ದಿನದ ಸುದ್ದಿ
ಬ್ಯಾಂಕುಗಳಲ್ಲಿ ಕನ್ನಡ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/11/erri-swami_suddidina.jpg&description=ಬ್ಯಾಂಕುಗಳಲ್ಲಿ ಕನ್ನಡ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/11/erri-swami_suddidina.jpg&description=ಬ್ಯಾಂಕುಗಳಲ್ಲಿ ಕನ್ನಡ..!', 'pinterestShare', 'width=750,height=350'); return false;" title="Pin This Post">
- ಎನ್.ಟಿ.ಎರ್ರಿಸ್ವಾಮಿ, ವಿಶ್ರಾಂತ ವಿಭಾಗೀಯ ಪ್ರಬಂಧಕರು,ಕೆನರಾ ಬ್ಯಾಂಕ್,ದಾವಣಗೆರೆ
ಮನುಷ್ಯ ಮನುಷ್ಯರ ನಡುವೆ ಉತ್ತಮ ಬಾಂಧವ್ಯ ಏರ್ಪಡಲು, ಒಬ್ಬರು ಮತ್ತೊಬ್ಬರನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಅವರಾಡುವ ಭಾಷೆ ಮಹತ್ತರ ಪಾತ್ರವಹಿಸಬಲ್ಲದು. ಅದು ಸರಳವಾಗಿ, ಸಹಜವಾಗಿ ಇಬ್ಬರಿಗೂ ಅರ್ಥವಾಗುವಂತಿರಬೇಕು. ಅದು ಸಮೂಹದ ಭಾಷೆಯಾದಾಗ, ಸಮಾಜ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿಯೂ ಅದು ಪ್ರಭಾವ ಉಂಟು ಮಾಡಬಲ್ಲದು.
ಮಾನವ ವಿಕಾಸದ ಹಾದಿಯಲ್ಲಿ ಭಾಷೆ ಉಂಟು ಮಾಡುವ ಸಂಚಲನವನ್ನು ನಾವು ಯುಗ ಯುಗಗಳಿಂದಲೂ ಗಮನಿಸುತ್ತಾ ಬಂದಿದ್ದೇವೆ. ಹಾಗೆ ನೋಡಿದರೆ ಪ್ರಪಂಚದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿಯೇ ಪ್ರಮುಖವಾದ ಭಾಷೆ ಕನ್ನಡ. ಇಲ್ಲಿನ ನೆಲ-ಜಲ, ಗುಡ್ಡ-ಬೆಟ್ಟ, ಕಾಡು-ಮೇಡು, ಜನ-ಜಾನುವಾರುಗಳ ಮೇಲೆ ಸಾವಿರಾರು ವರ್ಷಗಳಿಂದ ಕನ್ನಡ ಭಾಷೆ ಮಾಡುತ್ತಾ ಬಂದಿರುವ ಮೋಡಿ ಅಮೋಘವಾದುದು.
ಕನ್ನಡಕ್ಕೆ ಯಾವ ರೀತಿಯ ಪ್ರಾಚೀನತೆಯಿದೆಯೋ, ಅದೇ ರೀತಿಯ ಪ್ರಾಚೀನತೆಯೂ ಕರ್ನಾಟಕದ ಬ್ಯಾಂಕಿAಗ್ ಕ್ಷೇತ್ರಕ್ಕೂ ಇದೆ ಎಂಬುದು ಒಂದು ವಿಶೇಷ ಹಾಗೂ ಹೆಗ್ಗಳಿಕೆಯ ಸಂಗತಿ. ದೇಶದಲ್ಲಿಯೇ ಪ್ರಥಮವಾಗಿ ಸಹಕಾರಿ ಬ್ಯಾಂಕುಗಳು. ಖಾಸಗಿ ಬ್ಯಾಂಕುಗಳು, ರಾಷ್ಟ್ರೀಕೃತವಾದ ಬ್ಯಾಂಕುಗಳು, ರಾಷ್ಟ್ರೀಕರಣವಾಗಬಹುದಾದ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು ಉದಯವಾಗಿದ್ದು ಪ್ರಥಮವಾಗಿ ಕನ್ನಡದ ನೆಲದಲ್ಲಿಯೇ ಎಂಬುದನ್ನು ನಾವು ಮರೆಯಲಾಗದು.
ಹಿಂದೆ ಕನ್ನಡ ಭಾಷೆಯನ್ನು ಬ್ಯಾಂಕುಗಳಲ್ಲಿ ಬಳಸುವ ಬಗ್ಗೆ ಯಾವುದೇ ತಂಟೆ-ತಕರಾರು ಹಾಗೂ ತೊಂದರೆಗಳು ಇರಲಿಲ್ಲ. ಕನ್ನಡ ನೆಲದಲ್ಲಿಯೇ ಹುಟ್ಟಿ ಬೆಳೆದ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ವಿಜಯ ಬ್ಯಾಂಕು, ಕಾರ್ಪೋರೇಷನ್ ಬ್ಯಾಂಕು, ಯಥೇಚ್ಛವಾಗಿ ಕನ್ನಡವನ್ನು ಬಳಸುತ್ತಿದ್ದವು ಎಂಬುದಕ್ಕೆ ಅನೇಕ ಉದಾಹರಣೆಗಳಿವೆ.
ಅದೂ ಅಲ್ಲದೆ ಭಾರತೀಯ ಸ್ಟೇಟ್ ಬ್ಯಾಂಕ್, ಐ.ಸಿ.ಐ.ಸಿ.ಐ. ನಂತಹ ಬ್ಯಾಂಕುಗಳು ಕೂಡ ಪ್ರಾರಂಭಿಕ ಹಂತದಲ್ಲಿ ಕನ್ನಡದಲ್ಲಿಯೇ ಹೆಚ್ಚು ವ್ಯವಹರಿಸುವ ಪರಿಪಾಟವನ್ನು ಹೊಂದಿದ್ದವು ಎಂದರೆ ನಮಗೆ ಆಶ್ಚರ್ಯವಾಗದಿರದು. ಆದರೆ ಖಾಸಗೀಕರಣ, ಆಧುನೀಕರಣ, ಯಂತ್ರೀಕರಣ, ಜಾಗತೀಕರಣದ ಪ್ರಭಾವಕ್ಕೆ ಸಿಲುಕಿದ ಬ್ಯಾಂಕುಗಳು ಹಂತ ಹಂತವಾಗಿ ಸ್ಥಳೀಯ ಭಾಷೆಯಿಂದ ವಿಮುಖವಾಗುವ ಸನ್ನವೇಶ ಎದುರಾಯಿತು.
ಇಂದು ಗಣಕೀಕರಣದ ಉಚ್ಛ್ರಾಯ ಸ್ಥಿತಿಯಲ್ಲಿರುವ ಬ್ಯಾಂಕುಗಳು ಮನುಷ್ಯ-ಮನುಷ್ಯರ ನಡುವೆ ಮಾತನಾಡುವ ಬದಲು ಯಂತ್ರ-ಯಂತ್ರಗಳ ನಡುವೆ ಮಾತನಾಡುವ ಹಂತಕ್ಕೆ ಬಂದು ತಲುಪಿವೆ. ಆ ಯಂತ್ರಗಳ ಭಾಷೆ ಕನ್ನಡವಾಗಿಲ್ಲ, ಬ್ಯಾಂಕಿನವರ ಭಾಷೆಯೂ ಕನ್ನಡವಾಗುತ್ತಿಲ್ಲ, ಬೇರಾವುದೋ ಭಾಷೆ ಅಂದರೆ ಹಿಂದಿ ಮತ್ತು ಇಂಗ್ಲೀಷ್ ಅಲ್ಲಿ ರಾರಾಜಿಸುವಂತಾಗಿದೆ ಎಂಬುದು ಒಂದು ವಿಪರ್ಯಾಸ.
ನಮಗೆಲ್ಲ ತಿಳಿದಿರುವಂತೆ ಬ್ಯಾಂಕುಗಳಲ್ಲಿನ ದೈನಂದಿನ ವ್ಯವಹಾರ ಗ್ರಾಹಕನಿಗೆ ಅರ್ಥವಾಗುವ ಸ್ಥಳೀಯ ಭಾಷೆಯಲ್ಲಿ ನಡೆದಾಗ ಮಾತ್ರ ಅದರಲ್ಲೂ ಗ್ರಾಮೀಣ ಭಾಗದ ಜನರಿಗೆ ಅವರದೇ ಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಹೆಚ್ಚಿನ ಪ್ರಯೋಜನ ಆಗಬಲ್ಲದು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಸರ್ಕಾರದ ಆಡಳಿತ ಭಾಷೆಯೂ ಕನ್ನಡವೇ ಹೌದು. ನೆಲದ ಭಾಷೆಯಲ್ಲಿಯೇ ವ್ಯವಹರಿಸುವುದು ಎಲ್ಲರ ವ್ಯವಹಾರಿಕ ಧರ್ಮವಾಗಬೇಕು. ಇದರಿಂದ ಬ್ಯಾಂಕುಗಳೂ ಹೊರತೇನಲ್ಲ. ಅಲ್ಲದೆ ಕನ್ನಡದ ಭಾಷೆಗೆ ಸಂವಿಧನಾತ್ಮಕ ಚೌಕಟ್ಟಿದೆ. ಎಲ್ಲ 28 ಭಾಷೆಗಳೂ ರಾಷ್ಟç ಭಾಷೆಗಳೇ ಸ್ಥಳೀಯ ಭಾಷೆ ಬಳಕೆಗೆ ಜನರಿಗೆ ಸಂಪೂರ್ಣ ಹಕ್ಕಿದೆ ಎಂಬುದನ್ನು ಸಂವಿಧಾನ ಪ್ರತಿಪಾದಿಸುತ್ತದೆ.
ಈ ನಿಟ್ಟಿನಲ್ಲಿ ದಿಟ್ಟ ಕ್ರಮಗಳನ್ನು ಪ್ರಜೆಗಳು, ಪ್ರಭುಗಳು ಪಾಲಿಸುವ ಅನಿವಾರ್ಯತೆ ಈಗ ಹೆಚ್ಚಾಗಿದೆ. ಆದರೆ ಅದಾಗುತ್ತಿಲ್ಲ. ಬದಲಾಗಿ ಹಿಂದಿ, ಇಂಗ್ಲೀಷುಗಳನ್ನು ಜನರ ಮೇಲೆ ಹೇರಲಾಗುತ್ತಿದೆ ಎಂಬ ಭಾವನೆ ಈಗ ಎಲ್ಲೆಲ್ಲೂ ಒಡಮೂಡಿದೆ. ಬ್ಯಾಂಕುಗಳು ತ್ರಿಭಾಷ ಸೂತ್ರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ರಿಜರ್ವ್ ಬ್ಯಾಂಕಿನ ಆದೇಶವಿದ್ದರೂ ಕನ್ನಡದ ಭಾಷೆ ಮೂರನೆಯ ಹಂತಕ್ಕೆ ತಳ್ಳಲ್ಪಡುತ್ತಿದೆ ಎಂದು ಯಾರಿಗಾದರೂ ಅರ್ಥ ಆಗುತ್ತಿದೆ. ಬ್ಯಾಂಕಿನ ಸಿಬ್ಬಂದಿಯದೂ ಕೂಡ ದೊಡ್ಡ ಸಮಸ್ಯೆಯೇ.
ಇತ್ತೀಚಿನ ದಿನಗಳಲ್ಲಿ ಕನ್ನಡಿಗರನ್ನು ಬ್ಯಾಂಕುಗಳಲ್ಲಿ ದುರ್ಬಿನು ಹಾಕಿ ಹುಡುಕುವ ಅಪಾಯ ಎದುರಾಗಿದೆ. ನೂರು ಜನ ಹೊಸದಾಗಿ ನೌಕರಿಗೆ ಸೇರಿದರೆ ಅದರಲ್ಲಿ ಬೆರೆಳೆಣಿಕೆಯಷ್ಟು ಜನ ಮಾತ್ರ ಕನ್ನಡ ಬಲ್ಲವರು. ಉಳಿದ ಬಹುಪಾಲು ಬ್ಯಾಂಕು ನೌಕರಿ ಅನ್ಯ ಭಾಷಿಕರ ಪಾಲಾಗುತ್ತಿವೆ. ಅವರಿಗೆ ಇಲ್ಲಿನ ಸಂಸ್ಕೃತಿ, ನಡೆ-ನುಡಿ, ನೆಲದ, ಇಲ್ಲಿನ ಜನರ ಸಂಪ್ರೀತಿ ಯಾವುದೂ ಬೇಡವಾಗಿದೆ ಎಂಬ ಪರಿಸ್ಥಿತಿ. ಕನ್ನಡದ ಜನರು ಎಚ್ಚೆತ್ತುಕೊಳ್ಳದ ಹೊರತು ಇಂತಹ ಅಪಾಯಗಳಿಗೆ ನಮಗೆ ಉತ್ತರ ಸಿಗದು.
ಕನ್ನಡವನ್ನು ಬ್ಯಾಂಕುಗಳಲ್ಲಿ ಬಳಸದೇ ಇರಲು ಯಾವ ಸಂವಿಧಾನಾತ್ಮಕ ಬಿಕ್ಕಟ್ಟುಗಳೂ ಇಲ್ಲ. ಆದರೆ ಬ್ಯಾಂಕುಗಳಿಗೆ ಹಾಗೂ ಜನರಿಗೆ ಕನ್ನಡ ಬಳಕೆಯ ಬಗ್ಗೆ ಬದ್ಧತೆಯ ಕೊರತೆ ಇದೆ ಎಂದು ನನಗೆ ಅನ್ನಿಸುತ್ತಿದೆ. 40ವರ್ಷಗಳ ಸುದೀರ್ಘ ಬ್ಯಾಂಕ್ ಸೇವೆಯ ಅವಧಿಯಲ್ಲಿ ನಾನು ಕಂಡುಕೊಂಡ ಒಂದು ಸರಳ ಸತ್ಯವೆಂದರೆ ಬ್ಯಾಂಕು ಎಂದಾಕ್ಷಣ ಜನರು ಅನ್ಯ ಭಾಷೆಯ ಕಡೆ ಮುಖಮಾಡಿ ನಿಲ್ಲುವಂತಹುದು ! ನಾವು ಇದರಿಂದ ಹೊರಬರಬೇಕಿದೆ. ಅನೇಕ ಬ್ಯಾಂಕುಗಳು ಕನ್ನಡವನ್ನು ಬಳಸಲು ಹಲವಾರು ಉಪಕ್ರಮಗಳನ್ನೂ ಕೈಗೊಂಡಿವೆ.
ಆದರೆ ಅಂತಹ ಉಪಕ್ರಮಗಳನ್ನು ಸಿಬ್ಬಂದಿ, ಅಧಿಕಾರಿ ಹಾಗೂ ಜನಸಾಮಾನ್ಯರು ಬಳಸದೇ ಹೋದಲ್ಲಿ ಅವು ತುಕ್ಕು ಹಿಡಿಯಬಹುದು ಅಷ್ಟೇ. ಕನ್ನಡವನ್ನು ಬ್ಯಾಂಕುಗಳಲ್ಲಿ ಸುಲಲಿತವಾಗಿ ಬಳಸಲು ಬ್ಯಾಂಕು ಹಾಗೂ ಗ್ರಾಹಕ ಮಹೋದಯರು ಸಮ ಸಮನಾಗಿ ಜವಾಬ್ದಾರಿ ಹೊತ್ತಾಗ ಮಾತ್ರ ಭಾಷೆಯ ಬಳಕೆ ಹಸನಾಗಬಲ್ಲದು.
ಬ್ಯಾಂಕುಗಳಲ್ಲಿ ಕನ್ನಡವನ್ನು ಸಮರ್ಥವಾಗಿ ಬಳಸಲು ಇರುವ ಮಾರ್ಗೋಪಾಯಗಳನ್ನು ಇಲ್ಲಿ ಚಿಂತಿಸಲಾಗಿದೆ.
- ಜನಸಾಮಾನ್ಯರಿಗೆ ಬ್ಯಾಂಕಿನ ಎಲ್ಲ ಸೌಲಭ್ಯಗಳು ಸರಳವಾಗಿ, ಸುಲಭವಾಗಿ ದೊರೆಯುವಂತಾಗಲು ಎಲ್ಲ ಮಾಹಿತಿಯನ್ನು ಕನ್ನಡದಲ್ಲಿಯೇ ಮುದ್ರಿಸಿ ಒದಗಿಸುವುದು.
- ಉಳಿತಾಯ, ಸಾಲ ಮರುಪಾವತಿ, ಡಿಡಿ, ನೆಫ್ಟ್, ಆರ್ಟಿಜಿಎಸ್ ಠೇವಣಿ ಮಾಡುವ ಚಲನ್ ಮುಂತಾದವನ್ನು ಕನ್ನಡದಲ್ಲಿಯೂ ಕಡ್ಡಾಯವಾಗಿ ದೊರೆಯುವಂತೆ ಮಾಡುವುದು.
- ಕೃಷಿ ಸಾಲ, ಬಂಗಾರ ಸಾಲ, ಮುದ್ರಾಯೋಜನೆ, ಸಣ್ಣ ವ್ಯಾಪಾರ, ಸ್ವಸಹಾಯ ಸಂಘಗಳಿಗೆ ಕೊಡ ಮಾಡುವ ಸಾಲ ಮುಂತಾದ ಸಾಲ ಯೋಜನೆಗಳ ಅರ್ಜಿ ನಮೂನೆಗಳು ಕನ್ನಡದಲ್ಲಿಯೂ ಮುದ್ರಿಸಿಹಂಚುವುದು.
- ಎಲ್ಲ ಎಟಿಎಂ ಯಂತ್ರಗಳಲ್ಲಿನ ವ್ಯವಹಾರಿಕ ಸೂಚನೆಗಳನ್ನು ಕನ್ನಡದಲ್ಲಿಯೇ ಕಡ್ಡಾಯವಾಗಿ ಪ್ರದರ್ಶಿಸುವುದು.
- ಜನಧನ್ ಖಾತೆ, ಸರಳ ಉಳಿತಾಯ ಖಾತೆ, ಚಾಲ್ತಿ ಖಾತೆ, ಠೇವಣಿ ಖಾತೆಗಳ ಅರ್ಜಿ ನಮೂನೆಗಳನ್ನು ತಪ್ಪದೇ ಕನ್ನಡದಲ್ಲಿ ಮುದ್ರಿಸಿ ಬಳಸುವುದು.
- ಸಾಲ ಮಸೂಲಾತಿಗಾಗಿ ಬ್ಯಾಂಕುಗಳು ನೀಡುವ ತಗಾದೆ ನೋಟೀಸು ಕನ್ನಡದಲ್ಲಿ ನೀಡಿದರೆ ಒಳಿತು. ಇದರಿಂದ ಗ್ರಾಹಕ ತನ್ನದೇ ಭಾಷೆಯಲ್ಲಿ ವಿಷಯ ತಿಳಿಯುವುದರ ಮೂಲಕ ತಕ್ಷಣ ಸ್ವಂದಿಸಲು ಸಾಧ್ಯವಾಗಬಲ್ಲದು.
- ಬ್ಯಾಂಕಿನ ದೈನಂದಿಕ ವ್ಯವಹಾರದಲ್ಲಿ ಬಳಸುವ ಸೀಲುಗಳಲ್ಲಿ ಕನ್ನಡದ ಹೆಸರುಗಳು ಬಳಕೆಯಾಗುವಂತೆ ಕ್ರಮ ವಹಿಸುವುದು.
- ಬ್ಯಾಂಕಿನ ಒಳ ಆವರಣದಲ್ಲಿ ಇರುವ ಎಲ್ಲ ಸೂಚನಾ ಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವುದು.
- ಬ್ಯಾಂಕಿನ ಹೊರ ಆವರಣದಲ್ಲಿ ಇರುವ ದೊಡ್ಡ ಬೋರ್ಡ್ಗಳಲ್ಲಿ ದೊಡ್ಡದಾಗಿಯೇ ಕನ್ನಡವನ್ನು ಬರೆಸುವುದು. ಕಾನೂನಾತ್ಮಕವಾಗಿ ಶೇಕಡಾ60% ಕ್ಕಿಂತ ಹೆಚ್ಚು ಕನ್ನಡವನ್ನು ಅಲ್ಲಿ ಬಳಸಬೇಕೆಂಬುದನ್ನು ಕಡ್ಡಾಯವಾಗಿ ಬಳಸುವುದು.
- ಬ್ಯಾಂಕ್ ಅಧಿಕಾರಿಗಳು, ವ್ಯವಸ್ಥಾಪಕರು ಮುಂತಾದವರ ಪದನಾಮದ ಫಲಕಗಳನ್ನು ಕನ್ನಡದಲ್ಲಿಯೇ ಬರೆಸುವುದು.
- ಅನ್ಯಭಾಷಿಕ ಅಧಿಕಾರಿ / ಸಿಬ್ಬಂದಿ ಇದ್ದಲ್ಲಿ ನಿರ್ದಿಷ್ಟ ಗಡುವಿನ ಒಳಗಾಗಿ ಅವರು ಕನ್ನಡವನ್ನು ಕಡ್ಡಾಯವಾಗಿ ಕಲಿಯುವಂತಹ ವಾತಾವರಣ ನಿರ್ಮಿಸುವುದು.
- ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ “ಕನ್ನಡ ಘಟಕ / ಕನ್ನಡ ಜಾಗೃತಿ ಸಮಿತಿ” ಯನ್ನು ತೆರೆಯುವುದು. ಘಟಕ/ ಸಮಿತಿಯ ಮೂಲಕ ನಿರಂತರವಾಗಿ ಕನ್ನಡದ ಚಟುವಟಿಕೆಗಳನ್ನು ನಡೆಸುವುದು.
- ಶಾಖೆ ನೀಡುವ ಜಾಹೀರಾತು ಪ್ರಕಟಣೆ, ಹರಾಜು ನೋಟೀಸು ಮುಂತಾದವನ್ನು ಕನ್ನಡದಲ್ಲಿಯೂ ತಪ್ಪದೇ ನೀಡುವುದು.
- ಬ್ಯಾಂಕಿನ ಸಿಬ್ಬಂದಿ ಗ್ರಾಹಕರೊಂದಿಗೆ ಹೆಚ್ಚು ಹೆಚ್ಚಾಗಿ ಕನ್ನಡದಲ್ಲಿಯೇ ವ್ಯವಹರಿಸಬಹುದು /ಮಾತನಾಡಬಹುದು. ಅದರಿಂದ ಗ್ರಾಹಕರಿಗೆ ಬ್ಯಾಂಕಿನ ಬಗ್ಗೆ, ಅಂತಹ ಅಧಿಕಾರಿಯ ಬಗ್ಗೆ ಆತ್ಮೀಯ ಭಾವನೆ ಮೂಡಬಲ್ಲದು.
- ಕನ್ನಡದ ಪತ್ರಕ್ಕೆ ಕನ್ನಡದಲ್ಲಿಯೇ ಉತ್ತರಿಸುವ ಬದ್ಧತೆಯನ್ನು ಬೆಳೆಸಿಕೊಳ್ಳುವುದು. ಅಂತೆಯೇಗ್ರಾಹಕರು ಕೂಡ ಕನ್ನಡದಲ್ಲಿನ ಉತ್ತರಕ್ಕಾಗಿ ಒತ್ತಾಯಿಸುವುದು.
- ಎಲ್ಲ ಸಾಮಾಜಿಕ ಸುರಕ್ಷತಾ ಯೋಜನೆಗಳ ಅರ್ಜಿಗಳನ್ನು ಕನ್ನಡದಲ್ಲಿಯೇ ನೀಡುವುದು.
- ಪಾಸ್ಬುಕ್ಗಳಲ್ಲಿ ಇರುವ ಮಾಹಿತಿ ಪುಟವನ್ನು ಅಂದರೆ ಪ್ರಥಮ ಪುಟವನ್ನು ಕನ್ನಡದಲ್ಲಿಯೂ ಮುದ್ರಿಸುವುದು.
- ವಹಿವಾಟಿನ ರವಾನೆ ಸಂದೇಶಗಳನ್ನು ಕನ್ನಡದಲ್ಲಿಯೂ ರವಾನಿಸುವುದು.
- ಗ್ರಾಹಕ ಸಭೆ / ಮಾಹಿತಿ ಶಿಬಿರಗಳಲ್ಲಿ ನೀಡುವ ಮಾಹಿತಿ ಕನ್ನಡದಲ್ಲಿಯೇ ನೀಡುವುದು.
- ಆರ್ಥಿಕ ಸಾಕ್ಷರತಾ ಕೇಂದ್ರಗಳು ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸುವುದು.
- “ತಮಗೆ ಸಹಾಯ ಬೇಕೆ” ಕೌಂಟರಿನ ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವಂತೆ ಕ್ರಮವಹಿಸುವುದು.
- ವಿವಿಧ ಕೌಂಟರುಗಳ ಮಾಹಿತಿ ಕನ್ನಡದಲ್ಲಿ ಬರೆಸುವುದು.
- ಅಂತರ್ಜಾಲದಲ್ಲಿ ಬ್ಯಾಂಕುಗಳು ಪ್ರಚುರಪಡಿಸುವ ಉತ್ಪನ್ನಗಳ ಮಾಹಿತಿಯನ್ನು ಕನ್ನಡದಲ್ಲಿಯೂ ಪ್ರಚುರಪಡಿಸುವುದು.
- ಆರ್ಸೆಟಿ ಮತ್ತು ರುಡ್ಸೆಟಿ ಸಂಸ್ಥೆಗಳ ಮೂಲಕ ಜಾಗೃತಿ ಶಿಬಿರಗಳನ್ನು ಆಯೋಜಿಸುವುದು.
- ಬ್ಯಾಂಕುಗಳು ದಿನನಿತ್ಯದ ವ್ಯವಹಾರದಲ್ಲಿ ಬಳಸುವ ಇಂಗ್ಲೀಷ್ ಪದಕ್ಕೆ ಸಮಾನಾಂತರ ಕನ್ನಡ ಪದವನ್ನು ಗುರುತಿಸಿ ಬ್ಯಾಂಕ್ ಶಾಖೆಯ ಸೂಚನಾ ಫಲಕದಲ್ಲಿ ಪ್ರತಿನಿತ್ಯ ಪ್ರಚುರಪಡಿಸುವುದು.
- ಹಿಂದಿ ದಿವಸ”ವನ್ನು ಕಡ್ಡಾಯವಾಗಿ ಆಚರಿಸುವಂತೆ ಪ್ರತಿ ನವೆಂಬರ್ ಒಂದರಂದು “ಕನ್ನಡದಿವಸ” ವನ್ನುಬ್ಯಾಂಕಿನ ಪ್ರತಿ ಶಾಖೆಯಲ್ಲೂ ಕಡ್ಡಾಯವಾಗಿ ಆಚರಿಸುವುದು. ಮತ್ತುಅಂದಿನ ಸಭೆಯಲ್ಲಿ ಬ್ಯಾಂಕು / ಶಾಖೆ ಇದುವರೆಗೂ ಕೈಗೊಂಡ ಕನ್ನಡಪರವಾದ ಚಟುವಟಿಕೆಗಳ ವಿಚಾರ ವಿನಿಮಯ ಮಾಡಿಕೊಳ್ಳುವುದು.
ಒಟ್ಟಾರೆ ಬ್ಯಾಂಕುಗಳಲ್ಲಿ ಕನ್ನಡವನ್ನು ಹೆಚ್ಚು ಹೆಚ್ಚಾಗಿ ಬಳಸಲು ವಿಪುಲ ಅವಕಾಶಗಳಿವೆ. ನಾವೆಲ್ಲರೂ ನಮ್ಮ ನಮ್ಮ ಜವಾಬ್ದಾರಿಗಳನ್ನು ಅರಿತು, ಸಮಯ ಸಂದರ್ಭ ಬಂದಾಗಲೆಲ್ಲ ಸುಲಲಿತವಾಗಿ ಬ್ಯಾಂಕುಗಳಲ್ಲಿ ಕನ್ನಡವನ್ನು ಬಳಸಿದ್ದಲ್ಲಿ ಅದು ಇನ್ನೂ ಎತ್ತರದ ಶಿಖರಕ್ಕೆ ಏರಬಲ್ಲದು.
–ಎನ್.ಟಿ.ಎರ್ರಿಸ್ವಾಮಿ,
ಕೆನರಾ ಬ್ಯಾಂಕಿನ ವಿಶ್ರಾಂತ ವಿಭಾಗೀಯ ಪ್ರಬಂಧಕರು,
ಅಚ್ಯುತ ಬಡಾವಣೆ, ಜಗಳೂರು – 577528
ದಾವಣಗೆರೆ ಜಿಲ್ಲೆ.
ಮೊ : 9901909672
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ3 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

