ಅಂತರಂಗ
ನಿಂತಾಗ ಬುಗುರಿಯ ಆಟ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/09/spb_suddidina-654.jpg&description=ನಿಂತಾಗ ಬುಗುರಿಯ ಆಟ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/09/spb_suddidina-654.jpg&description=ನಿಂತಾಗ ಬುಗುರಿಯ ಆಟ..!', 'pinterestShare', 'width=750,height=350'); return false;" title="Pin This Post">
- ಹಿರಿಯೂರು ಪ್ರಕಾಶ್
ಹೇ..ಸಾವೇ ನೀನೆಂತಹಾ ಕ್ರೂರಿ ! ನೀನು ಕ್ರೂರ, ಘೋರ ಎನ್ನುವುದು ಗೊತ್ತಿತ್ತು. ಆದರೆ ನೀನಿಂಥ ಸ್ವಾರ್ಥಪೂರಿತ ಕ್ರೂರಿಯೆನ್ನುವುದು , ಕಿಂಚಿತ್ತೂ ಕರುಣೆಯಿಲ್ಲದ ಮಾರಿಯೆನ್ನುವುದು ಗೊತ್ತಿರಲಿಲ್ಲ !. ಈ ಪ್ರಪಂಚದಲ್ಲಿ ಜನಿಸಿದ ಪ್ರತೀ ಜೀವಿಯೂ ಅಸುನೀಗಲೇ ಬೇಕು ನಿಜ. ಅದಕ್ಕೆ ಭೇಧ ಭಾವವಿಲ್ಲ.
ಆದರೆ ಈ ನಾಡಿನ ಸಂಗೀತಪ್ರಿಯರೆಲ್ಲರೂ ನಿರ್ವಿವಾದವಾಗಿ, ನಿರುಮ್ಮಳವಾಗಿ, ನಿಷ್ಕಲ್ಮಶವಾಗಿ , ನಿತ್ಯ ನಿರಂತರವಾಗಿ ಪ್ರೀತಿಸುತ್ತಿದ್ದ ಒಂದು ಅಮೂಲ್ಯ ಹಿರಿಯ ಜೀವವನ್ನು ಇನ್ನಷ್ಟು ಕಾಲ ಹೀಗೆ ಪ್ರೀತಿಸುವ ಹೃದಯಗಳ ಎದೆಚಿಪ್ಪಿನಲ್ಲಿ ಉಳಿಸುವ ಒಂದು ಔದಾರ್ಯತೆಯ ಧಾರಾಳತೆ ತೋರಬಹುದಿತ್ತು. ಆದರೆ ಈ ಜಗತ್ತಿನ ಎಲ್ಲಾ ಒಳ್ಳೆಯದನ್ನು, ಒಳ್ಳೆಯ ವ್ಯಕ್ತಿಗಳನ್ನು ಆತುರಾತುರವಾಗಿ ನಿನ್ನಲ್ಲಿ ಲೀನವಾಗಿಸಿಕೊಳ್ಳುವ ನಿನ್ನ ನಿರಂತರ ಕೆಟ್ಟ ಬುದ್ದಿಗೆ ಇಂದು ಗಾನಲೋಕದ ಗಾರುಡಿಗ, ಸ್ವರ ಸಾಮ್ರಾಟ, ಅಜಾತಶತ್ರು, ಕೋಟಿ ಕೋಟಿ ಸಂಗೀತಪ್ರಿಯರ ಮನಸುಗಳಲ್ಲಿ ಸ್ಥಿರವಾಗಿ ನೆಲೆಯೂರಿರುವ , ಭಾಷಾತೀತ, ಸೀಮಾತೀತ ಸಹೃದಯಿ, ಸ್ನೇಹಮಯೊ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ರವರನ್ನೂ ಬಲಿಯಾಗಿಸಿ ರುವುದು ಮಾತ್ರ ಕೋಟಿ ಕೋಟಿ ಸುಮಧುರ ಮನಸುಗಳ ಹೃದಯಕ್ಕೆ ಕೊಳ್ಳಿಯಿಟ್ಟಂತಾಗಿದೆ.
ಶುಕ್ರವಾರ ಮಧ್ಯಾಹ್ನ ಬಂದೆರಗಿದ ಅರಗಿಸಿಕೊಳ್ಳಲಾಗದ ಈ ಸುದ್ದಿ ಅವರನ್ನು ಮೆಚ್ಚುವವರ ಮನಸಿನಾಳದಲ್ಲಿದ್ದ ದುಃಖದ ಮಡುವನ್ನು ಛಿದ್ರಗೊಳಿಸಿ ನೋವಿನಲೆಗಳ ತರಂಗಗಳು ಒತ್ತರಿಸಿ ಹೊರ ಬರುವಂತೆ ಮಾಡಿದೆ. ಹೃದಯಗಳು ಭಾರವೆನಿಸಿ ಕಣ್ಣುಗಳು ಕಂಬನಿಯ ಬಿಂದುಗಳಿಂದ ಅರಳುಗಟ್ಟಿ ಆರ್ದ್ರವಾಗುತ್ತಿವೆ. ಬಾಲುರವರ ನಿರ್ಗಮನದಿಂದ ಉಂಟಾಗಿರುವ ಸಂಗೀತಲೋಕದ ಶೂನ್ಯತೆಯನ್ನು ವರ್ಣಿಸಲು ಈ ಸಂಗೀತದ ನಿರಕ್ಷರಕುಕ್ಷಿಗೆ ಪದಗಳೇ ಹೊಳೆಯುತ್ತಿಲ್ಲ.
ಮನದ ವೇದನೆಯನ್ನು ಅಕ್ಷರಗಳಲ್ಲಿ ಕಟ್ಟಿಕೊಡಲಾಗದಂತೆ ಭಾವನೆಗಳ ಜೊತೆಗೆ ಬೆರಳುಗಳೂ ಮುಷ್ಕರ ಹೂಡಿದಂತಿವೆ. ಹೀಗಾಗಿ ಜಗತ್ತಿನಲ್ಲಿ ಅತಿಯಾಗಿ ಸಂಭ್ರಮಿಸುವ ಘಟನೆಗಳಿಗೆ ಅಥವಾ ಅತಿಯಾಗಿ ದುಃಖಪಡುವ ಸನ್ನಿವೇಶಗಳಿಗೆ ತುತ್ತಾದಾಗ ಮನದಲ್ಲಿ ಉಲ್ಬಣಿಸುವ ಭಾವನೆಗಳಿಗೆ ಅಕ್ಷರರೂಪ ಕೊಡಲಾಗದೇ ಒದ್ದಾಡುತ್ತೇವೆ. ಅಂತಹಾ ವೇದನೆ ತುಂಬಿದ ಶೂನ್ಯತೆಯ ಭಾವದ ವಾತಾವರಣದಲ್ಲಿಂದು ಬಾಲುರವರನ್ನು ಕಳೆದುಕೊಂಡ ಕೋಟಿ ಕೋಟಿ ಸಂಗೀತ ಪ್ರೇಮಿಗಳು ತೊಳಲಾಡುತ್ತಿದ್ದಾರೆ.
ಕಳೆದ ತಿಂಗಳ ಐದನೇ ತಾರೀಖಿನಂದು ಕೋವಿಡ್ ಪಾಸಿಟೀವ್ ಬಂದಿರುವುದರಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆಂದು, ತಮಗೆ ಕೇವಲ ಶೀತ ಮತ್ತು ಜ್ವರವಿರುವುದರಿಂದ ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆಂದು ಫೇಸ್ ಬುಕ್ ನಲ್ಲಿ ಅವರೇ ಹೇಳಿಕೊಂಡು ಚೆನ್ನೈನ ಎಮ್ಜಿ ಎಮ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಹಾಗೆ ಹೇಳುವಾಗ ಅವರ ಮಾತುಗಳಲ್ಲಿ ಮತ್ತೇ ನಮ್ಮನ್ನೆಲ್ಲಾ ಕಾಣುವ ಅದಮ್ಯ ಆತ್ಮವಿಶ್ವಾಸವಿತ್ತು.
ತಾವು ಕೊರೊನಾಗೆ ತುತ್ತಾಗುವ ಮುನ್ನ ಕೊರೋನಾ ಪೀಡಿತರಿಗಾಗಿ ಒಂದೊಂದು ಹಾಡನ್ನು ಹಾಡುವ ಮೂಲಕ ಹಣ ಸಂಗ್ರಹಿಸಿ ಕೊಟ್ಟಿದ್ದ ಹೃದಯವಂತ. ಆಸ್ಪತ್ರೆಗೆ ಸೇರಿದ ಆರಂಭದಲ್ಲಿ ಅವರ ಸ್ಥಿತಿ ತೀರಾ ಬಿಗಡಾಯಿಸಿ ಅವರನ್ನು ICU ಗೆ ಶಿಫ಼್ಟ್ ಮಾಡಿ ಜೀವ ರಕ್ಷಕ ಉಪಕರಣಗಳನ್ನು ಅಳವಡಿಸಿದ್ದರು. ಅಂದಿನಿಂದಲೂ ಅವರ ಆರೋಗ್ಯದ ಕುರಿತಾದ ಅಭೂತಪೂರ್ವ ಕಾಳಜಿ ದೇಶದ ಎಲ್ಲೆಡೆಯಿಂದ ವ್ಯಕ್ತವಾಗಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಲಕ್ಷಾಂತರ ಮಂದಿ ಪ್ರಾರ್ಥಿಸುತ್ತಲೇ ಬಂದಿದ್ದರು.
ಎಲ್ಲ ಸಹೃದಯರ ಪ್ರಾರ್ಥನೆ ಪಲಿಸಿತೋ ಎಂಬಂತೆ ಕಳೆದ ವಾರವಷ್ಟೇ ಬಾಲು ರವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆಯೆಂಬ ಸುದ್ದಿ ನೋಡಿ ಮನಸ್ಸು ಹಗುರವಾಗಿತ್ತು. ಅವರಿಗೆ ಕೊರೋನಾ ನೆಗೆಟೀವ್ ಎಂಬ ಸುದ್ದಿ ನಮ್ಮೆಲ್ಲರ ಮನದಲ್ಲಿ ಮತ್ತಷ್ಟು ಸ್ಪಷ್ಟ ಭರವಸೆಯನ್ನೂ ಮೂಡಿಸಿ ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆಯನ್ನು ಭಗವಂತ ಈಡೇರಿಸಿಬಿಟ್ಟ ಎಂಬ ತೃಪ್ತಿಯ ಸೆಲೆಯಲ್ಲೇ ಇದ್ದವರಿಗೆ ಇಂದು ಅವರಿಲ್ಲ ಎಂಬ ಕೆಟ್ಟ ಸುದ್ದಿ ಅರಗಿಸಿಕೊಳ್ಳಲು ಕಷ್ಟವಾಗುತ್ತಿರುವುದಷ್ಟೇ ಅಲ್ಲ, ಅದರಿಂದ ಹೊರಬರಲಿಕ್ಕೂ ಆಗುತ್ತಿಲ್ಲ..!
ಹೌದು… ಈ ವ್ಯಕ್ತಿಯನ್ನು ಜನ ಯಾಕಿಷ್ಟು ಅನ್ ಕಂಡೀಷನಲ್ ಆಗಿ ಪ್ರೀತಿಸುತ್ತಾರೆ ? ತನ್ನ ಬಗೆಗೆ ಒಂದಿನಿತೂ ಅಪಸ್ವರ ಕೇಳದ ಹಾಗೆ ಬಾಳಿ ಬದುಕಿದ ಅವರ ಯಶಸ್ಸಿನ ಗುಟ್ಟಾದರೂ ಏನು ? ಹುಟ್ಟಿದ್ದು ಆಂಧ್ರದ ಚಿತ್ತೂರು, ಮಾತೃಭಾಷೆ ತೆಲುಗಾದರೂ ಭಾಷಾತೀತವಾಗಿ ಇವರ ಸ್ವರ ಮಾಂತ್ರಿಕತೆಯ ಮೋಡಿಗೆ , ಅವರ ವ್ಯಕ್ತಿತ್ವದ ಸಮ್ಮೋಹನಕ್ಕೆ ಕೋಟ್ಯಾಂತರ ಮಂದಿ ಒಳಗಾಗಬೇಕಾದರೆ ಅದೆಂತಹಾ ದಿವ್ಯ ತಪಸ್ಸಿನ ಫಲ ಇವರದು ?
ತಾನು ಹುಟ್ಟಿದ್ದು ತೆಲುಗು ನೆಲದಲ್ಲಾದರೂ ತನಗೆ ಅನ್ನ ನೀಡಿ ” ಕೈ ಹಿಡಿದವರು ಕೈ ಬಿಡದವರು ಕನ್ನಡಿಗರು ” ಎಂದು ಕರುನಾಡನ್ನು ಕನ್ನಡಿಗರನ್ನು ಸದಾ ಎದೆ ತುಂಬುವಂತೆ ಹಾಡಿ ಹೊಗಳಿ ರಂಜಿಸುತ್ತಿದ್ದ ಇವರನ್ನು ಕನ್ನಡಿಗರಲ್ಲ ಎನ್ನಲು ಸಾಧ್ಯವೇ ? ದಕ್ಷಿಣ ಭಾರತದ ಅನೇಕ ಹೀರೋಗಳ ಶರೀರಕ್ಕೆ ಎಸ್.ಪಿ.ಯವರ ಶಾರೀರವೇ ಬೇಕು ! ಅವರಿಲ್ಲದೇ ನಟನೆಯೇ ಇಲ್ಲವೆಂದ ಅನೇಕ ಹೀರೋಗಳೂ ಇದ್ದರು.
ತಾನು ದೇಶವೇ ಮೆಚ್ಚುವ ಪ್ರಸಿದ್ಧಿಯಾದ ಗಾಯಕನಾದರೂ , ಹತ್ತಿರ ಹತ್ತಿರ ಅರ್ಧ ಲಕ್ಷದಷ್ಟು ಹಾಡುಗಳನ್ನು ಎಲ್ಲಾ ಭಾಷೆಗಳಲ್ಲಿ ಹಾಡಿದ್ದ ಸಂಗೀತ ಲೋಕದ ನಿಬ್ಬೆರಗಿನ ಪ್ರತಿಭೆಯ ಕಣಜವಾದರೂ ತಾನು ಶಾಸ್ತ್ರೀಯವಾಗಿ ಸಂಗೀತವನ್ನು ಅಭ್ಯಾಸ ಮಾಡಿಲ್ಲವೆಂದು ವಿನಯಪೂರ್ವಕವಾಗಿಯೇ ಎಲ್ಲರೆದುರು ಒಪ್ಪಿಕೊಳ್ಳುತ್ತಿದ್ದ ಇವರ ಹೃದಯ ವೈಶಾಲ್ಯತೆ ಯಾರಿಗಿರಲು ಸಾಧ್ಯ ?
1979 ರಲ್ಲಿ ಎಸ್ ಪಿ.ಬಿ ಯವರಿಗೆ ಬಾರಿಗೆ ಸಂಗೀತಮಯ ಶಂಕರಾಭರಣಂ ತೆಲುಗು ಚಿತ್ರಕ್ಕಾಗಿ ಮೊಟ್ಟಮೊದಲ ರಾಷ್ಟ್ರ ಪ್ರಶಸ್ತಿ ಬಂದಾಗ ” ತನಗೆ ಕರ್ನಾಟಕ ಸಂಗೀತದ ಬಗ್ಗೆ ಏನೂ ಗೊತ್ತಿಲ್ಲವೆಂದೇ ಮುಕ್ತವಾಗಿ ಹೇಳಿದ್ದರು.
ನಂತರ 1981 ರಲ್ಲಿ ಹಿಂದಿಯ ” ಏಕ್ ದೂಜೆಕೆ ಲಿಯೇ” ಚಿತ್ರಕ್ಕಾಗಿ ಎರಡನೇ ಬಾರಿಗೆ ರಾಷ್ಟ್ರ ಪ್ರಶಸ್ತಿ ಬಂದಾಗ ” ತನಗೆ ಹಿಂದಿ ಭಾಷೆ ಬರುವುದಿಲ್ಲ ಎಂದೇ ವಿನಯ ಹಾಗೂ ಸರಳತೆಯನ್ನು ಮೆರೆದಿದ್ದರು. ಈ ಮಾತುಗಳಲ್ಲಿ ಅವರ ವಿನಯ, ವಿಧೇಯತೆಯನ್ನು ಗುರುತಿಸಬಹುದಾಗಿತ್ತು.
ಬಾಲುರವರು ಚಿಕ್ಕ ಮಕ್ಕಳೊಂದಿಗೆ ತಾನೂ ಮಗುವಾಗಿ, ಹೊಸ ಗಾಯಕರ ಪ್ರತಿಭೆಗಳಿಗೆ ಸಾಣೆ ಹಿಡಿಯುವ ಗುರುವಾಗಿ, ವಾದ್ಯವೃಂದದ ನೆಚ್ಚಿನ ಗಾಯಕನಾಗಿ, ಸಹ ಗಾಯಕ ಗಾಯಕಿಯರಿಗೆ ಸ್ಪೂರ್ತಿಯ ಚಿಲುಮೆಯಾಗಿ, ತನ್ನ ಮಕ್ಕಳ ವಯಸ್ಸಿನ ಗಾಯಕರೂ ನಾಚುವಂತಹಾ ಸಿರಿಕಂಠವನ್ನು ಹೊಂದಿ, ಹಿರಿಯರಲ್ಲಿ ಗೌರವ , ಕಿರಿಯರಲ್ಲಿ ಸ್ನೇಹ ಪ್ರೀತಿ ತೋರುತ್ತಿದ್ದ ಸಹೃದಯಿಯಾಗಿ, ಕುಟುಂಬದ ಕಣ್ಮಣಿಯಾಗಿ, ಗುರುವಾಗಿ, ಮಾರ್ಗದರ್ಶಿಯಾಗಿ, ಹಿತೈಷಿಯಾಗಿ, ಸಭ್ಯ ನಾಗರಿಕನಾಗಿ, ಮಾನವೀಯ ಅಂತಃಕರಣ ವುಳ್ಳ ವ್ಯಕ್ತಿಯಾಗಿ, ಸಂಗೀತ ಜ್ಞಾನವಿಲ್ಲದ ನನ್ನಂತಹ ಲಕ್ಷಾಂತರ ಮಂದಿಗೂ ಸಂಗೀತದ ಬಗೆಗೆ ಒಲವು, ಭಾವುಕತೆ ಮೂಡಿಸಿ, ಇಡೀ ಸಂಗೀತ ಬದುಕಿನ ” ಸರಿಗಮಪದನಿಸ” ವನ್ನೇ ರಾಗ ತಾಳ ಪಲ್ಲವಿಯ ಕ್ರಮಬದ್ದತೆಯಿಂದ ಹಾಗೂ ನಾದ ಲಯಗಳ ಲಾಸ್ಯದಿಂದ ಶ್ರುತಿ ಬದ್ಧವಾಗಿ ನುಡಿಸಿ, ನಮಿಸಿ, ಮೆರೆಸಿ- ಹರಸಿದ್ದು ಸಾಮಾನ್ಯವಲ್ಲ.! ಇದು ಸಾಧಾರಣ ವ್ಯಕ್ತಿಯ ಪರಿಧಿಗೆ ನಿಲುಕುವಂತಹದ್ದಲ್ಲ.
ಪ್ರಪಂಚದ ಶ್ರೇಷ್ಠ ಗಾಯಕರಲ್ಲೊಬ್ಬರಾದ
” ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ “….. ನಮ್ಮ ನಿಮ್ಮೆಲ್ಲರ ನೆಚ್ಚಿನ SPB, ಅಥವಾ ಪ್ರೀತಿಯ ಬಾಲು ಸರ್ ರವರ ಸಾಧನೆ ಕುರಿತುಬರೆಯಲು ಹೊರಟರೆ ಅದೇ ಒಂದು ಗ್ರಂಥದಂತೆ !
ಅವರು ಹುಟ್ಟಿದ್ದು 04.06.1946 ರಲ್ಲಿ . 74 ವರ್ಷದ ಬದುಕಿನಲ್ಲಿ ಅವರು ಹಾಡಲು ಶುರು ಮಾಡಿದ್ದು ತಮ್ಮ ಇಪ್ಪತ್ತನೆಯ ವಯಸ್ಸಿನಲ್ಲಿ ! ಬಹುಭಾಷಾ ಗಾಯಕ , 40000 ಕ್ಕೂ ಹೆಚ್ಚು ಹಾಡುಗಳ ಒಡೆಯ ! ಅತಿ ಹೆಚ್ಚು ಸಂಗೀತ ನಿರ್ದೇಶಕರೊಡನೆ ಕೆಲಸ ಮಾಡಿದ ದಾಖಲೆ ! ಪದ್ಮಶ್ರೀ- ಪದ್ಮ ವಿಭೂಷಣ, ಸೇರಿದಂತೆ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಏಕೈಕ ಗಾಯಕ ! ಒಂದೇ ದಿನದಲ್ಲಿ ಇಪ್ಪತ್ತೊಂದು ಗೀತೆಗಳನ್ನು ಹಾಡಿ ರೆಕಾರ್ಡ್ ಮಾಡಿದ ಗಾನ ಗಾರುಡಿಗ ! ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಆಂಧ್ರದ ನಂದಿ ಅವಾರ್ಡ್ ಪಡೆದ ಏಕೈಕ ಗಾನ ದಿಗ್ಗಜ.
ಕರ್ನಾಟಕ ಶಾಸ್ತ್ರೀಯ, ಹಿಂದುಸ್ತಾನಿ, ಘಜ಼ಲ್,ಪಾಶ್ಚಾತ್ಯ, ಮೆಲೋಡಿ, ಅಬ್ಬರದ ಸ್ಥಾಯಿಯ ಹಾಡುಗಳು, ಬೇರೆ ಬೇರೇ ನಟರಿಗೆ ಅವರ ಧ್ವನಿಗನುಸಾರವಾಗಿ ಹಾಡುವ ಅಪರೂಪದ Voice Modulation , ಕೇವಲ ಗಾಯನವಲ್ಲದೇ ಅಭಿನಯ, ಸಂಗೀತ ನಿರ್ದೇಶನ, ವಾಯ್ಸ್ ಡಬ್ಬಿಂಗ್, ಚಿತ್ರ ನಿರ್ಮಾಣ, ನಿರ್ದೇಶನ, ಅನೇಕ ರಿಯಾಲಿಟಿ ಷೋ ಗಳಿಗೆ ತೀರ್ಪುಗಾರ, ಗಿನ್ನೆಸ್ ದಾಖಲೆ ನಿರ್ಮಿಸಿದ ಏಕೈಕ ಗಾಯಕ…….. ಮುಖ್ಯವಾಗಿ ಸಮಾಜಮುಖಿ ಚಿಂತಕ….. ಹೀಗೆ ಅವರ ಬಗ್ಗೆ ಹೇಳಲು ಹೊರಟರೆ ಅದಕ್ಕೆ ಆದಿ- ಅಂತ್ಯವೆಂಬುದೇ ಇರುವುದಿಲ್ಲ..!
ಇಂತಹಾ ಒಬ್ಬ ಸಂಗೀತ ಕ್ಷೇತ್ರದ ಯುಗಪುರುಷನ ಗಾಯನವನ್ನೂ ಮೀರಿದ ದೊಡ್ಡತನವೆಂದರೆ ಅದು ಅವರಲ್ಲಿನ ಸಂಸ್ಕಾರ, ಸರಳತೆ, ಸದ್ಗುಣ, ವಿಧೇಯತೆಗಳ ಅದ್ಭುತವಾದ ಮೇರು ವ್ಯಕ್ತಿತ್ವ…. ಎಲ್ಲಕ್ಕಿಂತ ಮುಖ್ಯವಾಗಿ ಕನ್ನಡದ ಮೇಲಿನ ಅವರ ಅತೀವ ಪ್ರೇಮ ಹಾಗೂ ಕನ್ನಡಿಗರ ಬಗೆಗಿನ ಅವರ ಸಾಟಿಯಿಲ್ಲದ ನಿಷ್ಕಲ್ಮಶವಾದ ಪ್ರೀತಿ. ಬಾಲು ಸಾರ್ ಹಿಮಾಲಯದೆತ್ತರದಷ್ಟು ಮೇರು ಪ್ರತಿಭೆಯಾದರೂ ಅವರದು ” ನನಗೇನೂ ಗೊತ್ತಿಲ್ಲ, ನಾನೇನೂ ಕಲಿತಿಲ್ಲ” ಎಂಬ ವಿನೀತ ಭಾವ.
ಅವರ ಇಳಿ ವಯಸ್ಸಿನಲ್ಲೂ ಅವರ ಕಂಚಿನ ಕಂಠದ ಶಕ್ತಿ, ಮುಕ್ಕಾಗದ ಮಾಧುರ್ಯ, ಶ್ರುತಿ ತಪ್ಪದ ಶಾರೀರ, ಶಾರೀರದಂತೆಯೇ ಆಕರ್ಷಕ ಶರೀರ , ಇನ್ನೂ ಇಪ್ಪತ್ತರ ಅವರ ಬತ್ತದ , ಬಾಡದ ಉತ್ಸಾಹ. ಇವೆಲ್ಲವೂ ಎಸ್.ಪಿ.ಬಿ ಯವರನ್ನು ಸಂಗೀತಲೋಕದ ದೇವರಂತೆಯೇ ಭಾಸವಾಗುವಂತೆ ಮಾಡುತ್ತಿದ್ದವು !! ಒಂದೇ ಮಾತಿನಲ್ಲಿ ಹೇಳುವುದಾದರೆ ಬಾಲು ಸರ್, ಸಂಗೀತ ಸರಸ್ವತಿಯ ವರಪುತ್ರ ! ಇಂತಹಾ ಗಾನ ಸಾಮ್ರಾಟನ ಅವಸಾನ ಸಂಗೀತ ಲೋಕಕ್ಕೆ ನಿಜಾರ್ಥದ ಭರಿಸಲಾಗದ ನಷ್ಟ !
ಮರೆಯುವ ಮುನ್ನ
ಬಾಲು ರವರಿಗಿಂತ ಒಳ್ಳೆಯ ಸಂಗೀತಗಾರ, ಹಿನ್ನಲೆ ಗಾಯಕ ನಮ್ಮ ನಡುವೆ ಇದ್ದಿರಬಹುದೇನೋ ಗೊತ್ತಿಲ್ಲ ! ಆದರೆ ಅವರಂತಹ ಸರಳ, ಸದ್ವೀನೀತ,ಸದ್ಗುಣ ಸಂಪನ್ನ, ಸಜ್ಜನ, ಸಂಯಮಿ, ಸಂಗೀತ ಸಾಕಾರ ಮೂರ್ತಿ, ಸಾತ್ವಿಕ. ಮತ್ತೊಬ್ಬರಿರಲು ಖಂಡಿತಾ ಸಾಧ್ಯವಿಲ್ಲವೆಂದರೆ ಅದು ಅತಿಶಯವಲ್ಲ. ಎಸ್.ಪಿ.ಬಿ ಯವರ ಸಂಗೀತ ಬದುಕಿನ ಬಣ್ಣದ ಬುಗುರಿಯ ಆಟ ಇಂದು ನಿಂತಿದೆ. ಆದರೆ ನೆನಪಿರಲಿ , ಇದು ಕೇವಲ ಭೌತಿಕವಾಗಿ ನಿಂತ ಆಟವಷ್ಟೇ !
ತಮ್ಮ ಅಪೂರ್ವವಾದ ಸ್ವರ ಸಂಪತ್ತಿನಿಂದ , ಆಕರ್ಷಕ ವ್ಯಕ್ತಿತ್ವದಿಂದ, ಎಲ್ಲರಲ್ಲೂ ಒಳ್ಳೆಯದನ್ನೇ ಕಾಣುತ್ತಿದ್ದ ಅವರ ಸಹೃದಯ ಸವಿ ಸ್ನೇಹದ ಸಿಂಚನದಿಂದ, ಸಂಗೀತಲೋಕಕ್ಕೆ ನೀಡಿದ ಬೆಲೆಕಟ್ಟಲಾಗದ ಕೊಡುಗೆಯಿಂದ ,ಎಲ್ಲಕ್ಕಿಂತ ಹೆಚ್ಚಾಗಿ ಜನ್ಮ ಜನ್ಮಗಳು ಅಳಿದರೂ ಕಳೆದರೂ ಸದಾ ಉಳಿಯುವಂತಹಾ ಹಾಡುಗಳನ್ನು ಎಲ್ಲಾ ಭಾಷೆಯಲ್ಲೂ ಕಟ್ಟಿಕೊಟ್ಟ ಅಸಾಧಾರಣ ಸೇವೆಯಿಂದ , ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಎಂಬ ಧೀಮಂತ ವ್ಯಕ್ತಿ, ಸಂಗೀತ ಲೋಕದ ಶಕ್ತಿ ನಮ್ಮೆಲ್ಲರ ಹೃನ್ಮನಗಳಲ್ಲಿ ಸದಾ ಅಮರರಾಗಿಯೇ ಇರುತ್ತಾರೆ.
ಹೇ….ವಿಧಿಯೇ… ಬಾಲುವಿನ ದೇಹವನ್ನು ಮಾತ್ರ ನೀನು ಮಣ್ಣಾಗಿಸಬಹುದು, ಕಣ್ಮರೆಯಾಗಿಸಬಹುದು..! ಆದರೆ ಅವರ ಕಂಚಿನ ಕಂಠದಿಂದ ಹೊರಬಂದ ಸಾವಿರ ಸಾವಿರ ಹಾಡುಗಳನ್ನಾಗಲೀ ಅವರ ವ್ಯಕ್ತಿತ್ವವನಾಗಲೀ ಅಥವಾ ಅವರನ್ನು ತಮ್ಮ ಉಸಿರಿರುವತನಕವೂ ಪ್ರೀತಿಸುವ, ಆರಾಧಿಸುವ, ಮೆಚ್ಚುವ ಕೋಟಿ ಕೋಟಿ ಸಂಗೀತ ಪ್ರೇಮಿಗಳ ಹೃದಯದಲ್ಲಿ ಹುದುಗಿರುವ ಅವರ ಬಗೆಗಿನ ಪ್ರೀತ್ಯಾಭಿಮಾನದ, ಎಂದೂ ಬಾಡದ ಭಾವನೆಗಳನ್ನು ಮಣ್ಣಾಗಿಸಲಿಕ್ಕೆ.
ನಿನಗೆ ಸಾಧ್ಯವೇ..? ನೆವರ್….!
ಹೋಗಿ ಬನ್ನಿ ಬಾಲು ಸಾರ್ ! ಮರುಜನ್ಮದಲ್ಲಿ ಕನ್ನಡ ಮಣ್ಣಿನಲ್ಲಿಯೇ ಹುಟ್ಟಬೇಕೆನ್ನುವ ನಿಮ್ಮ ಅದಮ್ಯ ಆಸೆಗೆ ಆರುಕೋಟಿ ಕನ್ನಡಿಗರ ಒತ್ತಾಸೆಯಿದೆ, ಪ್ರಾರ್ಥನೆಯಿದೆ ಹಾಗೂ ಸಹೃದಯರ ಮನದಾಳದ ಆಲಾಪನೆಯ ಆರಾಧನೆಯಿದೆ.
ಅಕ್ಷರಗಳ ಅಶ್ರುತರ್ಪಣದೊಂದಿಗೆ..
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ4 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ23 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ23 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ



