ದಿನದ ಸುದ್ದಿ
ಗೋ ಹತ್ಯೆ ಅಲ್ಲ, ಪ್ರಜಾತಂತ್ರದ ಹತ್ಯೆ ನಿಷೇಧಿಸಬೇಕಿದೆ
- ನಾ ದಿವಾಕರ
2020 ಪ್ರಜಾಸತ್ತಾತ್ಮಕ ಭಾರತದ ಪಾಲಿಗೆ ಕರಾಳ ವರ್ಷ. ಕೋವಿದ್ 19ರ ಭೀಕರ ಪರಿಣಾಮಗಳು ನೈಸರ್ಗಿಕ. ಇದರಿಂದ ಉಂಟಾದ ಲಕ್ಷಾಂತರ ಸಾವುಗಳು, ಅಸಂಖ್ಯಾತ ಜನರ ಸಂಕಷ್ಟಗಳು ಮತ್ತು ಶೋಷಿತ ಜನಸಮುದಾಯಗಳ ಬವಣೆ ಆಡಳಿತ ವ್ಯವಸ್ಥೆಯ ಕೊಡುಗೆ. 130 ಕೋಟಿ ಜನಸಂಖ್ಯೆ ಇರುವ ಬೃಹತ್ ದೇಶದಲ್ಲಿ ಒಂದು ಸಾಂಕ್ರಾಮಿಕ ಪಿಡುಗಿಗೆ 1 ಲಕ್ಷ 41 ಜನರ ಸಾವು ಆಡಳಿತ ವ್ಯವಸ್ಥೆಯನ್ನು ಅಷ್ಟಾಗಿ ಭಾವಿಸುವುದಿಲ್ಲ.
ಆ ಮಟ್ಟಿಗೆ ಭಾರತೀಯ ಪ್ರಭುತ್ವದ ಸಂವೇದನೆ ಜಡ್ಡುಗಟ್ಟಿದೆ. ಏಕೆಂದರೆ 1995ರ ನಂತರದ 25 ವರ್ಷಗಳಲ್ಲಿ 3 ಲಕ್ಷ 50 ಸಾವಿರ ರೈತರು ಸಾಲದ ಹೊರೆಯಿಂದ, ಬೆಳೆ ವೈಫಲ್ಯದಿಂದ, ಇತರ ಕೃಷಿ ಸಂಬಂಧಿತ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾರತದ ಪ್ರಭುತ್ವದ ದೃಷ್ಟಿಯಲ್ಲಿ ಕೋವಿದ್ನಿಂದ ಉಂಟಾಗುವ ಸಾವುಗಳಿಗೂ, ರೈತರ ಆತ್ಮಹತ್ಯೆಗಳಿಗೂ ವ್ಯತ್ಯಾಸವೇನೂ ಇರುವುದಿಲ್ಲ. ಆ ಮಟ್ಟಿಗೆ ಭಾರತದ ಆಡಳಿತ ವ್ಯವಸ್ಥೆ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ.
ನೈಸರ್ಗಿಕ ಕೋವಿದ್ ಮತ್ತು ಸಾಂದರ್ಭಿಕ ಕೃಷಿ ಬಿಕ್ಕಟ್ಟು-ರೈತರ ಆತ್ಮಹತ್ಯೆಗಳನ್ನು ಬದಿಗಿಟ್ಟು ನೋಡಿದರೂ 2020 ಭಾರತದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆಡಳಿತ ವ್ಯವಸ್ಥೆಗೆ ಕರಾಳ ವರ್ಷವೇ ಆಗಿದೆ. ಕಾಶ್ಮೀರದ ದಿಗ್ಬಂಧನ ಮತ್ತು ಕಾಶ್ಮೀರದ ಜನತೆಯ ಗೃಹಬಂಧನದ ಉನ್ಮಾದದ ನಡುವೆಯೇ ಕೇಂದ್ರ ಸರ್ಕಾರ ಭಾರತೀಯ ಪ್ರಜೆಗಳ ಪೌರತ್ವವನ್ನೇ ಪ್ರಶ್ನಿಸುವ ಕಾಯ್ದೆಯೊಂದನ್ನು ಜಾರಿಗೊಳಿಸಿದ್ದು ಕಳೆದ ವರ್ಷ ಡಿಸೆಂಬರ್ 11ರಂದು. ದೇಶದಲ್ಲಿ ಲಕ್ಷಾಂತರ ಸಂಖ್ಯೆಯ ಅಕ್ರಮ ವಲಸಿಗರು ಬಾಂಗ್ಲಾದೇಶ, ಪಾಕಿಸ್ತಾನದಿಂದ ಬಂದು ನೆಲೆಸಿದ್ದಾರೆ ಇವರೆಲ್ಲರನ್ನೂ ಉಚ್ಚಾಟಿಸುವ “ ಸ್ವಚ್ಚ ಭಾರತ ಅಭಿಯಾನಕ್ಕೆ ” ಚಾಲನೆ ದೊರೆತಿದ್ದು ಈ ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದಲ್ಲಿ ಬಹಳ ವರ್ಷಗಳಿಂದ ನೆಲೆಸಿರುವ ಹಿಂದೂಗಳಿಗೆ ಭಾರತದ ಪೌರತ್ವವನ್ನು ನೀಡುವುದು ಮತ್ತು ಭಾರತದಲ್ಲಿ ಬಹಳ ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವ ಈ ದೇಶದ ಮುಸ್ಲಿಮರನ್ನು ಅವರ ದೇಶಗಳಿಗೆ ರವಾನಿಸುವುದು ಎನ್ಆರ್ಸಿ, ಎನ್ಪಿಆರ್ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲ ಉದ್ದೇಶವಾಗಿತ್ತು. ಈ ಮಸೂದೆಗಳನ್ನು ಸಂಸತ್ತಿನಲ್ಲಿ ಯಾವುದೇ ಚರ್ಚೆ ಇಲ್ಲದೆ ಅನುಮೋದಿಸಿದ ಮಾದರಿಯೇ ಪ್ರಜಾತಂತ್ರದ ಕಗ್ಗೊಲೆಯ ಸೂಚನೆಗಳಾಗಿದ್ದವು.
ದೇಶಾದ್ಯಂತ ಭುಗಿಲೆದ್ದ ಸಿಎಎ ವಿರೋಧಿ ಆಂದೋಲನ ಕೇಂದ್ರ ಸರ್ಕಾರದ ದುಸ್ಸಾಹಸಕ್ಕೆ ತಕ್ಕ ಪ್ರತಿರೋಧವಾಗಿ ರೂಪುಗೊಂಡಿತ್ತು. ಈ ಆಂದೋಲನವನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಪಕ್ಷ ಬಳಸಿದ ವಾಮ ಮಾರ್ಗಗಳು ದೆಹಲಿಯ ಕೋಮು ಗಲಭೆಗಳಲ್ಲಿ ವ್ಯಕ್ತವಾಗಿದ್ದವು. ಜನರನ್ನು ಗುಂಡಿಟ್ಟು ಕೊಲ್ಲಿ ಎಂದು ಮುಕ್ತವಾಗಿ ರಸ್ತೆಯಲ್ಲೇ ಕೂಗಿ ಹೇಳುವ ವ್ಯಕ್ತಿಯನ್ನು ಬಂಧಿಸಲೂ ಸಾಧ್ಯವಾಗದ ಸರ್ಕಾರಕ್ಕೆ ಬಿಲ್ಕಿಸ್ ಬಾನು ಎನ್ನುವ 80ರ ವೃದ್ಧೆಯಲ್ಲಿ ಭಯೋತ್ಪಾದಕತೆಯ ಛಾಯೆ ಕಂಡುಬಂದಿದ್ದು ಆಡಳಿತ ವ್ಯವಸ್ಥೆಯ ಕ್ರೌರ್ಯದ ಸಂಕೇತವಾಗಿತ್ತು.
ಇದು ಭಾರತದಲ್ಲಿ ಪ್ರಜಾತಂತ್ರದ ಕಗ್ಗೊಲೆಯ ಆರಂಭದ ಹೆಜ್ಜೆಗಳು ಎಂದು ಅರ್ಥವಾಗುವ ಹೊತ್ತಿಗೆ ಕೋವಿದ್ 19 ಅಪ್ಪಳಿಸಿತ್ತು. ಕೋವಿದ್ ಒಂದು ಮಾರಣಾಂತಿಕ ಪಿಡುಗು, ಲಕ್ಷಾಂತರ ಜನರ ಬದುಕನ್ನೇ ಕಸಿದುಕೊಳ್ಳುವ ಒಂದು ಸಾಂಕ್ರಾಮಿಕ. ವಿಶ್ವದಾದ್ಯಂತ ಈ ಪಿಡುಗಿನಿಂದ ಉಂಟಾಗಿರುವ ಸಾಮಾಜಿಕ ಮತ್ತು ಆರ್ಥಿಕ ವ್ಯತ್ಯಯಗಳು ದುಡಿಯುವ ವರ್ಗಗಳನ್ನು ಮಾತ್ರವೇ ಅಲ್ಲದೆ ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗಗಳನ್ನೂ ಕಂಗಾಲಾಗಿಸಿವೆ.
ಕೋವಿದ್ ನಿಯಂತ್ರಿಸುವ ನಿಟ್ಟಿನಲ್ಲಿ ಯಾವುದೇ ಒಂದು ನಿರ್ದಿಷ್ಟ ಕಾನೂನನ್ನು ರೂಪಿಸದೆ ಲಕ್ಷಾಂತರ ಮಂದಿಯ ಸಂಕಷ್ಟಕ್ಕೆ ಕಾರಣವಾಗಿರುವುದು ಭಾರತ ಸರ್ಕಾರದ ಪ್ರಜಾತಂತ್ರ ವಿರೋಧಿ ಧೋರಣೆಗೆ ಮತ್ತೊಂದು ನಿದರ್ಶನ. ಬಹುಪಾಲು ರಾಷ್ಟ್ರಗಳಲ್ಲಿ ಕೋವಿದ್ ನಿಯಂತ್ರಿಸುವ ಉದ್ದೇಶದಿಂದಲೇ ಹೊಸ ಕಾಯ್ದೆಗಳನ್ನು ಜಾರಿ ಮಾಡಲಾಗಿದ್ದು ಭಾರತ ಇದಕ್ಕೆ ಹೊರತಾಗಿದೆ.
ಆದರೆ ಭಾರತದಲ್ಲಿ ಕೇಂದ್ರ ಸರ್ಕಾರ ಹಠಾತ್ತನೆ ವಿಧಿಸಿದ ಲಾಕ್ ಡೌನ್ ನಿಂದ ಉಂಟಾದ ದುಷ್ಪರಿಣಾಮಗಳನ್ನು ಮತ್ತಾವ ದೇಶದಲ್ಲೂ ಕಾಣಲಾಗುವುದಿಲ್ಲ. ಜಗತ್ತಿನ ಅತಿ ದೊಡ್ಡ ಪ್ರಜಾತಂತ್ರದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಪಟ್ಟ ಬವಣೆ, ಅನುಭವಿಸಿದ ಸಾವು ನೋವು ಮತ್ತು ಸಾವಿರಾರು ಕಿಲೋಮೀಟರ್ ಕಾಲ್ನಡಿಗೆಯ ಮೂಲಕ ತಮ್ಮ ಸ್ವಂತ ಊರುಗಳನ್ನು ಸೇರಿಕೊಳ್ಳಲು ಯತ್ನಿಸಿದ ದಾರುಣ ಸನ್ನಿವೇಶ ಈ ದೇಶದ ಆಡಳಿತ ವ್ಯವಸ್ಥೆಯ ಕ್ರೌರ್ಯದ ಮತ್ತೊಂದು ಮುಖವನ್ನು ಪರಿಚಯಿಸಿತ್ತು. ಬಿಸಿಲಿನ ಝಳ, ಕೊರೋನಾ ವೈರಾಣುವಿನ ಸೊಂಕು, ಆರೋಗ್ಯ ಸೇವೆಯ ಕೊರತೆ, ಸಾರಿಗೆ ವ್ಯವಸ್ಥೆಯ ಕೊರತೆ, ಹಸಿವಿನ ಬಳಲಿಕೆ ಮತ್ತು ಕೇಂದ್ರ ಹಾಗೂ ಸರ್ಕಾರಗಳ ನಿರ್ಲಕ್ಷ್ಯ ಸಾವಿರಾರು ವಲಸೆ ಕಾರ್ಮಿಕರನ್ನು ಬೀದಿಪಾಲು ಮಾಡಿತ್ತು.
ಈ ದುರವಸ್ಥೆಯ ನಡುವೆಯೇ ನೂರಾರು ವಲಸೆ ಕಾರ್ಮಿಕರು ರಸ್ತೆಗಳಲ್ಲಿ, ಚಲಿಸುವ ರೈಲುಗಳಲ್ಲಿ ಮೃತಪಟ್ಟಿದ್ದರು. ದುರಂತ ಎಂದರೆ ದೇಶದಲ್ಲಿ ಲಕ್ಷಾಂತರ ಅಕ್ರಮ ವಲಸಿಗರು ಇರುವ ಮಾಹಿತಿ ಇದೆ ಎಂದು ಹೇಳುತ್ತಿದ್ದ ಕೇಂದ್ರ ಸರ್ಕಾರಕ್ಕೆ ಯಾವ ರಾಜ್ಯದಲ್ಲಿ ಎಷ್ಟು ವಲಸೆ ಕಾರ್ಮಿಕರಿದ್ದಾರೆ ಎನ್ನುವ ಕನಿಷ್ಟ ಮಾಹಿತಿಯನ್ನೂ ಒದಗಿಸಲಾಗಲಿಲ್ಲ. ಲಾಕ್ಡೌನ್ ವಿಧಿಸಿದ 15 ದಿನಗಳ ನಂತರ ಒಮ್ಮೆಲೆ ಹರಿದುಬಂದ ಲಕ್ಷಾಂತರ ವಲಸೆ ಕಾರ್ಮಿಕರ ದಂಡು ಎಲ್ಲ ರಾಜ್ಯಗಳ ಆಡಳಿತ ವ್ಯವಸ್ಥೆಯನ್ನು ಕಂಗೆಡಿಸಿದ್ದನ್ನು ಕಂಡಿದ್ದೇವೆ.
ಈ ಪರಿಸ್ಥಿತಿಯನ್ನು ನಿವಾರಿಸುವಲ್ಲಿ ಸರ್ಕಾರಗಳು ಯಶಸ್ವಿಯಾದರೂ ಆ ವೇಳೆಗಾಗಲೇ ನೂರಾರು ಕಾರ್ಮಿಕರು ಅಸು ನೀಗಿದ್ದರು. ಸಾವಿರಾರು ಕುಟುಂಬಗಳು ತಮ್ಮ ನೆಲೆ ಕಳೆದುಕೊಂಡಿದ್ದವು. ದುರಂತ ಎಂದರೆ ಈ ಅವ್ಯವಸ್ಥೆಯಲ್ಲಿ ಮಡಿದ ವಲಸೆ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಯಾವುದೇ ಪರಿಹಾರವನ್ನೂ ಘೋಷಿಸಲಾಗಿಲ್ಲ. ಇದು ಪ್ರಭುತ್ವದ ಕ್ರೌರ್ಯದ ಮತ್ತೊಂದು ನಿದರ್ಶನ.
ಈ ದುರಂತಗಳ ನಡುವೆಯೇ, ದೇಶದ ಅಸಂಖ್ಯಾತ ಜನತೆ ತಮ್ಮ ನಾಳಿನ ಚಿಂತೆಯಲ್ಲಿ ಕಾಲ ಕಳೆಯುತ್ತಿರುವ ಸಂದರ್ಭದಲ್ಲೇ, ದುಡಿಯುವ ವರ್ಗಗಳ, ಶ್ರಮಜೀವಿಗಳ ಬದುಕಿಗೆ ಭರವಸೆ ನೀಡುವ ಕ್ರಮಗಳನ್ನು ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಕಾನೂನುಗಳನ್ನು ರೂಪಿಸಲು ಮುಂದಾಗಿತ್ತು.
ಒಂದು ವರ್ಷದ ಕಾಲ ತುಟ್ಟಿ ಭತ್ಯೆಯನ್ನು ತಡೆಹಿಡಿಯುವುದು, ಕಾರ್ಖಾನೆಗಳಲ್ಲಿ ದುಡಿಯುವ ಅವಧಿಯನ್ನು ಹೆಚ್ಚಿಸುವುದು, ಕಾರ್ಮಿಕರ ಸಂಘಟನೆಯ ಹಕ್ಕುಗಳನ್ನು ಕಸಿದುಕೊಳ್ಳುವುದು ಮತ್ತು ಕಾರ್ಖಾನೆಗಳ ಮಾಲಿಕರಿಗೆ ಕಡಿಮೆ ವೇತನ ನೀಡಲು ಅಧಿಕಾರ ನೀಡುವುದು ಹೀಗೆ ಹಲವು ಕಾರ್ಮಿಕ ವಿರೋಧಿ ನಿಯಮಗಳನ್ನು ಕೋವಿದ್ 19 ಉಲ್ಬಣಿಸುತ್ತಿದ್ದ ಸಂದರ್ಭದಲ್ಲೇ ಜಾರಿಗೊಳಿಸಿದ ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗಳನ್ನು ರಕ್ಷಿಸಲೆಂದೇ ದಶಕಗಳ ಹೋರಾಟದ ಪರಿಣಾಮವಾಗಿ ರೂಪಿಸಲಾಗಿದ್ದ 44 ಕಾರ್ಮಿಕ ಕಾಯ್ದೆಗಳನ್ನು ಕೇವಲ ನಾಲ್ಕು ಸಂಹಿತೆಗಳಲ್ಲಿ ಅಡಕಿಸುವ ಮೂಲಕ ಕಾರ್ಮಿಕರ ಎಲ್ಲ ಹಕ್ಕುಗಳನ್ನೂ ಕಸಿದುಕೊಳ್ಳುವ ಹೊಸ ಮಸೂದೆಯನ್ನು ಜಾರಿಗೊಳಿಸಿತ್ತು.
ಉಪವಾಸ, ಹಸಿವು, ಬಡತನ, ದಾರಿದ್ರ್ಯ, ಅನಾರೋಗ್ಯ ಮತ್ತೊ ಕೋವಿದ್ನಂತಹ ಮಾರಣಾಂತಿಕ ಪಿಡುಗು ಇಷ್ಟೆಲ್ಲಾ ಗಂಭೀರ ಸಮಸ್ಯೆಗಳ ನಡುವೆ ದೇಶದ ಶ್ರಮಜೀವಿಗಳ ಕತ್ತುಹಿಸುಕುವ ಈ ಕಾಯ್ದೆಗಳನ್ನು ಜಾರಿಗೊಳಿಸಲು ಯತ್ನಿಸುವುದು ಕ್ರೌರ್ಯದ ಪರಮಾವಧಿಯಲ್ಲವೇ ?
ಕೋವಿದ್ 19 ಸಂದರ್ಭದಲ್ಲಿ ಜನಸಂದಣಿಯಾಗದಂತೆ ನಿರ್ಬಂಧಗಳನ್ನು ವಿಧಿಸಿ, ಸಾರ್ವಜನಿಕ ಪ್ರತಿಭಟನೆಗಳಲ್ಲಿ ಸೇರಬಹುದಾದ ಜನರ ಸಂಖ್ಯೆಗೆ ನಿರ್ಬಂಧ ವಿಧಿಸಿ, ಜನವಿರೋಧಿ ಕಾನೂನುಗಳನ್ನು, ತಿದ್ದುಪಡಿ ಮಸೂದೆಗಳನ್ನು ಸಂಸತ್ತಿನಲ್ಲಿ ಚರ್ಚಿಸದೆಯೇ , ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸುವುದು ಪ್ರಜಾತಂತ್ರದ ಕಗ್ಗೊಲೆ ಅಲ್ಲವೇ ? ಈ ಸಂದರ್ಭದಲ್ಲೇ ಕೇಂದ್ರ ಸರ್ಕಾರ ದೇಶದ ಕೃಷಿ ವ್ಯವಸ್ಥೆಯ ಮೂಲ ಸ್ವರೂಪವನ್ನೇ ವಿರೂಪಗೊಳಿಸುವ ಮೂರು ಕೃಷಿ ಮಸೂದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿದೆ.
ಶಾಸನ ಸಭೆಗಳಲ್ಲಿ ಸ್ಪಷ್ಟ ಬಹುಮತ ಇರುವ ಒಂದು ಸರ್ಕಾರ ತನ್ನ ಸಂಖ್ಯಾಬಲವನ್ನೇ ಅಸ್ತ್ರದಂತೆ ಬಳಸಿ ರೈತರ ಪಾಲಿಗೆ ಮಾರಣಾಂತಿಕ ಎನ್ನಬಹುದಾದ ಮೂರು ಮಸೂದೆಗಳನ್ನು ಜಾರಿಗೊಳಿಸಿದೆ. ಇಂದು ದೆಹಲಿಯಲ್ಲಿ ಮುಷ್ಕರ ಹೂಡಿರುವ ಲಕ್ಷಾಂತರ ರೈತರ ಒಕ್ಕೊರಲ ದನಿ ಈ ಕ್ರೌರ್ಯದ ವಿರುದ್ಧ ಪ್ರತಿಧ್ವನಿಸುತ್ತಿದೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಮಸ್ತ ದೇಶದ ಜನತೆ ಸರ್ಕಾರದ ಆಡಳಿತ ನೀತಿಯನ್ನು, ಕಾರ್ಯನೀತಿಗಳನ್ನು ಮತ್ತು ಶಾಸನಗಳನ್ನು ವಿರೋಧಿಸುವಾಗ ಆಡಳಿತಾರೂಢ ಪಕ್ಷಕ್ಕೆ, ಜನರ ಬಳಿ ಕುಳಿತು ಮಾತನಾಡುವ ಕನಿಷ್ಟ ಮಾನವೀಯ ಪ್ರಜ್ಞೆ ಇರಬೇಕಾಗುತ್ತದೆ. ನರೇಂದ್ರ ಮೋದಿ ಸರ್ಕಾರ ದೆಹಲಿಯ ಗಡಿಯಲ್ಲಿ, ತೀವ್ರವಾದ ಚಳಿಯಲ್ಲಿ ನೆರೆದ ಲಕ್ಷಾಂತರ ರೈತರೊಡನೆ ಮಾತನಾಡುವ ಬದಲು ಜಲಫಿರಂಗಿಗಳ ಮೂಲಕ, ಅಶ್ರುವಾಯು ಮೂಲಕ, ಪೊಲೀಸರ ಲಾಠಿಯ ಮೂಲಕ ಸ್ಪಂದಿಸಿರುವುದು ಪ್ರಭುತ್ವದ ಕ್ರೌರ್ಯದ ಮತ್ತೊಂದು ನಿದರ್ಶನ.
ಹೋರಾಟಗಾರರ ಸಮಸ್ಯೆಗಳನ್ನು ಆಲಿಸುವ ವಿವೇಚನೆ, ವಿವೇಕ ಮತ್ತು ವ್ಯವಧಾನವನ್ನು ಸಂಪೂರ್ಣ ಕಳೆದುಕೊಂಡಿರುವ ಒಂದು ಆಡಳಿತ ವ್ಯವಸ್ಥೆ ಮುಷ್ಕರ ನಿರತ ರೈತರಲ್ಲಿ ದಲ್ಲಾಳಿಗಳನ್ನು, ಖಲಿಸ್ತಾನಿಗಳನ್ನು, ಪಾಕಿಸ್ತಾನಿಯರನ್ನು, ನಗರ ನಕ್ಸಲರನ್ನು, ಭಯೋತ್ಪಾದಕರನ್ನು ಗುರುತಿಸಲು ಯತ್ನಿಸುವುದು ಪ್ರಜಾತಂತ್ರ ವ್ಯವಸ್ಥೆಗೆ ಅವಮಾನ ಮಾಡಿದಂತಾಗುತ್ತದೆ.
ಇಂದು ದೆಹಲಿಯಲ್ಲಿ ಈ ಕ್ರೌರ್ಯವನ್ನು ಕಾಣುತ್ತಿದ್ದೇವೆ. ತಮ್ಮ ಸಮಸ್ಯೆಗಳ ನಿವಾರಣೆಗಾಗಿ ದೇಶದ ರಾಜಧಾನಿಯಲ್ಲಿ ಬೀಡುಬಿಟ್ಟಿರುವ ಲಕ್ಷಾಂತರ ರೈತರನ್ನು ದೇಶದ್ರೋಹಿಗಳಂತೆ ಕಾಣುವ ಒಂದು ನಿರ್ದಯಿ ಸರ್ಕಾರವನ್ನು ನಾವೇ ಆಯ್ಕೆ ಮಾಡಿರುವುದು ಶತಮಾನದ ದುರಂತ. ಲಾಕ್ ಡೌನ್ ಸಂದರ್ಭದಲ್ಲಿ ಮಡಿದ ವಲಸೆ ಕಾರ್ಮಿಕರು, ಇಂದು ದೆಹಲಿಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿರುವ ರೈತರು, ಹಸಿವಿನಿಂದ ಸಾಯುತ್ತಿರುವ ಅಸಂಖ್ಯಾತ ಬಡಜನತೆ ಇವರೆಲ್ಲರೂ ಆಳುವ ವರ್ಗಗಳ ದೃಷ್ಟಿಯಲ್ಲಿ ನಿಕೃಷ್ಟರಾಗಿ ಕಾಣುತ್ತಿದ್ದಾರೆ.
ದೆಹಲಿಯ ನೀತಿಗಳನ್ನೇ ಯಥಾವತ್ತಾಗಿ ಅನುಸರಿಸುವ ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಸ್ವಂತ ವಿವೇಚನೆಯನ್ನೂ ಕಳೆದುಕೊಂಡು, ವಿಧಾನಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ಭೂ ಸ್ವಾಧೀನ ಮಸೂದೆಯನ್ನು ಅಂಗೀಕರಿಸುತ್ತದೆ.
ರಾಜ್ಯ ರಾಜಧಾನಿಯಲ್ಲಿ ಭೂ ಸ್ವಾಧೀನ ಕಾಯ್ದೆಯ ವಿರುದ್ಧ, ನೂತನ ಕೃಷಿ ನೀತಿಯ ವಿರುದ್ಧ ಹೋರಾಡುತ್ತಿರುವ ರೈತಾಪಿ ಮತ್ತು ಕಾರ್ಮಿಕರೊಡನೆ ಮಾತುಕತೆ ನಡೆಸುವ ಸೌಜನ್ಯವನ್ನೂ ಕಳೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರ ಈ ಗೊಂದಲದ ನಡುವೆಯೇ ಗೋ ಹತ್ಯೆ ನಿಷೇಧ ಕಾಯ್ದೆಯನ್ನೂ ಅಂಗೀಕರಿಸುತ್ತದೆ.
ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುವ ಪ್ರತಿಯೊಂದು ದನಿಯನ್ನೂ “ ಭೌಗೋಳಿಕ ದೇಶ ಮತ್ತು ಕಾಲ್ಪನಿಕ ಪ್ರೇಮ ”ದ ಚೌಕಟ್ಟಿನಲ್ಲಿರಿಸಿ ದೇಶದ್ರೋಹದ ಪಟ್ಟ ಕಟ್ಟುವ ಒಂದು ಪರಂಪರೆಯನ್ನು ನರೇಂದ್ರ ಮೋದಿ ಸರ್ಕಾರ ಅನುಸರಿಸುತ್ತಿದೆ. ಯುಎಪಿಎ ಎನ್ನುವ ಕರಾಳ ಶಾಸನ, ಎನ್ಐಎ ಎನ್ನುವ ಒಂದು ದಮನಕಾರಿ ಸಂಸ್ಥೆಯ ಮೂಲಕ ಪ್ರಜಾತಂತ್ರದ ದನಿಗಳನ್ನು ವ್ಯವಸ್ಥಿತವಾಗಿ ದಮನಿಸುವ ಒಂದು ಪರಂಪರೆಗೂ ಸುಭದ್ರ ಬುನಾದಿ ಹಾಕಲಾಗಿದೆ.
ದೆಹಲಿಯಲ್ಲಿ ನೂತನ ಸಂಸತ್ ಭವನದ ಶಂಕುಸ್ಥಾಪನೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ, ಇದು ಭವಿಷ್ಯ ಭಾರತದ, ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಸಾಕ್ಷೀಭೂತವಾಗುವ ಒಂದು ಸ್ಥಾವರ ಎಂದು ಹೇಳಿರುವುದು ಆಕರ್ಷಣೀಯವಾಗಿ ಕಾಣುತ್ತದೆ.
ಆದರೆ ಈ ಆತ್ಮನಿರ್ಭರ ಭಾರತದಲ್ಲಿ ಈ ದೇಶದ ಬಹುಮುಖಿ ಸಂಸ್ಕøತಿ, ಬಹುತ್ವದ ನೆಲೆಗಳು, ಪ್ರಜಾತಂತ್ರದ ಮೌಲ್ಯಗಳು ಮತ್ತು ಸಾಂವಿಧಾನಿಕ ತತ್ವಗಳು ಸಮಾಧಿಯಾಗುತ್ತಿರುವುದನ್ನು ಗಮನಿಸಿದಾಗ, ನೂತನ ಸಂಸತ್ ಭವನದಲ್ಲಿ ಪ್ರಜಾತಂತ್ರದ ಛಾಯೆ ಸುಳಿಯಲು ಸಾಧ್ಯವೇ ಎಂದು ಅನುಮಾನವಾಗುತ್ತದೆ. ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ , ತುರ್ತುಪರಿಸ್ಥಿತಿಯ ಸಂದರ್ಭದಲ್ಲೂ ಸಹ, ಭಾರತದ ಆಳುವ ವರ್ಗ ಈ ಮಟ್ಟಿಗೆ ಕ್ರೌರ್ಯ ಪ್ರದರ್ಶಿಸಿರಲಿಲ್ಲ.
ಈ ಕ್ರೌರ್ಯಕ್ಕೆ ಬಲಿಯಾಗುತ್ತಿರುವುದು ಕೇವಲ ಸಾಂವಿಧಾನಿಕ ಪ್ರಜಾತಂತ್ರ ಮೌಲ್ಯಗಳನ್ನು ಎತ್ತಿಹಿಡಿಯುವ ವಿವೇಕಯುತ ದನಿಗಳು ಮಾತ್ರವೇ ಅಲ್ಲ. ಭಾರತದ ನ್ಯಾಯಿಕ ವ್ಯವಸ್ಥೆಯೇ ಬಲಿಯಾಗುತ್ತಿದೆ. ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿರುವ ಸಾರ್ವಭೌಮ ಪ್ರಜೆಗಳ ದನಿಗಳು ಆಡಳಿತ ವ್ಯವಸ್ಥೆಯ ಕ್ರೌರ್ಯದ ನಡುವೆ ಕಳೆದುಹೋಗುತ್ತಿವೆ.
ಬಹುತ್ವ ಮತ್ತು ಪ್ರಜಾತಂತ್ರ ಈ ದೇಶದ ಅಂತರಾತ್ಮ. ಈ ಅಂತರಾತ್ಮವನ್ನೇ ಹೊಸಕಿಹಾಕುತ್ತಿರುವ ಸಂದರ್ಭದಲ್ಲಿ ಭಾರತದ ಪ್ರಜೆಗಳು ತಮ್ಮ ಆತ್ಮನಿರ್ಭರತೆಯನ್ನು ಗುರುತಿಸಲು ಹೆಣಗಾಡುತ್ತಿದ್ದಾರೆ. ಇದರ ಒಂದು ಪ್ರಾತ್ಯಕ್ಷಿಕೆಯನ್ನು ರೈತ ಕಾರ್ಮಿಕರ ಹೋರಾಟದ ದನಿಗಳಲ್ಲಿ ಗುರುತಿಸಬಹುದು.
ಸರ್ಕಾರಗಳು ಗೋ ಹತ್ಯೆಯನ್ನು, ಅಂತರ್ಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಜ್ಜಾಗುತ್ತಿವೆ. ಸಂವಿಧಾನದ ತತ್ವಗಳಲ್ಲಿ, ಮೌಲ್ಯಗಳಲ್ಲಿ ವಿಶ್ವಾಸ ಇರುವ ಸ್ವತಂತ್ರ ಭಾರತದ ಸಾರ್ವಭೌಮ ಪ್ರಜೆಗಳು ಪ್ರಜಾತಂತ್ರ ಮೌಲ್ಯಗಳ ಹತ್ಯೆಯನ್ನು ನಿಷೇಧಿಸಲು ಸಜ್ಜಾಗಬೇಕಿದೆ. ಇಂದು ಎದ್ದು ನಿಲ್ಲದಿದ್ದರೆ ಬಹುಶಃ ಎಂದಿಗೂ ಎದ್ದು ನಿಲ್ಲಲಾಗುವುದಿಲ್ಲ ಈ ಪ್ರಜ್ಞೆ ಭಾರತದ ನಾಗರಿಕ ಪ್ರಜೆಗಳಲ್ಲಿದ್ದರೆ ಬಹುಶಃ ಪ್ರಜಾತಂತ್ರ ಉಳಿಯುತ್ತದೆ. ನೂತನ ಸಂಸತ್ ಭವನದಲ್ಲಿ ಪ್ರಜಾತಂತ್ರದ ಸುಳಿವು ಕಾಣಲು ಸಾಧ್ಯವಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

