ದಿನದ ಸುದ್ದಿ
ದಾವಣಗೆರೆ | ಕೋವಿಡ್ ಹಿನ್ನೆಲೆ ನಷ್ಟ : ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಕಾರ್ಯಾಚರಣೆ : ಕೆ ಎಸ್ ಆರ್ ಟಿ ಸಿ ನಿಮಗ ಅಧ್ಯಕ್ಷ ಚಂದ್ರಪ್ಪ
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ ಹೇಳಿದರು.
ಶುಕ್ರವಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ ಡಿಪೋ ವೀಕ್ಷಣೆ ನಡೆಸಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ನೆರವು
ಕೆಎಸ್ಆರ್ಟಿಸಿ ಹಿಂದೆ ಲಾಭವೂ ಇಲ್ಲ. ನಷ್ಟವೂ ಇಲ್ಲವೆಂಬಂತೆ ಕಾರ್ಯಾಚರಣೆ ಮಾಡುತ್ತಿತ್ತು. ಕೋವಿಡ್ ಬಂದ ನಂತರ ರಾಜ್ಯಾದ್ಯಂತ ಅಂದಾಜು 1500 ಕೋಟಿ ನಷ್ಟ ಅನುಭವಿಸಿತು. ರಾಜ್ಯ ಸರ್ಕಾರ 1350 ಕೋಟಿ ಬಿಡುಗಡೆ ಮಾಡುವ ಮೂಲಕ ಅಧಿಕಾರಿ/ಸಿಬ್ಬಂದಿಗಳಿಗೆ ವೇತನ, ವಾಹನಗಳ ನಿರ್ವಹಣೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ನೌಕರರು ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ನಷ್ಟದಲ್ಲಿದ್ದರೂ ಸರ್ಕಾರ ವೇತನ ನೀಡುತ್ತಿದ್ದು, ಮುಖ್ಯಮಂತ್ರಿಗಳು ಅಭಿನಂದನೀಯ ಎಂದರು.
ಅಂತರರಾಜ್ಯ ಕಾರ್ಯಾಚರಣೆ
ಅಂತರ ರಾಜ್ಯ ಬಸ್ ಕಾರ್ಯಾಚರಣೆ ಆರಂಭವಾಗಿದ್ದು ಗೋವಾ, ಆಂಧ್ರ ಮತ್ತು ಈಗ ಮಹಾರಾಷ್ಟ್ರಕ್ಕೂ ಅನುಮತಿ ದೊರೆತಿದೆ. ಇದೀಗ ಶೇ.50 ಆದಾಯ ಬರುತ್ತಿದೆ. ಖಾಸಗಿ ಸಂಸ್ಥೆಗಳು ನಷ್ಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಿವೆ. ಆದರೆ ರಾಜ್ಯ ರಸ್ತೆ ಸಾರಿಗೆಯ ಉದ್ದೇಶ ಸೇವೆ ಆಗಿದೆ. ನಷ್ಟದಲ್ಲಿಯೂ ಕೆಲಸ ಮಾಡುತ್ತಿದ್ದು, ಉತ್ತಮ ಸೇವೆಗಾಗಿ ನಮ್ಮ ಸಂಸ್ಥೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು.
ಮೂಲಭೂತ ಸೌಕರ್ಯಕ್ಕೆ ಒತ್ತು
ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳು, ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗುವುದು. ಜೊತೆಗೆ ರೈಲ್ವೇ ಮತ್ತು ವಿಮಾನ ನಿಲ್ದಾಣಗಳ ರೀತಿಯಲ್ಲಿ ಬಸ್ಗಳು ಇಷ್ಟೇ ಸಮಯಕ್ಕೆ ಬರುತ್ತವೆ ಎಂದು ಮಾಹಿತಿ ನೀಡುವ ಡಿಜಿಟಲ್ ಬೋರ್ಡ್ಗಳ ಅಳವಡಿಕೆ, ಗಣಕೀಕರಣ ವ್ಯವಸ್ಥೆ ಮಾಡಲಾಗುವುದು ಎಂದರು.
ಸಂಸ್ಥೆಗೆ ಸಾಲವಾದರೂ ಪರವಾಗಿಲ್ಲ. ನೌಕರರ ಮತ್ತು ಎಲ್ಲ ವರ್ಗದ ಜನರ ಹಿತ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಹೊಸ ಬಸ್ಗಳು ಮತ್ತು ಮಾರ್ಗಗಳಿಗೆ ಅವಕಾಶ ಇಲ್ಲವಾಗಿದೆ ಎಂದರು.
ದಾವಣಗೆರೆ ನಗರದಲ್ಲಿ ಪ್ರಸ್ತುತ ಒಟ್ಟು 40 ಬಸ್ ಓಡಾಡುತ್ತಿದ್ದು, ರೈತರು ಹಾಲು, ತರಕಾರಿ ಇತರೆ ಸಾಗಿಸಲು ಅನುಕೂಲವಾಗುವ ದೃಷ್ಟಿಯಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಬಸ್ ಕಾರ್ಯಾಚರಣೆ ವಿಸ್ತರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ದಾವಣಗೆರೆ ವಿಭಾಗದಲ್ಲಿ 21 ವೊಲ್ವೊ, 29 ರಾಜಹಂಸ, 06 ನಾನ್ ಎಸಿ ಸ್ಲೀಪರ್, 195 ಕರ್ನಾಟಕ ಸಾರಿಗೆ, 56 ನಗರ ಸಾರಿಗೆ ಸೇರಿದಂತೆ ಒಟ್ಟು 356 ಬಸ್ಗಳು ಕಾರ್ಯಾಚರಣೆ ಮಾಡುತ್ತಿವೆ. ವಿಭಾಗದಲ್ಲಿ ಒಟ್ಟು 1580 ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿ ವೇತನ ತಿಂಗಳಿಗೆ ಸರಾಸರಿ ರೂ.574.86 ಲಕ್ಷ, ಇಂಧನ ವೆಚ್ಚ ರೂ.502.85 ಲಕ್ಷ ಮತ್ತು ಇತರೆ ಖರ್ಚು ಸೇರಿದಂತೆ ಸರಾಸರಿ ರೂ.1405.65 ಲಕ್ಷ ವೆಚ್ಚವಾಗುತ್ತದೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ರೂ.96 ಕೋಟಿ ಮೊತ್ತದಲ್ಲಿ ಆಧುನಿಕ ಮಾದರಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯು ನವೆಂಬರ್ 2020 ರಿಂದ ಪ್ರಾರಂಭವಾಗಲಿದೆ. ಪ್ರಸ್ತುತವಿರುವ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಹೈಸ್ಕೂಲ್ ಮೈದಾನದಲ್ಲಿ ರೂ.2.86 ಕೋಟಿ ಮೊತ್ತದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಮುಕ್ತಾಯ ಹಂತದಲ್ಲಿರುತ್ತದೆ.
ದಾವಣಗೆರೆ ನಗರ ಪ್ರದೇಶದಲ್ಲಿರುವ ಬೇತೂರು ರಸ್ತೆಯಲ್ಲಿನ ಸಂಸ್ಥೆಯ ನಿವೇಶನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.10.00 ಕೋಟಿ ಮೊತ್ತದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ದಾವಣಗೆರೆ ವಿಭಾಗೀಯ ಕಾರ್ಯಾಗಾರದಲ್ಲಿ ನಗರ ಸಾರಿಗೆ ಘಟಕ-2 ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚನ್ನಗಿರಿ ನಗರದಲ್ಲಿ ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ಎಸ್ಡಿಪಿ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ರೂ.8.00 ಕೋಟಿ ಮೊತ್ತದಲ್ಲಿ ಘಟಕ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.
ಚಿಕ್ಕಮಗಳೂರು ಮಾರ್ಗ ಬಸ್ ಉದ್ಘಾಟನೆ
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ನೂತನವಾಗಿ ಕಾರ್ಯಾಚರಣೆ ಪ್ರಾರಂಭಿಸಿದ ದಾವಣಗೆರೆಯಿಂದ ಬಾಡ, ಸಂತೆಬೆನ್ನೂರು, ಚನ್ನಗಿರಿ ಹಾಗೂ ಅಜ್ಜಂಪುರ ಮಾರ್ಗವಾಗಿ ಚಿಕ್ಕಮಗಳೂರಿಗೆ ಹೋಗುವ ಬಸ್ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪನವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಾಣಾಧಿಕಾರಿ ಸಿದ್ದೇಶ್ವರ ಹೆಬ್ಬಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರಮುಖ 8 ಕ್ಲಬ್ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
http://Visit : www.suddidina.com
ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ
ಬೌರಿಂಗ್ ಕ್ಲಬ್ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಎಸ್ಸಿಎ ಕ್ಲಬ್ನಲ್ಲೂ ಹಲವು ಲೋಪ
ಕೆಎಸ್ಸಿಎ ಕ್ಲಬ್ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.
ಅವಧಿ ಮೀರಿದ ಅಣಬೆ ಪತ್ತೆ
ಕ್ಯಾಥೋಲಿಕ್ ಕ್ಲಬ್ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.
ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.
ಹೋಟೆಲ್ಗಳಿಗೂ ಕಟ್ಟುನಿಟ್ಟಿನ ಸೂಚನೆ
ಕ್ಲಬ್ಗಳ ಜೊತೆಗೆ ಹೋಟೆಲ್ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ದಿನದ ಸುದ್ದಿ
ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.
ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್ ಅವರ ಮನವಿ ವಿಶೇಷ ಗಮನ ಸೆಳೆದಿದೆ.
ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ
ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.
ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.
30 ವರ್ಷಗಳ ಸಿನಿ ಪಯಣದ ನೆನಪು
ಕನ್ನಡ ಚಿತ್ರರಂಗಕ್ಕೆ ಸುದೀಪ್ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್ ಡೈಲಾಗ್ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.
https://x.com/KicchaSudeep/status/2092857077706506638
“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”
ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.
“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

ದಿನದ ಸುದ್ದಿ
ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್ಗಳ ಸದ್ದು
ಸುದ್ದಿದಿನ,ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.
ವೈರಲ್ ವಿಡಿಯೋದಲ್ಲಿ ಗೀತು ಮೋಹನ್ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.
http://Visit : www.suddidina.com
‘ಸ್ಕ್ರಿಪ್ಟ್ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ
ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.
ಸಾಮಾನ್ಯವಾಗಿ ದೊಡ್ಡ ಬಜೆಟ್ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
https://x.com/alpasankhyata/status/2092620787698094334
‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?
‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.
ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್ವರ್ಲ್ಡ್ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ
ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.
ಸದ್ಯ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ7 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ


