ನೆಲದನಿ
ನುಡಿಯ ಒಡಲು – 21 | ಮಾತು ಮತ್ತು ನೋಟಗಳ ವಿಭಜನೆ: ಸಂಕಥನಾ ವಿಶ್ಲೇಷಣೆ
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕ, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮಾತು ಮತ್ತು ನೋಟಗಳ ನಡುವಣ ನಂಟನ್ನು ಕುರಿತು ಸಾಕಷ್ಟು ಚಿಂತನೆ, ಚರ್ಚೆಗಳು ಜಗತ್ತಿನಾದ್ಯಂತ ನಡೆಯುತ್ತಿವೆ. ಇವತ್ತಿಗೂ ಈ ಚರ್ಚೆಗಳು ಅತ್ಯಂತ ಪ್ರಸ್ತುತವಾಗಿಯೇ ಇರುತ್ತವೆ. ಕಾರಣವೇನಂದರೆ, ಮಾತನ್ನು ಕುರಿತು ನಡೆಯುತ್ತಿರುವ ಓದುಗಳು ಇವತ್ತಿಗೂ ನಿರಂತರವಾಗಿದ್ದರೂ, ಮಾತಿನ ಇಡೀ ಸ್ವರೂಪವನ್ನು ಅರಿಯಲು ನಮಗೆ ಸಾಧ್ಯವಾಗಿಲ್ಲ.
ಅದೇ ರೀತಿಯಾಗಿ ಮಾತು ಮತ್ತು ಲೋಕನೋಟಗಳ ನಡುವಣ ಸಂಬಂಧವನ್ನು ಕುರಿತು ಈಗಲೂ ನಡೆಯುತ್ತಿರುವ ಚರ್ಚೆಗಳಿಗೆ ಇನ್ನೂ ಯಾವುದೇ ಬಗೆಯ ನಿಚ್ಚಳವಾದ ತಾತ್ವಿಕ ವಿನ್ಯಾಸಗಳು ರೂಪುಗೊಂಡಿಲ್ಲ. ಹಾಗಾಗಿ ನುಡಿ, ಕಾಲ, ದೇಶ, ವ್ಯಕ್ತಿ ಮತ್ತು ಸಮೂಹಗಳ ನಡುವಿನ ಅಂತರ್ಸಂಬಂಧ ಗತಿತಾರ್ಕಿಕವಾದದ್ದು ಎಂದು ಕೆಲವು ಆಲೋಚನಾ ಕ್ರಮಗಳು ಹೇಳುತ್ತವೆ.
ಮತ್ತೆ ಇನ್ನೂ ಕೆಲವು ಮಾದರಿಗಳು ವಾದಿಸುವಂತೆ, ಈ ಸಂಬಂಧವು ಕೇವಲ ಭಾಷಿಕ ಕೇಂದ್ರಿತವಾದದ್ದು ಎಂದು ನಂಬುತ್ತವೆ. ಈ ಎರಡೂ ವಿನ್ಯಾಸಕ್ಕೆ ಹೊರತಾದ ಮಾದರಿಯೊಂದು ಇವತ್ತು ಅತ್ಯಂತ ಪ್ರಬಲವಾಗಿ ಬೆಳೆದಿದೆ. ಈ ಮಾದರಿಯ ಪ್ರಕಾರ ನುಡಿಯೆಂಬುದು ಮೂಲಭೂತವಾಗಿ ಗ್ರಹಿಕೆಗೆ ಸಂಬಂಧಿಸಿದ ವಿದ್ಯಮಾನ (ಕಾಗ್ನಿಟಿವ್ ಫಿನಾಮಿನಾನ್) ಆಗಿರುತ್ತದೆ. ಈ ತಿಳಿವಿನ ಪ್ರಕಾರ ನುಡಿ ಮತ್ತು ನೋಟಗಳ ನಡುವಣ ನಂಟಸ್ತಿಕೆ ವಿಶ್ವಾತ್ಮಕವಾದ ವಿನ್ಯಾಸವನ್ನು ಹೊಂದಿರುತ್ತದೆ ಎಂದಾಗುತ್ತದೆ.
ಅಂದರೇನಾಯ್ತು, ಕಾಲ, ದೇಶ ಹಾಗೂ ವ್ಯಕ್ತಿ ನೆಲೆಗಳಲ್ಲಿ ನುಡಿಯ ಮೂಲಕ ರೂಪುಗೊಳ್ಳುವ ಯಾವುದೇ ನೋಟಕ್ರಮವು ಕೂಡ ವಿಶ್ವಾತ್ಮಕ ಆಗಿರುತ್ತದೆ ಎಂದಾಯ್ತು. ಒಂದು ಪಕ್ಷ ಈ ನಿಲವೇ ದಿಟವಾಗಿದ್ದರೆ, ಮಾತು ಮತ್ತು ನೋಟಕ್ರಮಗಳ ನಡುವಿನ ವಿಭಜನೆ ಅತ್ಯಂತ ಸರಳವಾಗಿ ಕಾಣುತ್ತದೆ. ಅಂದರೆ ಮನುಷ್ಯನ ಗ್ರಹಿಕೆಯೆಂಬುದು ಜಗತ್ತಿನಾದ್ಯಂತ ಒಂದೇ ಬಗೆಯಲ್ಲಿ ನೆಲೆಪಡೆಯುತ್ತದೆ ಎಂದಾಗುತ್ತದೆ.
ಇಲ್ಲ ಈ ವಿಭಜನೆ ಇಷ್ಟೊಂದು ಸರಳವಾಗಿರಲು ಸಾಧ್ಯವಿಲ್ಲ ಎನ್ನುವುದನ್ನೂ ಇದೇ ಆಲೋಚನಾ ಕ್ರಮವೇ ತಿಳಿಸುತ್ತದೆ. ಅದೇನೆಂದರೆ, ವಿಶ್ವಾತ್ಮಕತೆ ಎಂಬುದು ಕೇವಲ ತತ್ವಗಳ (ಪ್ರಿನ್ಸಿಪಲ್ಸ್) ನೆಲೆಗೆ ಮಾತ್ರ ಸಂಬಂಧಿಸಿರುತ್ತದೆ ಹೊರತು ಅದು ವಿಕಲ್ಪಗಳಿಗೂ (ಪ್ಯಾರಮೀಟರ್ಸ್) ಸಂಬಂಧಿಸಲಾರದು ಎನ್ನುವ ತಿಳುವಳಿಕೆಯೂ ಕೂಡ ಈ ವಿನ್ಯಾಸದೊಳಗೆಯೇ ನಮಗೆ ದೊರೆಯುತ್ತದೆ.
ಅಂದರೆ ಮನುಷ್ಯ ಸಹಜವಾಗಿರುವ ಎಲ್ಲ ವಿದ್ಯಮಾನಗಳಲ್ಲಿಯೂ ಕೆಲವು ಸಮಾನವಾದ ರಚನೆಗಳು ಇರುವುದನ್ನು ಈ ತತ್ವಗಳು ತಿಳಿಸುತ್ತವೆ. ಆದರೆ ನುಡಿ, ಕಾಲ, ದೇಶ ಹಾಗೂ ವ್ಯಕ್ತಿಗಳ ನಡುವೇ ಪ್ರತ್ಯೇಕವಾದ, ವಿಶಿಷ್ಟವಾದ ಇಲ್ಲವೇ ದೇಶೀಯವಾದ ರಾಚನಿಕ ವಿನ್ಯಾಸಗಳು ಹೇಗೆ ಕಾರಣವಾಗುತ್ತವೆ ಎಂಬ ತಿಳುವಳಿಕೆಯನ್ನು ಈ ವಿಕಲ್ಪಗಳು ಮನವರಿಕೆ ಮಾಡುತ್ತವೆ. ಹಾಗಾಗಿ ನುಡಿ, ಆಲೋಚನೆ, ಸಂಸ್ಕೃತಿ, ವ್ಯಕ್ತಿ, ದೇಶ ಹಾಗೂ ಸಮಾಜಗಳ ನಡುವಣ ವಿಭಜನೆಯನ್ನು ಅರಿಯುವುದಕ್ಕೆ ನಮಗೆ ಮುಖ್ಯವಾಗಿ ಇಂತಹ ವಿಕಲ್ಪಗಳು ಸಹಾಯಕ್ಕೆ ಬರುತ್ತವೆ.
ನುಡಿ, ಮನಸ್ಸು ಹಾಗೂ ಸಮಾಜಗಳ ನಡುವಣ ನಂಟಸ್ತಿಕೆ ಎಷ್ಟೊಂದು ಸಂಕೀರ್ಣವಾದ ಸಂಗತಿ ಎಂಬುದನ್ನು ಈ ನಿಲುವುಗಳು ಸೂಚಿಸುತ್ತವೆ. ಮಾತು ಮತ್ತು ನೋಟಗಳ ನಡುವಣ ನಂಟಸ್ತಿಕೆ ಇವತ್ತು ಕೇವಲ ಸಾಮಾಜಿಕ ವರ್ತನೆಗೆ ಹಾಗೂ ಭಾಷಿಕ ರಚನೆಗೆ ಮಾತ್ರ ಸೀಮಿತಗೊಂಡಿಲ್ಲ. ಇದು ಮಾನಸಿಕ ವಿಕಾಸ ಹಾಗೂ ವ್ಯಕ್ತಿಯ ಮನಸ್ಸಿನಲ್ಲಿ ಜೈವಿಕವಾಗಿ ಹಾಗೂ ಸಹಜವಾಗಿಯೇ ಅಂತಸ್ಥವಾಗಿರುವ ಭಾಷಿಕ ವಿನ್ಯಾಸಕ್ಕೂ ಪೂರಕವಾಗಿ ಈ ನಂಟಸ್ತಿಕೆ ಹರಡಿಕೊಂಡಿರುತ್ತದೆ.
ಇದು ಬಹುತೇಕವಾಗಿ ರೂಪಕ ಇಲ್ಲವೇ ರೂಪಕಾತ್ಮಕ ನೆಲೆಯನ್ನು ಹೊಂದಿರುತ್ತದೆ. ಎಲ್ಲ ಸಮುದಾಯದ ಸದಸ್ಯರು ನೋಟಕ್ರಮಗಳಲ್ಲಿ ಬದುಕುವುದಷ್ಟೆಯಲ್ಲ, ಬದಲಾಗಿ ಈ ನೋಟಕ್ರಮಗಳ ರಚನೆಗಳನ್ನು ಕರಗತ ಮಾಡಿಕೊಳ್ಳುವ ಕೌಶಲಗಳನ್ನೂ ಹೊಂದಿರುತ್ತಾರೆ. ಆದ್ದರಿಂದ ಈ ವಸ್ತುವಿನ್ಯಾಸವು ಆಯಾ ನುಡಿಗಳಲ್ಲಿಯೇ ಪ್ರತಿಫಲನವಾಗುತ್ತದೆ. ನುಡಿಯೊಳಗೆಯೇ ಇಂತಹವೊಂದು ಹದಬೆರಕೆಯ ಆಯಾಮವಿರುತ್ತದೆ.
ನುಡಿಯಲ್ಲಿ ನಡೆಯುವ ಇಂತಹ ಹದಬೆರಕೆಯ ನೆಲೆಯನ್ನು ಕುರಿತು ಮಾತ್ನಾಡುವಾಗ, ನಮಗೆ ತೋರುವ ಪ್ರಮುಖ ಸಂಗತಿಯೇನಂದರೆ, ನುಡಿಯ ಕಾರಣದಿಂದಲೇ, ಮನುಷ್ಯರಿಗೆ ಇಂತಹವೊಂದು ಹದಬೆರಕೆಯ ಕಸುವು ನಮ್ಮ ಜೈವಿಕ ವಿನ್ಯಾಸದಲ್ಲಿಯೇ ನೆಲೆಗೊಂಡಿರುವುದು ಗೊತ್ತಾಗುತ್ತದೆ. ಇದೇ ಸನ್ನಿವೇಶದಲ್ಲಿಯೇ ಗೋಚರಿಸುವ ಮತ್ತೊಂದು ಸುಳಿವು ಏನೆಂದರೆ, ಬಹು ಬಗೆಯ ನೋಟಕ್ರಮಗಳನ್ನು ಪಡೆಯುವ ಅವಕಾಶವೂ ನಮಗೆ ಸಹಜವಾಗಿಯೇ ನಮ್ಮ ನಮ್ಮ ನುಡಿ ಪರಿಸರಗಳಲ್ಲಿ ಸಿಗುತ್ತವೆ.
ಹಾಗೇನೆ ನಮಗೆ ಬೇಕಾಗಿರುವ ನೋಟಕ್ರಮಗಳ ಇಲ್ಲವೇ ಪರಿಕಲ್ಪನೆಗಳ ಪ್ರಮಾಣದಲ್ಲಿ ನಮ್ಮದೆಯಾದ ಆಯ್ಕೆಗಳಿರುವುದು ಕೂಡ ವಿಶೇಷ. ಅಂದರೆ ಆಯಾ ನುಡಿ ಪರಿಸರದಲ್ಲಿ ಬದುಕುವ ಪ್ರತಿಯೊಬ್ಬರು ಕೂಡ ಸಮ ಪ್ರಮಾಣದ ಗ್ರಹಿಕೆಗಳನ್ನು ಪಡೆಯಲೇ ಬೇಕೆಂಬ ಯಾವುದೇ ಒತ್ತಾಯವಿರುವುದಿಲ್ಲ. ಹಾಗಾಗಿ ತಮ್ಮ ಬದುಕಿಗೆ ಅತ್ಯಂತ ಅಗತ್ಯವೆನಿಸುವ ನೋಟಕ್ರಮಗಳನ್ನು ಮಾತ್ರ ಪಡೆಯುವ ಈ ವಿನ್ಯಾಸವೇ ಮಾತು ಮತ್ತು ನೋಟಗಳ ನಡುವಣ ವಿಭಜನೆಗೆ ಕಾರಣವಾಗುತ್ತದೆ.
ಸಾಮಾಜಿಕ ಸಂವಹನವು ಲೀಲಾಜಾಲವಾಗಿ ಹಾಗೂ ಸಲೀಸಾಗಿ ನಡೆಯುವುದಕ್ಕೆ ಈ ನಿಲುವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇದರೊಟ್ಟಿಗೆ, ನೋಟಕ್ರಮಗಳನ್ನು ಭಾಷಿಕವಾಗಿ ವರ್ಗೀಕರಣಗೊಳಿಸುವ, ಆ ಇಡೀ ರಾಚನಿಕ ಪ್ರಕ್ರಿಯೆಯಲ್ಲಿಯೇ ಕ್ರಾಸ್ಲಿಂಗ್ವಿಸ್ಟಿಕ್ ವ್ಯತ್ಯಾಸಗಳು ಹೆಚ್ಚು ಪ್ರಬಲವಾಗಿರುತ್ತವೆ ಎಂಬುದು ಗಮನಾರ್ಹ ಸಂಗತಿ. ಹಾಗೂ ನೋಟಕ್ರಮಗಳ ಪ್ರತಿನಿಧಿಕರಣದಲ್ಲಿಯೂ ಈ ಕ್ರಾಸ್ಲಿಂಗ್ವಿಸ್ಟಿಕ್ ಮಾದರಿಗಳು ಅತ್ಯಂತ ನಿಚ್ಚಳವಾಗಿಯೇ ಕಾಣುತ್ತವೆ ಅನ್ನುವುದನ್ನೂ ಕೂಡ ಇಲ್ಲಿ ಮರೆಯಲು ಸಾಧ್ಯವಿಲ್ಲ.
ದಿಟ, ಈ ಕ್ರಾಸ್ಲಿಂಗ್ವಿಸ್ಟಿಕ್ ಮಾದರಿಗಳೇನು ನಮ್ಮಲ್ಲಿ ಯಾವುದೇ ಬಗೆಯ ಬೆರಗನ್ನುಂಟು ಮಾಡಲಾರವು. ಆದರೆ, ನೋಟಕ್ರಮಗಳಿಗೆ ನಾವು ಕಲ್ಪಿಸಿಕೊಳ್ಳಬಹುದಾದ ಯಾವುದೇ ಕಣ್ನೋಟಗಳ ವಿಧಾನಗಳ ಮೇಲೆ ಮನುಷ್ಯನ ನರತಂತು ವಿನ್ಯಾಸವು ಒಂದು ಬಗೆಯ ಒತ್ತಾಯವನ್ನುಂಟು ಮಾಡುತ್ತದೆ ಎಂಬ ದಿಟವನ್ನು ಅರಿಯಲು ಇವುಗಳು ಪೂರಕವಾಗಿರುತ್ತವೆ.
ನಮ್ಮ ಲೋಕಗ್ರಹಿಕೆಗಳನ್ನು ಕರಗತಗೊಳಿಸುವ ಸಂಕೀರ್ಣ ಭಾಷಿಕ ಸೂಚಿಗಳು, ವ್ಯವಸ್ಥೆಗಳು ಮತ್ತು ಉನ್ನತ ಮಟ್ಟದ ಸಾಹಿತ್ಯಕ ಹಾಗೂ ಕಲಾತ್ಮಕ ಚಳಕಗಳು ಮುಖ್ಯವಾಗಿ ಪ್ರಾಥಮಿಕ ನೋಟಗಳು ಹಾಗೂ ಮೂಲ ಅನುಭವವನ್ನು ನೆಲೆಯಾಗಿಸಿಕೊಂಡು ಮೈಪಡೆಯುತ್ತವೆ.
ನಾವು ಸಾಮೂಹಿಕವಾಗಿ ಬದುಕು ನಡೆಸುವ ಸನ್ನಿವೇಶದಲ್ಲಿ, ಯಾವುದೇ ದೇಶ ಇಲ್ಲವೇ ಗ್ರಹಿಕೆಯ ರಚನೆಗೆ ಸಂಬಂಧಿಸಿದ ಒಂದು ನಿರ್ಧಿಷ್ಟವಾದ ಹಾಗೂ ಏಕೈಕವಾದ ಇಲ್ಲವೇ ನಮ್ಮದೆಯಾದ ಒಂದು ನೋಟಕ್ರಮವನ್ನು ನಾವು ಹೊಂದಲಾರವು. ಏಕೆಂದರೆ, ಬಹುಜನರು ಬದುಕು ನಡೆಸುವ ಸನ್ನಿವೇಶದಲ್ಲಿ ಸಹಜವಾಗಿ ನೋಟಕ್ರಮಗಳು ಬಹುಸಂಕೀರ್ಣವಾದ ಲೋಕನೋಟಗಳಿಂದ ರೂಪುಗೊಂಡಿರುತ್ತವೆ. ಹಾಗಂತ ಅವುಗಳ ನಡುವೆ ಯಾವುದೇ ವ್ಯತ್ಯಾಸಗಳು ಇರಲಾರವು ಎಂದು ಮಾತ್ರ ಹೇಳಲು ಸಾಧ್ಯವಿಲ್ಲ.
ನುಡಿ ಬಳಕೆ ಸಾಮಾಜಿಕ ಬದುಕನ್ನು ಪಸರಿಸುವಂತೆ, ಆ ನುಡಿ ಬಳಸುವ ವಿಧಾನದಲ್ಲಿಯೇ ಈ ಸಾಮಾಜಿಕ ಬದುಕಿನ ವಿನ್ಯಾಸಗಳು ಕೂಡ ಅಂತಸ್ಥವಾಗಿರುತ್ತವೆ. ಬಹುತೇಕ ನುಡಿಯರಿಗರು ನುಡಿಯನ್ನು ಅದೊಂದು ಅಮೂರ್ತ ರಚನೆಯನ್ನಾಗಿ ಮಾತ್ರ ಪರಿಗಣಿಸಿರುತ್ತಾರೆ. ಅಂದರೆ ನುಡಿಯು ತನ್ನಷ್ಟಕ್ಕೆ ತಾನು ಸ್ವತಂತ್ರವಾಗಿ ನೆಲೆಗೊಂಡು ನಿರ್ಧಿಷ್ಟ ನುಡಿ ಬಳಕೆಯ ಸನ್ನಿವೇಶಗಳಿಗೆ ಮಾತ್ರ ಸೀಮಿತವಾಗಿರುತ್ತದೆ.
ಉದಾ.ಗೆ ಗಣಿತದ ಯಾವುದೇ ತಾರ್ಕಿಕ ರಚನೆಯು ನೇರವಾಗಿ ಸಮೂಹಗಳ ನಿರ್ಧಿಷ್ಟ ಸಮಸ್ಯೆಗಳಿಗೆ ಮಾತ್ರ ಅನ್ವಯವಾಗದೇ ಅದೊಂದು ಸ್ವತಂತ್ರ ಸೂತ್ರವಾಗಿ ರೂಪುಗೊಳ್ಳುತ್ತದೆ. ಆದರೆ ನುಡಿ ಬಳಕೆಯ ಒಂದೊಂದು ಅನುಭವ ಮತ್ತು ಪ್ರಯೋಗವು ಆಯಾ ನುಡಿ ಬಳಕೆಗೆ ಒಳಪಡುವ ವಲಯ ಹಾಗೂ ನಿಯೋಗಗಳಿಗೆ ಮಾತ್ರ ಸಂಬಂಧಿಸಿರುತ್ತವೆ.
ಹಾಗಾಗಿ ಪ್ರತಿಯೊಂದು ಸಂವಹನ ಕ್ರಿಯೆಯು ಕೂಡ ಒಂದೊಂದು ಸಾಮಾಜಿಕ ಸನ್ನಿವೇಶದಲ್ಲಿ ನೆಲೆಗೊಳ್ಳುತ್ತದೆ. ಹಾಗೂ ಭಾಷಿಕರು ಬಳಸು ಆಯಾ ಭಾಷಾ ರೂಪಗಳ ಮೇಲೆ ಈ ಸನ್ನಿವೇಶವು ತನ್ನ ಒತ್ತಾಯವನ್ನು ಹೇರುತ್ತದೆ. ಈ ಭಾಷಿಕರು ಸಾಮಾಜಿಕ ಸನ್ನಿವೇಶವನ್ನು ಹೇಗೆ ವ್ಯಾಖ್ಯಾನಿಸುತ್ತಾರೆ? ಇವರ ಗ್ರಹಿಕೆಗಳ ಬಗೆಗೆ ಬೇರೆಯವರಿಗೆ ಏನು ಗೊತ್ತಿರುತ್ತದೆ? ಅವರು ಹೇಗೆ ಇವುಗಳನ್ನು ಕುರಿತು ಯೋಚಿಸಬಲ್ಲರು? ಅವರು ಇವರ ಬಗೆಗೆ ಏನನ್ನು ಚಿಂತಿಸಬಲ್ಲರು ಮತ್ತು ನಂಬಬಲ್ಲರು? ಹಾಗೂ ತಮ್ಮ ಮತ್ತು ಬೇರೆಯವರ ಅಸ್ಮಿತೆಗಳ ಬಗೆಗೆ ಇವರು ಏನನ್ನು ಬಯಸುತ್ತಾರೆ ಎಂಬಿತ್ಯಾದಿ ಸಂಗತಿಗಳು, ಮಾತಿನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ರೂಪ ಮತ್ತು ಅರ್ಥಗಳ ಮೇಲೆ ಇವುಗಳು ಪರಿಣಾಮವನ್ನು ಬೀರುತ್ತವೆ.
ಆಯಾ ಸಾಮಾಜಿಕ ಮತ್ತು ಭಾಷಿಕ ಸನ್ನಿವೇಶಗಳನ್ನು ನೆಲೆಯಾಗಿಸಿಕೊಂಡು, ನೋಟಕ್ರಮಗಳ ತಿರುಳು (ಅರ್ಥ) ಪ್ರಸ್ತುತಗೊಳ್ಳುತ್ತದೆ. ಹಾಗೂ ಆಯಾ ಸನ್ನಿವೇಶಗಳಿಗೆ ಅನುಗುಣವಾಗಿ ನುಡಿಯಲ್ಲಿ ಮೈಪಡೆಯುವ ಈ ಎಲ್ಲ ನೋಟಕ್ರಮಗಳನ್ನು ವ್ಯಾಖ್ಯಾನಿಸಲಾಗುತ್ತದೆ.
ಅಂದರೆ ಹೇಳುಗ ಮತ್ತು ಕೇಳುಗರು ಜೊತೆಗೂಡಿ ತಾವು ಏನನ್ನು ಭಾವಿಸುತ್ತಾರೆ, ಏನನ್ನು ಗ್ರಹಿಸುತ್ತಾರೆ, ಏನನ್ನು ನೋಡುತ್ತಾರೆ ಹಾಗೂ ಸಂವಹನದ ಯಾವ ಹಂತವನ್ನು ಇವರು ತಲಪುತ್ತಾರೆ ಎಂಬೆಲ್ಲ ಸಂಗತಿಗಳು ಒಂದು ಪ್ರದೇಶದಲ್ಲಿ ಪ್ರಮುಖವಾಗುತ್ತವೆ. ಇಲ್ಲಿ, ಅಲ್ಲಿ, ಎಲ್ಲಿ, ಯಾವಾಗ, ಇದು, ಅದು ಮುಂತಾದ ಭಾಷಿಕ ಸೂಚಿಗಳು ಒಂದು ನಿರ್ಧಿಷ್ಟ ಕಾಲ ಮತ್ತು ದೇಶದ ವಿನ್ಯಾಸವನ್ನು ರೂಪಿಸುತ್ತವೆ.
ಮತ್ತು ಅಂತವೊಂದು ಸನ್ನಿವೇಶವನ್ನು ರೂಪಿಸುವ ಮುಕ್ತ ಅವಕಾಶವೂ ಈ ಭಾಷಿಕ ಸೂಚಿಗಳಲ್ಲಿ ಅಂತಸ್ಥವಾಗಿರುತ್ತದೆ. ಯಾವಾಗ ಹೇಳುಗ ಮತ್ತು ಕೇಳುಗರು ಒಂದು ದಿಟ ಪ್ರದೇಶವನ್ನು (ರಿಯಲ್ ಸ್ಪೇಸ್) ಪರಿಭಾವಿಸಲು, ಈಗ, ನಾಳೆ ಮತ್ತು ಕಳೆದ ವರುಷ ಮೊದಲಾದವುಗಳನ್ನು ಬಳಸುವುದನ್ನು ನೋಡಬಹುದು. ಉದಾ.ಗೆ ಬೇಂದ್ರೆಯವರ ಕವನವೊಂದರಲ್ಲಿ ಬಳಸಿರುವ ಇದಕ್ಕು, ಅದಕ್ಕು ಎದಕ್ಕು ಎಂಬೆಲ್ಲ ಸೂಚಕಗಳು ಕೇವಲ ಯಾವುದೇ ಒಂದು ಕಾಲ ಮತ್ತು ದೇಶಕ್ಕೆ ಮಾತ್ರ ಸೀಮಿತಗೊಂಡಿಲ್ಲ.
ಬದಲಾಗಿ ಆಯಾ ಕಾಲ ಮತ್ತು ದೇಶದ ಸನ್ನಿವೇಶಗಳಿಗೆ ಅನ್ವಯವಾಗುವ ಮುಕ್ತತೆ ಈ ಸೂಚಕಗಳಲ್ಲಿ ಇರುವುದನ್ನು ನೋಡಬಹುದು. ಹಾಗೂ ಪಂಪನ ಕಾವ್ಯದಲ್ಲಿ ಬಳಸಿರುವ ಎಷ್ಟೊಂದು ಅಭಿವ್ಯಕ್ತಿಗಳನ್ನು ನಮ್ಮ ಇವತ್ತಿನ ಸನ್ನಿವೇಶಕ್ಕೆ ಅನ್ವಯಿಸಿಕೊಂಡು ಮಾತ್ನಾಡುವಾಗ, ವ್ಯಕ್ತಿಗಳ ಹೆಸರುಗಳನ್ನು ಪರಿಗಣಿಸದೇ, ಆಯಾ ವ್ಯಕ್ತಿಗಳು ಪ್ರತಿನಿಧಿಸುವ ಸಾಮಾಜಿಕ ನೆಲೆ ಇಲ್ಲವೇ ಅಂತಸ್ತನ್ನು ಪರಿಗಣಿಸುತ್ತೇವೆ. ಯಾವುದೋ ಒಂದು ಕಾಲ್ಪನಿಕ ಪ್ರದೇಶದ (ಇಮ್ಯಾಜಿನ್ಡ್ ಸ್ಪೇಸ್) ಕಾಲ್ಪನಿಕ ನೆಲೆಯಿಂದ (ಇಮ್ಯಾಜಿನ್ಡ್ ಲೊಕೇಶನ್) ಬದುಕಿನ ನೋಟಗಳನ್ನು ಯಾವುದೇ ಒಬ್ಬ ಕಾಲ್ಪನಿಕ ಪಾಲುದಾರನಿಗೆ ಕಾಣಲು ಇಲ್ಲವೇ ತಲುಪಲು ಹೇಗೆ ಸಾಧ್ಯವಾಗುತ್ತದೆ.
ಅಂದರೆ ಹೇಳುಗ ಮತ್ತು ಕೇಳುಗ ಇವರಿಬ್ಬರೂ ಏನೆಲ್ಲವನ್ನೂ ಅರಿಯಲು, ಯೋಚಿಸಲು, ಗ್ರಹಿಸಲು ಹಾಗೂ ಪರಿಭಾವಿಸಲು ಸಾಧ್ಯವೋ, ಅದೆಲ್ಲವನ್ನೂ ಕಾಲ್ಪನಿಕವಾಗಿಯೇ ಪರಿಭಾವಿಸಲಾಗುತ್ತದೆ. ಏನೆಂದರೆ, ಮಾನಸಿಕ ನೆಲೆವೊಂದು (ಮೆಂಟಲ್ ಸ್ಪೇಸ್) ಏನೆಲ್ಲವನ್ನು ಒಳ್ಗೊಂಡಿರುತ್ತದೆ ಎನ್ನುವುದನ್ನು ಅರಿಯಲು ನಮಗೆಲ್ಲ ಸಾಧ್ಯವಾಗುವುದೇ ಮಾನಸಿಕವಾಗಿ ನೆಲೆಗೊಳ್ಳುವ ಇಂತಹ ಲೆಕ್ಕಾಚಾರಗಳಿಂದ ಮಾತ್ರ. ಹಾಗಾದರೆ, ಪ್ರತೀ ವ್ಯಕ್ತಿಯ ಮಾನಸಿಕ ನೆಲೆಯು ಪರಿಭಾವಿಸುವ ಯಾವುದೇ ವಿಚಾರ ಇಲ್ಲವೇ ನೋಟಕ್ರಮಗಳು, ಆಯಾ ವ್ಯಕ್ತಿಗೆ ಮಾತ್ರ ನಿರ್ಧಿಷ್ಟವಾಗಿರುತ್ತವೋ ಎಂಬ ಪ್ರಶ್ನೆಯೂ ಇಲ್ಲಿ ಎದುರಾಗುತ್ತದೆ.
ವಿಚಾರ ಇಲ್ಲವೇ ನೋಟಕ್ರಮಗಳು ವ್ಯಕ್ತಿ ವಿಶಷ್ಟತೆಯಿಂದ ಕೂಡಿರಲಾರವು. ಬದಲಾಗಿ ವ್ಯಕ್ತಿಗಳು ಈ ವಿಚಾರಗಳನ್ನು ಪರಿಭಾವಿಸುವ ಇಲ್ಲವೇ ನಿರ್ವಚಿಸುವ ವಿನ್ಯಾಸಗಳು ಮಾತ್ರ ಬೇರೆಯಾಗಿರುತ್ತವೆ. ಕಾಲ್ಪನಿಕ ಇಲ್ಲವೇ ದಿಟವಾದ ವ್ಯಕ್ತಿ, ಕಾಲ ಮತ್ತು ದೇಶಗಳನ್ನು ಪರಿಭಾವಿಸಲು ನಮಗೆ ಮುಖ್ಯವಾಗಿ ಡೈಯಕ್ಸಿಸ್ಗಳು (Deixis) ಒತ್ತಾಸೆಯಾಗಿರುತ್ತವೆ. ಡೈಯಕ್ಸಿಸ್ಗಳು ಮೂಲಕವೇ ನಾವು ಯಾವುದೇ ನುಡಿ ಪಠ್ಯಗಳಲ್ಲಿ ಸಂದರ್ಭಗಳನ್ನು ರೂಪಿಸಿಕೊಳ್ಳುತ್ತೇವೆ. ಈ ಸಂದರ್ಭಗಳೇ ನಮಗೆ ಕಾಲ, ದೇಶಗಳನ್ನು ಪರಿಭಾವಿಸಲು ಸೂಚಕಗಳಾಗಿರುತ್ತವೆ.
ಉದಾ.ಗೆ ನೀವು ದಯವಿಟ್ಟು ಇವತ್ತು ನಮ್ಮ ಮನೆಗೆ ಊಟಕ್ಕೆ ಬನ್ನಿ. ಈ ಉದಾಹರಣೆಯಲ್ಲಿರುವ ‘ನಮ್ಮ ಮನೆಗೆ’ ಎಂಬ ಉಲ್ಲೇಖವನ್ನು ಹೇಳುಗನು ಉಲ್ಲೇಖಿಸುವಾಗ, ಅವನು ಕಡ್ಡಾಯವಾಗಿ ತನ್ನ ಮನೆಯಲ್ಲಿಯೇ ಇರಬೇಕಾದ ಅಗತ್ಯವಿಲ್ಲ. ಮತ್ತು ಕೇಳುಗನಿಗೆ ಈ ಆಮಂತ್ರಣವನ್ನು ತನ್ನ ಮನೆಯಿಂದಲೇ ನೀಡುವ ಅಗತ್ಯವೂ ಕೂಡ ಇರುವುದಿಲ್ಲ. ಹಾಗೂ ಕೇಳುಗನು ಕೂಡ ಪ್ರತಿಯಾಗಿ, ಹ್ಞಾ! ಖಂಡಿತವಾಗಿ ನಾನು ನಿಮ್ಮ ಮನೆಗೆ ಊಟಕ್ಕೆ ಬರುತ್ತೇನೆ. ಎಂದು ಹೇಳುವಾಗಲೂ ಕೂಡ ಅವನು ಈ ಹೇಳುಗನ ಮನೆಗೆ ಬಂದು ಹೇಳುವ ಅವಶ್ಯಕತೆ ಇರವುದಿಲ್ಲ. ಅಂದರೆ ನುಡಿ ಸಾಮಗ್ರಿಗಳನ್ನು ಬಳಸುವಾಗ, ತಿರುಳುಗಳನ್ನು ಹೊರಡಿಸಲು ಬೇಕಾಗುವ ಅಂತರ್ಗತ ಸಾಮಗ್ರಿಗಳು ಅವುಗಳಲ್ಲಿ ಅಡಕವಾಗಿರುತ್ತವೆ.
ರಚನೆ ಹಾಗೂ ತಿರುಳು, ಈ ಎರಡೂ ನೆಲೆಗಳಿಂದಲೂ ನುಡಿ/ಮಾತು ಸಂದರ್ಭ ಮುಕ್ತವಾಗಿರುತ್ತದೆ. ಈ ಸಂದರ್ಭ ಮುಕ್ತತೆ ಕಾಲ-ದೇಶ-ವ್ಯಕ್ತಿಗಳನ್ನು ಮೀರಿ ನಿಲ್ಲುತ್ತದೆ. ಉದಾ.ಗೆ ಕುವೆಂಪು ಅವರು ತಮ್ಮ ಶ್ರೀ ರಾಮಯಣ ದರ್ಶನಂ, ಕೃತಿಯಲ್ಲಿ ಊರ್ಮಿಳೆಯಿಂದ, “ಕಡಲ್ಗಿದಿರ್ ಪನಿಗೇಂ ಪ್ರದರ್ಶನಂ” ಎಂಬ ಮಾತನ್ನು ಆಡಿಸುತ್ತಾರೆ. ಗಂಡನಿಗಾಗಿ ತಾನು ತಪಸ್ವಿನಿಯಂತೆ ಬದುಕಿದ್ದು ಪ್ರದರ್ಶನಕ್ಕಲ್ಲ ಎನ್ನುವ ಊರ್ಮಿಳೆಯ ಈ ಮಾತು ಸಾಂದರ್ಭಿಕವಾಗಿದ್ದರೂ, ಇದು ಸಂದರ್ಭ ಮುಕ್ತತೆಯನ್ನೂ ಪಡೆದಿರುತ್ತದೆ ಎಂಬುದು ಮಾತ್ರ ದಿಟ. ಯಾವುದೇ ಗುರಿರಹಿತ ಬದುಕಿನ ಯಾವುದೇ ಒಂದು ಕ್ರಿಯೆಯ ತಾತ್ಪರ್ಯವನ್ನು ಸೂಚಿಸಲು ಈ ಮಾತನ್ನು ಬಳಸಲು ಸಾಧ್ಯವಿದೆ.
ಕೇವಲ ಆಡಂಬರಕ್ಕಾಗಿ ಇಲ್ಲವೇ ಪ್ರದರ್ಶನಕ್ಕಾಗಿ ನಡೆಯುವ ಕ್ರಿಯೆಗಳನ್ನು ಟೀಕಿಸಲೂ ಕೂಡ ಈ ಮಾತನ್ನು ಬಳಸಬಹುದಾಗಿದೆ. ಪ್ರಾಥಮಿಕವಾಗಿ ನುಡಿಯೊಂದು ರಾಚನಿಕ ವ್ಯವಸ್ಥೆಯಾಗಿದ್ದರೂ ಕೂಡ, ಅದಕ್ಕೊಂದು ಅನಕೂಲಾತ್ಮಕ ನೆಲೆ ಇದ್ದೇ ಇರುತ್ತದೆ. ನುಡಿಯೊಂದಕ್ಕೆ ಈ ನೆಲೆಯೂ ಅತ್ಯಂತ ಮಹತ್ವದ ಸಂಗತಿಯಾಗಿರುತ್ತದೆ. ಅಂದರೆ, ಉಲಿ (ಧ್ವನಿ) ಮತ್ತು ತಿರುಳುಗಳ (ಅರ್ಥ) ನಡುವೆ ಯಾವುದೇ ಬಗೆಯ ತಾರ್ಕಿಕ ನಂಟಸ್ತಿಕೆ ಇರುವುದಿಲ್ಲ. ಉದಾ.ಗೆ ‘ಮರ’ ಎಂಬ ಪದದ ಉಲಿಗಳ ಮೊತ್ತಕ್ಕೂ ಅದು ನಿರೂಪಿಸುವ ತಿರುಳಿಗೂ ಯವುದೇ ಬಗೆಯ ನಂಟಿರುವುದಿಲ್ಲ. ಪ್ರತೀ ನುಡಿಯೊಳಗೆಯೇ ನಡೆಯುವ ಇಂತಹವೊಂದು ಹೊಂದಾಣಿಕೆಯ ನೆಲೆಯನ್ನೇ ನಾವು ಇಲ್ಲಿ ಅನಕೂಲಾತ್ಮಕವೆಂದು ಬಣ್ಣಿಸುತ್ತೇವೆ.
ನುಡಿ ತನ್ನಲ್ಲಿರುವ ಈ ಅನಕೂಲಾತ್ಮಕ ರಾಚನಿಕ ಸಾಮಗ್ರಿಗಳನ್ನು ಉಪಯೋಗಿಸಿಕೊಂಡೇ ಆಯಾ ಕಾಲ, ದೇಶ ಹಾಗೂ ವ್ಯಕ್ತಿಗಳಿಗೆ ಪೂರಕವಾಗುವ ಇಲ್ಲವೇ ಅಗತ್ಯವಾಗುವ ಸಂಕಥನಗಳನ್ನು ಕಟ್ಟುತ್ತಿರುತ್ತದೆ. ‘ಈ ಸಂಕಥನಗಳ ನಿರೂಪಣೆಯ ನುಡಿಯು ಕೂಡ ಕಣ್ಣಿನ ಓದಿಗೆ ಅನಕೂಲವಾಗುವಂತೆ ಇರುವ ಬದಲಾಗಿ ಕಿವಿಯ ಓದಿಗೆ ತಕ್ಕಂತೆ ಇರುತ್ತದೆ.
ಕಣ್ಣಿಗೆ ಕಾಣುವಂತೆ ಹೇಳುವುದಕ್ಕಿಂತ ಕಣ್ಣಿಗೆ ಕಟ್ಟುವಂತೆ ಹೇಳುವುದು ಈ ಸಂಕಥನಗಳ ದಾಟಿಯಾಗಿರುತ್ತದೆ’ (ಕೆವಿಎನ್:2010). ಮಾತು ಮತ್ತು ಮಾತಿನ ಮೂಲಕ ದೊರೆಯುವ ಒಂದೊಂದು ತಿರುಳು, ತಿಳಿವು ಹಾಗೂ ಹೊಳವುಗಳೆಲ್ಲವೂ ಅನುಭವದ ನೆಲೆಯನ್ನು ಪಡೆಯುತ್ತವೆ. ಮಾತು ಅನುಭವದ ಆಯಾಮವನ್ನು ಪಡೆದಕೂಡಲೇ, ಅದಕ್ಕೊಂದು ಸಂದರ್ಭ ಮುಕ್ತತೆಯು ಪ್ರಾಪ್ತವಾಗುತ್ತದೆ. ಇಂತಹ ವಿನ್ಯಾಸಗಳ ಕಾರಣವಾಗಿಯೇ ಮಾತು, ವ್ಯಕ್ತಿ, ಕಾಲ ಹಾಗೂ ದೇಶಗಳ ನಡುವೆ ವಿಭಜನೆಯೂ ಏರ್ಪಡುತ್ತದೆ ಎನ್ನುವುದು ಅತ್ಯಂತ ಮಹತ್ವದ ವಿದ್ಯಮಾನವಾಗಿದೆ.
ಆದರೆ ಸಾಮಾಜಿಕ ವಾಸ್ತವಗಳ ಮೂಲನೆಲೆಗಳು ಮೈಪಡೆಯುವುದು ಅಯಾ ನುಡಿಯಿಗರು (ಭಾಷಿಕರು) ತಾವಾಡುವ ನುಡಿಯ ತಿಳಿವಿನ ಮೂಲಕವೇ ಎಂಬುದು ಗಮನಾರ್ಹ. ಈ ವಿನ್ಯಾಸವು ಅತ್ಯಂತ ವ್ಯಾಪಕವಾಗಿರುತ್ತದೆ. ಮಾನಸಿಕ ಜಗತ್ತು ಮತ್ತು ಭೌತಿಕ ಜಗತ್ತಿನಲ್ಲಿರುವ ವಸ್ತುಗಳ-ವಿದ್ಯಮಾನಗಳ ತಿಳಿವನ್ನು ಈ ವಿನ್ಯಾಸವು ಒಳ್ಗೊಂಡಿರುತ್ತದೆ. ಈ ತಿಳಿವಿಗೆ ಎರಡು ಆಯಾಮಗಳು ಇರುತ್ತವೆ.
ಅಂದರೆ ಆಯಾ ತಿಳಿವು ಏನನ್ನು (ನಾಲೇಡ್ಜ್ ವ್ಹಾಟ್) ಸೂಚಿಸುತ್ತದೆ. ಹಾಗೂ ಆಯಾ ತಿಳಿವು ಹೇಗೆ (ನಾಲೇಡ್ಜ್ ಹೌ) ಸಮೂಹಗಳ ಒಡಲಲ್ಲಿ ನೆಲೆಗೊಳ್ಳುತ್ತದೆ ಎಂಬುದಾಗಿವೆ. ಆದರೆ ಈ ಎರಡೂ ತಿಳಿವಿನ ಆಯಾಮಗಳಲ್ಲಿ ಹಲವು ಬಗೆಯ ಸಾಮನ್ಯೀಕರಣದ (ಜನರ್ಯಾಲಿಟಿ) ನೆಲೆಗಳು ಹುದುಗಿರುತ್ತವೆ. ಹಾಗಾಗಿ ಒಂದೊಂದು ಪರಿಕಲ್ಪನಾತ್ಮಕ ತಿಳಿವು ಹಲವು ಆಯಾಮಗಳಿಂದ ಕೂಡಿರುತ್ತದೆ.
ಹಾಗೂ ಇಡಿತನದ ಮಾದರಿಗಳನ್ನು ಈ ಆಯಾಮಗಳು ನಿರಂತರವಾಗಿ ರೂಪಿಸುತ್ತವೆ. ಅಂದರೆ ಹಲವು ವಿಭಿನ್ನ ವಸ್ತುಗಳು ಹಾಗೂ ವಿದ್ಯಮಾನಗಳ ನಡುವಣ ಅಂತರ್ಸಂಬಂಧವನ್ನು ಗುರುತಿಸುವುದಾಗಿದೆ. ನುಡಿಯ ಮೂಲಕ ಮೈಪಡೆಯುವ ಪ್ರತಿಯೊಂದು ತಿಳಿವಿನ ಅವಿಭಾಜ್ಯ ಅಂಗವಾಗಿ ಇಂತಹ ಅಂತರ್ಸಂಬಂಧವು ನೆಲೆಗೊಳ್ಳುತ್ತದೆ.
ನುಡಿ ಸಾಮಗ್ರಿಗಳು ಕೇವಲ ಇಡಿತನವನ್ನು ಮಾತ್ರ ರೂಪಿಸದೇ ಬಿಡಿತನದ ಮೂಲಕ ಸಾಮಾಜಿಕ ಹಾಗೂ ಮಾನಸಿಕ ಪ್ರತ್ಯೇಕತೆಯನ್ನೂ ಸಂಘಟಿಸುತ್ತವೆ. ಅಸ್ಪೃಶ್ಯತೆಯಂತಹ ಅನುಭವವು ಶತಮಾನಗಳಿಂದ ಆಚರಣೆಯಲ್ಲಿದೆ. ಆದರೆ ಈ ಆಚರಣೆಯ ಸಾಮಾಜಿಕ ವಿನ್ಯಾಸದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯವೇ ಹೊರತು ಮಾನಸಿಕ ವಿನ್ಯಾಸದಲ್ಲಿ ಯಾವುದೇ ಬಗೆಯ ಪಲ್ಲಟವು ಇದುವರೆಗೂ ಏರ್ಪಟ್ಟಿರುವುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ.
ತಿರುಳಿನ ಇಲ್ಲವೇ ತಿಳಿವಿನ ಇಡಿತನದ ಸ್ವರೂಪದಲ್ಲಿಯೇ ಸಾಮಾಜಿಕ ಮತ್ತು ಮಾನಸಿಕ ಪ್ರತ್ಯೇಕತೆಯ ಚಹರೆಗಳು ಬಿಂಬಿತವಾಗುತ್ತವೆ. ತಿರುಳಿನ ಇಡಿತನದಲ್ಲಿರುವ ಅಂತರ್ಸಂಬಂಧದ ಆಯಾಮಗಳು ಇಂತಹ ಪ್ರತ್ಯೇಕತೆಯ ಕಾರಣದಿಂದ ಬಿಡಿಬಿಡಿಯಾಗಿ ನೆಲೆಗೊಳ್ಳುತ್ತವೆ. ಅಂದರೆ ಅಭಾದಿತ ಅನುಭವವು ಸಾಮಾಜಿಕ ಹಾಗೂ ಮಾನಸಿಕ ಇಡಿತವನ್ನಷ್ಟೆಯಲ್ಲದೇ ತಿರುಳಿನ ಐಕ್ಯತೆಯನ್ನೂ ಸೂಚಿಸುತ್ತದೆ.
ಆದರೆ ಸಮೂಹಗಳನ್ನು ಭಾದಿಸುವ ಯಾವುದೇ ಬಗೆಯ ಅನುಭವವೊಂದು ಐಕ್ಯತೆಯ ಸೂಚಕವಾಗಿರಲು ಸಾಧ್ಯವಿಲ್ಲ. ಈ ನಿಲುವು ಅತ್ಯಂತ ನಿಚ್ಚಳವಾಗಿ ನುಡಿ ಸಾಮಗ್ರಿಗಳ ಮೂಲಕ ಪ್ರಕಟವಾಗುತ್ತದೆ. ಅಂದರೆ ಮಾತಿನಲ್ಲಿ ಸಾಮಾಜಿಕ–ಮಾನಸಿಕ ಬಿರುಕುಗಳು ತಾವಾಗಿಯೇ ಏರ್ಪಡಲಾರವು ಎಂಬುದನ್ನು ಈ ಬಿಡಿತನದ ಆಯಾಮವು ಸೂಚಿಸುತ್ತದೆ. ಹಾಗಾಗಿ ಜಾತಿ ಮತ್ತು ಅಸ್ಪೃಶ್ಯತೆಯಂತಹ ಅನುಭವಗಳು ಇವತ್ತಿಗೂ ಸಹ ಪ್ರತ್ಯೇಕತೆಯ ಸೂಚಕಗಳಾಗಿ ನೆಲೆನಿಂತಿವೆ. ಪ್ರಜಾಸತ್ತಾತ್ಮಕ ನಿಲುವುಗಳು ಮಾತಿನ ಅವಿಭಾಜ್ಯ ಅಂಗವಾಗದೇ ಕೇವಲ ಉಲಿ ಮತ್ತು ತಿರುಳಿನ ನಡುವಣ ಸೂಚಿತ ಹಾಗೂ ಸೂಚಕ ನಂಟನ್ನು ವಿವರಿಸುವುದಕಷ್ಟೆ ಸೀಮಿತವಾಗಿವೆ.
ಇಂತಹ ಪ್ರತ್ಯೇಕತೆಯ ಕಾರಣಕ್ಕಾಗಿಯೇ ನುಡಿಯು ಎಲ್ಲ ಕಾಲದಲ್ಲಿಯೂ ಅತ್ಯಂತ ಪ್ರಬಲವಾದ ಅಸ್ಮಿತೆಯ ಸೂಚಕವಾಗಿ ನೆಲೆನಿಂತಿದೆ. ನುಡಿಯ ಮೂಲಕ ರೂಪುಗೊಳ್ಳುವ ಈ ಅಸ್ಮಿತೆಯೂ ಧರ್ಮದ ಮೂಲಕ ಪಡೆಯುವ ಅಸ್ಮಿತೆಗಿಂತಲೂ ಅತ್ಯಂತ ಪ್ರಬಲವಾಗಿರುತ್ತದೆ ಎಂಬುದು ಗಮನಾರ್ಹ. ಧರ್ಮವೂ ಕೂಡ ಸಮೂಹಗಳಲ್ಲಿ ಪ್ರತ್ಯೇಕತೆಯನ್ನು ಉಂಟುಮಾಡುವ ಬಹು ದೊಡ್ಡ ಅಸ್ತ್ರವಾಗಿದೆ ಎಂಬುದನ್ನೂ ಇಲ್ಲಿ ಯಾರು ಮರೆಯುವಂತಿಲ್ಲ.
ನುಡಿಯ ಸಂಘಟಿತ ಹಂತದಲ್ಲಿಯೇ ಪರಿಕಲ್ಪನಾತ್ಮಕತೆಯ ನೆಲೆಗಳು ಪರಸ್ಪರ ಸಂಬಂಧಿತ ಪರಿಕಲ್ಪನೆಗಳನ್ನು ಒಳಗೊಳ್ಳಬೇಕಾಗುತ್ತದೆ. ಆದರೆ ಇದೇ ಹಂತದಲ್ಲಿ ಮಾನಸಿಕ-ಸಾಮಾಜಿಕ ಬಿಡಿತನದದ ಇಲ್ಲವೇ ಪ್ರತ್ಯೇಕತೆಯ ಆಯಾಮಗಳು ಕೂಡ ಏರ್ಪಡುತ್ತವೆ. ಅಂದರೆ ಪರಸ್ಪರ ಸಂಬಂಧಿತ ಪರಿಕಲ್ಪನೆಗಳಲ್ಲಿ ಅಡಕವಾಗಿರುವ ಸಂಕೀರ್ಣತೆಯನ್ನು ಗ್ರಹಿಸುವ ಮೂಲಕ ಈ ಬಿಡಿತನದ ವಿನ್ಯಾಸಗಳನ್ನು ಅರಿಯುವ ಅಗತ್ಯವಿರುತ್ತದೆ.
ಏಕೆಂದರೆ ಮಾಹಿತಿಯೊಂದಕ್ಕಿಂತ ಹೆಚ್ಚು ಸಂಕೀರ್ಣವಾಗಿರುವ ವಸ್ತುಸ್ಥಿತಿಯೊಂದು ನುಡಿಯ ಅಭಿವ್ಯಕ್ತಿಗಳ ಮೂಲಕ ಸಹಜವಾಗಿ ಪ್ರತಿನಿಧಿಕರಣಗೊಳ್ಳುತ್ತದೆ. ಈ ಅಭಿವ್ಯಕ್ತಿಗಳನ್ನು ಅರ್ಥೈಸಿಕೊಳ್ಳುವುದೆಂದರೆ, ಆಯಾ ಮಾತುಗಳಲ್ಲಿ ಅತ್ಯಂತ ವ್ಯಾಪಕವಾಗಿ ಅಂತಸ್ಥವಾಗಿರುವ ಮಾಹಿತಿಗಳನ್ನು ಮಾತ್ರ ಅರಿಯುವುದಲ್ಲ. ಬದಲಾಗಿ ಅವುಗಳು ಸೂಚಿಸುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನಸಿಕ ವಿನ್ಯಾಸಗಳನ್ನೂ ತಿಳಿಯುವುದಾಗಿದೆ.
ಹಾಗಾಗಿ ಅಭಿವ್ಯಕ್ತಿಯೊಂದು ರೂಪುಗೊಳ್ಳುವುದೆಂದರೆ, ವಿಸ್ತಾರವದ ಮಾಹಿತಿಯೊಂದನ್ನು ಅಮೂರ್ತಗೊಳಿಸಿ ನೋಡುವ ಬಗೆಯಾಗಿರುತ್ತದೆ. ಹೀಗೆ ಒಂದು ವ್ಯವಸ್ಥಿತವಾದ ವಿಸ್ತಾರದಲ್ಲಿ ಹರಡಿಕೊಂಡಿರುವ ಒಟ್ಟು ನುಡಿಮೊತ್ತವೇ ಹಾಗೂ ಆಯಾ ಸನ್ನಿವೇಶಕ್ಕೆ ಅಗತ್ಯವಿರುವ ಮಾಹಿತಿಗಳ ಸಂಚಯವೇ ಸಂಕಥನಗಳಾಗಿ ರೂಪುಗೊಳ್ಳುತ್ತವೆ. ಇಂತಹ ಸಂಕಥನಗಳು ಬಹುತೇಕವಾಗಿ ಪ್ರತಿನಿಧಿಕರಣದ ಮಾದರಿಗಳಾಗಿ ರೂಢಿಯಲ್ಲಿರುತ್ತವೆ.
ಯಾವುದೇ ತಿಳುವಿನ ನಿರ್ವಚನೆಯ ವಿನ್ಯಾಸಗಳು ಕೂಡ ಇಂತಹ ಸಂಕಥನಗಳ ಸನ್ನಿವೇಶಗಳಲ್ಲಿಯೇ ಬೇರೂರಿತ್ತವೆ. ಹಾಗಾಗಿ ಕಾಲ, ದೇಶ ಮತ್ತು ವ್ಯಕ್ತಿಗಳಿಗೆ ಅನುಗುಣವಾದ ಸಂಕಥನಗಳು-ಸನ್ನಿವೇಶಗಳು ನಿರಂತರವಾಗಿ ವಿಕಾಸಗೊಳ್ಳುತ್ತವೆ. ಪರಿಣಾಮವಾಗಿ ಮಾತು ಮತ್ತು ಈ ಎಲ್ಲ ಸಂಕಥನ-ಸನ್ನಿವೇಶಗಳ ನಡುವೆ ಸಹಜವಾಗಿ ವಿಭಜನೆಗಳು ಕೂಡ ಏರ್ಪಡುತ್ತವೆ. ಆದ್ದರಿಂದ ಪ್ರಾದೇಶಿಕ (ಸ್ಪೇಶಿಯಲ್) ಕೇಂದ್ರಿತ ನೋಟಕ್ರಮಗಳು, ಪರಿಕಲ್ಪನಾತ್ಮಕ ಕೇಂದ್ರಿತ ನೋಟಕ್ರಮಗಳಕ್ಕಿಂತ ಭಿನ್ನವಾಗಿರುತ್ತವೆ.
ಏಕೆಂದರೆ, ಕೇಳುಗನ ತಿಳಿವು, ನಂಬಿಕೆ, ಭಾವನೆಗಳು, ಪ್ರೇರಣೆಗಳು ಮೊದಲಾದ ಸಂಗತಿಗಳನ್ನು ಪರಿಗಣನೆಗೆ ತೆಗೆದುಕೊಂಡು, ಹೇಳುಗನು ತನ್ನ ಸಂದೇಶಗಳನ್ನು ರೂಪಿಸುತ್ತಾನೆ. ಈ ಪ್ರಕ್ರಿಯೆಯೂ ಕಾಲ, ದೇಶ ಹಾಗೂ ವ್ಯಕ್ತಿಗಳ ನೆಲೆಯಲ್ಲಿ ನಿರಂತರವಾಗಿ ನಡೆಯುತ್ತದೆ. ಇಲ್ಲಿ ಕಾಲಿಕ (ಟೆಂಪೊರಲ್) ವಿನ್ಯಾಸಗಳು ಮಹತ್ವವನ್ನು ಪಡೆದುಕೊಳ್ಳುವುದು ಕೂಡ ಇದೇ ಕಾರಣಗಳಿಂದ.
ಅದಕ್ಕಾಗಿ ಡೆರಿಡಾ ಹೇಳುವ ಸೂಚಕ-ಸೂಚಿತಗಳ ನಡುವಣ ಅಪರಿಮಿತವಾದ ಅರ್ಥದ ನಂಟಸ್ತಿಕೆಯನ್ನು ಗುರುತಿಸಲೂ ಕೂಡ ಈ ಕಾಲ-ದೇಶ ಹಾಗೂ ವ್ಯಕ್ತಿಗಳಿಗೆ ಸಂಬಂಧಿಸಿದ ವಿನ್ಯಾಸಗಳೇ ಕಾರಣವಾಗುತ್ತವೆ. ಅಂದರೆ, ಅರ್ಥದಲ್ಲಿ ಉಂಟಾಗುವ ಭೇದಗಳಿಗೆ ಪ್ರಾದೇಶಿಕತೆ (ಸ್ಪೇಶಿಯಲ್) ಕಾರಣವಾದರೆ, ಅರ್ಥಗಳ ಪಲ್ಲಟ ಇಲ್ಲವೇ ಮುಂದೂಡಿಕೆಗೆ ಕಾಲಿಕ (ಟೆಂಪೊರಲ್) ವಿನ್ಯಾಸಗಳು ಕಾರಣವಾಗುತ್ತವೆ ಎಂಬ ಹೊಳವು ಡೆರಿಡಾನ ಚಿಂತನೆಗಳಲ್ಲಿ ಎದ್ದು ಕಾಣುತ್ತದೆ.
ಒಟ್ಟಿನಲ್ಲಿ ಮಾತು ಮತ್ತು ಕಾಲ, ದೇಶ ಹಾಗೂ ವ್ಯಕ್ತಿಗಳ ನಡುವಣ ವಿಭಜನೆಗೆ ಏನೆಲ್ಲ ಸಂಗತಿಗಳು ಕಾರಣವಾಗುತ್ತವೆ. ಈ ಸಂಗತಿಗಳಿಗೆ ನುಡಿ ಮತ್ತು ನುಡಿ ಸಾಮಗ್ರಿಗಳು ಮಾತ್ರ ಕಾರಣವಲ್ಲ. ಬದಲಾಗಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನಸಿಕ ವ್ಯಾಪಾರಗಳೂ ಕೂಡ ಕಾರಣವಾಗುತ್ತವೆ ಎನ್ನುವ ದಿಟವನ್ನು ಇಲ್ಲಿ ಅರಿಯಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

