Connect with us

ದಿನದ ಸುದ್ದಿ

ತುರ್ತುಪರಿಸ್ಥಿತಿಯ ಛಾಯೆಯೂ, ‘ಅರ್ನಾಬ್’ ಮಾಯೆಯೂ..!

Published

on

  • ನಾ ದಿವಾಕರ

“ಭೂತದ ಬಾಯಲ್ಲಿ ಭಗವದ್ಗೀತೆ,,,,” ಈ ಗಾದೆ ಮಾತಿಗೆ ಭಾರತವೇ ಜನ್ಮಭೂಮಿ. ಕರ್ಮಭೂಮಿಯೂ ಹೌದು. ಈ ಗಾದೆಯ ಅರ್ಥ ಏನು ಎಂದು ಕೇಳುವವರಿಗೆ ಭಾರತದ ರಾಜಕಾರಣಿಗಳ ಭಾಷಣ, ಹೇಳಿಕೆಗಳನ್ನು ಕೇಳುವಂತೆ ಸಲಹೆ ನೀಡಿದರೆ ಸಾಕು. ಅರ್ಥವಾಗಿಬಿಡುತ್ತದೆ. ಕಳೆದ ಆರು ವರ್ಷಗಳಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಹಿಮಾಲಯದೆತ್ತರದಲ್ಲಿಟ್ಟು ವಿಶ್ವಮಾನ್ಯತೆ ಪಡೆದಿದ್ದ ಭಾರತದ ಆಡಳಿತ ವ್ಯವಸ್ಥೆ, ನ್ಯಾಯ ವ್ಯವಸ್ಥೆ ಮತ್ತು ಪ್ರಭುತ್ವಕ್ಕೆ ಇಂದು 1975ರ ಕರಾಳ ಛಾಯೆ ಆವರಿಸಿದಂತೆ ಕಾಣುತ್ತಿದೆ !!! ಈ ಹಿನ್ನೆಲೆಯಲ್ಲೇ ಮೇಲಿನ ಗಾದೆ ಮಾತು ಸಹ ನೆನಪಾಗುತ್ತಿದೆ.

ಜನಸಾಮಾನ್ಯರ ಪರಿಭಾಷೆಯಲ್ಲಿ ಬಚ್ಚಲುಬಾಯಿ ಎಂಬ ಪದವನ್ನು ಬಳಸುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಈ ಬಚ್ಚಲು ಬಾಯಿ ಎಂಬ ಪದದ ಅರ್ಥವನ್ನೂ ನಮ್ಮ ರಾಜಕೀಯ ನಾಯಕರುಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಭಾರತ ಸ್ವಚ್ಚವಾಗುತ್ತಿದೆ ಆದರೆ ಅಧಿಕಾರ ರಾಜಕಾರಣದ ವಾರಸುದಾರರ, ಜನಪ್ರತಿನಿಧಿಗಳ ಬಚ್ಚಲು ಬಾಯಿ ಸಂಸ್ಕೃತಿಯಿಂದ ಸಮಸ್ತ ಭಾರತವೇ ಕೊಳಕು ಎನಿಸುತ್ತಿದೆ.

ಬಹುಶಃ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ಎಂದಾಗ ಇದೂ ಅವರ ಮನಸಿನಲ್ಲಿದ್ದಿರಬಹುದು ಈ ಹೊಲಸು ರಾಜಕಾರಣದ ಆಂತರಿಕ ಮಾಲಿನ್ಯವನ್ನು, ಬಾಹ್ಯ ಸ್ವರೂಪದ ತ್ಯಾಜ್ಯವನ್ನು ಹೊರಹಾಕಿ, ಪ್ರಜೆಗಳಲ್ಲಿ ಪ್ರಜಾತಂತ್ರ ಮೌಲ್ಯಗಳ ಬಗ್ಗೆ ಸುಪ್ರಜ್ಞೆ ಮೂಡಿಸುವ ಗುರುತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಡಿಜಿಟಲ್ ಯುಗದಲ್ಲಿ ಇದು ವಿದ್ಯುನ್ಮಾನ ಸುದ್ದಿಮನೆಗಳ ಆದ್ಯತೆಯೂ ಆಗಬೇಕಿದೆ.

ಇಂತಹ ಒಂದು ಪ್ರಯತ್ನಕ್ಕೆ ಅವಕಾಶವನ್ನೂ ನೀಡದಂತೆ ಮಾಧ್ಯಮ ಜಗತ್ತನ್ನೇ ಘನತ್ಯಾಜ್ಯ ಶಿಖರವನ್ನಾಗಿ ಮಾಡುವುದರಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸಿರುವ ಸುದ್ದಿವಾಹಿನಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಇಂದು ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.

ಮುಂಜಾನೆಯ ಹೊತ್ತಿನಲ್ಲಿ, ಯಾವುದೇ ಪೂರ್ವ ಸೂಚನೆ ಇಲ್ಲದೆ, ಏಕಾಏಕಿ ಮನೆಗೆ ನುಗ್ಗಿ, ಮೂರು ವರ್ಷದ ಹಿಂದಿನ ಆತ್ಮಹತ್ಯೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವ ರೀತಿ ಒಪ್ಪುವಂತಹುದಲ್ಲ.
ಟಿ ಆರ್ ಪಿ ಹಗರಣದಲ್ಲಿ ಗೋಸ್ವಾಮಿಯ ವಿರುದ್ಧ ಗುರುತರ ಆರೋಪಗಳು ಇರುವುದನ್ನೂ ಮರೆಯುವಂತಿಲ್ಲ. ಆದರೆ ಇಂದಿನ ಘಟನೆ ಮುಂಬೈ ಪೊಲೀಸರ ಉದ್ಧಟತನ, ಮಹಾರಾಷ್ಟ್ರ ಸರ್ಕಾರದ ಪ್ರಜಾತಂತ್ರ ವಿರೋಧಿ ಧೋರಣೆಯ ಸಂಕೇತ.

ನಿಜ, ಆದರೆ ಹೀಗೆ ಹೇಳುವ ನೈತಿಕ ಹಕ್ಕು ಮತ್ತು ಹೊಣೆಗಾರಿಕೆ ಇರುವ ರಾಜಕೀಯ ನಾಯಕರು ನಮ್ಮ ನಡುವೆ ಇದ್ದಾರೆಯೇ ? ಗೋಸ್ವಾಮಿಯ ಬಂಧನದ ನಂತರ ರಿಪಬ್ಲಿಕ್ ವಾಹಿನಿಯ ನಿರೂಪಕರು ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದ್ದುದನ್ನು ( ಸುದ್ದಿಮನೆಯ ಕೂಗುಮಾರಿ ಪರಿಭಾಷೆಯಲ್ಲಿ ಅರಚುತ್ತಿದ್ದುದು ಎಂದು ಓದಿಕೊಳ್ಳಬಹುದು) ಕಂಡು “ ಭೂತದ,,,,,” ಗಾದೆ ನೆನಪಾಯಿತು. ಈ ಗಾದೆಯ ಬಗ್ಗೆಯೇ ಅಸಹ್ಯ ಬರುವಂತಾಗಿದ್ದು ಕೆಲವು ಕೇಂದ್ರ ಬಿಜೆಪಿ ಸಚಿವರ ಟ್ವಿಟರ್ ಸಂದೇಶಗಳನ್ನು ಕಂಡು.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ “ ಹಿರಿಯ ಪತ್ರಕರ್ತ ಅರ್ನಾಬ್ ಗೋಸ್ವಾಮಿಯ ಬಂಧನ ಖಂಡನಾರ್ಹವಾಗಿದ್ದು, ಚಿಂತೆಗೀಡುಮಾಡುವ ವಿಚಾರವಾಗಿದೆ. ನಾವು 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದೆವು ”
ಕೇಂದ್ರ ಗೃಹ ಸಚಿವ ಅಮಿತ್‍ಶಾ “ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಪ್ರಜಾತಂತ್ರಕ್ಕೆ ಅವಮಾನ ಮಾಡಿವೆ.

ರಿಪಬ್ಲಿಕ್ ಟಿವಿ ವಿರುದ್ಧ ಅಧಿಕಾರ ದುರುಪಯೋಗ ಮಾಡಿದೆ. ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭದ ಮೇಲೆ ಆಕ್ರಮಣ ನಡೆಸುವ ಮೂಲಕ ತುರ್ತುಪರಿಸ್ಥಿತಿಯನ್ನು ನೆನಪಿಸಿದೆ ”. ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವಢೇಕರ್ “ ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದಿರುವ ಆಕ್ರಮಣವನ್ನು ನಾವು ಖಂಡಿಸುತ್ತೇವೆ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇದೇ ರೀತಿ ನಡೆಯುತ್ತಿದ್ದುದನ್ನು ಇದು ನೆನಪಿಸುತ್ತದೆ.”

ಈ ಮೂರೂ ಅಣಿಮುತ್ತುಗಳನ್ನು ಕೇಳಿಸಿಕೊಳ್ಳುವ ಕಿವಿಗಳೇ ಧನ್ಯ ಅಲ್ಲವೇ ? ನಿಜ, ಮಹಾರಾಷ್ಟ್ರ ಪೊಲೀಸರ ನಡೆ ಅಕ್ಷಮ್ಯ, ಸರ್ಕಾರದ ಧೋರಣೆ ಖಂಡನಾರ್ಹ ಆದರೆ ಶಿವಸೇನೆ ಪಳಗಿರುವ ಗರಡಿಯಲ್ಲೇ ಈ ಮೂವರೂ ನಾಯಕರು ಪಳಗಿರುವುದಲ್ಲವೇ ? ಅರ್ನಾಬ್ ಗೋಸ್ವಾಮಿಯ ವಿರುದ್ಧ ಗಂಭೀರ ಆರೋಪಗಳು ಇದ್ದುದೇ ಆದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಇದು ಶಿವಸೇನೆಯ ಸಂಸ್ಕೃತಿಗೆ ಹೊರತಾದದ್ದು ಎನ್ನುವುದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ ? ಇಂದು ಶಿವಸೇನೆ ಕಾಂಗ್ರೆಸ್ ಬಾಹುಗಳಲ್ಲಿದೆ. ಆದರೆ ಹುಟ್ಟಿದ ದಿನದಿಂದಲೂ ಬೆಳೆದಿದ್ದು ಸಂಘಪರಿವಾರದ ಮಡಿಲಲ್ಲೇ ಅಲ್ಲವೇ ?

ಈ ಗೋಸುಂಬೆಗಳನ್ನು ಬದಿಗಿಟ್ಟು ಭಾರತದ ಪ್ರಸ್ತುತ ಸನ್ನಿವೇಶವನ್ನು ಒಮ್ಮೆ ಗಮನಿಸೋಣ. ಇತ್ತೀಚೆಗೆ ತಾನೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಪವರ್ ಟಿವಿ ವಾಹಿನಿಯನ್ನು ಮಾನ್ಯ ಮುಖ್ಯಮಂತ್ರಿಯವರು ಮುಚ್ಚಿಸಿಬಿಟ್ಟರು. ಈಗ ಮತ್ತೊಂದು ಹೆಸರಿನಲ್ಲಿ ಆರಂಭವಾಗಿದ್ದರೂ ಬಾಯಿ ಮುಚ್ಚಿಸಿದಂತೆ ಕಾಣುತ್ತಿದೆ.

ಮಾಧ್ಯಮ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಇವೆಲ್ಲವನ್ನೂ ಗೌರವಿಸುತ್ತಲೇ ಅರ್ನಾಬ್ ಅವರನ್ನು ಬಂಧಿಸಿದ ರೀತಿಯನ್ನು ಖಂಡಿಸೋಣ. ಆದರೆ ದೇಶಾದ್ಯಂತ ಪತ್ರಕರ್ತರ ವಿರುದ್ಧ ರಣಬೇಟೆಯಾಡಿದ ಕೇಂದ್ರ ಸರ್ಕಾರದ ಕ್ರಮಗಳನ್ನು ಮೇಜು ಕುಟ್ಟಿ ಸ್ವಾಗತಿಸುತ್ತಾ ಭಟ್ಟಂಗಿಯಂತೆ ಪ್ರಭುತ್ವದ ಹೆಜ್ಜೆಗೆ ಗೆಜ್ಜೆಯಾಗಿ, ತಮ್ಮ ಪತ್ರಿಕಾ ವೃತ್ತಿಧರ್ಮವನ್ನೂ ಮರೆತು ವರ್ತಿಸಿದ ಅರ್ನಾಬ್ ಗೋಸ್ವಾಮಿಯಾಗಲೀ ಅಥವಾ ಇತರ ಬಿಜೆಪಿ ನಾಯಕರಾಗಲೀ ಈ ಪ್ರಕರಣದ ಬಗ್ಗೆ ಕನಿಷ್ಟ ಮಾತನಾಡುವ ನೈತಿಕತೆಯನ್ನು ಉಳಿಸಿಕೊಂಡಿದ್ದಾರೆಯೇ ? ನಮ್ಮನ್ನೇ ಪ್ರಶ್ನಿಸಿಕೊಳ್ಳೋಣ.

ಅರ್ನಾಬ್ ಗೋಸ್ವಾಮಿಯನ್ನು ಮೂರು ವರ್ಷದ ಹಿಂದಿನ ಆತ್ಮಹತ್ಯೆಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಿರುವುದೇ ಮಹಾರಾಷ್ಟ್ರ ಸರ್ಕಾರದ ಘೋರ ಅಪರಾಧ ಎಂದಾದರೆ, ಸುಮ್ಮನೆ ಗುಜರಾತ್‍ನ ಹಿರಿಯ ಅಧಿಕಾರಿ ಸಂಜೀವ್ ಭಟ್ ಅವರನ್ನು ನೆನೆಯಿರಿ. ಮೂವತ್ತು ವರ್ಷದ ಹಿಂದಿನ , ಮುಚ್ಚಿಹೋಗಿದ್ದ ಪ್ರಕರಣದ ಕಡತವನ್ನು ಹೆಕ್ಕಿ ತೆಗೆದು ಅವರನ್ನು ಬಂಧಿಸಿದಾಗ ಭಾರತದ ಎಷ್ಟು ಸುದ್ದಿಮನೆಗಳು ವಿರೋಧಿಸಿದ್ದವು ? ಮಾನ್ಯ ಗೋಸ್ವಾಮಿ ಎಲ್ಲಿದ್ದರು ಸ್ವಾಮಿ ? ಭಾರತದ ಜನಸಾಮಾನ್ಯರು ಮಾಸ್ಕ್ ಧರಿಸುತ್ತಿರುವುದು ಕೊರೋನಾ ಬಂದ ನಂತರ. ಭಾರತದ ಬಹುತೇಕ ಸುದ್ದಿಮಾಧ್ಯಮಗಳು 2014ರಿಂದಲೇ ಮಾಸ್ಕ್ ಧರಿಸಲಾರಂಭಿಸಿವೆ.

ಸ್ವತಂತ್ರ ಭಾರತದ ಕಾನೂನು ವ್ಯವಸ್ಥೆಯಲ್ಲಿ ಎಫ್‍ಐಆರ್ ಎಂಬ ಪದ ಜನಸಾಮಾನ್ಯರ ಅರಿವಿಗೆ ನಿಲುಕದಷ್ಟು ಅಪರೂಪವಾಗಿತ್ತು. ಯಾವುದೋ ಗಂಭೀರ ಅಪರಾಧಗಳಲ್ಲಿ ಮಾತ್ರ ಈ ಪದ ಕೇಳಿಬರುತ್ತಿತ್ತು. ಆದರೆ ಕಳೆದ ಆರು ವರ್ಷಗಳಲ್ಲಿ ಎಫ್‍ಐಆರ್ ಎನ್ನುವುದು ಸಂತೆಯಲ್ಲಿನ ಸರಕಿನಂತೆ ಕಾಣುತ್ತಿದೆ.

ದೇಶದ್ರೋಹದ ಆರೋಪ ಮತ್ತು ಎಫ್‍ಐಆರ್ ಅಧಿಕಾರಸ್ಥರ ಬತ್ತಳಿಕೆಯಲ್ಲಿರುವ ಸುಲಭ ಅಸ್ತ್ರಗಳಾಗಿರುವುದರಿಂದಲೇ ಕೊರೋನಾ ಸಂದರ್ಭದಲ್ಲೇ 55 ಪತ್ರಕರ್ತರ ವಿರುದ್ಧ 22 ಎಫ್‍ಐಆರ್ ದಾಖಲಿಸಲಾಗಿದೆ. ಮಾರ್ಚ್ 25 ರಿಂದ ಜೂನ್ 30ರ ಅವಧಿಯಲ್ಲಿ ಕೋವಿದ್19 ವರದಿಗಳಿಗೆ ಸಂಬಂಧಪಟ್ಟಂತೆ ಇಷ್ಟು ಎಫ್‍ಐಆರ್‍ ಗಳನ್ನು ಪತ್ರಕರ್ತರ ವಿರುದ್ಧ ದಾಖಲಿಸಲಾಗಿದೆ.

ದ ವೈರ್ ಪತ್ರಿಕೆಯ ಸಿದ್ಧಾರ್ಥ ವರದರಾಜನ್, ವಿನೋದ್ ದುವಾ, ಅಮ್ನೆಸ್ಟಿ ಇಂಟರ್‍ನ್ಯಾಷನಲ್ ಸಂಸ್ಥೆಯ ಮಾಜಿ ನಿರ್ದೇಶಕ ಮತ್ತು ಅಂಕಣಕಾರ ಆಕರ್ ಪಟೇಲ್, ಸ್ಕ್ರೋಲ್ ಪತ್ರಿಕೆಯ ಸುಪ್ರಿಯಾ ಶರ್ಮ ಇವರು ಕೇಂದ್ರ ಸರ್ಕಾರದ ಪ್ರಹಾರಕ್ಕೆ ಬಲಿಯಾಗುತ್ತಿದ್ದಾರೆ. ಸುಪ್ರಿಯಾ ಶರ್ಮ ಅವರ ಅಪರಾಧ ಏನು ಗೊತ್ತೇ ? ಪ್ರಧಾನಮಂತ್ರಿ ಮೋದಿ ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ದತ್ತುಪಡೆದಿರುವ ವಾರಣಾಸಿಯ ದೊಹಾರಿ ಗ್ರಾಮದಲ್ಲಿನ ಜನಜೀವನವನ್ನು ತೆರೆದಿಟ್ಟಿದ್ದು. ಉತ್ತರಪ್ರದೇಶದಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ವರದಿ ಮಾಡಿದ್ದ ಪವನ್ ಕುಮಾರ್ ಜೈಸ್ವಾಲ್ ಮತ್ತೋರ್ವ ಎಫ್‍ಐಆರ್ ಬಲಿ.

ಕೊರೋನಾ ಸಂದರ್ಭದಲ್ಲಿ ಮಹಾರಾಷ್ಟ್ರದ ವಲಸೆ ಕಾರ್ಮಿಕರ ಸಮಸ್ಯೆಗೆ ಕೋಮು ಬಣ್ಣ ನೀಡಿದ್ದ ಅರ್ನಾಬ್ ವಿರುದ್ಧ ದಾಖಲಿಸಿದ್ದ ಎಫ್‍ಐಆರ್ ಮುಂಬೈ ಹೈಕೋರ್ಟ್ ಕೃಪೆಯಿಂದ ರದ್ದಾಗಿದೆ. ಸೂಫಿ ಸಂತ ಮೊಯಿನುದ್ದಿನ್ ಕ್ರಿಸ್ಟಿಯನ್ನು ದರೋಡೆಕೋರ ಎಂದು ಅವಮಾನಿಸಿದ ಅಮೀಶ್ ದೇವಗನ್ ಸಹ ಕೋರ್ಟ್ ಕೃಪೆಗೆ ಪಾತ್ರರಾಗಿದ್ದಾರೆ. ಆದರೆ ತಮ್ಮ ಪತ್ರಿಕಾ ಧರ್ಮ ಪಾಲಿಸುತ್ತಾ ಜನಸಾಮಾನ್ಯರಿಗೆ ಸತ್ಯ ಹೇಳುವ ಆಕರ್ ಪಟೇಲ್, ವಿನೋದ್ ದುವಾ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿ ಬಂಧನದ ವೈಖರಿಯನ್ನು ಖಂಡಿಸೋಣ. ಬಂಧನಕ್ಕೆ ಕಾರಣಗಳಿದ್ದರೆ ಬಿಡುಗಡೆಗೂ ಕಾರಣಗಳಿರುತ್ತವೆ. ಎಲ್ಲವೂ ಅಧಿಕಾರ ಪೀಠದ ಕೃಪೆಯನ್ನು ಆಧರಿಸಿರುತ್ತದೆ. ಯಾವುದೇ ಆರೋಪ ಇಲ್ಲದೆ, ವಾರಂಟ್ ಇಲ್ಲದೆ, ಏಕಾಏಕಿ ಬಂಧಿಸುವುದು ಘೋರ ಅಪರಾಧವೇನೋ ಹೌದು. ಇದು ಕಾನೂನು, ಸಂವಿಧಾನ, ಪೊಲೀಸ್ ನಿಯಮಾವಳಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಮಾನ್ಯತೆ ನೀಡುವವರಿಗೆ ಅನ್ವಯಿಸುವ ಮಾತು.

ಭೀಮಾ ಕೊರೆಗಾಂವ್ ಪ್ರಕರಣದ ಹಿನ್ನೆಲೆಯಲ್ಲಿ ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿದ ರೀತಿ ಜಗಜ್ಜಾಹೀರಾಗಿದೆ. ಈ ಬಂಧನದ ಸಮಯದಲ್ಲಿ ಗೋಸ್ವಾಮಿಯವರ ಕೂಗುಮಾರಿ ಸುದ್ದಿವಾಚನವನ್ನು ಪ್ರಜ್ಞೆ ಇರುವವರು ಮರೆತಿರಲಾರರು. ಇತ್ತೀಚೆಗೆ 83ರ ವೃದ್ಧ, ಸಾಮಾಜಿಕ ಕಾರ್ಯಕರ್ತರಾದ ಸ್ಟಾನ್ ಸ್ವಾಮಿಯವರನ್ನು ಬಂಧಿಸಿದಾಗ, ಸುಧಾ ಭರದ್ವಾಜ್, ವರಾವರರಾವ್, ಉಮರ್ ಖಲೀದ್, ಗರ್ಭಿಣಿ ಮಹಿಳೆ ಸಫೂರ ಜರ್ಗರ್ ಅವರನ್ನು ಬಂಧಿಸಿದಾಗ ಗೋಸ್ವಾಮಿಯಾಗಲೀ, ತುರ್ತುಪರಿಸ್ಥಿತಿಯಲ್ಲಿ ಹೋರಾಡಿದ, ಇಂದಿನ ಟ್ವಿಟರ್ ವೀರರಾಗಲೀ ಖಂಡಿಸಿದ್ದರೇ ? ಪ್ರಭುತ್ವ ಅಥವಾ ಆಡಳಿತ ವ್ಯವಸ್ಥೆಯ ಒಂದು ಅಂಗ ಯಾರನ್ನೋ ನಗರ ನಕ್ಸಲರು ಎಂದು ಹೇಳಿಬಿಟ್ಟರೆ ಅವರನ್ನು ಯಾವ ಹೊತ್ತಿನಲ್ಲಾದರೂ, ಯಾವ ರೀತಿಯಲ್ಲಾದರೂ ಬಂಧಿಸಬಹುದು ಎಂದು ಸಂವಿಧಾನದಲ್ಲಿ ಹೇಳಲಾಗಿದೆಯೇ ?

ಇದು ವ್ಯಕ್ತಿ ಅಥವಾ ಸಂಸ್ಥೆಯ ಪ್ರಶ್ನೆಯಲ್ಲ. ಮೌಲ್ಯಗಳ ಪ್ರಶ್ನೆ. ಗೋಸ್ವಾಮಿ ಯಾವ ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ, ಪ್ರತಿನಿಧಿಸುತ್ತಿದ್ದಾರೆ ? ಇವರನ್ನೇ ಅನುಕರಿಸಿ, ಅನುಸರಿಸುವ ಕನ್ನಡದ ಕೂಗುಮಾರಿ ಸುದ್ದಿಮನೆಗಳು ಯಾವ ಸಂಸ್ಕೃತಿಯನ್ನು ಅನುಸರಿಸುತ್ತಿವೆ ? ತುರ್ತುಪರಿಸ್ಥಿತಿಯಲ್ಲಿ ತಾವು ಪ್ರಜಾತಂತ್ರದ ಉಳಿವಿಗಾಗಿ ನಡೆಸಿದ ಹೋರಾಟವನ್ನು ಹೆಮ್ಮೆಯಿಂದ ನೆನೆಯುವ ಸಚಿವರು, ರಾಜಕೀಯ ನಾಯಕರು ಯಾವ ಸಂಸ್ಕೃತಿ ಅನುಸರಿಸುತ್ತಿದ್ದಾರೆ ?

ಓರ್ವ ಗೋಸ್ವಾಮಿಯ ಬಂಧನದಿಂದ ತುರ್ತುಪರಿಸ್ಥಿತಿಯ ಛಾಯೆ ಕವಿದಂತೆ ಭಾವಿಸುವ ಕೇಂದ್ರ ಸಚಿವರಿಗೆ ಒಂದು ವರ್ಷದ ಕಾಲ ಗೃಹಬಂಧನದಲ್ಲಿದ್ದ ಕಾಶ್ಮೀರದ ಸಮಸ್ತ ಜನತೆ ಹೇಗೆ ಕಂಡಿದ್ದರು ? ಯಾವುದೇ ಅಪರಾಧ ಮಾಡದಿದ್ದರೂ ಸೆರೆಮನೆಯಲ್ಲಿರುವ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಹೇಗೆ ಕಾಣುತ್ತಿದ್ದಾರೆ ?

ನಡೆದಾಡುವ ಸ್ಥಿತಿಯಲ್ಲೂ ಇಲ್ಲದ ಸಾಯಿಬಾಬಾ ಅವರಂತಹ ವಿದ್ವಾಂಸರನ್ನು ಉಗ್ರಗಾಮಿ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿ, ಜಾಮೀನು ಸಹ ನೀಡದೆ ಇರುವ ಆಡಳಿತ ವ್ಯವಸ್ಥೆಗೆ ಮತ್ತು ಅಧಿಕಾರಪೀಠದ ವಾರಸುದಾರರಿಗೆ ಗೋಸ್ವಾಮಿಯ ಬಂಧನ ತುರ್ತುಪರಿಸ್ಥಿತಿಯನ್ನು ನೆನಪಿಸುವುದೆಂದರೆ, ಭಾರತ ಮೌಲಿಕವಾಗಿ, ನೈತಿಕವಾಗಿ ಹಾದಿ ತಪ್ಪಿದೆ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

“ ಬಂಧಿಸಲಿ ಬಿಡಿ, ತಪ್ಪು ಮಾಡದಿದ್ದರೆ ಬಿಡುಗಡೆಯಾಗುತ್ತಾರೆ,,,,,” ಮಧ್ಯಮ ವರ್ಗಗಳ ಹಿತವಲಯದಲ್ಲಿ, ಬೌದ್ಧಿಕ ವಲಯದಲ್ಲಿ, ಬುದ್ಧಿಜೀವಿಗಳಲ್ಲದವರಲ್ಲಿ ಮತ್ತು ವಂದಿಮಾಗಧ ಸುದ್ದಿಮನೆಗಳಲ್ಲಿ ಕೇಳಿಬರುವ ಈ ಹೇಳಿಕೆ ಅರ್ನಾಬ್ ಗೋಸ್ವಾಮಿಗೂ ಅನ್ವಯಿಸುತ್ತದೆ. ಅವರಿಗೆ ಪ್ರಭುತ್ವವೂ ನೆರವಾಗಬಹುದು, ನ್ಯಾಯಾಂಗವೂ ನೆರವಾಗಬಹುದು.

ಇಂದಿನ ಭಾರತ ಕೇವಲ ಸಾಂವಿಧಾನಿಕ ಮೌಲ್ಯಗಳನ್ನು ಮಾತ್ರ ಕಳೆದುಕೊಳ್ಳುತ್ತಿಲ್ಲ, ಪ್ರಜಾತಂತ್ರ ಮೌಲ್ಯಗಳನ್ನೂ ಕಳೆದುಕೊಂಡಿದೆ. ಈ ಪ್ರಜ್ಞೆ ತಮ್ಮೊಳಗಿದ್ದು, ತಾವು ಪ್ರತಿನಿಧಿಸುವ “ಪತ್ರಿಕೋದ್ಯಮ ಅಥವಾ ಮಾಧ್ಯಮ ” ಎನ್ನುವ ಮೌಲ್ಯಯುತ ಸ್ತಂಭಕ್ಕೆ ಬದ್ಧತೆಯಿಂದ ನಡೆದುಕೊಂಡಿದ್ದರೆ ಬಹುಶಃ ಅರ್ನಾಬ್ ಗೋಸ್ವಾಮಿ ಜನತೆಯ ಅನುಕಂಪಕ್ಕೆ ಅರ್ಹರಾಗುತ್ತಿದ್ದರೇನೋ !

ನೆನ್ನೆ ಬಿಜೆಪಿ-ಶಿವಸೇನೆ ಮಾಡಿರುವುದನ್ನೇ ಇಂದು ಶಿವಸೇನೆ-ಕಾಂಗ್ರೆಸ್ ಸರ್ಕಾರ ಮಾಡಿದೆ. ಇದು ಒಂದು ಸರ್ಕಾರ ಅಥವಾ ಒಬ್ಬ ಮುಖ್ಯಮಂತ್ರಿಯ ಪ್ರಶ್ನೆಯಲ್ಲ.. ಮೌಲ್ಯಗಳ ಪ್ರಶ್ನೆ. ಮೌಲ್ಯ ಎಂದರೇನು ? ಇದು ಇಂದಿನ ಸಂದರ್ಭದಲ್ಲಿ ಕಾಡಬೇಕಾದ ಗಹನವಾದ ಪ್ರಶ್ನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending