ಲೈಫ್ ಸ್ಟೈಲ್
ಇದು ಔಷಧೀಯ ಗುಣವುಳ್ಳ ಸದಾಪುಷ್ಪ..!
- ಆಶಾ ಸಿದ್ದಲಿಂಗಯ್ಯ
ಸದಾಪುಷ್ಪವು ಒಂದು ಔಷಧೀಯ ಗುಣವುಳ್ಳ ಸಸ್ಯವಾಗಿದೆ. ಗುಲಾಬಿ ಮಿಶ್ರಿತ ಕೆಂಪು, ಬಿಳಿ ಮುಂತಾದ ಬಣ್ಣಗಳಲ್ಲಿ ಈ ಸಸ್ಯವು ಕಾಣಸಿಗುತ್ತದೆ. ಎಲ್ಲಾ ಋತುವಿನಲ್ಲಿಯೂ ಹೂಬಿಡುವ ಕಾರಣ ಇದನ್ನು ಸದಾಪುಷ್ಪ ಅಥವಾ ನಿತ್ಯಪುಷ್ಪ ಎಂದು ಕರೆಯುತ್ತಾರೆ.
ಈ ಗಿಡಮೂಲಿಕೆ ನಮ್ಮ ದೇಶದ್ದಲ್ಲ. ಮೆಡಗಾಸ್ಕರ್ ಇದರ ತವರೂರು ಉದ್ಯಾನವನಗಳಲ್ಲಿ ಅಲಂಕಾರ ಪುಷ್ಪವಾಗಿ ಬೆಳೆಸಲು ತಂದ ಈ ಪುಟ್ಟಗಿಡ, ಇಡೀ ಭಾರತವನ್ನೇ ವ್ಯಾಪಿಸಿದೆ. ಎಲೆಗಳು ಹಸಿರು ಮತ್ತು ಎದುರು ಬದಿರಾಗಿರುತ್ತವೆ. ಗುಲಾಬಿ ಅಥವಾ ಬಿಳಿ ಬಣ್ಣದ ಹೂ ಬಿಡುತ್ತವೆ. ಮತ್ತೊಂದು ಬಗೆಯಲ್ಲಿ ಬಿಳಿ ಹೂಗಳ ಮಧ್ಯೆ ಗುಲಾಬಿ ಬಣ್ಣವಿರುತ್ತದೆ. ಆದರೆ ಗುಣದಲ್ಲಿ ಎಲ್ಲವೂ ಒಂದೇ ಆಗಿರುತ್ತದೆ. ಇಡೀ ವರ್ಷವೂ ಹೂ ಬಿಡುತ್ತದೆ.
ಕಾಡುಗೊಲ್ಲ ದೇವರ ನೆಚ್ವಿನ ಹೂ, ಮನೆಯ ಮುಂದೆ ಎಲ್ಲಾ ಕಡೆ ಬೆಳೆಯುವ ಈ ಗಿಡದ ಔಷಧೀಯ ಗುಣ ಅಪಾರ..
ಔಷಧೀಯ ಉಪಯೋಗಗಳು
ಎಳೆ ಮಗುವಿನ ಹೊಟ್ಟೆನೋವು ನಿವಾರಣೆಗೆ ಎಲೆಗಳ ರಸವನ್ನು ಉಪಯೋಗಿಸುತ್ತಾರೆ. ರಕ್ತದ ಒತ್ತಡದ ಸಮಸ್ಯೆಯಲ್ಲೂ ಸದಪುಷ್ಪದ ಕ್ಷಾರವನ್ನು ಬಳಸುತ್ತಾರೆ.
ಸಕ್ಕರೆ ಕಾಯಿಲೆಯಲ್ಲಿ
ಈ ಗಿಡದ ನಾಲ್ಕೈದು ಹಸಿರೆಲೆಗಳನ್ನು ತಂದು ಚೆನ್ನಾಗಿ ತೊಳೆದು ಪ್ರತಿನಿತ್ಯ ಬೆಳಗ್ಗೆ ತಿನ್ನುವುದು. ಅಥವಾ ಬರಿಹೊಟ್ಟೆಯಲ್ಲಿ ನಿತ್ಯ ಪುಷ್ಟಿ ಹೂಗಳನ್ನು ಅಗೆದು ತಿನ್ನುವುದು. ನಾಲ್ಕು ಬಿಳೀ ಪುಷ್ಪವನ್ನು ಅರ್ಧ ಬಟ್ಟಲು ನೀರಿಗೆ ಹಾಕಿ ಕಾಯಿಸಿ ಕಾಲು ಬಟ್ಟಲು ಕಷಾಯವನ್ನು ತಣ್ಣಗೆ ಮಾಡಿ ಬೆಳಗ್ಗೆ ಬರೀ ಹೊಟ್ಟೆಯಲ್ಲಿ ಸೇವಿಸುವುದು.
ಅಧಿಕ ರಕ್ತ ಒತ್ತಡದಲ್ಲಿ
ನಿತ್ಯಪುಷ್ಟಿ ಎಲೆಗಳನ್ನು ತಂದು ನೆರಳಿನಲ್ಲಿ ಒಣಗಿಸಿ ಚೂರ್ಣ ಮಾಡಿಕೊಳ್ಳುವುದು. ಒಂದು ಟೀ ಚಮಚ ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ ಕಾಯಿಸಿ ಕಷಾಯ ಮಾಡುವುದು. ತಣ್ಣಗಾದ ಮೇಲೆ 1/8 ಬಟ್ಟಲು ಕಷಾಯವನ್ನು ಸೇವಿಸುವುದು.
ಸುಟ್ಟ ಗಾಯ ಮತ್ತು ಬೊಬ್ಬೆಗಳಿಗೆ
ನಿತ್ಯಪುಷ್ಟಿಯ ಒಂದು ಹಿಡಿ ಹಸಿ ಎಲೆಗಳನ್ನು ತಂದು ಚೆನ್ನಾಗಿ ರಸ ತೆಗೆಯುವುದು. ಈ ರಸದಲ್ಲಿ ಸ್ವಲ್ಪ ಹಸಿ ಅಕ್ಕಿ ಹಿಟ್ಟನ್ನು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಗಾಯದ ಮೇಲೆ ಮಂದವಾಗಿ ಲೇಪಿಸುವುದು.
ಗಾಯಗಳಿಂದ ರಕ್ತಸ್ರಾವ
ಗಾಯ ವಾಸಿಯಾಗಲು ಒಣಗಿದ ನಿತ್ಯಪುಷ್ಟಿ ಎಲೆಯನ್ನು ಗಾಯಗಳ ಮೇಲೆ ಹಾಕುವುದರಿಂದ ಗಾಯಗಳು ವಾಸಿಯಾಗುವವು.
ಸಸ್ಯ ಪರಿಚಯ
ಸದಾಪುಷ್ಪದ ವೈಜ್ಞಾನಿಕ ಹೆಸರು ಕ್ಯಾಥೆರ್ಯಂತಸ್ ರೋಸಿಯಸ್. ಇದು ಎಪೋಸೈನೇಸಿ ಎಂಬ ಕುಲಕ್ಕೆ ಸೇರಿದ ಸಸ್ಯವಾಗಿದೆ. ಇದು ಒಂದು ಬಹುವಾರ್ಷಿಕ ಸಸ್ಯವಾಗಿದೆ.
ಸದಾಪುಷ್ಪದ ಕಾಂಡವು ಮೆದುವಾಗಿರುತ್ತದೆ. ಒಂದು ಮೀಟರ್ನಷ್ಟು ಉದ್ದ ಬೆಳೆಯುತ್ತದೆ. ಈ ಸಸ್ಯದ ಹೂವುಗಳು ಐದು ದಳಗಳನ್ನು ಹೊಂದಿರುತ್ತದೆ. ಎಲೆಗಳು ಲಂಬ ಗೋಲಾಕಾರದಲ್ಲಿ ಇದ್ದು ಚೂಪಾದ ತುದಿಯನ್ನು ಹೂಂದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


