ದಿನದ ಸುದ್ದಿ
ಕುರಿ ಸಾಕಾಣಿಕೆಯಲ್ಲಿ ರೈತರ ಕಷ್ಟಗಳು
- ಆಶಾ ಸಿದ್ದಲಿಂಗಯ್ಯ
ಕುರಿಗಾರರು ತಮ್ಮ ಕುರಿ ಹಿಂಡನ್ನು ಮೇಯಿಸಲು ಸಾಮಾನ್ಯವಾಗಿ ಬೆಟ್ಟ ಗುಡ್ಡ ಪ್ರದೇಶಗಳು, ಕಾಡುಗಳು, ಕೆರೆ ಮೈದಾನಗಳನ್ನು ಅವಲಂಬಿಸಿರುತ್ತಾರೆ. ಬೆಳೆ ಕಟಾವು ಮಾಡಿದ ನಂತರ ಖುಷ್ಕಿ ಜಮೀನುಗಳಲ್ಲಿ ಮೇಯಿಸುವುದು ಬಹಳ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿ.
ಏಕೆಂದರೆ ಇವುಗಳನ್ನು ಕಟ್ಟಿ ಮೇಯಿಸುವುದಾಗಲಿ ಹಟ್ಟಿಗಳಲ್ಲಿ ಕೂಡಿ ಮೇಯಿಸುವುದಾಗಲಿ ಸಾಧ್ಯವಾಗುವುದಿಲ್ಲ. ಮಳೆಗಾಲದಲ್ಲಿ ಅಂದರೆ ಜೂನ್ ತಿಂಗಳಿಂದ ಸೆಪ್ಟೆಂಬರ್ವರೆಗೆ ಬೆಟ್ಟ ಗುಡ್ಡಗಳಲ್ಲಿ ಹಸಿರು ಹುಲ್ಲು ದೊರೆಯುವುದರಿಂದ ನಂತರ ಖುಷ್ಕಿ ಜಮೀನುಗಳಲ್ಲಿ ಪೈರುಗಳ ಉಳಿಕೆಗಳನ್ನು ಹಾಗೂ ಹೀಗೂ ಡಿಸೆಂಬರ್ ತಿಂಗಳವರೆಗೂ ಮೇಯಿಸಲು ಸಾಧ್ಯವಾಗಬಹುದು.
ಕುರಿಗಾರನ ನಿಜವಾದ ಕಷ್ಟದ ದಿನಗಳು ಜನವರಿಯಿಂದ ಪ್ರಾರಂಭವಾಗಿ ಮೇ ತಿಂಗಳವರೆಗೆ ಮುಂದುವರೆದು ಕುರಿಗಳ ಹೊಟ್ಟೆ ತುಂಬಿಸುವುದಕ್ಕಾಗಿ ಪಡಬಾರದ ಕಷ್ಟ ಪಡಬೇಕಾಗುತ್ತದೆ. ಇಂತಹ ದಿನಗಳಲ್ಲೇ ಕುರಿಗಾರರು ತಮ್ಮ ಹಿಂಡಿನೊಂದಿಗೆ ಜಿಲ್ಲೆಯಿಂದ ಜಿಲ್ಲೆಗೆ ವಲಸೆ ಹೋಗುತ್ತಾರೆ.
ಮಾರ್ಗಗಳ ಬದಿಯ ಮೇವಿನ ಮರಗಳ ಟೊಂಗೆಗಳನ್ನು ಕಡಿದು ಹಾಕಿ ಅವುಗಳನ್ನು ಬರಡುಗೊಳೆಸುತ್ತಾರೆ. ಮಲೆನಾಡಿನ ಕಾಡುಗಳಿಗೆ ಲಗ್ಗೆ ಇಡುತ್ತಾರೆ ಇಂತಹ ಸಂದರ್ಭಗಳಲ್ಲೇ ಕುರಿಗಳು ಕುಡಿಯಲು ಸಾಕಷ್ಟು ಮತ್ತು ಯೋಗ್ಯವಾದ ನೀರಿನ ಕೊರತೆಯಿಂದಾಗಿ ಜಂತು ಹುಳುವಿನ ಬಾಧೆ ಮತ್ತು ರೋಗ ರುಜಿನಗಳಿಗೆ ತುತ್ತಾಗುತ್ತವೆ.
ನೂರಾರು ವರ್ಷಗಳಿಂದ ಕುರಿಗಳು ಗೋಮಾಳಗಳಲ್ಲಿ, ಗುಡ್ಡ, ಬೆಟ್ಟ ಮತ್ತು ಅರಣ್ಯ ಪ್ರದೇಶಗಳಲ್ಲಿ ನಿರಂತರವಾಗಿ ಮೇದು ಅವುಗಳಲ್ಲಿ ಉಪಯುಕ್ತವಾದ ಮೇವಿನ ಮರಗಳು, ಹಸಿರು ಹುಲ್ಲಿನ ತಳಿಗಳು ಉಳಿಯದೆ ಭೂಮಿಯು ಬರಡಾಗಿ ಬರೀ ಮುಳ್ಳು ಕಂಟಿಗಳಿಂದಲೂ ಜಾನುವಾರುಗಳಿಗೆ ಉಪಯುಕ್ತವಲ್ಲದ ಸಸ್ಯಗಳಿಂದಲೂ ತುಂಬಿರುವುದಲ್ಲದೆ ಮಣ್ಣಿನ ಕೊರತಕ್ಕೆ ಎಡೆಕೊಟ್ಟು ಭೂಮಿಯ ಸಾರವು ನಿಸ್ಸಾರವಾಗುತ್ತಿದೆ.
ಇದರ ಜೊತೆಗೆ ಮಳೆಯು ಕಡಿಮೆ ಆಗುತ್ತಿದ್ದು, ಹಸಿರು ಹುಲ್ಲಿನ ಮತ್ತು ಗಿಡಮರಗಳ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಇಂತಹ ಪ್ರದೇಶಗಳನ್ನು ಗುರುತಿಸಿ ಅಭಿವೃದ್ಧಿ ಪಡೆಸುವುದು ಸರ್ಕಾರದ ಹಾಗೂ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ.
ಇತ್ತೀಚೆಗೆ ಸರ್ಕಾರ ಹಮ್ಮಿಕೊಂಡಿರುವ ಜಲಾನಯನ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ ಕೆಲವು ಪ್ರದೇಶಗಳು ಅಭಿವೃದ್ಧಿಗೊಂಡಿದ್ದರೂ ಈ ದಿಸೆಯಲ್ಲಿ ಇನ್ನೂ ಬಹಳಷ್ಟು ಕೆಲಸವಾಗಬೇಕಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳು ಸಾಮಾಜಿಕ ಅರಣ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸ್ಥಳಗಳಲ್ಲಿ ಜಾನುವಾರು, ಕುರಿ, ಮೇಕೆಗಳನ್ನು ಮೇಯಿಸುಲು ಬಿಡುವುದಿಲ್ಲ. ಜಾನುವಾರುಗಳನ್ನು ಕಟ್ಟಿ ಮೇಯಿಸಬಹುದಾದರು ಕುರಿಗಳನ್ನು ಅರಣ್ಯಗಳ ಅಂಚು ಪ್ರದೇಶಗಳಲ್ಲಾದರೂ ಮೇಯಿಸಲು ಅವಕಾಶವಿರಬೇಕು.
ತ್ವರಿತವಾಗಿ ಬೆಳೆಯುವ ಮೇವಿನ ಮರಗಳಾದ ಸುಬಾಬುಲ್, ಬ್ರಿಜ ಬಾಬುಲ್, ಬೋರೆ ಮರ, ಗೊಬ್ಬರದ ಗಿಡ, ಗಾಳಿ ಮರ, ಹಾಲವಾಣ, ಕ್ಯಾಲಿಯೊಂಡ್ರ, ಅಗಸೆ, ಸೇವರಿ, ಸರ್ವೆ, ಹೂವರಸೆ, ನುಗ್ಗೆ, ಹೆಬ್ಬೇವು, ಬಳ್ಳಾರಿ ಜಾಲಿ, ಬೆಂಗಾಲ ಜಾಲಿ ಹಾಗೂ ಲಂಟಾನಾ ಮತ್ತು ಹಿಪ್ಪುನೇರಳೆ ಇತ್ಯಾದಿ ಮರಗಳನ್ನು ಹೊಲಗಳ ಬದುಗಳು, ಕೆರೆಕುಂಟೆಗಳ ಅಕ್ಕಪಕ್ಕ ಪಾಳು ಭೂಮಿಯಲ್ಲಿ ಬೆಳೆಯಬೇಕು, ಈ ಮರಗಳಿಂದ ಎಲೆ ಚಿಗುರನ್ನು ತಂದು ಬಾಡಿಸಿ ಕುರಿಗಳಿಗೆ ಕೊಡಬಹುದು.
ಸರ್ಕಾರದವರು ರೈತರ ಜಮೀನುಗಳಲ್ಲಿ ಒಡ್ಡುಗಳನ್ನು ನಿರ್ಮಿಸುತ್ತಿದ್ದು, ಈ ಒಡ್ಡುಗಳ ಮೇಲೆ ಹಾಗೂ ಬದಿಯಲ್ಲಿ ಹುಲ್ಲು ಹಾಗೂ ಮೇವಿನ ಮರಗಳನ್ನು ನೆಡುವುದರಿಂದ ಭೂಮಿಯ ಕೊರೆತ ತಪ್ಪುವುದಲ್ಲದೆ ಭೂಮಿಯ ಸಾರಜನಕದ ಅಂಶ ಸಹ ಹೆಚ್ಚುವುದು. ಆಹಾರ ಧಾನ್ಯಗಳ ಬೆಳೆಗಳನ್ನು ಕಟಾವು ಮಾಡಿದ ನಂತರ ಪರ್ಯಾಯ ಬೆಳೆಯಾಗಿ ಮೇವಿನ ಬೆಳೆಗಳನ್ನು ಬೆಳೆಯಬಹುದು.
ಸರ್ಕಾರವು ಈಗಾಗಲೇ ಹಮ್ಮಿಕೊಂಡಿರುವಂತೆ ಜಲಾನಯನ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ ಸುಧಾರಿಸಿದ ಹುಲ್ಲು ಹಾಗೂ ಮೇವಿನ ಮರಗಿಡಗಳನ್ನು ಬೆಳೆಸುವುದು; ಈ ಮರಗಿಡಗಳಿಂದ ಹಸಿರೆಲೆಗಳನ್ನು ತಂದು ಒಣಗಿಸಿ ಹದ ಮಾಡಿ ಕೂಡಿಟ್ಟು ಕೊಂಡು ಮೇವಾಗಿ ಕೊಡುವುದು; ಹುಲ್ಲುಗಾವಲು ಪುನಶ್ಚೇತನ ಹಾಗೂ ವಿಕಾಸಗೊಳಿಸುವ ಯೋಜನೆ, ವೀವು ತಳಿಗಳ ಬೀಜೋತ್ಪತ್ತಿ ಸಂಸ್ಕರಣೆ ಹಾಗೂ ಬೀಜಾಭಿವೃದ್ಧಿ ಯೋಜನೆ, ಮೇವು ನಿಧಿ, ಪೌಂಡರ್ ಮಿನಿಕಿಟ್ ವಿತರಣೆ ಯೋಜನೆ; ಮೇವು ಮರಗಳ ಸಸಿ ಬೆಳೆಸುವಿಕೆ ಸಂರಕ್ಷಣೆ ಹಾಗೂ ವಿತರಣೆ ಯೋಜನೆಗಳನ್ನು ಕ್ರಿಯಾತ್ಮಕಗೊಳಿಸುವುದು.
ಪ್ರಚಲಿತ ವ್ಯವಸ್ಥೆಯಲ್ಲಿ ಹೆಚ್ಚುವರಿ ಕುರಿಗಳನ್ನು ರೈತರು ಸ್ಥಳಕ್ಕೆ ಬಂದು ಕೊಂಡುಕೊಳ್ಳುವ ಕಟುಕ ವ್ಯಾಪಾರಸ್ಥರಿಗೆ ಮಾರುತ್ತಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಕೊಂಡ ಕಟುಕರು ಗ್ರಾಮಸ್ಥರ ಮಾಂಸದ ಬೇಡಿಕೆಯನುಸಾರ ಅಲ್ಲಿಯೇ ಕಟಾವು ಮಾಡಬಹುದು. ಹತ್ತಿರದ ಪಟ್ಟಣಗಳಿಗೆ ಸಾಗಿಸಬಹುದು ಅಥವಾ ಗುತ್ತಿಗೆದಾರರು ದಲ್ಲಾಳಿಗಳಿಗೆ ಮಾರಲೂಬಹುದು.
ಗ್ರಾಹಕರ ಮಧ್ಯೆ 3-4 ದಲ್ಲಾಳಿಗಳಿರುತ್ತಾರೆ. ಕುರಿಗಳ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಸಹ ಕುರಿ ಮತ್ತು ಆಡುಗಳ ಸಂಘಟಿತ, ಸುವ್ಯವಸ್ಥಿತ ಮಾರುಕಟ್ಟೆ ಇಲ್ಲ. ಈ ಪದ್ಧತಿಯಲ್ಲಿ ಉತ್ಪತ್ತಿದಾರರಿಗೂ ಲಾಭವಿಲ್ಲ ಮತ್ತು ಉಪಯೋಗಿಸುವ ಗ್ರಾಹಕರಿಗೆ ಉತ್ತಮ ಮಾಂಸ ಸರಿಯಾದ ಬೆಲೆಗೆ ದೊರಕುತ್ತಿಲ್ಲ. ಹೆಚ್ಚು ಲಾಭಾಂಶ ಮಧ್ಯವರ್ತಿ ದಲ್ಲಾಳಿಗಳಿಗೆ ದಕ್ಕುತ್ತದೆ.
ಕುರಿಗಳನ್ನು ವೈಜ್ಞಾನಿಕವಾಗಿ ತೂಕದ ಮಾಂಸದ ಇಳುವರಿ ಆಧಾರಿತವಲ್ಲದ ಬರೀ ಮೇಲ್ನೋಟದ ಶರೀರ ಪ್ರಮಾಣದ ಕಣ್ಣಳತೆಯ ಮೇಲೆ ಕೊಳ್ಳಲಾಗುತ್ತದೆ. ಮಧ್ಯವರ್ತಿಗಳ ಹಿಡಿತದಿಂದ ಕುರಿ ಮತ್ತು ಆಡುಗಳ ಉತ್ಪಾದಕನನ್ನು ಮುಕ್ತಗೊಳಿಸಿ ಅವರಿಗೆ ನ್ಯಾಯವಾದ ಬೆಲೆ ದಕ್ಕುವಂತೆ ಮಾಡಬೇಕಾದರೆ ಸುವ್ಯವಸ್ಥಿತ ಮಾರುಕಟ್ಟೆಯನ್ನು ಕುರಿ ಉತ್ಪಾದಕರ ಸಂಘಗಳ ಮೂಲಕ ಏರ್ಪಾಡು ಮಾಡಬೇಕಾದ ಅಗತ್ಯವಿದೆ.
ಕುರಿ ಸಾಕಾಣಿಕೆ ಗ್ರಾಮೀಣ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಸಹಕಾರಿ
ಕುರಿ ಮತ್ತು ಕುರಿ ಉತ್ಪನ್ನಗಳು ರಾಜ್ಯದ ಆರ್ಥಿಕ ವಹಿವಾಟಿನಲ್ಲಿ ಬಹುಮುಖ್ಯ ಸ್ಥಾನವನ್ನು ಪಡೆದಿದ್ದು, ರಾಜ್ಯದ ವರಮಾನಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಕುರಿಗಳ ಮಾಂಸವು ಉತ್ತಮ ಗುಣಮಟ್ಟದಾಗಿದ್ದು, ದೇಶದ ಬಹು ದೊಡ್ಡ ಮಾಂಸಹಾರಿ ವರ್ಗದ ಆಹಾರದ ಮುಖ್ಯ ಅಂಶವಾಗಿದ್ದು, ಅಪೌಷ್ಟಿಕತೆಯನ್ನು ನಿವಾರಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಿದೆ. ಈ ಉಣ್ಣೆಯನ್ನು ಕಂಬಳಿ, ರತ್ನಗಂಬಳಿ, ಉಣ್ಣೆ ಶಾಲು, ಡ್ರಗೇಟ್ ಟೋಪಿ ಮುಂತಾದ ಉಣ್ಣೆ ವಸ್ತುಗಳನ್ನು ತಯಾರಿಸಲು ಬಳಸಲಾಗುತ್ತದೆ.
ಕುರಿಗಳನ್ನು ಚಲಿಸುವ ಬ್ಯಾಂಕುಗಳೆಂದು ಅಥವಾ ನಿಧಿಯೆಂದು ಕರೆಯಲಾಗುತ್ತದೆ. ಏಕೆಂದರೆ, ರೈತ ಬೇಕೆಂದಾಗ ಕುರಿಗಳನ್ನು ಮಾರಿ ತಕ್ಷಣ ಹಣ ಪಡೆಯಬಹುದು. ಆದರೆ ವ್ಯವಸಾಯದಿಂದಾಗಲಿ ಅಥವಾ ತೋಟಗಾರಿಕೆಯಿಂದಾಗಲಿ ಈ ರೇತಿ ದಿಢೀರನೆ ಹಣ ಗಳಿಸಲಾಗುವುದಿಲ್ಲ.
ನಿರುದ್ಯೋಗ ನಿವಾರಣೆ ಹಾಗೂ ರೈತರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮ ಪಡಿಸಲು ಕೈಗೊಂಡ ಕಾರ್ಯಕ್ರಮಗಳಲ್ಲಿ ಕುರಿ ಘಟಕ ಸ್ಥಾಪನೆಯೂ ಸಹ ಒಂದು ಇದಕ್ಕೆ ಮುಖ್ಯ ಕಾರಣವೆಂದರೆ ಕಡಿಮೆ ಬಂಡವಾಳವನ್ನು ಬಳಸಿಕೊಂಡು ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸಲು ಮತ್ತು ಲಾಭವನ್ನು ಪಡೆಯಲು ಸಹಾಯವಾಗುವುದು.
ಇದರಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಜನಾಂಗಗಳಲ್ಲೂ ಲಾಭದಾಯಕ ಕುರಿ ಸಾಕಾಣಿಕೆಯ ಮುಖಾಂತರ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು 20 ಕುರಿ ಮತ್ತು ಒಂದು ಟಗರಿನ ಘಟಕ ಹಮ್ಮಿಕೊಳ್ಳಲು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳ ಮುಖಾಂತರ ಸಾಲದ ವ್ಯವಸ್ಥೆಯನ್ನು ಸಹ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಮತ್ತು ಕ್ಷೇತ್ರಾಭಿವೃದ್ಧಿ ಅಧಿಕಾರಿಗಳ ಮೂಲಕ ಮಾಡಲಾಗಿದೆ.
ರಾಜ್ಯ ಸರ್ಕಾರವು ಕುರಿ ಅಭಿವೃದ್ಧಿಗಾಗಿ ಕರ್ನಾಟಕ ಕುರಿ ಮತ್ತು ಕುರಿ ಉತ್ಪನ್ನಗಳ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿರುವ ಆರು ಅಂಶಗಳ ಕಾರ್ಯಕ್ರಮಗಳಲ್ಲಿ ಒಂದಾದ ಕುರಿ ಸಾಕಾಣಿಕೆದಾರರ ಸಹಕಾರ ಸಂಘಗಳ ಸ್ಥಾಪನೆ ಯೋಜನೆಗೆ ಮಂಜೂರಾತಿ ನೀಡಿದೆ ಅದರಂತೆ ಸದರಿ ಕುರಿ ಸಾಕಾಣಿಕೆದಾರರ ಸಹಕಾರ ಸಂಘಗಳನ್ನು ಸ್ಥಾಪಿಸಲು ಸೂಕ್ತ ಕ್ರಮಗಳನ್ನು ಕೈಗೊಳಲು ಆಯಾ ಜಿಲ್ಲೆಗಳ ಸಹಕಾರ ಸಂಘಗಳ ಇಲಾಖೆಯ ಉಪ ನಿಬಂಧಕರಿಗೆ ಹಾಗೂ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರುಗಳನ್ನು ಕೋರಲಾಗಿದೆ.
ಈ ಸಂಘಗಳ ಮುಖ್ಯ ಉದ್ದೇಶ ಕುರಿ ಉಣ್ಣೆಯ ಮಾರುಕಟ್ಟೆಯನ್ನು ವ್ಯವಸ್ಥಿತಗೊಳಿಸುವುದು, ಕುರಿಗಾರರಿಗೆ ತಾಂತ್ರಿಕತೆ ಹಾಗೂ ಆರ್ಥಿಕ ಸವಲತ್ತುಗಳನ್ನು ಒದಗಿಸುವುದು, ಯಾಂತ್ರೀಕೃತ ಉಣ್ಣೆ ಕಟಾವು ಸೌಲಭ್ಯಗಳನ್ನು ಕಲ್ಪಿಸುವುದು.
ರೈತ ನಷ್ಟ ಅನುಭವಿಸಿದಾಗ ಕೈ ಹಿಡಿಯುವುದು ಕುರಿ ಸಾಕಾಣಿಕೆ ಆದರಿಂದ ಸರಕಾರ ಕುರಿ ಸಾಕಾಣಿಕೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ19 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ15 hours agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

