ನೆಲದನಿ
ನುಡಿಯ ಒಡಲು – 21 | ಮಾತು ಮತ್ತು ನೋಟಗಳ ವಿಭಜನೆ: ಸಂಕಥನಾ ವಿಶ್ಲೇಷಣೆ
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕ, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮಾತು ಮತ್ತು ನೋಟಗಳ ನಡುವಣ ನಂಟನ್ನು ಕುರಿತು ಸಾಕಷ್ಟು ಚಿಂತನೆ, ಚರ್ಚೆಗಳು ಜಗತ್ತಿನಾದ್ಯಂತ ನಡೆಯುತ್ತಿವೆ. ಇವತ್ತಿಗೂ ಈ ಚರ್ಚೆಗಳು ಅತ್ಯಂತ ಪ್ರಸ್ತುತವಾಗಿಯೇ ಇರುತ್ತವೆ. ಕಾರಣವೇನಂದರೆ, ಮಾತನ್ನು ಕುರಿತು ನಡೆಯುತ್ತಿರುವ ಓದುಗಳು ಇವತ್ತಿಗೂ ನಿರಂತರವಾಗಿದ್ದರೂ, ಮಾತಿನ ಇಡೀ ಸ್ವರೂಪವನ್ನು ಅರಿಯಲು ನಮಗೆ ಸಾಧ್ಯವಾಗಿಲ್ಲ.
ಅದೇ ರೀತಿಯಾಗಿ ಮಾತು ಮತ್ತು ಲೋಕನೋಟಗಳ ನಡುವಣ ಸಂಬಂಧವನ್ನು ಕುರಿತು ಈಗಲೂ ನಡೆಯುತ್ತಿರುವ ಚರ್ಚೆಗಳಿಗೆ ಇನ್ನೂ ಯಾವುದೇ ಬಗೆಯ ನಿಚ್ಚಳವಾದ ತಾತ್ವಿಕ ವಿನ್ಯಾಸಗಳು ರೂಪುಗೊಂಡಿಲ್ಲ. ಹಾಗಾಗಿ ನುಡಿ, ಕಾಲ, ದೇಶ, ವ್ಯಕ್ತಿ ಮತ್ತು ಸಮೂಹಗಳ ನಡುವಿನ ಅಂತರ್ಸಂಬಂಧ ಗತಿತಾರ್ಕಿಕವಾದದ್ದು ಎಂದು ಕೆಲವು ಆಲೋಚನಾ ಕ್ರಮಗಳು ಹೇಳುತ್ತವೆ.
ಮತ್ತೆ ಇನ್ನೂ ಕೆಲವು ಮಾದರಿಗಳು ವಾದಿಸುವಂತೆ, ಈ ಸಂಬಂಧವು ಕೇವಲ ಭಾಷಿಕ ಕೇಂದ್ರಿತವಾದದ್ದು ಎಂದು ನಂಬುತ್ತವೆ. ಈ ಎರಡೂ ವಿನ್ಯಾಸಕ್ಕೆ ಹೊರತಾದ ಮಾದರಿಯೊಂದು ಇವತ್ತು ಅತ್ಯಂತ ಪ್ರಬಲವಾಗಿ ಬೆಳೆದಿದೆ. ಈ ಮಾದರಿಯ ಪ್ರಕಾರ ನುಡಿಯೆಂಬುದು ಮೂಲಭೂತವಾಗಿ ಗ್ರಹಿಕೆಗೆ ಸಂಬಂಧಿಸಿದ ವಿದ್ಯಮಾನ (ಕಾಗ್ನಿಟಿವ್ ಫಿನಾಮಿನಾನ್) ಆಗಿರುತ್ತದೆ. ಈ ತಿಳಿವಿನ ಪ್ರಕಾರ ನುಡಿ ಮತ್ತು ನೋಟಗಳ ನಡುವಣ ನಂಟಸ್ತಿಕೆ ವಿಶ್ವಾತ್ಮಕವಾದ ವಿನ್ಯಾಸವನ್ನು ಹೊಂದಿರುತ್ತದೆ ಎಂದಾಗುತ್ತದೆ.
ಅಂದರೇನಾಯ್ತು, ಕಾಲ, ದೇಶ ಹಾಗೂ ವ್ಯಕ್ತಿ ನೆಲೆಗಳಲ್ಲಿ ನುಡಿಯ ಮೂಲಕ ರೂಪುಗೊಳ್ಳುವ ಯಾವುದೇ ನೋಟಕ್ರಮವು ಕೂಡ ವಿಶ್ವಾತ್ಮಕ ಆಗಿರುತ್ತದೆ ಎಂದಾಯ್ತು. ಒಂದು ಪಕ್ಷ ಈ ನಿಲವೇ ದಿಟವಾಗಿದ್ದರೆ, ಮಾತು ಮತ್ತು ನೋಟಕ್ರಮಗಳ ನಡುವಿನ ವಿಭಜನೆ ಅತ್ಯಂತ ಸರಳವಾಗಿ ಕಾಣುತ್ತದೆ. ಅಂದರೆ ಮನುಷ್ಯನ ಗ್ರಹಿಕೆಯೆಂಬುದು ಜಗತ್ತಿನಾದ್ಯಂತ ಒಂದೇ ಬಗೆಯಲ್ಲಿ ನೆಲೆಪಡೆಯುತ್ತದೆ ಎಂದಾಗುತ್ತದೆ.
ಇಲ್ಲ ಈ ವಿಭಜನೆ ಇಷ್ಟೊಂದು ಸರಳವಾಗಿರಲು ಸಾಧ್ಯವಿಲ್ಲ ಎನ್ನುವುದನ್ನೂ ಇದೇ ಆಲೋಚನಾ ಕ್ರಮವೇ ತಿಳಿಸುತ್ತದೆ. ಅದೇನೆಂದರೆ, ವಿಶ್ವಾತ್ಮಕತೆ ಎಂಬುದು ಕೇವಲ ತತ್ವಗಳ (ಪ್ರಿನ್ಸಿಪಲ್ಸ್) ನೆಲೆಗೆ ಮಾತ್ರ ಸಂಬಂಧಿಸಿರುತ್ತದೆ ಹೊರತು ಅದು ವಿಕಲ್ಪಗಳಿಗೂ (ಪ್ಯಾರಮೀಟರ್ಸ್) ಸಂಬಂಧಿಸಲಾರದು ಎನ್ನುವ ತಿಳುವಳಿಕೆಯೂ ಕೂಡ ಈ ವಿನ್ಯಾಸದೊಳಗೆಯೇ ನಮಗೆ ದೊರೆಯುತ್ತದೆ.
ಅಂದರೆ ಮನುಷ್ಯ ಸಹಜವಾಗಿರುವ ಎಲ್ಲ ವಿದ್ಯಮಾನಗಳಲ್ಲಿಯೂ ಕೆಲವು ಸಮಾನವಾದ ರಚನೆಗಳು ಇರುವುದನ್ನು ಈ ತತ್ವಗಳು ತಿಳಿಸುತ್ತವೆ. ಆದರೆ ನುಡಿ, ಕಾಲ, ದೇಶ ಹಾಗೂ ವ್ಯಕ್ತಿಗಳ ನಡುವೇ ಪ್ರತ್ಯೇಕವಾದ, ವಿಶಿಷ್ಟವಾದ ಇಲ್ಲವೇ ದೇಶೀಯವಾದ ರಾಚನಿಕ ವಿನ್ಯಾಸಗಳು ಹೇಗೆ ಕಾರಣವಾಗುತ್ತವೆ ಎಂಬ ತಿಳುವಳಿಕೆಯನ್ನು ಈ ವಿಕಲ್ಪಗಳು ಮನವರಿಕೆ ಮಾಡುತ್ತವೆ. ಹಾಗಾಗಿ ನುಡಿ, ಆಲೋಚನೆ, ಸಂಸ್ಕೃತಿ, ವ್ಯಕ್ತಿ, ದೇಶ ಹಾಗೂ ಸಮಾಜಗಳ ನಡುವಣ ವಿಭಜನೆಯನ್ನು ಅರಿಯುವುದಕ್ಕೆ ನಮಗೆ ಮುಖ್ಯವಾಗಿ ಇಂತಹ ವಿಕಲ್ಪಗಳು ಸಹಾಯಕ್ಕೆ ಬರುತ್ತವೆ.
ನುಡಿ, ಮನಸ್ಸು ಹಾಗೂ ಸಮಾಜಗಳ ನಡುವಣ ನಂಟಸ್ತಿಕೆ ಎಷ್ಟೊಂದು ಸಂಕೀರ್ಣವಾದ ಸಂಗತಿ ಎಂಬುದನ್ನು ಈ ನಿಲುವುಗಳು ಸೂಚಿಸುತ್ತವೆ. ಮಾತು ಮತ್ತು ನೋಟಗಳ ನಡುವಣ ನಂಟಸ್ತಿಕೆ ಇವತ್ತು ಕೇವಲ ಸಾಮಾಜಿಕ ವರ್ತನೆಗೆ ಹಾಗೂ ಭಾಷಿಕ ರಚನೆಗೆ ಮಾತ್ರ ಸೀಮಿತಗೊಂಡಿಲ್ಲ. ಇದು ಮಾನಸಿಕ ವಿಕಾಸ ಹಾಗೂ ವ್ಯಕ್ತಿಯ ಮನಸ್ಸಿನಲ್ಲಿ ಜೈವಿಕವಾಗಿ ಹಾಗೂ ಸಹಜವಾಗಿಯೇ ಅಂತಸ್ಥವಾಗಿರುವ ಭಾಷಿಕ ವಿನ್ಯಾಸಕ್ಕೂ ಪೂರಕವಾಗಿ ಈ ನಂಟಸ್ತಿಕೆ ಹರಡಿಕೊಂಡಿರುತ್ತದೆ.
ಇದು ಬಹುತೇಕವಾಗಿ ರೂಪಕ ಇಲ್ಲವೇ ರೂಪಕಾತ್ಮಕ ನೆಲೆಯನ್ನು ಹೊಂದಿರುತ್ತದೆ. ಎಲ್ಲ ಸಮುದಾಯದ ಸದಸ್ಯರು ನೋಟಕ್ರಮಗಳಲ್ಲಿ ಬದುಕುವುದಷ್ಟೆಯಲ್ಲ, ಬದಲಾಗಿ ಈ ನೋಟಕ್ರಮಗಳ ರಚನೆಗಳನ್ನು ಕರಗತ ಮಾಡಿಕೊಳ್ಳುವ ಕೌಶಲಗಳನ್ನೂ ಹೊಂದಿರುತ್ತಾರೆ. ಆದ್ದರಿಂದ ಈ ವಸ್ತುವಿನ್ಯಾಸವು ಆಯಾ ನುಡಿಗಳಲ್ಲಿಯೇ ಪ್ರತಿಫಲನವಾಗುತ್ತದೆ. ನುಡಿಯೊಳಗೆಯೇ ಇಂತಹವೊಂದು ಹದಬೆರಕೆಯ ಆಯಾಮವಿರುತ್ತದೆ.
ನುಡಿಯಲ್ಲಿ ನಡೆಯುವ ಇಂತಹ ಹದಬೆರಕೆಯ ನೆಲೆಯನ್ನು ಕುರಿತು ಮಾತ್ನಾಡುವಾಗ, ನಮಗೆ ತೋರುವ ಪ್ರಮುಖ ಸಂಗತಿಯೇನಂದರೆ, ನುಡಿಯ ಕಾರಣದಿಂದಲೇ, ಮನುಷ್ಯರಿಗೆ ಇಂತಹವೊಂದು ಹದಬೆರಕೆಯ ಕಸುವು ನಮ್ಮ ಜೈವಿಕ ವಿನ್ಯಾಸದಲ್ಲಿಯೇ ನೆಲೆಗೊಂಡಿರುವುದು ಗೊತ್ತಾಗುತ್ತದೆ. ಇದೇ ಸನ್ನಿವೇಶದಲ್ಲಿಯೇ ಗೋಚರಿಸುವ ಮತ್ತೊಂದು ಸುಳಿವು ಏನೆಂದರೆ, ಬಹು ಬಗೆಯ ನೋಟಕ್ರಮಗಳನ್ನು ಪಡೆಯುವ ಅವಕಾಶವೂ ನಮಗೆ ಸಹಜವಾಗಿಯೇ ನಮ್ಮ ನಮ್ಮ ನುಡಿ ಪರಿಸರಗಳಲ್ಲಿ ಸಿಗುತ್ತವೆ.
ಹಾಗೇನೆ ನಮಗೆ ಬೇಕಾಗಿರುವ ನೋಟಕ್ರಮಗಳ ಇಲ್ಲವೇ ಪರಿಕಲ್ಪನೆಗಳ ಪ್ರಮಾಣದಲ್ಲಿ ನಮ್ಮದೆಯಾದ ಆಯ್ಕೆಗಳಿರುವುದು ಕೂಡ ವಿಶೇಷ. ಅಂದರೆ ಆಯಾ ನುಡಿ ಪರಿಸರದಲ್ಲಿ ಬದುಕುವ ಪ್ರತಿಯೊಬ್ಬರು ಕೂಡ ಸಮ ಪ್ರಮಾಣದ ಗ್ರಹಿಕೆಗಳನ್ನು ಪಡೆಯಲೇ ಬೇಕೆಂಬ ಯಾವುದೇ ಒತ್ತಾಯವಿರುವುದಿಲ್ಲ. ಹಾಗಾಗಿ ತಮ್ಮ ಬದುಕಿಗೆ ಅತ್ಯಂತ ಅಗತ್ಯವೆನಿಸುವ ನೋಟಕ್ರಮಗಳನ್ನು ಮಾತ್ರ ಪಡೆಯುವ ಈ ವಿನ್ಯಾಸವೇ ಮಾತು ಮತ್ತು ನೋಟಗಳ ನಡುವಣ ವಿಭಜನೆಗೆ ಕಾರಣವಾಗುತ್ತದೆ.
ಸಾಮಾಜಿಕ ಸಂವಹನವು ಲೀಲಾಜಾಲವಾಗಿ ಹಾಗೂ ಸಲೀಸಾಗಿ ನಡೆಯುವುದಕ್ಕೆ ಈ ನಿಲುವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇದರೊಟ್ಟಿಗೆ, ನೋಟಕ್ರಮಗಳನ್ನು ಭಾಷಿಕವಾಗಿ ವರ್ಗೀಕರಣಗೊಳಿಸುವ, ಆ ಇಡೀ ರಾಚನಿಕ ಪ್ರಕ್ರಿಯೆಯಲ್ಲಿಯೇ ಕ್ರಾಸ್ಲಿಂಗ್ವಿಸ್ಟಿಕ್ ವ್ಯತ್ಯಾಸಗಳು ಹೆಚ್ಚು ಪ್ರಬಲವಾಗಿರುತ್ತವೆ ಎಂಬುದು ಗಮನಾರ್ಹ ಸಂಗತಿ. ಹಾಗೂ ನೋಟಕ್ರಮಗಳ ಪ್ರತಿನಿಧಿಕರಣದಲ್ಲಿಯೂ ಈ ಕ್ರಾಸ್ಲಿಂಗ್ವಿಸ್ಟಿಕ್ ಮಾದರಿಗಳು ಅತ್ಯಂತ ನಿಚ್ಚಳವಾಗಿಯೇ ಕಾಣುತ್ತವೆ ಅನ್ನುವುದನ್ನೂ ಕೂಡ ಇಲ್ಲಿ ಮರೆಯಲು ಸಾಧ್ಯವಿಲ್ಲ.
ದಿಟ, ಈ ಕ್ರಾಸ್ಲಿಂಗ್ವಿಸ್ಟಿಕ್ ಮಾದರಿಗಳೇನು ನಮ್ಮಲ್ಲಿ ಯಾವುದೇ ಬಗೆಯ ಬೆರಗನ್ನುಂಟು ಮಾಡಲಾರವು. ಆದರೆ, ನೋಟಕ್ರಮಗಳಿಗೆ ನಾವು ಕಲ್ಪಿಸಿಕೊಳ್ಳಬಹುದಾದ ಯಾವುದೇ ಕಣ್ನೋಟಗಳ ವಿಧಾನಗಳ ಮೇಲೆ ಮನುಷ್ಯನ ನರತಂತು ವಿನ್ಯಾಸವು ಒಂದು ಬಗೆಯ ಒತ್ತಾಯವನ್ನುಂಟು ಮಾಡುತ್ತದೆ ಎಂಬ ದಿಟವನ್ನು ಅರಿಯಲು ಇವುಗಳು ಪೂರಕವಾಗಿರುತ್ತವೆ.
ನಮ್ಮ ಲೋಕಗ್ರಹಿಕೆಗಳನ್ನು ಕರಗತಗೊಳಿಸುವ ಸಂಕೀರ್ಣ ಭಾಷಿಕ ಸೂಚಿಗಳು, ವ್ಯವಸ್ಥೆಗಳು ಮತ್ತು ಉನ್ನತ ಮಟ್ಟದ ಸಾಹಿತ್ಯಕ ಹಾಗೂ ಕಲಾತ್ಮಕ ಚಳಕಗಳು ಮುಖ್ಯವಾಗಿ ಪ್ರಾಥಮಿಕ ನೋಟಗಳು ಹಾಗೂ ಮೂಲ ಅನುಭವವನ್ನು ನೆಲೆಯಾಗಿಸಿಕೊಂಡು ಮೈಪಡೆಯುತ್ತವೆ.
ನಾವು ಸಾಮೂಹಿಕವಾಗಿ ಬದುಕು ನಡೆಸುವ ಸನ್ನಿವೇಶದಲ್ಲಿ, ಯಾವುದೇ ದೇಶ ಇಲ್ಲವೇ ಗ್ರಹಿಕೆಯ ರಚನೆಗೆ ಸಂಬಂಧಿಸಿದ ಒಂದು ನಿರ್ಧಿಷ್ಟವಾದ ಹಾಗೂ ಏಕೈಕವಾದ ಇಲ್ಲವೇ ನಮ್ಮದೆಯಾದ ಒಂದು ನೋಟಕ್ರಮವನ್ನು ನಾವು ಹೊಂದಲಾರವು. ಏಕೆಂದರೆ, ಬಹುಜನರು ಬದುಕು ನಡೆಸುವ ಸನ್ನಿವೇಶದಲ್ಲಿ ಸಹಜವಾಗಿ ನೋಟಕ್ರಮಗಳು ಬಹುಸಂಕೀರ್ಣವಾದ ಲೋಕನೋಟಗಳಿಂದ ರೂಪುಗೊಂಡಿರುತ್ತವೆ. ಹಾಗಂತ ಅವುಗಳ ನಡುವೆ ಯಾವುದೇ ವ್ಯತ್ಯಾಸಗಳು ಇರಲಾರವು ಎಂದು ಮಾತ್ರ ಹೇಳಲು ಸಾಧ್ಯವಿಲ್ಲ.
ನುಡಿ ಬಳಕೆ ಸಾಮಾಜಿಕ ಬದುಕನ್ನು ಪಸರಿಸುವಂತೆ, ಆ ನುಡಿ ಬಳಸುವ ವಿಧಾನದಲ್ಲಿಯೇ ಈ ಸಾಮಾಜಿಕ ಬದುಕಿನ ವಿನ್ಯಾಸಗಳು ಕೂಡ ಅಂತಸ್ಥವಾಗಿರುತ್ತವೆ. ಬಹುತೇಕ ನುಡಿಯರಿಗರು ನುಡಿಯನ್ನು ಅದೊಂದು ಅಮೂರ್ತ ರಚನೆಯನ್ನಾಗಿ ಮಾತ್ರ ಪರಿಗಣಿಸಿರುತ್ತಾರೆ. ಅಂದರೆ ನುಡಿಯು ತನ್ನಷ್ಟಕ್ಕೆ ತಾನು ಸ್ವತಂತ್ರವಾಗಿ ನೆಲೆಗೊಂಡು ನಿರ್ಧಿಷ್ಟ ನುಡಿ ಬಳಕೆಯ ಸನ್ನಿವೇಶಗಳಿಗೆ ಮಾತ್ರ ಸೀಮಿತವಾಗಿರುತ್ತದೆ.
ಉದಾ.ಗೆ ಗಣಿತದ ಯಾವುದೇ ತಾರ್ಕಿಕ ರಚನೆಯು ನೇರವಾಗಿ ಸಮೂಹಗಳ ನಿರ್ಧಿಷ್ಟ ಸಮಸ್ಯೆಗಳಿಗೆ ಮಾತ್ರ ಅನ್ವಯವಾಗದೇ ಅದೊಂದು ಸ್ವತಂತ್ರ ಸೂತ್ರವಾಗಿ ರೂಪುಗೊಳ್ಳುತ್ತದೆ. ಆದರೆ ನುಡಿ ಬಳಕೆಯ ಒಂದೊಂದು ಅನುಭವ ಮತ್ತು ಪ್ರಯೋಗವು ಆಯಾ ನುಡಿ ಬಳಕೆಗೆ ಒಳಪಡುವ ವಲಯ ಹಾಗೂ ನಿಯೋಗಗಳಿಗೆ ಮಾತ್ರ ಸಂಬಂಧಿಸಿರುತ್ತವೆ.
ಹಾಗಾಗಿ ಪ್ರತಿಯೊಂದು ಸಂವಹನ ಕ್ರಿಯೆಯು ಕೂಡ ಒಂದೊಂದು ಸಾಮಾಜಿಕ ಸನ್ನಿವೇಶದಲ್ಲಿ ನೆಲೆಗೊಳ್ಳುತ್ತದೆ. ಹಾಗೂ ಭಾಷಿಕರು ಬಳಸು ಆಯಾ ಭಾಷಾ ರೂಪಗಳ ಮೇಲೆ ಈ ಸನ್ನಿವೇಶವು ತನ್ನ ಒತ್ತಾಯವನ್ನು ಹೇರುತ್ತದೆ. ಈ ಭಾಷಿಕರು ಸಾಮಾಜಿಕ ಸನ್ನಿವೇಶವನ್ನು ಹೇಗೆ ವ್ಯಾಖ್ಯಾನಿಸುತ್ತಾರೆ? ಇವರ ಗ್ರಹಿಕೆಗಳ ಬಗೆಗೆ ಬೇರೆಯವರಿಗೆ ಏನು ಗೊತ್ತಿರುತ್ತದೆ? ಅವರು ಹೇಗೆ ಇವುಗಳನ್ನು ಕುರಿತು ಯೋಚಿಸಬಲ್ಲರು? ಅವರು ಇವರ ಬಗೆಗೆ ಏನನ್ನು ಚಿಂತಿಸಬಲ್ಲರು ಮತ್ತು ನಂಬಬಲ್ಲರು? ಹಾಗೂ ತಮ್ಮ ಮತ್ತು ಬೇರೆಯವರ ಅಸ್ಮಿತೆಗಳ ಬಗೆಗೆ ಇವರು ಏನನ್ನು ಬಯಸುತ್ತಾರೆ ಎಂಬಿತ್ಯಾದಿ ಸಂಗತಿಗಳು, ಮಾತಿನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ರೂಪ ಮತ್ತು ಅರ್ಥಗಳ ಮೇಲೆ ಇವುಗಳು ಪರಿಣಾಮವನ್ನು ಬೀರುತ್ತವೆ.
ಆಯಾ ಸಾಮಾಜಿಕ ಮತ್ತು ಭಾಷಿಕ ಸನ್ನಿವೇಶಗಳನ್ನು ನೆಲೆಯಾಗಿಸಿಕೊಂಡು, ನೋಟಕ್ರಮಗಳ ತಿರುಳು (ಅರ್ಥ) ಪ್ರಸ್ತುತಗೊಳ್ಳುತ್ತದೆ. ಹಾಗೂ ಆಯಾ ಸನ್ನಿವೇಶಗಳಿಗೆ ಅನುಗುಣವಾಗಿ ನುಡಿಯಲ್ಲಿ ಮೈಪಡೆಯುವ ಈ ಎಲ್ಲ ನೋಟಕ್ರಮಗಳನ್ನು ವ್ಯಾಖ್ಯಾನಿಸಲಾಗುತ್ತದೆ.
ಅಂದರೆ ಹೇಳುಗ ಮತ್ತು ಕೇಳುಗರು ಜೊತೆಗೂಡಿ ತಾವು ಏನನ್ನು ಭಾವಿಸುತ್ತಾರೆ, ಏನನ್ನು ಗ್ರಹಿಸುತ್ತಾರೆ, ಏನನ್ನು ನೋಡುತ್ತಾರೆ ಹಾಗೂ ಸಂವಹನದ ಯಾವ ಹಂತವನ್ನು ಇವರು ತಲಪುತ್ತಾರೆ ಎಂಬೆಲ್ಲ ಸಂಗತಿಗಳು ಒಂದು ಪ್ರದೇಶದಲ್ಲಿ ಪ್ರಮುಖವಾಗುತ್ತವೆ. ಇಲ್ಲಿ, ಅಲ್ಲಿ, ಎಲ್ಲಿ, ಯಾವಾಗ, ಇದು, ಅದು ಮುಂತಾದ ಭಾಷಿಕ ಸೂಚಿಗಳು ಒಂದು ನಿರ್ಧಿಷ್ಟ ಕಾಲ ಮತ್ತು ದೇಶದ ವಿನ್ಯಾಸವನ್ನು ರೂಪಿಸುತ್ತವೆ.
ಮತ್ತು ಅಂತವೊಂದು ಸನ್ನಿವೇಶವನ್ನು ರೂಪಿಸುವ ಮುಕ್ತ ಅವಕಾಶವೂ ಈ ಭಾಷಿಕ ಸೂಚಿಗಳಲ್ಲಿ ಅಂತಸ್ಥವಾಗಿರುತ್ತದೆ. ಯಾವಾಗ ಹೇಳುಗ ಮತ್ತು ಕೇಳುಗರು ಒಂದು ದಿಟ ಪ್ರದೇಶವನ್ನು (ರಿಯಲ್ ಸ್ಪೇಸ್) ಪರಿಭಾವಿಸಲು, ಈಗ, ನಾಳೆ ಮತ್ತು ಕಳೆದ ವರುಷ ಮೊದಲಾದವುಗಳನ್ನು ಬಳಸುವುದನ್ನು ನೋಡಬಹುದು. ಉದಾ.ಗೆ ಬೇಂದ್ರೆಯವರ ಕವನವೊಂದರಲ್ಲಿ ಬಳಸಿರುವ ಇದಕ್ಕು, ಅದಕ್ಕು ಎದಕ್ಕು ಎಂಬೆಲ್ಲ ಸೂಚಕಗಳು ಕೇವಲ ಯಾವುದೇ ಒಂದು ಕಾಲ ಮತ್ತು ದೇಶಕ್ಕೆ ಮಾತ್ರ ಸೀಮಿತಗೊಂಡಿಲ್ಲ.
ಬದಲಾಗಿ ಆಯಾ ಕಾಲ ಮತ್ತು ದೇಶದ ಸನ್ನಿವೇಶಗಳಿಗೆ ಅನ್ವಯವಾಗುವ ಮುಕ್ತತೆ ಈ ಸೂಚಕಗಳಲ್ಲಿ ಇರುವುದನ್ನು ನೋಡಬಹುದು. ಹಾಗೂ ಪಂಪನ ಕಾವ್ಯದಲ್ಲಿ ಬಳಸಿರುವ ಎಷ್ಟೊಂದು ಅಭಿವ್ಯಕ್ತಿಗಳನ್ನು ನಮ್ಮ ಇವತ್ತಿನ ಸನ್ನಿವೇಶಕ್ಕೆ ಅನ್ವಯಿಸಿಕೊಂಡು ಮಾತ್ನಾಡುವಾಗ, ವ್ಯಕ್ತಿಗಳ ಹೆಸರುಗಳನ್ನು ಪರಿಗಣಿಸದೇ, ಆಯಾ ವ್ಯಕ್ತಿಗಳು ಪ್ರತಿನಿಧಿಸುವ ಸಾಮಾಜಿಕ ನೆಲೆ ಇಲ್ಲವೇ ಅಂತಸ್ತನ್ನು ಪರಿಗಣಿಸುತ್ತೇವೆ. ಯಾವುದೋ ಒಂದು ಕಾಲ್ಪನಿಕ ಪ್ರದೇಶದ (ಇಮ್ಯಾಜಿನ್ಡ್ ಸ್ಪೇಸ್) ಕಾಲ್ಪನಿಕ ನೆಲೆಯಿಂದ (ಇಮ್ಯಾಜಿನ್ಡ್ ಲೊಕೇಶನ್) ಬದುಕಿನ ನೋಟಗಳನ್ನು ಯಾವುದೇ ಒಬ್ಬ ಕಾಲ್ಪನಿಕ ಪಾಲುದಾರನಿಗೆ ಕಾಣಲು ಇಲ್ಲವೇ ತಲುಪಲು ಹೇಗೆ ಸಾಧ್ಯವಾಗುತ್ತದೆ.
ಅಂದರೆ ಹೇಳುಗ ಮತ್ತು ಕೇಳುಗ ಇವರಿಬ್ಬರೂ ಏನೆಲ್ಲವನ್ನೂ ಅರಿಯಲು, ಯೋಚಿಸಲು, ಗ್ರಹಿಸಲು ಹಾಗೂ ಪರಿಭಾವಿಸಲು ಸಾಧ್ಯವೋ, ಅದೆಲ್ಲವನ್ನೂ ಕಾಲ್ಪನಿಕವಾಗಿಯೇ ಪರಿಭಾವಿಸಲಾಗುತ್ತದೆ. ಏನೆಂದರೆ, ಮಾನಸಿಕ ನೆಲೆವೊಂದು (ಮೆಂಟಲ್ ಸ್ಪೇಸ್) ಏನೆಲ್ಲವನ್ನು ಒಳ್ಗೊಂಡಿರುತ್ತದೆ ಎನ್ನುವುದನ್ನು ಅರಿಯಲು ನಮಗೆಲ್ಲ ಸಾಧ್ಯವಾಗುವುದೇ ಮಾನಸಿಕವಾಗಿ ನೆಲೆಗೊಳ್ಳುವ ಇಂತಹ ಲೆಕ್ಕಾಚಾರಗಳಿಂದ ಮಾತ್ರ. ಹಾಗಾದರೆ, ಪ್ರತೀ ವ್ಯಕ್ತಿಯ ಮಾನಸಿಕ ನೆಲೆಯು ಪರಿಭಾವಿಸುವ ಯಾವುದೇ ವಿಚಾರ ಇಲ್ಲವೇ ನೋಟಕ್ರಮಗಳು, ಆಯಾ ವ್ಯಕ್ತಿಗೆ ಮಾತ್ರ ನಿರ್ಧಿಷ್ಟವಾಗಿರುತ್ತವೋ ಎಂಬ ಪ್ರಶ್ನೆಯೂ ಇಲ್ಲಿ ಎದುರಾಗುತ್ತದೆ.
ವಿಚಾರ ಇಲ್ಲವೇ ನೋಟಕ್ರಮಗಳು ವ್ಯಕ್ತಿ ವಿಶಷ್ಟತೆಯಿಂದ ಕೂಡಿರಲಾರವು. ಬದಲಾಗಿ ವ್ಯಕ್ತಿಗಳು ಈ ವಿಚಾರಗಳನ್ನು ಪರಿಭಾವಿಸುವ ಇಲ್ಲವೇ ನಿರ್ವಚಿಸುವ ವಿನ್ಯಾಸಗಳು ಮಾತ್ರ ಬೇರೆಯಾಗಿರುತ್ತವೆ. ಕಾಲ್ಪನಿಕ ಇಲ್ಲವೇ ದಿಟವಾದ ವ್ಯಕ್ತಿ, ಕಾಲ ಮತ್ತು ದೇಶಗಳನ್ನು ಪರಿಭಾವಿಸಲು ನಮಗೆ ಮುಖ್ಯವಾಗಿ ಡೈಯಕ್ಸಿಸ್ಗಳು (Deixis) ಒತ್ತಾಸೆಯಾಗಿರುತ್ತವೆ. ಡೈಯಕ್ಸಿಸ್ಗಳು ಮೂಲಕವೇ ನಾವು ಯಾವುದೇ ನುಡಿ ಪಠ್ಯಗಳಲ್ಲಿ ಸಂದರ್ಭಗಳನ್ನು ರೂಪಿಸಿಕೊಳ್ಳುತ್ತೇವೆ. ಈ ಸಂದರ್ಭಗಳೇ ನಮಗೆ ಕಾಲ, ದೇಶಗಳನ್ನು ಪರಿಭಾವಿಸಲು ಸೂಚಕಗಳಾಗಿರುತ್ತವೆ.
ಉದಾ.ಗೆ ನೀವು ದಯವಿಟ್ಟು ಇವತ್ತು ನಮ್ಮ ಮನೆಗೆ ಊಟಕ್ಕೆ ಬನ್ನಿ. ಈ ಉದಾಹರಣೆಯಲ್ಲಿರುವ ‘ನಮ್ಮ ಮನೆಗೆ’ ಎಂಬ ಉಲ್ಲೇಖವನ್ನು ಹೇಳುಗನು ಉಲ್ಲೇಖಿಸುವಾಗ, ಅವನು ಕಡ್ಡಾಯವಾಗಿ ತನ್ನ ಮನೆಯಲ್ಲಿಯೇ ಇರಬೇಕಾದ ಅಗತ್ಯವಿಲ್ಲ. ಮತ್ತು ಕೇಳುಗನಿಗೆ ಈ ಆಮಂತ್ರಣವನ್ನು ತನ್ನ ಮನೆಯಿಂದಲೇ ನೀಡುವ ಅಗತ್ಯವೂ ಕೂಡ ಇರುವುದಿಲ್ಲ. ಹಾಗೂ ಕೇಳುಗನು ಕೂಡ ಪ್ರತಿಯಾಗಿ, ಹ್ಞಾ! ಖಂಡಿತವಾಗಿ ನಾನು ನಿಮ್ಮ ಮನೆಗೆ ಊಟಕ್ಕೆ ಬರುತ್ತೇನೆ. ಎಂದು ಹೇಳುವಾಗಲೂ ಕೂಡ ಅವನು ಈ ಹೇಳುಗನ ಮನೆಗೆ ಬಂದು ಹೇಳುವ ಅವಶ್ಯಕತೆ ಇರವುದಿಲ್ಲ. ಅಂದರೆ ನುಡಿ ಸಾಮಗ್ರಿಗಳನ್ನು ಬಳಸುವಾಗ, ತಿರುಳುಗಳನ್ನು ಹೊರಡಿಸಲು ಬೇಕಾಗುವ ಅಂತರ್ಗತ ಸಾಮಗ್ರಿಗಳು ಅವುಗಳಲ್ಲಿ ಅಡಕವಾಗಿರುತ್ತವೆ.
ರಚನೆ ಹಾಗೂ ತಿರುಳು, ಈ ಎರಡೂ ನೆಲೆಗಳಿಂದಲೂ ನುಡಿ/ಮಾತು ಸಂದರ್ಭ ಮುಕ್ತವಾಗಿರುತ್ತದೆ. ಈ ಸಂದರ್ಭ ಮುಕ್ತತೆ ಕಾಲ-ದೇಶ-ವ್ಯಕ್ತಿಗಳನ್ನು ಮೀರಿ ನಿಲ್ಲುತ್ತದೆ. ಉದಾ.ಗೆ ಕುವೆಂಪು ಅವರು ತಮ್ಮ ಶ್ರೀ ರಾಮಯಣ ದರ್ಶನಂ, ಕೃತಿಯಲ್ಲಿ ಊರ್ಮಿಳೆಯಿಂದ, “ಕಡಲ್ಗಿದಿರ್ ಪನಿಗೇಂ ಪ್ರದರ್ಶನಂ” ಎಂಬ ಮಾತನ್ನು ಆಡಿಸುತ್ತಾರೆ. ಗಂಡನಿಗಾಗಿ ತಾನು ತಪಸ್ವಿನಿಯಂತೆ ಬದುಕಿದ್ದು ಪ್ರದರ್ಶನಕ್ಕಲ್ಲ ಎನ್ನುವ ಊರ್ಮಿಳೆಯ ಈ ಮಾತು ಸಾಂದರ್ಭಿಕವಾಗಿದ್ದರೂ, ಇದು ಸಂದರ್ಭ ಮುಕ್ತತೆಯನ್ನೂ ಪಡೆದಿರುತ್ತದೆ ಎಂಬುದು ಮಾತ್ರ ದಿಟ. ಯಾವುದೇ ಗುರಿರಹಿತ ಬದುಕಿನ ಯಾವುದೇ ಒಂದು ಕ್ರಿಯೆಯ ತಾತ್ಪರ್ಯವನ್ನು ಸೂಚಿಸಲು ಈ ಮಾತನ್ನು ಬಳಸಲು ಸಾಧ್ಯವಿದೆ.
ಕೇವಲ ಆಡಂಬರಕ್ಕಾಗಿ ಇಲ್ಲವೇ ಪ್ರದರ್ಶನಕ್ಕಾಗಿ ನಡೆಯುವ ಕ್ರಿಯೆಗಳನ್ನು ಟೀಕಿಸಲೂ ಕೂಡ ಈ ಮಾತನ್ನು ಬಳಸಬಹುದಾಗಿದೆ. ಪ್ರಾಥಮಿಕವಾಗಿ ನುಡಿಯೊಂದು ರಾಚನಿಕ ವ್ಯವಸ್ಥೆಯಾಗಿದ್ದರೂ ಕೂಡ, ಅದಕ್ಕೊಂದು ಅನಕೂಲಾತ್ಮಕ ನೆಲೆ ಇದ್ದೇ ಇರುತ್ತದೆ. ನುಡಿಯೊಂದಕ್ಕೆ ಈ ನೆಲೆಯೂ ಅತ್ಯಂತ ಮಹತ್ವದ ಸಂಗತಿಯಾಗಿರುತ್ತದೆ. ಅಂದರೆ, ಉಲಿ (ಧ್ವನಿ) ಮತ್ತು ತಿರುಳುಗಳ (ಅರ್ಥ) ನಡುವೆ ಯಾವುದೇ ಬಗೆಯ ತಾರ್ಕಿಕ ನಂಟಸ್ತಿಕೆ ಇರುವುದಿಲ್ಲ. ಉದಾ.ಗೆ ‘ಮರ’ ಎಂಬ ಪದದ ಉಲಿಗಳ ಮೊತ್ತಕ್ಕೂ ಅದು ನಿರೂಪಿಸುವ ತಿರುಳಿಗೂ ಯವುದೇ ಬಗೆಯ ನಂಟಿರುವುದಿಲ್ಲ. ಪ್ರತೀ ನುಡಿಯೊಳಗೆಯೇ ನಡೆಯುವ ಇಂತಹವೊಂದು ಹೊಂದಾಣಿಕೆಯ ನೆಲೆಯನ್ನೇ ನಾವು ಇಲ್ಲಿ ಅನಕೂಲಾತ್ಮಕವೆಂದು ಬಣ್ಣಿಸುತ್ತೇವೆ.
ನುಡಿ ತನ್ನಲ್ಲಿರುವ ಈ ಅನಕೂಲಾತ್ಮಕ ರಾಚನಿಕ ಸಾಮಗ್ರಿಗಳನ್ನು ಉಪಯೋಗಿಸಿಕೊಂಡೇ ಆಯಾ ಕಾಲ, ದೇಶ ಹಾಗೂ ವ್ಯಕ್ತಿಗಳಿಗೆ ಪೂರಕವಾಗುವ ಇಲ್ಲವೇ ಅಗತ್ಯವಾಗುವ ಸಂಕಥನಗಳನ್ನು ಕಟ್ಟುತ್ತಿರುತ್ತದೆ. ‘ಈ ಸಂಕಥನಗಳ ನಿರೂಪಣೆಯ ನುಡಿಯು ಕೂಡ ಕಣ್ಣಿನ ಓದಿಗೆ ಅನಕೂಲವಾಗುವಂತೆ ಇರುವ ಬದಲಾಗಿ ಕಿವಿಯ ಓದಿಗೆ ತಕ್ಕಂತೆ ಇರುತ್ತದೆ.
ಕಣ್ಣಿಗೆ ಕಾಣುವಂತೆ ಹೇಳುವುದಕ್ಕಿಂತ ಕಣ್ಣಿಗೆ ಕಟ್ಟುವಂತೆ ಹೇಳುವುದು ಈ ಸಂಕಥನಗಳ ದಾಟಿಯಾಗಿರುತ್ತದೆ’ (ಕೆವಿಎನ್:2010). ಮಾತು ಮತ್ತು ಮಾತಿನ ಮೂಲಕ ದೊರೆಯುವ ಒಂದೊಂದು ತಿರುಳು, ತಿಳಿವು ಹಾಗೂ ಹೊಳವುಗಳೆಲ್ಲವೂ ಅನುಭವದ ನೆಲೆಯನ್ನು ಪಡೆಯುತ್ತವೆ. ಮಾತು ಅನುಭವದ ಆಯಾಮವನ್ನು ಪಡೆದಕೂಡಲೇ, ಅದಕ್ಕೊಂದು ಸಂದರ್ಭ ಮುಕ್ತತೆಯು ಪ್ರಾಪ್ತವಾಗುತ್ತದೆ. ಇಂತಹ ವಿನ್ಯಾಸಗಳ ಕಾರಣವಾಗಿಯೇ ಮಾತು, ವ್ಯಕ್ತಿ, ಕಾಲ ಹಾಗೂ ದೇಶಗಳ ನಡುವೆ ವಿಭಜನೆಯೂ ಏರ್ಪಡುತ್ತದೆ ಎನ್ನುವುದು ಅತ್ಯಂತ ಮಹತ್ವದ ವಿದ್ಯಮಾನವಾಗಿದೆ.
ಆದರೆ ಸಾಮಾಜಿಕ ವಾಸ್ತವಗಳ ಮೂಲನೆಲೆಗಳು ಮೈಪಡೆಯುವುದು ಅಯಾ ನುಡಿಯಿಗರು (ಭಾಷಿಕರು) ತಾವಾಡುವ ನುಡಿಯ ತಿಳಿವಿನ ಮೂಲಕವೇ ಎಂಬುದು ಗಮನಾರ್ಹ. ಈ ವಿನ್ಯಾಸವು ಅತ್ಯಂತ ವ್ಯಾಪಕವಾಗಿರುತ್ತದೆ. ಮಾನಸಿಕ ಜಗತ್ತು ಮತ್ತು ಭೌತಿಕ ಜಗತ್ತಿನಲ್ಲಿರುವ ವಸ್ತುಗಳ-ವಿದ್ಯಮಾನಗಳ ತಿಳಿವನ್ನು ಈ ವಿನ್ಯಾಸವು ಒಳ್ಗೊಂಡಿರುತ್ತದೆ. ಈ ತಿಳಿವಿಗೆ ಎರಡು ಆಯಾಮಗಳು ಇರುತ್ತವೆ.
ಅಂದರೆ ಆಯಾ ತಿಳಿವು ಏನನ್ನು (ನಾಲೇಡ್ಜ್ ವ್ಹಾಟ್) ಸೂಚಿಸುತ್ತದೆ. ಹಾಗೂ ಆಯಾ ತಿಳಿವು ಹೇಗೆ (ನಾಲೇಡ್ಜ್ ಹೌ) ಸಮೂಹಗಳ ಒಡಲಲ್ಲಿ ನೆಲೆಗೊಳ್ಳುತ್ತದೆ ಎಂಬುದಾಗಿವೆ. ಆದರೆ ಈ ಎರಡೂ ತಿಳಿವಿನ ಆಯಾಮಗಳಲ್ಲಿ ಹಲವು ಬಗೆಯ ಸಾಮನ್ಯೀಕರಣದ (ಜನರ್ಯಾಲಿಟಿ) ನೆಲೆಗಳು ಹುದುಗಿರುತ್ತವೆ. ಹಾಗಾಗಿ ಒಂದೊಂದು ಪರಿಕಲ್ಪನಾತ್ಮಕ ತಿಳಿವು ಹಲವು ಆಯಾಮಗಳಿಂದ ಕೂಡಿರುತ್ತದೆ.
ಹಾಗೂ ಇಡಿತನದ ಮಾದರಿಗಳನ್ನು ಈ ಆಯಾಮಗಳು ನಿರಂತರವಾಗಿ ರೂಪಿಸುತ್ತವೆ. ಅಂದರೆ ಹಲವು ವಿಭಿನ್ನ ವಸ್ತುಗಳು ಹಾಗೂ ವಿದ್ಯಮಾನಗಳ ನಡುವಣ ಅಂತರ್ಸಂಬಂಧವನ್ನು ಗುರುತಿಸುವುದಾಗಿದೆ. ನುಡಿಯ ಮೂಲಕ ಮೈಪಡೆಯುವ ಪ್ರತಿಯೊಂದು ತಿಳಿವಿನ ಅವಿಭಾಜ್ಯ ಅಂಗವಾಗಿ ಇಂತಹ ಅಂತರ್ಸಂಬಂಧವು ನೆಲೆಗೊಳ್ಳುತ್ತದೆ.
ನುಡಿ ಸಾಮಗ್ರಿಗಳು ಕೇವಲ ಇಡಿತನವನ್ನು ಮಾತ್ರ ರೂಪಿಸದೇ ಬಿಡಿತನದ ಮೂಲಕ ಸಾಮಾಜಿಕ ಹಾಗೂ ಮಾನಸಿಕ ಪ್ರತ್ಯೇಕತೆಯನ್ನೂ ಸಂಘಟಿಸುತ್ತವೆ. ಅಸ್ಪೃಶ್ಯತೆಯಂತಹ ಅನುಭವವು ಶತಮಾನಗಳಿಂದ ಆಚರಣೆಯಲ್ಲಿದೆ. ಆದರೆ ಈ ಆಚರಣೆಯ ಸಾಮಾಜಿಕ ವಿನ್ಯಾಸದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯವೇ ಹೊರತು ಮಾನಸಿಕ ವಿನ್ಯಾಸದಲ್ಲಿ ಯಾವುದೇ ಬಗೆಯ ಪಲ್ಲಟವು ಇದುವರೆಗೂ ಏರ್ಪಟ್ಟಿರುವುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ.
ತಿರುಳಿನ ಇಲ್ಲವೇ ತಿಳಿವಿನ ಇಡಿತನದ ಸ್ವರೂಪದಲ್ಲಿಯೇ ಸಾಮಾಜಿಕ ಮತ್ತು ಮಾನಸಿಕ ಪ್ರತ್ಯೇಕತೆಯ ಚಹರೆಗಳು ಬಿಂಬಿತವಾಗುತ್ತವೆ. ತಿರುಳಿನ ಇಡಿತನದಲ್ಲಿರುವ ಅಂತರ್ಸಂಬಂಧದ ಆಯಾಮಗಳು ಇಂತಹ ಪ್ರತ್ಯೇಕತೆಯ ಕಾರಣದಿಂದ ಬಿಡಿಬಿಡಿಯಾಗಿ ನೆಲೆಗೊಳ್ಳುತ್ತವೆ. ಅಂದರೆ ಅಭಾದಿತ ಅನುಭವವು ಸಾಮಾಜಿಕ ಹಾಗೂ ಮಾನಸಿಕ ಇಡಿತವನ್ನಷ್ಟೆಯಲ್ಲದೇ ತಿರುಳಿನ ಐಕ್ಯತೆಯನ್ನೂ ಸೂಚಿಸುತ್ತದೆ.
ಆದರೆ ಸಮೂಹಗಳನ್ನು ಭಾದಿಸುವ ಯಾವುದೇ ಬಗೆಯ ಅನುಭವವೊಂದು ಐಕ್ಯತೆಯ ಸೂಚಕವಾಗಿರಲು ಸಾಧ್ಯವಿಲ್ಲ. ಈ ನಿಲುವು ಅತ್ಯಂತ ನಿಚ್ಚಳವಾಗಿ ನುಡಿ ಸಾಮಗ್ರಿಗಳ ಮೂಲಕ ಪ್ರಕಟವಾಗುತ್ತದೆ. ಅಂದರೆ ಮಾತಿನಲ್ಲಿ ಸಾಮಾಜಿಕ–ಮಾನಸಿಕ ಬಿರುಕುಗಳು ತಾವಾಗಿಯೇ ಏರ್ಪಡಲಾರವು ಎಂಬುದನ್ನು ಈ ಬಿಡಿತನದ ಆಯಾಮವು ಸೂಚಿಸುತ್ತದೆ. ಹಾಗಾಗಿ ಜಾತಿ ಮತ್ತು ಅಸ್ಪೃಶ್ಯತೆಯಂತಹ ಅನುಭವಗಳು ಇವತ್ತಿಗೂ ಸಹ ಪ್ರತ್ಯೇಕತೆಯ ಸೂಚಕಗಳಾಗಿ ನೆಲೆನಿಂತಿವೆ. ಪ್ರಜಾಸತ್ತಾತ್ಮಕ ನಿಲುವುಗಳು ಮಾತಿನ ಅವಿಭಾಜ್ಯ ಅಂಗವಾಗದೇ ಕೇವಲ ಉಲಿ ಮತ್ತು ತಿರುಳಿನ ನಡುವಣ ಸೂಚಿತ ಹಾಗೂ ಸೂಚಕ ನಂಟನ್ನು ವಿವರಿಸುವುದಕಷ್ಟೆ ಸೀಮಿತವಾಗಿವೆ.
ಇಂತಹ ಪ್ರತ್ಯೇಕತೆಯ ಕಾರಣಕ್ಕಾಗಿಯೇ ನುಡಿಯು ಎಲ್ಲ ಕಾಲದಲ್ಲಿಯೂ ಅತ್ಯಂತ ಪ್ರಬಲವಾದ ಅಸ್ಮಿತೆಯ ಸೂಚಕವಾಗಿ ನೆಲೆನಿಂತಿದೆ. ನುಡಿಯ ಮೂಲಕ ರೂಪುಗೊಳ್ಳುವ ಈ ಅಸ್ಮಿತೆಯೂ ಧರ್ಮದ ಮೂಲಕ ಪಡೆಯುವ ಅಸ್ಮಿತೆಗಿಂತಲೂ ಅತ್ಯಂತ ಪ್ರಬಲವಾಗಿರುತ್ತದೆ ಎಂಬುದು ಗಮನಾರ್ಹ. ಧರ್ಮವೂ ಕೂಡ ಸಮೂಹಗಳಲ್ಲಿ ಪ್ರತ್ಯೇಕತೆಯನ್ನು ಉಂಟುಮಾಡುವ ಬಹು ದೊಡ್ಡ ಅಸ್ತ್ರವಾಗಿದೆ ಎಂಬುದನ್ನೂ ಇಲ್ಲಿ ಯಾರು ಮರೆಯುವಂತಿಲ್ಲ.
ನುಡಿಯ ಸಂಘಟಿತ ಹಂತದಲ್ಲಿಯೇ ಪರಿಕಲ್ಪನಾತ್ಮಕತೆಯ ನೆಲೆಗಳು ಪರಸ್ಪರ ಸಂಬಂಧಿತ ಪರಿಕಲ್ಪನೆಗಳನ್ನು ಒಳಗೊಳ್ಳಬೇಕಾಗುತ್ತದೆ. ಆದರೆ ಇದೇ ಹಂತದಲ್ಲಿ ಮಾನಸಿಕ-ಸಾಮಾಜಿಕ ಬಿಡಿತನದದ ಇಲ್ಲವೇ ಪ್ರತ್ಯೇಕತೆಯ ಆಯಾಮಗಳು ಕೂಡ ಏರ್ಪಡುತ್ತವೆ. ಅಂದರೆ ಪರಸ್ಪರ ಸಂಬಂಧಿತ ಪರಿಕಲ್ಪನೆಗಳಲ್ಲಿ ಅಡಕವಾಗಿರುವ ಸಂಕೀರ್ಣತೆಯನ್ನು ಗ್ರಹಿಸುವ ಮೂಲಕ ಈ ಬಿಡಿತನದ ವಿನ್ಯಾಸಗಳನ್ನು ಅರಿಯುವ ಅಗತ್ಯವಿರುತ್ತದೆ.
ಏಕೆಂದರೆ ಮಾಹಿತಿಯೊಂದಕ್ಕಿಂತ ಹೆಚ್ಚು ಸಂಕೀರ್ಣವಾಗಿರುವ ವಸ್ತುಸ್ಥಿತಿಯೊಂದು ನುಡಿಯ ಅಭಿವ್ಯಕ್ತಿಗಳ ಮೂಲಕ ಸಹಜವಾಗಿ ಪ್ರತಿನಿಧಿಕರಣಗೊಳ್ಳುತ್ತದೆ. ಈ ಅಭಿವ್ಯಕ್ತಿಗಳನ್ನು ಅರ್ಥೈಸಿಕೊಳ್ಳುವುದೆಂದರೆ, ಆಯಾ ಮಾತುಗಳಲ್ಲಿ ಅತ್ಯಂತ ವ್ಯಾಪಕವಾಗಿ ಅಂತಸ್ಥವಾಗಿರುವ ಮಾಹಿತಿಗಳನ್ನು ಮಾತ್ರ ಅರಿಯುವುದಲ್ಲ. ಬದಲಾಗಿ ಅವುಗಳು ಸೂಚಿಸುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನಸಿಕ ವಿನ್ಯಾಸಗಳನ್ನೂ ತಿಳಿಯುವುದಾಗಿದೆ.
ಹಾಗಾಗಿ ಅಭಿವ್ಯಕ್ತಿಯೊಂದು ರೂಪುಗೊಳ್ಳುವುದೆಂದರೆ, ವಿಸ್ತಾರವದ ಮಾಹಿತಿಯೊಂದನ್ನು ಅಮೂರ್ತಗೊಳಿಸಿ ನೋಡುವ ಬಗೆಯಾಗಿರುತ್ತದೆ. ಹೀಗೆ ಒಂದು ವ್ಯವಸ್ಥಿತವಾದ ವಿಸ್ತಾರದಲ್ಲಿ ಹರಡಿಕೊಂಡಿರುವ ಒಟ್ಟು ನುಡಿಮೊತ್ತವೇ ಹಾಗೂ ಆಯಾ ಸನ್ನಿವೇಶಕ್ಕೆ ಅಗತ್ಯವಿರುವ ಮಾಹಿತಿಗಳ ಸಂಚಯವೇ ಸಂಕಥನಗಳಾಗಿ ರೂಪುಗೊಳ್ಳುತ್ತವೆ. ಇಂತಹ ಸಂಕಥನಗಳು ಬಹುತೇಕವಾಗಿ ಪ್ರತಿನಿಧಿಕರಣದ ಮಾದರಿಗಳಾಗಿ ರೂಢಿಯಲ್ಲಿರುತ್ತವೆ.
ಯಾವುದೇ ತಿಳುವಿನ ನಿರ್ವಚನೆಯ ವಿನ್ಯಾಸಗಳು ಕೂಡ ಇಂತಹ ಸಂಕಥನಗಳ ಸನ್ನಿವೇಶಗಳಲ್ಲಿಯೇ ಬೇರೂರಿತ್ತವೆ. ಹಾಗಾಗಿ ಕಾಲ, ದೇಶ ಮತ್ತು ವ್ಯಕ್ತಿಗಳಿಗೆ ಅನುಗುಣವಾದ ಸಂಕಥನಗಳು-ಸನ್ನಿವೇಶಗಳು ನಿರಂತರವಾಗಿ ವಿಕಾಸಗೊಳ್ಳುತ್ತವೆ. ಪರಿಣಾಮವಾಗಿ ಮಾತು ಮತ್ತು ಈ ಎಲ್ಲ ಸಂಕಥನ-ಸನ್ನಿವೇಶಗಳ ನಡುವೆ ಸಹಜವಾಗಿ ವಿಭಜನೆಗಳು ಕೂಡ ಏರ್ಪಡುತ್ತವೆ. ಆದ್ದರಿಂದ ಪ್ರಾದೇಶಿಕ (ಸ್ಪೇಶಿಯಲ್) ಕೇಂದ್ರಿತ ನೋಟಕ್ರಮಗಳು, ಪರಿಕಲ್ಪನಾತ್ಮಕ ಕೇಂದ್ರಿತ ನೋಟಕ್ರಮಗಳಕ್ಕಿಂತ ಭಿನ್ನವಾಗಿರುತ್ತವೆ.
ಏಕೆಂದರೆ, ಕೇಳುಗನ ತಿಳಿವು, ನಂಬಿಕೆ, ಭಾವನೆಗಳು, ಪ್ರೇರಣೆಗಳು ಮೊದಲಾದ ಸಂಗತಿಗಳನ್ನು ಪರಿಗಣನೆಗೆ ತೆಗೆದುಕೊಂಡು, ಹೇಳುಗನು ತನ್ನ ಸಂದೇಶಗಳನ್ನು ರೂಪಿಸುತ್ತಾನೆ. ಈ ಪ್ರಕ್ರಿಯೆಯೂ ಕಾಲ, ದೇಶ ಹಾಗೂ ವ್ಯಕ್ತಿಗಳ ನೆಲೆಯಲ್ಲಿ ನಿರಂತರವಾಗಿ ನಡೆಯುತ್ತದೆ. ಇಲ್ಲಿ ಕಾಲಿಕ (ಟೆಂಪೊರಲ್) ವಿನ್ಯಾಸಗಳು ಮಹತ್ವವನ್ನು ಪಡೆದುಕೊಳ್ಳುವುದು ಕೂಡ ಇದೇ ಕಾರಣಗಳಿಂದ.
ಅದಕ್ಕಾಗಿ ಡೆರಿಡಾ ಹೇಳುವ ಸೂಚಕ-ಸೂಚಿತಗಳ ನಡುವಣ ಅಪರಿಮಿತವಾದ ಅರ್ಥದ ನಂಟಸ್ತಿಕೆಯನ್ನು ಗುರುತಿಸಲೂ ಕೂಡ ಈ ಕಾಲ-ದೇಶ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿದ ವಿನ್ಯಾಸಗಳೇ ಕಾರಣವಾಗುತ್ತವೆ. ಅಂದರೆ, ಅರ್ಥದಲ್ಲಿ ಉಂಟಾಗುವ ಭೇದಗಳಿಗೆ ಪ್ರಾದೇಶಿಕತೆ (ಸ್ಪೇಶಿಯಲ್) ಕಾರಣವಾದರೆ, ಅರ್ಥಗಳ ಪಲ್ಲಟ ಇಲ್ಲವೇ ಮುಂದೂಡಿಕೆಗೆ ಕಾಲಿಕ (ಟೆಂಪೊರಲ್) ವಿನ್ಯಾಸಗಳು ಕಾರಣವಾಗುತ್ತವೆ ಎಂಬ ಹೊಳವು ಡೆರಿಡಾನ ಚಿಂತನೆಗಳಲ್ಲಿ ಎದ್ದು ಕಾಣುತ್ತದೆ.
ಒಟ್ಟಿನಲ್ಲಿ ಮಾತು ಮತ್ತು ಕಾಲ, ದೇಶ ಹಾಗೂ ವ್ಯಕ್ತಿಗಳ ನಡುವಣ ವಿಭಜನೆಗೆ ಏನೆಲ್ಲ ಸಂಗತಿಗಳು ಕಾರಣವಾಗುತ್ತವೆ. ಈ ಸಂಗತಿಗಳಿಗೆ ನುಡಿ ಮತ್ತು ನುಡಿ ಸಾಮಗ್ರಿಗಳು ಮಾತ್ರ ಕಾರಣವಲ್ಲ. ಬದಲಾಗಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನಸಿಕ ವ್ಯಾಪಾರಗಳೂ ಕೂಡ ಕಾರಣವಾಗುತ್ತವೆ ಎನ್ನುವ ದಿಟವನ್ನು ಇಲ್ಲಿ ಅರಿಯಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ3 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ4 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ4 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ4 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ4 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

