ದಿನದ ಸುದ್ದಿ
ತುರ್ತುಪರಿಸ್ಥಿತಿಯ ಛಾಯೆಯೂ, ‘ಅರ್ನಾಬ್’ ಮಾಯೆಯೂ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/11/arnab-goswami_-suddidina.jpg&description=ತುರ್ತುಪರಿಸ್ಥಿತಿಯ ಛಾಯೆಯೂ, ‘ಅರ್ನಾಬ್’ ಮಾಯೆಯೂ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/11/arnab-goswami_-suddidina.jpg&description=ತುರ್ತುಪರಿಸ್ಥಿತಿಯ ಛಾಯೆಯೂ, ‘ಅರ್ನಾಬ್’ ಮಾಯೆಯೂ..!', 'pinterestShare', 'width=750,height=350'); return false;" title="Pin This Post">
- ನಾ ದಿವಾಕರ
“ಭೂತದ ಬಾಯಲ್ಲಿ ಭಗವದ್ಗೀತೆ,,,,” ಈ ಗಾದೆ ಮಾತಿಗೆ ಭಾರತವೇ ಜನ್ಮಭೂಮಿ. ಕರ್ಮಭೂಮಿಯೂ ಹೌದು. ಈ ಗಾದೆಯ ಅರ್ಥ ಏನು ಎಂದು ಕೇಳುವವರಿಗೆ ಭಾರತದ ರಾಜಕಾರಣಿಗಳ ಭಾಷಣ, ಹೇಳಿಕೆಗಳನ್ನು ಕೇಳುವಂತೆ ಸಲಹೆ ನೀಡಿದರೆ ಸಾಕು. ಅರ್ಥವಾಗಿಬಿಡುತ್ತದೆ. ಕಳೆದ ಆರು ವರ್ಷಗಳಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಹಿಮಾಲಯದೆತ್ತರದಲ್ಲಿಟ್ಟು ವಿಶ್ವಮಾನ್ಯತೆ ಪಡೆದಿದ್ದ ಭಾರತದ ಆಡಳಿತ ವ್ಯವಸ್ಥೆ, ನ್ಯಾಯ ವ್ಯವಸ್ಥೆ ಮತ್ತು ಪ್ರಭುತ್ವಕ್ಕೆ ಇಂದು 1975ರ ಕರಾಳ ಛಾಯೆ ಆವರಿಸಿದಂತೆ ಕಾಣುತ್ತಿದೆ !!! ಈ ಹಿನ್ನೆಲೆಯಲ್ಲೇ ಮೇಲಿನ ಗಾದೆ ಮಾತು ಸಹ ನೆನಪಾಗುತ್ತಿದೆ.
ಜನಸಾಮಾನ್ಯರ ಪರಿಭಾಷೆಯಲ್ಲಿ ಬಚ್ಚಲುಬಾಯಿ ಎಂಬ ಪದವನ್ನು ಬಳಸುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಈ ಬಚ್ಚಲು ಬಾಯಿ ಎಂಬ ಪದದ ಅರ್ಥವನ್ನೂ ನಮ್ಮ ರಾಜಕೀಯ ನಾಯಕರುಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಭಾರತ ಸ್ವಚ್ಚವಾಗುತ್ತಿದೆ ಆದರೆ ಅಧಿಕಾರ ರಾಜಕಾರಣದ ವಾರಸುದಾರರ, ಜನಪ್ರತಿನಿಧಿಗಳ ಬಚ್ಚಲು ಬಾಯಿ ಸಂಸ್ಕೃತಿಯಿಂದ ಸಮಸ್ತ ಭಾರತವೇ ಕೊಳಕು ಎನಿಸುತ್ತಿದೆ.
ಬಹುಶಃ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ಎಂದಾಗ ಇದೂ ಅವರ ಮನಸಿನಲ್ಲಿದ್ದಿರಬಹುದು ಈ ಹೊಲಸು ರಾಜಕಾರಣದ ಆಂತರಿಕ ಮಾಲಿನ್ಯವನ್ನು, ಬಾಹ್ಯ ಸ್ವರೂಪದ ತ್ಯಾಜ್ಯವನ್ನು ಹೊರಹಾಕಿ, ಪ್ರಜೆಗಳಲ್ಲಿ ಪ್ರಜಾತಂತ್ರ ಮೌಲ್ಯಗಳ ಬಗ್ಗೆ ಸುಪ್ರಜ್ಞೆ ಮೂಡಿಸುವ ಗುರುತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಡಿಜಿಟಲ್ ಯುಗದಲ್ಲಿ ಇದು ವಿದ್ಯುನ್ಮಾನ ಸುದ್ದಿಮನೆಗಳ ಆದ್ಯತೆಯೂ ಆಗಬೇಕಿದೆ.
ಇಂತಹ ಒಂದು ಪ್ರಯತ್ನಕ್ಕೆ ಅವಕಾಶವನ್ನೂ ನೀಡದಂತೆ ಮಾಧ್ಯಮ ಜಗತ್ತನ್ನೇ ಘನತ್ಯಾಜ್ಯ ಶಿಖರವನ್ನಾಗಿ ಮಾಡುವುದರಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸಿರುವ ಸುದ್ದಿವಾಹಿನಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಇಂದು ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.
ಮುಂಜಾನೆಯ ಹೊತ್ತಿನಲ್ಲಿ, ಯಾವುದೇ ಪೂರ್ವ ಸೂಚನೆ ಇಲ್ಲದೆ, ಏಕಾಏಕಿ ಮನೆಗೆ ನುಗ್ಗಿ, ಮೂರು ವರ್ಷದ ಹಿಂದಿನ ಆತ್ಮಹತ್ಯೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವ ರೀತಿ ಒಪ್ಪುವಂತಹುದಲ್ಲ.
ಟಿ ಆರ್ ಪಿ ಹಗರಣದಲ್ಲಿ ಗೋಸ್ವಾಮಿಯ ವಿರುದ್ಧ ಗುರುತರ ಆರೋಪಗಳು ಇರುವುದನ್ನೂ ಮರೆಯುವಂತಿಲ್ಲ. ಆದರೆ ಇಂದಿನ ಘಟನೆ ಮುಂಬೈ ಪೊಲೀಸರ ಉದ್ಧಟತನ, ಮಹಾರಾಷ್ಟ್ರ ಸರ್ಕಾರದ ಪ್ರಜಾತಂತ್ರ ವಿರೋಧಿ ಧೋರಣೆಯ ಸಂಕೇತ.
ನಿಜ, ಆದರೆ ಹೀಗೆ ಹೇಳುವ ನೈತಿಕ ಹಕ್ಕು ಮತ್ತು ಹೊಣೆಗಾರಿಕೆ ಇರುವ ರಾಜಕೀಯ ನಾಯಕರು ನಮ್ಮ ನಡುವೆ ಇದ್ದಾರೆಯೇ ? ಗೋಸ್ವಾಮಿಯ ಬಂಧನದ ನಂತರ ರಿಪಬ್ಲಿಕ್ ವಾಹಿನಿಯ ನಿರೂಪಕರು ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದ್ದುದನ್ನು ( ಸುದ್ದಿಮನೆಯ ಕೂಗುಮಾರಿ ಪರಿಭಾಷೆಯಲ್ಲಿ ಅರಚುತ್ತಿದ್ದುದು ಎಂದು ಓದಿಕೊಳ್ಳಬಹುದು) ಕಂಡು “ ಭೂತದ,,,,,” ಗಾದೆ ನೆನಪಾಯಿತು. ಈ ಗಾದೆಯ ಬಗ್ಗೆಯೇ ಅಸಹ್ಯ ಬರುವಂತಾಗಿದ್ದು ಕೆಲವು ಕೇಂದ್ರ ಬಿಜೆಪಿ ಸಚಿವರ ಟ್ವಿಟರ್ ಸಂದೇಶಗಳನ್ನು ಕಂಡು.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ “ ಹಿರಿಯ ಪತ್ರಕರ್ತ ಅರ್ನಾಬ್ ಗೋಸ್ವಾಮಿಯ ಬಂಧನ ಖಂಡನಾರ್ಹವಾಗಿದ್ದು, ಚಿಂತೆಗೀಡುಮಾಡುವ ವಿಚಾರವಾಗಿದೆ. ನಾವು 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದೆವು ”
ಕೇಂದ್ರ ಗೃಹ ಸಚಿವ ಅಮಿತ್ಶಾ “ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಪ್ರಜಾತಂತ್ರಕ್ಕೆ ಅವಮಾನ ಮಾಡಿವೆ.
ರಿಪಬ್ಲಿಕ್ ಟಿವಿ ವಿರುದ್ಧ ಅಧಿಕಾರ ದುರುಪಯೋಗ ಮಾಡಿದೆ. ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭದ ಮೇಲೆ ಆಕ್ರಮಣ ನಡೆಸುವ ಮೂಲಕ ತುರ್ತುಪರಿಸ್ಥಿತಿಯನ್ನು ನೆನಪಿಸಿದೆ ”. ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವಢೇಕರ್ “ ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದಿರುವ ಆಕ್ರಮಣವನ್ನು ನಾವು ಖಂಡಿಸುತ್ತೇವೆ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇದೇ ರೀತಿ ನಡೆಯುತ್ತಿದ್ದುದನ್ನು ಇದು ನೆನಪಿಸುತ್ತದೆ.”
ಈ ಮೂರೂ ಅಣಿಮುತ್ತುಗಳನ್ನು ಕೇಳಿಸಿಕೊಳ್ಳುವ ಕಿವಿಗಳೇ ಧನ್ಯ ಅಲ್ಲವೇ ? ನಿಜ, ಮಹಾರಾಷ್ಟ್ರ ಪೊಲೀಸರ ನಡೆ ಅಕ್ಷಮ್ಯ, ಸರ್ಕಾರದ ಧೋರಣೆ ಖಂಡನಾರ್ಹ ಆದರೆ ಶಿವಸೇನೆ ಪಳಗಿರುವ ಗರಡಿಯಲ್ಲೇ ಈ ಮೂವರೂ ನಾಯಕರು ಪಳಗಿರುವುದಲ್ಲವೇ ? ಅರ್ನಾಬ್ ಗೋಸ್ವಾಮಿಯ ವಿರುದ್ಧ ಗಂಭೀರ ಆರೋಪಗಳು ಇದ್ದುದೇ ಆದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಇದು ಶಿವಸೇನೆಯ ಸಂಸ್ಕೃತಿಗೆ ಹೊರತಾದದ್ದು ಎನ್ನುವುದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ ? ಇಂದು ಶಿವಸೇನೆ ಕಾಂಗ್ರೆಸ್ ಬಾಹುಗಳಲ್ಲಿದೆ. ಆದರೆ ಹುಟ್ಟಿದ ದಿನದಿಂದಲೂ ಬೆಳೆದಿದ್ದು ಸಂಘಪರಿವಾರದ ಮಡಿಲಲ್ಲೇ ಅಲ್ಲವೇ ?
ಈ ಗೋಸುಂಬೆಗಳನ್ನು ಬದಿಗಿಟ್ಟು ಭಾರತದ ಪ್ರಸ್ತುತ ಸನ್ನಿವೇಶವನ್ನು ಒಮ್ಮೆ ಗಮನಿಸೋಣ. ಇತ್ತೀಚೆಗೆ ತಾನೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಪವರ್ ಟಿವಿ ವಾಹಿನಿಯನ್ನು ಮಾನ್ಯ ಮುಖ್ಯಮಂತ್ರಿಯವರು ಮುಚ್ಚಿಸಿಬಿಟ್ಟರು. ಈಗ ಮತ್ತೊಂದು ಹೆಸರಿನಲ್ಲಿ ಆರಂಭವಾಗಿದ್ದರೂ ಬಾಯಿ ಮುಚ್ಚಿಸಿದಂತೆ ಕಾಣುತ್ತಿದೆ.
ಮಾಧ್ಯಮ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಇವೆಲ್ಲವನ್ನೂ ಗೌರವಿಸುತ್ತಲೇ ಅರ್ನಾಬ್ ಅವರನ್ನು ಬಂಧಿಸಿದ ರೀತಿಯನ್ನು ಖಂಡಿಸೋಣ. ಆದರೆ ದೇಶಾದ್ಯಂತ ಪತ್ರಕರ್ತರ ವಿರುದ್ಧ ರಣಬೇಟೆಯಾಡಿದ ಕೇಂದ್ರ ಸರ್ಕಾರದ ಕ್ರಮಗಳನ್ನು ಮೇಜು ಕುಟ್ಟಿ ಸ್ವಾಗತಿಸುತ್ತಾ ಭಟ್ಟಂಗಿಯಂತೆ ಪ್ರಭುತ್ವದ ಹೆಜ್ಜೆಗೆ ಗೆಜ್ಜೆಯಾಗಿ, ತಮ್ಮ ಪತ್ರಿಕಾ ವೃತ್ತಿಧರ್ಮವನ್ನೂ ಮರೆತು ವರ್ತಿಸಿದ ಅರ್ನಾಬ್ ಗೋಸ್ವಾಮಿಯಾಗಲೀ ಅಥವಾ ಇತರ ಬಿಜೆಪಿ ನಾಯಕರಾಗಲೀ ಈ ಪ್ರಕರಣದ ಬಗ್ಗೆ ಕನಿಷ್ಟ ಮಾತನಾಡುವ ನೈತಿಕತೆಯನ್ನು ಉಳಿಸಿಕೊಂಡಿದ್ದಾರೆಯೇ ? ನಮ್ಮನ್ನೇ ಪ್ರಶ್ನಿಸಿಕೊಳ್ಳೋಣ.
ಅರ್ನಾಬ್ ಗೋಸ್ವಾಮಿಯನ್ನು ಮೂರು ವರ್ಷದ ಹಿಂದಿನ ಆತ್ಮಹತ್ಯೆಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಿರುವುದೇ ಮಹಾರಾಷ್ಟ್ರ ಸರ್ಕಾರದ ಘೋರ ಅಪರಾಧ ಎಂದಾದರೆ, ಸುಮ್ಮನೆ ಗುಜರಾತ್ನ ಹಿರಿಯ ಅಧಿಕಾರಿ ಸಂಜೀವ್ ಭಟ್ ಅವರನ್ನು ನೆನೆಯಿರಿ. ಮೂವತ್ತು ವರ್ಷದ ಹಿಂದಿನ , ಮುಚ್ಚಿಹೋಗಿದ್ದ ಪ್ರಕರಣದ ಕಡತವನ್ನು ಹೆಕ್ಕಿ ತೆಗೆದು ಅವರನ್ನು ಬಂಧಿಸಿದಾಗ ಭಾರತದ ಎಷ್ಟು ಸುದ್ದಿಮನೆಗಳು ವಿರೋಧಿಸಿದ್ದವು ? ಮಾನ್ಯ ಗೋಸ್ವಾಮಿ ಎಲ್ಲಿದ್ದರು ಸ್ವಾಮಿ ? ಭಾರತದ ಜನಸಾಮಾನ್ಯರು ಮಾಸ್ಕ್ ಧರಿಸುತ್ತಿರುವುದು ಕೊರೋನಾ ಬಂದ ನಂತರ. ಭಾರತದ ಬಹುತೇಕ ಸುದ್ದಿಮಾಧ್ಯಮಗಳು 2014ರಿಂದಲೇ ಮಾಸ್ಕ್ ಧರಿಸಲಾರಂಭಿಸಿವೆ.
ಸ್ವತಂತ್ರ ಭಾರತದ ಕಾನೂನು ವ್ಯವಸ್ಥೆಯಲ್ಲಿ ಎಫ್ಐಆರ್ ಎಂಬ ಪದ ಜನಸಾಮಾನ್ಯರ ಅರಿವಿಗೆ ನಿಲುಕದಷ್ಟು ಅಪರೂಪವಾಗಿತ್ತು. ಯಾವುದೋ ಗಂಭೀರ ಅಪರಾಧಗಳಲ್ಲಿ ಮಾತ್ರ ಈ ಪದ ಕೇಳಿಬರುತ್ತಿತ್ತು. ಆದರೆ ಕಳೆದ ಆರು ವರ್ಷಗಳಲ್ಲಿ ಎಫ್ಐಆರ್ ಎನ್ನುವುದು ಸಂತೆಯಲ್ಲಿನ ಸರಕಿನಂತೆ ಕಾಣುತ್ತಿದೆ.
ದೇಶದ್ರೋಹದ ಆರೋಪ ಮತ್ತು ಎಫ್ಐಆರ್ ಅಧಿಕಾರಸ್ಥರ ಬತ್ತಳಿಕೆಯಲ್ಲಿರುವ ಸುಲಭ ಅಸ್ತ್ರಗಳಾಗಿರುವುದರಿಂದಲೇ ಕೊರೋನಾ ಸಂದರ್ಭದಲ್ಲೇ 55 ಪತ್ರಕರ್ತರ ವಿರುದ್ಧ 22 ಎಫ್ಐಆರ್ ದಾಖಲಿಸಲಾಗಿದೆ. ಮಾರ್ಚ್ 25 ರಿಂದ ಜೂನ್ 30ರ ಅವಧಿಯಲ್ಲಿ ಕೋವಿದ್19 ವರದಿಗಳಿಗೆ ಸಂಬಂಧಪಟ್ಟಂತೆ ಇಷ್ಟು ಎಫ್ಐಆರ್ ಗಳನ್ನು ಪತ್ರಕರ್ತರ ವಿರುದ್ಧ ದಾಖಲಿಸಲಾಗಿದೆ.
ದ ವೈರ್ ಪತ್ರಿಕೆಯ ಸಿದ್ಧಾರ್ಥ ವರದರಾಜನ್, ವಿನೋದ್ ದುವಾ, ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ಮಾಜಿ ನಿರ್ದೇಶಕ ಮತ್ತು ಅಂಕಣಕಾರ ಆಕರ್ ಪಟೇಲ್, ಸ್ಕ್ರೋಲ್ ಪತ್ರಿಕೆಯ ಸುಪ್ರಿಯಾ ಶರ್ಮ ಇವರು ಕೇಂದ್ರ ಸರ್ಕಾರದ ಪ್ರಹಾರಕ್ಕೆ ಬಲಿಯಾಗುತ್ತಿದ್ದಾರೆ. ಸುಪ್ರಿಯಾ ಶರ್ಮ ಅವರ ಅಪರಾಧ ಏನು ಗೊತ್ತೇ ? ಪ್ರಧಾನಮಂತ್ರಿ ಮೋದಿ ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ದತ್ತುಪಡೆದಿರುವ ವಾರಣಾಸಿಯ ದೊಹಾರಿ ಗ್ರಾಮದಲ್ಲಿನ ಜನಜೀವನವನ್ನು ತೆರೆದಿಟ್ಟಿದ್ದು. ಉತ್ತರಪ್ರದೇಶದಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ವರದಿ ಮಾಡಿದ್ದ ಪವನ್ ಕುಮಾರ್ ಜೈಸ್ವಾಲ್ ಮತ್ತೋರ್ವ ಎಫ್ಐಆರ್ ಬಲಿ.
ಕೊರೋನಾ ಸಂದರ್ಭದಲ್ಲಿ ಮಹಾರಾಷ್ಟ್ರದ ವಲಸೆ ಕಾರ್ಮಿಕರ ಸಮಸ್ಯೆಗೆ ಕೋಮು ಬಣ್ಣ ನೀಡಿದ್ದ ಅರ್ನಾಬ್ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಮುಂಬೈ ಹೈಕೋರ್ಟ್ ಕೃಪೆಯಿಂದ ರದ್ದಾಗಿದೆ. ಸೂಫಿ ಸಂತ ಮೊಯಿನುದ್ದಿನ್ ಕ್ರಿಸ್ಟಿಯನ್ನು ದರೋಡೆಕೋರ ಎಂದು ಅವಮಾನಿಸಿದ ಅಮೀಶ್ ದೇವಗನ್ ಸಹ ಕೋರ್ಟ್ ಕೃಪೆಗೆ ಪಾತ್ರರಾಗಿದ್ದಾರೆ. ಆದರೆ ತಮ್ಮ ಪತ್ರಿಕಾ ಧರ್ಮ ಪಾಲಿಸುತ್ತಾ ಜನಸಾಮಾನ್ಯರಿಗೆ ಸತ್ಯ ಹೇಳುವ ಆಕರ್ ಪಟೇಲ್, ವಿನೋದ್ ದುವಾ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ.
ಅರ್ನಾಬ್ ಗೋಸ್ವಾಮಿ ಬಂಧನದ ವೈಖರಿಯನ್ನು ಖಂಡಿಸೋಣ. ಬಂಧನಕ್ಕೆ ಕಾರಣಗಳಿದ್ದರೆ ಬಿಡುಗಡೆಗೂ ಕಾರಣಗಳಿರುತ್ತವೆ. ಎಲ್ಲವೂ ಅಧಿಕಾರ ಪೀಠದ ಕೃಪೆಯನ್ನು ಆಧರಿಸಿರುತ್ತದೆ. ಯಾವುದೇ ಆರೋಪ ಇಲ್ಲದೆ, ವಾರಂಟ್ ಇಲ್ಲದೆ, ಏಕಾಏಕಿ ಬಂಧಿಸುವುದು ಘೋರ ಅಪರಾಧವೇನೋ ಹೌದು. ಇದು ಕಾನೂನು, ಸಂವಿಧಾನ, ಪೊಲೀಸ್ ನಿಯಮಾವಳಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಮಾನ್ಯತೆ ನೀಡುವವರಿಗೆ ಅನ್ವಯಿಸುವ ಮಾತು.
ಭೀಮಾ ಕೊರೆಗಾಂವ್ ಪ್ರಕರಣದ ಹಿನ್ನೆಲೆಯಲ್ಲಿ ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿದ ರೀತಿ ಜಗಜ್ಜಾಹೀರಾಗಿದೆ. ಈ ಬಂಧನದ ಸಮಯದಲ್ಲಿ ಗೋಸ್ವಾಮಿಯವರ ಕೂಗುಮಾರಿ ಸುದ್ದಿವಾಚನವನ್ನು ಪ್ರಜ್ಞೆ ಇರುವವರು ಮರೆತಿರಲಾರರು. ಇತ್ತೀಚೆಗೆ 83ರ ವೃದ್ಧ, ಸಾಮಾಜಿಕ ಕಾರ್ಯಕರ್ತರಾದ ಸ್ಟಾನ್ ಸ್ವಾಮಿಯವರನ್ನು ಬಂಧಿಸಿದಾಗ, ಸುಧಾ ಭರದ್ವಾಜ್, ವರಾವರರಾವ್, ಉಮರ್ ಖಲೀದ್, ಗರ್ಭಿಣಿ ಮಹಿಳೆ ಸಫೂರ ಜರ್ಗರ್ ಅವರನ್ನು ಬಂಧಿಸಿದಾಗ ಗೋಸ್ವಾಮಿಯಾಗಲೀ, ತುರ್ತುಪರಿಸ್ಥಿತಿಯಲ್ಲಿ ಹೋರಾಡಿದ, ಇಂದಿನ ಟ್ವಿಟರ್ ವೀರರಾಗಲೀ ಖಂಡಿಸಿದ್ದರೇ ? ಪ್ರಭುತ್ವ ಅಥವಾ ಆಡಳಿತ ವ್ಯವಸ್ಥೆಯ ಒಂದು ಅಂಗ ಯಾರನ್ನೋ ನಗರ ನಕ್ಸಲರು ಎಂದು ಹೇಳಿಬಿಟ್ಟರೆ ಅವರನ್ನು ಯಾವ ಹೊತ್ತಿನಲ್ಲಾದರೂ, ಯಾವ ರೀತಿಯಲ್ಲಾದರೂ ಬಂಧಿಸಬಹುದು ಎಂದು ಸಂವಿಧಾನದಲ್ಲಿ ಹೇಳಲಾಗಿದೆಯೇ ?
ಇದು ವ್ಯಕ್ತಿ ಅಥವಾ ಸಂಸ್ಥೆಯ ಪ್ರಶ್ನೆಯಲ್ಲ. ಮೌಲ್ಯಗಳ ಪ್ರಶ್ನೆ. ಗೋಸ್ವಾಮಿ ಯಾವ ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ, ಪ್ರತಿನಿಧಿಸುತ್ತಿದ್ದಾರೆ ? ಇವರನ್ನೇ ಅನುಕರಿಸಿ, ಅನುಸರಿಸುವ ಕನ್ನಡದ ಕೂಗುಮಾರಿ ಸುದ್ದಿಮನೆಗಳು ಯಾವ ಸಂಸ್ಕೃತಿಯನ್ನು ಅನುಸರಿಸುತ್ತಿವೆ ? ತುರ್ತುಪರಿಸ್ಥಿತಿಯಲ್ಲಿ ತಾವು ಪ್ರಜಾತಂತ್ರದ ಉಳಿವಿಗಾಗಿ ನಡೆಸಿದ ಹೋರಾಟವನ್ನು ಹೆಮ್ಮೆಯಿಂದ ನೆನೆಯುವ ಸಚಿವರು, ರಾಜಕೀಯ ನಾಯಕರು ಯಾವ ಸಂಸ್ಕೃತಿ ಅನುಸರಿಸುತ್ತಿದ್ದಾರೆ ?
ಓರ್ವ ಗೋಸ್ವಾಮಿಯ ಬಂಧನದಿಂದ ತುರ್ತುಪರಿಸ್ಥಿತಿಯ ಛಾಯೆ ಕವಿದಂತೆ ಭಾವಿಸುವ ಕೇಂದ್ರ ಸಚಿವರಿಗೆ ಒಂದು ವರ್ಷದ ಕಾಲ ಗೃಹಬಂಧನದಲ್ಲಿದ್ದ ಕಾಶ್ಮೀರದ ಸಮಸ್ತ ಜನತೆ ಹೇಗೆ ಕಂಡಿದ್ದರು ? ಯಾವುದೇ ಅಪರಾಧ ಮಾಡದಿದ್ದರೂ ಸೆರೆಮನೆಯಲ್ಲಿರುವ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಹೇಗೆ ಕಾಣುತ್ತಿದ್ದಾರೆ ?
ನಡೆದಾಡುವ ಸ್ಥಿತಿಯಲ್ಲೂ ಇಲ್ಲದ ಸಾಯಿಬಾಬಾ ಅವರಂತಹ ವಿದ್ವಾಂಸರನ್ನು ಉಗ್ರಗಾಮಿ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿ, ಜಾಮೀನು ಸಹ ನೀಡದೆ ಇರುವ ಆಡಳಿತ ವ್ಯವಸ್ಥೆಗೆ ಮತ್ತು ಅಧಿಕಾರಪೀಠದ ವಾರಸುದಾರರಿಗೆ ಗೋಸ್ವಾಮಿಯ ಬಂಧನ ತುರ್ತುಪರಿಸ್ಥಿತಿಯನ್ನು ನೆನಪಿಸುವುದೆಂದರೆ, ಭಾರತ ಮೌಲಿಕವಾಗಿ, ನೈತಿಕವಾಗಿ ಹಾದಿ ತಪ್ಪಿದೆ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
“ ಬಂಧಿಸಲಿ ಬಿಡಿ, ತಪ್ಪು ಮಾಡದಿದ್ದರೆ ಬಿಡುಗಡೆಯಾಗುತ್ತಾರೆ,,,,,” ಮಧ್ಯಮ ವರ್ಗಗಳ ಹಿತವಲಯದಲ್ಲಿ, ಬೌದ್ಧಿಕ ವಲಯದಲ್ಲಿ, ಬುದ್ಧಿಜೀವಿಗಳಲ್ಲದವರಲ್ಲಿ ಮತ್ತು ವಂದಿಮಾಗಧ ಸುದ್ದಿಮನೆಗಳಲ್ಲಿ ಕೇಳಿಬರುವ ಈ ಹೇಳಿಕೆ ಅರ್ನಾಬ್ ಗೋಸ್ವಾಮಿಗೂ ಅನ್ವಯಿಸುತ್ತದೆ. ಅವರಿಗೆ ಪ್ರಭುತ್ವವೂ ನೆರವಾಗಬಹುದು, ನ್ಯಾಯಾಂಗವೂ ನೆರವಾಗಬಹುದು.
ಇಂದಿನ ಭಾರತ ಕೇವಲ ಸಾಂವಿಧಾನಿಕ ಮೌಲ್ಯಗಳನ್ನು ಮಾತ್ರ ಕಳೆದುಕೊಳ್ಳುತ್ತಿಲ್ಲ, ಪ್ರಜಾತಂತ್ರ ಮೌಲ್ಯಗಳನ್ನೂ ಕಳೆದುಕೊಂಡಿದೆ. ಈ ಪ್ರಜ್ಞೆ ತಮ್ಮೊಳಗಿದ್ದು, ತಾವು ಪ್ರತಿನಿಧಿಸುವ “ಪತ್ರಿಕೋದ್ಯಮ ಅಥವಾ ಮಾಧ್ಯಮ ” ಎನ್ನುವ ಮೌಲ್ಯಯುತ ಸ್ತಂಭಕ್ಕೆ ಬದ್ಧತೆಯಿಂದ ನಡೆದುಕೊಂಡಿದ್ದರೆ ಬಹುಶಃ ಅರ್ನಾಬ್ ಗೋಸ್ವಾಮಿ ಜನತೆಯ ಅನುಕಂಪಕ್ಕೆ ಅರ್ಹರಾಗುತ್ತಿದ್ದರೇನೋ !
ನೆನ್ನೆ ಬಿಜೆಪಿ-ಶಿವಸೇನೆ ಮಾಡಿರುವುದನ್ನೇ ಇಂದು ಶಿವಸೇನೆ-ಕಾಂಗ್ರೆಸ್ ಸರ್ಕಾರ ಮಾಡಿದೆ. ಇದು ಒಂದು ಸರ್ಕಾರ ಅಥವಾ ಒಬ್ಬ ಮುಖ್ಯಮಂತ್ರಿಯ ಪ್ರಶ್ನೆಯಲ್ಲ.. ಮೌಲ್ಯಗಳ ಪ್ರಶ್ನೆ. ಮೌಲ್ಯ ಎಂದರೇನು ? ಇದು ಇಂದಿನ ಸಂದರ್ಭದಲ್ಲಿ ಕಾಡಬೇಕಾದ ಗಹನವಾದ ಪ್ರಶ್ನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ5 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ಅಂಕಣ3 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ5 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ4 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ5 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂತರಂಗ1 hour agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

