ದಿನದ ಸುದ್ದಿ
ಯಜಮಾನಿಕೆ ಮತ್ತು ಯಜಮಾನರ ಅಧಿಪತ್ಯ
- ಪ್ರತಾಪ್ ಭಾನು ಮೆಹ್ತಾ ( ಇಂಡಿಯನ್ ಎಕ್ಸ್ ಪ್ರೆಸ್ 18-11-20), ಅನುವಾದ : ನಾ ದಿವಾಕರ
ರಾಜ್ಯಶಾಸ್ತ್ರದ ಸಾಹಿತ್ಯದಲ್ಲಿ ಸಾಮಾನ್ಯವಾಗಿ ಪ್ರಜಾಪ್ರಭುತ್ವದ ಬರ್ಬರತೆ ಎಂಬ ಪದವನ್ನು ಬಳಸಲಾಗುತ್ತದೆ. ಈ ಪ್ರಜಾಪ್ರಭುತ್ವದ ಬರ್ಬರತೆಯನ್ನು ನ್ಯಾಯಿಕ ಬರ್ಬರತೆಯು ಕಾಪಾಡಿಕೊಂಡುಬರುತ್ತದೆ. ಬರ್ಬರತೆಗೆ ಹಲವಾರು ಆಯಾಮಗಳಿವೆ. ಮೊದಲನೆಯದಾಗಿ ನ್ಯಾಯಾಂಗದಲ್ಲಿ ನಿರ್ಧಾರಗಳನ್ನು ಕೈಗೊಳ್ಳುವಾಗ, ತೀರ್ಪು ನೀಡುವಾಗ ನಿರಂಕುಶತೆ ಮೇಲುಗೈ ಸಾಧಿಸುತ್ತದೆ.
ಕಾನೂನುಗಳನ್ನು ಅನ್ವಯಿಸುವ ಸಂದರ್ಭದಲ್ಲಿ ನ್ಯಾಯಾಧೀಶರ ವ್ಯಕ್ತಿಗತ ನಿಲುವುಗಳನ್ನು ಅನುಸರಿಸಲಾಗುತ್ತದೆ. ಹಾಗಾಗಿ ಸಾಂವಿಧಾನಿಕ ನಿಯಮಗಳು, ಕಾಯ್ದೆ ಕಾನೂನುಗಳು ಅರ್ಥಹೀನವಾಗಿಬಿಡುತ್ತವೆ. ಕಾನೂನು ಎನ್ನುವುದು ದಬ್ಬಾಳಿಕೆಯ ಅಸ್ತ್ರವಾಗುತ್ತದೆ. ಕಾನೂನು ದಬ್ಬಾಳಿಕೆಗೆ ಕನಿಷ್ಟಪಕ್ಷ ಸಹಾಯಕವಾಗಿರುತ್ತದೆ.
ಹೀಗಾದಾಗ ನಾಗರಿಕ ಹಕ್ಕುಗಳ ಮತ್ತು ಪ್ರತಿರೋಧದ ದನಿಗಳ ರಕ್ಷಣೆ ದುರ್ಬಲವಾಗುತ್ತದೆ ಮತ್ತು ಸಾಂವಿಧಾನಿಕ ನಿಯಮಗಳ ಚೌಕಟ್ಟಿನಲ್ಲಿ ಪ್ರಭುತ್ವದ ಶಕ್ತಿಗೆ ಮನ್ನಣೆ ನೀಡುವ ಸಾಧ್ಯತೆಗಳು ಹೆಚ್ಚಾಗುತ್ತವೆ. ನ್ಯಾಯಾಲಯಗಳೂ ದೈವೀಕ ದೊರೆಯ ಹಾಗೆ ತನ್ನ ಅಸ್ತಿತ್ವ ಮತ್ತು ಗೌರವದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತದೆ. ನ್ಯಾಯಾಲಯವನ್ನು ಗಂಭೀರವಾಗಿ ಟೀಕಿಸುವುದಾಗಲೀ, ಅಣಕಿಸುವುದಾಗಲೀ ಸಾಧ್ಯವಾಗುವುದಿಲ್ಲ. ನ್ಯಾಯಾಲಯದ ಘನತೆ ಗೌರವದ ರಕ್ಷಣೆಗೆ ಅದರ ವಿಶ್ವಾಸಾರ್ಹತೆಗಿಂತಲೂ ಅವಜ್ಞೆಯ ಶಕ್ತಿ ಮುಖ್ಯವಾಗುತ್ತದೆ.
ಅಂತಿಮವಾಗಿ ಇನ್ನೂ ಗಂಭೀರ ಸ್ವರೂಪದ ಬರ್ಬರತೆ ಇಲ್ಲಿ ಕಾಣಿಸಿಕೊಳ್ಳುತ್ತದೆ. ಪ್ರಭುತ್ವ ತನ್ನದೇ ಪ್ರಜೆಗಳನ್ನು ಜನದ್ರೋಹಿಗಳೆಂದು ಪರಿಗಣಿಸಿದಾಗ ಇದು ವ್ಯಕ್ತವಾಗುತ್ತದೆ. ರಾಜಕಾರಣದ ಧ್ಯೇಯ ಸಮಸ್ತ ಜನತೆಗೂ ಸಮಾನ ನ್ಯಾಯ ಒದಗಿಸುವುದು ಆಗಿರುವುದಿಲ್ಲ. ರಾಜಕಾರಣವನ್ನು ಶೋಷಕರು ಮತ್ತು ಶೋಷಿತರ ನಡುವಿನ ಸಂಘರ್ಷದಂತೆ ಪರಿವರ್ತಿಸಲಾಗುತ್ತದೆ. ಪ್ರಭುತ್ವ ಸದಾ ವಿಜಯಿಯಾಗುವಂತೆ ಎಚ್ಚರವಹಿಸಲಾಗುತ್ತದೆ.
ಭಾರತದ ಸರ್ವೋಚ್ಛ ನ್ಯಾಯಾಲಯ ಎಂದೂ ಪರಿಪೂರ್ಣತೆಯನ್ನು ಹೊಂದಿರಲಿಲ್ಲ. ಈ ಹಿಂದೆಯೂ ಸಹ ಕೆಲವು ಕಪ್ಪು ಚುಕ್ಕೆಗಳನ್ನು ಗುರುತಿಸಬಹುದಿತ್ತು. ಆದರೆ ಮೇಲೆ ಉಲ್ಲೇಖಿಸಲಾದ ಅಂಶಗಳ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯವು ನ್ಯಾಯಿಕ ಬರ್ಬರತೆಯತ್ತ ಜಾರುತ್ತಿರುವ ಸೂಚನೆಗಳು ಕಾಣಿಸಿಕೊಳ್ಳುತ್ತಿದೆ. ಈ ವಿದ್ಯಮಾನ ಕೇವಲ ವ್ಯಕ್ತಿಗತವಾಗಿ ಒಬ್ಬ ನ್ಯಾಯಾಧೀಶರಿಗೆ ಅಥವಾ ಒಂದು ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಇದು ಸಾಂಸ್ಥಿಕವಾಗಿ ವ್ಯವಸ್ಥೆಯ ವಿದ್ಯಮಾನವಾಗಿದೆ. ಜಾಗತಿಕ ಮಟ್ಟದಲ್ಲೂ ಈ ಪ್ರವೃತ್ತಿಯನ್ನು ಗುರುತಿಸಬಹುದು.
ಟರ್ಕಿ, ಪೋಲೆಂಡ್ ಮತ್ತು ಹಂಗೆರಿಯಲ್ಲಿ ಇದರ ಛಾಯೆಯನ್ನು ಕಾಣಬಹುದು. ಈ ದೇಶಗಳಲ್ಲಿ ನ್ಯಾಯಾಂಗವು ಪ್ರಜಾತಾಂತ್ರಿಕ ಬರ್ಬರತೆಯನ್ನು ಪೋಷಿಸುತ್ತಿದೆ. ನಿಖರವಾಗಿ ಹೇಳುವುದಾದರೆ ಎಲ್ಲ ನ್ಯಾಯಾಧೀಶರೂ ಇದಕ್ಕೆ ಬಲಿಯಾಗುವುದಿಲ್ಲ. ವ್ಯವಸ್ಥೆಯಲ್ಲಿ ಇಂದಿಗೂ ಸಹ ಪ್ರತಿರೋಧದ ದನಿಗಳನ್ನು ಗುರುತಿಸಬಹುದು. ಸ್ವಾತಂತ್ರ್ಯದ ಪರ ಇರುವ ತಾತ್ವಿಕ ನೀತಿಗಳನ್ನು ಘೋಷಿಸುವ ಕೆಲವು ಪ್ರಸಂಗಗಳನ್ನೂ ಕಾಣಲು ಸಾಧ್ಯ.
ಅರ್ಹ ಅರ್ಜಿದಾರರಿಗೆ ಸಮಾಧಾನ ತರುವಂತಹ ತೀರ್ಪುಗಳನ್ನು ಅಪರೂಪವಾಗಿಯಾದರೂ ನೋಡಬಹುದು. ಹಾಗಾಗಿ ನಿತ್ಯ ಕಲಾಪಗಳಲ್ಲಿ ನ್ಯಾಯಾಂಗದ ಕಾರ್ಯವೈಖರಿಯಲ್ಲಿ ಏನೇ ದೋಷ ಗುರುತಿಸಬಹುದಾದರೂ ಸಂಸ್ಥೆಯ ಗೌರವ ಮತ್ತು ಘನತೆಯನ್ನು ಉಳಿಸುವ ಕೆಲವು ಪ್ರಸಂಗಗಳನ್ನು ಕಾಣಲೂ ಸಾಧ್ಯ.
ನ್ಯಾಯಿಕ ಬರ್ಬರತೆಯ ಲಕ್ಷಣಗಳೇನು ? ಪ್ರಜಾಪ್ರಭುತ್ವದ ಸಾಂಸ್ಥಿಕ ವಿಶ್ವಾಸಾರ್ಹತೆಯನ್ನು ಉಳಿಸುವಂತಹ ಪ್ರಕರಣಗಳಲ್ಲಿ ಸಕಾಲದಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿರುವುದು. ಇಲ್ಲಿ ಸ್ಪಷ್ಟ ನಿದರ್ಶನ ಎಂದರೆ ಚುನಾವಣಾ ಬಾಂಡ್ ಪ್ರಕರಣ.
ಸರ್ವೋಚ್ಛ ನ್ಯಾಯಾಲಯ ಮತ್ತು ಹಲವು ಉಚ್ಚ ನ್ಯಾಯಾಲಯಗಳು ಜಾಮೀನು ನೀಡುವ ಅಥವಾ ನಿರಾಕರಿಸುವ ಸಂದರ್ಭಗಳಲ್ಲಿ ನಿರಂಕುಶತೆಯ ಪರಾಕಾಷ್ಟೆ ತಲುಪಿರುವುದನ್ನು ಗಮನಿಸಬಹುದು. ಇಲ್ಲಿ ಒಂದು ಅಂಶವನ್ನು ಸ್ಪಷ್ಟವಾಗಿ ಹೇಳಬೇಕಾಗುತ್ತದೆ.
ಯಾವುದೇ ವಿಚಾರಣಾಧೀನ ಕೈದಿಗೆ ತಿಳಿದಿರುವಂತೆ, ಭಾರತದ ನ್ಯಾಯ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸುವಾಗ ಅದೃಷ್ಟವೂ ಮುಖ್ಯವಾಗಿರುತ್ತದೆ. ಪ್ರಸ್ತುತ ಸಂದರ್ಭದ ವಿಶಿಷ್ಟತೆಯನ್ನು ನಾವು ತಪ್ಪಾಗಿ ಅರ್ಥೈಸಬೇಕಿಲ್ಲ. ಸಾಮಾಜಿಕ ಕಾರ್ಯಕರ್ತರಾದ, ದೇಶಪ್ರೇಮದ ಸಾಕಾರ ಎನ್ನಬಹುದಾದ ಸುಧಾ ಭರದ್ವಾಜ್, ಚಿಂತಕರಾದ ಆನಂದ್ ತೇಲ್ತುಂಬ್ಡೆ ಮುಂತಾದವರಿಗೆ ಜಾಮೀನು ನಿರಾಕರಿಸಲಾಗುತ್ತದೆ.
ಉಮರ್ ಖಾಲಿದ್ ಗೆ ತನ್ನ ಜೈಲು ಕೋಣೆಯಿಂದ ಹೊರಬರಲು ಕೊಂಚ ಅವಕಾಶ ನೀಡಿದ್ದುದು ಸಮಾಧಾನ ತರುವಂತಹುದು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಿ ಜೈಲುವಾಸ ಅನುಭವಿಸುತ್ತಿರುವ ಅನೇಕ ವಿದ್ಯಾರ್ಥಿ ಯುವಜನರು ಇಷ್ಟು ಅದೃಷ್ಟ ಮಾಡಿಲ್ಲ. ಪಾರ್ಕಿನ್ ಸನ್ ಖಾಯಿಲೆಯಿಂದ ಬಳಲುತ್ತಿರುವ 80 ವರ್ಷದ ಸಾಮಾಜಿಕ ಕಾರ್ಯಕರ್ತರಿಗೆ ಜಾಮೀನು ನಿರಾಕರಿಸಲಾಗುತ್ತದೆ.
ನ್ಯಾಯಾಲಯ ತನ್ನ ಇಚ್ಚೆಯನುಸಾರ ಇವರ ಅರ್ಜಿಯನ್ನು ವಿಚಾರಣೆಗೊಳಪಡಿಸುತ್ತದೆ. ಇದಕ್ಕಿಂತಲೂ ಹೆಚ್ಚಾಗಿ ಕ್ರೌರ್ಯದ ಅನಾವರಣ ಆಗಬೇಕಿಲ್ಲ. ಹೇಬಿಯಸ್ ಕಾರ್ಪಸ್ ಮೂಲಕ ಪರಿಹಾರವನ್ನೂ ನೀಡಲಿಚ್ಚಿಸದೆ, ನೂರಾರು ಕಾಶ್ಮೀರಿಗಳನ್ನು ಬಂಧನದಲ್ಲಿರಿಸಲಾಗಿದೆ.
ಈ ಎಲ್ಲ ಪ್ರಕರಣಗಳು ಸಾಂಸ್ಥಿಕ ಅದಕ್ಷತೆಯಿಂದ ಉಂಟಾದ ನ್ಯಾಯ ವಂಚನೆಯ ಅಪರೂಪದ ಪ್ರಕರಣಗಳೆಂದು ಭಾವಿಸಲಾಗುವುದಿಲ್ಲ. ಪ್ರತಿಭಟನೆ, ಪ್ರತಿರೋಧ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಕಲ್ಪನೆಗಳನ್ನು ಪ್ರಭುತ್ವದ ಶತ್ರುಗಳು ಎನ್ನುವ ದೃಷ್ಟಿಕೋನದಿಂದಲೇ ನೋಡುವ ರಾಜಕೀಯ ನಿಲುವಿನ ನೇರ ಪರಿಣಾಮಗಳಾಗಿ ಇದನ್ನು ನಾವು ಪರಿಗಣಿಸಬೇಕಾಗುತ್ತದೆ.
ಈ ಪ್ರಜೆಗಳು ಕಾನೂನಿನ ದೃಷ್ಟಿಯಲ್ಲಿ ಸಮಾನ ಪ್ರಜೆಗಳಾಗಿ ಕಾಣುವುದಿಲ್ಲ. ಹಾಗಾಗಿ ಅನೇಕ ಪ್ರಕರಣಗಳಲ್ಲಿ ಇವರನ್ನು ಬಂಡುಕೋರರಂತೆ , ಯಾವುದೇ ಸಮರ್ಥನೆ ಇಲ್ಲದೆಯೇ, ಪರಿಗಣಿಸಲಾಗುತ್ತದೆ. ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಈ ಆರೋಪವೊಂದೇ ಪ್ರಜಾಪ್ರಭುತ್ವದ ಬರ್ಬರತೆಗೆ ಸಮರ್ಥನೀಯ ಸಾಧನ ಎನಿಸುತ್ತದೆ. ಈ ಧೋರಣೆಗೆ ಈಗ ನ್ಯಾಯಿಕ ಸಮರ್ಥನೆ ದೊರೆಯುತ್ತಿದೆ. ಇದೇ ವಿದ್ಯಮಾನವನ್ನು ರಾಜ್ಯಗಳ ಮಟ್ಟದಲ್ಲಿ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ ಅನುಸರಿಸುವ ಸಾಧ್ಯತೆಗಳಿವೆ.
ನಾಗರಿಕ ಸ್ವಾತಂತ್ರ್ಯದ ಚೌಕಟ್ಟಿನಲ್ಲಿ ಆಯ್ದ ಪ್ರಸಂಗಗಳಲ್ಲಿ ಅನ್ವಯಿಸಲಾಗುವ ನಿಯಮಗಳು ಕ್ರಮೇಣ ಪ್ರಭುತ್ವದ ಸೈದ್ಧಾಂತಿಕ ಚೌಕಟ್ಟಿನಲ್ಲಿ ಅಳವಡಿಸಲಾಗುತ್ತದೆ. ಒಂದಾದ ಮೇಲೊಂದರಂತೆ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಳಿಸುತ್ತಿರುವುದನ್ನು ಗಮನಿಸಿದರೆ, ಕೋಮುವಾದಿ ದೃಷ್ಟಿಕೋನದ ಈ ವಂಚಕ ಬಲೆಯನ್ನು ಎಲ್ಲ ರಾಜ್ಯಗಳೂ ಅನುಸರಿಸುವ ಸಾಧ್ಯತೆಗಳಿವೆ.
ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಈ ಪ್ರಹಾರವನ್ನು ನ್ಯಾಯಾಲಯಗಳು ಹೇಗೆ ನ್ಯಾಯಬದ್ಧವಾಗಿಸುತ್ತವೆ ಎನ್ನುವುದನ್ನು ಗಮನಿಸುತ್ತಿರಿ. ದೇಶದ ಅತ್ಯುನ್ನತ ನ್ಯಾಯಾಲಯದ ದೌರ್ಬಲ್ಯಗಳನ್ನು ಸಾಂಸ್ಥಿಕ ಸುಧಾರಣೆಯ ಪರಿಭಾಷೆಯಲ್ಲಿ ಗುರುತಿಸುವ ಹಂತದಿಂದ ನಾವು ಬಹಳ ದೂರ ನಡೆದುಬಂದಿದ್ದೇವೆ. ಬದಲಾಗಿ ಪ್ರಜಾತಾಂತ್ರಿಕ ಬರ್ಬರತೆಯ ಪರಿಭಾಷೆಗೆ ನ್ಯಾಯಿಕ ಸ್ವರೂಪವನ್ನು ನೀಡಲಾಗುತ್ತಿದೆ.
ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ ಸರ್ವೋಚ್ಚ ನ್ಯಾಯಾಲಯದ ಕ್ರಮ ಸರಿಯಾದದ್ದೇ. ಕೊನೆಗೂ ನ್ಯಾಯಾಲಯವು ಉತ್ತರಪ್ರದೇಶ ಸರ್ಕಾರಕ್ಕೆ, ಪತ್ರಕರ್ತರ ಬಂಧನದ ವಿಚಾರದಲ್ಲಿ ನೋಟಿಸ್ ಜಾರಿ ಮಾಡಿದೆ. ಆದರೆ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಮಧ್ಯ ಪ್ರವೇಶಿಸಿ, ಸರ್ವೋಚ್ಚ ನ್ಯಾಯಾಲಯವು ಸಂವಿಧಾನ ವಿಧಿ 32ರ ಬಳಕೆಯನ್ನು ಅನುಮೋದಿಸುವುದಿಲ್ಲ ಎಂದು ಹೇಳುವ ಮೂಲಕ ತಮಗೆ ತಿಳಿಯದೆಯೇ ರಹಸ್ಯವೊಂದನ್ನು ಹೊರಗೆಡಹಿದ್ದಾರೆ.
ಭಾರತದ ಸಂವಿಧಾನದಲ್ಲಿ ವಿಧಿ 32 ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಒಂದು ಪ್ರಬಲ ಅಸ್ತ್ರ. ತುರ್ತುಪರಿಸ್ಥಿತಿ ಘೋಷಿಸಿದಲ್ಲಿ ಮಾತ್ರವೇ ಇದನ್ನು ರದ್ದುಪಡಿಸಬಹುದು. ಒಂದು ರೀತಿಯಲ್ಲಿ ಈ ಪರಿಚ್ಚೇದದ ಬಳಕೆಯನ್ನು ಅನುಮೋದಿಸದೆ ಇರುವುದು ನಮ್ಮ ಕಾಲಘಟ್ಟದ ರೂಪಕದಂತೆ ಕಾಣುತ್ತದೆ. ಅಂದರೆ ನಾವು ತುರ್ತುಪರಿಸ್ಥಿತಿಯನ್ನು ಘೋಷಿಸಲೇ ಬೇಕಿಲ್ಲ, ತುರ್ತುಪರಿಸ್ಥಿತಿ ಘೋಷಣೆಯಾಗಿದೆ ಎನ್ನುವ ರೀತಿಯಲ್ಲೇ ನಮಗೆ ಬೇಕಾದಾಗ ವರ್ತಿಸಬಹುದು ಎನ್ನುವಂತಾಗಿದೆ. ಹಾಗಾಗಿ ವಿಧಿ 32ರ ಬಳಕೆಯನ್ನು ರದ್ದುಪಡಿಸದಿದ್ದರೂ ಅನುಮೋದಿಸುವುದಿಲ್ಲ ಎಂದು ಹೇಳಲಾಗಿದೆ.
ಇದರ ವಿರುದ್ಧ ಹೋರಾಟ ಸುಲಭವಲ್ಲ. ಪ್ರಜಾತಾಂತ್ರಿಕ ಬರ್ಬರತೆಯ ವಾತಾವರಣದಲ್ಲಿ ಪ್ರತಿಯೊಂದು ವಿಚಾರವನ್ನೂ ಪಕ್ಷಪಾತೀಯ ನೆಲೆಯಲ್ಲಿ ನೋಡಲಾಗುವುದೇ ಹೊರತು ತರ್ಕಬದ್ಧತೆಯಿಂದಲ್ಲ. ನ್ಯಾಯಾಂಗವು ಈ ಧೋರಣೆಯನ್ನು ಮೀರಿ ನಿಂತಿದೆ ಎಂದು ತೋರಿಸಿಕೊಳ್ಳಲೂ ವಿಫಲವಾಗಿರುವುದರಿಂದ ನ್ಯಾಯಾಂಗದ ನಿಷ್ಕರ್ಷೆಯೂ ಇದಕ್ಕೆ ಪೂರಕವಾಗಿಯೇ ಕಂಡುಬರುತ್ತಿದೆ.
ನ್ಯಾಯಿಕ ಅಪರಾಧಿಗಳನ್ನೂ ನಮ್ಮ ಮೂಗಿನ ನೇರಕ್ಕೆ ಅನುಗುಣವಾಗಿ ಪರಿಗಣಿಸುವ ಈ ಧೋರಣೆ ತೀವ್ರವಾಗಿರುವ ಸಂದರ್ಭದಲ್ಲಿ ಕಾನೂನು ಪಾಲನೆಯ ಬಗ್ಗೆ ಒಮ್ಮತಕ್ಕೆ ಬರುವುದು ಸುಲಭವೇನಲ್ಲ. ವಿಡಂಬನೆ ಎಂದರ, ಪ್ರತಿಯೊಂದು ವಿಚಾರವನ್ನೂ ನಿರ್ಷರ್ಷೆ ಮಾಡಲು ನ್ಯಾಯಾಂಗವೊಂದೇ ವೇದಿಕೆ ಎನ್ನುವ ದೃಷ್ಟಿಕೋನದಲ್ಲಿ ಬೆಳೆದುಬಂದಿರುವ ಕಾನೂನಾತ್ಮಕ ಕ್ರಿಯಾಶೀಲತೆಯ ಸಂಪ್ರದಾಯವೇ ಈ ರೀತಿಯ ನ್ಯಾಯಿಕ ಉನ್ಮತ್ತತೆಗೆ ಕಾರಣವಾಗಿದೆ. ಈ ಪ್ರವೃತ್ತಿ ಇನ್ನೂ ಮುಂದುವರೆಯಲಿದೆ.
ಉದಾಹರಣೆಗೆ, ಸೆಂಟ್ರಲ್ ವಿಸ್ಟಾ ಯೋಜನೆಯ ಬಗ್ಗೆ ( ನೂತನ ಸಂಸತ್ ಭವನ ನಿರ್ಮಾಣ ಯೋಜನೆ-ಅನು ) ನಾವು ನಮ್ಮದೇ ಆದ ನಿಲುವು ಹೊಂದಿರಬಹುದು. ಆದರೆ ಈ ವಿಚಾರಗಳಿಗೆ ನ್ಯಾಯಾಲಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಿಲ್ಲ. ನ್ಯಾಯಾಲಯಗಳಿಂದ ಸಣ್ಣ ಪುಟ್ಟ ನೀತಿ ಸಂಹಿತೆಯ ವಿಚಾರಗಳಲ್ಲಿ ಜಯ ಗಳಿಸುವ ಸಂಭ್ರಮದಲ್ಲಿ ನಾವು ಬಹುಶಃ ಸಾಂವಿಧಾನಿಕ ತತ್ವಗಳ ವಿಚಾರದಲ್ಲಿ ನ್ಯಾಯಾಲಯಗಳ ಉಲ್ಲಂಘನೆಗಳಿಗೆ ಮಾನ್ಯತೆ ನೀಡುತ್ತಿದ್ದೇವೆ ಎನಿಸುತ್ತದೆ.
ನ್ಯಾಯವಾದಿಗಳ ಸಂಘದಲ್ಲಿ ಒಂದು ಸಂಸ್ಕೃತಿ ಇದೆ. ದುಷ್ಯಂತ ದವೆ, ಗೌತಮ್ ಭಾಟಿಯಾ, ಶ್ರೀರಾಂ ಪಂಚು ಮುಂತಾದವರು ನೇರವಾಗಿ ನ್ಯಾಯಾಂಗದ ಹುಳುಕುಗಳನ್ನು ಎತ್ತಿ ತೋರುವ ಆತ್ಮಸ್ಥೈರ್ಯ ಹೊಂದಿದ್ದಾರೆ. ಆದರೆ ಇದು ವೃತ್ತಿಪರ ನೆಲೆಯಲ್ಲಿ ಹಿಮ್ಮೆಟ್ಟಿಸುವ ಶಕ್ತಿಯಾಗಿ ಹೊರಹೊಮ್ಮಿಲ್ಲ. ಇಂದಿಗೂ ಸಹ ನ್ಯಾಯಿಕ ಬರ್ಬರತೆಯನ್ನು ಸಹನೀಯ ಎಂದು ಭಾವಿಸಿ, ನ್ಯಾಯಾಲಯಗಳ ಪವಿತ್ರ ಸ್ಥಾನಮಾನವನ್ನು ಮಾನ್ಯ ಮಾಡುವ ಹಿರಿಯ ವಕೀಲರ ಸಂಖ್ಯೆ ಹೆಚ್ಚಾಗಿಯೇ ಇದೆ.
ಇದು ವಿನಯ ರಹಿತ ಉತ್ಪ್ರೇಕ್ಷೆ ಎನಿಸಬಹುದು ಆದರೆ ವೀಮಾರ್ ನ್ಯಾಯಾಂಗದ ಛಾಯೆ ( ಹಿಟ್ಲರನ ನಾಝಿ ಕಾಲಘಟ್ಟದಲ್ಲಿ ಜರ್ಮನಿಯಲ್ಲಿದ್ದ ಸಂವಿಧಾನ ಮತ್ತು ನ್ಯಾಯ ವ್ಯವಸ್ಥೆ-ಅನು) ದಟ್ಟವಾಗಿ ಆವರಿಸುತ್ತಿರುವ ಸಂದರ್ಭದಲ್ಲಿ ದೇಶದ ಸಾಮಾನ್ಯ ಜನತೆಗೆ ವಿನಯ ಒಂದು ಆಯ್ಕೆಯಾಗಲು ಸಾಧ್ಯವಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ9 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ10 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ10 hours agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ10 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !





