ದಿನದ ಸುದ್ದಿ
26ರ ಕಾರ್ಮಿಕರ ಮುಷ್ಕರ ಏಕೆ ನಿರ್ಣಾಯಕ..?
- ನಾ ದಿವಾಕರ
ಕೋವಿದ್ 19ರ ಬಿಕ್ಕಟ್ಟಿನಿಂದ ಭಾರತ ಪಾರಾಗುವುದೆಂದು ? ಈ ಪ್ರಶ್ನೆ ಪ್ರತಿಯೊಬ್ಬರ ಮನಸಿನಲ್ಲೂ ಕಾಡುತ್ತಿದೆ. ಕೋವಿದ್ 19 ಭಾರತದ ದುಡಿಯುವ ವರ್ಗಗಳಿಗೆ ಶಾಪವಾಗಿ ಪರಿಣಮಿಸಿದ್ದರೆ ಆಳುವ ವರ್ಗಗಳಿಗೆ ವರದಾನ ಆದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗಳಿಗೆ ಹಿಂದಿರುಗಲು, ಸಾವಿರಾರು ಕಿಲೋಮೀಟರ್ ನಡೆದು, ಬಿರುಬಿಸಿಲಿನಲ್ಲಿ ನಿತ್ರಾಣರಾಗಿ, ಅಸುನೀಗಿದ ನೂರಾರು ವಲಸೆ ಕಾರ್ಮಿಕರು ಸರ್ಕಾರದ ಗಣನೆಗೇ ಬರಲಿಲ್ಲ ಎನ್ನುವುದನ್ನು ಗಮನಿಸಿದರೆ ನಾವು ಎಂತಹ ಅಮಾನುಷ ಆಡಳಿತ ವ್ಯವಸ್ಥೆಯಲ್ಲಿದ್ದೇವೆ ಎಂದು ತಿಳಿಯುತ್ತದೆ.
ಹೊರದೇಶಗಳಿಂದ ಬಂದಿರುವ ಲಕ್ಷಾಂತರ ಅಕ್ರಮ(?) ವಲಸೆ ಕಾರ್ಮಿಕರ ಬಗ್ಗೆ ಕರಾರುವಾಕ್ಕಾಗಿ ಮಾಹಿತಿ ಲಭ್ಯವಿದೆ ಎಂದು ಎಲ್ಲರನ್ನೂ ಹೊರಹಾಕಲು ಸಿದ್ಧತೆ ನಡೆಸಿದ್ದ ಸರ್ಕಾರವೊಂದಕ್ಕೆ, ತನ್ನ ನೆಲದಲ್ಲೇ ವಲಸೆ ಕಾರ್ಮಿಕರು ಎಷ್ಟಿದ್ದಾರೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ ಎಂದರೆ ನಾವು ಇನ್ನೆಂತಹ ನಿಷ್ಕ್ರಿಯ ಆಡಳಿತ ವ್ಯವಸ್ಥೆಯಲ್ಲಿದ್ದೇವೆ ಎಂದು ಅರಿವಾಗುತ್ತದೆ.
ದೇಶದ ಸಂಪತ್ತಿನ ಉತ್ಪಾದನೆಗೆ ಅನಿವಾರ್ಯವಾಗಿ ಬೇಕಾಗುವ ಜೀವಗಳು ಬದುಕಿದ್ದಾಗ ಶೋಷಣೆಗೊಳಗಾದರೆ ಅಳಿದ ಮೇಲೆ ಅನಾಥವಾಗುವ ಒಂದು ವಿಕೃತ ಪರಿಸ್ಥಿತಿಯಲ್ಲಿ ಈ ದೇಶದ ಶ್ರಮಜೀವಿಗಳು ತಮ್ಮ ಬೆವರು ಹರಿಸಿ ದುಡಿಯುತ್ತಿದ್ದಾರೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಬಳಕೆಯಾಗುವ ಶ್ರಮ ಶಕ್ತಿ ಮತ್ತು ಈ ಶ್ರಮ ಶಕ್ತಿಯ ವಾರಸುದಾರರಾದ ಶ್ರಮಿಕರು ಯಾವುದೇ ಒಂದು ದೇಶದ ತಳಪಾಯ.
ಅರ್ಥಶಾಸ್ತ್ರಜ್ಞರು, ಮಾರುಕಟ್ಟೆ ತಜ್ಞರು ಮತ್ತು ತಮ್ಮ ಹವಾನಿಯಂತ್ರಿತ ಕೋಣೆಗಳಲ್ಲಿ ಕುಳಿತು ಅಭಿವೃದ್ಧಿಯ ನೀಲನಕ್ಷೆಯನ್ನು ಸಿದ್ಧಪಡಿಸುವ ಹಿತವಲಯದ ಅಧಿಕಾರಶಾಹಿ ವರ್ಗ ದೇಶದ ಜಿಡಿಪಿ , ಅಂದರೆ ನಿವ್ವಳ ದೇಶೀಯ ಉತ್ಪನ್ನದ ಏರಿಳಿತಗಳನ್ನು ಗಮನಿಸುತ್ತಲೇ ಇರುತ್ತಾರೆ.
ಆದರೆ ಈ ಸೂಚ್ಯಂಕದ ಏರಿಳಿತದ ಹಿಂದೆ ಇರುವ ಉತ್ಪನ್ನಗಳ ಉತ್ಪಾದನಾ ಪ್ರಕ್ರಿಯೆಗೆ ಲಕ್ಷಾಂತರ ಕೈಗಳು ದುಡಿದಿರುತ್ತವೆ, ಲಕ್ಷಾಂತರ ಕುಟುಂಬಗಳು ಹಸಿವನ್ನೂ ಲೆಕ್ಕಿಸದೆ ಶ್ರಮ ವಹಿಸಿರುತ್ತವೆ. ಗ್ರಾಮೀಣ ಕೃಷಿ ಮತ್ತು ಕೂಲಿ ಕಾರ್ಮಿಕರಿಂದ ಹಿಡಿದು ದೇಶದ ಬೃಹತ್ ಕೈಗಾರಿಕೆಗಳ ಕಾರ್ಮಿಕರವರೆಗೂ ಶ್ರಮಶಕ್ತಿ ಬಳಕೆಯಾಗಿರುತ್ತದೆ.
ಈ ಶ್ರಮಶಕ್ತಿಯನ್ನು ತನ್ನಿಚ್ಚೆಯಂತೆ, ಅಗ್ಗದ ಕೂಲಿ ನೀಡಿ, ಬಳಸಿಕೊಳ್ಳಲು ಬಂಡವಾಳಿಗರು ಮತ್ತು ಬಂಡವಾಳ ವ್ಯವಸ್ಥೆ ಸದಾ ಸಿದ್ಧವಾಗಿರುತ್ತದೆ. ಇಂದು ಈ ಬೃಹತ್ ಸಮುದಾಯ ಅಪಾಯದ ಅಂಚಿನಲ್ಲಿದೆ. ಭಾರತದ ಬಂಡವಾಳ ವ್ಯವಸ್ಥೆ ತನ್ನ ಕ್ರೌರ್ಯದ ಪರಾಕಾಷ್ಠೆ ತಲುಪಿರುವುದನ್ನು ವಲಸೆ ಕಾರ್ಮಿಕರ ಬವಣೆಯಲ್ಲಿ ಕಾಣದೆ ಹೋದರೆ ಬಹುಶಃ ನಾವು ದೃಷ್ಟಿಹೀನರು ಎಂದೇ ಭಾವಿಸಬೇಕಾಗುತ್ತದೆ. ಭಾರತದ ಶ್ರಮಜೀವಿಗಳು ಕಳೆದ ಮೂರು ದಶಕಗಳಿಂದಲೂ ಕವಲು ಹಾದಿಯಲ್ಲೇ ನಡೆದುಬಂದಿದ್ದಾರೆ. ಇದೀಗ ತಮ್ಮ ಭವಿಷ್ಯದ ಹಾದಿಯನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪಿದ್ದಾರೆ.
ಕೃಷಿ, ಗುಡಿ ಕೈಗಾರಿಕೆಗಳಿಂದ ಹಿಡಿದು ಬ್ಯಾಂಕ್ ಮತ್ತು ವಿಮಾ ಕ್ಷೇತ್ರದವರೆಗಿನ ಸಮಸ್ತ ಕಾರ್ಮಿಕ ವರ್ಗ ಇಂದು-ನಾಳಿನ ಚಿಂತೆಯಲ್ಲಿದ್ದರೆ ಅದಕ್ಕೆ ಮೂಲ ಕಾರಣ ಈ ದೇಶದ ಆಳುವ ವರ್ಗಗಳು ಅನುಸರಿಸುತ್ತಿರುವ ನವ ಉದಾರವಾದಿ ಆರ್ಥಿಕ ನೀತಿ ಎನ್ನುವುದು ವಾಸ್ತವ.
ಆದರೆ ಈ ಅಮಾನುಷ ನೀತಿಗಳ ವಿರುದ್ಧ ಒಂದು ಸಮಗ್ರ ಹೋರಾಟ ರೂಪಿಸುವಲ್ಲಿ ನಾವು ಎಡವಿದ್ದೆಲ್ಲಿ ಎಂಬ ಪ್ರಶ್ನೆ ಎದುರಾದಾಗ ಕಾರ್ಮಿಕ ಚಳುವಳಿಯ ಮುಂಚೂಣಿಯಲ್ಲಿರುವ ಎಲ್ಲ ಸುಶಿಕ್ಷಿತರೂ ಮತ್ತೊಂದು ಮಾಸ್ಕ್ ಧರಿಸಬೇಕಾಗುತ್ತದೆ. ಇದು ಕಟು ವಾಸ್ತವ. ಈ ಲೋಪವನ್ನು ಒಪ್ಪಿಕೊಳ್ಳದೆ, ಆತ್ಮರತಿಯಲ್ಲೇ ಬದುಕುವುದಾದರೆ ನಮಗೆ, ಅಂದರೆ ಶ್ರಮಜೀವಿ ವರ್ಗಕ್ಕೆ, ನಾಳಿನ ನಕ್ಷತ್ರಗಳನ್ನೂ ಎಣಿಸಲಾಗುವುದಿಲ್ಲ.
ಏಕೆಂದರೆ ಇಂದು ಕಾರ್ಮಿಕ ವರ್ಗ ಎರಡು ನೆಲೆಯಲ್ಲಿ ಸಂಘರ್ಷ ನಡೆಸಬೇಕಿದೆ. ಮೊದಲನೆಯದು ನೂರಾರು ವರ್ಷಗಳ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದಿರುವ ದುಡಿಮೆಯ ಹಕ್ಕುಗಳನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಆತಂಕ. ದುಡಿಮೆಯ ಅವಧಿ ವಿಸ್ತರಣೆ, ಮುಷ್ಕರದ ಹಕ್ಕು ನಿರಾಕರಣೆ, ಸಂಘಟನೆಯ ಹಕ್ಕುಗಳ ಮೇಲಿನ ನಿರ್ಬಂಧ, ಕಾರ್ಮಿಕರನ್ನು ತಮ್ಮ ಇಚ್ಚೆಗನುಸಾರ ನೇಮಿಸಿ ವಜಾ ಮಾಡಲು ಮಾಲಿಕರಿಗೆ ನೀಡಿರುವ ಹಕ್ಕುಗಳು ಮತ್ತು ಶಾಸನಗಳ ಮೂಲಕ ಸುಶಿಕ್ಷಿತ ಕಾರ್ಮಿಕ ವರ್ಗದ ಅಭಿವ್ಯಕ್ತಿ ಸ್ವಾತಂತ್ರ್ಯದ ನಿಯಂತ್ರಣ ಹೀಗೆ ದುಡಿಮೆಗಾರರು ಒಂದು ಶತಮಾನದ ಹಿಂದಿನ ವ್ಯವಸ್ಥೆಗೆ ಜಾರು ಅಪಾಯವನ್ನು ಎದುರಿಸುತ್ತಿದ್ದಾರೆ.
ಎರಡನೆಯದು, ದುಡಿಮೆಯ ಕ್ಷೇತ್ರದ ಹೊರಗೆ ಇನ್ನೂ ಹೆಚ್ಚಿನ ಅಪಾಯಗಳನ್ನು ಎದುರಿಸಬೇಕಿದೆ. 70 ವರ್ಷಗಳ ಅವಧಿಯಲ್ಲಿ ಸಂವಿಧಾನದ ಕರ್ತೃಗಳು ಮತ್ತು ಸ್ವತಂತ್ರ ಭಾರತದ ನಿರ್ಮಾತೃಗಳು ರೂಪಿಸಿ ಪೋಷಿಸಿಕೊಂಡು ಬಂದಿದ್ದ “ ಸ್ವಾವಲಂಬಿ ” ಭಾರತದ ಕನಸನ್ನು ನುಚ್ಚು ನೂರು ಮಾಡಲು ನಾವು “ ಆತ್ಮನಿರ್ಭರ ” ಭಾರತವನ್ನು ನಿರ್ಮಿಸಬೇಕಿದೆ. ನೆಹರೂ ಯುಗದ ಸ್ವಾವಲಂಬನೆಗೂ ಮೋದಿ ಯುಗದ ಆತ್ಮನಿರ್ಭರತೆಗೂ ನಿಘಂಟಿನಲ್ಲಿ ಒಂದೇ ಅರ್ಥ ಕಂಡುಬರುತ್ತದೆ. ಆದರೆ ವಾಸ್ತವ ಭಿನ್ನ. ಸ್ವಾತಂತ್ರ್ಯ ಪೂರ್ವ ದಾರ್ಶನಿಕರು ಕಂಡ ಸ್ವಾವಲಂಬಿ ಭಾರತದಲ್ಲಿ ಈ ದೇಶದ ಸಂಪತ್ತು ಸಮಸ್ತ ಭಾರತೀಯರಿಗೆ ಸೇರಬೇಕು ಎನ್ನುವ ಉದಾತ್ತ ಚಿಂತನೆ ಇತ್ತು. ಇಂದಿನ ಆತ್ಮನಿರ್ಭರತೆ ಈ ಸಂಪತ್ತು ಮತ್ತು ಸಂಪನ್ಮೂಲಗಳನ್ನು ವಸಾಹತುಶಾಹಿಯ ಆಧುನಿಕ ಅವತಾರ ಎನ್ನಬಹುದಾದ ಕಾರ್ಪೋರೇಟ್ ಔದ್ಯಮಿಕ ವಲಯಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ.
ಬ್ರಿಟೀಷ್ ಸಾಮ್ರಾಜ್ಯ ಭಾರತವನ್ನು ಎರಡು ಶತಮಾನಗಳ ದಾಸ್ಯಕ್ಕೆ ಒಳಪಡಿಸಲು ಕಾರಣ ಇಲ್ಲಿನ ರಾಜ ಮಹಾರಾಜರು, ಮೇಲ್ವರ್ಗದ ಶ್ರೀಮಂತ ವ್ಯಾಪಾರಿಗಳು ಈಸ್ಟ್ ಇಂಡಿಯಾ ಕಂಪನಿಗೆ ರತ್ನಗಂಬಳಿ ಹಾಕಿ ಸ್ವಾಗತಿಸಿದ್ದು ಎನ್ನುವುದು ಅಳಿಸಲಾಗದ ಇತಿಹಾಸ. ಈ ದಾಸ್ಯದಿಂದ ವಿಮೋಚನೆ ಹೊಂದಿದ ಭಾರತ ತಾನು ಕಳೆದುಕೊಂಡ ಸಂಪನ್ಮೂಲಗಳನ್ನು ಮತ್ತು ನೈಸರ್ಗಿಕ ಆಸ್ತಿಯನ್ನು ಮರಳಿ ಗಳಿಸಲು ಐದಾರು ದಶಕಗಳೇ ಬೇಕಾದವು ಎನ್ನುವುದು ವಾಸ್ತವ.
ಈ ಮರಳಿ ಪಡೆಯುವ ಪ್ರಕ್ರಿಯೆಯಲ್ಲೇ ದೇಶದ ಕೋಟ್ಯಂತರ ಜನತೆಗೆ ಬದುಕು ಕಟ್ಟಿಕೊಳ್ಳಲು ಸೂರು ಒದಗಿಸಿದ ಸಾರ್ವಜನಿಕ ಉದ್ದಿಮೆಗಳು ಸ್ಥಾಪನೆಯಾಗಿದ್ದು ಸಮಕಾಲೀನ ಇತಿಹಾಸ. ಈಗ ಈ ಸಾರ್ವಜನಿಕ ಉದ್ದಿಮೆಗಳು ಒಂದೊಂದಾಗಿ ಕೈಜಾರುತ್ತಿವೆ. ಕರ್ನಾಟಕದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳು ಮತ್ತು ಬ್ಯಾಂಕುಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವುದನ್ನು ಗಮನಿಸುತ್ತಲೇ ಇದ್ದೇವೆ.
ಸಾರಿಗೆ, ಸಂಪರ್ಕ, ಇಂಧನ, ಹಣಕಾಸು, ಸರಕು ಉತ್ಪಾದನೆ, ಕೃಷಿ ಉತ್ಪಾದನೆ, ಹೈನುಗಾರಿಕೆ ಈ ಎಲ್ಲ ಕ್ಷೇತ್ರಗಳಲ್ಲಿ ದುಡಿದ ಕೋಟ್ಯಂತರ ಜೀವಗಳ ಬೆವರಿನ ಹನಿಗಳನ್ನು ನಾವು ಚಲಿಸುವ ರೈಲುಗಳಲ್ಲಿ, ಸಾರ್ವಜನಿಕ ಉದ್ದಿಮೆಗಳ ಬೃಹತ್ ಕಟ್ಟಡಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ, ಬ್ಯಾಂಕು ಮತ್ತು ವಿಮಾ ವಲಯದ ಫಲಕಗಳಲ್ಲಿ, ದೂರ ಸಂಪರ್ಕದ ತಂತುಗಳಲ್ಲಿ ಕಾಣದೆ ಹೋದರೆ ನಮ್ಮಷ್ಟು ಕೃತಘ್ಞರು ಮತ್ತಾರೂ ಇರಲಾರರು. ಹೌದು ನಾವು ಇದನ್ನು ಮಾನ್ಯ ಮಾಡುತ್ತಿದ್ದೇವೆ.
ಆದರೆ ಈ ಪ್ರತಿಯೊಂದು ಕ್ಷೇತ್ರದ, ವಲಯದ ಉದ್ದಿಮೆಗಳು ಒಂದೊಂದಾಗಿ ನಮ್ಮ ಕೈಜಾರಿ ಮತ್ತದೇ ಉದ್ಯಮಿಗಳ ಪಾಲಾಗುತ್ತಿರುವುದನ್ನು ಕಂಡೂ ಕಾಣದಂತೆ ನಮ್ಮ ಹಿತವಲಯಗಳಲ್ಲಿ ವಿರಮಿಸುತ್ತಿದ್ದೇವೆ. ಇಂದಿನ ಭಾರತದ ಯುವ ಪೀಳಿಗೆಯಲ್ಲಿ ಹರಿಯುತ್ತಿರುವುದೇ ಈ ಸಾರ್ವಜನಿಕ ಉದ್ದಿಮೆಗಳ ಮತ್ತು ಈ ಉದ್ದಿಮೆಗಳನ್ನು ಕಟ್ಟಿ ಬೆಳೆಸಿದ ಕೋಟ್ಯಂತರ ಕಾರ್ಮಿಕರ ನೆತ್ತರು ಮತ್ತು ಬೆವರು ಎನ್ನುವುದನ್ನು ಡಿಜಿಟಲ್ ಯುಗದ “ ಶತಮಾನದ ಮಕ್ಕಳು ” ಅರ್ಥಮಾಡಿಕೊಳ್ಳಬೇಕಿದೆ. ಅವರಿಗೆ ಅರ್ಥಮಾಡಿಸುವ ಜವಾಬ್ದಾರಿ ಇದರ ಮೂಲ ಫಲಾನುಭವಿಗಳ ಮೇಲಿದೆ.
ದುರಂತ ಎಂದರೆ ಈ ಫಲಾನುಭವಿಗಳು ತಮಗೆ ಅನ್ನ ನೀಡಿದ ನೆಲೆಯನ್ನೇ ಮರೆತು ನವ ಉದಾರವಾದದ ಕರಾಳ ಬಾಹುಗಳಲ್ಲಿ ವಿರಮಿಸುತ್ತಿದ್ದಾರೆ. ಕೋವಿದ್ 19 ಸಂದರ್ಭದ ವಲಸೆ ಕಾರ್ಮಿಕರ ಬವಣೆಯೂ ಹಿತವಲಯದ ಮಧ್ಯಮ ವರ್ಗಗಳ ಕಣ್ತೆರೆಸಿಲ್ಲ ಎನ್ನುವುದು ದುರಂತ.
ಇದು ಒಂದು ಸಹಜ ಪ್ರಕ್ರಿಯೆ ಎನ್ನುವಂತೆ ಆಳುವ ವರ್ಗಗಳ ಎಲ್ಲ ನೀತಿಗಳನ್ನೂ ಅಪ್ಪಿಕೊಳ್ಳಲು ಸಿದ್ದರಾಗುತ್ತಿದ್ದಾರೆ. ಈ ನಡುವೆ ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು, ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಮತ್ತು “ ಪ್ರಜ್ಞಾವಂತ ” ನಾಗರಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ಕಾರ್ಮಿಕ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಇದರ ಒಂದು ಹೆಜ್ಜೆ ನವಂಬರ್ 26ರ ಸಾರ್ವತ್ರಿಕ ಮುಷ್ಕರ.
ಕಾಕತಾಳಿಯವೇನೋ ಎನ್ನುವಂತೆ ಈ ದಿನ ಎರಡು ಕಾರಣಗಳಿಗಾಗಿ ಮಹತ್ವ ಪಡೆಯುತ್ತದೆ. ಮೊದಲನೆಯದು ಇದು ಸಂವಿಧಾನ ದಿನ. ಅಂದರೆ ರಾಜಕೀಯ ಸ್ವಾತಂತ್ರ್ಯ, ಸಾಮಾಜಿಕ ಸ್ವಾತಂತ್ರ್ಯ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸುವ ಮೂಲಕ ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ದತೆಯ ಮೂಲಕ ಸಮ ಸಮಾಜವನ್ನು ಕಟ್ಟುವ ಕನಸು ಸಾಕಾರಗೊಳಿಸಲು ಭಾರತದ ಸಂವಿಧಾನವನ್ನು ಅಂಗೀಕರಿಸಲಾದ ದಿನ.
ಈ ಮೂರು ಸ್ವಾತಂತ್ರ್ಯಗಳಲ್ಲಿ ಒಂದು ಇಲ್ಲದೆ ಹೋದರೂ ನಮ್ಮ ಕನಸು ನನಸಾಗುವುದಿಲ್ಲ ಎಂಬ ಅಂಬೇಡ್ಕರ್ ಅವರ ಮಾತುಗಳು ಈಗ ನಮಗೆ ಇನ್ನೂ ಹೆಚ್ಚು ಪ್ರಸ್ತುತ ಎನಿಸಬೇಕಲ್ಲವೇ ? ಏಕೆಂದರೆ ಈ ಮೂರೂ ಸ್ವಾತಂತ್ರ್ಯಗಳ ಪರಿಕಲ್ಪನೆಯನ್ನೇ ಅಳಿಸಹಾಕುವಂತಹ ಕರಾಳ ಶಾಸನಗಳ ಪರ್ವ ನಮ್ಮೆದುರು ಬೃಹತ್ ಬಂಡೆಯಂತೆ ನಿಂತಿದೆ.
ಎರಡನೆಯ ಕಾರಣ ಭಾರತದ ಅಖಂಡತೆ ಮತ್ತು ಏಕತೆಗೆ ಧಕ್ಕೆ ಉಂಟುಮಾಡುವಂತಹ ಮುಂಬೈ ಭಯೋತ್ಪಾದಕ ದಾಳಿ ನಡೆದದ್ದು ಇದೇ ದಿನ, 2008ರಲ್ಲಿ. ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನವನ್ನು ಸ್ವತಃ ನಾವೇ ಅಲಕ್ಷಿಸಿದ್ದರಿಂದಲೇ 26/11 ನಡೆಯಲು ಸಾಧ್ಯವಾಯಿತು ಎನ್ನುವ ಪ್ರಜ್ಞೆ ನಮ್ಮಲ್ಲಿರಬೇಕು.
ಕಳೆದ ಮೂರು ದಶಕಗಳ ಸಾಂಸ್ಕೃತಿಕ ರಾಜಕಾರಣ, ಮತಾಂಧತೆ ಮತ್ತು ಮತೀಯ ಉಗ್ರವಾದದ ಬೆಳವಣಿಗೆಯನ್ನು ನೋಡಿದರೆ ಸಂವಿಧಾನ ಕರ್ತೃಗಳ ಮೂಲ ಆಶಯಗಳನ್ನು ನಾವು ಎಷ್ಟು ವ್ಯವಸ್ಥಿತವಾಗಿ ಮಣ್ಣುಪಾಲು ಮಾಡಿದ್ದೇವೆ ಎನ್ನುವುದನ್ನೂ ಗ್ರಹಿಸಬಹುದು. ನಮ್ಮ “ ಆತ್ಮ ನಿರ್ಭರತೆ ” ವ್ಯಕ್ತವಾಗಬೇಕಿರುವುದು ಇಲ್ಲಿ. ಭಾರತದ ಬಹುಸಂಸ್ಕೃತಿಯ ಚೌಕಟ್ಟಿನಲ್ಲಿ ಶತಮಾನಗಳಿಂದ ಇದ್ದ ಸೌಹಾರ್ದತೆಯನ್ನು ಅಡ್ಡಡ್ಡಲಾಗಿ ಸೀಳುವುದರಲ್ಲಿ ಈ ಸಮಾಜೋ ಸಾಂಸ್ಕೃತಿಕ ರಾಜಕೀಯ ಬೆಳವಣಿಗೆಗಳು ಯಶಸ್ವಿಯಾಗಿವೆ.
ಹಾಗೆಯೇ ಮೇಲ್ನೋಟಕ್ಕೆ ಕಾಣಬಹುದಾಗಿದ್ದ ಸೌಹಾರ್ದತೆಯ ನಡುವೆಯೇ ನಮ್ಮ ನಡುವೆ ಇದ್ದ ಜಾತಿ ಶ್ರೇಷ್ಠತೆಯ ವ್ಯಸನ ಮತ್ತು ಜಾತಿ ತಾರತಮ್ಯ, ದೌರ್ಜನ್ಯ ಮತ್ತು ಮೇಲ್ಜಾತಿಯ ಕ್ರೌರ್ಯವನ್ನು ಅಳಿಸಿ ಹಾಕುವ ಬದಲು ಮತ್ತಷ್ಟು ಗಟ್ಟಿಗೊಳಿಸುತ್ತಿರುವುದನ್ನೂ ಗಮನಿಸಬೇಕಿದೆ. 21ನೆಯ ಶತಮಾನದ ಮೂರನೆಯ ದಶಕವನ್ನು ಪ್ರವೇಶಿಸುತ್ತಿರುವ ಸಂದರ್ಭದಲ್ಲೂ ನಾವು ಅತ್ಯಾಚಾರಕ್ಕೊಳಗಾದ ಹೆಣ್ಣುಮಗುವಿನ ಶವದ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿದರೆ ನಮ್ಮೊಳಗಿನ ಕ್ರೌರ್ಯದ ಫಸಲು ಇನ್ನೂ ಹಸನಾಗಿದೆ ಎನಿಸುವುದಿಲ್ಲವೇ ?
ಅನ್ನ ಬೆಳೆಯುವ ರೈತನ ಆಕ್ರಂದನವನ್ನು ಗ್ರಾಂಥಿಕ ಕ್ರೌರ್ಯದ ಮೂಲಕ (ಕರಾಳಶಾಸನಗಳನ್ನು ಹೀಗೆ ಕರೆಯಬಹುದು) ಎದುರಿಸುವ ಒಂದು ವಿಕೃತ ವ್ಯವಸ್ಥೆಯಲ್ಲಿ ನಾವು ನಾಳಿನ ಯೋಚನೆ ಮಾಡುತ್ತಿದ್ದೇವೆ. ಇಲ್ಲಿಯೇ ನಾವು ಮನುಸ್ಮೃತಿಯ ಮರುಹುಟ್ಟನ್ನು ಗುರುತಿಸಬೇಕಿದೆ. ಮನು ಎಂಬ ಹೆಸರಿನ ಋಷಿ ತನ್ನ ಕಾಲಘಟ್ಟದಲ್ಲಿದ್ದ ಉತ್ಪಾದನಾ ಸಂಬಂಧಗಳಿಗೆ ಅನುಗುಣವಾಗಿ ಸಮಾಜದ ನಿರ್ವಹಣೆಗೆ ಸಂಹಿತೆಗಳನ್ನು ರಚಿಸಿದ್ದ. ಆಧುನಿಕ ಭಾರತಕ್ಕೆ ಇದರ ಅವಶ್ಯಕತೆ ಇಲ್ಲ ಎನ್ನುವ ಕಾರಣಕ್ಕಾಗಿಯೇ ಅಂಬೇಡ್ಕರ್ ಅದನ್ನು ಸಾಂಕೇತಿಕವಾಗಿ ಸುಟ್ಟುಹಾಕಿದ್ದರು.
ಇಂದು ಮನುಸ್ಮೃತಿಯ ಅತ್ಯಾಧುನಿಕ ಅವತಾರವನ್ನು ಹಥ್ರಾಸ್ ಘಟನೆಯಲ್ಲಿ, ವಿದ್ಯುನ್ಮಾನ ಸುದ್ದಿಮನೆಗಳಲ್ಲಿ, ಶಾಸಕಾಂಗ ಸಭೆಗಳಲ್ಲಿ, ಸಂಸತ್ ಭವನದಲ್ಲಿ, ಆಡಳಿತ ವ್ಯವಸ್ಥೆಯಲ್ಲಿ ಮತ್ತು ಕೆಲವು ಸಂದರ್ಭಗಳಲ್ಲಿ ನ್ಯಾಯ ವ್ಯವಸ್ಥೆಯ ಅಂಗಳದಲ್ಲೂ ಕಾಣುತ್ತಿದ್ದೇವೆ. ಶೋಷಿತ ಸಮುದಾಯಗಳು ಮತ್ತು ಶ್ರಮಜೀವಿ ವರ್ಗಗಳು, ಈ ಎರಡರ ನಡುವೆ ಇರುವ ರೇಖೆ ಬರಿಗಣ್ಣಿಗೆ ಕಾಣಿಸದಷ್ಟು ತೆಳುವಾಗಿದೆ.
26/11ರಂದು ನಡೆದ ದಾಳಿ ದೇಶದ ಜನತೆಯನ್ನು ಕೆಲವು ವರ್ಷಗಳ ಕಾಲ ತಲ್ಲಣಗೊಳಿಸಿತ್ತು. ಆದರೆ ಇಂದು ನವ ಉದಾರವಾದದ ದಾಳಿ ದೇಶದ ಬಹುಸಂಖ್ಯೆಯ ಜನತೆಯನ್ನು ತಲ್ಲಣಗೊಳಿಸುತ್ತಿದೆ. ಈ ಗ್ರಾಂಥಿಕ ದಾಳಿಗೆ ಕೋಟ್ಯಂತರ ಶ್ರಮಜೀವಿಗಳು ತತ್ತರಿಸಿಹೋಗಲಿದ್ದಾರೆ, ಬೀದಿ ಪಾಲಾಗಲಿದ್ದಾರೆ. ನವ ಭಾರತದ ನಿರ್ಮಾಣಕ್ಕೆ ಇದು ಅತ್ಯವಶ್ಯ ಎನ್ನುವುದಾರೆ ಆ ನವಭಾರತದ ನವ ಸ್ವರೂಪವನ್ನು ನಾವು ತಿರಸ್ಕರಿಸಬೇಕಾಗುತ್ತದೆ.
ಕಾರ್ಮಿಕ ಕಾನೂನುಗಳನ್ನು ಸಂಕುಚಿತಗೊಳಿಸುವ ಮೂಲಕ ದುಡಿಮೆಯ ಕೈಗಳನ್ನು ಮತ್ತೊಮ್ಮೆ ಔದ್ಯಮಿಕ ಸಂಕೋಲೆಗಳಲ್ಲಿ ಬಂಧಿಸಲು ಹೊರಟಿರುವ ಭಾರತದ ಆಳುವ ವರ್ಗಗಳು, ಭಾರತದ ಬೆನ್ನೆಲುಬು ಎಂದೇ ಹೇಳಲಾಗುವ ಕೃಷಿ ಕ್ಷೇತ್ರವನ್ನೂ ಉದ್ಯಮಪತಿಗಳಿಗೆ ಪರಭಾರೆ ಮಾಡುವ ಮೂಲಕ ಶೇ 60ರಷ್ಟು ಜನಸಂಖ್ಯೆಯ ಮೇಲೆ ದಾಳಿ ನಡೆಸುತ್ತಿದೆ.
ದೇಶದ ಶೈಕ್ಷಣಿಕ ಸಂಪತ್ತನ್ನೂ ಸಹ ಬಹುತ್ವದ ನೆಲೆಗಳಿಂದ ದೂರ ಮಾಡಿ, ವರ್ಣಾಶ್ರಮ ಧರ್ಮವನ್ನು ಪುನರ್ ಸ್ಥಾಪಿಸಿ, ಇಡೀ ಶಿಕ್ಷಣ ವ್ಯವಸ್ಥೆಯನ್ನು ಕಾರ್ಪೋರೇಟ್ ಉದ್ಯಮಿಗಳಿಗೆ ವಹಿಸುವ ಸೂಚನೆಯನ್ನು ಹೊಸ ಶಿಕ್ಷಣ ನೀತಿಯಲ್ಲಿ ಕಾಣಬಹುದಾಗಿದೆ. ಸಂಸತ್ತಿನಲ್ಲಿ ಚರ್ಚೆಯಿಲ್ಲದೆ ಅನುಮೋದನೆಯಾಗಿರುವ ಈ ಕರಾಳ (!) ಶಾಸನಗಳಿಗೂ, ಎಲ್ಲ ರಾಜಕೀಯ ಪಕ್ಷಗಳೂ ಅನುಮೋದಿಸುವ ಯುಎಪಿಎ ಮುಂತಾದ ಕರಾಳ ಶಾಸನಗಳಿಗೆ ವ್ಯತ್ಯಾಸವೇನಾದರೂ ಇದ್ದರೆ ಅದು ಗ್ರಾಂಥಿಕ ಮಾತ್ರ. ಎರಡೂ ಸಹ ಬದುಕುವ ಹಕ್ಕನ್ನು ಕಸಿದುಕೊಳ್ಳುವ ಅಸ್ತ್ರಗಳೇ ಆಗಿವೆ.
ಈ ಎರಡು ಅಸ್ತ್ರಗಳ ವಿರುದ್ಧ ಸ್ವಾವಲಂಬಿ ಭಾರತಕ್ಕೆ ಬದ್ಧರಾಗಿರುವ ಪ್ರತಿಯೊಬ್ಬ ನಾಗರಿಕನೂ ದನಿ ಎತ್ತಬೇಕಿದೆ. ದೇಶದ ಬಹುಸಂಖ್ಯೆಯ ಜನರ ಬದುಕಿಗೆ ಅವಶ್ಯವಾದ ಸ್ವಾವಲಂಬನೆಯನ್ನು ಬಲಿಕೊಟ್ಟು, ಬೆರಳೆಣಿಕೆಯಷ್ಟು ಶ್ರೀಮಂತರ ಸ್ವಾವಲಂಬನೆಗೆ ಅವಕಾಶ ಮಾಡಿಕೊಡುವ “ ಆತ್ಮನಿರ್ಭರ ” ಭಾರತ ಭಾರತವನ್ನು ಮತ್ತೊಂದು ರೀತಿಯ ದಾಸ್ಯಕ್ಕೆ ದೂಡುತ್ತದೆ.
ಭೌಗೋಳಿಕವಾಗಿ ಭಾರತ ಸಂಕೋಲೆಗಳಿಂದ ಮುಕ್ತವಾಗಿಯೇ ಇದ್ದರೂ, ಬೌದ್ಧಿಕವಾಗಿ ಈ ದೇಶದ ಕೋಟ್ಯಂತರ ಶೋಷಿತರು, ಅವಕಾಶವಂಚಿತರು, ಅಂಚಿಗೆ ತಳ್ಳಲ್ಪಟ್ಟಿರುವವರು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಇಂದಿಗೂ ಹೋರಾಡುತ್ತಿರುವ ದಮನಿತರು ಕಾರ್ಪೋರೇಟ್ ದಾಸ್ಯಕ್ಕೆ ಒಳಗಾಗಲಿದ್ದಾರೆ. ಇದು ನಮ್ಮ ಮುಂದಿರುವ ಅಪಾಯ.
ಒಂದು ಸುಂದರ ಸೌಧ ನಿರ್ಮಾಣವಾಗುತ್ತಿದೆ ಒಂದು ಅಂಗುಲ ಭೂಮಿ ಕೊಟ್ಟರೆ ತಪ್ಪೇನಿಲ್ಲ ಎಂದು ಹೇಳುವ ಕಾಲ ಇದಲ್ಲ. ಈ ಸೌಧದ ಅಡಿಪಾಯಕ್ಕೆ ಭೂಮಿ ಕೊಟ್ಟವರ ಎಲುಬುಗಳನ್ನೇ ಅಸ್ತಿಭಾರದಂತೆ ಬಳಸಲಾಗುತ್ತದೆ. ಇದು ನವ ಉದಾರವಾದದ ನೀತಿ. ಮೂರು ದಶಕಗಳ ನವ ಉದಾರವಾದಿ ನೀತಿಯ ಪರಿಣಾಮ ಈಗಾಗಲೇ ನಾವು ನೆಲೆ ಕಳೆದುಕೊಂಡಿದ್ದೇವೆ.
ಈಗ ಸಮಾಜೋ ಸಾಂಸ್ಕೃತಿಕ ನೆಲೆಗಳೂ ಧ್ವಂಸವಾಗುತ್ತಿವೆ. ಮತಾಂಧತೆ, ಜಾತಿ ಪ್ರಜ್ಞೆ ಮತ್ತು ಬಂಡವಾಳದ ಮೈತ್ರಿಯ ಎದುರು ಈ ದೇಶದ ದುಡಿಯುವ ವರ್ಗಗಳು ಹೋರಾಡಬೇಕಿದೆ. ಹಾಗಾಗಿಯೇ ನವಂಬರ್ 26ರ ಸಾರ್ವತ್ರಿಕ ಮುಷ್ಕರ ನಿರ್ಣಾಯಕವಾಗಲಿದೆ.
ಕೊನೆಯ ಹನಿ : ಬ್ರಿಟೀಷರು, ಫ್ರೆಂಚರು, ಡಚ್ಚರು ಮತ್ತು ಪೋರ್ಚುಗೀಸರು ಭಾರತದ ಸಂಪತ್ತನ್ನು ಕೊಳ್ಳೆಹೊಡೆಯಲು ಪ್ರವೇಶಿಸಿದಾಗ ಪ್ರತಿಯೊಂದು ಸಂಸ್ಥಾನದ ರಾಜ/ಸಾಮಂತರೂ ಯೋಚಿಸಿದ್ದು “ ಪಕ್ಕದ ಸಂಸ್ಥಾನ ಅವರ ಪಾಲಾಗಿದೆ ನಾನು ಸುರಕ್ಷಿತ ” ಎಂದು. ನಂತರ ನಡೆದದ್ದು ಇತಿಹಾಸ. ಈಗ ಭಾರತದ ದುಡಿಯುವ ವರ್ಗಗಳಲ್ಲೂ ಇದೇ ರೀತಿಯ “ ನಮ್ಮ ದುಡಿಮೆಯ ವಲಯ/ಕ್ಷೇತ್ರ/ಸಂಸ್ಥೆ ಸುರಕ್ಷಿತವಾಗಿದೆ ” ಎನ್ನುವ ಮನೋಭಾವ ಇದೆ. ಮತ್ತೊಮ್ಮೆ ದಾಸ್ಯಕ್ಕೊಳಗಾಗುವ ಮುನ್ನ,,,,,,,,,ಎಚ್ಚೆತ್ತುಕೊಳ್ಳಲು ನವಂಬರ್ 26ರ ದನಿಗೆ ದನಿಗೂಡಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ5 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ5 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ5 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



