Connect with us

ದಿನದ ಸುದ್ದಿ

ಕನ್ನಡ ರಾಜ್ಯೋತ್ಸವ ಮತ್ತು ಅಂಬೇಡ್ಕರ್

Published

on

  • ರಘೋತ್ತಮ ಹೊ.ಬ

ರ್ನಾಟಕ 1956 ನವೆಂಬರ್ 1 ರಂದು ಕನ್ನಡ ಮಾತಾಡುವ ಜನರನ್ನೊಳಗೊಂಡ ಪ್ರತ್ಯೇಕ ಭಾಷಾವಾರು ರಾಜ್ಯವಾದದ್ದು ಎಲ್ಲರಿಗೂ ತಿಳಿದದ್ದೆ. ಆ ಕಾರಣಕ್ಕೆ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ. ಹಾಗಿದ್ದರೆ ಇಲ್ಲಿ ಅಂಬೇಡ್ಕರ್ ಹೇಗೆ ಪ್ರಾಮುಖ್ಯತೆ ಪಡೆಯುತ್ತಾರೆ ಎಂದು ಕೆಲವರಿಗಾದರೂ ಆಶ್ಚರ್ಯವಾಗಬಹುದು. ಆದರೆ ಅಂಬೇಡ್ಕರ್ ಪ್ರಾಮುಖ್ಯತೆ ಪಡೆಯುತ್ತಾರೆ.

ಏಕೆಂದರೆ ರಾಜ್ಯಗಳ ಪುನರ್ರಚನೆಗೆ ಸಂಬಂಧಿಸಿದಂತೆ 1955 ರಲ್ಲಿ ರಚನೆಯಾಗಿದ್ದ ಆಯೋಗದ ಮುಂದೆ ಬಾಬಾಸಾಹೇಬರು ತಮ್ಮ ಚಿಂತನೆಗಳನ್ನು ಪ್ರಸ್ತಾಪಿಸಿದ್ದಾರೆ. ಆ ಮೂಲಕ ಭಾಷಾವಾರು ರಾಜ್ಯಗಳ ರಚನೆಗೆ ಅಂಬೇಡ್ಕರರು ತಮ್ಮ ಪ್ರಬಲ ವಾದ ಮಂಡಿಸಿದ್ದಾರೆ.

ಈ ನಿಟ್ಟಿನಲ್ಲಿ ಅಂಬೇಡ್ಕರ್ ರವರ ಮತ್ತು ಅವರ ಹಾಗೆಯೇ ವಾದ ಮಂಡಿಸಿದ ಇತರರ ವಾದದ ಆಧಾರದ ಮೇಲೆ ರಾಜ್ಯ ಪುನರ್ ವಿಂಗಡಣಾ ಆಯೋಗ ಭಾಷಾವಾರು ರಾಜ್ಯಗಳ ರಚನೆಗೆ ಶಿಫಾರಸ್ಸು ಮಾಡುತ್ತದೆ. ಅಂದಹಾಗೆ ಹಾಗೆ ಶಿಫಾರಸ್ಸುಗೊಂಡು ರಚಿತವಾದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಮತ್ತು ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಈ ಹಿನ್ನೆಲೆಯಲ್ಲಿ ಅಂಬೇಡ್ಕರರು ಕೂಡ ಪ್ರಾಮುಖ್ಯತೆ ಪಡೆಯುತ್ತಾರೆ ಎಂಬುದು ಗಮನಿಸತಕ್ಕ ಅಂಶ.

ಅಂದಹಾಗೆ ಈ ದಿಸೆಯಲ್ಲಿ, ಕರ್ನಾಟಕ ಮತ್ತು ಆ ತರಹದ ಅನೇಕ ಭಾಷಾವಾರು ರಾಜ್ಯಗಳ ರಚನೆಯ ಹಿನ್ನೆಲೆಯಲ್ಲಿ ಅಂಬೇಡ್ಕರರ ವಿಚಾರಗಳೇನು? ನೇರ ದಾಖಲಿಸುವುದಾದರೆ, ಅಂಬೇಡ್ಕರರು ಬರೆಯುತ್ತಾರೆ “ಒಂದು ಭಾಷೆ- ಒಂದು ರಾಜ್ಯ ಎಂಬುದು ಬಹುತೇಕ ಆಡಳಿತ ವ್ಯವಸ್ಥೆಯ ಸರ್ವ ಸಾಮಾನ್ಯ ಲಕ್ಷಣವಾಗಿದೆ.

ಉದಾಹರಣೆಗೆ ಜರ್ಮನಿಯ ಸಂವಿಧಾನವನ್ನು ಗಮನಿಸಿ, ಪ್ರಾನ್ಸ್ ನ ಸಂವಿಧಾನವನ್ನು ಗಮನಿಸಿ, ಇಟಲಿಯ ಸಂವಿಧಾನ, ಇಂಗ್ಲೆಂಡ್ ನ ಸಂವಿಧಾನ ಮತ್ತು ಅಮೆರಿಕದ ಸಂವಿಧಾನ ಹೀಗೆ ಸಂವಿಧಾನಗಳನ್ನು ಗಮನಿಸಿ “ಒಂದು ಭಾಷೆ- ಒಂದು ರಾಜ್ಯ” ಎಂಬುದು ಕಡ್ಡಾಯ ನಿಯಮವಾಗಿದೆ ಮತ್ತು ಈ ನಿಯಮದಿಂದ ಎಲ್ಲೆಲ್ಲಿ ವಿಮುಖತೆಯು ನಡೆದಿದೆಯೋ ಅಲ್ಲೆಲ್ಲ ಆಡಳಿತ ವ್ಯವಸ್ಥೆಗೆ ಅಪಾಯ ಒದಗಿದೆ.

ಅಂದಹಾಗೆ ಹಳೆಯ ಟರ್ಕಿಷ್ ಸಾಮ್ರಾಜ್ಯ ಮತ್ತು ಆಸ್ಟ್ರಿಯನ್ ಸಾಮ್ರಾಜ್ಯಗಳಲ್ಲಿ ನಾವು ಇಂತಹ ಮಿಶ್ರ ಭಾಷಾ ರಾಜ್ಯಗಳನ್ನು ಕಾಣಬಹುದು. ಈ ನಿಟ್ಟಿನಲ್ಲಿ ಬಹುಭಾಷಾ ರಾಜ್ಯಗಳು ಎಂಬುದರ ಅರ್ಥವನ್ನು ನಾವು ಹುಡುಕುವುದಾದರೆ ಸದರಿ ರಾಜ್ಯಗಳು (ಹಳೆಯ ಟರ್ಕಿ ಮತ್ತು ಆಸ್ಟ್ರಿಯಾ ರಾಜ್ಯ ಗಳು) ಬಹುಭಾಷೆಯ ತಮ್ಮ ಕಾರಣಕ್ಕಾಗಿಯೇ ಛಿದ್ರಗೊಂಡು ನಾಶವಾದವು.

ಭಾರತವೂ ಕೂಡ ಹೀಗೆ ಮಿಶ್ರ ಭಾಷೆಗಳ ರಾಜ್ಯಗಳ ಸಮುದಾಯವಾಗಿಯೇ ಮುಂದುವರೆದರೆ ಅದೂ ಕೂಡ (ಆಸ್ಟ್ರಿಯಾ ಮತ್ತು ಟರ್ಕಿ ದೇಶಗಳು ಅನುಭವಿಸಿದ) ಅಂತಹ ದುರಂತ ಪರಿಸ್ಥಿತಿ ತಪ್ಪಿಸಿಕೊಳ್ಳುವುದು ಅಸಾಧ್ಯ.” ಬಾಬಾಸಾಹೇಬರು ಸ್ಪಷ್ಟ ಪಡಿಸುತ್ತಾರೆ. ಅವರು ಇಂಗ್ಲೆಂಡ್, ಅಮೆರಿಕ, ಫ್ರಾನ್ಸ್, ಇಟಲಿ ಸಂವಿಧಾನ ಗಳ ಉದಾಹರಣೆ ಕೊಡುತ್ತಾರೆ ಹಾಗೆಯೇ ಬಹುಭಾಷೆಗಳ ರಾಜ್ಯ ವಾಗಿ ಆಸ್ಟ್ರಿಯಾ ಮತ್ತು ಟರ್ಕಿ ನಾಶವಾದದ್ದನ್ನು ಕೂಡ ಉಲ್ಲೇಖಿಸುತ್ತಾರೆ.

ಹಾಗಿದ್ದರೆ ಬಹು ಭಾಷೆಗಳ ರಾಜ್ಯ ಏಕೆ ಅಸ್ಥಿರ ಮತ್ತು ಏಕ ಭಾಷೆಯ ರಾಜ್ಯ ಏಕೆ ಸ್ಥಿರ? ಈ ಪ್ರಶ್ನೆಗೆ ಅಂಬೇಡ್ಕರರು ನೀಡುವ ಉತ್ತರ, “ರಾಜ್ಯ ಎಂಬುದು ನಾವು ಮತ್ತು ನಮ್ಮವರು ಎಂಬ ಸಹ ಭಾವನೆಯ ಆಧಾರದ ಮೇಲೆ ಕಟ್ಟಲ್ಪಟ್ಟಿದೆ” ಎಂದು. ಹಾಗಿದ್ದರೆ “ನಾವು ಮತ್ತು ನಮ್ಮವರು, ಈ ಭಾವನೆ ಹಾಗೆಂದರೇನು?” ಹೀಗೆ ಪ್ರಶ್ನಿಸುತ್ತಾ ಅಂಬೇಡ್ಕರರು ಹೇಳುವುದು “ಸಂಕ್ಷಿಪ್ತವಾಗಿ ಹೇಳುವುದಾದರೆ ಅದೊಂದು ರೀತಿ ನಾವೆಲ್ಲ ಒಂದೇ ಎಂಬ ಸಾಂಸ್ಥಿಕ ಭಾವನೆಯನ್ನು ಅನುಭವಿಸುವುದು ಮತ್ತು ಅಂತಹ ಅನುಭವ ಅಥವಾ ಭಾವ ಅವರಲ್ಲಿ ತಾವು ಪರಸ್ಪರ ಬಂಧುಗಳು ಎಂಬ ಭಾವವನ್ನು ಸೃಜಿಸುತ್ತದೆ.

ಈ ನಿಟ್ಟಿನಲ್ಲಿ ಈ ಭಾವ ಇದೊಂದು ರೀತಿ ಎರಡು ಅಲಗಿನ ಕತ್ತಿಯ ಮಾದರಿಯದು. ಯಾಕೆಂದರೆ ಒಂದೆಡೆ ಇದು ತನ್ನ ಬಂಧು ಬಳಗದವರೆಡೆ ಒಂದು ರೀತಿಯ ತನ್ನವರು ಭಾವ ಎಂಬ ಸೃಜಿಸುತ್ತದೆ ಮತ್ತೊಂದೆಡೆ ತನ್ನ ಬಂಧು ಬಳಗದವರಲ್ಲದವರೆಡೆ ತನ್ನವರಲ್ಲ ಎಂಬ ಭಾವ ಸೃಜಿಸುತ್ತದೆ. ಈ ಕಾರಣಕ್ಕಾಗಿ ಇದೊಂದು ರೀತಿ ನಾವೆಲ್ಲ ಒಂದೇ ಎಂಬ ಭಾವ. ಈ ದಿಸೆಯಲ್ಲಿ ಇಂತಹ ಭಾವ ಹಾಗೆ ಪರಸ್ಪರ ಪ್ರಬಲ ಭಾವನೆಯುಳ್ಳವರನ್ನು ಅದು
ಸಾಮಾಜಿಕ ತಾರತಮ್ಯ ಮತ್ತು ಆರ್ಥಿಕ ಸಂಕಷ್ಟಗಳ ಹೊರತಾಗಿಯೂ ಪರಸ್ಪರ ಕಟ್ಟುತ್ತದೆ ಮತ್ತು ತಮ್ಮವರಲ್ಲದವರನ್ನು ಅದು ದೂರ ತಳ್ಳುತ್ತದೆ.

ಒಟ್ಟಾರೆ ಅದು ಒಂದು ಜನ ಸಮೂಹ ಬೇರೆ ಯಾವುದೇ ಗುಂಪುಗಳಿಗೆ ಸೇರದೆ
ಪರಸ್ಪರ ಬೆರೆಯಲು ಹಾತೊರೆಯುವುದಾಗಿದೆ”. ಹೀಗೆ ಅಂಬೇಡ್ಕರರು ಭಾಷಾವಾರು ರಾಜ್ಯಗಳು ಮತ್ತು ಅಂತಹ ರಾಜ್ಯ ಗಳಲ್ಲಿ ಒಂದೇ ಭಾಷೆಯವರು ಒಂದೇ ಎಂಬ ಭಾವದಲ್ಲಿ ಬರೆಯುವುದನ್ನು ತಮ್ಮ ಉತ್ಕೃಷ್ಟ ಬರವಣಿಗೆಯಲ್ಲಿ ಉಪಮೆಗಳಲ್ಲಿ‌ ಹಿಡಿದಿರುತ್ತಾರೆ. ಹಾಗಿದ್ದರೆ “ನಾವು ನಮ್ಮ ವರು” ಎಂಬ ಈ ಭಾವ ತಪ್ಪಲ್ಲವೆ? ಯಾಕೆಂದರೆ ಅಂಬೇಡ್ಕರರ ಈ ಮಾತಿನಂತೆ “ನಾವು ಕನ್ನಡಿಗರು, ಅವರು ತಮಿಳಿನವರು” ಎಂದು ನಾವು ಈಗಲೂ ಹೇಳುತ್ತೇವಲ್ಲ ಅದು ತಪ್ಪು ಎಂಬುದಲ್ಲವೆ ಎನ್ನುವುದಾದರೆ ಇದಕ್ಕೆ ಬಾಬಾಸಾಹೇಬರು ಹೇಳುವುದು “ನಾವು ನಮ್ಮವರು ಎಂಬ ಈ ಭಾವದ ಅಸ್ತಿತ್ವವೇ
ಸ್ಥಿರ ಮತ್ತು ಪ್ರಜಾಪ್ರಭುತ್ವ ಮಾದರಿಯ ರಾಜ್ಯದ ಪ್ರಮುಖ ಲಕ್ಷಣ” ಎಂದು. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.1, ಪು.143 ಮತ್ತು 144)

ಹೌದು, ಪ್ರಜಾಪ್ರಭುತ್ವದ ಪ್ರಬಲ ಪ್ರತಿಪಾದಕರಾದ ಬಾಬಾಸಾಹೇಬರು ಹೇಳುವುದು ಅಥವಾ ಏಕಭಾಷೆಯ ರಾಜ್ಯಗಳ ಅಸ್ತಿತ್ವಕ್ಕೆ ಅವರು ನೀಡುವ ಎರಡು ಕಾರಣಗಳಲ್ಲಿ ಪ್ರಮುಖವಾದದ್ದು ಅಥವಾ ಮೊದಲನೆಯದು ಪ್ರಜಾಪ್ರಭುತ್ವ. ಅಂದರೆ ಬಾಬಾಸಾಹೇಬರು ಹೇಳುವುದು “ಘರ್ಷಣೆ ಇಲ್ಲದೆ ಪ್ರಜಾಪ್ರಭುತ್ವವಿಲ್ಲ. ಆದ್ದರಿಂದ ನಾವು ನಮ್ಮವರು ಎಂಬ ಭಾವವಿಲ್ಲದೆ ಪ್ರಜಾಪ್ರಭುತ್ವ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ” ಎಂದು. ಇನ್ನು ಎರಡನೆಯ ಕಾರಣ ಅವರು ನೀಡುವುದು “ಜನಾಂಗೀಯ ಮತ್ತು ಸಾಂಸ್ಕೃತಿಕ ಸಿಕ್ಕುಗಳನ್ನು ಪರಿಹರಿಸಲು ಏಕ ಭಾಷೆ ರಾಜ್ಯ ಅಗತ್ಯ” ಎಂದು.

ಯಾಕೆಂದರೆ ಇದಕ್ಕೆ ಬಾಬಾಸಾಹೇಬರೇ ಉದಾಹರಣೆ ನೀಡುತ್ತಾರೆ ಅದೆಂದರೆ “ಆಂಧ್ರ ಮತ್ತು ತಮಿಳಿಗರ ಕಚ್ಚಾಟ, ಆಂಧ್ರ ಮತ್ತು ಮಹಾರಾಷ್ಟ್ರಿಗರ ಕಚ್ಚಾಟ, ಗುಜರಾತ್ ಮತ್ತು ಮಹಾರಾಷ್ಟ್ರಿಗರ ಕಚ್ಚಾಟ… ಇತ್ಯಾದಿ” (ಗಮನಿಸಿ, ಅಂಬೇಡ್ಕರರು ತಮಿಳಿಗರು ಮತ್ತು ಕನ್ನಡಿಗರ ಕಚ್ಚಾಟ ಪ್ರಸ್ತಾಪಿಸಿಲ್ಲ! ಯಾಕೆಂದರೆ ಆಗಿನ್ನೂ ಸಮಗ್ರ ಕರ್ನಾಟಕ ಅಸ್ತಿತ್ವಕ್ಕೆ ಬಂದಿರಲಿಲ್ಲವಲ್ಲ!)
ಒಟ್ಟಾರೆ ಬಾಬಾಸಾಹೇಬ್ ಅಂಬೇಡ್ಕರ್ ರವರು “ಒಂದೇ ಭಾಷೆ – ಒಂದೇ ರಾಜ್ಯ” ಹಿನ್ನೆಲೆಯಲ್ಲಿ ಪ್ರತ್ಯೇಕ ಭಾಷಾವಾರು ರಾಜ್ಯಗಳ ರಚನೆಯನ್ನು ಪ್ರತಿಪಾದಿಸಿದ್ದಾರೆ.

ಅಂದಹಾಗೆ ಅಂಬೇಡ್ಕರರು ಅಂದು ಪ್ರಸ್ತಾಪಿಸಿದ ಕರ್ನಾಟಕ ರಾಜ್ಯದಲ್ಲಿ ಅಂದು 1.90 ಕೋಟಿ ಜನರಿದ್ದರು (1951 ರ ಗಣತಿ) ಮತ್ತು ಕರ್ನಾಟಕದ ಪ್ರಸ್ತಾಪಿತ ವಿಸ್ತೀರ್ಣ 72,730 ಚ.ಮೈಲುಗಳು ಇತ್ತು. ಅದರ ಆಧಾರದಲ್ಲಿ ಕರ್ನಾಟಕ ರಾಜ್ಯ 1956 ನವೆಂಬರ್ 1 ರಂದು ಅಸ್ತಿತ್ವಕ್ಕೆ ಬಂತು. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಈ ದಿನ ಕನ್ನಡಿಗರು ಬಾಬಾಸಾಹೇಬರನ್ನು ಸ್ಮರಿಸಿಕೊಳ್ಳಬೇಕು‌. ಭಾಷಾ ಆಧಾರದಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉದಯಕ್ಕೆ “ಭಾಷಾವಾರು ರಾಜ್ಯ ರಚನೆಯ ಉದ್ದೇಶದ ಅವರ ಚಿಂತನೆಗಳು ಕಾರಣ” ಎಂಬುದನ್ನು ಅರಿಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending