ದಿನದ ಸುದ್ದಿ
ನಿರ್ಭಯಾ ನೆನಪಾಗಿಯೇ ಉಳಿಯುವುದೇಕೆ..?
- ನಾ ದಿವಾಕರ
ಉತ್ತರ ಪ್ರದೇಶದ ಹಥ್ರಾಸ್ ಎಂಬ ಕುಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಮತ್ತೊಮ್ಮೆ ಹೆಣ್ತನದ ಘನತೆ, ರಕ್ಷಣೆ ಮತ್ತು ಗೌರವದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ. ಹಥ್ರಾಸ್ ಘಟನೆ ನಡೆದು ಒಂದು ತಿಂಗಳು ಕಳೆದಿದೆ. ದೇಶಾದ್ಯಂತ ಪ್ರತಿರೋಧದ ದನಿಗಳು ಇನ್ನೂ ಕೇಳಿಬರುತ್ತಿವೆ. ಆರೋಪಿಗಳಿಗೆ ಶಿಕ್ಷೆಯಾಗುವುದೋ ಇಲ್ಲವೋ ಎನ್ನುವ ಪ್ರಶ್ನೆಯೂ ಕಾಡತೊಡಗಿದೆ.
ಏಕೆಂದರೆ ಸಿಬಿಐ ಎಂಬ ಸೂತ್ರದ ಗೊಂಬೆ ತನಿಖೆಯನ್ನು ಕೈಗೆತ್ತಿಕೊಂಡಿದೆ. ಭಾರತದ ಸಾರ್ವಭೌಮ ಪ್ರಜೆಗಳು ಸಾಂವಿಧಾನಿಕ ಸಂಸ್ಥೆಗಳಲ್ಲಿ ಮತ್ತು ಪ್ರಭುತ್ವದ ನ್ಯಾಯ ನಿರ್ವಹಣೆಯಲ್ಲಿ ವಿಶ್ವಾಸ ಕಳೆದುಕೊಳ್ಳಲು ಇನ್ನೇನೂ ಉಳಿದಿಲ್ಲ ಎನ್ನುವುದನ್ನು ಬಾಬ್ರಿ ಮಸೀದಿಯ ಧ್ವಂಸವನ್ನು ಕುರಿತ ತೀರ್ಪು ನಿರೂಪಿಸಿದೆ.
70 ವರ್ಷಗಳ ಭಾರತ ಆರು ವರ್ಷಗಳಲ್ಲಿ ಬದಲಾಗಿದೆ ಎಂದು ಹೇಳುವುದೇ ಆದರೆ, ಸಾಂವಿಧಾನಿಕ ಮೌಲ್ಯಗಳ ಮತ್ತು ಸಾಂಸ್ಥಿಕ ಅಧಃಪತನದ ವಿಚಾರದಲ್ಲಿ ನಿರ್ವಿವಾದವಾಗಿ ಒಪ್ಪಿಬಿಡಬಹುದು. ಅತ್ಯಾಚಾರ ನಮ್ಮ ಸಂಸ್ಕೃತಿಯ ಒಂದು ಭಾಗ ಎನ್ನುವ ಸಂಸದರು ನಮ್ಮ ನಡುವೆ ಇದ್ದಾರೆ, ಅತ್ಯಾಚಾರ ನಡೆದರೆ ಸುಖ ಪಡಬೇಕು ಎನ್ನುವ ಪಕ್ಷದ ಮಹಿಳಾ ವಕ್ತಾರರೂ ಇದ್ದಾರೆ.
ಸಾವು ಮತ್ತು ದೌರ್ಜನ್ಯಗಳನ್ನು ರಾಜಕೀಯ ಮೇಲು-ಕೀಳು ಪುಂಡಾಟಕ್ಕೆ ಬಳಸಿಕೊಳ್ಳುವ ರಾಜಕೀಯ ನಾಯಕರೂ ನಮ್ಮ ನಡುವೆ ಇದ್ದಾರೆ. ಸಾವಿಗೆ ಬೆಲೆ ಇಲ್ಲದ, ಜೀವಕ್ಕೆ ಮೌಲ್ಯವಿಲ್ಲದ ಒಂದು ದೇಶದಲ್ಲಿ ನಾವು ಬದುಕುತ್ತಿದ್ದೇವೆ, ನಿಜ, ಆದರೆ ಸಾವು ಎನ್ನುವುದು ಸಹಜೀವಿಗಳನ್ನು ಕಳೆದುಕೊಂಡವರನ್ನು ಜೀವಮಾನವಿಡೀ ಬಾಧಿಸುವ ಒಂದು ವಿದ್ಯಮಾನ ಎನ್ನುವ ಕನಿಷ್ಟ ಮಾನವೀಯ ಪ್ರಜ್ಞೆ ಮತ್ತು ಸಂವೇದನೆ ಆಡಳಿತ ವ್ಯವಸ್ಥೆಗೆ, ನಾಗರಿಕ ಸಮಾಜಕ್ಕೆ ಇರಬೇಕಲ್ಲವೇ ?
ಈ ಸಂವೇದನೆಯನ್ನು ಕಳೆದುಕೊಂಡಿರುವ ಸಮಾಜೋ-ರಾಜಕೀಯ ವ್ಯವಸ್ಥೆಯಲ್ಲಿ ಭಾರತ ಬದುಕುತ್ತಿದೆ. ಹಾಗೆಂದ ಮಾತ್ರಕ್ಕೆ ಈ ಮೊದಲು ಭಾರತದ ಆಳುವ ವರ್ಗಗಳಲ್ಲಿ ಸಂವೇದನೆ ಮತ್ತು ಮಾನವೀಯ ಪ್ರಜ್ಞೆ ಸದಾ ಜಾಗೃತವಾಗಿತ್ತು ಎಂದರ್ಥವಲ್ಲ. ಇದು ಕೇವಲ ಐದಾರು ವರ್ಷಗಳ ಬೆಳವಣಿಗೆಯೂ ಅಲ್ಲ. ಇಂದು ಅಧಿಕಾರಸ್ಥರ ದಿವ್ಯ ಮೌನದ ಹಿಂದೆ ನಮಗೆ ಕಾಣುತ್ತಿರುವ ಕ್ರೌರ್ಯ ಹಿಂದೆಯೂ ಕಂಡಿದೆ. ಇನ್ನು ಮುಂದೆಯೂ ಕಾಣುತ್ತದೆ.
ಏಕೆಂದರೆ ಈ ಮೌನದ ಹಿಂದೆ ಮೇಲರಿಮೆಯ ಅಹಮಿಕೆ ಇರುವಷ್ಟೇ ಪ್ರಮಾಣದಲ್ಲಿ ಕೀಳರಿಮೆಯ ತಾರತಮ್ಯವೂ ಅಡಗಿದೆ. ಸಾವು ಎಲ್ಲರಿಗೂ ಪೂರ್ವನಿರ್ಧರಿತವೇ ಆಗಿದ್ದರೂ ಭಾರತದಲ್ಲಿ ಇದಕ್ಕೆ ಸಾಮುದಾಯಿಕ ಸ್ಪರ್ಶ ಇದೆ. ಅಸಹಜ ಸಾವುಗಳು ಈ ಸಾಮುದಾಯಿಕ ಅಸ್ಮಿತೆಗಳನ್ನಾಧರಿಸಿ ಮಾನ್ಯತೆ, ಸ್ವೀಕೃತಿ, ಸಾಂತ್ವನ ಮತ್ತು ಶ್ರದ್ಧಾಂಜಲಿಗಳಿಗೆ ಅರ್ಹತೆ ಪಡೆಯುತ್ತವೆ. ಈ ಪರಂಪರೆಗೆ ಬಹಿರಂಗ ಮೌಖಿಕ ಅಭಿವ್ಯಕ್ತಿಯನ್ನು ಕಳೆದ ಆರು ವರ್ಷಗಳಿಂದ ಕಾಣುತ್ತಿದ್ದೇವೆ. ಹಾಗಾಗಿಯೇ ಹಥ್ರಾಸ್ ಘಟನೆಗೆ ಪ್ರಧಾನಮಂತ್ರಿ ಏಕೆ ಪ್ರತಿಕ್ರಯಿಸಬೇಕು ಎಂದು ಕೇಳುವ ಸಂವೇದನೆಯಿಲ್ಲದ ಸಂಸದರೂ ನಮ್ಮ ನಡುವೆ ಇದ್ದಾರೆ.
ಶಿಕ್ಷಕರು ಸಾಯ್ತಾರೆ ಅಂತ ಶಾಲೆ ಮುಚ್ಚೋಕಾಗುತ್ಯೇ ಎಂದು ಕೇಳುವ ರಾಜ್ಯ ಸಚಿವರೂ ನಮ್ಮ ನಡುವೆ ಇದ್ದಾರೆ. ಸತ್ರೆ ಸಾಯ್ತಾರೆ ನಾವೇನ್ಮಾಡೋಕಾಗುತ್ತೆ ಎಂದ ಸಂಸದರೊಬ್ಬರು ಈಗಾಗಲೇ ಇಹಲೋಕ ತ್ಯಜಿಸಿದ್ದಾರೆ. ಈ ಅಸೂಕ್ಷ್ಮತೆಗಳ ನಡುವೆಯೇ ಒಂದು ಆಡಳಿತ ವ್ಯವಸ್ಥೆ ತನ್ನ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳುತ್ತಿದೆ. ಹಥ್ರಾಸ್ ಘಟನೆಯನ್ನು ಕುರಿತು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಿದರೆ ಈ ಅಸೂಕ್ಷ್ಮತೆ ಎಷ್ಟು ಆಳವಾಗಿ ಬೇರೂರಿದೆ ಎನ್ನುವುದನ್ನು ಗ್ರಹಿಸಬಹುದು.
ಈ ಜನ ನಾಯಕರಿಗೆ ಮನುಜ ಜೀವಗಳು ಲಿಂಗ ಭೇದಗಳ ನೆಲೆಯಲ್ಲಿ, ಜಾತಿ ಭೇದಗಳ ನೆಲೆಯಲ್ಲಿ ಮತ್ತು ಮತ ಭೇದಗಳ ನೆಲೆಯಲ್ಲಿ ಕಾಣುತ್ತವೆ. ರಾಜಧಾನಿ ದೆಹಲಿಯಿಂದ ಕೇವಲ 200 ಕಿಲೋಮೀಟರ್ ದೂರದಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಈ ದೇಶದ ಪ್ರಧಾನಮಂತ್ರಿಯ ಹೃದಯವನ್ನು ತಟ್ಟುವುದೇ ಇಲ್ಲ. ಗೃಹ ಸಚಿವರು ಕಾಣೆಯಾಗಿರುವುದರಿಂದ ಏನೂ ಹೇಳಲಾಗುವುದಿಲ್ಲ.
ಇರಲಿ, ಇದು ರಾಜಕೀಯ ವಿಕೃತಿಯ ಪರ್ವಕಾಲ. ಸಾವಿರಾರು ಅಮಾಯಕರ ಮಾರಣ ಹೋಮ ನಡೆದಾಗಲೂ ನಮ್ಮ ದೇಶ ಹೀಗೆಯೇ ಇದ್ದಿತಲ್ಲವೇ ? ವಿಕೃತ ರಾಜಕೀಯ ಪ್ರಜ್ಞೆ ಭಾರತದ ಪ್ರಜ್ಞಾವಂತ ಮನಸುಗಳನ್ನು ಎಷ್ಟು ಕೆಡಿಸಿದೆ ಎನ್ನುವುದು ನಮ್ಮ ಮುಂದಿನ ಗಹನವಾದ ವಿಚಾರ. ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯಗಳು ನಿತ್ಯ ಬದುಕಿನ ವಿದ್ಯಮಾನಗಳೇನೋ ಎನ್ನುವಂತೆ ವರ್ತಿಸುವ ಒಂದು ಬೃಹತ್ ಸಮುದಾಯದ ನಡುವೆ ನಾವು ಬದುಕುತ್ತಿದ್ದೇವೆ.
ಈ ಸಮುದಾಯ ಸುಶಿಕ್ಷಿತವಾಗಿದೆ, ಹಿತವಲಯದಲ್ಲಿದೆ ಮತ್ತು ಸುರಕ್ಷಿತವಾಗಿದೆ ಎಂದು ಹೇಳಬೇಕಿಲ್ಲ. ಒಂದು ಅತ್ಯಾಚಾರದ ಘಟನೆಗೆ ಇಡೀ ದೇಶವೇ ಭುಗಿಲೇಳುವುದಿಲ್ಲ ಆದರೆ ಸಾಮಾಜಿಕ ವಲಯದಲ್ಲಿ ಇಂತಹ ಘಟನೆಗಳು ಕೊಂಚವಾದರೂ ಪ್ರಕ್ಷುಬ್ಧತೆಯನ್ನು ಉಂಟುಮಾಡಬೇಕಲ್ಲವೇ ?
ಈ ನಿರ್ಲಜ್ಜತೆಯ ನಡುವೆಯೇ ಭಾರತದ ಮಹಿಳೆಯರು ತಮ್ಮ ಹೆಣ್ತನದ ರಕ್ಷಣೆಗಾಗಿ, ಸ್ವಾಭಿಮಾನದ ಸಂರಕ್ಷಣೆಗಾಗಿ, ಸಮಾನತೆ, ಘನತೆ ಮತ್ತು ಗೌರವಕ್ಕಾಗಿ ದಿನನಿತ್ಯ ಹೋರಾಡಬೇಕಿದೆ. ಅತ್ಯಾಚಾರ ನಡೆದ ಕೂಡಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎನ್ನುವ ದನಿಗಳು ಮುಗಿಲು ಮುಟ್ಟುತ್ತವೆ. ಆದರೆ ಗಲ್ಲಿಗೇರಿಸಲು ಕಾನೂನು ಪ್ರಕ್ರಿಯೆ ಶೀಘ್ರವಾಗಿ ನಡೆಯಬೇಕು. ನ್ಯಾಯವ್ಯವಸ್ಥೆಯಲ್ಲಿನ ಲೋಪಗಳು ಸರಿಹೋಗಬೇಕು.
ಪೊಲೀಸ್ ಇಲಾಖೆಯಲ್ಲಿ ಸುಧಾರಣೆಗಳು ಜಾರಿಯಾಗಬೇಕು. ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆಗಳು ಸ್ವಾಯತ್ತತೆ ಪಡೆಯಬೇಕು. ಸರ್ಕಾರಗಳೇ ನೇಮಿಸುವ ವಿಶೇಷ ತನಿಖಾ ದಳ (ಎಸ್ ಐ ಟಿ) ನಿಷ್ಪಕ್ಷಪಾತವಾಗಬೇಕು. ರಾಜಕೀಯ ಹಸ್ತಕ್ಷೇಪಕ್ಕೆ ಅಂತ್ಯ ಹಾಡಬೇಕು. ಈ ಎಲ್ಲ ಆಡಳಿತ ಸುಧಾರಣೆಗಳನ್ನು ತರಲು ನಮ್ಮ ಜನಪ್ರತಿನಿಧಿಗಳಿಗೆ ಮೂಲತಃ ಮಾನವೀಯ ಪ್ರಜ್ಞೆ ಮತ್ತು ಸಂವೇದನೆ ಇರಬೇಕು. ಇಲ್ಲವಲ್ಲಾ !
ದುರಂತ ಎಂದರೆ ಜನಪ್ರತಿನಿಧಿಗಳು ಹೊಲಸು ಮಾತುಗಳ ಸರದಾರರಾಗಿದ್ದಾರೆ. ಹಥ್ರಾಸ್ ಘಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರದ ವರ್ತನೆಯನ್ನು ಹೈಕೋರ್ಟ್ ಪ್ರಶ್ನಿಸಿರುವುದೇ ಅಲ್ಲದೆ ಕಟುವಾಗಿ ಟೀಕಿಸಿದೆ. ಆದರೆ ಭಾರತದ ನಾಗರಿಕ ಸಮಾಜದ ಪ್ರಜ್ಞೆ ಇದರಿಂದ ಕೊಂಚವೂ ವಿಚಲಿತವಾಗಿಲ್ಲ. ಪಕ್ಷ ರಾಜಕಾರಣ ಮತ್ತು ಇದರಿಂದ ಪ್ರಭಾವಿತವಾಗುವ ಅಸ್ಮಿತೆಯ ರಾಜಕಾರಣ ಭಾರತದ ಪ್ರಜ್ಞಾವಂತ ಸಮುದಾಯವನ್ನು ನಿಷ್ಕ್ರಿಯಗೊಳಿಸಿರುವುದನ್ನು ಕಳೆದ ಎರಡು ದಶಕಗಳಲ್ಲಿ ಕಂಡಿದ್ದೇವೆ.
1984ರ ಸಿಖ್ ಹತ್ಯಾಕಾಂಡ ಮತ್ತು 1980-90ರ ದಶಕದ ರಥಯಾತ್ರೆ ಮತ್ತು ಕೋಮು ಗಲಭೆಗಳಲ್ಲಿ ಮಡಿದ ಸಾವಿರಾರು ಜೀವಗಳಿಗೆ ನ್ಯಾಯ ಒದಗಿಸಲು ನಮ್ಮ ನ್ಯಾಯ ವ್ಯವಸ್ಥೆಗೆ ಸಾಧ್ಯವಾಗಿಲ್ಲ. 2002ರ ಗುಜರಾತ್ ಹತ್ಯಾಕಾಂಡದಲ್ಲಿ ಬಲಿಯಾದ ಜೀವಗಳನ್ನು ನಾವು ಮರೆತೇ ಹೋಗಿದ್ದೇವೆ. ಇದನ್ನು ಪ್ರಸ್ತಾಪಿಸಿದ ಕೂಡಲೇ ಕಾಶ್ಮೀರ ಮತ್ತು ಪಂಡಿತರ ಪ್ರಶ್ನೆ ಧುತ್ತೆಂದು ಎದುರಾಗುತ್ತದೆ. ಪಂಡಿತರಿಗೆ ಮಿಡಿಯುವ ಮನಸುಗಳು, ಕಾಶ್ಮೀರದಲ್ಲಿ ಒಂದೆಡೆ ಉಗ್ರಗಾಮಿಗಳ ಗುಂಡಿಗೆ ಮತ್ತೊಂದೆಡೆ ಸೇನೆಯ ಗುಂಡಿಗೆ ಬಲಿಯಾದ ಲಕ್ಷಾಂತರ ಅಮಾಯಕ ಕಾಶ್ಮೀರಿಗಳಿಗೆ ಮಿಡಿಯುವುದಿಲ್ಲ. ಅಲ್ಲಿ ಮತ್ತೆ ಅಸ್ಮಿತೆ ಮತ್ತು ರಾಜಕಾರಣ ಅಡ್ಡಿಯಾಗುತ್ತದೆ.
ಅಸಹಜ ಸಾವುಗಳಿಂದ ವಿಚಲಿತರಾಗದ ಮನಸ್ಥಿತಿಯನ್ನು ಭಾರತ ರೂಢಿಸಿಕೊಂಡು ವರುಷಗಳೇ ಕಳೆದಿವೆ. ಸತ್ತವರು ನಮ್ಮವರೋ ಅನ್ಯರೋ ಎಂದು ಶವಗಳನ್ನು ವಿಂಗಡಿಸುವ ಪರಂಪರೆಯನ್ನು ಈ ದೇಶದ ಸಾಂಸ್ಕೃತಿಕ ರಾಜಕಾರಣ ವ್ಯವಸ್ಥಿತವಾಗಿ ಬೆಳೆಸಿಕೊಂಡುಬಂದಿದೆ. ರಾಶಿರಾಶಿ ಶವಗಳಲ್ಲೂ ಹೆಕ್ಕಿ ತೆಗೆಯುವ ವಿಕೃತ ಪರಂಪರೆಯೂ ಇಲ್ಲಿ ನೆಲೆಯೂರಿದೆ.
ಈ ಪರಂಪರೆಗೆ ಜನಸಾಮಾನ್ಯರು ಬಲಿಯಾಗಿರುವುದೇ ಅಲ್ಲದೆ ಸಾಂವಿಧಾನಿಕ ಸಂಸ್ಥೆಗಳೂ ಬಲಿಯಾಗಿರುವುದನ್ನು ಇತ್ತೀಚಿನ ಬಾಬ್ರಿ ಮಸೀದಿ ಧ್ವಂಸದ ತೀರ್ಪಿನಲ್ಲಿ ಕಾಣಬಹುದು. ಇಡೀ ದೇಶವೇ ಗಮನಿಸಿದಂತೆ ಲಕ್ಷಾಂತರ ಯುವಕರನ್ನು ಪ್ರಚೋದಿಸಿ ಉರುಳಿಸಲಾದ 400 ವರ್ಷಗಳ ಒಂದು ಸ್ಥಾವರ ತಂತಾನೇ ಕುಸಿದಿದೆ, ಅದೊಂದು ಅಪಘಾತ ಎಂದು ಬಣ್ಣಿಸುವ ನ್ಯಾಯಾಂಗ, ಈ ಕುಸಿದ ಸ್ಥಾವರದ ಅವಶೇಷಗಳಡಿ ಸಿಲುಕಿರುವ ನೂರಾರು ಮೃತ ಜೀವಗಳಿಗೆ ನ್ಯಾಯ ಒದಗಿಸಲು ಸಾಧ್ಯವೇ ?
ಇಂತಹ ಒಂದು ವ್ಯವಸ್ಥೆಯಲ್ಲಿ ಶೋಷಿತ ಸಮುದಾಯದ ಹೆಣ್ಣು ಮಗಳಿಗೆ ನ್ಯಾಯ ದೊರೆಯುತ್ತದೆ ಎಂದು ನಿರೀಕ್ಷಿಸುವುದಾದರೂ ಹೇಗೆ ? ಅಪರಾಧಿಗಳ ರಕ್ಷಣೆಗಾಗಿ ಪ್ರತ್ಯಕ್ಷ ಸಾಕ್ಷಿಗಳನ್ನು ಎನ್ಕೌಂಟರ್ ಮೂಲಕ ಇಲ್ಲವಾಗಿಸುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಒಂದು ಷಡ್ಯಂತ್ರಕ್ಕೆ ಈಗ ವ್ಯವಸ್ಥಿತ ಚೌಕಟ್ಟನ್ನು ನಿರ್ಮಿಸಲಾಗಿರುವುದನ್ನೂ ಕಾಣುತ್ತಿದ್ದೇವೆ.
ಹಥ್ರಾಸ್ನಲ್ಲಿ ಅತ್ಯಾಚಾರಕ್ಕೊಳಗಾದ ಯುವತಿಯ ಮೃತ ದೇಹವನ್ನು ಪೊಲೀಸರೇ ಸುಟ್ಟುಹಾಕಿರುವುದು ಈ ವಿದ್ಯಮಾನದ ಒಂದು ಆಯಾಮವಷ್ಟೇ. ಇದೆರ ವಿರಾಟ್ ಸ್ವರೂಪವನ್ನು 2002ರ ಗುಜರಾತ್ ಹತ್ಯಾಕಾಂಡದ ನಂತರ ಕಂಡಿದ್ದೇವೆ. ಬೆಲ್ಚಿಯಿಂದ ಕಂಬಾಲಪಲ್ಲಿ, ಊನ ಘಟನೆಗಳವರೆಗೆ ಕಂಡಿದ್ದೇವೆ. ಸ್ವತಂತ್ರ ಭಾರತದಲ್ಲಿ ಸಂಭವಿಸಿದ ಸಾಮೂಹಿಕ ಹತ್ಯಾಕಾಂಡಗಳಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ ಎನ್ನುವುದನ್ನು ನೆಲ್ಲಿ ಹತ್ಯಾಕಾಂಡದಿಂದ ಗುಜರಾತ್ ಹತ್ಯಾಕಾಂಡದವರೆಗೂ ಕಂಡಿದ್ದೇವೆ. ಇಲ್ಲಿಯೂ ನಮ್ಮ ಪ್ರಜ್ಞೆ ಪಕ್ಷ ರಾಜಕಾರಣ ಮತ್ತು ಅಸ್ಮಿತೆಗಳ ಸರಳುಗಳಲ್ಲಿ ಬಂಧಿತವಾಗಿಬಿಡುತ್ತದೆ.
ಸಂಭವಿಸಿದ ಅಪರಾಧಗಳನ್ನು ಮುಖಾಮುಖಿಯಾಗಿಸುವ ಮೂಲಕ ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವ ವಿಕೃತ ಪರಂಪರೆಯನ್ನು ಪೋಷಿಸುತ್ತಲೇ ಬಂದಿರುವ ಭಾರತದ ನಾಗರಿಕ ಸಮಾಜ, ಇಂದಿಗೂ ಅಪರಾಧಿಗಳನ್ನು ಶಾಸನ ಸಭೆಗಳಲ್ಲಿ ಸಹಿಸಿಕೊಳ್ಳುತ್ತಲೇ ಬಂದಿದೆ.
ಭ್ರಷ್ಟಾಚಾರ ರಹಿತ ಭಾರತದಲ್ಲಿ ಅನೇಕಾನೇಕ ಭ್ರಷ್ಟರು ಅಧಿಕಾರ ಪೀಠದಲ್ಲಿ ವಿರಾಜಮಾನರಾಗಿದ್ದಾರೆ. ಮತ್ತದೇ ಪಕ್ಷ ರಾಜಕಾರಣ ಮತ್ತು ಅಸ್ಮಿತೆಯ ಗುಂಗು. ಐದು ವರ್ಷಕ್ಕೊಮ್ಮೆ ಮತ ಚಲಾಯಿಸುವಾಗ ಬೆರಳ ತುದಿಗೆ ಹಚ್ಚುವ ಶಾಯಿಯ ಗುರುತು ಸ್ವಲ್ಪ ದಿನಗಳ ನಂತರ ಅಳಿಸಿಹೋಗುತ್ತದೆ. ಆದರೆ ಇಂದು ನಮ್ಮ ಪ್ರಜಾತಂತ್ರ ದೇಶದಲ್ಲಿ ಅಧಿಕಾರ ಪೀಠಗಳಲ್ಲಿ ಕುಳಿತು ಆದರ್ಶ, ನೈತಿಕತೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯ ಮಾತುಗಳನ್ನಾಡುತ್ತಿರುವವರ ಕೈಗಳಿಗೆ ಮೆತ್ತಿರುವ ಅಮಾಯಕ ಜನರ ನೆತ್ತರ ಕಲೆ ಅಳಿಸಲು ಸಾಧ್ಯವೇ ಇಲ್ಲ.
ಆದರೆ ನಮಗೆ ಅದು ಗೆಲುವಿನ ಸಂಕೇತದಂತೆ ಕಾಣುತ್ತದೆ, ವಿಜಯೋತ್ಸವದ ಚಿಹ್ನೆಯಂತೆ ಕಾಣುತ್ತದೆ. ಇದು ನಮ್ಮ ದೇಶದ ದುರಂತ. ನಾವು ಪ್ರಜಾತಂತ್ರವನ್ನು ಬಯಸುತ್ತೇವೆ ಆದರೆ ಪ್ರಜಾಸತ್ತಾತ್ಮಕ ಮನಸ್ಥಿತಿಯನ್ನು ಅಸ್ಮಿತೆಗಳ ಭ್ರಮೆಗೆ ಸಿಲುಕಿ ಹೊಸಕಿ ಹಾಕುತ್ತಿದ್ದೇವೆ. ಮಾನವ ಹಕ್ಕುಗಳು ನಮಗೆ ಅಪಥ್ಯವಾಗುತ್ತದೆ, ಕೆಲವೊಮ್ಮೆ ಸಹಮಾನವರೇ ಅಪಥ್ಯವಾಗಿಬಿಡುತ್ತಾರೆ.
ಹಥ್ರಾಸ್ ಘಟನೆಯಲ್ಲಿ ಮೃತಪಟ್ಟ ಮನೀಷಾ ಈ ಅಪಥ್ಯರಾದವರ ಗುಂಪಿಗೆ ಸೇರುತ್ತಾಳೆ. ಆಕೆಯ ಮೇಲೆ ಅತ್ಯಾಚಾರ ಎಸಗಿದ ಠಾಕೂರರು ಕೆಲವು ವರ್ಷಗಳ ನಂತರ ಕೇಂದ್ರ ಸಚಿವರಾದರೂ ನಾವು ವಿಚಲಿತರಾಗುವುದಿಲ್ಲ. ಈ ಮನಸ್ಥಿತಿ ನಾಗರಿಕ ಸಮಾಜವನ್ನು ಆವರಿಸಿರುವುದರಿಂದಲೇ ನಿರ್ಭಯ ನಮಗೆ ನೆನಪಾಗಿಯೇ ಉಳಿಯಲಿದ್ದಾಳೆ. ಜಾತಿ, ಮತಧರ್ಮ ಮತ್ತು ಲಿಂಗಭೇದಗಳ ಚೌಕಟ್ಟಿನಲ್ಲಿ ಸಾವು ಸ್ವೀಕೃತವಾಗುತ್ತಿರುವಂತೆಯೇ ಮನುಷ್ಯನ ಪ್ರಜ್ಞೆಯೂ ಸಹ ವಿಕೃತಿಯ ಪರಾಕಾಷ್ಠೆ ತಲುಪುತ್ತಿದೆ. ಇದಕ್ಕೆ ಪರಿಹಾರವೇನು ? ಪ್ರತಿರೋಧಗಳ ನಡುವೆಯೇ ನಾವು ಶೋಧಿಸಬೇಕಿರುವುದು ಇದನ್ನೇ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
Fake Doctors in Karnataka: ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರು; ದಾಳಿ, ದಂಡ, ಕೇಸ್ಗಳ ನಡುವೆಯೂ ಮುಂದುವರಿದ ಜಾಲ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧ ಪ್ರಕರಣಗಳು ಚರ್ಚೆಯಲ್ಲಿರುವ ನಡುವೆಯೇ, ವೈದ್ಯಕೀಯ ಕ್ಷೇತ್ರದ ಮತ್ತೊಂದು ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಅನಧಿಕೃತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರ ಹಾವಳಿ ಮುಂದುವರಿದಿದ್ದು, ಕಳೆದ ಮೂರು ವರ್ಷಗಳಲ್ಲಿ ಆರೋಗ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರಿಗೆ ಸೇರಿದ ಅನಧಿಕೃತ ಕ್ಲಿನಿಕ್ಗಳನ್ನು ಮುಚ್ಚಿಸಲಾಗಿದ್ದು, ಹಲವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಕೋನಸಾಗರದಲ್ಲಿ ನಕಲಿ ವೈದ್ಯೆಯೊಬ್ಬರು ನೀಡಿದ ಚುಚ್ಚುಮದ್ದಿನ ಬಳಿಕ ರೈತರೊಬ್ಬರು ಮೃತಪಟ್ಟಿರುವ ಆರೋಪದ ಪ್ರಕರಣ ನಕಲಿ ವೈದ್ಯರ ಜಾಲದ ಅಪಾಯಕಾರಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅನಧಿಕೃತವಾಗಿ ಚಿಕಿತ್ಸೆ ನೀಡುವುದು ಮಾತ್ರವಲ್ಲದೆ, ಕೆಲವರು ಮನೆಯಲ್ಲೇ ಕ್ಲಿನಿಕ್ಗಳನ್ನು ನಡೆಸುತ್ತಿರುವುದು ಹಾಗೂ ಪ್ರಯೋಗಾಲಯಗಳನ್ನೂ ನಿರ್ವಹಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಹೈಲೈಟ್ಸ್: ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ತೀವ್ರ |
|
http://Visit : www.suddidina.com
582 ಪ್ರಕರಣ, 87 ಮಂದಿಗೆ ದಂಡ
ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಮೂರು ವರ್ಷಗಳ ಅವಧಿಯಲ್ಲಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರ ಕ್ಲಿನಿಕ್ಗಳನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 87 ನಕಲಿ ವೈದ್ಯರಿಗೆ ದಂಡ ವಿಧಿಸಲಾಗಿದ್ದು, 128 ಮಂದಿ ಇನ್ನೂ ದಂಡ ಪಾವತಿಸಿಲ್ಲ. ಇದೇ ಅವಧಿಯಲ್ಲಿ 29 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿವೆ.
ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ವ್ಯಾಪ್ತಿಯಲ್ಲಿಯೂ ನೋಂದಣಿ ಅಥವಾ ಅಗತ್ಯ ಪರವಾನಗಿ ಇಲ್ಲದೆ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ದಾಳಿ ನಡೆಸಲಾಗಿದೆ.
ಜಿಲ್ಲೆಗಳಲ್ಲಿ ಸಕ್ರಿಯವಾಗಿರುವ ಜಾಲ
ನಕಲಿ ವೈದ್ಯರನ್ನು ಪತ್ತೆಹಚ್ಚಲು ರಾಜ್ಯ ಸರಕಾರ 2017ರಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ವಿಶೇಷ ಪಡೆ ರಚಿಸಿತ್ತು. ಇದರಲ್ಲಿ ಪೊಲೀಸ್ ಇಲಾಖೆ, ಆಯುಷ್ ಅಧಿಕಾರಿಗಳು ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನಿರಂತರ ದಾಳಿಗಳ ನಡುವೆಯೂ ನಕಲಿ ವೈದ್ಯರ ಜಾಲ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ವಿಶೇಷವಾಗಿ ಸಣ್ಣಪುಟ್ಟ ಗಲ್ಲಿ, ಕೊಳೆಗೇರಿ ಪ್ರದೇಶಗಳಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಇಂತಹವರು ಕಾರ್ಯನಿರ್ವಹಿಸುತ್ತಿರುವ ಆರೋಪಗಳಿವೆ. ನಗರ ಪ್ರದೇಶಗಳಲ್ಲೂ ಇಂತಹ ಅನಧಿಕೃತ ಕ್ಲಿನಿಕ್ಗಳು ಪತ್ತೆಯಾಗುತ್ತಿವೆ.
ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಕರಣ
ಕಾರ್ಯಾಚರಣೆಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಕಲಿ ವೈದ್ಯರು ಪತ್ತೆಯಾಗುತ್ತಿದ್ದಾರೆ. ಕಲಬುರಗಿ, ರಾಯಚೂರು, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ಹಣದಲ್ಲಿ ಚಿಕಿತ್ಸೆ ಸಿಗುತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕರು ಅರ್ಹತೆ ಮತ್ತು ನೋಂದಣಿ ಪರಿಶೀಲಿಸದೆ ಇಂತಹವರನ್ನು ಸಂಪರ್ಕಿಸುವುದು ಸಮಸ್ಯೆಗೆ ಕಾರಣವಾಗುತ್ತಿದೆ.
ಕಾನೂನು ಉಲ್ಲಂಘಿಸಿದರೆ ಜೈಲು, ದಂಡ
ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಪತ್ತೆಯಾದರೆ ಕೆಪಿಎಂಇ ತಿದ್ದುಪಡಿ ಅಧಿನಿಯಮ 2017ರ ಸೆಕ್ಷನ್ 19ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನೋಂದಣಿ ಇಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆ ನಡೆಸಿದರೆ ಅದನ್ನು ಮುಚ್ಚಿಸುವ ಕ್ರಮ ಕೈಗೊಳ್ಳಲಾಗುತ್ತದೆ. ನಿಯಮಗಳನ್ನು ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ದಂಡ ಹಾಗೂ ನೋಂದಣಿ ರದ್ದತಿಯಂತಹ ಕ್ರಮಗಳಿಗೂ ಅವಕಾಶವಿದೆ.
ನಕಲಿ ವೈದ್ಯರ ವಿರುದ್ಧದ ಕಾನೂನು ಕ್ರಮದ ಜತೆಗೆ ಸಾರ್ವಜನಿಕರ ಜಾಗೃತಿಯೂ ಅತ್ಯಂತ ಮುಖ್ಯ. ವೈದ್ಯರನ್ನು ಸಂಪರ್ಕಿಸುವ ಮುನ್ನ ಅವರ ವೈದ್ಯಕೀಯ ನೋಂದಣಿ, ಅರ್ಹತೆ ಮತ್ತು ಕ್ಲಿನಿಕ್ನ ಕಾನೂನುಬದ್ಧ ನೋಂದಣಿ ಪರಿಶೀಲಿಸುವುದು ಜೀವ ರಕ್ಷಣೆಯ ಮೊದಲ ಹೆಜ್ಜೆಯಾಗಬಹುದು.
ಸಿಕ್ಕಿಬಿದ್ದ ನಕಲಿ ವೈದ್ಯರು ಅಂಕಿ-ಅಂಶ (2024-2026) |
|
“ನಕಲಿ ಔಷಧಿ ಜಾಲದಂತೆ ನಕಲಿ ವೈದ್ಯರಿಗೂ ಕಡಿವಾಣ ಹಾಕಲಾಗುವುದು. ಅಂಥವರ ಪತ್ತೆಗೆ ಯೋಜನೆ ರೂಪಿಸುತ್ತೇವೆ. ಸಿಕ್ಕಿಬಿದ್ದಲ್ಲಿ ವಿಳಂಬವಿಲ್ಲದೆ ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ. ಜನರು ಮಾಹಿತಿ ಕೊಟ್ಟರೂ ಕ್ರಮ ವಹಿಸುತ್ತೇವೆ.”
– ಯು.ಟಿ.ಖಾದರ್ ಆರೋಗ್ಯ ಸಚಿವ

-
ದಿನದ ಸುದ್ದಿ5 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ6 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ5 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ6 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ6 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


