Connect with us

ಲೈಫ್ ಸ್ಟೈಲ್

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ | ಏನಿದು MDMA ಡ್ರಗ್ ಮಾತ್ರೆ..? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ : ಮಿಸ್ ಮಾಡ್ದೆ ಓದಿ

Published

on

  • ವೈಶಾಲಿ ದುರ್ಗಪ್ಪ

ಡ್ರಗ್ಸ್ ಮಾಫಿಯಾ ಜಗತ್ತಿಗೆ ಹೊಸದೇನಲ್ಲ. ಇದುವರೆಗೂ‌ ಈ‌ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತಡೆದುಹಾಕಲು ಪೊಲೀಸ್ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ಎಂಬ ಯಕ್ಷ ಪ್ರಶ್ನೆ‌ ಕಾಡುತ್ತದೆ. ಡ್ರಗ್ಸ್ ಬಗ್ಗೆ ಆಗೊಮ್ಮೆ- ಈಗೊಮ್ಮೆ ಪತ್ರಿಕೆಯ ‌ಯಾವುದೋ ಮೂಲೆಯಲ್ಲಿ ಸಣ್ಣ ಸುದ್ದಿಯಾಗಿ, ಸಿನೆಮಾಗಳ ಒಂದಷ್ಟು ದೃಶ್ಯಗಳಲ್ಲಿ ನೋಡಿದ ನೆನಪು ಬರುತ್ತದೆ.

ಪ್ರಸ್ತುತ ನ್ಯೂಸ್ ಚಾನೆಲ್‌ ಗಳ ಟಿ ಆರ್ ಪಿ ಕೇಂದ್ರಿತ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಸುದ್ದಿ ದಿ‌ನದಿಂದ‌ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ವಿಚಾರಣೆ ಒಳಗಾದ ಕೆಲವು ನಟನಟಿಯರಿಂದ MDMA ಎಂಬ ಡ್ರಗ್ ಮಾತ್ರೆಯನ್ನು ಸೇವಿಸಿದ್ದರ ಬಗ್ಗೆ ಮಾಹಿತಿ‌ ದೊರೆತಿದೆ.

ಹಾಗಾದರೆ ಏನಿದು MDMA .? ಇದನ್ನು ಸೇವಿಸಿದರೆ ದೇಹ ಮತ್ತು ಮನಸಿನ ಮೇಲಾಗುವ ದುಷ್ಪರಿಣಾಮಗಳೇನು..?ಎಂಬುದರ ಬಗ್ಗೆ ಸರ್ಕಾರದ ‘National Institute on Drug Abuse‘ ವೆಬ್ಸೈಟ್ ನಲ್ಲಿ ಪ್ರಕಟವಾಗಿರುವ ಬರಹವನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ‘ವೈಶಾಲಿ‌ ದುರ್ಗಪ್ಪ’ ಅವರು ತಂದಿದ್ದಾರೆ. ಈ ಬರಹ MDMA ಬಗ್ಗೆ ಹಲವು ಮಾಹಿತಿಯನ್ನು ನೀಡುತ್ತದೆ. ಈ ಬರಹ ಓದಿ ಪ್ರತಿಕ್ರಿಯಿಸಿ.


ಎಂಡಿಎಂಎ ಎಂದರೇನು..?

3,4-ಮಿಥೈಲಿನ್ ಡೈ ಆಕ್ಸಿ – ಹೆಪ್ಟಾಮೈನ್ (3,4-methylenedioxy-methamphetamine(MDMA)
ಇದು ವ್ಯಕ್ತಿ ಒಬ್ಬನ ಬಾಹ್ಯ ಪ್ರಪಂಚದ ಬಗ್ಗೆ ತನಗಿರುವ ಗ್ರಹಿಕೆ ಹಾಗೂ ಮನಸ್ಥಿತಿಯನ್ನು ಬದಲಾಯಿಸುವಂತಹ ಒಂದು ಸಂಶ್ಲೇಷಿತ (ಸಿಂಥೆಟಿಕ್) ಡ್ರಗ್ ಆಗಿದೆ. ಇದು ರಾಸಾಯನಿಕವಾಗಿ ಉತ್ತೇಜಕ ಹಾಗೂ ಭ್ರಾಮಕಗಳಿಗೆ ಹೋಲುತ್ತದೆ. ಈ ಡ್ರಗ್ ಅನ್ನು ಸೇವಿಸಿದ ವ್ಯಕ್ತಿಯಲ್ಲಿ ದೇಹಕ್ಕೆ ಇದ್ದಕ್ಕಿದ್ದಂತೆ ಶಕ್ತಿ ದೊರೆಯುವುದು, ಅತೃಪ್ತ ಮಾನಸಿಕ ಸಂತೋಷ ಹೊಂದುವುದು. ಭಾವನಾತ್ಮಕವಾಗಿ ಬೆಚ್ಚಗಿನ ಅನುಭವ ಹೊಂದಿ ತನಗರಿವಿಲ್ಲದ ಯಾವುದೋ ಲೋಕದಲ್ಲಿ ವಿಹರಿಸುವಂತಹ ಭಾವನೆಯಲ್ಲಿ ತೇಲುವರು.

ರಾಸಾಯನಿಕ Molecular ಪದವನ್ನು ಸಂಕ್ಷಿಪ್ತಗೊಳಿಸಿ. Molly ಎಂಬ ಹೆಸರಿನಿಂದ MDMA ಡ್ರಗ್ ಅನ್ನು ಯುವಜನರಲ್ಲಿ ಪ್ರಚಲಿತ ಗೊಳಿಸಿದ್ದಾರೆ. ಮೊದಲೆಲ್ಲಾ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗಳಲ್ಲಿ ದೊರೆಯುತ್ತಿದ್ದ ಡ್ರಗ್ ಇಂದು ಕಾಲೇಜು ಅಂಗಳದವರೆಗೂ ಕಾಲಿಟ್ಚಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.

ವ್ಯಸನಿಗಳು ಡ್ರಗ್ ಅನ್ನು ಹೆಚ್ಚಾಗಿ ಮಾತ್ರೆ ಅಥವಾ ಕ್ಯಾಪ್ಸುಲ್ ರೂಪದಲ್ಲಿ ಸೇವನೆ ಮಾಡುವರು. ಕೆಲವರು ಇದನ್ನು ದ್ರವ ರೂಪದಲ್ಲಿ ಸೇವಿಸಿದರೆ, ಹೆಚ್ಚಿನವರು ಡ್ರಗ್ ಪುಡಿಯನ್ನು ಉಸಿರುಗಟ್ಟಿ ಒಳಸೇದುವ ಮೂಲಕ ಸೇವಿಸುವರು. ಸ್ಫಟಿಕ ರೂಪದ ಪುಡಿಯನ್ನು ಹೆಚ್ಚಾಗಿ ಕ್ಯಾಪ್ಸುಲ್ ರೂಪದಲ್ಲಿ ಮಾರಾಟ ಮಾಡುವುದು ಪ್ರಚಲಿತದಲ್ಲಿದೆ. ಇಷ್ಟೇ ಅಲ್ಲದೆ Molly ಡ್ರಗ್ ಅನ್ನು ಆಲ್ಕೋಹಾಲ್ ಅಥವಾ ಗಾಂಜಾದೊಟ್ಟಿಗೆ ಸೇರಿಸಿ ತೆಗೆದುಕೊಳ್ಳುವುದು ಸಹ ಕೆಲವರಲ್ಲಿ ರೂಢಿಯಲ್ಲಿದೆ.

MDMA ಡ್ರಗ್ ನ ವ್ಯವಸಿಗಳಲ್ಲಿ ಮೆದುಳಿನ ಮೇಲೆ ಪರಿಣಾಮ ಬೀರಿ, ಬಾಹ್ಯ ನಡವಳಿಕೆಗಳಲ್ಲಿ ಬದಲಾವಣೆಯನ್ನು ತರುವಲ್ಲಿ ಮೂರು ರಾಸಾಯನಿಕಗಳು ಮುಖ್ಯ ಪಾತ್ರ ವಹಿಸುತ್ತದೆ. ಅವುಗಳೆಂದರೆ,

1.ಡೋಪಮೈನ್ (Dopamine)

ಈ ರಾಸಾಯನಿಕವು ದೇಹಕ್ಕೆ ಹೆಚ್ಚು ಶಕ್ತಿಯನ್ನು ಒದಗಿಸಿ, ವ್ಯಕ್ತಿಯ ನಡವಳಿಕೆಯನ್ನು ಇದ್ದಕ್ಕಿದ್ದಂತೆ ಬದಲಾಯಿಸುವುದು.

2.ಸೆರಟೋನಿನ್ (Serotonin)

ವ್ಯಕ್ತಿಯಲ್ಲಿ ಮನಸ್ಥಿತಿಯ ಬದಲಾಯಿಸುವುದು, ಹಸನಾಗಿಸುವುದು ಅಥವಾ ನಿದ್ರೆ ಬರಿಸುವುದು ಈ ರಾಸಾಯನಿಕದ ಕೆಲಸವಾಗಿದೆ. ಹಾಗೂ ಅವರಲ್ಲಿ ಲೈಂಗಿಕ ಆಸಕ್ತಿ ಹೆಚ್ಚಿಸುವಂತಹ ಹಾರ್ಮೋನುಗಳನ್ನು ಸ್ರವಿಸುವಲ್ಲಿ ಪಾತ್ರ ವಹಿಸುತ್ತದೆ. ಸೆರಟೋನಿನ್ ಹೆಚ್ಚು ಉತ್ಪಾದನೆ ಆಗುವುದರಿಂದ ಭಾವಾತಿರೇಕ ಉಂಟಾಗುವುದು, ಜೊತೆಯಲ್ಲಿರುವವರ ಮೇಲೆ ಎಂದೂ ಕಾಣದ ಪ್ರೀತಿ ಉಂಟಾಗುವುದು, ಎಲ್ಲೋ ಹೇಳಿದಂತಹ ಅನುಭವವೂ ಆಗುವುದುಂಟು.

3.ನೊರ್ಪೈನ್ಫ್ರಿನ್ (Norepinephrine)

ರಕ್ತದೊತ್ತಡ ಹಾಗೂ ಹೃದಯ ಬಡಿತ ಹೆಚ್ಚಾಗುವುದು, ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆ ಇರುವಂತಹವರಿಗೆ ಈ ರಾಸಾಯನಿಕದ ಪ್ರಮಾಣ ದೇಹದಲ್ಲಿ ಹೆಚ್ಚಾದಲ್ಲಿ ಮಾರಣಾಂತಿಕವೂ ಆಗಬಹುದು.
ಇದರೊಟ್ಟಿಗೆ, ವಾಕರಿಕೆ ಬರುವುದು, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು, ತಮಗರಿವಿಲ್ಲದೆ ಹಲ್ಲು ಕಡಿಯುವುದು, ಕಣ್ಣು ಮಂಜಾದಂತಾಗುವುದು, ಬೆವರುವುದು, ಚಳಿ ಯಾಗುವಂತಹ ಆರೋಗ್ಯ ಸಂಬಂಧಿ ಪರಿಣಾಮಗಳನ್ನು ಅನುಭವಿಸುವರು.

ಕನ್ನಡಕ್ಕೆ : ವೈಶಾಲಿ ದುರ್ಗಪ್ಪ

MDMA ಡ್ರಗ್ ಗನ್ನು ಒಮ್ಮೆ ಸೇವಿಸಿದರೆ, ಅದರ ಪರಿಣಾಮ ಕನಿಷ್ಠ ಮೂರರಿಂದ ಆರು ಗಂಟೆಗಳವರೆಗೆ ಇರಬಹುದು. ಮೊದಲ ಡೋಸ್ ನ ಪರಿಣಾಮ ಕಡಿಮೆಯಾಗುತ್ತಾ ಹೋದಂತೆ ಕೆಲವೊಬ್ಬರು ಮತ್ತೊಂದು ಡೋಸ್ ನ ಮೊರೆ ಹೋಗುವರು.ಡೋಸ್ ಕಡಿಮೆ ಆದರೂ ಸಹ, ಕೆಲವು ವಾರಗಳವರೆಗೆ, ವ್ಯಕ್ತಿಯಲ್ಲಿ ದೈಹಿಕವಾಗಿ ಕಿರಿಕಿರಿ ಅನುಭವಿಸುವುದು, ಆಕ್ರಮಣಕಾರಿ ನಡವಳಿಕೆ, ಖಿನ್ನತೆಗೆ ಒಳಗಾದ ಭಾವ, ನಿದ್ರಾಹೀನತೆ, ಆತಂಕ, ನೆನಪಿನ ಶಕ್ತಿಯ ಕೊರತೆ, ಹಸಿವಾಗದೆ ಇರುವಂತಹ ಅನುಭವ, ಲೈಂಗಿಕತೆಯಲ್ಲಿ ಉತ್ಸಾಹದ ಕೊರತೆಯಂತಹ ಪರಿಣಾಮಗಳನ್ನು ಎದುರಿಸಬೇಕಾಗಬಹುದು.

MDMA’ ಡ್ರಗ್ ನ ವೈದ್ಯಕೀಯ ಪ್ರಾಮುಖ್ಯತೆ

1970 ರಲ್ಲಿ ಮೊದಲ ಬಾರಿಗೆ MDMA ಡ್ರಗ್ ಅನ್ನು ಮನೋವೈದ್ಯಕೀಯ ಚಿಕಿತ್ಸೆಯಲ್ಲಿ ಬಳಸಲಾಯಿತು.(ಟಾಪ್ ತೆರಫಿ ಅಂತಹ ಮಾನಸಿಕ ಚಿಕಿತ್ಸೆಗಳಲ್ಲಿ) ಆದರೆ ವ್ಯಸನಿಗಳು/ಸಂಶೋಧಕರನ್ನು ಉಪಯೋಗಿಸಿಕೊಂಡು ವೈದ್ಯಕೀಯ ಪ್ರಯೋಗವನ್ನು ನಡೆಸಿದಂತಹ ಆಧಾರಗಳಿಲ್ಲ ಅಥವಾ ಯು.ಎಸ್ ನ ಫುಡ್ ಅಂಡ್ ಅಡ್ಮಿನಿಸ್ಟ್ರೇಷನ್ ನಿಂದ ಮಾನ್ಯತೆಯು ಸಿಕ್ಕಿಲ್ಲ.

ಆದರೆ, 1985 ರಲ್ಲಿ ಯು. ಎಸ್ ನ ಡ್ರಗ್ ಎನ್ಫೋರಸ್ಮೆಂಟ್ ಅಡ್ಮಿನಿಸ್ಟ್ರೇಷನ್ MDMA ಅನ್ನು ವೈದ್ಯಕೀಯ ಚಿಕಿತ್ಸೆಯಲ್ಲಿ ಕಾನೂನುಬಾಹಿರ ಎಂದು ಆದೇಶಿಸಿತು. ಆದರೆ, ಕೆಲವು ಸಂಶೋಧಕರ ಪ್ರಕಾರ, ನಿಯಂತ್ರಿತ ಪರಿಸ್ಥಿತಿಗಳಲ್ಲಿ, ಮನೋ ವೈದ್ಯಕೀಯ ಚಿಕಿತ್ಸೆಗಳಲ್ಲಿ ಬಳಸಬಹುದು ಎಂಬ ವಾದವನ್ನು ಮುಂದಿಟ್ಟು ಡಿಸೇಸ್ ಇತ್ತೀಚಿನ ಬೆಳವಣಿಗೆಯಲ್ಲಿ ಪೋಸ್ಟ್ ಟ್ರೆಮಾಟಿಕ್ ಸ್ಟ್ರೆಸ್( PTSD) ಚಿಕಿತ್ಸೆಯಲ್ಲಿ MDMA ಯನ್ನು ಬಳಸಿ ಪ್ರಗತಿಯನ್ನು ಸಾಧಿಸಿ ಯಶಸ್ವಿಯಾಗಿ ಹೊಸ ಆಯಾಮವನ್ನು ತೆರೆದಿದ್ದಾರೆ.

MDMA’ ಸೇವನೆಯಿಂದ ಆರೋಗ್ಯದ ಮೇಲಾಗುವಪರಿಣಾಮಗಳು

ಅತಿಯಾದ ಸೇವನೆಯಿಂದಾಗಿ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗುವುದು, ದೇಹದ ಉಷ್ಣತೆಯು ಹೆಚ್ಚಾಗುವುದು, ಇದು ಯಕೃತ್ತು ಹಾಗೂ ಮೂತ್ರಪಿಂಡಗಳ ಕಾರ್ಯದಲ್ಲಿ ಅಡೆತಡೆಯನ್ನು ಉಂಟುಮಾಡಬಹುದು. ಕೆಲವೊಮ್ಮೆ ಅಸ್ವಾಭಾವಿಕ ಲೈಂಗಿಕ ಸಂಪರ್ಕ ಹೊಂದುವುದರಿಂದ, ಲೈಂಗಿಕ ಪ್ರಸರಣ ರೋಗ( STD) ಗಳಾದ ಗೊನೋರಿಯ,AID/HIV ಹಾಗೂ ಹೆಪಟೈಟಿಸ್ ನಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿದೆ.

MDMA ಡ್ರಗ್ ಒಂದು ವ್ಯಸನವೇ..?

ಸಂಶೋಧನೆಗಳ ಪ್ರಕಾರ ಇದು ವ್ಯಸನವೇ ಎಂಬುದು ಖಚಿತವಾಗಿಲ್ಲ. ಅಲ್ಲದೇ, ಇದು ಕೋಕೋ ನಷ್ಟು ಗೀಳಲ್ಲವೆಂಬುದು ಸಂಶೋಧಕರ ವಾದವಾಗಿದೆ. ಆದರೆ, ಕೆಲವು ವ್ಯಸನಿಗಳು ಆಯಾಸ ಖಿನ್ನತೆಗೆ ಒಳಗಾಗುವುದು, ಹಸಿವಿಲ್ಲದಿರುವುದು, ಏಕಾಗ್ರತೆಯಲ್ಲಿ ಕೊರತೆಯನ್ನು ಅನುಭವಿಸುವಂತಹ ಲಕ್ಷಣಗಳನ್ನು ತೋರುವುದು ಉಂಟು.

ವ್ಯಸನಿಗಳಿಗೆ ಬಳಸಬಹುದಾದ ಚಿಕಿತ್ಸೆ

ಇಂತಹದ್ದೇ ಚಿಕಿತ್ಸೆಯನ್ನು ಬಳಸಿ MDMAಡ್ರಗ್ ನಾ ಚಟದಿಂದ ವ್ಯಕ್ತಿಯೊಬ್ಬನನ್ನು ವ್ಯಸನಮುಕ್ತ ಗಳಿಸಬಹುದು ಎಂದು ಹೇಳುವಂತಹ ಯಾವುದೇ ಖಂಡಿತವಾದ ಚಿಕಿತ್ಸೆಯು ವೈದ್ಯಕೀಯ ಕ್ಷೇತ್ರದಲ್ಲಿಲ್ಲ. ಆದರೆ, ‘Behavioral
Therapy’ /ನಡವಳಿಗೆ ಚಿಕಿತ್ಸೆಯು ಪರಿಣಾಮಕಾರಿ ಆಗಬಲ್ಲದು ಎಂಬ ನಂಬಿಕೆಗಳಿವೆ. ಅದು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬ ನಿಟ್ಟಿನಲ್ಲಿ ಸಂಶೋಧನೆಗಳು ಇನ್ನಷ್ಟೇ ನಡೆಯಬೇಕಿದೆ.

ಮೂಲ ಬರಹದ ಲಿಂಕ್ ಇಲ್ಲಿದೆ, ಕ್ಲಿಕ್ ಮಾಡಿ ಓದಿ

https://www.drugabuse.gov/publications/drugfacts/mdma-ecstasymolly

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಇಂದು ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending