Connect with us

ದಿನದ ಸುದ್ದಿ

ಎಲ್ಲ ರೀತಿಯಿಂದ ದೊಡ್ಡವರು ‘ಜಿ.ಎಸ್.ಆಮೂರ’

Published

on

ಜಿ ಎಸ್ ಆಮೂರ ಎಲ್ಲ ರೀತಿಯಿಂದಲೂ ದೊಡ್ಡವರು. ಕಳೆದ ಮೇ ತಿಂಗಳಲ್ಲಿ 95 ಮುಗಿಸಿ ನೂರರೆಡೆಗೆ ಹೆಜ್ಜೆ ಹಾಕುತ್ತಿದ್ದರು. ಕನ್ನಡಕ್ಕೆ ಇಂಗ್ಲಿಷ್ ಮೇಷ್ಟ್ರುಗಳ ಲಿಂಕ್ (ಸಂಬಂಧ, ಕೊಡುಗೆ, ಬಾಂಧವ್ಯ ಈ ಪದಗಳಿಗಿಂತ ಉತ್ತಮ) ದೊಡ್ಡದು. ಮೇಷ್ಟ್ರುಗಳಷ್ಟೇ ಅಲ್ಲ ಬೇರೆ ಬೇರೆ ನೌಕರಿಗಳಲ್ಲಿದ್ದವರೂ ಇದ್ದರು. ಇರಲಿ. ನವೋದಯ, ನವೋದಯಪೂರ್ವ ಕಾಲದಿಂದಲೂ ಈ ಇತಿಹಾಸವಿದೆ. ಆ ಪರಂಪರೆಯ ಕೊಂಡಿಯಾಗಿದ್ದ ಅಮೂರ ಕಳಚಿಕೊಂಡು ಕನ್ನಡ ಸಾಹಿತ್ಯ ಚರಿತ್ರೆಯ ಭಾಗವಾದರು.

ಕನ್ನಡಕ್ಕೆ ಗಂಟುಬೀಳುವ ಇಂಗ್ಲಿಷ್ ಮೇಷ್ಟ್ರುಗಳ ಲಿಂಕೂ ಇದೆ ! ಅವರಲ್ಲಿ ಬಹುತೇಕರಿಗೆ ಅತ್ತ ಇಂಗ್ಲಷ್ಷೂ ಐಬು ಇತ್ತ ಅವರ ತಾಯ್ನುಡಿಯೂ ಐಬು. ಅವರು ಇಂಗ್ಲಿಷ್ ಡಿಗ್ರಿ ಸರ್ಟಿಫಿಕೇಟ್ ಇಟ್ಟುಕೊಂಡು ಕನ್ನಡದೊಳಗೆ ಓಡಾಡ್ತಾ ಇರ್ತಾರೆ. ಸ್ವಲ್ಪ ಬೆದರಿಕೆ, ಸ್ವಲ್ಪ ಬೂಟಾಟಿಕೆ ತೋರ್ತಾರೆ ! ಕೆಲವು ಕನ್ನಡದವು ಬೆದರೋದೂ ಉಂಟು !

ಆದರೆ ಕನ್ನಡಕ್ಕೆ ಕಾಮಧೇನುವಿನಂತೆ ಬರುವ ಇಂಗ್ಲಿಷ್ ಮೇಷ್ಟ್ರುಗಳ ಲಿಂಕ್ ಇದ್ಯಲ್ಲಾ ಅದು ಮಹತ್ವದ್ದು. ‘ ಶ್ರೀ ‘ ಯವರಿಂದಲೇ ಶ್ರೀಕಾರಗೊಂಡ ಆ ಪರಂಪರೆಗೆ ಸೇರಿದವರು ಅಮೂರ. ಮುಂದುವರೆದ ಹೊಸ ತಲೆಮಾರಿನಲ್ಲೂ ಕೆಲವರು ಆ ಪರಂಪರೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ.

ಇಂಥವರು ಕನ್ನಡವನ್ನು ಪ್ರೀತಿ ಗೌರವದಿಂದ ಕಾಣುತ್ತಾರೆ. ಕನ್ನಡವೆಂಬುದು ಇಂಗ್ಲಿಷಿನಂತೆಯೇ ಒಂದು ದೊಡ್ಡ ಭಾಷೆಯೆಂಬ ಅರಿವಿನಲ್ಲಿ ಒಡನಾಡುತ್ತಾರೆ, ಕೆಲಸ ಮಾಡುತ್ತಾರೆ. ಅಂಥವರಿಂದಲೇ ಇವಳ ಒಡವೆ ಅವಳಿಗಿಡುವ ಶಕ್ತಿ ಬರುವುದು. ಆಮೂರ ಇಂಗ್ಲಿಷ್ ಮತ್ತು ಕನ್ನಡ ಎರಡನ್ನೂ ಅರಗಿಸಿಕೂಂಡ ವಿಮರ್ಶಕರು. ಯಾವ ವಿಷಯವೇ ಆಗಲಿ ಅವರು ಬುಡಮಟ್ಟ ಶೋಧಿಸಿ ಬರೆಯುತ್ತಿದ್ದರು.

ಕನ್ನಡ ಕಥನ ಪರಂಪರೆ, ಮಹಿಳೆಯರ ಕಾವ್ಯ, ನವೋದಯ ಸಾಹಿತ್ಯ, ಜನಪ್ರಿಯ ಸಾಹಿತ್ಯ ಎಲ್ಲದರ ಬಗ್ಗೆಯೂ ಸಮಾನ ಆಸಕ್ತಿಯಿಂದ ಅಧ್ಯಯನಶೀಲರಾಗುತ್ತಿದ್ದರು. ಬೇಂದ್ರೆ, ಶ್ರೀರಂಗರ ಬಗ್ಗೆ ಎಂಥ ತಾದಾತ್ಮ್ಯ ಹೊಂದುತ್ತಿದ್ದರೋ ಅಷ್ಟೇ ತಾದಾತ್ಮ್ಯದಲ್ಲಿ ಜನಪ್ರಿಯ ಕಾದಂಬರಿಕಾರ ಅನಕೃ ಬಗ್ಗೆ ಚಿಂತಿಸಿ ಬರೆಯುತ್ತಿದ್ದರು. ಜನಪ್ರಿಯ ಸಾಹಿತ್ಯದ ಬಗ್ಗೆ ಸದಭಿರುಚಿಯ ಅಭಿಪ್ರಾಯ ಮೂಡಿಸುತ್ತಿದ್ದರು.

ಇಂಗ್ಲಿಷ್ ಭಾಷೆಯಲ್ಲಿ ಹಲವಾರು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಮಳಗಾಂವಕರ್, ಮುಲ್ಕ್ ರಾಜ್ ಆನಂದ, ರಾಜಾರಾವ್, ನಾಯ್ಪಾಲ್, ಸಲ್ಮಾನ್ ರುಶ್ದಿ ( ನಾನು ನೈಪಾಲ್, ರಶ್ದಿ ಅಂದಾಗಲೆಲ್ಲ ಅವರು ನಾಯ್ಪಾಲ್, ರುಶ್ದಿ ಅಂತ ಸರಿಮಾಡುತ್ತಿದ್ದರು ! ) ಅವರೆಲ್ಲರ ಕೃತಿಗಳ ವಿಸ್ತೃತ ಓದು ಅವರದಾಗಿತ್ತು. ಕುವೆಂಪು ಅವರ ರಾಮಾಯಣ ದರ್ಶನಂ ಕುರಿತ ಅವರ ಇಂಗ್ಲಿಷ್ ಲೇಖನ ಬಹಳ ಮೌಲಿಕವಾದುದು.

ಪ್ರಾಚೀನ ಸಾಹಿತ್ಯದ ಬಗ್ಗೆ ಇರುವಷ್ಟೇ ಆಸಕ್ತಿಯನ್ನು ಹೊಸದಾಗಿ ಬರೆಯುವವರ ಕತೆ ಕವಿತೆಗಳನ್ನು ಸಂಕಲನಗಳಲ್ಲಿ ಸೇರಿಸುತ್ತಿದ್ದರು. ಬೇರೆ ಬೇರೆ ರೀತಿಯ ಸಂಕಲನಗಳನ್ನು ಸಂಪಾದಿಸುವುದಕ್ಕೆ ಬೇಕಾದ ಅಪಾರ ಓದನ್ನು ಅವರು ಸಂತೋಷದಿಂದ ಮತ್ತು ಪರಿಪೂರ್ಣತೆಯಿಂದ ಮಾಡುತ್ತಿದ್ದರು.

ಬೆಂಗಳೂರಿಗೆ ಬಂದರೆ ಲಂಕೇಶ್ ಅವರಲ್ಲಿಗೆ ಭೇಟಿ ಕೊಟ್ಟು ಅವರೊಡನೆ ಗಂಭೀರ ಸಾಹಿತ್ಯ ಚರ್ಚೆ ಮಾಡುತ್ತಿದ್ದರು. ಹಾಗೆ ಒಮ್ಮೆ ಚರ್ಚಿಸುತ್ತಿದ್ದ ಹೊತ್ತಿನಲ್ಲಿ ಅವರು, ‘ ವರ್ಷಕ್ಕೆ ಒಂದು ಸಾರಿ ತಪ್ಪದೇ War and Peace ಮತ್ತು Anna Karenina ಓದೇ ಓದ್ತೀನಿ ‘ ಅಂತ ಹೇಳಿದ್ದು ನನ್ನ ನೆನಪಿನಲ್ಲಿದೆ. ಅವರ ‘ಭುವನದ ಭಾಗ್ಯ’ ಕುರಿತು ಆಗ ನಾನು ಲಂಕೇಶ್ ಪತ್ರಿಕೆ ಯಲ್ಲಿ ಬರೆದಿದ್ದೆ.

ಅವರು ಬಹುಶೃತ ವಿದ್ವಾಂಸರಾಗಿದ್ದರು. ನಿಷ್ಠುರ ವಿಮರ್ಶಕರಾಗಿದ್ದರು. ಒಮ್ಮೆ ಒಂದು ಪ್ರತಿಷ್ಠಿತ ಪ್ರಶಸ್ತಿ ತೀರ್ಮಾನ ಮಾಡಲು ಒಂದು ಸಭೆ ನಡೆಯಿತು. ಮೂವರು ತೀರ್ಪುಗಾರರಲ್ಲಿ ಅಮೂರ ಒಬ್ಬರು. ಇನ್ನೊಬ್ಬರು ಅವರ ವಯಸ್ಸಿನವರೇ. ಮೂರನೆಯವರು ಇನ್ನೂ ಯುವಕರು. ತೀರ್ಮಾನ ವಿವಾದದಲ್ಲಿ ಆಯಿತು. ಆ ಪ್ರಶಸ್ತಿಗೆ ಯಾವ ರೀತಿಯಿಂದಲೂ ಅರ್ಹವಲ್ಲದ ಕೃತಿಯನ್ನು ಅಮೂರ ಒಪ್ಪಲಿಲ್ಲ.

ಆದರೆ ಉಳಿದಿಬ್ಬರ ಬಹುಮತವಿತ್ತು. ಅದು ಆಯ್ಕೆಯಾಗಬೇಕಾಯ್ತು. ಎಲ್ಲ ಮುಗಿದಮೇಲೆ ಹೊರಡುವಾಗ ಆ ಯುವಕರನ್ನು ಪಕ್ಕಕ್ಕೆ ಕರೆದು ಆಮೂರ ಹೇಳಿದರು, ” ನೀವಿನ್ನೂ ಚಿಕ್ಕ ವಯಸ್ಸಿನವರಿದ್ದೀರಿ, ಇನ್ನು ಮುಂದೆ ಎಂದೂ ಇಂಥ ಲಿಟರರಿ ಪೊಲಿಟಿಕ್ಸ್ ಮಾಡಬೇಡಿ, ” ಅಂದ ಅವರ ಮಾತಿಗೆ ನಾನು ಸಾಕ್ಷಿಯಾಗಿದ್ದೆ. ಆ ಯುವ ಪ್ರಭೃತಿ ತಲೆತಗ್ಗಿಸಿ ನಿಂತಿದ್ದರು.

ಅದು ಸಾಹಿತ್ಯ ಲೋಕದಲ್ಲಿರಬೇಕಾದ ದೊಡ್ಡತನ. ಅಮೂರ ಅಂಥ ಅಪರೂಪದ ದೊಡ್ಡವರು. ನಮಗೆ ಬಹಳಷ್ಟು ಕಲಿಸಿದ್ದಾರೆ. ಅಂಥ ಮೌಲ್ಯಗಳನ್ನು ಕಲಿತು ದೊಡ್ಡವರಾಗಲು ಬದುಕೋಣ. ಅವರ ನೆನಪಿಗೆ ನಮನಗಳು.

-ಅಗ್ರಹಾರ ಕೃಷ್ಣಮೂರ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending