ನೆಲದನಿ
‘ಹಾದಿಗಲ್ಲು’ : ಜನಪರ ಹೆಜ್ಜೆಗಳ ಅನನ್ಯ ಯಾನ
- ಡಾ.ಎನ್.ಕೆ.ಪದ್ಮನಾಭ,ಸಹಾಯಕ ಪ್ರಾಧ್ಯಾಪಕರು,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ
ಲಾಕ್ಡೌನ್ನ ಸುಧೀರ್ಘ ಅವಧಿಯ ನಂತರ ತೀರಾ ಇತ್ತೀಚೆಗೆ ನಮ್ಮ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಕ್ಲಾಸ್ಗಳು ಶುರುವಾದವು. ಕಳೆದ ವಾರದ ತರಗತಿಯಲ್ಲಿ ಸಾರ್ವಜನಿಕ ಸಂಪರ್ಕದ ಕುರಿತ ವ್ಯಾಖ್ಯಾನ ಆಧರಿಸಿ ಚರ್ಚೆ ಆರಂಭಿಸಿದ್ದೆ.
ಇಡೀ ಸರ್ಕಾರೀ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸಲು ಆಡಳಿತದಲ್ಲಿ ಸಾರ್ವಜನಿಕ ಸಂಪರ್ಕ ಅಥವಾ ಪಬ್ಲಿಕ್ ರಿಲೇಷನ್ಸ್ ಎಂಬ ಪ್ರತ್ಯೇಕ ಇಲಾಖೆ ರೂಪಿಸಿ ಅದನ್ನು ಬಲಪಡಿಸುವುದರ ಕಡೆಗೆ ನೀತಿ ನಿರೂಪಕರು ಯೋಚಿಸುವ ಅಗತ್ಯವಿದೆ ಎಂಬ ಪ್ರತಿಪಾದನೆಯೊಂದಿಗೆ ತರಗತಿಯಲ್ಲಿ ನನ್ನ ಉಪನ್ಯಾಸ ಶುರುವಾಗಿತ್ತು.
ರೆಕ್ಸ್ ಹಾರ್ಲೋ ಅವರ ವಿಸ್ತೃತವಾದ ವ್ಯಖ್ಯಾನವನ್ನು ಈ ಕೇಂದ್ರ ಆಶಯ ಆಧರಿಸಿ ವಿವರಿಸಿದ್ದೆ. ಪ್ರತ್ಯೇಕವಾದ ಸ್ವಾಯತ್ತ ಸಂಸ್ಥೆಯಾಗಿ ಸರ್ಕಾರಿ ಆಡಳಿತದ ಉನ್ನತೀಕರಣಕ್ಕೆ ಹೇಗೆ ನೆರವಾಗಬಹುದು ಎಂಬುದನ್ನು ವಿವಿಧ ಆಯಾಮಗಳಲ್ಲಿ ವಿಶ್ಲೇಷಣೆಗೊಳಪಡಿಸಲು ಪ್ರಯತ್ನಿಸಿದ್ದೆ.
ಇದಾದ ಮರುದಿನ ನನ್ನ ಓದಿಗೆ ಸಿಕ್ಕಿದ್ದು ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಅವರು ಬರೆದ ‘ಹಾದಿಗಲ್ಲು’ ಕೃತಿ. ‘ಆತ್ಮವೃತ್ತಾಂತದ ಮೊದಲ ಚರಣ’ ಎಂಬ ಟ್ಯಾಗ್ಲೈನ್ನೊಂದಿಗೆ ಐದನೇ ಮುದ್ರಣ ಕಂಡಿರುವ ಈ ಕೃತಿಯೊಂದಿಗಿನ ಓದಿನ ಯಾನ ನನ್ನ ತರಗತಿಯ ಚರ್ಚೆಯ ಮುಂದುವರಿದ ಭಾಗದಂತಿತ್ತು. ವ್ಯಕ್ತಿಗತ ಯಶಸ್ಸನ್ನು ಸಮಾಜಪರ-ಜನಪರ ಕೆಲಸಗಳೊಂದಿಗೆ ಸಮೀಕರಿಸಿ ಸಾಧನೆ ಸಾಧ್ಯವಾಗಿಸಿಕೊಂಡ ಹಿಂದಿನ ಮತ್ತು ವರ್ತಮಾನದ ಎಲ್ಲಾ ಸಾಧಕರೊಳಗೆ ಪಬ್ಲಿಕ್ ರಿಲೇಷನ್ಸ್ ತಂತ್ರಜ್ಞ ಕ್ರಿಯಾಶೀಲತೆ ಇರುತ್ತದೆ ಎಂಬ ನನ್ನ ತರಗತಿಯ ಪ್ರತಿಪಾದನೆಗೆ ಪೂರಕವಾದ ಸಮರ್ಥನಾ ಸಾಕ್ಷ್ಯವಾಗಿ ಇಡೀ ಕೃತಿ ಸಹಾಯಕವಾಯಿತು.
ಖಾಸಗೀಕರಣವೊಂದೇ ಸದ್ಯದ ಎಲ್ಲ ಬಗೆಯ ಸಮಸ್ಯೆಗಳಿಗೆ ಪರಿಹಾರೋಪಾಯ ಎಂಬ ಪೂರ್ವಗ್ರಹಪೀಡಿತ-ಅವಸರದ ದೃಷ್ಟಿಕೋನವೇ ವಿಜೃಂಭಿಸುತ್ತಿರುವಾಗ ಸರ್ಕಾರೀ ಆಡಳಿತದ ಪರಿಕಲ್ಪನೆಯೊಳಗೇ ಇರುವ ಸರ್ವೋದಯದ ಪ್ರಾಯೋಗಿಕ ಆಯಾಮವನ್ನು ಗಂಭೀರವಾಗಿ ಪರಿಗಣಿಸಬೇಕಾದ ಸಕಾರಾತ್ಮಕ ಒತ್ತಡವನ್ನು ‘ಹಾದಿಗಲ್ಲು’ ಸೃಷ್ಟಿಸುತ್ತದೆ. ಈ ಕೃತಿಯ ಓದು ಶುರುವಾಗುವ ಮುನ್ನಾದಿನದ ನನ್ನ ತರಗತಿಯಲ್ಲಿ ಸರ್ಕಾರಿ ವ್ಯವಸ್ಥೆಯೊಳಗೆ ಪಿಆರ್ ಸ್ವಾಯತ್ತ ಸಂಸ್ಥೆಯಾಗಿ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾವಾರು ಮಟ್ಟಗಳಲ್ಲಿ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಪ್ರಸ್ತಾಪಿಸಿದ್ದೆ.
ದಯಾನಂದ ಅವರು ಬರೆದ ಒಂದೊಂದು ಅಧ್ಯಾಯವೂ ನನ್ನ ಪ್ರತಿಪಾದನೆಗೆ ಸಹಾಯಕವಾಗುವ ಬೌದ್ಧಿಕ ಪ್ರಾಯೋಗಿಕ ಸಂಪನ್ಮೂಲವಾಗಿ ಒದಗಿಬಂದಿದ್ದು ಒಂದು ವಿಶೇಷ ಅನುಭವ. ಒಂದು ಅಧ್ಯಾಯದಿಂದ ಮತ್ತೊಂದು ಅಧ್ಯಾಯಕ್ಕೆ ದಾಟಿಕೊಳ್ಳುವಾಗಲೆಲ್ಲಾ ಅವರೊಳಗೆ ಸುಪ್ತವಾದ ಸಾರ್ವಜನಿಕ ಸಂಪರ್ಕ ಕೌಶಲ್ಯದೊಂದಿಗೆ ಬೆರೆತುಹೋದ ಮನುಷ್ಯಪರ ಕಾಳಜಿ ಸರ್ಕಾರಿ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಬಹುದು ಎಂಬ ಆಶಾವಾದ ಗಟ್ಟಿಗೊಳ್ಳುತ್ತಲೇ ಇತ್ತು.
ಉನ್ನತ ಹಂತದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ತಾನು ಪ್ರತಿನಿಧಿಸುವ ಆಡಳಿತಾತ್ಮಕ ವ್ಯವಸ್ಥೆಯೊಳಗೆ ಸಮಗ್ರ ಬದಲಾವಣೆ ತರುವ ಕನಸನ್ನು ಬಿತ್ತಿ ಸಮೃದ್ಧಿಯನ್ನು ನೆಲೆಗೊಳಿಸುವ ಮಾದರಿಗಳನ್ನು ಸೃಷ್ಟಿಸಬಹುದು. ಎಲ್ಲವೂ ಸರಿಯಿಲ್ಲ ಎಂಬ ಹತಾಶೆಗಿಂತಲೂ ಮಿತಿಗಳನ್ನೇ ಗುರುತಿಸಿ ಅವುಗಳನ್ನೇ ಸಮೃದ್ಧಿಯ ಕಡೆಗೆ ಪಯಣಿಸಲು ಒತ್ತಡವನ್ನುಂಟುಮಾಡುವ ಅಪೂರ್ವ ಅವಕಾಶಗಳನ್ನಾಗಿಸಿಕೊಂಡರೆ ಬದಲಾವಣೆ ಸಾಧ್ಯವಾಗುತ್ತದೆ. ಈ ಬಗೆಯ ಮಹತ್ವದ ಬದಲಾವಣೆಗಾಗಿ ಮ್ಯಾನೇಜ್ಮೆಂಟಿನ ಅಕ್ಯಾಡೆಮಿಕ್ ಅಧ್ಯಯನದ ಅವಶ್ಯಕತೆ ಇಲ್ಲ.
ಸದಾ ಸಕಾರಾತ್ಮಕ ಮನೋಬಲ, ವ್ಯಕ್ತಿಗತ ಬದುಕಿನ ಅನುಭವಗಳು, ಸ್ವತಃ ಕಂಡುಕೊಂಡ ವಿನೂತನ ಅವಲೋಕನದ ಮಾದರಿ, ಜಗತ್ತನ್ನು, ಸುತ್ತಮುತ್ತಲಿನ ಘಟನೆ- ಮನುಷ್ಯ ವರ್ತನೆಗಳನ್ನು ಸೂಕ್ಷ್ಮವಾಗಿ ನೋಡುವ ಚಿಕಿತ್ಸಕ ದೃಷ್ಟಿಕೋನ, ವೃತ್ತಿಪರ ಯಶಸ್ಸಿನ ಸ್ಪಷ್ಟ ಪ್ರಜ್ಞೆ- ಇವಿಷ್ಟೂ ಇದ್ದರೆ ಬಹುದೊಡ್ಡ ಸಾಮಾಜಿಕ ಪಲ್ಲಟಗಳಿಗೆ ಕಾರಣವಾಗಬಲ್ಲ ಕೊಡುಗೆಗಳನ್ನು ನೀಡಬಹುದು. ‘ಹಾದಿಗಲ್ಲು’ ಇಂಥದ್ದೊಂದು ಒಳನೋಟವನ್ನು ಕಟ್ಟಿಕೊಳ್ಳಲು ನೆರವಾಗುತ್ತದೆ.
ಮ್ಯಾನೇಜ್ಮೆಂಟ್ ಅಕ್ಯಾಡೆಮಿಕ್ ವಲಯದಲ್ಲಿ ಮತ್ತೆ ಮತ್ತೆ ಪ್ರಸ್ತಾಪಿತವಾಗುವ ಸ್ವಾಟ್ ಅನಾಲಿಸಿಸ್ (SWOT Analysis – Strengths, Weaknesses, Opportunities and Threats)ಪರಿಕಲ್ಪನೆಯು ಪರಿಣಾಮಕಾರಿಯಾಗಿ ಪ್ರಯೋಗಕ್ಕೊಳಪಡಬೇಕಾಗಿರುವುದು ಸರ್ಕಾರೀ ಆಡಳಿತಾತ್ಮಕ ಹಂತಗಳಲ್ಲಿ. “ಯೋಜನೆಗಳು ರೂಪುಗೊಳ್ಳುತ್ತವೆ, ಹಾಗೆ ರೂಪುಗೊಂಡು ಅನುಷ್ಠಾನಗೊಳ್ಳದೇ ನಿಷ್ಪ್ರಯೋಜಕವೆನ್ನಿಸುತ್ತವೆ” ಎಂಬ ಸಾರ್ವತ್ರಿಕ ಟೀಕೆ ಈಗಲೂ ವ್ಯಕ್ತವಾಗುತ್ತಲೇ ಇರುತ್ತದೆ.
ಯಾರದೋ ಪ್ರಬಂಧಕ್ಕೆ, ಇನ್ಯಾರದೋ ಭಾಷಣಕ್ಕೆ, ಮತ್ತಿನ್ಯಾರದೋ ಭಾವಾವೇಶಭರಿತ ಜನಪ್ರಿಯ ಸ್ವರೂಪದ ವಾಕ್ ವಾಹಕ್ಕೆ ಈ ಟೀಕಾತ್ಮಕ ಹೇಳಿಕೆಯ ಧ್ವನಿ ಪುನರಾವರ್ತಿತವಾಗುತ್ತಲೇ ಇರುತ್ತದೆ. ಆಡಳಿತ ಮತ್ತು ವಿರೋಧ ಪಕ್ಷಗಳವರು ಈ ಹೇಳಿಕೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಆ ಕ್ಷಣದ ಲಾಭ ಪಡೆದುಕೊಳ್ಳುವ ತಾತ್ಪೂರ್ತಿಕ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಲೇ ಇರುತ್ತಾರೆ.
ಟಿಆರ್ಪಿ ಎಂಬ ಮಹಾಮಾಯೆಯ ಹಿಡಿತಕ್ಕೊಳಗಾದ ಸುದ್ದಿಮಾಧ್ಯಮಗಳೂ ಇವುಗಳನ್ನೇ ವೈಭವೀಕರಿಸುತ್ತವೆ.ಯೋಜನೆಗಳ ಕಟ್ಟುನಿಟ್ಟಿನ ಅನುಷ್ಠಾನ ಮತ್ತು ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಸರ್ಕಾರಿ ವ್ಯವಸ್ಥೆಯ ಪುನರುತ್ಥಾನದ ಕುರಿತ ಪರಿಹಾರೋಪಾಯದ ತಾರ್ಕಿಕ ಸಂವಾದ ನಡೆದರೂ ಅದು ಸಂಪೂರ್ಣವಾಗಿ ಆಡಳಿತಾತ್ಮಕ ಪ್ರಾಯೋಗಿಕತೆಯಲ್ಲಿ ಪ್ರತಿಫಲಿತವಾಗದೇ ಉಳಿದುಬಿಟ್ಟಿದೆ.
ಬರೀ ಚರ್ಚೆ, ಸಮಾಲೋಚನೆ, ಚಿಂತನೆಗಳು, ಪ್ರಯತ್ನಗಳು ಬಿಡಿಬಿಡಿಯಾಗಿ ನಡೆದವೇ ಹೊರತು ನಿರೀಕ್ಷಿತ ಆಡಳಿತಾತ್ಮಕ ಪ್ರಯೋಗಶೀಲತೆ ಸಮಗ್ರವಾಗಿ ವ್ಯಕ್ತವಾಗಲಿಲ್ಲ. ಇಂಥದ್ದೊಂದು ಕೊರಗಿನೊಂದಿಗೇ ಹೊಸ ಪೀಳಿಗೆ ಬದುಕಬೇಕಾಗಿಲ್ಲ ಎಂಬುದನ್ನು ‘ಹಾದಿಗಲ್ಲು’ ಸ್ಪಷ್ಟಪಡಿಸುತ್ತದೆ. ಆಡಳಿತಾತ್ಮಕ ಪ್ರಯೋಗಶೀಲತೆ ಯಾವ ಯಾವ ರೀತಿಯಲ್ಲಿ ಅಳವಡಿಸಲ್ಪಡಬಹುದು ಎಂಬ ದಾರಿಗಳನ್ನು ಕಾಣಿಸುತ್ತದೆ.
ಆಡಳಿತದ ವಿವಿಧ ಹುದ್ದೆಗಳ ವಿವಿಧ ಹಂತಗಳ ಕಾರ್ಯನಿರ್ವಹಣೆಯು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಹೇಗೆ ಪುನರ್ಸ್ವರೂಪ ಪಡೆದುಕೊಳ್ಳಬಹುದು ಎಂಬ ಹೊಳಹುಗಳನ್ನು ಹೊಳೆಸುತ್ತದೆ. ‘ಅಧಿಕಾರ’ ಮತ್ತು ‘ಅಧಿಕಾರಿ’ ಈ ಎರಡೂ ಪದಗಳ ಕುರಿತು ಬೇರೂರಿಬಿಟ್ಟಿರುವ ಹತಾಶೆ, ಅಸಮಾಧಾನ ಮತ್ತು ಆಕ್ರೋಶದ ಭಾವಗಳೆಲ್ಲವನ್ನೂ ಇಲ್ಲವಾಗಿಸಿ ಅವುಗಳ ಸ್ಥಾನಗಳಲ್ಲಿ ಆಶಾವಾದ, ಆತ್ಮಸಂತೃಪ್ತಿ ಮತ್ತು ಹೊಂಗನಸುಗಳ ಮಹತ್ವಾಕಾಂಕ್ಷೀ ಮನೋಬಲವನ್ನು ನೆಲೆಗೊಳಿಸಿಕೊಳ್ಳಲು ಈ ಕೃತಿಯು ಪ್ರೇರಣೆ ನೀಡುತ್ತದೆ.
ಐಎಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ಜನರಲ್ಲಿ ತಪ್ಪುಕಲ್ಪನೆಯೊಂದಿದೆ. ಎಲ್ಲರೂ ಹೀಗೆ ಯೋಚಿಸುವುದಿಲ್ಲವಾದರೂ ಇದು ಇಡೀ ಸಾಮುದಾಯಿಕ ದೃಷ್ಟಿಕೋನದ ಮೇಲೆಯೇ ಪ್ರಭಾವ ಬೀರುತ್ತದೆ. ಅದೇನೆಂದರೆ, ಅಷ್ಟೆಲ್ಲಾ ಕಷ್ಟಪಟ್ಟು ಓದಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಅಧಿಕಾರಿಗಳಾಗಿ ನೇಮಕಗೊಂಡು ಏನನ್ನೂ ಓದಿಕೊಳ್ಳದ, ವಿಚಿತ್ರ ಧೋರಣೆಗಳೊಂದಿಗಿನ ಮಂತ್ರಿಗಳು, ರಾಜಕಾರಣಿಗಳ ಮುಂದೆ ಕೈಕಟ್ಟಿ ನಿಲ್ಲಬೇಕಾಗುತ್ತದೆ, ಅಂಥದ್ದೊಂದು ವಿಚಿತ್ರ ಸ್ಥಿತಿ ಎದುರಿಸಿ ಸ್ವಾಭಿಮಾನ ಬಲಿಕೊಡಬಾರದು ಎನ್ನುವ ಅವಸರದ ಧಾಟಿಯ ಮಾತುಗಳು ಕೇಳಿಬರುತ್ತವೆ.
ಇಂಥ ಅವಸರವಾದಿ ದೃಷ್ಟಿಕೋನಗಳನ್ನು ‘ಹಾದಿಗಲ್ಲು’ ಅಲ್ಲಗಳೆಯುತ್ತದೆ. ಐಎಎಸ್, ಕೆಎಎಸ್ ಅಧಿಕಾರಿ ಹುದ್ದೆಗಳು ಪ್ರತಿಷ್ಠಿತ ಮಂತ್ರಿಮಹೋದಯರ ಗುಲಾಮಗಿರಿಯ ಸಂಕೇತಗಳಲ್ಲ ಎಂಬುದನ್ನು ಅಧಿಕೃತವಾಗಿ ದೃಢಪಡಿಸುತ್ತದೆ. ವ್ಯಕ್ತಿಗತ ವೃತ್ತಿಬದ್ಧತೆ, ಬದಲಾವಣೆಗೆ ತುಡಿಯುವ ಅಂತರ್ಗತ ಶಕ್ತಿ, ಸದ್ಯದ ಕಾಲದ ಸವಾಲುಗಳಿಗೆ ಎದುರುಗೊಂಡು ಹೊಸತಾದ ಮುನ್ನಡೆ ಸಾಧಿಸುವ ಸೌಜನ್ಯಯುತ ಛಲವೊಂದಿದ್ದರೆ ಈ ಹುದ್ದೆಗಳ ನಿರ್ವಹಣೆಯು ಆತ್ಮತೃಪ್ತಿಯನ್ನು ತಂದುಕೊಡುತ್ತದೆ ಎಂಬುದನ್ನು ದಯಾನಂದ ಅವರು ಸ್ವಾನುಭವದ ನಿದರ್ಶನಗಳ ಮೂಲಕ ಸಾಬೀತುಪಡಿಸಿದ್ದಾರೆ.
ತಾವು ವಿವಿಧ ಇಲಾಖೆಗಳ ನೇತೃತ್ವ ವಹಿಸಿದಾಗಲೆಲ್ಲಾ ನಿಯಮಾವಳಿಗಳಿಗೆ ಅನುಗುಣವಾಗಿ ಅನುಷ್ಟಾನಕ್ಕೆ ತಂದ ಯೋಚನೆ, ಯೋಜನೆಗಳು, ನೊಂದವರಿಗೆ ನ್ಯಾಯ ದೊರಕಿಸಿಕೊಟ್ಟ ತತ್ಕ್ಷಣದ ಕ್ರಮಗಳು, ಇಲಾಖೆಗಳಿಗೆ ಆಧುನಿಕ ತಾಂತ್ರಿಕಸ್ಪರ್ಶ ನೀಡಿದ ಕ್ರಾಂತಿಕಾರಿ ಹೆಜ್ಜೆಗಳು, ಎಲ್ಲಕ್ಕಿಂತ ಹೆಚ್ಚಾಗಿ ಉನ್ನತಾಧಿಕಾರಿ ಹುದ್ದೆಯ ವೃತ್ತಿಪರ ಮೌಲ್ಯವನ್ನು ವಿಸ್ತರಿಸಿದ ಅನೇಕ ಅನುಭವಗಳ ಆಪ್ತ ಉಲ್ಲೇಖವು ಇಡೀ ಕೃತಿಯನ್ನು ಬದಲಾವಣೆಯ ಮಹೋನ್ನತ ಸಾಧ್ಯತೆಗಳನ್ನು ಕಂಡರಿಸುವ ಪ್ರಾಯೋಗಿಕ ಜ್ಞಾನಸಂಪನ್ಮೂಲವನ್ನಾಗಿಸಿದೆ.
ಈ ಕೃತಿಯು ಕೇವಲ ಆಡಳಿತಾತ್ಮಕ ಹುದ್ದೆ ನಿರ್ವಹಣೆಯ ಸ್ವಾನುಭವ ವಿವರಗಳ ಸಂಕಲನವಷ್ಟೇ ಅಲ್ಲ. ಈಗಾಗಲೇ ಬಾಳಿಹೋದ ನಮ್ಮ ಹಿರಿಯ ತಲೆಮಾರುಗಳು ಹಾದುಬಂದ ಒಡಲಬೇಗೆಯನ್ನು ಅಕ್ಷರಗಳಲ್ಲಿ ಹಿಡಿದಿಡುವ ಸೃಜನಶೀಲ ಆಕೃತಿಯನ್ನಾಗಿಯೂ ಇದನ್ನು ಗ್ರಹಿಸಬಹುದು. ಸಾಮಾಜಿಕ ಏಣಿ-ಶ್ರೇಣಿ ವ್ಯವಸ್ಥೆಯೊಳಗೆ ಯಾತನೆ ಅನುಭವಿಸುತ್ತಾ ಬದಲಾವಣೆಯ ಹೊಂಗನಸುಗಳಿಂದ ದೂರ ಉಳಿದು ಅಭಿವೃದ್ಧಿಯ ಮುಖ್ಯವಾಹಿನಿ ಸೇರಿಕೊಳ್ಳುವ ಕನಸುಗಳಿಲ್ಲದೇ ಬದುಕುವ ಅನಿವಾರ್ಯತೆಯ ಗತದ ಕಾಲವನ್ನು ದಯಾನಂದ ಅವರು ಕಾಣಿಸುವ ಪರಿ ಅನನ್ಯ.
ಜಡಗೊಂಡ ಸಾಮಾಜಿಕ ವ್ಯವಸ್ಥೆಯಲ್ಲಿ ಪಲ್ಲಟಗಳನ್ನು ನೆಲೆಗೊಳಿಸುವ ಹೆಜ್ಜೆಗಳ ವಿವರಗಳನ್ನು ಸೌಜನ್ಯದ ಧಾಟಿಯಲ್ಲಿ ಮುಂದಿಡುತ್ತಲೇ ಸಾಂಸ್ಕೃತಿಕ ಪ್ರಜ್ಞೆಯನ್ನು ಕಟ್ಟಿಕೊಳ್ಳಲು ಬೇಕಾದ ಒಳನೋಟಗಳು ಅವರ ಬರಹಕ್ಕೆ ಜೀವಂತಿಕೆಯನ್ನು ತಂದುಕೊಟ್ಟಿವೆ. ಅವರೊಳಗಿನ ಅಪ್ಪಟ ಸಾಹಿತ್ಯಕ ವಿಮರ್ಶಕನನ್ನು ಈ ಕೃತಿ ಪರಿಚಯಿಸಿದೆ.
ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಡಿ.ವಿ.ಜಿ ಅವರಂಥ ಪ್ರತಿಭೆಗಳನ್ನು ದಯಾನಂದ್ ವರ್ತಮಾನದಲ್ಲಿ ನಿಂತು ಗ್ರಹಿಸುವ ಬಗೆ ನಮ್ಮನ್ನು ಚಿಂತನೆಗೆ ಹಚ್ಚುತ್ತದೆ. ಕೆಲವು ಸಿನಿಮಾಗಳ ಪ್ರಸ್ತಾಪದ ಮೂಲಕ ಮೌಲ್ಯಪರ ಆಲೋಚನಾಕ್ರಮಗಳ ವೈಶಿಷ್ಟ್ಯತೆಯನ್ನು ಮನಗಾಣಿಸುತ್ತಾರೆ. ಅಧ್ಯಾಯಗಳಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಕೇವಲ ನೆನಪುಗಳ ಯಾನದ ಸಹಭಾಗೀ ಯಾತ್ರಿಕರು ಮಾತ್ರವಲ್ಲ.
ನನಗೆ ತುಂಬಾ ಇಷ್ಟವಾದ ಪಾತ್ರವ್ಯಕ್ತಿತ್ವಗಳೆಂದರೆ ದಯಾನಂದ ಅವರ ತಂದೆ, ತಾಯಿ ಮತ್ತು ಹುಚ್ಚಮ್ಮತ್ತೆ. ಅಪ್ಪನನ್ನು ಅವರು ಆಧ್ಯಾತ್ಮ ಜೀವಿ ಎಂದು ಗುರುತಿಸುತ್ತಾರೆ. ತಾಯಿಯು ಅವರ ದೃಷ್ಟಿಯಲ್ಲಿ ಆರ್ಥಿಕ ತಜ್ಞೆ. ಹುಚ್ಚಮ್ಮ ಅವರ ತಂದೆಯ ತಂಗಿ. ಅವರ ಮನೆದೇವರ ಹೆಸರನ್ನೇ ಅಜ್ಜ ತನ್ನ ಅತ್ತೆಗೆ ಇಟ್ಟದ್ದನ್ನು ನೆನಪಿಸಿಕೊಳ್ಳುತ್ತಲೇ ತಮ್ಮ ಪಾಲಿನ ನಿಜದ ದೇವರಾಗಿ ಪ್ರಭಾವಿಸಿದ್ದನ್ನು ಪ್ರಸ್ತಾಪಿಸಿದ ಬರಹವು ಜನರ ನೋವಿಗೆ ಸ್ಪಂದಿಸುವ ವ್ಯಕ್ತಿತ್ವ ರೂಪಿಸಿಕೊಳ್ಳಲು ಹುಚ್ಚಮ್ಮತ್ತೆಯೇ ಪ್ರೇರಣೆಯಾಗಿರುವ ದಿವ್ಯತೆಗೆ ಕನ್ನಡಿ ಹಿಡಿಯುತ್ತದೆ.
‘ಚರ್ಮವನ್ನೇ ಚಪ್ಪಲಿಯಾಗಿಸಿಕೊಂಡ ಅಪ್ಪ’ ಶೀರ್ಷಿಕೆಯ ಬರಹವು ಆ ಕಾಲದ ಆರ್ಥಿಕ ದುಃಸ್ಥಿತಿಯ ಸಾಮಾಜಿಕ ರೂಪವನ್ನು ಅನಾವರಣಗೊಳಿಸುತ್ತದೆ. ಇದನ್ನು ಓದುವಾಗ ಮತ್ತೆ ಮತ್ತೆ ನೆನಪಿಗೆ ಬಂದದ್ದು ಪುನೀತ್ ರಾಜಕುಮಾರ್ ಬಾಲನಟರಾಗಿ ಅಭಿನಯಿಸಿದ ‘ಬೆಟ್ಟದ ಹೂವು’ ಸಿನಿಮಾ. ಅಮ್ಮನ ದುಃಖ ದುಮ್ಮಾನಗಳ ನಡುವೆ ಓದುವ ಕನಸನ್ನು ಜೀವಂತವಾಗಿರಿಸಿಕೊಂಡ ಹುಡುಗ ಕುವೆಂಪು ಅವರ ಕೃತಿಯನ್ನು ಕೊಂಡುಕೊಳ್ಳಲು ದುಡ್ಡು ಹೊಂದಿಸಿಕೊಳ್ಳಲು ಹೆಣಗಾಡುತ್ತಾನೆ.
ಕೊನೆಗೆ ದುಡಿಮೆಯ ದುಡ್ಡನ್ನು ಹೇಗೋ ಹೊಂದಿಸಿಕೊಂಡು ಆ ಕೃತಿಯನ್ನು ಕೊಂಡುಕೊಳ್ಳಬೇಕು ಎನ್ನುವಷ್ಟರಲ್ಲಿ ಚಳಿಗಾಲದ ಚಳಿಯಿಂದ ರಕ್ಷಿಸಿಕೊಳ್ಳಲು ಕಂಬಳಿಯ ಅಗತ್ಯ ಮನಗಂಡು ಕೃತಿಯನ್ನು ಓದುವ ಕನಸನ್ನು ಬಿಟ್ಟುಕೊಡುತ್ತಾನೆ. ಬಡತನವು ಎಳೆಯರ ಮನಸುಗಳ ಒಡಲಾಳದ ಕನಸುಗಳ ಬಲಿ ಕೇಳುವ ವೈರುಧ್ಯವನ್ನು ಎನ್.ಲಕ್ಷ್ಮೀನಾರಾಯಣ ಅವರು ಮನಮುಟ್ಟುವಂತೆ ಸಿನಿಮಾದಲ್ಲಿ ಬಿಂಬಿಸಿದ್ದರು.
ದಯಾನಂದ ಅವರು ಈ ಬರಹದ ಮೂಲಕ ಆತ್ಮಕಥನಕ್ಕೆ ಕಾವ್ಯಾತ್ಮಕ ಪ್ರತಿಮೆಯ ಆಯಾಮವನ್ನು ಒದಗಿಸಿಕೊಟ್ಟಿದ್ದಾರೆ. ಇದನ್ನು ಶೀರ್ಷಿಕೆಯೇ ಧ್ವನಿಸುತ್ತದೆ. ಮತ್ತೊಂದು ಅಧ್ಯಾಯದಲ್ಲಿ ಇದೇ ಬರಹದ ಧ್ವನಿ ದಾರ್ಶನಿಕ ಪ್ರತಿಪಾದನೆಯ ಎತ್ತರ ಪಡೆದುಕೊಳ್ಳುತ್ತದೆ. ಆಡಿ-ಕೂಡಿ ಬಾಳುವ ನಮ್ಮತನವು ಬಡತನದ ನಿವಾರಣೆಗಾಗಿಯೋ, ಸಂಪತ್ತಿನ ಆಸೆಗಾಗಿಯೋ ಬಲಿಯಾಗುತ್ತಿರುವುದಂತೂ ಕಟು ಸತ್ಯ ಎಂಬ ಅವರ ವ್ಯಾಖ್ಯಾನವು ವರ್ತಮಾನದ ಬದುಕನ್ನು ವಿಭಿನ್ನವಾಗಿ ಅರ್ಥೈಸಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಪುರಾಣ ಮತ್ತು ಇತಿಹಾಸದ ಕುರಿತ ಹೊಸದಾದ ವಿಚಾರ ಲಹರಿಯನ್ನೊಳಗೊಂಡ ಬರಹಗಳು ನಮ್ಮನ್ನು ಹೊಸ ರೀತಿಯಲ್ಲಿ ಆಲೋಚಿಸುವಂತೆ ನೆರವಾಗುತ್ತವೆ. ಪುರಾಣಗಳ ಕಾಲ್ಪನಿಕತೆಯೊಳಗೇ ಇರುವ ವಾಸ್ತವವಾದಿ ನೆಲೆಗಳನ್ನು ಶೋಧಿಸುತ್ತವೆ. ಇಲ್ಲದ ಇತಿಹಾಸವನ್ನು ಸೃಷ್ಟಿಸುವ ವರ್ತಮಾನದ ವಿಚಿತ್ರ ಜಾಯಮಾನವನ್ನು ನಿರಾಕರಿಸಿ ಇಸಿಹಾಸವನ್ನು ನೋಡುವ ಬಗೆ ಹೇಗೆಂಬುದನ್ನು ತಿಳಿಸಿಕೊಡುತ್ತವೆ.
ಸಾಮಾಜಿಕ ಸ್ಥಿತ್ಯಂತರಗಳು ಮತ್ತು ಅವುಗಳಿಗೆ ಅನುಗುಣವಾಗಿ ಆಡಳಿತಾತ್ಮಕ ಮಾದರಿಗಳನ್ನು ಮರುರೂಪಿಸಿದ ಪ್ರಯೋಗಶೀಲತೆಯ ಸಾಧ್ಯತೆಯನ್ನು ಈ ಕೃತಿ ಅಂತಃಕರಣದ ಭಾಷೆಯಲ್ಲಿ ಚಿತ್ರಿಸಿದೆ. ಇಡೀ ಕೃತಿಯು ಹಿರಿಯ ಮತ್ತು ಕಿರಿಯ ಅಧಿಕಾರಿಗಳಿಗೆ ಆಡಳಿತಾತ್ಮಕ ಮಾದರಿಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮಾರ್ಗದರ್ಶಿಯೂ ಹೌದು. ಕೇವಲ ಅಧಿಕಾರಿಗಳಿಗೆ ಮಾತ್ರವಲ್ಲ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಇದನ್ನೊಮ್ಮೆ ಓದಲೇಬೇಕು.
ಅಧಿಕಾರಿಗಳಾಗಿ ಸಾಧನೆಗೈಯ್ಯುವ ಕನಸುಳ್ಳ ಯುವ ಪೀಳಿಗೆ ಈ ಕೃತಿಯ ಪುಟಗಳೊಂದಿಗೆ ಸಂವಾದಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ತಮ್ಮದೇ ಪ್ರತಿಷ್ಠೆಯ ಗುಂಗಿನಲ್ಲೇ ರಾಜಕಾರಣದ ಮಹತ್ವಪೂರ್ಣ ಅವಧಿಯನ್ನು ಕಳೆಯುವ ಜನಪ್ರತಿನಿಧಿಗಳು ಅತ್ಯಂತ ಶ್ರದ್ಧೆಯಿಂದ ಓದಿಕೊಳ್ಳಬೇಕು. ಮಂತ್ರಿಗಳೆನ್ನಿಸಿಕೊಂಡವರು ‘ತಮ್ಮ ಬಿಡುವಿಲ್ಲದ ಕಾರ್ಯದೊತ್ತಡಗಳ!?’ ಮಧ್ಯೆ ಈ ಕೃತಿಗಾಗಿಯೇ ಸಮಯ ಮೀಸಲಿರಿಸಿ ದೂರದರ್ಶಿತ್ವದ ಗುಣದ ಪಾಠವನ್ನು ಕಲಿತುಕೊಳ್ಳಬೇಕು.
ಈ ಕೃತಿ ಇಂಗ್ಲಿಷ್ಗೆ ಅನುವಾದಿತಗೊಂಡು ರಾಷ್ಟ್ರ ದ ವಿವಿಧ ರಾಜ್ಯಗಳವರೂ ಓದುವಂತಾಗಬೇಕು. ಸಾಮಾಜಿಕ ಬದಲಾವಣೆಯ ಕನಸು ಸಂಪೂರ್ಣವಾಗಿ ಈಡೇರುವುದಕ್ಕೆ ಇಡೀ ಆಡಳಿತಾತ್ಮಕ ವ್ಯವಸ್ಥೆಯನ್ನು ಸಿದ್ಧಗೊಳಿಸುವುದಕ್ಕೆ ಈ ಓದು ಸಹಾಯಕವಾಗಬೇಕು. ಹಾಗಾದಾಗ ಮಾತ್ರ ಇಡೀ ಸರ್ಕಾರೀ ಆಡಳಿತ ವ್ಯವಸ್ಥೆಯೊಳಗೆ ಸಮಗ್ರ ಬದಲಾವಣೆ ತರಲು ಪೂರಕವಾಗುವಂಥ ಪಬ್ಲಿಕ್ ರಿಲೇಷನ್ಸ್ ಎಂಬ ಪ್ರತ್ಯೇಕ ಸ್ವಾಯತ್ತ ಸಂಸ್ಥೆ ಸ್ಥಾಪಿತವಾಗಬಹುದು.
ಅಂಥ ಸಂಸ್ಥೆಯ ಮುಂಚೂಣಿ ನಾಯಕರಾಗಿ ಕೆ.ಎ.ದಯಾನಂದ ಅವರಂಥ ಅಧಿಕಾರಿಗಳೇ ಕಂಗೊಳಿಸಬಹುದು. ಜನರನ್ನು ನಲುಗಿಸುತ್ತಿರುವ ಎಲ್ಲ ಬಗೆಯ ಸಂಕಟಗಳಿಂದ ಪಾರುಮಾಡುವ ಸರ್ವೋದಯದ ಸಾಧ್ಯತೆಗಳು ಸರ್ಕಾರಿ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಕಾಣಿಸಿಕೊಳ್ಳಬಹುದು. ಜನಕಲ್ಯಾಣದ ಆದರ್ಶ ರಾಷ್ಟ್ರವಾಗಿ ಭಾರತ ರೂಪುಗೊಂಡು ಜಗತ್ತನ್ನು ಸೆಳೆಯಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



