ದಿನದ ಸುದ್ದಿ
ಭಾರತದ ದಿವ್ಯ ಮೌನವೇ ಗಟ್ಟಿಯಾದ ಧ್ವನಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/covid19_India_Suddidina.jpg&description=ಭಾರತದ ದಿವ್ಯ ಮೌನವೇ ಗಟ್ಟಿಯಾದ ಧ್ವನಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/covid19_India_Suddidina.jpg&description=ಭಾರತದ ದಿವ್ಯ ಮೌನವೇ ಗಟ್ಟಿಯಾದ ಧ್ವನಿ', 'pinterestShare', 'width=750,height=350'); return false;" title="Pin This Post">
- ಮೂಲ : ಗೋಪಾಲಕೃಷ್ಣ ಗಾಂಧಿ (ದ ಹಿಂದೂ 15-9-20),ಅನುವಾದ : ನಾ ದಿವಾಕರ
1918-20ರ ಸ್ಪಾನಿಷ್ ಫ್ಲೂ, 1958, 66, 73 ಮತ್ತು 1980ರ ಆರ್ಥಿಕ ಹಿಂಜರಿತ ಮತ್ತು 1962ರ ಭಾರತ-ಚೀನಾ ಯುದ್ಧ ಇವೆಲ್ಲವೂ ಮತ್ತೊಮ್ಮೆ ಭಾರತವನ್ನು, ಭಾರತೀಯರನ್ನು ಕಾಡುತ್ತಿದೆ. ಈ ಬಹುಮುಖಿ ಸಮಸ್ಯೆಯನ್ನು ಹೇಗೆ ನಿಭಾಯಿಸುವುದು ಎಂದು ಬಹುಶಃ ಯಾರಿಗೂ ತಿಳಿಯುತ್ತಿಲ್ಲ. ವಾಸ್ತವ ಎಂದರೆ ವಸ್ತುಸ್ಥಿತಿ ಹೇಗಿದೆ ಎಂದೂ ಯಾರಿಗೂ ಸ್ಪಷ್ಟವಾಗಿ ತಿಳಿದಿಲ್ಲ.
ಕೋವಿದ್ 19 ಕುರಿತಂತೆ ನಮಗೆ ಕರಾರುವಾಕ್ಕಾಗಿ, ವಸ್ತುನಿಷ್ಠವಾಗಿ, ಅಧಿಕಾರಯುತವಾಗಿ, ಸಮಾಧಾನಕರವಾಗಿ ನಿರ್ದಿಷ್ಟ ಮಾಹಿತಿಯನ್ನು ನಮಗೆ ಯಾರೂ ನೀಡುತ್ತಿಲ್ಲ. ಸಾಂಕ್ರಾಮಿಕ ರೋಗಗಳ ತಜ್ಞ ಡಾ ಟಿ ಜಾಕಬ್ ಜಾನ್ ಅವರು ಹೇಳುವಂತೆ ಭಾರತ ಬ್ರೆಜಿಲ್ ಮತ್ತು ಅಮೆರಿಕವನ್ನೂ ಹಿಂದಿಕ್ಕಿ , ವಿಶ್ವದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ದೇಶವಾಗಿ ಹೊರಹೊಮ್ಮುತ್ತಿದೆ.
ದಿನನಿತ್ಯ ವರದಿಯಾಗುವ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ. ಆದರೆ ಈ ಕುರಿತು ಸವಿವರವಾಗಿ ತಿಳಿದುಕೊಳ್ಳುವುದು ಸಾಕಷ್ಟಿದೆ. ಸರ್ಕಾರಿ ಮೂಲಗಳಿಂದ ಅಧಿಕೃತ ಮಾಹಿತಿಯನ್ನು ಈ ದೇಶದ ನಾಗರಿಕರು ಪಡೆಯಬೇಕಿದೆ. ಇದು ಸಾಧ್ಯವಾಗುತ್ತಿಲ್ಲ.
ಭಾರತದಲ್ಲಿ ಕೋವಿದ್ 19 ಸಾಮುದಾಯಿಕವಾಗಿ ಹರಡುತ್ತಿದೆಯೇ? (ಸಮುದಾಯ ಪ್ರಸರಣ ಏಪ್ರಿಲ್ ತಿಂಗಳಲ್ಲೇ ಆರಂಭವಾಗಿದೆ ಎಂದು ಆಗಲೇ ತಜ್ಞರು, ವೈದ್ಯರು ಎಚ್ಚರಿಸಿದ್ದರು-ಅನು) ಇದು ಹೌದಾದರೆ ದಿನನಿತ್ಯದ ಪರೀಕ್ಷೆ ಮತ್ತು ತಪಾಸಣೆಯ ಪ್ರಮಾಣವನ್ನು ಹೆಚ್ಚಿಸಬೇಕು. ಅವಶ್ಯಕತೆಗೆ ಅನುಗುಣವಾಗಿ ಆಸ್ಪತ್ರೆಯಲ್ಲಿ ಹಾಸಿಗೆ ಸೌಲಭ್ಯಗಳು ಮತ್ತು ವೆಂಟಿಲೇಟರ್ಗಳನ್ನು ಒದಗಿಸಬೇಕು.
ಅಥವಾ ಜನರು ತಮ್ಮ ಮನೆಯಲ್ಲಿದ್ದುಕೊಂಡೇ ತಾವೇ ಪರೀಕ್ಷೆ ಮಾಡಿಸಿಕೊಂಡು, ಚಿಕಿತ್ಸೆ ಪಡೆದು ಈ ವೈರಾಣುವಿನಿಂದ ಪಾರಾಗಬೇಕು ಎಂದು ಅಪೇಕ್ಷಿಸಲಾಗುತ್ತಿದೆಯೇ ? ಈಗ ಕೊರೋನಾ ವೈರಾಣು ನಗರ ಪ್ರದೇಶಗಳನ್ನು ತೊರೆದು ಭಾರತದ ಹಳ್ಳಿ ಹಳ್ಳಿಗಳನ್ನು ತಲುಪುತ್ತಿದೆಯೇ ? ಇದು ಹೌದಾದರೆ ಗ್ರಾಮೀಣ ಭಾರತದ ಜನತೆಗೆ ತಮ್ಮ ಮೇಲೆ ಎರಗಿರುವ ಈ ಅಪಾಯದ ಅರಿವು ಇದೆಯೇ ? ಭಾರತದ ಗ್ರಾಮಗಳು ಈ ಸೋಂಕಿನ ಪರಿಣಾಮವನ್ನು ಎದುರಿಸಲು ಕನಿಷ್ಟ ಮಟ್ಟದ ತಯಾರಿ ನಡೆಸಿವೆಯೇ ?
ಈ ಸವಾಲನ್ನು ಸಮರ್ಥವಾಗಿ ಎದುರಿಸಲು ಆರೋಗ್ಯ ಕೇಂದ್ರಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿವೆಯೇ ? ನಮ್ಮ ಆಲೋಚನೆಯಾದರೂ ಏನು ? ಏನಾದರೂ ಯೋಚಿಸಿರಲೇಬೇಕಲ್ಲವೇ ? ಸೋಂಕಿನ ಪ್ರಮಾಣ ಮತ್ತು ಪ್ರಸರಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಎಲ್ಲ ರೀತಿಯ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿರುವ ಅಧಿಕಾರ ವರ್ಗದಲ್ಲಿ ಈ ಆಲೋಚನೆ ಬಂದಿರಬೇಕಲ್ಲವೇ ? ಇದಕ್ಕೆ ತಾರ್ಕಿಕ ವಿವರಣೆ ಖಂಡಿತವಾಗಿಯೂ ಬೇಕಿದೆ.
ಶೋಧಿಸಬೇಕಾದ ಪ್ರಶ್ನೆಗಳು ಹಲವು
ಇದೇ ರೀತಿ ಲಾಕ್ ಡೌನ್ ಪರಿಣಾಮದಿಂದ ಮತ್ತು ಆರ್ಥಿಕ ಹಿಂಜರಿತದ ಪರಿಣಾಮ ದೇಶಾದ್ಯಂತ ವೇತನ ಪಡೆಯುವಂತಹ ನೌಕರರ ಮತ್ತು ಕೂಲಿಯಿಲ್ಲದ ಜನರ ಜೀವನೋಪಾಯ ಸತತವಾಗಿ ಕುಸಿಯುತ್ತಿರುವುದರ ಪರಿಣಾಮ ಏನು ಎನ್ನುವುದು ನಮಗೆ ತಿಳಿದಿಲ್ಲ. ದೇಶದಲ್ಲಿ ಜನಸಾಮಾನ್ಯರ ಕೊಳ್ಳುವ ಸಾಮರ್ಥ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ರಫ್ತು ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ರೈತರು ಮತ್ತು ಕೃಷಿ ಕಾರ್ಮಿಕರು ತಮ್ಮ ಫಸಲನ್ನು ಏನು ಮಾಡಬಹುದು ಎನ್ನುವುದೂ ನಮಗೆ ತಿಳಿದಿಲ್ಲ.
ನಮ್ಮ ಗೋದಾಮುಗಳಲ್ಲಿ ಭರ್ತಿ ದವಸ ಧಾನ್ಯಗಳು ತುಂಬಿದ್ದರೂ ಇತ್ತ ಜನಸಾಮಾನ್ಯರು ಹಸಿವಿನಿಂದ ಸಾಯುತ್ತಿರುವ ವಿಡಂಬನೆಯನ್ನು ನಾವು ಕಾಣಲಿದ್ದೇವೆಯೇ ? ನಗರಗಳಲ್ಲಿರುವ ಹಿತವಲಯದ ಜನರು ನಿತ್ಯ ಹಾಲು ಖರೀದಿಸುತ್ತಿದ್ದಾರೆ ಆದರೆ ಹಾಲು ಪೂರೈಸುವವರಿಗೆ ಸೂಕ್ತ ಬೆಲೆಯಲ್ಲಿ ಹಣ ಪಾವತಿಸಲಾಗುತ್ತಿದೆಯೇ ? ಈ ವಿಚಾರದಲ್ಲಿ ನಾಗರಿಕರಿಗೆ ಮನದಟ್ಟಾಗುವಂತೆ ತಿಳಿಸಿ ಹೇಳುವ ಹಣಕಾಸು ತಜ್ಞರು ಸರ್ಕಾರದಲ್ಲಿ ಇಲ್ಲವೇ ಇಲ್ಲ.
ಇನ್ನೂ ಮುಖ್ಯವಾದ ಸಂಗತಿ ಎಂದರೆ, ನಮ್ಮ ನಡುವೆ ವಿಶ್ಲೇಷಕರು ಮತ್ತು ಚರ್ಚಾಪಟುಗಳು ಹೇರಳವಾಗಿ ಲಭ್ಯವಿದ್ದರೂ, ವಿದ್ವತ್ ಪೂರ್ಣ ಎನ್ನಬಹುದಾದ ಸಾಮಾಜಿಕ ತತ್ವಶಾಸ್ತ್ರಜ್ಞರು ಇಲ್ಲ. ಭಾರತ ಇಂದು ಎದುರಿಸುತ್ತಿರುವ ವೈದ್ಯಕೀಯ, ಆರ್ಥಿಕ ಮತ್ತು ಪರಿಸರ ಸಂಬಂಧಿತ ಬಿಕ್ಕಟ್ಟಿನ ಎಲ್ಲ ಅಂಶಗಳನ್ನೂ ಪರಸ್ಪರ ಸಂಪರ್ಕಿಸಿ ಇದರ ಜಾಗತಿಕ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ಭಾರತದ ಪ್ರಜೆಗಳಿಗೆ ಸಾಧ್ಯವಾಗುತ್ತಿಲ್ಲ.
ದೇಶದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು, ಮಾನವ ಸಂಪನ್ಮೂಲಗಳನ್ನು ಏಕಸ್ವಾಮ್ಯ ಕಾರ್ಪೋರೇಟ್ ಉದ್ಯಮಿಗಳ ಲಾಭಗಳಿಕೆಗಾಗಿ ಲೂಟಿ ಮಾಡಲಾಗುತ್ತಿರುವುದರಿಂದಲೇ ಭಾರತದ ಪ್ರಜೆಗಳು ಕೋವಿದ್ 19ನಿಂದ ಹೆಚ್ಚಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ ಎಂದು ಸುಸ್ಪಷ್ಟವಾಗಿ, ಧೈರ್ಯದಿಂದ ಹೇಳಲು ನಮ್ಮ ನಡುವೆ ದಿ. ಅನಿಲ್ ಅಗರ್ವಾಲ್ ಅವರಂತಹ ತಜ್ಞರು ಇಲ್ಲ.
ಈ ಬಿಕ್ಕಟ್ಟು ಎಲ್ಲರನ್ನೂ ಬಾಧಿಸಿದೆ. ಸರ್ಕಾರಕ್ಕೂ ಇದರ ಬಿಸಿ ತಟ್ಟಿದೆ. ಸಿಡಿಲಿನಂತೆ ಎರಗಿದೆ. ಎಲ್ಲರೂ ಸಹ, ವಿಶೇಷವಾಗಿ ಆಡಳಿತಾರೂಢ ಸರ್ಕಾರ ದಿನನಿತ್ಯ ಇದರಿಂದ ಪಾಠ ಕಲಿಯುವಂತಾಗಿದೆ. ಆದರೆ ಜ್ಞಾನದ ಕೊರತೆ ನಮ್ಮೊಳಗಿನ ಪೊಳ್ಳುತನವನ್ನು ಹೊರಗೆಡಹುತ್ತಿದೆ.
ಕುತೂಹಲಕಾರಿ ಸಂಗತಿ ಎಂದರೆ ಕೋವಿದ್ 19 ನಿವಾರಣೆಗೆ ಲಸಿಕೆ ಕಂಡುಹಿಡಿಯುವ ಬಗ್ಗೆ ಪುಂಖಾನುಪುಂಖವಾಗಿ ಊಹೆಗೂ ನಿಲುಕದಂತಹ ವಿಚಾರಗಳನ್ನು ಹಂಚಿಕೊಳ್ಳಲಾಗುತ್ತಿದೆ. 6 ರಿಂದ 12 ತಿಂಗಳಲ್ಲಿ ಲಸಿಕೆ ಸಿದ್ಧವಾಗುತ್ತಿದೆ ಎಂದವರೇ ಈಗ ಭಾರತದ 130 ಕೋಟಿ ಜನರನ್ನು ತಲುಪುವಷ್ಟು ಲಸಿಕೆಗೆ ಇನ್ನೂ ಐದಾರು ವರ್ಷ ಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ. ಬಹುಶಃ ನಾವು ಕೊರೋನಾ ಯುಗದಲ್ಲಿ ಊಹೆಗಳಲ್ಲೇ ಬದುಕುತ್ತೇವೆ ಎನಿಸುತ್ತದೆ.
ನಮ್ಮನ್ನು ರಕ್ಷಿಸುವವರು ಎಂದು ಅವತರಿಸುತ್ತಾರೋ ಎನ್ನುವ ಕುತೂಹಲ ಸಮಸ್ತ ಜನತೆಯಲ್ಲೂ ಕಂಡುಬರುತ್ತಿದೆ. ಆದರೆ ಅಂತಹ ಸಂರಕ್ಷಕನೊಬ್ಬ ಅವತರಿಸುತ್ತಾನೆ ಎಂಬ ನಿರೀಕ್ಷೆಯಲ್ಲಿರುವುದು ಮಾನವ ಸಮಾಜದ ಜ್ಞಾನ ಪರಂಪರೆಗೆ ಮತ್ತು ಆತ್ಮಗೌರವಕ್ಕೆ ಸಲ್ಲುವುದಲ್ಲ. ಸಾಂಕ್ರಾಮಿಕ ಪಿಡುಗಿನ ಕಬಂಧ ಬಾಹುಗಳಲ್ಲಿ ಸಿಲುಕಿ, ಆರ್ಥಿಕ ಹಿಂಜರಿತವನ್ನು ಎದುರಿಸಿ, ಯುದ್ಧದ ವಾತಾವರಣವನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಈ ದೇಶದ ನಾಗರಿಕರಾದ ನಾವು ಏನು ಮಾಡಬೇಕು ?
ಪ್ರಭುತ್ವದ ಆಧಾರ ಸ್ತಂಭಗಳು
ವಸ್ತುಸ್ಥಿತಿಯನ್ನು ಅರಿಯುವುದೆಂದರೆ ಪರಿಸ್ಥಿತಿಯನ್ನು ನಿಯಂತ್ರಿಸಲು ಶಕ್ತರಾಗಿರುವುದು ಎಂದರ್ಥ. ಈಗಿನ ವಾಸ್ತವ ಸನ್ನಿವೇಶ, ಪರಿಸ್ಥಿತಿ ಹೇಗಿದೆ ಎಂದು ನಮಗೆ ತಿಳಿಯಬೇಕಿದೆ ಎಂದು ನಾವು ಆಗ್ರಹಿಸಲು ಇದು ಸಕಾಲ. ಕೊರೋನಾ ವೈರಾಣು ಮತ್ತು ಅದರ ಪರಿಣಾಮವನ್ನು ಮುಚ್ಚಿಟ್ಟಿದ್ದಕ್ಕಾಗಿ ಚೀನಾ ತೀವ್ರ ಖಂಡನೆಗೊಳಗಾಗಿದೆ.
ನಾವೂ ಸಹ ಇದೇ ಆರೋಪವನ್ನು ಎದುರಿಸಬೇಕಿಲ್ಲ. ಪ್ರಭುತ್ವದ ಮೂರು ಪ್ರಮುಖ ಆಧಾರ ಸ್ತಂಭಗಳ ಪೈಕಿ ಜ್ಞಾನವನ್ನು ಹಂಚಿಕೊಳ್ಳುವ ಹೊಣೆಗಾರಿಕೆ ಕಾರ್ಯಾಂಗದ ಮೇಲಿರುತ್ತದೆ. ಇದು ಕಾರ್ಯಾಂಗದ ಕರ್ತವ್ಯವೂ ಹೌದು. ದೇಶವನ್ನು ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕ ಪಿಡುಗಿನ ಬಗ್ಗೆ, ಆರ್ಥಿಕ ಕುಸಿತ ಮತ್ತು ಹಿಂಜರಿತದ ಬಗ್ಗೆ ಹಾಗೂ ಗಡಿ ಪ್ರದೇಶದಲ್ಲಿ ಚೀನಾದೊಡನೆ ನಡೆಯುತ್ತಿರುವ ಸಂಘರ್ಷದ ಬಗ್ಗೆ , ಭಾರತದ ಪ್ರಜೆಗಳಾದ ನಾವು ಸಮಗ್ರ ಮಾಹಿತಿ ಪಡೆಯುವ ಹಕ್ಕು ಹೊಂದಿದ್ದೇವೆ, ಪಡೆಯಬೇಕಿದೆ.
ಇದಕ್ಕೆ ಈ ದೇಶ ಸಿದ್ಧವಾಗಿದೆಯೇ ? ಅಥವಾ ವೈರಾಣು ಮತ್ತು ಯುದ್ಧ ಎರಡೂ ಅಪಾಯಗಳನ್ನು, ಸವಾಲುಗಳನ್ನು ಎದುರಿಸಲು ದೇಶ ಸಜ್ಜಾಗಿದೆಯೇ ? ಸೆಪ್ಟಂಬರ್ 11ರಂದು ನಮ್ಮ ವಿದೇಶಾಂಗ ಸಚಿವರಾದ ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ಏರ್ಪಟ್ಟಿರುವ ಒಪ್ಪಂದ ನಿಜಕ್ಕೂ ಶ್ಲಾಘನೀಯವಾದುದು. ಇದು ಉಭಯ ದೇಶಗಳನ್ನು ಯುದ್ಧದ ಸನ್ನಿವೇಶದಿಂದ ಮುಕ್ತಗೊಳಿಸಿದೆ.
ಆದರೆ ಈ ಮಾಸ್ಕೋ ಒಮ್ಮತದ ಒಪ್ಪಂದವನ್ನು ಉಲ್ಲಂಘಿಸುವ ಸನ್ನಿವೇಶ ಎದುರಾದರೆ, ಗಡಿಯಲ್ಲಿ ಕ್ಷಿಪಣಿಗಳು ಸದ್ದುಮಾಡಲಾರಂಭಿಸುತ್ತವೆ. ಯುದ್ಧ ಮತ್ತು ಕೊರೋನಾ ವೈರಾಣು ಭಾರತಕ್ಕೆ ಮಾರಣಾಂತಿಕವಾಗಿ ಪರಿಣಮಿಸುತ್ತದೆ. ಮೊದಲ ವಿಶ್ವ ಮಹಾ ಯುದ್ಧ ಸಂಭವಿಸಿದ ಬೆನ್ನಲ್ಲೇ 1918-20ರ ಸ್ಪಾನಿಷ್ ಫ್ಲೂ ಭಾರತವನ್ನು ಹಿಂಡಿ ಹಿಪ್ಪೇಕಾಯಿ ಮಾಡಿದ್ದನ್ನು ಕಂಡಿದ್ದೇವೆ. ಯುದ್ಧಭೂಮಿಯಿಂದ ಸೋಂಕು ಹೊತ್ತುಕೊಂಡೇ ಹಿಂದಿರುಗಿದ ಭಾರತದ ಯೋಧರು ಸಾಂಕ್ರಾಮಿಕ ಸೋಂಕನ್ನು ಹಳ್ಳಿ ಹಳ್ಳಿಗೂ ವ್ಯಾಪಿಸಲು ಕಾರಣರಾಗಿಬಿಟ್ಟರು. 1 ಕೋಟಿ 70 ಲಕ್ಷ ಭಾರತೀಯರು ಬಲಿಯಾಗಬೇಕಾಯಿತು.
ಒಂದು ವೇಳೆ ಈ ಯುದ್ಧ ಸಂಭವಿಸಿದ್ದೇ ಆದಲ್ಲಿ ಅದರಿಂದ ಸಾರ್ವಜನಿಕ ಆರೋಗ್ಯ, ಸಾರ್ವಜನಿಕ ಹಣಕಾಸು ಪರಿಸ್ಥಿತಿಯ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಎಂದು ಕಾರ್ಯಾಂಗ ಈ ದೇಶದ ಪ್ರಜೆಗಳಿಗೆ ಸ್ಪಷ್ಟಪಡಿಸಬೇಕು. ಭಾರತ ಚೀನಾ ಗಡಿ ವಿವಾದಕ್ಕೆ ಇಂದು ಅಗತ್ಯವಾಗಿ ಬೇಕಿರುವುದು ದೇಶಪ್ರೇಮದ ಯುದ್ಧೋನ್ಮಾದವಲ್ಲ ಬದಲಾಗಿ ರಾಜತಾಂತ್ರಿಕ ಮಾತುಕತೆಗಳು ಬೇಕಿವೆ. ಈ ನಿಟ್ಟಿನಲ್ಲಿ ದೇಶದ ಸಮಸ್ತ ಪ್ರಜೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಕಾರ್ಯಾಂಗದ ಕರ್ತವ್ಯ.
ಸಂಸತ್ತಿನಲ್ಲಿ ವಾತಾವರಣ
ಇಲ್ಲಿ ಪ್ರಭುತ್ವದ ಎರಡನೆ ಆಧಾರ ಸ್ತಂಭ, ಶಾಸಕಾಂಗದ ಪಾತ್ರ ಮುಖ್ಯವಾಗುತ್ತದೆ. ಅರ್ಧ ಹೆಜ್ಜೆ ಮುಂದಿಟ್ಟಿರುವ ಭಾರತದ ಸಂಸತ್ತಿನ ಕಲಾಪ ನಡೆಯುತ್ತಿದೆ. ಹದಿನೈದು ದಿನಗಳ ಕಾಲ ಸಂಸದರು ಖುದ್ದು ಹಾಜರಾಗಲಿದ್ದಾರೆ. ಇದು ಸಾಮಾನ್ಯವಾಗಿ ನಡೆಯುವ ಅವಧಿಯಲ್ಲಿ ಅರ್ಧದಷ್ಟು ಅವಧಿ ಮಾತ್ರ ನಡೆಯುವ ಕಲಾಪವಾಗಲಿದೆ.
ಕೊರೋನಾ ಕುರಿತ ನಮ್ಮ ಕಾಳಜಿಯ ಹಿನ್ನೆಲೆಯಲ್ಲಿ ಇದು ಉತ್ತಮ ಹೆಜ್ಜೆ. ಆದರೆ ಸಂಸತ್ತಿನ ಕಲಾಪವೇ ಬೇರೆ, ಸಂಸತ್ತಿನ ಉತ್ಸಾಹ ಮತ್ತು ಕಾಳಜಿಯೇ ಬೇರೆ. ಸಂಸತ್ ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯನ್ನು ರದ್ದುಪಡಿಸುವ ಮೂಲಕ, ಸರ್ಕಾರದಿಂದ ಮಾಹಿತಿ ಪಡೆಯಲು ಸಂಸದರಿಗೆ ಇರುವ ಬ್ರಹ್ಮಾಸ್ತ್ರವೊಂದನ್ನು ಕಸಿದುಕೊಂಡಿರುವುದು ದುರಂತ. ಇದಕ್ಕೂ ಹೆಚ್ಚಿನ ದುರಂತಗಳನ್ನು ನಾವು ಸಂಸತ್ತಿನಲ್ಲಿ ಕಾಣುವ ಸಾಧ್ಯತೆಗಳಿವೆ.
ಬ್ರಿಟೀಷರ ಆಳ್ವಿಕೆಯಲ್ಲಿ ಶಾಸಕಾಂಗವೇ ಇರಲಿಲ್ಲ. ಆದರೂ ದೆಹಲಿಯಲ್ಲಿದ್ದ ಇಂಪೀರಿಯಲ್ ಶಾಸಕಾಂಗ ಸಮಿತಿ ಈ ದೇಶದ ಜನಕ್ಕೆ ಅನ್ಯಾಯ ಮಾಡಿತ್ತು. 1919ರ ಅರಾಜಕತೆ ಹಾಗೂ ಕ್ರಾಂತಿಕಾರಿ ಅಪರಾಧಗಳ ಕಾಯ್ದೆ, ರೌಲಟ್ ಕಾಯ್ದೆಯೆಂದು ಜನಪ್ರಿಯವಾಗಿದೆ, ಈ ಸಮಿತಿಯಲ್ಲಿ 1919ರ ಮಾರ್ಚ್ 18ರಂದು ಅಂಗೀಕೃತವಾಗಿತ್ತು. ಇದು ಮೂಲತಃ ಮಹಾಯುದ್ಧಕ್ಕೆ ನೆರವಾಗಲು ರೂಪಿಸಲಾದ ಕಾಯ್ದೆಯಾಗಿತ್ತು.
ಆದರೆ ಇದರ ಪರಿಣಾಮ ದೇಶದಲ್ಲಿ ವ್ಯಕ್ತಿಗತ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. ವಾಕ್ ಸ್ವಾತಂತ್ರ್ಯ ಮತ್ತು ಸಭೆ ಸೇರುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. 1975-77ರ ತುರ್ತುಪರಿಸ್ಥಿತಿ ಹೇರುವ ಸಂದರ್ಭದಲ್ಲೂ ಸಹ ಸಂಸತ್ತಿನ ಅನುಮೋದನೆ ಪಡೆಯಲಾಗಿತ್ತು.
ಈ ಹಿನ್ನೆಲೆಯಲ್ಲಿ ನೋಡಿದಾಗ ಪ್ರಸಕ್ತ ಸಂಸತ್ತಿನಿಂದ ಹೆಚ್ಚಿನ ಎಚ್ಚರಿಕೆ ಮತ್ತು ವಿವೇಕಯುತ ನಡೆಯನ್ನು ನಿರೀಕ್ಷಿಸಬೇಕಾಗುತ್ತದೆ. ದೇಶ ಒಂದು ಮಾರಣಾಂತಿಕ ವೈರಾಣುವಿನ ಅಪಾಯ ಎದುರಿಸುತ್ತಿರುವಾಗ, ಎಂದೂ ಕಾಣದಂತಹ ಆರ್ಥಿಕ ಹಿನ್ನಡೆ ಎದುರಿಸುತ್ತಿರುವಾಗ, ಯುದ್ಧದ ಕಾರ್ಮೋಡ ಕವಿಯುತ್ತಿರುವಾಗ ರೌಲಟ್ ಕಾಯ್ದೆಯ ಚಿಂತನೆಗಳು ಸರ್ಕಾರದ ಕಲ್ಪನೆಯಲ್ಲೂ ಇರಕೂಡದು.
ಇಲ್ಲಿ ಪ್ರಭುತ್ವದ ಮೂರನೆಯ ಆಧಾರ ಸ್ತಂಭ ನ್ಯಾಯಾಂಗದ ಪಾತ್ರ ಮುನ್ನೆಲೆಗೆ ಬರುತ್ತದೆ. ವಿಧಿ 370, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಜಮ್ಮು ಕಾಶ್ಮೀರ ಹೈಕೋರ್ಟಿನಲ್ಲಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ಸಂದರ್ಭದಲ್ಲಿ ಭಾರತದ ನ್ಯಾಯಾಂಗ ತನ್ನ ಸ್ವಾಯತ್ತತೆಯನ್ನು ಸಾಧಿಸಿ ತೋರಿಸಬಹುದಿತ್ತು.
ತನ್ನ ಸ್ವಾತಂತ್ರ್ಯ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಸಾಮಥ್ರ್ಯವನ್ನು ಪ್ರದರ್ಶಿಸಬಹುದಿತ್ತು. ಏನು ಹೇಳಬೇಕಾಗಿದೆಯೋ, ಏನನ್ನು ಮನದಟ್ಟು ಮಾಡಬೇಕಾಗಿದೆಯೋ ಅದನ್ನು ಹೇಳಲು ಕೆಲವೇ ಪದಗಳು ಸಾಕಾಗುತ್ತವೆ. ನ್ಯಾ ಚಂದ್ರಚೂಡ್ ಹೇಳಿರುವಂತೆ “ ಪ್ರತಿರೋಧ ಎನ್ನುವುದು ಪ್ರಜಾತಂತ್ರ ವ್ಯವಸ್ಥೆಯ ರಕ್ಷಣಾ ಕವಚ ಇದ್ದಂತೆ ”.
ಇಂದು ಪ್ರಭುತ್ವದ ಸಾಂಸ್ಥಿಕ ನೆಲೆಯ ಸುತ್ತ ಜಡತ್ವದ ಲಕ್ಷಣಗಳು ಗೋಚರಿಸುತ್ತಿವೆ. ಇದು ಈ ಸಾಂಸ್ಥಿಕ ನೆಲೆಯ ಉಸಿರನ್ನು ಕಟ್ಟಿಸುತ್ತದೆ, ಹಾಗೆಯೇ ನಮ್ಮ ಉಸಿರನ್ನೂ ಸಹ. ಮಾಧ್ಯಮಗಳು ನಮ್ಮನ್ನು, ಅಂದರೆ ಭಾರತದ ಪ್ರಜೆಗಳನ್ನು, ಮುನ್ನಡೆಸುತ್ತಿರುವ ಸಂದರ್ಭದಲ್ಲಿ ನಾವು ಸ್ವಾತಂತ್ರ್ಯಕ್ಕೆ ಜೀವ ಕೊಡುವ ಸಾಧನಗಳಾಗಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ7 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

