ನೆಲದನಿ
ನುಡಿಯ ಒಡಲು -19 | ನಾಡು-ನುಡಿ: ಅಂಬೇಡ್ಕರ್ ಅವರ ಚಿಂತನೆಗಳ ಪ್ರಸ್ತುತತೆ
- ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರ ‘ಭಾಷಾವಾರು ರಾಜ್ಯಗಳ ಸಮಸ್ಯೆಗಳು’ ಎನ್ನುವ ಬರಹವು ಇಂದಿಗೂ ಹಲವು ನೆಲೆಗಳಿಂದ ಅತ್ಯಂತ ಕುತೂಹಲಕಾರಿ ಮತ್ತು ವಿಶಿಷ್ಟವಾಗಿದೆ. 1956ರ ರಾಜ್ಯಗಳ ಪುನರ್ರಚನೆಯ ಕಾಯ್ದೆಯನ್ನು ಕುರಿತು ವಿಮರ್ಶಿಸುತ್ತ, “ರಾಷ್ಟ್ರೀಯ ಐಕ್ಯತೆಯನ್ನು ಕಾಪಾಡಲು ಏಕಭಾಷಿಕ ರಾಜ್ಯಗಳಕ್ಕಿಂತ ಬಹುಭಾಷಿಕ ರಾಜ್ಯಗಳನ್ನು ಹೊಂದುವುದು ಹೆಚ್ಚು ಪ್ರಯೋಜನಕಾರಿ ಆಗುತ್ತದೆ” ಎಂದು ತಮ್ಮ ಅಭಿಪ್ರಾಯಗಳನ್ನು ಅಂಬೇಡ್ಕರ್ ಹೀಗೆ ದಾಖಲಿಸುತ್ತಾರೆ.
ಸಂಯುಕ್ತ ಭಾರತ ಎನ್ನುವ ಕಲ್ಪನೆಯೇ ಮರಣಗಂಟೆಯ ಸೂಚಕವಾಗಿದೆ ಎಂದು ಅವರು ಬಲವಾಗಿ ನಂಬಿದ್ದರು. ರಾಜ್ಯಗಳ ಮರುರಚನೆಯಲ್ಲಿ ಜನಸಂಖ್ಯೆಯ ಗಾತ್ರ ಮತ್ತು ಪ್ರಮಾಣವನ್ನು ರೂಪಿಸುವಲ್ಲಿ ಸಂವಿಧಾನ ಸೋಲುತ್ತದೆ ಎನ್ನುವ ಬೇಸರವನ್ನೂ ಇವರು ವ್ಯಕ್ತಪಡಿಸಿದ್ದರು. ಪ್ರಜೆಗಳ ಸಮಾನ ಪ್ರತಿನಿಧೀಕರಣವನ್ನು ಕಾಯ್ದುಕೊಳ್ಳುವುದು ಕೂಡ ಅತ್ಯಂತ ದುಸ್ತರವಾಗುತ್ತದೆ ಎಂಬ ನಿಲುವು ಇವರದಾಗಿತ್ತು.
ಅಂಬೇಡ್ಕರ್ ಅವರ ಅಭಿಪ್ರಾಯದಲ್ಲಿ, 1956ರ ರಾಜ್ಯಗಳ ಪುನರ್ರಚನೆಯ ಕಾಯಿದೆಯು ಉತ್ತರದ ರಾಜ್ಯಗಳನ್ನು ಬಲಪಡಿಸುವ ಹಾಗೂ ದಕ್ಷಿಣದ ರಾಜ್ಯಗಳನ್ನು ಬಾಲ್ಕನೈಸ್ ಮಾಡುವ ನಿಲುವುಗಳನ್ನು ಕಾಣುತ್ತಾರೆ. ಪರಿಣಾಮವಾಗಿ ದಕ್ಷಿಣದಲ್ಲಿ ಚಿಕ್ಕ ಚಿಕ್ಕ ರಾಜ್ಯಗಳು ತಲೆಯೆತ್ತಿದರೆ, ಮುಂಬೈ, ಪಂಜಾಬ್, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಂತಹ ದೊಡ್ಡ ಪ್ರದೇಶಗಳು ಹಾಗೇ ಅಸ್ತಿತ್ವದಲ್ಲಿ ಉಳಿಯುತ್ತವೆ.
ಆದರೆ, ಈ ಎಲ್ಲಾ ರಾಜ್ಯಗಳು ಕೂಡ ಈ ಹೊತ್ತಿಗೆ ಮರುವಿಂಗಡಣೆಯಾಗಿರುತ್ತವೆ ಎಂಬ ಭವಿಷ್ಯವನ್ನೂ ಇವರು ನುಡದಿದ್ದರು. ಅಂಬೇಡ್ಕರ್ ಅವರ ಪ್ರಮುಖ ಆದ್ಯತೆ ಏನಾಗಿತ್ತೆಂದರೆ, ಒಂದೇ ಭಾಷೆಯನ್ನು ಮಾತ್ನಾಡುವ ಜನರು ಅನೇಕ ರಾಜ್ಯಗಳಲ್ಲಿ ವರ್ಗೀಕರಿಸಿರಬಹುದಿತ್ತು. ಏಕೆಂದರೆ, ಪತ್ರಿಯೊಂದು ರಾಜ್ಯವು ಕೂಡ ಒಂದೊಂದು ಭಾಷೆಯನ್ನು ಮಾತ್ನಾಡುವ ಜನರ ಅಧಿಕಾರ ವ್ಯಾಪ್ತಿಯಲ್ಲಿರುತ್ತದೆ.
ಇನ್ನೂ ಮುಂದುವರೆದು ಇವರು ಹೇಳುವುದೇನೆಂದರೆ, ‘ಒಂದು ಭಾಷೆ ಒಂದು ರಾಜ್ಯ’ ಎಂಬ ಸೂತ್ರವಿರಕೂಡದು. ಬದಲಾಗಿ, ‘ಒಂದು ರಾಜ್ಯ ಒಂದು ಭಾಷೆ’ ಎಂಬ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ಈ ಸೂತ್ರದ ಜೊತೆಗೆ ಒಂದು ಭಾಷೆ ಒಂದು ರಾಜ್ಯ ಎಂಬ ಸೂತ್ರವನ್ನು ತಳಕುಹಾಕಿ ಗೊಂದಲವನ್ನುಂಟು ಮಾಡಬಾರದು. ಇಲ್ಲಿ ಅಂಬೇಡ್ಕರ್ ಅವರ ಒಟ್ಟು ತಾತ್ವಿಕತೆ ಏನನ್ನು ಪ್ರಸ್ತಾಪ ಮಾಡುತ್ತದೆ ಎನ್ನುವುದು ಮುಖ್ಯವಾಗುತ್ತದೆ.
ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರೂಪಿಸಿದವರು, ಸಾಮಾಜಿಕ ನ್ಯಾಯದ ಆದ್ಯಪ್ರವರ್ತಕ, ಪ್ರಜಾಪ್ರಭುತ್ವವು ಸಾಕಾರಗೊಳ್ಳಲು, ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಎಷ್ಟೊಂದು ಮುಖ್ಯ ಎಂಬುದನ್ನು ಚಿಂತಿಸಿದವರು. ಆದ್ದರಿಂದ ಇವರು ಪ್ರಸ್ತಾಪಿಸುತ್ತಿರುವ ‘ಒಂದು ರಾಜ್ಯ ಒಂದು ಭಾಷೆ’ ಎಂಬೀ ಸೂತ್ರದ ಹಿಂದಿನ ತಾತ್ವಿಕತೆಯು ಕೂಡ ಅತ್ಯಂತ ಪ್ರಜಾಸತ್ತಾತ್ಮಕವಾದ್ದು.
ಅಂದರೆ ಅಂಬೇಡ್ಕರ್ ಅವರು ಚಿಂತಿಸುತ್ತಿದ್ದ ಒಂದು ಬಹುಮುಖ್ಯ ವಿನ್ಯಾಸ ಯಾವುದೆಂದರೆ, ಎಲ್ಲ ಸಾಮಾಜಿಕ, ರಾಜಕೀಯ, ಆರ್ಥಿಕ, ಭಾಷಿಕ ಹಾಗೂ ಧಾರ್ಮಕ ವಿನ್ಯಾಸಗಳನ್ನೂ ಕೂಡ ಸಂವಿಧಾನದ ಪ್ರಜಾಸತ್ತಾತ್ಮಕ ನೀತಿಗಳನ್ನಾಗಿ ರೂಪಿಸುತ್ತಿದ್ದರು. ಹಾಗಾಗಿ ಇವರು ಪ್ರಸ್ತಾಪಿಸಿದ ಈ ಮೇಲಿನ ಸೂತ್ರವು ಇಂತಹದೇ ಒಂದು ವಿನ್ಯಾಸವಾಗಿದೆ. ಕೇವಲ ರಾಜಕೀಯ ಕಣ್ನೋಟದಿಂದ ಈ ಸೂತ್ರವನ್ನು ವಿಶ್ಲೇಷಣೆ ಮಾಡಿದರೆ ಇದರಲ್ಲಿ ಹಲವು ಬಗೆಯ ಕೊರತೆಗಳು ಕಾಣುತ್ತವೆ.
ಈ ರಾಜಕೀಯ ಕಣ್ನೋಟವೆನ್ನುವುದು ಕೇವಲ ರಾಜಕೀಯ ನಿಲುವುಗಳಿಂದ ಇಲ್ಲವೇ ನೀತಿಗಳಿಂದ ಕೂಡಿರುವ ಅಗತ್ಯವಿಲ್ಲ. ಇದು ಸಾಮಾಜಿಕ ಭಾಷಾಶಾಸ್ತ್ರೀಯ ಕಣ್ನೋಟವು ಆಗಿರಬಹುದು ಅಥವಾ ಯಾವುದೇ ಸಾಮಾಜಿಕ ಮೀಮಾಂಸೆಯ ನಿಲುವುಗಳಿಂದ ಪ್ರೇರಿತವಾದ ಕಣ್ನೋಟವು ಆಗಿರಬಹುದು. ಆದರೆ ಈ ಎಲ್ಲ ನಿಲುವುಗಳು ಬೈನರಿ ಇಲ್ಲವೇ ಡೈಕಾಟಮಿಗಳನ್ನು ಮುಂದಿಟ್ಟುಕೊಂಡು ವಿಶ್ಲೇಷಣೆ ಮಾಡುತ್ತವೆ. ಸಹಜವಾಗಿ, ಅಧಿಕಾರ ಸಂಬಂಧ ಇಲ್ಲವೇ ಯಜಮಾನಿಕೆ ವಿನ್ಯಾಸಗಳು ಇಲ್ಲಿ ಗೋಚರಿಸುತ್ತವೆ.
ಈ ವಿನ್ಯಾಸಗಳನ್ನೇ ಅಂಬೇಡ್ಕರ್ ಅವರ ‘ಒಂದು ರಾಜ್ಯ ಒಂದು ಭಾಷೆ’ಎಂಬೀ ಸೂತ್ರಕ್ಕೂ ಅನ್ವಯಿಸುವ ಅಪಾಯಗಳಿವೆ. ಇದು ಆಗಕೂಡದು ಎಂಬುದು ನನ್ನ ಬಯಕೆ. ಮತ್ತೊಂದು ಮಹತ್ವದ ಸಂಗತಿಯನ್ನು ಇಲ್ಲಿ ಉಲ್ಲೇಖಿಸಲೇ ಬೇಕು, ಅದೇನೆಂದರೆ ಅಂಬೇಡ್ಕರ್ ಅವರ ವಿಚಾರಗಳನ್ನು ಮತ್ತು ತಾತ್ವಿಕ ವಿನ್ಯಾಸಗಳನ್ನು ವಿಶ್ಲೇಷಿಸುವುದಕ್ಕೆ ನಾವು ಹೊಸ ನೋಟಕ್ರಮ ಹಾಗೂ ವಿಶ್ಲೇಷಣಾ ಪರಿಕರಗಳನ್ನು ಕಂಡುಕೊಳ್ಳುವ ಅಗತ್ಯವಿದೆ.
ಅಂಬೇಡ್ಕರ್ ಅವರು ಕೇವಲ ಸಾಮಾಜಿಕ, ಸಾಂಸ್ಕ್ರುತಿಕ, ರಾಜಕೀಯ ಹಾಗೂ ಧಾರ್ಮಿಕ ಸಂಗತಿಗಳಲ್ಲಿ ಹುದುಗಿರುವ ಏರುಪೇರುಗಳನ್ನು ಮಾತ್ರ ವಿಶ್ಲೇಷಿಸುವ ಪ್ರಯತ್ನವನ್ನು ಮಾಡಲಿಲ್ಲ. ಬದಲಾಗಿ ‘ಹೊಸ ಪ್ರಜಾಪ್ರಭುತ್ವ’ದ ವಿನ್ಯಾಸಗಳನ್ನು ನೆಲೆಗೊಳಿಸುವ ಚಿಂತನೆಗಳನ್ನು ರೂಪಿಸುತ್ತಿದ್ದರು. ಒಟ್ಟಿನಲ್ಲಿ ‘ವಿಚಾರ ಕ್ರಾಂತಿ ಮತ್ತು ಅರಿವಿನ ಪಲ್ಲಟ’ಗಳನ್ನು ಒಂದೇ ತಾತ್ವಿಕ ಚೌಕಟ್ಟಿನಲ್ಲಿ ರೂಪಿಸುವ ಇರಾದೆಯನ್ನು ಇವರು ಹೊಂದಿದ್ದರು.
ಭಾರತದ ಸಂವಿಧಾನದ ಪೀಠಿಕೆಯಲ್ಲಿ ಭಾರತವನ್ನು ‘ರಾಜ್ಯಗಳ ಒಕ್ಕೂಟ’ (ಸ್ಟೇಟ್ಸ್ ಆಫ್ ಯ್ಯೂನಿಯನ್ಸ್) ಎಂದು ಉಲ್ಲೇಖಿಸಲಾಗಿದೆ. ಅಂಬೇಡ್ಕರ್ ಅವರ ಸಾಮಾಜಿಕ ತತ್ವಶಾಸ್ತ್ರಕ್ಕೂ ಮತ್ತು ರಾಜ್ಯಗಳ ಒಕ್ಕೂಟದ ಕಲ್ಪನೆಯ ನಡುವೆ ಅತರ್ಸಂಬಂಧಗಳಿವೆ. ಭಾರತ ಎನ್ನುವುದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದರೆ, ಅದು ಖಂಡಿತವಾಗಿಯೂ ಸ್ವಾತಂತ್ರ್ಯ, ಸಮಾನತೆ ಮತ್ತು ಬಾಂಧವ್ಯ ಎಂಬ ಈ ಮೂರು ಪರಿಕಲ್ಪನೆಗಳನ್ನು ತನ್ನ ಗುರಿಗಳನ್ನಾಗಿ ರೂಪಿಸಿಕೊಳ್ಳಬೇಕು.
ಹಲವು ರಾಜ್ಯಗಳು ಒಂದು ಒಕ್ಕೂಟವಾಗಿ ನೆಲೆಗೊಳ್ಳಬೇಕೆಂದರೆ ಈ ಗುರಿಗಳು ಅವಶ್ಯವಾಗಿ ಬೇಕಾಗುತ್ತವೆ. ಅಂಬೇಡ್ಕರ್ ಅವರ ಚಿಂತನೆಗಳ ಆಶಯವಿರುವುದು ಭಾರತವನ್ನು ಕೇವಲ ಬಹುಭಾಷಿಕ, ಬಹುಸಾಂಸ್ಕ್ರುತಿಕ, ಬಹುಧರ್ಮೀಯ ಹಾಗೂ ಬಹುಜಾತಿಗಳಿಂದ ಕೂಡಿದ ರಾಷ್ಟ್ರವನ್ನಾಗಿ ನೋಡುವುದಾಗಿರಲಿಲ್ಲ.
ಬದಲಾಗಿ ಈ ಎಲ್ಲ ಭಿನ್ನ-ಅಸ್ಮಿತೆಗಳ ಅಚೆಗೂ ಭಾರತವು ಒಂದು ಒಕ್ಕೂಟವಾಗಿ ರೂಪುಗೊಳ್ಳಬೇಕು ಹಾಗೂ ಈ ಒಕ್ಕೂಟದೊಳಗೆ ನೆಲೆಗೊಳ್ಳುವ ಎಲ್ಲ ಸಮೂಹಗಳು ತಮ್ಮ ವೈಶಿಷ್ಟ್ಯತೆಗಳನ್ನು ಗುರುತಿಸಿಕೊಂಡರೂ, ಅವುಗಳು ಭೇದದ ಬೇರುಗಳಾಗದೇ, ಸಾಮಾಜಿಕ-ರಾಜಕೀಯ ಗಡಿಗಳನ್ನು ನಿರ್ಮಿಸದೇ, ಹೂದೋಟದ (ಫ್ಲಾವರ್ಸ್ ಪಾಟ್) ಸ್ವರೂಪದಲ್ಲಿ ನೆಲೆಗೊಳ್ಳಬೇಕು ಎಂಬುದು ಇವರ ಉದ್ದೇಶವಾಗಿತ್ತು.
ಯಾವತ್ತಿಗೂ ಭಾರತವನ್ನು ಒಂದು ಮೆಲ್ಟಿಂಗ್ ಪಾಟ್ನ್ನಾಗಿ ರೂಪಿಸುವ ಕನಸು ಕಂಡವರಲ್ಲ ಇವರು. ಆದರೆ, ಧಾರ್ಮಿಕ ಕುರುಡತನದಿಂದ ರಾಜ್ಯಭಾರವನ್ನು ಮಾಡುವರು ರಾಜ್ಯಗಳ ಒಕ್ಕೂಟವೆಂದರೆ, ಅದೊಂದು ಮೆಲ್ಟಿಂಗ್ ಪಾಟ್ನ ಸ್ವರೂಪದಲ್ಲಿ ದೇಶವನ್ನು ಕಟ್ಟುವುದು ಎಂದು ತಿಳಿದುಕೊಂಡಿದ್ದಾರೆ. ಈ ಎಲ್ಲ ಅಪಚಾರಗಳಿಂದ ವಿಮೋಚನೆಗೊಳಿಸಿ, ಒಂದು ಅಪ್ಪಟ ವೈಚಾರಿಕ, ಪ್ರಜಾಸತ್ತಾತ್ಮಕ ಹಾಗೂ ಸಾಮಾಜಿಕ ಐಕ್ಯತೆಯಿಂದ ಕೂಡಿಬಾಳುವ ಒಕ್ಕೂಟವನ್ನಾಗಿ ರೂಪಿಸುವ ಕನಸನ್ನು ಅಂಬೇಡ್ಕರ್ ಅವರು ಕಂಡಿದ್ದರು.
ದೇಶ, ರಾಷ್ಟ್ರ, ಒಕ್ಕೂಟ ಹಾಗೂ ರಾಜ್ಯ ಎಂಬಿತ್ಯಾದಿ ಕಲ್ಪನೆಗಳ ನಡುವಣ ಅತರ್ಸಂಬಂಧ ಹಾಗೂ ತಾತ್ವಿಕತೆಯನ್ನು ಅರಿಯದೇ ಹೋದದ್ದರಿಂದ, ಇವತ್ತು ಹಲವು ಬಗೆಯ ಸವಾಲುಗಳನ್ನು ಎದುರಿಸುವ ಇಕ್ಕಟ್ಟಿಗೆ ನಾವು ಸಿಲುಕಿದ್ದೇವೆ. ಪರಿಣಾಮವಾಗಿ ಭಾರತ (ಇಂಡಿಯಾ) ಹಾಗೂ ಭಾರತೀಯ (ಇಂಡಿಯನ್) ಎಂಬೀ ನಾಮಪದ ಮತ್ತು ನಾಮವಿಶೇಷಣಗಳ ನಡುವಣ ನಂಟು ಕಳಿಚಿಹೋಗಿ, ಇವುಗಳು ಪರಸ್ಪರ ವಿರೋಧಿಗಳಾಗಿ ವರ್ತಿಸುತ್ತವೆ. ಅಂದರೆ, ಭಾರತ ಒಂದು ರಚನಾತ್ಮಕ ನೆಲೆಯಾದರೆ, ಭಾರತೀಯ ಎಂಬುದು ಈ ರಚನೆಯನ್ನು ವಿವರಿಸುವ ಬಗೆಯಾಗಿದೆ.
ಆದರೆ ಇವತ್ತು ಭಾರತದ ರಚನೆಯೊಳಗೆ ಇರುವವನು/ಳು ಭಾರತೀಯನಾಗಿಯೇ ಕಾಣುವುದಿಲ್ಲ. ಏಕೆಂದರೆ, ಭಾರತದ ಪ್ರತಿಯೊಬ್ಬ ಪ್ರಜೆಯೂ ಕೂಡ ಹಿಂದೂ ಧರ್ಮದ ವಕ್ತಾರರು ಮಂಡಿಸುವ ಎಲ್ಲ ಬಗೆಯ ನಿಲುವುಗಳನ್ನು ಒಪ್ಪಿದರೇ ಮಾತ್ರ ಅವನು/ಳು ಭಾರತೀಯನಾಗಿ ಒಪ್ಪಿಗೆಯನ್ನು ಪಡೆಯುತ್ತಾರೆ. ಯಾವುದೇ ಒಂದು ದೇಶದ ರಚನೆ ಅದು ಕೇವಲ ಯಾವುದೇ ಒಂದು ಧರ್ಮದ ವಿನ್ಯಾಸಕ್ಕೆ ಮಾತ್ರ ಸೀಮಿತಗೊಂಡರೆ, ಇಂತಹ ಅಪಾಯಗಳು ಎದುರಾಗುತ್ತವೆ.
ಇಂತಹ ಅಪಾಯಗಳನ್ನು ಗ್ರಹಿಸಿದ ಅಂಬೇಡ್ಕರ್ ಅವರು, ಯಾವುದೇ ಒಂದು ಭಾಷೆಯನ್ನು ಮಾತ್ನಾಡುವ ಜನರು ಒಂದು ನಿರ್ದಿಷ್ಟ ರಾಜ್ಯದೊಳಗೆ ನೆಲೆಗೊಂಡರೆ, ಅದು ಜಾತಿ, ಧರ್ಮದ ಕೋಮು ಸ್ವರೂಪವನ್ನು ಪಡೆದುಕೊಳ್ಳುತ್ತದೆ ಹಾಗೂ ಒಕ್ಕೂಟದ ತಾತ್ವಿಕತೆಗೆ ಎದುರಾಗಿ, ತಮ್ಮದೇ ಆಶೋತ್ತರಗಳನ್ನು ರೂಪಿಸಿಕೊಳ್ಳುತ್ತರೆ. ಪರಿಣಾಮವಾಗಿ ಸಾಮಾಜಿಕ, ರಾಜಕೀಯ ಹಾಗೂ ಭಾಷಿಕ ಅಂತರಗಳು ಮತ್ತಷ್ಟು ಬಿಗಡಾಯಿಸುವುದಕ್ಕೆ ಪೂರಕವಾಗಿ ವರ್ತಿಸುತ್ತಾರೆ ಎಂಬುದನ್ನು ಮನಗಂಡಿದ್ದರು. ಅದಕ್ಕಾಗಿಯೇ ರಾಜ್ಯಗಳ ಒಕ್ಕೂಟ ಮತ್ತು ಒಂದು ರಾಜ್ಯ ಒಂದು ಭಾಷೆ ಎಂಬ ಸೂತ್ರವನ್ನು ಅವರು ಪ್ರಸ್ತಾಪ ಮಾಡಿದ್ದು.
ಈ ಮೇಲಿನ ಚರ್ಚೆಗಳು ಸೂಕ್ಷ್ಮವಾಗಿ ಪ್ರಸ್ತಾಪಿಸುವ ಎಲ್ಲ ಬಗೆಯ ಅಪಾಯಗಳನ್ನು ನಾವು ಇವತ್ತು ಭಾರತದಲ್ಲಿ ನೋಡುತ್ತಿದ್ದೇವೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ಹಲವು ದಶಕಗಳ ನಂತರವೂ ಕೂಡ ನಮ್ಮ ಭಾರತ ರಾಜ್ಯಗಳ ಒಕ್ಕೂಟದಂತೆ ಕೆಲಸವನ್ನು ಮಾಡದೇ, ಹಲವು ರಾಜ್ಯಗಳು ಹಲವು ಕಾರಣಗಳಿಗಾಗಿ ಶತ್ರು ಪಾಳ್ಯಗಳಂತೆ ವರ್ತಿಸುತ್ತವೆ. ಈ ಎಲ್ಲ ಶತ್ರುಗಳನ್ನು ಗಾಳಗಳನ್ನಾಗಿ ಬಳಸುವ ಕುತಂತ್ರದಂತೆ, ಕೇಂದ್ರ ಸರಕಾರ ಕೆಲಸವನ್ನು ನಿರ್ವಹಿಸುತ್ತಿದೆ.
ಗಡಿ, ನೀರು, ನೈಸರ್ಗಿಕ ಸಂಪತ್ತು, ಭಾಷೆ ಮೊದಲಾದ ಹಲವು ನೆಪಗಳನ್ನು ಮುಂದಿಟ್ಟುಕೊಂಡು ರಾಜ್ಯ ರಾಜ್ಯಗಳ ನಡುವೆ ಜಗಳಗಳು ಏರ್ಪಡುತ್ತವೆ. ಇಂತಹ ಜಗಳಗಳನ್ನು ರಾಜಕೀಯ ಲಾಭಕ್ಕಾಗಿಯೇ ಕೇಂದ್ರ ಸರಕಾರ ತನ್ನ ಪಕ್ಷಪಾತಿ ಗುಣವನ್ನು ನಿರಂತರವಾಗಿ ಪ್ರದರ್ಶಿಸುತ್ತ ಬಂದಿದೆ. ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯದಂತಹ ಮೌಲ್ಯಗಳು ಇವತ್ತು ಕೇವಲ ಘೋಷಣೆಗಳಾಗಿ ಮಾತ್ರ ಅಸ್ತಿತ್ವದಲ್ಲಿವೆ.
ಈ ಎಲ್ಲ ಚರ್ಚೆಗಳು ನಮಗೆ ಖಾತ್ರಿಪಡಿಸುವುದೇನೆಂದರೆ, ರಾಜ್ಯಗಳ ಪುನರ್ರಚನೆಯ ಆಸಕ್ತಿಗಳು ಬಹುತೇಕವಾಗಿ ರಾಜಕೀಯ ಪ್ರೇರಿತವಾಗಿವೆ. ಹಾಗಾಗಿಯೇ, ಇವುಗಳನ್ನು ವಿರೋಧಿಸುವ ಚರ್ಚೆಗಳು ಎಷ್ಟೇ ತೀವ್ರವಾಗಿ ಮುಂಚೂಣೆಗೆ ಬಂದರೂ ಅವುಗಳನ್ನು ಮೌನಗೊಳಿಸುವ ಹುನ್ನಾರವನ್ನು ಮಾಡಲಾಯಿತು. ಸಾಮಾನ್ಯವಾಗಿ, ಪ್ರಿನ್ಸ್ಲಿ ಸ್ಟೇಟ್ಗಳನ್ನು ಏಕತ್ರಗೊಳಿಸುವ ಹಾಗೂ ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಿಗೆ ‘ವಿಶೇಷ ಸ್ಥಾನ’ವನ್ನು ಕಲ್ಪಿಸುವುದಕ್ಕೆ ವಿಶೇಷ ಗಮನವನ್ನು ನೀಡಲಾಯಿತು ಎಂದೂ ರಾಜ್ಯಗಳ ಪುನರ್ರಚನೆಯ ಹಿಂದಿನ ಉದ್ದೇಶಗಳನ್ನು ವ್ಯಾಖ್ಯಾನಿಸಲಾಗುತ್ತದೆ.
ಇರಲಿ, 2000ನೇ ಇಸ್ವಿಯಲ್ಲಿ ಛತ್ತೀಸ್ಘಡ್, ಜಾರ್ಖಂಡ್ ಹಾಗೂ ಉತ್ತರಾಂಚಲ್ ಹಾಗೂ ಈಚೆಗೆ ತೆಲಾಂಗಣ ಎಂಬೆಲ್ಲ ರಾಜ್ಯಗಳನ್ನು ಪುನರ್ರಚಿಸಲಾಯಿತು. ಈ ಎಲ್ಲ ರಾಜ್ಯಗಳನ್ನು ಭಾಷೆಯೇತರ ನೆಲೆಯಲ್ಲಿ ವ್ಯಾಖ್ಯಾನ ಮಾಡಲಾಗಿದೆ. ಇಲ್ಲಿ ಅತ್ಯಂತ ಸ್ಪಷ್ಟವಾಗಿರುವ ಅಂಶ ಏನೆಂದರೆ, ರಾಜ್ಯಗಳ ರಚನೆಯ ರಾಜಕಾರಣಕ್ಕೆ ಒತ್ತಾಸೆಯಾಗಿ ಈ ಎಲ್ಲ ಹೊಸ ರಾಜ್ಯಗಳು ಮೈದೆರದವು. ಆದರೆ ಉತ್ತಮ ಆಡಳಿತವನ್ನು ನೀಡುವ ಕಾರಣವನ್ನು ಮುಂದಿಟ್ಟುಕೊಂಡು ಏನೇ ವಾದವನ್ನು ಮಾಡಿದರೂ, ಇದರ ಹಿಂದಿನ ರಾಜಕೀಯ ನಿಲುವುಗಳು ಮಾತ್ರ ಕಣ್ಣಿಗೆ ರಾಚುತ್ತವೆ.
ಜೊತೆಗೆ ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರ ನಡುವಣ ನಂಟಸ್ತಿಕೆ, ಕೇಂದ್ರ-ರಾಜ್ಯಗಳ ಸಂಬಂಧ ಹಾಗೂ ಸಾಮಾಜಿಕ ಅಸ್ಮಿತೆಯ ಪ್ರಶ್ನೆಗಳು ನಿರಂತರವಾಗಿ ರಾಜಕೀಯ ಸಂಕಥನದ ಭಾಗಗಳಾಗಿಯೇ ಚರ್ಚೆಗೆ ಒಳಪಡುತ್ತವೆ. ಹೊರತು ಸಮೂಹಗಳ ಏಳ್ಗೆಯ ಪ್ರಶ್ನೆಗಳನ್ನಾಗಿ ಅವುಗಳನ್ನು ಚರ್ಚಿಸುವುದಿಲ್ಲ. ವಿಭಜನೆಯ ನಂತರದ ಭಾರತದಲ್ಲಿ, ರಾಷ್ಟ್ರೀಯ ಐಕ್ಯತೆಯ ಪ್ರಶ್ನೆಗಳು ಒಂದುಕಡೆ ಹಾಗೂ ಸಾಂಸ್ಕ್ರುತಿಕ ಭಿನ್ನತೆಗಳನ್ನು ಗುರುತಿಸುವ ತುಡಿತಗಳು ಮತ್ತೊಂದು ಕಡೆ ತೀವ್ರವಾಗಿ ನಮ್ಮನ್ನು ಕಾಡುತ್ತಿದ್ದರು, ನಾವು ಅವುಗಳನ್ನು ಭಾರತೀಯ-ರಾಷ್ಟ್ರೀಯ ಚೌಕಟ್ಟಿಗೆ ಸೀಮಿತಗೊಳಿಸಿ ನೋಡುವ ಪ್ರಯತ್ನವನ್ನೇ ಮಾಡುತ್ತ ಬಂದಿದ್ದೇವೆ. ರಾಜ್ಯಗಳ ಸ್ವಾಯತ್ತತೆಯ ಪ್ರಶ್ನೆಗಳನ್ನೂ ಕೂಡ ಇದೇ ಚೌಕಟ್ಟಿಗೆ ಒಳಪಡಿಸಿದ್ದು ಮಾತ್ರ ವಿಪರ್ಯಾಸ. ಜನಾಂಗ-ಪ್ರಾದೇಶಿಕ ಅಸ್ಮಿತೆ ಹಾಗೂ ಉತ್ತಮ ಆಡಳಿತದ ನಡುವಣ ಸಂಬಂಧಗಳನ್ನು ಕುರಿತು ಮಾತ್ರ ಚಿಂತಿಸುವ ಕಡೆಗೆ ಇವತ್ತಿನ ಬೆಳವಣಿಗೆಗಳು ನಮ್ಮನ್ನು ಒತ್ತಾಯಿಸುತ್ತವೆ.
ಭಾಷಾವಾರು ಪ್ರಾಂತಗಳ ಪುನರ್ರಚನೆಯನ್ನು ಕುರಿತ ಅಂಬೇಡ್ಕರ್ ಅವರ ವಿಶ್ಲೇಷಣೆಗಳಿಗೆ ಚಾರಿತ್ರಿಕ ಸನ್ನಿವೇಶವಿದೆ. ಈ ಚಾರಿತ್ರಿಕ ಸನ್ನಿವೇಶದಿಂದ ಹೊರಗಿಟ್ಟು ನೋಡಿದರೂ ಇವತ್ತಿಗೂ ಈ ವಿಶ್ಲೇಷಣೆಗಳು ನಮ್ಮ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳನ್ನು ಅರಿಯಲು ಒತ್ತಾಸೆಯಾಗುತ್ತವೆ. ರಾಜ್ಯಾಡಳಿತವನ್ನು ಪ್ರಾದೇಶೀಕರಣಗೊಳಿಸುವ ಇರಾದೆಯಿಂದ ರಾಜ್ಯಗಳ ಪುನರ್ರಚನೆಯನ್ನು ಕೈಗೊಳ್ಳಲಾಗಿದೆ. ಪ್ರಾದೇಶಿಕ ಅಸ್ಮಿತೆಯನ್ನು ಹೊಂದುವ ತುಡಿತಕ್ಕೆ ಮುಖ್ಯವಾಗಿ ಈ ಮೂರು ಕಾರಣಗಳನ್ನು ಇಲ್ಲಿ ಗುರುತಿಸಬಹುದು.
ಮತದಾರರ ಪ್ರಾತಿನಿದ್ಯದಲ್ಲಿ ಬದಲಾವಣೆಯನ್ನು ತರುವ ಮೂಲಕ ಈಗಾಗಲೇ ರಾಜಕೀಯವಾಗಿ ನಿಶ್ಕ್ರಿಯಗೊಂಡಿದ್ದ ಇಲ್ಲವೇ ಆಯಾ ಪ್ರದೇಶದ ಜನರಲ್ಲಿ ಸುಪ್ತವಾಗಿದ್ದ ಪ್ರಾದೇಶಿಕತೆಯ ಹಪಾಹಪಿತನವನ್ನು ಪುನರುಜ್ಜೀವನಗೊಳಿಸುವುದಾಗಿತ್ತು. ಜಾತಿ, ಜನಾಂಗ, ಭಾಷೆಗಳನ್ನೇ ನೆಲೆಯಾಗಿಸಿಕೊಂಡ ರಾಜಕೀಯ ಪ್ರೇರಿತ ಅಭಿವ್ಯಕ್ತಿಯನ್ನು ಸಜ್ಜುಗೊಳಿಸುವ ಮೂಲಕ ಹೊಸದಾಗಿ ಮೈಪಡೆದ ರಾಜ್ಯಗಳು, ಸಾಮಾಜಿಕ ಒಡಕುಗಳಿಗೆ ನಾಂದಿ ಹಾಡಿದವು. ಪ್ರಾದೇಶಿಕ ಇಲ್ಲವೇ ರಾಷ್ಟ್ರೀಯ ಪಕ್ಷಗಳೆಂಬ ಯಾವುದೇ ಭೇದಗಳನ್ನು ಹೊಂದದೆ ಪ್ರಾದೇಶಿಕ ಕೇಂದ್ರಿತವಾದ ಚುನಾವಣೆಯ ಪ್ರಚಾರ ಮತ್ತು ನೀತಿಗಳನ್ನು ಹುಟ್ಟು ಹಾಕಲಾಗುತ್ತದೆ.
ಆದಾಯ ಮತ್ತು ಬಳಕೆಯ ವಿನ್ಯಾಸದಲ್ಲಿ ಪ್ರಾದೇಶಿಕ ಅಸಮಾನತೆಯ ಪ್ರಮಾಣವು ದಿನದಿಂದ ದಿನಕ್ಕೆ ತಲೆದೊರುತ್ತಿದೆ. ಪರಿಣಾಮವಾಗಿ ಸುಧಾರಣೋತ್ತರ ಕಾಲದಲ್ಲಿ ನಿರ್ಲಕ್ಷ್ಯ ಮತ್ತು ತಾರತಮ್ಯ ಧೋರಣೆಗಳು ಉಲ್ಬಣಿಸುತ್ತಿವೆ ಎಂಬ ಗ್ರಹಿಕೆಗೆ ಇದು ಇಂಬು ನೀಡುತ್ತಿದೆ. ಕರಾವಳಿ ಮತ್ತು ಇತರೆ ಅಭಿವ್ರುದ್ಧಿ ಹೊಂದಿದ ಪ್ರದೇಶಗಳು ನಿಸ್ಸಂಶಯವಾಗಿ, ನಿರಂತರವಾಗಿ ಸಮಗ್ರ ಬೆಳವಣಿಗೆಯನ್ನು ಹೊಂದುತ್ತಿವೆ. ಹಾಗೂ ಇಂತಹ ಅವಕಶಾಗಳಿಂದ ವಂಚಿತವಾಗಿರುವ ಇನ್ನಿತರೆ ಪ್ರಾದೇಶಿಕ ಹೊರ ವಲಯಗಳಿಗೆ ಹೋಲಿಸಿದರೆ ಖಾಸಗಿ ಬಂಡವಾಳದ ಅಪಾರ ಹೂಡುವಿಕೆಯಿಂದಲೂ ಅಭಿವ್ರುದ್ಧಿ ಹೊಂದಿದ ಈ ಪ್ರದೇಶಗಳೇ ಮತ್ತೆ ಮತ್ತೆ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಿವೆ.
ಆದರೆ ಈ ಪ್ರಾದೇಶಿಕ ಅಭಿವ್ರುದ್ಧಿಯಿಂದ ಹೊರಗುಳಿದ ಪ್ರಾದೇಶಿಕ ವಲಯಗಳು ಕಾನೂನು ಮತ್ತು ಸುವ್ಯವಸ್ಥೆಯಿಂದಲೂ ಬಾಧಿಸಲ್ಪಟ್ಟಿವೆ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಮೂಲಭೂತ ಸೌಕರ್ಯಗಳ ಕೊರತೆಯಿಂದಲೂ ಬಳಲುತ್ತಿವೆ.
ಸಂವಿಧಾನ ರಾಜ್ಯಗಳೊಳಗೆಯೇ ಸಂಪತ್ಭರಿತ ಪ್ರದೇಶಗಳು ಇದ್ದು, ಅಗಾಧ ಪ್ರಮಾಣದಲ್ಲಿ ಖಾಸಗಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದು ಮತ್ತು ಪರಿಣಾಮಕಾರಿ ಬೆಳವಣಿಗೆಯನ್ನು ಹೊಂದುತ್ತಿದ್ದಾಗಲೂ, ಈ ಪ್ರದೇಶಗಳ ಮೇಲೆ ನಿರಂತರವಾಗಿ ಅವಲಂಭಿತವಾಗಿದ್ದ ಇತರೆ ಹಿಂದೂಳಿದ ಪ್ರದೇಶಗಳಿಗೆ ಯಾವುದೇ ಬಗೆಯ ಆದಾಯವನ್ನು ವರ್ಗಾಯಿಸುವುದನ್ನು ಈ ಸಂಪತ್ಭರಿತ ಪ್ರದೇಶಗಳು ನಿರಾಕರಿಸುತ್ತವೆ.
ಈ ಧೋರಣೆಗಳನ್ನು ವ್ಯಂಗವಾಗಿ ‘ಶ್ರೀಮಂತಿಕೆಯನ್ನು ಹಿಂಪಡೆಯುವ’ ಬಗೆಯನ್ನಾಗಿ ಇಲ್ಲಿ ನೋಡುತ್ತೇವೆ. ಇಲ್ಲಿಯ ಸ್ಥಳೀಯ ಮೇಲ್ವರ್ಗಗಳ ಆರೋಪ ಏನೆಂದರೆ, ರಾಜಕೀಯವಾಗಿ ಪ್ರಾಬಲ್ಯವನ್ನು ಹೊಂದಿರುವ ಇತರೆ ಪ್ರದೇಶದ ಮೇಲ್ವರ್ಗಗಳು ಆರ್ಥಿಕವಾಗಿ, ಆಡಳಿತಾತ್ಮಕವಾಗಿ ತಾರತಮ್ಯ ಧೋರಣೆಗಳನ್ನು ಹೊಂದುತ್ತವೆ ಎಂಬುದಾಗಿದೆ.
ಈ ಮೇಲಿನ ಪ್ರಕ್ರಿಯೆಯ ಪರಿಣಾಮವಾಗಿ ಭಾರತದ ಫೆಡರಲ್ ತಾತ್ವಿಕತೆಯಲ್ಲಿ ಗಮನಾರ್ಹವಾದ ಪಲ್ಲಟಗಳು ಏರ್ಪಟ್ಟಿರುತ್ತವೆ. ಈ ಪಲ್ಲಟಗಳು ಹಲವು ಸ್ವರೂಪದಲ್ಲಿ ಪ್ರತಿಫಲಿಸಿರುವುದನ್ನು ಈ ಮುಂದಿನ ಬೆಳವಣಿಗೆಗಳ ಮೂಲಕ ನೋಡುತ್ತೇವೆ. ಅಂದರೆ;
ಪ್ರಾದೇಶಿಕ ಅಸ್ಮಿತೆ, ಸಂಸ್ಕ್ರುತಿ ಹಾಗೂ ಭೌಗೋಳಿಕ ಭಿನ್ನತೆಗಳು, ರಾಜಕೀಯ ಪ್ರಾತಿನಿಧ್ಯ ಹಾಗೂ ಆಡಳಿತಾತ್ಮಕ ವಲಯಗಳನ್ನಾಗಿ ರೂಪಿಸುವುದಕ್ಕೆ ಇವುಗಳು ಮಹತ್ವದ ಮಾನದಂಡಗಳಾಗಿರುತ್ತವೆ.
ಪ್ರತ್ಯೇಕ ರಾಜ್ಯಗಳ ಕೋರಿ ನಡೆಸುವ ಚಳವಳಿಗಳು ಇವತ್ತು ಯಾವುದೇ ಬಗೆಯ ಭಾಷಾ ದುರಾಭಿಮಾನ ಇಲ್ಲವೇ ಪ್ರಾಂತೀಯ ಕಳಂಕಗಳನ್ನಾಗಿ ನೋಡುವ ಕಾಲವಲ್ಲವಿದು. ದಿಟ, ಹಿಂದೊಂದು ಕಾಲದಲ್ಲಿ ಇದನ್ನು ರಾಷ್ಟ್ರ ವಿರೋಧಿ ನಿಲುವನ್ನಾಗಿ ನೋಡುವ ಕ್ರಮವೊಂದಿತ್ತು.
ಇವತ್ತು ಹೊಸ ರಾಜ್ಯಗಳ ಪ್ರಸ್ತಾಪವು ಭಾಷಾ ತತ್ವಗಳ ಆಧಾರದ ಮೇಲೆ ಆಗುತ್ತಿಲ್ಲ. ಬದಲಾಗಿ ಅಭಿವ್ರುದ್ಧಿ ಮತ್ತು ಉತ್ತಮ ಆಡಳಿತವನ್ನು ಕೊಡುವ ನೆಪದಲ್ಲಿ ಮುಂಚೂಣೆಗೆ ಬರುತ್ತಿವೆ. ಅದರೆ ಮೊದಲ ಹಂತದ ರಾಜ್ಯಗಳ ಪುನರ್ರಚನೆಯು ಭಾಷೆಗಳನ್ನೇ ಆಧಾರವಾಗಿಟ್ಟುಕೊಂಡು ನಡೆದಿತ್ತು ಎಂಬುದು ಗಮನಾರ್ಹ.
ಆದರೆ ವೈರುಧ್ಯವೇನಂದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಬಿಹಾರ ಪ್ರದೇಶಗಳಲ್ಲಿ ನೆಲೆಗೊಂಡಿದ್ದ ಬೇರೆ ಬೇರೆ ಒಳನುಡಿಗಳು ತಮ್ಮದೆಯಾದ ತಾಯ್ನೆಲವನ್ನು ಹೊಂದುವ ಇರಾದೆಯನ್ನೂ ತಾಳಿದ್ದವು. ಬುಂದೆಲ್ಖಂಡ, ರುಹೆಲ್ಖಂಡ ಹಾಗೂ ಮಿಥಿಲಾಂಚಲ್ ಪ್ರದೇಶಗಳು ತಮ್ಮ ಒಳನುಡಿಗಳಲ್ಲಿ ಹುದುಗಿರುವ ಸಂಸ್ಕ್ರುತಿ ಹಾಗೂ ಸಾಹಿತ್ಯದ ವೈಶಿಷ್ಟ್ಯ ಮತ್ತು ಶ್ರೀಮಂತಿಕೆಯನ್ನು ಕಂಡರಿಸುವ ಹಂಬಲವೂ ಇಂತಹ ಇರಾದೆಗಳಲ್ಲಿ ಅಡಕವಾಗಿದ್ದವು. ಕಳೆದ ದಶಕದಲ್ಲಿ ಅಂದರೆ ನವೆಂಬರ್ 2000ನೇ ಇಸ್ವಿಯಲ್ಲಿ ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಂದ ಛತ್ತೀಸ್ಘಡ್, ಉತ್ತರಾಂಚಲ್ ಹಾಗೂ ಜಾರ್ಖಂಡ್ ಎಂಬ ಹೊಸ ರಾಜ್ಯಗಳು ಅಸ್ತಿತ್ವಕ್ಕೆ ಬಂದವು.
ಈ ಮೂರು ರಾಜ್ಯಗಳು ಮೈದಾಳಲು ಕಾರಣ, ಫೆಡರಲ್ ಚಿಂತನೆಯಲ್ಲಿ ಏರ್ಪಟ್ಟ ಸಾಂಸ್ಕ್ರುತಿಕ-ರಾಜಕೀಯ ಪಲ್ಲಟಗಳೇ ಎಂದು ಹೇಳಬೇಕು. ಈ ಹೊಸ ರಾಜ್ಯಗಳ ಪುನರ್ರಚನೆಗೆ ಎಲ್ಲ ರಾಜಕೀಯ ಪಕ್ಷಗಳು ಬೆಂಬಲಿಸಿರುವುದನ್ನು ಮುಖ್ಯವಾಗಿ ಇಲ್ಲಿ ನೋಡಬಹುದು. ರಾಷ್ಟ್ರೀಯ ಪಕ್ಷಗಳ ಏಕಮುಖಿ ನಿಲುವುಗಳಿಂದ ಹಾಗೂ ತೀವ್ರವಾಗಿ ಬೆಳೆಯುತ್ತಿರುವ ರಾಜಕೀಯ ಸ್ಪರ್ಧಾತ್ಮಕ ವಾತಾವರಣದಿಂದ ತಪ್ಪಿಸಿಕೊಳ್ಳುವ ತಂತ್ರಗಳನ್ನೂ ಇಲ್ಲಿ ಕಾಣಬಹುದು. ಅಂದರೆ ಯಾವುದೇ ಒಂದು ರಾಷ್ಟ್ರೀಯ ಪಕ್ಷವು ಕೇಂದ್ರದಲ್ಲಿ ಅಧಿಕಾರವನ್ನು ಪಡೆಯುವುದರಿಂದ, ಪ್ರಾದೇಶಿಕ ಕಾಳಜಿಗಳನ್ನು ಈ ರಾಷ್ಟ್ರೀಯ ಪಕ್ಷಗಳು ಹೊಂದಿರಲಾರವು ಎಂಬ ಅನುಮಾನವೂ ಇಲ್ಲಿದೆ.
2009 ಡಿಸೆಂಬರ್ನಲ್ಲಿ ಪ್ರತ್ಯೇಕ ತೆಲೆಂಗಾಣ ರಾಜ್ಯದ ಹೊಸ ಬೇಡಿಕೆಯು ತೀವ್ರ ಸ್ವರೂಪವನ್ನು ಪಡೆದುಕೊಂಡಾಗ, ಕೇಂದ್ರ ಸರಕಾರವು ಈ ಬೇಡಿಕೆಯನ್ನು ಪರಿಗಣಿಸುವಾಗ, ಇನ್ನೂ ಹಲವಾರು ಹೊಸ ಮತ್ತು ಹಳೆ ಬೇಡಿಕೆಗಳು ಮುಂಚೂಣೆಗೆ ಬಂದವು. ಉದಾ.ಗೆ ಕರ್ನಾಟಕದಲ್ಲಿ ಕೂರ್ಗ್, ಬಿಹಾರದಲ್ಲಿ ಮಿಥಿಲಾಂಚಲ್, ಗುಜರಾತಿನಲ್ಲಿ ಸೌರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಗೋರ್ಖಲ್ಯಾಂಡ್ ಹಾಗೂ ಕಾಮ್ಟಪೂರ್ ಮತ್ತು ಮಹಾರಾಷ್ಟ್ರದಲ್ಲಿ ವಿದರ್ಭ ಮೊದಲಾದ ಪ್ರದೇಶಗಳು ಪ್ರತ್ಯೇಕ ರಾಜ್ಯಗಳ ಬೇಡಿಕೆಗಳನ್ನು ಮುಂದಿಟ್ಟಿರುವುದು ಈಗ ಇತಿಹಾಸ. ತಮ್ಮ ತಾಯ್ನೆಲದಿಂದ ಪ್ರತ್ಯೇಕತೆಯನ್ನು ಬಯಸುವುದರ ಹಿಂದೆ ಕೇವಲ ಭಾಷಿಕ ಕಟ್ಟಾಭಿಮಾನ ಮಾತ್ರ ಇರಲಾರದು ಎಂಬುದು ಇಲ್ಲಿ ಅತ್ಯಂತ ನಿಚ್ಚಳವಾಗಿದೆ.
ಭಾರತವನ್ನು ಜಗತ್ತಿನ ಅತ್ಯಂತ ದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರವೆಂದು ಈಗಾಗಲೇ ಪರಿಗಣಿಸಿದ್ದರೂ, ಆಳವಾಗಿ ವಿಶ್ಲೇಷಿಸಿ ನೋಡಿದಾಗ ಈ ನೆಲೆ ಇನ್ನೂ ಭ್ರೂಣಾವಸ್ಥೆಯಲ್ಲಿಯೇ ಇರುವುದನ್ನು ನಾವು ಯಾರಾದರೂ ಮನಗಾಣುತ್ತೇವೆ. ಪ್ರಜಾಸತ್ತಾತ್ಮಕ ಅರಿವು ಮತ್ತು ಕ್ರಿಯೆಗಳು ಇನ್ನೂ ಪಕ್ವಗೊಳ್ಳುವ ಜರೂರಿದೆ. ಭಾಷೆಗಳ ಬಗೆಗೆ ಭಾರತವು ತಾಳಿರುವ ನಿಲುವುಗಳೇ ಇದಕ್ಕೆ ಸ್ಪಷ್ಟ ನಿದರ್ಶನ.
ಹಾಗಾಗಿ ಭಾರತದ ಇವತ್ತಿನ ಭಾಷಿಕ ಸನ್ನಿವೇಶವನ್ನು ಅರಿಯಲು, ಅಂಬೇಡ್ಕರ್ ಅವರ ಭಾಷಿಕ ಚಿಂತನೆಗಳನ್ನು ಮರುಪರಿಶೀಲಿಸುವುದು ಅತ್ಯಂತ ಅಗತ್ಯವಾಗಿದೆ. ಭಾರತದ ಭಾಷಾ ನೀತಿಗಳು ಹಲವು ಬಗೆಯ ಬದಲಾವಣೆಗೆ ಒಳಪಟ್ಟಿವೆ. ಭಾಷಾವಾರು ಪ್ರಾಂತಗಳ ಪುನರ್ರಚನೆಯೇ ಇದಕ್ಕೆ ಅತ್ಯಂತ ಮಹತ್ವದ ಸಾಕ್ಷಿಯಾಗಿದೆ. ಭಾರತವು ಒಂದು ಅಪ್ಪಟ ಬಹುಭಾಷಿಕ ದೇಶವಾಗಿದೆ. ಈ ದಿಟ ಬಹುಭಾಷಿಕತೆಯನ್ನು ಅರಿಯಲು ಸಾಕಷ್ಟು ಚಿಂತಕರು ತಮ್ಮ ಚಿಂತನೆಗಳನ್ನು ಬೆಳೆಸಿದ್ದಾರೆ.
ಇಂತಹ ಪ್ರಖ್ಯಾತ ಚಿಂತಕರು ಮತ್ತು ನೀತಿ ನಿರೂಪಕರನ್ನು ಬದಿಗಿಟ್ಟು, ಹೊಸ ಬಗೆಯ ಬಹುಭಾಷಿಕತೆಗೆ ಸಂಬಂಧಿಸಿದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಏಕೆಂದರೆ ಭಾಷಾವಾರು ಪ್ರಾಂತಗಳ ಪುನರ್ರಚನೆಯ ಬಗೆಗೆ ಈ ಚಿಂತಕರ ನಿಲುವುಗಳು ಅತ್ಯಂತ ವ್ಯತರಿಕ್ತವಾಗಿದ್ದವು.
ಅಂಬೇಡ್ಕರ್ ಅವರು ಭಾಷಾವಾರು ರಾಜ್ಯಗಳ ರಚನೆಯ ಮುಖ್ಯ ಪ್ರತಿಪಾದಕರು. ಆದರೆ ಈ ಭಾಷಾವಾರು ರಾಜ್ಯಗಳು ತಮ್ಮ ತಮ್ಮ ರಾಜ್ಯ ಭಾಷೆಗಳಿಗೆ (ಉದಾ.ಗೆ ಕರ್ನಾಟಕದಲ್ಲಿ ಕನ್ನಡ, ತಮಿಳುನಾಡಿನಲ್ಲಿ ತಮಿಳು ಮತ್ತು ಆಂದ್ರಪ್ರದೇಶ ಹಾಗೂ ತೆಲಾಂಗಣದಲ್ಲಿ ತೆಲುಗು ಇತ್ಯಾದಿ…) ಬದಲಾಗಿ ಹಿಂದಿಯನ್ನು ಆಡಳಿತ ಭಾಷೆಯನ್ನಾಗಿ ಬಳಸಬೇಕು ಎಂಬ ನಿಲುವನ್ನು ಹೊಂದಿದ್ದರು.
ಭಾರತವು ಮಧ್ಯಕಾಲೀನ ಭಾರತದ ಮರುರೂಪವನ್ನು ಪಡೆಯುವ ಅಪಾಯದಿಂದ ತಪ್ಪಿಸಲು, ಅಂಬೇಡ್ಕರ್ ಅವರು ಈ ನಿಲುವನ್ನು ತಾಳುತ್ತಾರೆ. ಏಕೆಂದರೆ, “ನಮ್ಮ ಭಾರತ ಆಧುನಿಕ ಭಾರತವಾಗಿ ಉಳಿಯದೇ ಪರಸ್ಪರ ವೈರತ್ವ ಮತ್ತು ಯುದ್ಧಗಳಲ್ಲಿ ಮುಳುಗಿರುವ ಅನೇಕ ದೇಶಗಳನ್ನೊಳಗೊಂಡ ಮಧ್ಯಕಾಲೀನ ಭಾರತವಾಗಿ ಅದು ಪರಿಣಮಿಸುತ್ತದೆ”. ಎಂಬ ಅಭಿಪ್ರಾಯ ಅವರದಾಗಿತ್ತು. ಮತ್ತು ಈ ಅಭಿಪ್ರಾಯವು ಇವತ್ತು ನಾವು ಭಾಷಿಕವಾಗಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ವಿಶ್ಲೇಷಿಸಿ ನೋಡುವಂತೆ ನಮ್ಮನ್ನು ಒತ್ತಾಯಿಸುತ್ತದೆ.
ಹೌದು, ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿಯೇ ರಚನೆಗೊಂಡ ಭಾರತದ ಸಂವಿಧಾನವು, ಅವರೇ ಊಹಿಸಿದ ಆತಂಕವನ್ನೂ ಲೆಕ್ಕಿಸದೇ ಇವತ್ತು ಸಂವಿಧಾನವು ಆಯಾ ರಾಜ್ಯಗಳ ಭಾಷೆಯನ್ನೇ ಅಧಿಕ್ರುತ ಆಡಳಿತ ಭಾಷೆಯನ್ನಾಗಿ ಬಳಸುವ ಅವಕಾಶವನ್ನು ನಮಗೆ ಒದಗಿಸಿದೆ.
ಭಾಷಾವಾರು ರಾಜ್ಯಗಳನ್ನು ರಚಿಸುವ ಪ್ರಕ್ರಿಯೆಯಲ್ಲಿಯೇ ಅಪಾಯಗಳು ಅಡಗಿರುತ್ತವೆ ಎಂಬ ಈ ವಿಚಾರವು ಎಷ್ಟೊಂದು ಸುಸ್ಪಷ್ಟವಾದುದೋ, ನಾವು ಭಾಷಾವಾರು ರಾಜ್ಯಗಳನ್ನು ರಚಿಸದಿದ್ದರೂ ಅದಕ್ಕಿಂತ ಹೆಚ್ಚಿನ ಅಪಾಯಕ್ಕೆ ಈಡಾಗುತ್ತೇವೆ ಎಂಬುದು ಕೂಡ ಅಷ್ಟೇ ನಿಖರವಾದ ನಿಲುವಾಗಿದೆ. ಈ ವಿಶ್ಲೇಷಣೆಗಳನ್ನು ಅಂಬೇಡ್ಕರ್ ಅವರು ತಮ್ಮ ಭಾಷಾವಾರು ರಾಜ್ಯಗಳನ್ನು ಕುರಿತ ಚಿಂತನೆಗಳು (1955) ಅನ್ನುವ ಬರಹದಲ್ಲಿ ಮಂಡಿಸುತ್ತಾರೆ.
ಭಾಷಾವಾರು ಪ್ರಾಂತಗಳ ಪುನರ್ರಚನೆಯಿಂದ ಏರ್ಪಡುವ ಪರಿಣಾಮಗಳನ್ನು ಒಂದಿಲ್ಲ ರೀತಿಯಲ್ಲಿ ನಿಭಾಯಿಸಲು ಸಾಧ್ಯವಾಗಬಹುದು. ಆದರೆ ಈ ಭಾಷಾವಾರು ಪ್ರಾಂತಗಳನ್ನು ರಚಿಸದ ಕಾರಣ ಎದುರಾಗುವ ಬಿಕ್ಕಟ್ಟುಗಳನ್ನು ನಿರ್ವವಹಿಸುವುದು ಅತ್ಯಂತ ದುಸ್ತರ ಎಂಬ ಅಭಿಪ್ರಾಯವನ್ನೂ ಇವರು ವ್ಯಕ್ತಪಡಿಸುತ್ತಾರೆ. ಇನ್ನೂ ಮುಂದುವರೆದು ಅಂಬೇಡ್ಕರ್ ಅವರು ಹೇಳುವುದೇನೆಂದರೆ, “ವಿವೇಕಶೀಲನೂ ದ್ರುಢ ಮನೋಭಾವದವನೂ ಅದ ಯಾವುದೇ ಮುತ್ಸದ್ದಿ ರಾಜಕಾರಣಿ (ಸ್ಟೇಟ್ಸ್ಮನ್)ಯು ಭಾಷಾವಾರು ಪ್ರಾಂತಗಳ ಪುನರ್ರಚನೆಯಿಂದ ಉಂಟಾಗುವ ಅಪಾಯಗಳನ್ನು ತಪ್ಪಿಸಬಲ್ಲನು.
ಆದರೆ ಈ ಭಾಷಾವಾರು ವಿಂಗಡಣೆಗೆ ಒಳಗಾಗದ ಸಂಕೀರ್ಣ ಭಾರತದಲ್ಲಿ ತಲೆದೊರುವ ಅಪಾಯಗಳು, ಎಷ್ಟೇ ಮುತ್ಸದ್ದಿ ರಜಕಾರಣಿಯಾಗಿದ್ದರೂ ಅವನ ನಿಯಂತ್ರಕ್ಕೆ ಈ ಅಪಾಯಗಳು ಸಿಗಲಾರವು” ಎಂಬ ಕಟು ಸತ್ಯವನ್ನು ಅಂಬೇಡ್ಕರ್ ಅವರು ನಮಗೆ ಇಲ್ಲಿ ಮನವರಿಕೆ ಮಾಡುತ್ತಾರೆ. ನಮ್ಮ ಗ್ರಹಿಕೆಗೆ ಹೊರತಾದ ಬಿಕ್ಕಟ್ಟುಗಳು ಸಂಕೀರ್ಣ ಬಹುಭಾಷಿಕ ಸನ್ನಿವೇಶದಲ್ಲಿ (ಮಧ್ಯಕಾಲೀನ ಭಾರತ) ಹುದುಗಿರುತ್ತವೆ ಎಂಬ ಕಟು ವಾಸ್ತವವನ್ನು ಅರಿಯುವುದರ ಜೊತೆಗೆ, ಪ್ರಜಾಪ್ರಭುತ್ವ (ಬಹುಭಾಷಿಕ) ಭಾರತದಲ್ಲಿ ಎದುರಾಗುವ ಭಾಷಿಕ ಬಿಕ್ಕಟ್ಟುಗಳನ್ನು ನಿರ್ವಹಿಸುವ ಕಾರ್ಯಯೋಜನೆಗಳನ್ನು ನೆಲೆಗೊಳಿಸುವ ಅಗತ್ಯವಿದೆ ಎಂಬ ಅನಿವಾರ್ಯತೆಯನ್ನೂ ಮನಗಾಣುತ್ತೇವೆ.
‘ಯಾವುದೇ ಭಾಷಾವಾರು ರಾಜ್ಯ ತನ್ನ ಪ್ರಾದೇಶಿಕ ಭಾಷೆಯನ್ನು ಅಧಿಕ್ರುತ ರಾಜ್ಯ ಭಾಷೆಯನ್ನಾಗಿ ಹೊಂದುವ ಮೂಲಕ ಸ್ವತಂತ್ರ ರಾಷ್ಟ್ರವಾಗಿ ಬೆಳೆಯಬಹುದು. ಸ್ವತಂತ್ರ ರಾಜ್ಯ ಮತ್ತು ಸ್ವತಂತ್ರ ರಾಷ್ಟ್ರಗಳ ನಡುವಣ ದಾರಿ ಅತ್ಯಂತ ಕಿರಿದಾದುದು. ಒಂದು ವೇಳೆ ಹೀಗಾದರೆ, ನಮ್ಮ ಭಾರತವು ಆಧುನಿಕ ಭಾರತವಾಗಿ ಉಳಿಯದೇ, ಹಲವು ದೇಶಗಳನ್ನೊಳಗೊಂಡು ನಿರಂತರವಾಗಿ ಪರಸ್ಪರ ವೈರತ್ವ ಮತ್ತು ಯುದ್ಧದಲ್ಲಿ ಮುಳುಗಿರುವ ಮಧ್ಯಕಾಲೀನ ಭಾರತವಾಗಿ ಮೈದಾಳುತ್ತದೆ’.
ಭಾಷಾವಾರು ಪ್ರಾಂತಗಳ ಪುನರ್ರಚನೆಯ ಸಾಧಕ ಮತ್ತು ಬಾಧಕಗಳನ್ನು ಪರಿಶೀಲಿಸುವ ದಾರಿಗಳನ್ನು ಅಂಬೇಡ್ಕರ್ ಅವರು ಅತ್ಯಂತ ಖಚಿತವಾಗಿ ಇಲ್ಲಿ ತೋರಿಸಿರುತ್ತಾರೆ. ಭಾಷಾವಾರು ಪ್ರಾಂತಗಳ ಪುನರ್ರಚನೆಯನ್ನು ಕೇವಲ ಭಾವನಾತ್ಮಕ ವಿದ್ಯಮಾನವನ್ನಾಗಿ ಪರಿಗಣಿಸದೇ ಅದನ್ನೊಂದು ವೈಜ್ಞಾನಿಕ ಮತ್ತು ತಾತ್ವಿಕ ನಿಲುವನ್ನಾಗಿ ನೋಡಿದರೆ, ಅಂಬೇಡ್ಕರ್ ಈ ಕುರಿತು ಏನನ್ನು ಸೂಚಿಸುತ್ತಿದ್ದಾರೆ, ಯಾಕೇ ಇವರ ವಿಶ್ಲೇಷಣೆಗಳು ನಮಗೆ ಇವತ್ತು ವ್ಯತರಿಕ್ತವಾಗಿ ಕಾಣುತ್ತವೆ ಎಂಬುದನ್ನು ಅರಿಯುವುದಕ್ಕೆ ಸಾಧ್ಯವಾಗುತ್ತದೆ. ಭಾಷಾವಾರು ಪ್ರಾಂತಗಳ ಪುನರ್ರಚನೆಯ ಪ್ರಕ್ರಿಯೆಯಲ್ಲಿ ಅಪಾಯಗಳು ಇರುವಂತೆ, ಭಾಷಾವಾರು ಪ್ರಾಂತಗಳನ್ನು ಪುನರ್ರಚಿಸದೇ ಹೋದರು ಅಪಾಯಗಳು ಹೇಗೆ ಅಡಕವಾಗಿರುತ್ತವೆ ಎಂಬ ವೈಜ್ಞಾನಿಕ ದಿಟವನ್ನು ಇಲ್ಲಿ ಮನಗಾಣುತ್ತೇವೆ.
ಹಾಗಾದರೆ ಅಂಬೇಡ್ಕರ್ ಅವರು ಏನನ್ನು ಹೇಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂಬ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ಇವರ ವಿಶ್ಲೇಷಣೆಗಳು ಅತ್ಯಂತ ನಿಚ್ಚಳವಾಗಿರುತ್ತವೆ. ಅಂದರೆ ಬಹುಭಾಷಿಕ ಸನ್ನಿವೇಶವನ್ನು ನಿಭಾಯಿಸುವ ದಾರಿಗಳನ್ನು ತೋರಿಸುವ ಜೊತೆಗೆ ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ವಿನ್ಯಾಸಗಳನ್ನು ಮರುರೂಪಿಸಿಕೊಳ್ಳುವ ಬಗೆಗಳನ್ನೂ ಇಲ್ಲಿ ಕಂಡರಿಸುತ್ತಾರೆ. ಹಾಗಾಗಿ ಮಧ್ಯಕಾಲೀನ ಭಾರತದ ಸಂದರ್ಭಕ್ಕೆ ಈಡಾಗುವ ಅಪಾಯವನ್ನು ತಪ್ಪಿಸುವ ತಂತ್ರಗಳನ್ನು ಅಂಬೇಡ್ಕರ್ ಚಿಂತನೆಗಳಲ್ಲಿ ಕಾಣುತ್ತೇವೆ.
ಹಾಗಾಗಿ ಪುನರ್ರಚಿತ ರಾಜ್ಯಗಳಲ್ಲಿ ಎದುರಾಗುವ ಭಾಷಿಕ ಅಪಾಯಗಳಿಂದ ತಪ್ಪಿಸಲು, ಆಯಾ ರಾಜ್ಯದ ಪ್ರಾದೇಶಿಕ ಭಾಷೆಯನ್ನೇ ಅಧಿಕ್ರುತ ಆಡಳಿತ ಭಾಷೆಯನ್ನಾಗಿ ಬಳಸುವ ಬದಲಾಗಿ ಹಿಂದಿ ಇಲ್ಲವೇ ಇಂಗ್ಲಿಶು ಭಾಷೆಗಳನ್ನು ಬಳಸುವ ಪ್ರಸ್ತಾವನೆಯನ್ನು ಅಂಬೇಡ್ಕರ್ ಮಂಡಿಸುತ್ತಾರೆ. ಅಂದರೆ, “ಈ ಅಪಾಯಗಳನ್ನು ಬಗೆಹರಿಸುವುದು ಹೇಗೆ? ಇಂತಹ ಅಪಾಯಗಳನ್ನು ಬಗೆಹರಿಸಲು ಈ ಸದ್ಯ ನನಗೆ ಅನ್ನಿಸುವ ಏಕೈಕ ಉಪಾಯವೇನೆಂದರೆ, ಆಯಾ ರಾಜ್ಯದ ಪ್ರಾದೇಶಿಕ ಭಾಷೆಯನ್ನು ಅಧಿಕ್ರುತ ಆಡಳಿತ ಭಾಷೆಯನ್ನಾಗಿ ಬಳಸುವ ಅವಕಾಶವನ್ನು ಸಂವಿಧಾನದಲ್ಲಿಯೇ ಒದಗಿಸಕೂಡದು.
ರಾಜ್ಯದ ಅಧಿಕ್ರುತ ಭಾಷೆಯನ್ನಾಗಿ ಹಿಂದಿಯನ್ನು ಬಳಸಬೇಕು. ಭಾರತವು ಈ ನಿಲುವಿಗೆ ಹೊಂದಿಕೊಳ್ಳುವರಿಗೆ ಇಂಗ್ಲಿಶನ್ನು ಈ ಉದ್ದೇಶಕ್ಕಾಗಿ ಬಳಸಬೇಕು. ಭಾರತೀಯರು ಈ ಪ್ರಸ್ತಾವನೆಯನ್ನು ಒಪ್ಪಿಕೊಳ್ಳುವವರೇ? ಒಂದುಪಕ್ಷ ಇಲ್ಲವಾದಲ್ಲಿ, ಭಾಷಾವಾರು ರಾಜ್ಯಗಳು ಸಹಜವಾಗಿಯೇ ಅಪಾಯಕ್ಕೆ ಈಡಾಗುತ್ತವೆ”. ಹಾಗಾದರೆ ಅಂಬೇಡ್ಕರ್ ಅವರ ಈ ಮಾತುಗಳು ಏನನ್ನು ಸಾಬೀತಪಡಿಸುತ್ತವೆ ಎಂಬ ಅನುಮಾನವು ನಮ್ಮಲ್ಲಿ ಉಂಟಾಗದೇ ಇರಲಾರದು. ಸಮಾನತೆ, ಸ್ವಾತಂತ್ರ ಮತ್ತು ಬಾಂಧವ್ಯ ಎಂಬೀ ತ್ರಿವಳಿ ತತ್ವಗಳನ್ನು ಮಂಡಿಸುವ ಅಂಬೇಡ್ಕರ್ ಹಾಗೂ ಹಿಂದಿಯನ್ನು ರಾಜ್ಯದ ಅಧಿಕ್ರುತ ಭಾಷೆಯನ್ನಾಗಿ ಪ್ರಸ್ತಾಪಿಸುವ ಅಂಬೇಡ್ಕರ್ ಅವರ ನಿಲುವುಗಳ ನಡುವೇ ಯಾವುದೇ ಹೊಂದಾಣಿಕೆ ಕಾಣಿಸುತ್ತಿಲ್ಲ. ಇಲ್ಲಿ ಕೇವಲ ಏರುಪೇರುಗಳು ಇಲ್ಲವೇ ವಿರೋಧಭಾಸಗಳು ಇರುವಂತೆ ಭಾಸವಾಗುತ್ತದೆ.
ಮೂಲಭೂತ ಹಕ್ಕುಗಳು (ಫಂಡಾಮೆಂಟಲ್ ರೈಟ್ಸ್) ಮತ್ತು ರಾಜ್ಯ ನಿರ್ದೇಶಕ ತತ್ವಗಳ (ಸ್ಟೇಟ್ ಡಿರೆಕ್ಟಿವ್ ಪ್ರಿನ್ಸಿಪಲ್ಸ್) ನಡುವೆ ತಾತ್ವಿಕ ಹಾಗೂ ಪ್ರ್ಯಾಗ್ಮಾಟಿಕ್ (ಪ್ರಯೋಜನಕಾರಿ ತತ್ವ) ನಂಟನ್ನು ಕಲ್ಪಿಸಿರುವ ಅಂಬೇಡ್ಕರ್ ಅವರಿಗೆ, ಹಿಂದಿಯನ್ನು ಅಧಿಕ್ರುತ ರಾಜ್ಯ ಭಾಷೆಯನ್ನಾಗಿ ಒಪ್ಪಿಕೊಂಡರೆ ಏನೆಲ್ಲ ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕ ಬಿಕ್ಕಟ್ಟುಗಳು ಎದುರಾಗುತ್ತವೆ ಎಂಬ ವಾಸ್ತವ ಗೊತ್ತಿರಲಿಲ್ಲವೇ? ದಿಟ, ಆಯಾ ರಾಜ್ಯದ ಪ್ರಾದೇಶಿಕ ಭಾಷೆಯನ್ನೇ ಅಧಿಕ್ರುತ ರಾಜ್ಯ ಭಾಷೆಯನ್ನಾಗಿ ಒಪ್ಪಿಕೊಂಡಿದ್ದರಿಂದ, ಯಾವುದೇ ವ್ಯತ್ಯಾಸವನ್ನು ನಾವು ಇವತ್ತು ಕಾಣುತ್ತಿಲ್ಲ. ಅಂದರೆ ಕಲ್ಯಾಣ ರಾಜ್ಯಗಳನ್ನು ಕಟ್ಟುವುದಕ್ಕೆ ಸಾಧ್ಯವಾಗಿದೆ ಎಂದು ಹೇಳಲಾರೆ.
ಹಾಗಾದರೆ, ಅಂಬೇಡ್ಕರ್ ಅವರ ನಿಲುವುಗಳನ್ನು ಹೇಗೆ ವಿಶ್ಲೇಷಿಸಬೇಕು? ಯಾವ ತಾತ್ವಿಕ ವಿನ್ಯಾಸವನ್ನು ನೆಲೆಯಾಗಿಸಿಕೊಂಡು ಇವರ ಈ ನಿಲುವನ್ನು ಬಿಡಿಸಿ ನೋಡಬೇಕು? ಹಿಂದು ಧರ್ಮ ಮತ್ತು ಶಾಸ್ತ್ರಗಳಲ್ಲಿ ಹುದುಗಿರುವ ಜೀವವಿರೋಧಿ ಧೋರಣೆಗಳ ವಿರುದ್ಧ ತಮ್ಮ ಬದುಕಿನ ಉದ್ದಕ್ಕೂ ಹೋರಾಡಿದ ಅಂಬೇಡ್ಕರ್ ಅವರಿಗೆ, ಹಿಂದಿಯನ್ನು ಅಧಿಕ್ರುತ ರಾಜ್ಯ ಭಾಷೆಯನ್ನಾಗಿ ಒಪ್ಪಿಕೊಳ್ಳುವುದರಿಂದ, ಏನೆಲ್ಲ ಸಾಮಾಜಿಕ ಭಾಷಾಶಾಸ್ತ್ರೀಯ ಅಪಾಯಗಳು (ಸೋಶಿಯೋಲಿಂಗ್ವಿಸ್ಟಿಕ್ ಥ್ರೆಟ್ಸ್) ಎದುರಾಗುತ್ತವೆ ಎಂಬ ಕಟು ವಾಸ್ತವ ಅಂಬೇಡ್ಕರ್ ಅವರಿಗೆ ಗೋಚರಿಸಲಿಲ್ಲವೇ? ನಿಶ್ಚಿತವಾಗಿಯೂ ನಾನು ಇಲ್ಲವೆಂದು ಹೇಳಲಾರೆ. ಅಂಬೇಡ್ಕರ್ ಅವರ ಕಣ್ನೋಟದಲ್ಲಿ ಅಧಿಕ್ರುತ ರಾಜ್ಯ ಭಾಷೆಯೆಂಬುದು ಅದೊಂದು ಸಂವಿಧಾನಾತ್ಮಕ ಕಾಯಿದೆ.
ಕಾಯಿದೆಯ ಕಣ್ಣಲ್ಲಿ ಎಲ್ಲರೂ ಸಮಾನರೇ ಹಾಗಾಗಿ ಅಧಿಕ್ರುತ ರಾಜ್ಯ ಭಾಷೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ಅಡಕಗೊಳಿಸಿದರೆ ಮಾತ್ರ ಸಾಲದು. ಬದಲಾಗಿ ಅದನ್ನೊಂದು ಸಾಮಾಜಿಕ ತತ್ವಶಾಸ್ತ್ರೀಯ ಚೌಕಟ್ಟನ್ನಾಗಿ ಗ್ರಹಿಸಬೇಕು. ಆದ್ದರಿಂದ ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯವನ್ನು ಸಾಮಾಜಿಕ ತತ್ವಶಾಸ್ತ್ರೀಯ ವಿನ್ಯಾಸಗಳನ್ನಾಗಿ ಮಂಡಿಸಿದರು. ಜೊತೆಗೆ ರಾಜಕೀಯ ಮತ್ತು ಸಾಮಾಜಿಕ ಸ್ವಾತಂತ್ರ್ಯಗಳ ನಡುವಣ ನಂಟಸ್ತಿಕೆ ಹೇಗಿರಬೇಕು ಮತ್ತು ಅಂತಹದೊಂದು ನಂಟಸ್ತಿಕೆಯನ್ನು ತರುವ ಮೂಲಕ ಮಾತ್ರ ಸಮಾನ ಸಮಾಜಗಳನ್ನು ಕಟ್ಟುವುದಕ್ಕೆ ಸಾಧ್ಯವೆಂಬ ತತ್ವವನ್ನು ಅತ್ಯಂತ ಖಚಿತವಾಗಿ ಮಂಡಿಸಿರುವುದಕ್ಕೂ ಇವರ ಈ ನಿಲುವೇ ಕಾರಣವಾಗಿದೆ.
ಹೌದು ಈ ಎಲ್ಲ ಚರ್ಚೆಗಳು ಹಾಗೂ ಅಂಬೇಡ್ಕರ್ ಅವರು ಮಂಡಿಸಿದ ಪ್ರಸ್ತಾವನೆಯನ್ನೂ ಮೀರಿ ಇವತ್ತು ಭಾರತದ ರಾಜ್ಯಗಳು ತಮ್ಮ ಪ್ರಾದೇಶಿಕ ಭಾಷೆಗಳನ್ನೇ ಅಧಿಕ್ರುತ ಭಾಷೆಗಳನ್ನಾಗಿ ಬಳಸುತ್ತಿವೆ. ಅಂದರೆ ಕರ್ನಾಟಕದಲ್ಲಿ ಕನ್ನಡ, ಆಂದ್ರಪ್ರದೇಶ ಮತ್ತು ತೆಲಾಂಗಣದಲ್ಲಿ ತೆಲುಗು ಹಾಗೂ ತಮಿಳುನಾಡಿನಲ್ಲಿ ತಮಿಳು ಭಾಷೆಗಳನ್ನು ತಮ್ಮ ಅಧಿಕ್ರುತ ರಾಜ್ಯ ಭಾಷೆಗಳನ್ನಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ ಈ ಯಾವ ರಾಜ್ಯಗಳಲ್ಲಿಯೂ ಕೂಡ ಇವತ್ತು ರಾಷ್ಟ್ರೀಯ ಅಪಐಕ್ಯತೆಯನ್ನಾಗಲೀ ಇಲ್ಲವೇ ಮಧ್ಯಕಾಲೀನ ಪರಿಸ್ಥಿತಿಯನ್ನು ಉಂಟು ಮಾಡುವ ಯಾವುದೇ ಅಪಾಯಗಳು ನಮಗೆ ಗೋಚರಿಸುತ್ತಿಲ್ಲ ಎಂಬ ವಾದಗಳೂ ಇವತ್ತು ಮುಂಚೂಣೆಯಲ್ಲಿವೆ.
ಹೌದು ರಾಜಕೀಯವಾಗಿ ಮಾತ್ನಾಡುವಾಗ ಈ ವಾದವು ಸರಿಯಾಗಿಯೇ ಕಾಣುತ್ತದೆ. ಆದರೆ ಸಾಮಾಜಿಕ-ಆರ್ಥಿಕ ಸನ್ನಿವೇಶದಲ್ಲಿ ದಿನದಿಂದ ದಿನಕ್ಕೆ ತಲೆದೊರುತ್ತಿರುವ ಅಸಮಾನತೆಯ ಸವಾಲುಗಳನ್ನು ಪರಿಶೀಲಿಸಿ ನೋಡಿದಾಗ, ಅಪಐಕ್ಯತೆಯ ಸ್ವರೂಪ ಮತ್ತು ಮಧ್ಯಕಾಲೀನ ಸಾಮಾಜಿಕ-ರಾಜಕೀಯ ಸನ್ನಿವೇಶದ ವಿನ್ಯಾಸಗಳು ನಿಚ್ಚಳಗೊಳ್ಳುತ್ತವೆ. ಮಧ್ಯಕಾಲೀನ ಸನ್ನಿವೇಶವನ್ನು ಕೇವಲ ಪರಸ್ಪರ ಯುದ್ಧ ಮಾಡುವುದಕ್ಕೆ ಮಾತ್ರ ಸೀಮಿತಗೊಳಿಸುವುದಲ್ಲ. ಇವತ್ತು ನಡೆಯುತ್ತಿರುವ ಧಾರ್ಮಿಕ ಸಾಮಾಜಿಕ ಸಂಘರ್ಷ ಹಾಗೂ ಅಸಹನೆಯ ವಿನ್ಯಾಸಗಳನ್ನು ಗಮನಿಸಿದಾಗ ನಮ್ಮ ಪ್ರಸ್ತುತ ಭಾರತವು ದಿಟವಾಗಿಯೂ ಆಧುನಿಕಗೊಂಡದೆಯೇ ಇಲ್ಲವೇ ಮಧ್ಯಕಾಲೀನ ಭಾರತವಾಗಿಯೇ ಇನ್ನೂ ಉಳದಿದೆ ಎನ್ನುವುದನ್ನು ಪತ್ತೆಹಚ್ಚಿ ನೋಡಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ5 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

