Connect with us

ದಿನದ ಸುದ್ದಿ

ಸುದ್ದಿಮನೆಯ ಪ್ರಾಮಾಣಿಕತೆ, ಸರ್ಕಾರದ ಭ್ರಷ್ಟಾಚಾರ

Published

on

  • ನಾ ದಿವಾಕರ

ನ್ನಡದ ಸುದ್ದಿಮನೆಗಳು ಎಷ್ಟರ ಮಟ್ಟಿಗೆ ವಿಶ್ವಾಸಾರ್ಹತೆ ಕಳೆದುಕೊಂಡಿವೆ ಎಂದರೆ ಅವುಗಳು ಬಿತ್ತರಿಸುವ ವಾಸ್ತವಗಳನ್ನೂ ಜನರು ನಂಬುವುದಿಲ್ಲ. ತಮ್ಮ ಟಿ ಆರ್ ಪಿ ಹೆಚ್ಚಿಸಿಕೊಳ್ಳಲು ಅಧಿಕಾರ ಪೀಠದ ವಂದಿಮಾಗಧರಂತೆ, ಭಟ್ಟಂಗಿಗಳಂತೆ ವರ್ತಿಸುವ ಸುದ್ದಿಮನೆಗಳಿಗೆ ಅದೇ ಅಧಿಕಾರ ಪೀಠದ ವಿರುದ್ದ ಮಾತನಾಡಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆಯೂ ಇರಬೇಕು.

ಹಾಗೆಯೇ ತಮ್ಮ ಅನುಕೂಲಕ್ಕಾಗಿ, ಲಾಭಕ್ಕಾಗಿ ಜನಸಾಮಾನ್ಯರ ನೈಜ ಕಾಳಜಿಯನ್ನೂ ಕಡೆಗಣಿಸಿ ಅಧಿಕಾರಸ್ಥರ ಪಾದಪೂಜೆ ಮಾಡುವಾಗಲೂ, ಅದೇ ಪಾದಗಳು ತಮ್ಮನ್ನು ತುಳಿಯಲೂ ಹೇಸುವುದಿಲ್ಲ ಎನ್ನುವ ಪ್ರಜ್ಞೆಯೂ ಇರಬೇಕು. ಭ್ರಷ್ಟಾಚಾರ ನಮ್ಮ ವ್ಯವಸ್ಥೆಯ ಒಂದು ಅಂಗ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆಯೇ , ಭ್ರಷ್ಟಾಂಗವೂ ನಮ್ಮನ್ನು ಆಳುತ್ತಿದೆ.

ಜಾತಿವಾದ, ಕೋಮುವಾದ, ಮತಾಂಧತೆ, ಭ್ರಷ್ಟತೆ, ಅಪಾರದರ್ಶಕ ನೀತಿಗಳು, ಜನ ವಿರೋಧಿ ಶಾಸನಗಳು, ದುಡಿವ ವರ್ಗಗಳ ಬದುಕು ಕಸಿಯುವ ಕಾಯ್ದೆಗಳು, ಪ್ರತಿರೋಧದ ದನಿಗಳನ್ನು ಹತ್ತಿಕ್ಕುವ ಕರಾಳ ಶಾಸನಗಳು, ಆರೋಗ್ಯ ವ್ಯವಸ್ಥೆಯಲ್ಲಿನ ಲೋಪ ದೋಷ ಅವ್ಯವಹಾರ ದುರಾಡಳಿತ ಇತ್ಯಾದಿ, ಶಿಕ್ಷಣ ಕ್ಷೇತ್ರದಲ್ಲಿನ ಲಾಭಕೋರತನ ದುರವಸ್ಥೆ ವ್ಯಾಪಾರಿ ಮನೋಭಾವ ಡೊನೇಷನ್ ದಂಧೆ, ಕೊರೋನಾ ನಿರ್ವಹಣೆಯಲ್ಲಿ ಸರ್ಕಾರದ ಬೇಜವಾಬ್ದಾರಿ ಧೋರಣೆ ಕೆಟ್ಟ ನಿರ್ವಹಣೆ ಖಾಸಗಿ ಆಸ್ಪತ್ರೆಗಳ ದಂಧೆ, ತರಗೆಲೆಗಳಂತೆ ಉದುರಿಹೋಗುತ್ತಿರುವ ಅಮಾಯಕ ಜೀವಗಳು, – ಹೀಗೆ ಪಟ್ಟಿ ಮಾಡುತ್ತಾ ಹೋದರೆ ಭ್ರಷ್ಟಾಚಾರ ತೃಣ ಸಮಾನ ಎನಿಸಿ ಬಿಡುತ್ತದೆ.

ಈ ಸಮಸ್ಯೆಗಳು ಎದುರಾದಾಗಲೆಲ್ಲಾ ಆಳುವವರಿಗೆ ಬೃಹತ್ ಗಾತ್ರದ ಬಕೆಟ್ ಹಿಡಿದು ಜನಸಾಮಾನ್ಯರನ್ನು ವಂಚಿಸುವ , ಯಾವುದೋ ಸಿನಿಮಾ ನಟರ ಖಾಸಗಿ ವಿಚಾರಗಳನ್ನು ಪ್ರಸಾರ ಮಾಡುತ್ತಾ ಜನರ ಗಮನವನ್ನು ಬೇರೆಡೆಗೆ ಹರಿಸುವ ಸುದ್ದಿಮನೆಗಳಿಗೆ ನೈತಿಕ ಹೊಣೆಗಾರಿಕೆ ಮತ್ತು ಪ್ರಜ್ಞೆಯೂ ಇರಬೇಕಲ್ಲವೇ. ಕನ್ನಡದ ಜನತೆ ಸುದ್ದಿಮನೆ ಎಂದರೆ ಬಕೆಟ್ ಗಟ್ಟಲೆ ಉಗಿಯುವಷ್ಟು ಮಟ್ಟಿಗೆ ವಾಹಿನಿಗಳು ಕುಲಗೆಟ್ಟು ಹೋಗಿವೆ.

ಕಳೆದ ಆರು ತಿಂಗಳಲ್ಲಿ ಈ ಸುದ್ದಿಮನೆಗಳ ನಗ್ನ ನರ್ತನವನ್ನು ಕಂಡು ಬೇಸತ್ತಿರುವ ಜನರು ಪರ್ಯಾಯ ಮಾಧ್ಯಮಗಳ ಶೋಧದಲ್ಲಿರುವುದೂ ಹೌದು. ಕೊರೋನಾಗಿಂತಲೂ ವ್ಯಾಪಕವಾಗಿ ಕೋಮುದ್ವೇಷ ಹರಡುವಲ್ಲಿ ಸುದ್ದಿಮನೆಗಳು ನಿರ್ವಹಿಸಿದ ಪಾತ್ರವನ್ನು ಮರೆಯಲೂ ಆಗದು ಕ್ಷಮಿಸಲೂ ಆಗದು. ವಲಸೆ ಕಾರ್ಮಿಕರು ಬೀದಿಪಾಲಾದಾಗ ಅವರನ್ನು ಬಿಹಾರಿ ಮುಂಬಯಿ ಗುಜರಾತ್ ಚೆನ್ನೈ ಬಾಂಬುಗಳೆಂದು ಕರೆಯುವ ಮೂಲಕ ಸುದ್ದಿಮನೆಗಳು ತಮ್ಮೊಳಗಿನ ಹೇಸಿಗೆಯನ್ನು ರಾಜ್ಯದುದ್ದಕ್ಕೂ ಹರಡಿವೆ.

ಸೋಂಕಿತರಲ್ಲಿ ಮತೀಯ ಅಸ್ಮಿತೆ ಹೆಕ್ಕಿ ತೆಗೆದು ಇಡೀ ಸಮುದಾಯಗಳನ್ನು ಅವಹೇಳನ ಮಾಡುವ ಮೂಲಕ ತಮ್ಮ ಅಂತರಂಗದ ಕೊಳಕಿನ ಹೊಳೆಯನ್ನೇ ಹರಿಸಿವೆ. ಈಗ ಸಮಸ್ತ ರಾಜ್ಯದ. ರೈತ ಸಮುದಾಯ ಮತ್ತು ಹತ್ತಾರು ಸಂಘಟನೆಗಳು ಕೃಷಿ ಮಸೂದೆಯ ವಿರುದ್ಧ , ಕಾರ್ಮಿಕ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವಾಗ ಸಿನಿಮಾ ನಟಿಯರ ಡ್ರಗ್ಸ್ ದಂಧೆಯ ಹಿಂದೆ ವಾಲಾಡುತ್ತಿವೆ.

ಇಷ್ಟೆಲ್ಲಾ ಅನೈತಿಕತೆಯನ್ನು ಒಡಲಲ್ಲಿ ಬಚ್ಚಿಟ್ಟುಕೊಂಡು ಪ್ರಾಮಾಣಿಕತೆಯ ವಾರಸುದಾರರಂತೆ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದರೆ ಜನತೆಗೆ ವಿಶ್ವಾಸ ಮೂಡುವುದಾದರೂ ಹೇಗೆ. ಅಮಾಯಕ ಪ್ರಜೆಗಳ ಮೇಲೆ , ಜನಪರ ಹೋರಾಟಗಾರರ ಮೇಲೆ, ಸಂಘಟನೆಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆದಾಗ, ಸರ್ಕಾರದ ದಬ್ಬಾಳಿಕೆ ಕಂಡಾಗ ಅಸ್ಮಿತೆಗಳ ಚೌಕಟ್ಟಿಗೆ ಸಿಲುಕಿ ಸಂಭ್ರಮಿಸಿದ ಸುದ್ದಿ ಮನೆಗಳು ತಮ್ಮ ವಿರುದ್ಧವೇ ಸರ್ಕಾರ ತಿರುಗಿಬಿದ್ದಾಗ ಅಬ್ಬೇಪಾರಿಗಳಂತೆ ಕಾಣುತ್ತವೆ‌.

ಪವರ್ ಟಿವಿ ಶ್ಲಾಘನೀಯ ಕೆಲಸವನ್ನೇ ಮಾಡಿದ್ದರೂ ಈ ಸ್ಥಿತಿ ತಲುಪಿದೆ. ಅಂದು ಅಮಾಯಕ ಅಸಹಾಯಕ ಪ್ರಜೆಗಳ ಪರ ದನಿ ಎತ್ತಿ , ಆಕ್ರಂದನದ ದನಿಗೆ ದನಿಗೂಡಿಸಿ ಇದೇ ಸುದ್ದಿಮನೆಗಳಿಂದ ದೇಶದ್ರೋಹಿ ಪಟ್ಟ ಪಡೆದ ಪ್ರಬುದ್ಧ ಮನಸುಗಳೇ ಇಂದು ಪೊಲೀಸ್ ಮತ್ತು ಸರ್ಕಾರದ ದೌರ್ಜನ್ಯಕ್ಕೊಳಗಾದ ಸುದ್ದಿಮನೆ, ಪವರ್ ಟಿವಿ ಪರವಾಗಿಯೂ ದನಿ ಎತ್ತುತ್ತಿವೆ. ದುರಂತ ಎಂದರೆ ಇತರ ಸುದ್ದಿಮನೆಗಳು ಇದರ ಪರಿವೆಯೇ ಇಲ್ಲವೇನೋ ಎನ್ನುವಂತೆ ನಿರಾಳವಾಗಿವೆ.

ಬಂಡವಾಳ, ಮಾರುಕಟ್ಟೆ ಮತ್ತು ಅಧಿಕಾರ ರಾಜಕಾರಣಕ್ಕೆ ಅಧೀನರಾಗುವ ಮುನ್ನ ಸುದ್ದಿಮನೆಗಳು ಈ ಎಲ್ಲ ಅಂಶಗಳನ್ನೂ ಗಮನಿಸಬೇಕಲ್ಲವೇ ? ಹೊಳೆ ದಾಟಿಸಲು ಬಲ್ಲವನೇ ಮುಳುಗಿಸಲೂ ಬಲ್ಲ ಅಲ್ಲವೇ ? ತಾವೇ ಹೊಳೆ ದಾಟುವ ಸಾಮರ್ಥ್ಯ ಇದ್ದೂ ಇಲ್ಲದಂತೆ ಆಳುವವರ ಭಟ್ಟಂಗಿಗಳಂತೆ ವರ್ತಿಸುವುದು ಎಷ್ಟು ಸರಿ ?ಸುದ್ದಿಮನೆಗಳ ಒಡೆತನ ಯಾವುದೋ ಒಬ್ಬ ಶಾಸಕ, ಸಂಸದ ಅಥವಾ ಆಳುವವರ ಬಾಲಂಗೋಚಿಗಳಂತಿರುವ ಕಾರ್ಪೋರೇಟ್ ಉದ್ಯಮಿಯ ಕೈಯ್ಯಲ್ಲಿರುತ್ತದೆ.

ನಿರೂಪಕರು ಸೂತ್ರದ ಬೊಂಬೆಗಳಂತೆ ಆಡುತ್ತಾರೆ. ಈ ಅಂಶಗಳ ಹೊರತಾಗಿಯೂ ರಾಜ್ಯ ಸರ್ಕಾರದ ದಬ್ಬಾಳಿಕೆ, ದೌರ್ಜನ್ಯ, ರೆಹಮಾನ್ ಅವರನ್ನು ಬಂಧಿಸುವಂತಹ ಹೀನ ವರ್ತನೆ ಇವೆಲ್ಲವೂ ಖಂಡನಾರ್ಹ ಎನ್ನದೆ ವಿಧಿಯಿಲ್ಲ. ಪ್ರಬುದ್ಧ ಮನಸುಗಳು ಸಾವನ್ನು ಸಂಭ್ರಮಿಸುವುದಿಲ್ಲ. ಮತ್ತೊಬ್ಬರ ನೋವನ್ನೂ ಸಂಭ್ರಮಿಸುವುದಿಲ್ಲ. ಅನ್ಯಾಯಕ್ಕೊಳಗಾದವರ, ದೌರ್ಜನ್ಯಕ್ಕೊಳಗಾದವರ ಪರ ನಿಲ್ಲುತ್ತವೆ. ಏಕೆಂದರೆ ಈ ಮನಸುಗಳಿಗೆ ದೇಶ ಎಂದರೆ ಮನುಜರು ಕೇವಲ ಮಣ್ಣಲ್ಲ.

ಕೊನೆಯದಾಗಿ ಸುದ್ದಿಮನೆಗಳಿಗೆ ಈ ಮಾತುಗಳನ್ನು ಹೇಳಲೇಬೇಕಿದೆ 

ಸುದ್ದಿಮನೆಗಳ ಸಂಪಾದಕರೇ, ನಿಮ್ಮ ಮಾಲಿಕರು ಯಾರ ಸೇವೆಯನ್ನಾದರೂ ಮಾಡಲಿ ನೀವು ಜನಸಾಮಾನ್ಯರ ಪರ ನಿಂತು ಮಾತನಾಡಿ ಏಕೆಂದರೆ ನಿಮಗೆ ವೃತ್ತಿ ಧರ್ಮ ಎನ್ನುವುದಿದೆ. ಮಾಲಿಕರಿಗೆ ವ್ಯಾಪಾರಿ ಧರ್ಮ ಮುಖ್ಯವಾಗುತ್ತದೆ ನಿಮಗಲ್ಲ. ದೋಣಿ ನಿಮ್ಮದೇ ಆದರೂ ಅಂಬಿಗ ನಿಮ್ಮವನಾಗಲಾರ ಎನ್ನುವುದನ್ನು ನೆನಪಿಡಿ. ಇಲ್ಲವಾದರೆ ಇತಿಹಾಸದ ಕಸದ ಬುಟ್ಟಿ ಸೇರಿಬಿಡುತ್ತೀರಿ. ದೇಶ ಎಂದರೆ ಮಣ್ಣಲ್ಲ ಮನುಜರು ಎನ್ನುವುದನ್ನು ನೆನಪಿಡಿ.

ಆಗ ನಿಮ್ಮ ರಂಗಿನ ಪರದೆಗಳ ಬಣ್ಣಗಳಿಗೂ ಅರ್ಥ ಬರುತ್ತದೆ. ನಿಮ್ಮ ಏರುದನಿಯೂ ಸಾರ್ಥಕವಾಗುತ್ತದೆ. ನೀವು ಪ್ರಜಾತಂತ್ರದ ಒಂದು ಅಂಗ ಎನ್ನುವುದನ್ನು ಮರೆಯದಿರಿ. ಪ್ರಜಾತಂತ್ರ ಉಳಿದರೆ ಮಾತ್ರ ನೀವೂ ಉಳಿಯತ್ತೀರಿ. ಇಲ್ಲವಾದರೆ ಅಳಿಸಿಹೋಗುತ್ತೀರಿ. ಜನರ ನಡುವೆ ನಿಲ್ಲಿ ಜನರೊಡನೆ ನಿಲ್ಲಿ ಜನರಿಗಾಗಿ ನಿಲ್ಲಿ , ಜನ ನಿಮ್ಮೊಡನಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending