಕೀಳು, ಅಧೀನ, ವಿರೂಪ ಮುಂತಾದಂತಹ ಕಳಂಕಗಳನ್ನು ತಪ್ಪಿಸಲು ಉಪಭಾಷೆ ಇಲ್ಲವೇ ಒಳನುಡಿ ಎಂದು ಕರೆಯುವ ಬದಲಾಗಿ ನುಡಿಬಗೆ (ಲಿಂಗ್ವಿಸ್ಟಿಕ್ ವೆರೈಟಿ) ಎಂದು ಗುರುತಿಸಬೇಕು ಎಂಬುದು ಹೊಸಕಾಲದ ಬಹುತೇಕ ಸಾಮಾಜಿಕ ನುಡಿಯರಿಗರ ನಿಲುವಾಗಿದೆ.

ಸಾಮಾಜಿಕವಾಗಿ ನೆಲೆ ನಿಂತಿರುವ ಅಸಮಾನತೆಗಳು, ನುಡಿಯ ಮೂಲಕ ಹೇಗೆ ಪ್ರತಿನಿಧಿಸುತ್ತವೆ ಎಂಬುದಕ್ಕೆ ಉಪಭಾಷೆ ಮತ್ತು ಒಳನುಡಿಗಳೇ ಸಾಕ್ಷಿಯಾಗಿವೆ. ಅದಕ್ಕಾಗಿ ಮೇಲು ನುಡಿ (ಮೇಲು ಜಾತಿ) ಹಾಗೂ ಕೀಳು ನುಡಿ (ಕೀಳು ಜಾತಿ)ಗಳು ತಲೆಯೆತ್ತಿವೆ. ಇಂತಹ ತರತಮ ನಿಲುವುಗಳನ್ನು ಮೊದಲು ಕಿತ್ತು ಹಾಕಬೇಕು. ಅದಕ್ಕಾಗಿ ಹೊಸ ನುಡಿಗಟ್ಟುಗಳನ್ನು ಬಳಸುವ ಅಗತ್ಯವಿದೆ. ಇವು ಕೇವಲ ಟೆಕ್ನಿಕಲ್ ಪದಗಳಾಗಿರದೇ, ಲೋಕವನ್ನು ನೋಡುವ ಕ್ರಮವನ್ನೇ ಬದಲಿಸುತ್ತವೆ.

ನುಡಿಬಗೆ ಎಂಬುದು ಸಿದ್ಧಮಾದರಿಯ ತಿಳಿವನ್ನೇ ಪಲ್ಲಟಗೊಳಿಸುವ ಬಗೆಯೆಂದೇ ಹೇಳಬೇಕಾಗುತ್ತದೆ. ನುಡಿಬಗೆ ಕೇವಲ ವ್ಯತ್ಯಾಸವನ್ನು ಸೂಚಿಸುವ ಪದ. ಅಂದರೆ ಒಂದು [ಅ] ಇನ್ನೊಂದಕ್ಕಿಂತ [ಆ] ಹೇಗೆ ಬೇರೆ ಎಂಬುದನ್ನು ಮಾತ್ರ ತೋರಿಸುತ್ತದೆ, ಹೊರತಾಗಿ ತರತಮ ನೆಲೆಗಳನ್ನಲ್ಲ. ಬಗೆ/ವ್ಯತ್ಯಾಸಗಳು (ಡಿಫರೆನ್ಸ್) ಸ್ವಾಯತ್ತ ಅಸ್ತಿತ್ವವನ್ನು ಕಾಣಿಸುತ್ತವೆ.

ಆದರೆ ತರತಮ ನಿಲುವುಗಳು ಒಂದು ಮೇಲು ಮತ್ತೊಂದು ಕೀಳು ಎಂಬ ಅಸಮಾನ ಡೈಕಾಟಮಿಯನ್ನು ಹುಟ್ಟು ಹಾಕುತ್ತವೆ. ಒಂದು ಮೇಲು ಮತ್ತೊಂದು ಕೀಳು ಎಂದು ಹೀಗೆ ಹೇಳುವುದಕ್ಕೆ ಯಾವ ಆಧಾರವೂ ಇಲ್ಲ. ನುಡಿಗಳನ್ನು ಕೇವಲ ಉಲಿ ಮತ್ತು ಪದಕೋಶಿಕ (ಲೆಕ್ಷಿಕಲ್) ನೆಲೆಯಲ್ಲಿ ಮಾತ್ರ ಬೇರ್ಪಡಿಸಿ ಅವುಗಳ ನಡುವೆ ತರಮತಗಳನ್ನು ಹುಟ್ಟಹಾಕಲಾಗಿದೆ.

ಲೋಕವನ್ನು ನೋಡುವ ಬಗೆಯಲ್ಲಿಯೇ ಅನನ್ಯತೆ ಮತ್ತು ವಿಶಿಷ್ಟತೆ ಇರುತ್ತದೆ. ಪ್ರತೀ ನುಡಿಯು ಹಲವು ಬಗೆಗಳಲ್ಲಿ ತನ್ನದೆಯಾದ ಇಂತಹ ವಿಶಿಷ್ಟತೆ ಹಾಗೂ ಅನನ್ಯತೆಯ ಗುರುತುಗಳನ್ನು ಇಟ್ಟುಕೊಂಡಿರುತ್ತದೆ. ಅವುಗಳ ವೈವಿಧ್ಯತೆ ಬಹುತೇಕ ಪದಕೋಶಿಕ ನೆಲೆಯಿಂದ ಕೂಡಿರುತ್ತದೆ. ಇಂತಹ ವೈವಿಧ್ಯತೆಗೆ ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನಸಿಕ ಕಾರಣಗಳಿರುತ್ತವೆ. ಆಯಾ ಪರಿಸರಕ್ಕೆ ಅನುಗುಣವಾಗಿ ನುಡಿ ಇಲ್ಲವೇ ಒಳನುಡಿಗಳ ಸ್ವರೂಪ ರೂಪುಗೊಂಡಿರುತ್ತವೆ.

ಹಾಗಾಗಿ ಮಾನವರ ಚಿಂತನೆಯ ಮಾದರಿ, ಗ್ರಹಿಕೆಯ ಬಗೆಗಳು ರೂಪುಗೊಳ್ಳುವುದು, ಅವರಲ್ಲಿ ಅಂತಸ್ಥವಾಗಿರುವ ನುಡಿ ಸಾಮಥ್ರ್ಯದಿಂದಲೇ ಎಂಬುದನ್ನು ಮರೆಯುವಂತಿಲ್ಲ. (ನುಡಿಯ) ಅಂತಸ್ಥ ಸಾಮಥ್ರ್ಯದಲ್ಲಿ ತರಮತಮ ಎಂಬದು ಇರುವುದಿಲ್ಲ. ಬದಲಾಗಿ ನುಡಿಗಳ ನಡುವಣ ಸಮಾನ ತತ್ವಗಳು ಹಾಗೂ ವಿಕಲ್ಪಗಳು ಮಾತ್ರವಿರುತ್ತವೆ. ಇವುಗಳ ಆಧಾರದ ಮೇಲೆ ನುಡಿಗಳನ್ನು ಬೇರ್ಪಡಿಸಿ ಬೇರೆ ಬೇರೆ ನುಡಿಗಳು ಹುಟಿಸಬಹುದು.

ಕೇವಲ ಹೊರಪದರ ರಚನೆಯನ್ನು ಮಾತ್ರ ಪರಿಗಣಿಸಿ, ನುಡಿಯ ಇಡೀ ರಾಚನಿಕ ಸ್ವರೂಪವನ್ನು ಅರಿಯಲು ಸಾಧ್ಯವಿಲ್ಲ. ಹಾಗಾಗಿ ಚಾಮ್‍ಸ್ಕಿ ಹೇಳುವ ನುಡಿಯ ಏಕರೂಪತೆ (ಲಿಂಗ್ವಿಸ್ಟಿಕ್ ಹೋಮಿಜಿನಿಟಿ) ಎನ್ನುವುದು ನುಡಿಯ ಹೊರಪದರ ರಾಚನಿಕ ವ್ಯವಸ್ಥೆಗೆ ಸಂಬಂಧಿಸಿದ್ದಲ್ಲ. ಅದು ಅಂತಸ್ಥ ಸಾಮರ್ಥ್ಯಕ್ಕೂ ಹಾಗೂ ಒಳಪದರ ರಚನೆಗೂ ಸಂಬಂಧಿಸಿದ್ದು. ಹಾಗಾಗಿ ಚಾಮ್‍ಸ್ಕಿ ಪ್ರಕಾರ ನುಡಿಯನ್ನು ಅರಿಯುವುದೆಂದರೆ, ಅದರ ಅಂತಸ್ಥ ಸಾಮಥ್ರ್ಯದ ರಾಚನಿಕ ಸ್ವರೂಪವನ್ನು ಅರಿಯುವುದಾಗಿದೆ.

ಅಂದರೆ ಈ ನುಡಿ ಮತ್ತು ಒಳನುಡಿ ಎಂಬ ನೆಲೆಗಳನ್ನು ಬೇರೆ ತಾತ್ವಿಕ ಚೌಕಟ್ಟಿನಿಂದ ಮರು ಕಟ್ಟಿಕೊಳ್ಳುವ ಅಗತ್ಯವಿದೆ. ಏಕೆಂದರೆ ನುಡಿಯ ರಚನೆ ಎಂಬುದು ಮಾನವರಲ್ಲಿ ಜನ್ಮಜಾತವಾಗಿ ಬಂದಿರುತ್ತದೆ. ಹೊರತು ಯಾವುದೇ ಸಾಮಾಜಿಕ ವಿಶಿಷ್ಟತೆ ಇಲ್ಲವೇ ರಾಜಕೀಯ ತೀರ್ಮಾನದಿಂದ ನಿರ್ಧಾರವಾಗುವಂತಹದಲ್ಲ. ಪ್ರತೀ ಮಾನವನ ಮೆದುಳಿನಲ್ಲಿ ಅವರು ರೂಢಿಸಿಕೊಳ್ಳುವ ನುಡಿಗೆ ಸಂಬಂಧಿಸಿದ ರಾಚನಿಕ ನಮೂನೆಗಳು ಮಾತ್ರವಿರುವುದಿಲ್ಲ. ಅವನು ಇಲ್ಲವೇ ಅವಳು ರೂಢಿಸಿಕೊಳ್ಳಬಹುದಾದ ಯಾವುದೇ ನುಡಿಗೆ ಹೊಂದಿಕೆಯಾಗುವ ರಾಚನಿಕ ನಮೂನೆಗಳು ಇರುತ್ತವೆ.

ನುಡಿ ಮತ್ತು ಒಳನುಡಿಗಳ ಕುರಿತ ನಿಲುವುಗಳು ಕೇವಲ ಸಾಮಾಜಿಕ ಇಲ್ಲವೇ ರಾಜಕೀಯ ಮಾನದಂಡಗಳಿಂದ ಮಾತ್ರ ರೂಪುಗೊಳ್ಳಲು ಸಾಧ್ಯವಿಲ್ಲ ಎಂಬುದು ಮಾತ್ರ ಖಚಿತವಾದರೂ, ಅವುಗಳು ಅಂತಹ ನೆಲೆಗಳಿಂದಲೇ ಹೆಚ್ಚು ಗಟ್ಟಿಗೊಂಡಿವೆ. ಪರಸ್ಪರ ಸಂವಹನ/ ಅರ್ಥಗ್ರಾಹ್ಯತೆಯ ಕುರಿತ ಕೇಳ್ವಿಯೇ ಇಲ್ಲಿ ಅಪ್ರಸ್ತುತವಾಗಿದೆ. ಏಕೆಂದರೆ ನುಡಿಗಳ ನಡುವಣ ವ್ಯತ್ಯಾಸಗಳು ವಿಕಲ್ಪಗಳ (ಪ್ಯಾರಮೀಟರ್ಸ್) ಮೂಲಕ ಕಾಣಿಸಿಕೊಂಡರೆ, ನುಡಿಗಳ ನಡುವಣ ಸಮಾನತೆಗಳು (ಪ್ರಿನ್ಸಿಪಲ್ಸ್) ತತ್ವಗಳ ಮೂಲಕ ನಿರ್ಧಾರವಾಗುತ್ತವೆ.

ಹಾಗಾಗಿ ನುಡಿ ಮತ್ತು ಒಳನುಡಿಗಳನ್ನು ಗುರುತಿಸುವುದೆಂದರೆ, ಅವುಗಳ ನುಡುವಣ ವಿಕಲ್ಪಗಳನ್ನು ಗುರುತಿಸುವುದೋ ಇಲ್ಲವೇ ಕೇವಲ ಹೊರಪದರ ರಚನೆಗಳಲ್ಲಿ ಕಾಣುವ ವ್ಯತ್ಯಾಸಗಳನ್ನು ಗುರುತಿಸುವುದೋ ಎಂಬ ಗೊಂದಲ ತಲೆಯೆತ್ತುತ್ತದೆ. ಹಾಗಾಗಿ ಪರಸ್ಪರ ಅರ್ಥಗ್ರಾಹ್ಯತೆಯ ತತ್ವ ಅಷ್ಟೊಂದು ಮಹತ್ವದ ಸಂಗತಿಯಾಗಿ ಕಾಣಲಾರದು.

ಜಾನ್ ಲಯನ್ಸ್ (1981) ಎಂಬ ನುಡಿಯರಿಗನ ಪ್ರಕಾರ ನುಡಿಗಳಲ್ಲಿ ಕೆಲವು ಮೇಲು, ಮತ್ತೆ ಕೆಲವು ಕೀಳು ಅನ್ನುವ ಮಾತು ಸೈದ್ಧಾಂತಿಕ ನುಡಿಯರಿಮೆಯಿಂದಾಗಲಿ ಇಲ್ಲವೇ ನುಡಿದತ್ತವನ್ನು ಕಲೆಹಾಕಿ ಆ ಮೂಲಕ ಸಂಶೋಧನೆಯನ್ನು ಮಾಡಿ ಸಾಬೀತುಗೊಳಿಸಿದ ಸಂಶೋಧನೆಯ ಫಲಿತವೆಂದಾಗಲಿ ಅಲ್ಲ. ಇದು ಇನ್ನೂ ಸಂಶೋಧನೆಗೆ ಒಳಪಟ್ಟು ಆ ಮೂಲಕ ನಿರ್ಧಾರಗೊಳ್ಳಬೇಕಾದ ಸಂಗತಿ ಇಲ್ಲವೇ ಇದನ್ನು ಒಂದು ಕಲ್ಪಿತ ಪ್ರಮೆಯೆಂದು ಗುರುತಿಸಬಹುದೇ ಹೊರತು ಬೇರೇನೂವಲ್ಲ.

ಹಾಗಾಗಿ ಹೊಸಕಾಲದ ವೈಚಾರಿಕ ನೆಲೆಯ ಮೇಲೆ ಹುಟ್ಟಿಕೊಂಡ ನಿಗಮನ ತರ್ಕ (ಡಿಡಕ್ಟಿವಿಜಮ್) ವಿಧಾನ ತತ್ವವನ್ನು ಚಾಮ್‍ಸ್ಕಿ ಪರಿಚಯಿಸಿದನು. ಇದರ ಪ್ರಕಾರವೂ ಕೂಡ ನುಡಿಗಳ ನಡುವಿನ ಯಾವುದೇ ಬಗೆಯ ತರತಮಗಳನ್ನು ಗುರುತಿಸುವುದು ಸಾಧ್ಯವಿಲ್ಲ. ಆದರೆ ಚಾಮ್‍ಸ್ಕಿಯ ಪ್ರಕಾರ ಮಾನವರ ನುಡಿಗಳಲ್ಲಿ ‘ಹೆಚ್ಚು ಸಜ್ಜಾದ, ಹೆಚ್ಚು ಅಣಿಯಾದ’ ನುಡಿಗಳು ಮತ್ತು ‘ಕಡಿಮೆ ಸಜ್ಜಾದ, ಕಡಿಮೆ ಅಣಿಯಾದ’ ನುಡಿಗಳೆಂದು ವಿಂಗಡಿಸಬಹುದು. ನುಡಿಗಳ ಬಗ್ಗೆ ಮತ್ಯಾವ ‘ಮೌಲ್ಯ ನಿರ್ಣಯ’ (ವ್ಯಾಲ್ಯೂ ಜೆಡ್ಜಮೆಂಟ್) ಮಾಡಲು ಸಾಧ್ಯ ಇಲ್ಲ. ಹಾಗೂ ಮತ್ಯಾವುದೆ ಮೌಲ್ಯ ನಿರ್ಣಯವೂ ಸಲ್ಲದು.

ಇಂಗ್ಲಿಶ್ ಇವತ್ತು ಲೋಕದಲ್ಲಿ ಪಡೆದಿರುವ ಜಾಗ ತನ್ನದೇ ಆದ ಅಭಿವ್ಯಕ್ತಿಯ ಬಲದಿಂದ ಅಲ್ಲ. ಇದೊಂದು ಚಾರಿತ್ರಿಕ ಬೆಳವಣಿಗೆಯ ಪರಿಣಾಮದಿಂದ ರೂಪುಗೊಂಡ ಆಟ ಎಂದು ಹೇಳಬಹುದು. ಚರಿತ್ರೆಯ ನಿಲುವುಗಳು ಇಂಗ್ಲಿಶ್‍ನ್ನು ಹೆಚ್ಚು ಹೆಚ್ಚು ಸಜ್ಜುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸಂಸ್ಕೃತ ಇಲ್ಲವೇ ಬೇರಾವುದೇ ನುಡಿಗಳು ಈ ಜಾಗದಲ್ಲಿ ಇದ್ದಿದ್ದರೆ, ಈ ಮಟ್ಟಿನ ಮಹತ್ವವನ್ನು ಪಡೆದುಕೊಳ್ಳುತ್ತಿದ್ದವು ಎಂದು ಹೇಳುವುದು ದುಸ್ತರ. ಒಂದು ವೇಳೆ ಬೇರೆ ನುಡಿಗಳು ಬೆಳೆಯಬಹುದಿತ್ತೆಂದು ಅನ್ನಿಸಿದರೂ, ಇಂಗ್ಲಿಶ್ ಹಾಗೂ ಸಂಸ್ಕೃತದಷ್ಟು ಬಲಶಾಲಿಗಳಾಗಿ ರೂಪುಗೊಳ್ಳುತ್ತಿರಲಿಲ್ಲ ಎಂಬುದು ಗಮನಾರ್ಹ.

ಪರಸ್ಪರ ಅರ್ಥಗ್ರಾಹ್ಯತೆಯ ತತ್ವ: ತೊಡಕುಗಳು ಎಂತಹವು?

ಪರಸ್ಪರ ಅರ್ಥಗ್ರಾಹ್ಯತೆಯ ತತ್ವವನ್ನು ನುಡಿ ಹಾಗೂ ಒಳನುಡಿಗಳ ನಡುವೆ ಗಡಿಗೆರೆಗಳನ್ನು ಗುರುತಿಸಲು ಮಾನದಂಡವನ್ನಾಗಿ ಬಳಸುವಲ್ಲಿ ಸಾಕಷ್ಟು ಸಿಕ್ಕಲುಗಳಿವೆ. ಈಗಾಗಲೇ ಕೆಲವು ಸಿಕ್ಕುಗಳು ಮೇಲಿನ ಚರ್ಚೆಯಿಂದ ನಮ್ಮ ಗಮನಕ್ಕೆ ಬಂದಿವೆ. ಇವುಗಳಲ್ಲಿ ಅತ್ಯಂತ ಮುಖ್ಯವಾದ ತೊಡಕು ಏನೆಂದರೆ ಅರ್ಥದ ಮಟ್ಟ (ಪ್ರಮಾಣ)ದಲ್ಲಿ ವ್ಯತ್ಯಾಸಗಳಿವೆ. ಅಂದರೆ ಸ್ವೀಡಿಶ್ ನುಡಿಯಿಗರು ನಾರ್ವೇಯನ್ನು ಚನ್ನಾಗಿ ಅರಿಯಬಲ್ಲರು.

ಆದರೆ ನಾರ್ವೇ ನುಡಿಯಿಗರಿಗೆ ಸ್ವೀಡಿಶ್‍ನ್ನು ಅದೇ ಮಟ್ಟದಲ್ಲಿ ಅರಿಯಲು ಸಾಧ್ಯವಿಲ್ಲ. ಸ್ಕ್ಯಾಂಡಿನೆವಿಯನ್ನರಲ್ಲಿ ಪೂರ್ಣ ಪ್ರಮಾಣದ ಪರಸ್ಪರ ಸಂವಹನ ಸಾಧ್ಯವಿಲ್ಲದಿದ್ದರೂ, ಅವರಲ್ಲಿ ತಕ್ಕಮಟ್ಟಿಗಾದರೂ ಪರಸ್ಪರ ಸಂವಹನ ಇರುವುದನ್ನು ಕಾಣಬಹುದು. ಇಂತಹ ಸನ್ನಿವೇಶದಲ್ಲಿ ಕೆಲವು ರಿಯಾತಿಗಳು ಇದ್ದೇ ಇರುತ್ತವೆ. ಎತ್ತುಗೆಗಾಗಿ ನಿಧಾನವಾಗಿ ಮಾತನಾಡುವುದು, ಪದಗಳು ಇಲ್ಲವೇ ಉಲಿಗಳನ್ನು ಬಿಟ್ಟು ಉಚ್ಚರಿಸುವುದು, ಅರ್ಥ ಪಲ್ಲಟಗಳನ್ನು ಉಂಟುಮಾಡುವುದು ಮುಂತಾದವುಗಳನ್ನು ಕಾಣಬಹುದು.

ಆದರೆ ಜರ್ಮನ್ನಿನ ಒಳನುಡಿಗಳಲ್ಲಿ ಪರಸ್ಪರ ಸಂವಹನಕ್ಕೆ ಅವಕಾಶವೇ ಇಲ್ಲ. ಈ ಎರಡೂ ಸನ್ನಿವೇಶಗಳಲ್ಲಿ ಪರಸ್ಪರ ಅರ್ಥಗ್ರಾಹ್ಯತೆಯ ಮಟ್ಟದಲ್ಲಿ ಯಾವುದೇ ಸಮಾನತೆಯಿಲ್ಲ ಎಂಬುದು ಮಾತ್ರ ಎದ್ದು ಕಾಣುತ್ತದೆ. ನಮ್ಮ ಸಂದಂರ್ಭದಲ್ಲಿಯೂ ಇಂತಹ ತೊಡಕುಗಳಿವೆ. ಆದರೆ ಅವುಗಳನ್ನು ಬಿಡಿಸಿ ನೋಡುವ ಬಗೆಗಳು ಬೇರೆಯಾಗಿವೆ ಎಂದು ಕಾಣುತ್ತದೆ.

ಅಂದರೆ ಮಲೆಯಾಳಂ ನುಡಿಯಿಗರು ತಕ್ಕ ಮಟ್ಟಿಗೆ ತಮಿಳನ್ನು ಅರಿಯಬಲ್ಲವರಾದರೆ, ತಮಿಳು ನುಡಿಯಿಗರಿಗೆ ಮಲೆಯಾಳಂ ಅರಿತುಕೊಳ್ಳಲು ದುಸ್ತರವಾಗುತ್ತದೆ. ಹಾಗೂ ಬೀದರ ಕನ್ನಡದ ಆಡುಗರು ಕರ್ನಾಟಕದ ಎಲ್ಲ ವಲಯಗಳ ಕನ್ನಡವನ್ನು ಅರಿತುಕೊಳ್ಳಬಲ್ಲರು. ಆದರೆ ಅವರ ಕನ್ನಡವನ್ನು ಇತರ ಒಳನುಡಿಯಿಗರು ಅದೇ ಪ್ರಮಾಣದಲ್ಲಿ ಅರಿತುಕೊಳ್ಳಲಾರರು.

ಪರಸ್ಪರ ಅರ್ಥಗ್ರಾಹ್ಯತೆಯ ತತ್ವ ಬೇರೆಯೇ ಬಗೆಯ ಮಾನದಂಡಗಳನ್ನು ನೆಚ್ಚಿಕೊಂಡಿರುತ್ತೆಂದು ಕಾಣುತ್ತದೆ. ಅವುಗಳೆಂದರೆ ಬೇರೆ ಒಳನುಡಿಗಳಿಗೆ ಒಡ್ಡಿಕೊಳ್ಳುವ ಪ್ರಮಾಣ, ಶಿಕ್ಷಣದಲ್ಲಿ ಒಳನುಡಿಗಳಿಗೆ ಸಿಗುವ ಅವಕಾಶ ಇಲ್ಲವೇ ಬಳಕೆಯ ಪ್ರಮಾಣ ಹಾಗೂ ಬೇರೆ ಒಳನುಡಿ ಮತ್ತು ಆ ಒಳನುಡಿಯಿಗರನ್ನು ಒಪ್ಪುವ ಇಲ್ಲವೇ ತಾಳಿಕೊಳ್ಳುವ ಬಗೆಗಳನ್ನು ಕುರಿತಾಗಿರುತ್ತದೆ.

ಏಕೆಂದರೆ ಅಧಿಕಾರ ಸಂಬಂಧದ ಆವರಣದಲ್ಲಿರುವ ಒಳನುಡಿ ಮತ್ತು ಅವುಗಳ ಆಡುಗರು ಪ್ರಜ್ಞಾಪೂರಕವಾಗಿಯೇ ತಮ್ಮ ಒಳನುಡಿಗೆ ಹೊರತಾದ ಬೇರೊಂದು ಒಳನುಡಿಯನ್ನು ನಿರಾಕರಿಸುವ ಸಾಧ್ಯತೆಗಳಿರುತ್ತವೆ. ಕಾರಣ ‘ಎ’ ಒಳನುಡಿ ‘ಬಿ’ಕ್ಕಿಂತ ದೊಡ್ಡದು ಇಲ್ಲವೇ ಚಿಕ್ಕದು ಹಾಗೂ ‘ಎ’ ಒಳನುಡಿ ಮೇಲು ಇಲ್ಲವೇ ‘ಬಿ’ ಒಳನುಡಿ ಕೀಳು ಎಂಬ ನಿಲುವುಗಳು ಕೂಡ ಇಂತಹ ನಿರಾಕರಣೆಗೆ ಒತ್ತಾಸೆಯಾಗಿರುತ್ತವೆ.

ಹಾಗಾಗಿ ಈ ಪರಸ್ಪರ ಅರ್ಥಗ್ರಾಹ್ಯತೆಯ ತತ್ವಕ್ಕೆ ತಕ್ಕಮಟ್ಟಿನ ಪ್ರಾಮುಖ್ಯತೆ ಇದ್ದಂತೆ ಕಂಡರೂ, ಯಾವುದು ನುಡಿ, ಯಾವುದು ಒಳನುಡಿ ಹಾಗೂ ಯಾವುದು ಏನಲ್ಲ ಎಂಬುದನ್ನು ನಿರ್ಧರಿಸುವಲ್ಲಿ ಇದರಿಂದ ಯಾವುದೇ ಬಗೆಯ ಸಹಾಯ ಸಿಗುವುದಿಲ್ಲ. ಸ್ಕ್ಯಾಂಡಿನೆವಿಯನ್ ಹಾಗೂ ಜರ್ಮನ್ ನುಡಿಗಳ ಕುರಿತ ಚರ್ಚೆಗಳು ಇಂತಹ ಅಸಂಗತಗಳನ್ನು ಎತ್ತಿ ತೋರಿಸಿವೆ.

ನುಡಿ ತನ್ನನ್ನು ವಿವರಿಸಿಕೊಳ್ಳಲು ಬೇಕಾಗಿರುವ ಲಕ್ಷಣಗಳನ್ನು ತನ್ನ ಒಡಲಲ್ಲಿಯೇ ಇರಸಿಕೊಂಡಿದ್ದರೂ, ಅದು ಕೇವಲ ನುಡಿಯ (ಲಿಂಗ್ವಿಸ್ಟಿಕ್) ಕಲ್ಪನೆ ಮಾತ್ರವಾಗಿ ಉಳದಿಲ್ಲ. ಬದಲಾಗಿ ಸಾಂಸ್ಕೃತಿಕ, ರಾಜಕೀಯ ಕಲ್ಪನೆಯೂ ಆಗಿರುತ್ತದೆ ಎಂಬುದು ಗಮನಾರ್ಹ. ನಾರ್ವೇ, ಸ್ವೀಡಿಶ್, ಡೆನಿಶ್ ಹಾಗೂ ಜರ್ಮನ್ ನುಡಿಗಳ ಕುರಿತ ನಿಲುವುಗಳು ರಾಜಕೀಯ, ಪ್ರಾದೇಶಿಕ, ಸಾಮಾಜಿಕ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಪ್ರಭಾವಕ್ಕೆ ಒಳಗಾಗಿರುವುದು ಇಲ್ಲಿ ನಿಚ್ಚಳವಾಗಿ ಕಾಣುತ್ತದೆ.

ನುಡಿಯರಿಮೆಗೆ ಹೊರತಾದ ಇಂತಹ ತೀರ್ಮಾನಗಳೇ, ನುಡಿ ಮತ್ತು ಒಳನುಡಿಗಳನ್ನು ಪ್ರತ್ಯೇಕಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತವೆ. ಅಂದರೆ ನಾರ್ವೇ, ಸ್ವೀಡಿಶ್, ಡೆನಿಶ್ ನುಡಿಗಳಿಗೆ ತಮ್ಮದೇ ಆದ ಪ್ರಾದೇಶಿಕ ಸ್ವಾಯತ್ತತೆ, ರಾಷ್ಟ್ರ, ರಾಜಕೀಯ ಹಕ್ಕು, ವರ್ಣಮಾಲೆ, ಸೊಲ್ಲರಿಮೆ ಹಾಗೂ ಸಾಹಿತ್ಯಗಳು ಇರುವುದರಿಂದ, ಆಯಾ ನುಡಿಯಿಗರು ತಾವಾಡುವ ನುಡಿಗಳು ಬೇರೆ ಬೇರೆಯೆಂದು ನಂಬಿರುತ್ತಾರೆ.

ಆ ಕಾರಣಕ್ಕಾಗಿ ಇವು ಮೂರು ಬೇರೆ ನುಡಿಗಳಾಗಿ ನೆಲೆನಿಂತಿವೆ. ರಾಚನಿಕವಾಗಿ ಎಷ್ಟೇ ಹತ್ತಿರವಿದ್ದರೂ, ಹಿಂದಿ ಮತ್ತು ಉರ್ದು ಎರಡೂ ಬೇರೆ ಬೇರೆ ನುಡಿಗಳು. ಇಲ್ಲಿ ನುಡಿಯರಿಮೆಯ ಯಾವುದೇ ಸಮರ್ಥನೆಗಳಿಗೆ ಅವಕಾಶವಿಲ್ಲ. ಕರ್ನಾಟಕದಲ್ಲಿರುವ ತುಳು, ಕೊಂಕಣಿ, ಬ್ಯಾರಿ, ಉರ್ದು, ಕೊಡವ ಮುಂತಾದವುಗಳಿಗೆ ಇಂತಹ ಯಾವುದೇ ಸಾಂಸ್ಥಿಕ ಸ್ವಾಯತ್ತತೆ ಇಲ್ಲವೇ ಅಧಿಕಾರ ಇಲ್ಲದಿರುವುದರಿಂದ, ಇವುಗಳನ್ನು ಬಹುತೇಕ ಸನ್ನವೇಶದಲ್ಲಿ ಕೇವಲ ಒಳನುಡಿಗಳನ್ನಾಗಿ ಆರೋಪಿಸಲಾಗುತ್ತದೆ.

ಈ ಕಾರಣಗಳಿಂದಲೇ ‘ನುಡಿ’ ಎನ್ನುವುದು ನುಡಿಯರಿಮೆಯ ಪ್ರಕಾರವೂ ಒಂದು ನಾನ್‍ಟೆಕ್ನಿಕಲ್ ಪದವಾಗಿದೆ ಅಷ್ಟೇ. ನುಡಿ, ಒಳನುಡಿ, ಪರಸ್ಪರ ಅರ್ಥಗ್ರಾಹ್ಯತೆ ಮುಂತಾದ ವರ್ಣಾತ್ಮಕ ಅರಿಮೆ ಪದಗಳನ್ನು ಬಣ್ಣಿಸುವಾಗ ಅತ್ಯಂತ ನಿಗಾವಹಿಸಬೇಕಾಗುತ್ತದೆ.

ನುಡಿ ಹಾಗೂ ಒಳನುಡಿಗಳ ನುಡುವಣ ಅಂತರ್ಸಂಬಂಧಗಳು ಸಾಮಾಜಿಕ ಸ್ವರೂಪದ್ದಾಗಿರುತ್ತವೆ. ಹಾಗಾಗಿ ಇವುಗಳನ್ನು ಸ್ವಾಯತ್ತತೆ ವರ್ಸಸ್ ವೈವಿಧ್ಯತೆ ಎಂಬ ವಿರೋಧಾತ್ಮಕ ನೆಲೆಯಿಂದ ವ್ಯಾಖ್ಯಾನಿಸಬೇಕಾಗುತ್ತದೆ.

ಅಂದರೆ ಯಾವುದೇ ಒಂದು ಸ್ವಾಯತ್ತ ನುಡಿ ಇಲ್ಲವೇ ನುಡಿಬಗೆಯನ್ನು ವಿಶಿಷ್ಟವೆಂದೋ ಸ್ವತಂತ್ರವೆಂದೋ ಗ್ರಹಿಸಿದರೆ, ಎಷ್ಟೋ ನುಡಿಬಗೆಗಳು ವೈವಿಧ್ಯತೆಯನ್ನು, ಯಾವುದು ತನ್ನನ್ನು ಒಂದು ಸ್ವಾಯತ್ತ ನುಡಿಯೆಂದು ಗುರುತಿಸಿಕೊಂಡಿರುತ್ತದೆಯೋ, ಆ ನುಡಿಯಲ್ಲಿ ಸಮಾವೇಶಗೊಳಿಸಲಾಗುತ್ತದೆ.

ಅವುಗಳ ನಡುವಣ ಯಾವುದೇ ರಾಚನಿಕ ಸಾಮ್ಯ ಹಾಗೂ ವೈಸಮ್ಯಗಳನ್ನು ಲೆಕ್ಕಿಸದೇ ಇಂತಹ ನಿಲುವುಗಳನ್ನು ತಾಳುವ ಬಗೆ ಅದು ಹೇಗೆ ನುಡಿಯರಿಮೆಯ ನೆಲೆಯಾಗುತ್ತದೆ?. ಈ ವಿವರಗಳು ಪರಸ್ಪರ ಅರ್ಥಗ್ರಾಹ್ಯತೆ ತತ್ವದ ನೆಲೆಗಳನ್ನು ಇನ್ನಷ್ಟೂ ಜಟಿಲಗೊಳಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

ದಿನದ ಸುದ್ದಿ

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್

Published

on

medical-college-hostel-canteen-food-safety-inspection-karnataka
ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಕಣ್ಣಿಟ್ಟ ಆಹಾರ ಸುರಕ್ಷತಾ ಇಲಾಖೆ: ಅವಧಿ ಮೀರಿದ ರವೆ, ಹಾಲು ಜಪ್ತಿ

ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 34 ಕ್ಯಾಂಟೀನ್‌ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಹೈಲೈಟ್ಸ್

  • ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ 34 ಹಾಸ್ಟೆಲ್ ಕ್ಯಾಂಟೀನ್‌ಗಳ ಪರಿಶೀಲನೆ
  • ಲೋಪದೋಷ ಕಂಡುಬಂದ 5 ಕ್ಯಾಂಟೀನ್‌ಗಳಿಗೆ ನೋಟಿಸ್
  • ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್ ನಿಯಮ ಉಲ್ಲಂಘನೆ
  • 07 ಕೆ.ಜಿ. ಅವಧಿ ಮೀರಿದ ರವೆ, 08 ಲೀಟರ್ ಹಾಲು ಜಪ್ತಿ
  • ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ

http://Visit : www.suddidina.com

ಕ್ಯಾಂಟೀನ್‌ಗಳಲ್ಲಿ ಆಹಾರ ಸುರಕ್ಷತೆಗೆ ಒತ್ತು

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಕ್ಯಾಂಟೀನ್ ಆಹಾರವನ್ನೇ ಅವಲಂಬಿಸಿರುತ್ತಾರೆ. ಹೀಗಾಗಿ ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ಆಹಾರ ಪದಾರ್ಥಗಳ ಸಂಗ್ರಹಣೆ, ಲೇಬಲಿಂಗ್ ಹಾಗೂ ಅವಧಿ ಪರಿಶೀಲನೆ ಅತ್ಯಂತ ಮಹತ್ವದ್ದಾಗಿದೆ.

ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ವಿವಿಧ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳನ್ನು ಪರಿಶೀಲಿಸಿ, ಆಹಾರ ತಯಾರಿಕೆಯಿಂದ ಹಿಡಿದು ಪದಾರ್ಥಗಳ ಸಂಗ್ರಹಣೆವರೆಗೆ ಹಲವು ಅಂಶಗಳನ್ನು ಪರಿಶೀಲಿಸಿದ್ದಾರೆ. ನಿಯಮ ಪಾಲನೆಯಲ್ಲಿ ವ್ಯತ್ಯಾಸ ಕಂಡುಬಂದ ಕ್ಯಾಂಟೀನ್‌ಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ಅವಧಿ ಮೀರಿದ ರವೆ, ಹಾಲು ಪತ್ತೆ

ಪರಿಶೀಲನೆ ವೇಳೆ ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್‌ಗೆ ಸಂಬಂಧಿಸಿದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಇದೇ ವೇಳೆ ಅಡುಗೆ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ 07 ಕೆ.ಜಿ. ಅವಧಿ ಮೀರಿದ ರವೆ ಹಾಗೂ 08 ಲೀಟರ್ ಅವಧಿ ಮೀರಿದ ಹಾಲು ಪತ್ತೆಯಾಗಿದೆ.

ವಿದ್ಯಾರ್ಥಿಗಳ ಸೇವನೆಗೆ ಬಳಸುವ ಆಹಾರ ಪದಾರ್ಥಗಳು ಅವಧಿ ಮೀರಿದ ಬಳಿಕವೂ ಅಡುಗೆಮನೆಯಲ್ಲಿ ಸಂಗ್ರಹಿಸಿರುವುದು ಗಂಭೀರ ಲೋಪವಾಗಿದೆ. ಅಧಿಕಾರಿಗಳು ಈ ಪದಾರ್ಥಗಳನ್ನು ತಕ್ಷಣ ಜಪ್ತಿ ಮಾಡಿಕೊಂಡಿದ್ದು, ಸಂಬಂಧಿತ ಕ್ಯಾಂಟೀನ್ ವಿರುದ್ಧ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಸಂಬಂಧಿತ ಆಹಾರ ಉದ್ದಿಮೆದಾರರ ವಿರುದ್ಧ ಅನ್ವಯವಾಗುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈ ಪ್ರಕರಣಗಳನ್ನು ಸಕ್ಷಮ ಪ್ರಾಧಿಕಾರವಾದ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯಕ್ಕೆ ಆದ್ಯತೆ

ವೈದ್ಯಕೀಯ ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದ ಭವಿಷ್ಯದ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಅವರ ಹಾಸ್ಟೆಲ್ ಆಹಾರದ ಗುಣಮಟ್ಟದ ಬಗ್ಗೆ ಇಲಾಖೆ ಹೆಚ್ಚಿನ ನಿಗಾ ವಹಿಸಿರುವುದು ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲೂ ಇಂತಹ ಪರಿಶೀಲನೆಗಳು ಮುಂದುವರಿಯುವ ಸಾಧ್ಯತೆ ಇದ್ದು, ಕ್ಯಾಂಟೀನ್ ನಿರ್ವಹಣೆ ಮಾಡುವವರು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ.

Continue Reading

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

Trending