Connect with us

ಬಹಿರಂಗ

ನಮ್ಮ ನಡುವಿನ ಮನು ನಮ್ಮೊಳಗಿನ ಸ್ಮೃತಿ

Published

on

ಈ ಲೇಖನ ಬೇರೊಂದು ಸಂದರ್ಭದಲ್ಲಿ ಬರೆದದ್ದು, ಎರಡು ತಿಂಗಳ ಹಿಂದೆ, ಇವತ್ತಿನ ಸಂದರ್ಭಕ್ಕೂ ಅನ್ವಯಿಸುತ್ತದೆ. ಹಾಗಾಗಿ ಮತ್ತೊಮ್ಮೆ ಓದುಗರ ಮುಂದೆ.

  • ನಾ ದಿವಾಕರ

ಭಾರತ ಮತ್ತೊಮ್ಮೆ ವಿಕೃತಿಯೆಡೆಗೆ ಹೊರಳುತ್ತಿರುವಂತಿದೆ. ಮನುಕುಲದ ಅಸ್ತಿತ್ವವನ್ನೇ ಇಲ್ಲವಾಗಿಸುವ ಯುದ್ಧಗಳನ್ನು ಪ್ರೀತಿಯಿಂದ ಅಪ್ಪಿಕೊಳ್ಳುವ ಮನಸುಗಳು ಹೆಚ್ಚಾಗುತ್ತಿವೆ. ಮತ್ತೊಂದೆಡೆ ಮಾನವ ಸಮಾಜದಲ್ಲಿ ಸಹಜೀವನವನ್ನು ಗಟ್ಟಿಗೊಳಿಸುವ ಪ್ರೀತಿ ಪ್ರೇಮ ಬಾಂಧವ್ಯಗಳನ್ನು ಯುದ್ಧ ಎಂದು ಬಣ್ಣಿಸಲಾಗುತ್ತಿದೆ.

ಪ್ರೀತಿ ಎನ್ನುವುದು ಒಂದು ರೀತಿಯಲ್ಲಿ ಯುದ್ಧವೇ ಸರಿ ಆದರೆ ಜೀವಕಂಟಕ ಯುದ್ಧವಲ್ಲ, ಎರಡು ಜೀವಗಳನ್ನು ಬೆಸೆಯುವ ಯುದ್ಧ. ಎರಡು ಹೃದಯ ಸಾಮ್ರಾಜ್ಯಗಳ ನಡುವೆ ನಡೆಯುವ ಯುದ್ಧದಲ್ಲಿ ಅಂತಿಮವಾಗಿ ಗೆಲ್ಲುವುದು ಮಾನವನ ಆಂತರ್ಯದಲ್ಲಿರುವ ಸಂವೇದನೆ, ಸಹನೆ ಮತ್ತು ಮಾನವೀಯತೆ. ಈ ಮೂರು ಮೌಲ್ಯಗಳು ಇಲ್ಲದಾದಾಗ ಇದು ಜಿಹಾದ್‍ನಂತೆ (ಧರ್ಮಯುದ್ಧ) ಕಾಣುತ್ತದೆ. ಭಾರತದಲ್ಲಿ ಆಗುತ್ತಿರುವುದೂ ಇದೇ.

20ನೆಯ ಶತಮಾನ ಇಡೀ ಮನುಕುಲಕ್ಕೆ ಸಂವೇದನೆಯನ್ನು ಕಲಿಸಬೇಕಿತ್ತು. ಏಕೆಂದರೆ ಇದು ಆಧುನಿಕ ಜಗತ್ತಿನ ಕನ್ನಡಿಯಂತೆ. ಒಂದು ಶತಮಾನದ ಅವಧಿಯಲ್ಲಿ ಮಾನವ ಸಮಾಜ ಕಂಡ ಸಾವು, ನೋವು, ಹಿಂಸೆ, ಕ್ರೌರ್ಯ, ದೌರ್ಜನ್ಯ ಮತ್ತು ವಿನಾಶಕಾರಿ ಬೆಳವಣಿಗೆಗಳು ನಮ್ಮಲ್ಲಿ, ಅಂದರೆ ಮಾನವ ಸಮಾಜದಲ್ಲಿ, ಮಾನವ ಪ್ರೀತಿಯನ್ನು, ಸೂಕ್ಷ್ಮ ಸಂವೇದನೆಯನ್ನು ಹೆಚ್ಚಿಸಬೇಕಿತ್ತು. ಭೀಕರ ಯುದ್ಧದ ನಡುವೆಯೂ ಪ್ರೀತಿಯನ್ನು ಹುಡುಕುವ ಹೃದಯಗಳು ಆಗಲೂ ಇದ್ದವು. ವಿಯಟ್ನಾಂ ಯುದ್ಧದ ಸಂದರ್ಭದಲ್ಲಿ, ಹಿಟ್ಲರನ ಕ್ರೌರ್ಯದ ನಡುವೆ, ತೈಲ ಮಾರುಕಟ್ಟೆಗಾಗಿ ನಡೆದ ವಿಧ್ವಂಸಕ ಸಮರಗಳಲ್ಲಿ, ಸಾಮ್ರಾಜ್ಯಶಾಹಿ ಬೆಳೆಸಿದ ಭಯೋತ್ಪಾದನೆಯಲ್ಲಿ, ಮತಧರ್ಮಗಳು ಬೆಳೆಸಿದ ಮತಾಂಧತೆಯಲ್ಲಿ ಪ್ರೀತಿಯನ್ನು ಹೆಕ್ಕಿ ತೆಗೆಯುವ ಪ್ರಯತ್ನಗಳೂ ನಡೆದೇ ಇದ್ದವು.

ಆದರೆ ಕೊನೆಯಲ್ಲಿ ಗೆದ್ದಿದ್ದು ಹಿಂಸೆಯೇ, ವಿಕ್ರಮ ಸಾಧಿಸಿದ್ದು ಯುದ್ಧಪರಂಪರೆಯೇ. ಪ್ರೀತಿಸಲು ಕಾರಣ ಬೇಕಿಲ್ಲ ಎರಡು ಹೃದಯಗಳು ಸ್ಪಂದಿಸಿದರೆ ಪ್ರೀತಿ ಹುಟ್ಟುತ್ತದೆ, ಎರಡೂ ಹೃದಯಗಳನ್ನು ಸಾಯಲು ಬಿಡದೆ ಕಾಪಾಡುತ್ತದೆ. ಆದರೆ ಯುದ್ಧ ಮಾಡಲು ಕಾರಣ ಬೇಕು. ನಿಮಿತ್ತ ಬೇಕು. ಅದು ಭೌಗೋಳಿಕ ಹಸಿವು, ಸಂಪತ್ತಿನ ಮೋಹ, ಅಧಿಪತ್ಯದ ಹಪಹಪಿ, ಶ್ರೇಷ್ಠತೆಯ ಪಾರಮ್ಯ, ದಿಗ್ವಿಜಯದ ಅಹಮಿಕೆ ಹೀಗೆ ಹಲವು ಕಾರಣಗಳು ಇಲ್ಲದೆ ಯುದ್ಧ ಸಂಭವಿಸುವುದಿಲ್ಲ.

ಈ ಕಾರಣಗಳನ್ನು ನಾವು ಇಸ್ಲಾಂ ಹೆಸರಿನಲ್ಲಿ ಸಾವಿರಾರು ಕೊಲೆ ಮಾಡಿರುವ ಭಯೋತ್ಪಾದಕರಲ್ಲಿ, ಹಿಂದುತ್ವದ ಹೆಸರಿನಲ್ಲಿ ಸಾವಿರಾರು ಶವಯಾತ್ರೆಗಳನ್ನು ಸಂಭ್ರಮಿಸಿರುವ ಮತಾಂಧರಲ್ಲಿ, ಜಾತಿ ಶ್ರೇಷ್ಠತೆಗಾಗಿ ನೂರಾರು ಜೀವಗಳನ್ನು ದಹಿಸಿ ವಿಕೃತಿ ಮೆರೆದಿರುವ ಮೇಲ್ಜಾತಿಗಳಲ್ಲಿ ಮತ್ತು ವರ್ಣಬೇಧ ನೀತಿಯನ್ನು ಸಂರಕ್ಷಿಸಲು ಪಣತೊಟ್ಟಿರುವ ಮನಸುಗಳಲ್ಲಿ ಕಾಣಲು ಸಾಧ್ಯ. 21ನೆಯ ಶತಮಾನದ ಆಧುನಿಕ ಭಾರತ, ಸಾವಿರಾರು ವರ್ಷಗಳ ಸಾಂಸ್ಕøತಿಕ ಪರಂಪರೆಯನ್ನು ಹೊಂದಿರುವ ಭಾರತ ಈ ವಿಕೃತಿಯಿಂದ ಹೊರಬರಬೇಕಿತ್ತು. ಏಕೆಂದರೆ ಜಗತ್ತಿನ ಯಾವುದೇ ಒಂದು ದೇಶದಲ್ಲಿ ಕಾಣಲಾಗದಷ್ಟು ಸಮಾಜ ಸುಧಾರಣೆಯ ಪ್ರಯತ್ನಗಳು ಇಲ್ಲಿ ನಡೆದಿವೆ. ಚಾರ್ವಾಕನಿಂದ ಅಂಬೇಡ್ಕರ್ ವರೆಗೆ ಇದನ್ನು ಕಂಡಿದ್ದೇವೆ.

ಆದರೆ ಈ ಮನಸ್ಥಿತಿ ಬದಲಾಗದಿರುವಂತೆ ಈ ದೇಶದ ಸ್ಥಾಪಿತ ಜಾತಿ ವ್ಯವಸ್ಥೆ ಮತ್ತು ಮತಧಾರ್ಮಿಕ ನೆಲೆಗಳು ಇತಿಹಾಸದ ಪ್ರತಿಯೊಂದು ಕಾಲಘಟ್ಟದಲ್ಲೂ ಎಚ್ಚರವಹಿಸಿವೆ. ಸಮಾಜ ಸುಧಾರಕರನ್ನು ತನ್ನೊಳಗೆ ಸಮೀಕರಿಸಿಕೊಳ್ಳುವ ಮೂಲಕ ಅಥವಾ ಸಂಪೂರ್ಣವಾಗಿ ನಿರಾಕರಿಸುವ ಮೂಲಕ ಅಥವಾ ಪರಂಪರೆ ಮತ್ತು ಸಾಂಸ್ಕೃತಿಕ ಇತಿಹಾಸದ ನೆಲೆಯಲ್ಲಿ ಯಥಾಸ್ಥಿತಿಯನ್ನು ಸಂರಕ್ಷಿಸುವ ಮೂಲಕ ವಿಕೃತ ಮನಸ್ಥಿತಿಯನ್ನು ಉಳಿಸಿಕೊಳ್ಳಲಾಗಿದೆ.

ಈ ಮನಸ್ಥಿತಿಯನ್ನೇ ಮನುಸ್ಮೃತಿ ಎನ್ನುವ ಪ್ರಾಚೀನ ಸಂಹಿತೆಗಳ ಗ್ರಂಥ ಪ್ರತಿಪಾದಿಸುತ್ತದೆ. ಪ್ರೀತಿಸಬೇಕಾದ ಎರಡು ಹೃದಯಗಳು ಮತಧಾರ್ಮಿಕ ಕಾರಣದಿಂದಲೋ, ಜಾತಿ ಬೇಧದ ಕಾರಣದಿಂದಲೋ ಅಥವಾ ಶ್ರೇಷ್ಠ-ಕನಿಷ್ಠದ ಅಸ್ಮಿತೆಗಳ ಕಾರಣದಿಂದಲೋ, ಪರಿಶುದ್ಧತೆ ಮತ್ತು ಮಾಲಿನ್ಯದ ಕಾರಣದಿಂದಲೋ ಏಕೆ ದೂರವೇ ಇರಬೇಕು, ಹೇಗೆ ದೂರ ಇರಬೇಕು ಮತ್ತು ಒಂದು ವೇಳೆ ಹತ್ತಿರ ಬಂದರೆ ಏನೇನು ಅನಾಹುತಗಳು ಸಂಭವಿಸುತ್ತವೆ ಎಂದು ವ್ಯಾಖ್ಯಾನಿಸುವ ಒಂದು ಕೃತಿ ಮನುಸ್ಮೃತಿ. ಇದಕ್ಕಿಂತಲೂ ಹೆಚ್ಚಿನದಾಗಿ ಏನೂ ಹೇಳದ ಒಂದು ಗ್ರಂಥ. ಆದರೆ ಇದನ್ನು ಹೇಳಲು ಧರ್ಮಶಾಸ್ತ್ರಗಳನ್ನು ಉಲ್ಲೇಖಿಸುವ ಮೂಲಕ ಮೇಲ್ಜಾತಿಗಳಲ್ಲಿ ಸಾರ್ವಕಾಲಿಕ ಮಾನ್ಯತೆ ಪಡೆದಿರುವ ಒಂದು ಗ್ರಂಥ.

ಮನುಸ್ಮೃತಿಯ ಅನುಸರಣೆಗೆ ದೊರೆಯುವ ಮಾನ್ಯತೆ, ಈ ಗ್ರಂಥವನ್ನು ಧಿಕ್ಕರಿಸುವ ಧೋರಣೆಗೆ ದೊರೆಯುವುದಿಲ್ಲ ಎನ್ನುವುದೇ ಭಾರತೀಯ ಸಮಾಜದ ದೌರ್ಬಲ್ಯ . ಏಕೆ ಹೀಗೆ ? ಏಕೆಂದರೆ ನಾವು ಮನುಸ್ಮೃತಿ ಎನ್ನುವ ಗ್ರಂಥವನ್ನು ಮಾತ್ರ ಸುಟ್ಟಿದ್ದೇವೆ, ಈ ಗ್ರಂಥ ನಮ್ಮ ಸಾಮಾಜಿಕ ವಲಯದಲ್ಲಿ, ಸಾಂಸ್ಥಿಕವಾಗಿ, ವ್ಯಕ್ತಿಗತವಾಗಿ, ಸಂಘಟನಾತ್ಮಕವಾಗಿ ಮತ್ತು ರಾಜಕೀಯವಾಗಿ ಗಟ್ಟಿಯಾದ ನೆಲೆ ಕಂಡುಕೊಂಡಿದೆ.

ಗ್ರಂಥದ ಅಧ್ಯಯನದ ಅವಶ್ಯಕತೆಯೇ ಇಲ್ಲದೆ,ಮನು ಎಂಬ ಒಬ್ಬ ಸನಾತನಿ ಭಾರತದಲ್ಲಿ ಬ್ರಾಹ್ಮಣ್ಯದ ನೆಲೆಯನ್ನು ಗಟ್ಟಿಗೊಳಿಸಲು ರೂಪಿಸಿದ ಸಂಹಿತೆಗಳನ್ನು ಚಾಚೂತಪ್ಪದಂತೆ ಪಾಲಿಸಿಕೊಂಡು ಬರುವ ಒಂದು ಬೃಹತ್ ಜನಸಮುದಾಯ ನಮ್ಮ ನಡುವೆ ಇದೆ. ಒಂದು ಸಮಾಜೋ ಸಾಂಸ್ಕೃತಿಕ ಪರಂಪರೆ ವ್ಯವಸ್ಥೆಯಾಗಿ ರೂಪುಗೊಂಡು, ಇಡೀ ಭೌಗೋಳಿಕ ಪ್ರದೇಶದ ಜನತೆಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎನ್ನಲು ಇದೊಂದು ನಿದರ್ಶನ.

ಹಾಗಾಗಿಯೇ ಟಿ ವಿ ವಾಹಿನಿಯಲ್ಲಿ ಬರುವ ಒಂದು ಕಾರ್ಯಕ್ರಮದಲ್ಲಿ ಮನುಸ್ಮೃತಿಯ ದಹನದ ಪ್ರಶ್ನೆ ಕೇಳಿಬಂದರೆ ಈ ಸಮಾಜೋ ಸಾಂಸ್ಕೃತಿಕ ವ್ಯವಸ್ಥೆ ಸಿಡಿದೇಳುತ್ತದೆ. ಕೌನ್ ಬನೇಗ ಕರೋಡ್‍ಪತಿ ಕಾರ್ಯಕ್ರಮದಲ್ಲಿ ಈ ಪ್ರಶ್ನೆ ಪ್ರಶ್ನೋತ್ತರದ ಒಂದು ಭಾಗವಾಗಿ ಮೂಡಿಬಂದಿದೆ. ಕಾರ್ಯಕ್ರಮದ ನಿರೂಪಕ ಅಮಿತಾಬ್ ಬಚ್ಚನ್ ಅಂಬೇಡ್ಕರ್ ವಾದಿಯೇನಲ್ಲ. ವ್ಯಕ್ತಿಗತ ನೆಲೆಯಲ್ಲಿ ಮನುಸ್ಮೃತಿಯನ್ನು ಕುರಿತು ಅವರ ನಿಲುವು ಏನು ಎನ್ನುವುದೂ ಅಸ್ಪಷ್ಟವೇ.

ಆದರೂ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಂದರೆ ಮನುಸ್ಮೃತಿ ಪ್ರಶ್ನಾತೀತವಾಗಿದೆ ಎಂದರ್ಥ ಅಲ್ಲವೇ ? ಭಾರತದ ಮಧ್ಯಮ ವರ್ಗಗಳಿಗೆ, ದಲಿತರನ್ನೂ ಸೇರಿದಂತೆ ಇದೊಂದು ಕ್ಷುಲ್ಲಕ ಘಟನೆಯಾಗಿ ಮರೆಯಾಗಿಬಿಡುತ್ತದೆ. ಪ್ರಸ್ತುತ ಆಡಳಿತದ ಚುಕ್ಕಾಣಿ ಹಿಡಿರುವ ಸಾಂಸ್ಕೃತಿಕ ರಾಜಕಾರಣಕ್ಕೆ ಇದು ಮತ್ತೊಂದು ರಸ್ತೆ ವಿಭಜಕವಾಗಿ ಜನರನ್ನು ಕವಲುಹಾದಿಗಳಲ್ಲಿ ನಿಲ್ಲಿಸಲು ಸಹಾಯಕವಾಗುತ್ತದೆ.

ಆದರೆ ಭಾರತದ ಸಾಮಾಜಿಕ-ಸಾಂಸ್ಕೃತಿಕ ಬದುಕಿನಲ್ಲಿ ಈ ಪ್ರಶ್ನೆ ಇನ್ನೂ ಬಹಳ ವರ್ಷಗಳ ಕಾಲ ಕೇಳಿಬರುತ್ತಲೇ ಇರುತ್ತದೆ. ಮನುಸ್ಮೃತಿ ಏಕೆ ಪ್ರಶ್ನಾತೀತವಾಗಿರಬೇಕು ? “ ಡಾ ಅಂಬೇಡ್ಕರ್ ಮನುಸ್ಮೃತಿಯನ್ನು ದಹಿಸಲು ಕಾರಣವೇನು ” ಎಂಬ ವಿಚಾರದ ಬಗ್ಗೆ ಈ ದೇಶದ ಎಷ್ಟು ಶಾಲೆಗಳಲ್ಲಿ ಪ್ರಬಂಧ ಅಥವಾ ಚರ್ಚಾಸ್ಪರ್ಧೆ ಆಯೋಜಿಸಲು ಸಾಧ್ಯ ? ಈ ಪ್ರಶ್ನೆಯೇ ಎಷ್ಟು ಚರ್ಚಾಸ್ಪದವಾಗಬಹುದು.

ಯೋಚಿಸೋಣ. ಡಾ ಬಿ ಆರ್ ಅಂಬೇಡ್ಕರ್ ಮನುಸ್ಮೃತಿಯನ್ನು ದಹಿಸುವ ಮೂಲಕ, ಆ ಗ್ರಂಥ ಭಾರತೀಯ ಸಮಾಜಕ್ಕೆ ಎಷ್ಟು ಅಪಾಯಕಾರಿ ಎನ್ನುವುದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡಿದ್ದರು. ಹಾಗೆಯೇ “ ನಾವು ಇಂದು ಕೇವಲ ಗ್ರಂಥವನ್ನು ಸುಡುತ್ತಿದ್ದೇವೆ ಮುಂದೊಂದು ದಿನ ಈ ಗ್ರಂಥದಲ್ಲಿನ ಜಾತಿ ಶ್ರೇಷ್ಠತೆಯ ವಿಕೃತ ಚಿಂತನೆಗಳನ್ನೂ ಹೀಗೆಯೇ ದಹಿಸುತ್ತೇವೆ ” ಎಂದು ಈ ದೇಶದ ಜಾತಿ ವ್ಯವಸ್ಥೆಯ ವಾರಸುದಾರರಿಗೂ ಎಚ್ಚರಿಕೆಯ ಸಂದೇಶ ನೀಡಿದ್ದರು.

ಅವರ ಮೊದಲನೆಯ ಸಂದೇಶವನ್ನು ಈಗಲೂ ಭಾರತದ ಜಾತಿಪೀಡಿತ ಮನಸುಗಳು, ಶ್ರೇಷ್ಠತೆಯ ಪ್ರತಿಪಾದಕ ಸಮುದಾಯಗಳು ಪಠಿಸುತ್ತಿವೆ. ಆದರೆ ಎರಡನೆಯ ಸಂದೇಶ ಬಹುಶಃ ನೇಪಥ್ಯಕ್ಕೆ ಸರಿದಿದೆ. ಏಕೆಂದರೆ ಮನುಸ್ಮೃತಿ ಮತಧರ್ಮದ ಹೆಸರಿನಲ್ಲಿ ಆಚರಣಾತ್ಮಕವಾಗಿ ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿದೆ. ನವ ಬ್ರಾಹ್ಮಣ್ಯ ಎಲ್ಲ ಜಾತಿಗಳಲ್ಲೂ ಆವರಿಸಿದೆ.

ಜಾತಿ ಶ್ರೇಣೀಕರಣ ಮತ್ತು ಶ್ರೇಷ್ಠತೆಯನ್ನು ಪ್ರತಿಪಾದಿಸುವ ಮತ್ತು ಇದನ್ನು ಸಂರಕ್ಷಿಸುವ ಮೂಲಕವೇ ಜಾತಿಗಳ ಮೂಲಕ ಜನಸಾಮಾನ್ಯರನ್ನು ವಿಭಜಿಸುತ್ತಾ ಬ್ರಾಹ್ಮಣ್ಯದ ಪ್ರಾಬಲ್ಯವನ್ನು ಉಳಿಸಿಕೊಂಡು ಹೋಗುವ ಮನುಸ್ಮೃತಿಯ ಧ್ಯೇಯ ಸಾಧಿಸಲು ಸಂಘಪರಿವಾರ ತನ್ನದೇ ಆದ ವ್ಯೂಹ ರಚಿಸಿರುವುದನ್ನು ಹಿಂದುತ್ವ ರಾಜಕಾರಣದಲ್ಲಿ ನಾವು ಕಾಣಬೇಕಲ್ಲವೇ ? ರಾಮಮಂದಿರ ಮತ್ತು ಕಾಶ್ಮೀರ ಈ ವ್ಯೂಹದ ಎರಡು ಧೃವಗಳು ಎನ್ನುವುದನ್ನು ಹಿಂದುತ್ವದೊಡನೆ ಗುರುತಿಸಿಕೊಂಡಿರುವ ಅಂಬೇಡ್ಕರ್ ಅನುಯಾಯಿಗಳಿಗೆ ಅರ್ಥವಾಗಬೇಕಲ್ಲವೇ ?

ಕಂಬಾಲಪಲ್ಲಿಯಿಂದ ಹಥ್ರಾಸ್‍ವರೆಗಿನ ಬೆಳವಣಿಗೆಗಳನ್ನು ಖೈರ್ಲಾಂಜಿಯ ಮೂಲಕ ಸೂಕ್ಷ್ಮವಾಗಿ ಗಮನಿಸಿದರೆ ಇದರ ಒಳಸುಳಿಗಳನ್ನು ನಾವು ಅರ್ಥಮಾಡಿಕೊಳ್ಳಬಹುದು. 20 ವರ್ಷಗಳ ಹಿಂದೆ, ಗತ ಶತಮಾನದ ಕೊನೆಯ ವರ್ಷದಲ್ಲಿ, ಕಂಬಾಲಪಲ್ಲಿಯಲ್ಲಿ ಒಂದು ದಲಿತ ಕುಟುಂಬದ ಸಜೀವ ದಹನವಾಗಿತ್ತು. ಏಳು ಜೀವಗಳು ಸುಟ್ಟುಹೋಗಿದ್ದವು.

ಇಡೀ ದೇಶದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ದಲಿತ ಅಸ್ಮಿತೆ ಮತ್ತು ಜಾತಿ ಶ್ರೇಷ್ಠತೆಯ ನಡುವಿನ ಸಂಘರ್ಷ ತಾರಕಕ್ಕೇರಿತ್ತು. ಆರು ವರ್ಷಗಳ ನಂತರ 2006ರಲ್ಲಿ ಖೈರ್ಲಾಂಜಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಸಾರ್ವಜನಿಕವಾಗಿಯೇ ಸಂಭವಿಸಿತ್ತು. ದಲಿತ ಹೆಣ್ಣುಮಕ್ಕಳ ಸಾರ್ವಜನಿಕ ಬೆತ್ತಲೆ ಮೆರವಣಿಗೆ ಮತ್ತು ಕೊಲೆ ಸದ್ದಿಲ್ಲದೆ ಅಡಗಿಹೋಯಿತು. 2020ರಲ್ಲಿ ಹಥ್ರಾಸ್‍ನಲ್ಲಿ ಒಂದು ಹೆಣ್ಣು ಮಗು ಮೇಲ್ಜಾತಿಯವರಿಂದ ಅತ್ಯಾಚಾರಕ್ಕೊಳಗಾಗಿ ಅಸುನೀಗಿದಳು. ಆಕೆಯ ಶವವನ್ನು ಸದ್ದಿಲ್ಲದೆ ಆಡಳಿತ ವ್ಯವಸ್ಥೆಯ ಮೇಲ್ವಿಚಾರಣೆಯಲ್ಲೇ ದಹಿಸಲಾಯಿತು.

ಕಂಬಾಲಪಲ್ಲಿಗೂ ಹಥ್ರಾಸ್‍ಗೂ ಇರುವ ವ್ಯತ್ಯಾಸವಾದರೂ ಏನು ? ಸುಟ್ಟವರು ಯಾರು ಎಂಬುದಷ್ಟೇ. ಎರಡೂ ಪ್ರಕರಣಗಳಲ್ಲಿ ಮತ್ತು ಖೈರ್ಲಾಂಜಿಯಲ್ಲೂ ಸಹ ದೌರ್ಜನ್ಯಕ್ಕೆ ಕಾರಣವಾಗಿದ್ದು ಮನುಸ್ಮೃತಿಯಲ್ಲಿ ಹೇಳಲಾಗುವ ಜಾತಿ ಶ್ರೇಷ್ಠತೆಯ ಪಾರಮ್ಯ ಮತ್ತು ಪ್ರಾಬಲ್ಯ . ಮನು ಅಪರಾಧಗಳನ್ನು ಶ್ರೇಣೀಕರಣಗೊಳಿಸುವಂತೆಯೇ ಅಪರಾಧಿಗಳನ್ನೂ ಶ್ರೇಣೀಕರಣಗೊಳಿಸುತ್ತಾನೆ.

ಮನುಷ್ಯನ ಹುಟ್ಟು ಅವನ ಅಪರಾಧಿ ಸ್ಥಾನವನ್ನೂ ನಿರ್ಧರಿಸುತ್ತದೆ. ಮನುಸ್ಮೃತಿಯನ್ನು ರಚಿಸಿದ ಕಾಲಘಟ್ಟದಲ್ಲಿ ಭಾರತೀಯ ಸಮಾಜ ಇನ್ನೂ ನಾಗರಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡಿರಲಿಲ್ಲ ಎಂದು ಹೇಳಬಹುದಾದರೆ, ಇಂದಿನ ಪರಿಸ್ಥಿತಿಯಲ್ಲಿ ಏನು ಹೇಳಬಹುದು ? ಹಥ್ರಾಸ್ ಘಟನೆಯಲ್ಲೂ ಇದೇ ಅನಾಗರಿಕ ಪ್ರಜ್ಞೆ ಅನಾವರಣವಾಗಿರುವುದನ್ನು ಕಂಡಿದ್ದೇವೆ ಅಲ್ಲವೇ ?

ಈ ಮೂರೂ ಘಟನೆಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವುದಿಲ್ಲ ಎನ್ನುವುದು ನಿಶ್ಚಿತ. ಎರಡು ಘಟನೆಗಳನ್ನು ನಾವು ಮರೆತಿದ್ದೇವೆ. ನಡುವೆ ಊನ ಗ್ರಾಮದಲ್ಲಿ ನಡೆದ ಘಟನೆಯನ್ನು ಒಂದು ಸಿನೆಮಾದ ಚಿತ್ರೀಕರಣದಂತೆ ನೇಪಥ್ಯಕ್ಕೆ ಸರಿಸಿಬಿಟ್ಟಿದ್ದೇವೆ. ಹಥ್ರಾಸ್ ಸಹ ಮೆಲ್ಲನೆ ಬದಿಗೆ ಸರಿದುಬಿಡುತ್ತದೆ. ಇಷ್ಟರ ನಡುವೆ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ಒಂದು ಸಂದೇಶ ಮನುಸ್ಮೃತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತರುವಂತಿದೆ.

ಅಸ್ಪೃಶ್ಯ ಸಮುದಾಯಗಳು, ದಲಿತರು ನಾಲ್ಕು ಗೋಡೆಗಳ ನಡುವೆ ಅನುಭವಿಸುವ ಜಾತಿ ನಿಂದನೆಯ ಅಪಮಾನಗಳು ಎಸ್‍ಸಿ/ಎಸ್‍ಟಿ (ದೌರ್ಜನ್ಯ ಪ್ರತಿಬಂಧಕ) ಕಾಯ್ದೆಯ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ದೇಶದ ಸರ್ವೋಚ್ಚ ನ್ಯಾಯಾಲಯವೇ ಹೇಳಿರುವುದನ್ನು ಗಮನಿಸಿದರೆ ಈ ದೇಶ ಸಂವಿಧಾನಕ್ಕಿಂತಲೂ ಹೆಚ್ಚು ಮನುಸ್ಮೃತಿಯನ್ನೇ ಅನುಸರಿಸುತ್ತಿದೆ ಎಂಬ ಶಂಕೆ ಕಾಡುತ್ತದೆ.

ಖೈರ್ಲಾಂಜಿ, ಕಂಪಾಲಪಲ್ಲಿ ಘಟನೆಗಳು “ಖುಲೇ ಆಕಾಶ್ ಕೆ ನೀಚೆ” ಎಂದು ಹಿಂದಿಯಲ್ಲಿ ಹೇಳುವಂತೆ ಎಲ್ಲರ ಕಣ್ಣೆದುರಿನಲ್ಲೇ ನಡೆಯಿತಲ್ಲವೇ ? ಅಲ್ಲಿ ಸಂತ್ರಸ್ತರಿಗೆ ನ್ಯಾಯ ದೊರಕಿತೇ ? ಈ ದೇಶದ ಅಸ್ಪೃಶ್ಯ ಸಮುದಾಯದ ಅಮಾಯಕರು ನಾಲ್ಕು ಗೋಡೆಗಳ ನಡುವೆ ದೌರ್ಜನ್ಯ ಅಪಮಾನಗಳನ್ನು ಮೌನವಾಗಿ ಸಹಿಸುತ್ತಲೇ ಬಂದಿದ್ದಾರೆ.

ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ, ವಿದ್ಯಾಸಂಸ್ಥೆಗಳಲ್ಲೂ, ಪ್ರತ್ಯಕ್ಷವಾಗಿ ಪರೋಕ್ಷವಾಗಿ, ಬೌದ್ಧಿಕವಾಗಿ ಇದು ನಡೆಯುತ್ತಲೇ ಇರುತ್ತದೆ. ಅಪಮಾನ ಅಥವಾ ಮಾನಸಿಕ ಚಿತ್ರಹಿಂಸೆ ಎನ್ನುವುದು ವ್ಯಕ್ತಿಗತ ನೆಲೆಯಲ್ಲಿ ಒಂದು ನೊಂದ, ದಮನಿತ ಮನಸು ಅನುಭವಿಸುವ ಯಾತನೆಯೇ ಹೊರತು, ಸಾರ್ವಜನಿಕವಾಗಿ ನಿರ್ವಚಿಸಬಹುದಾದ ವಿದ್ಯಮಾನವಲ್ಲ. ನ್ಯಾಯ ವಿತರಣಾ ವ್ಯವಸ್ಥೆ ಸಾಕ್ಷಿ ಪುರಾವೆಗಳನ್ನು ಅವಲಂಬಿಸುವುದರಿಂದ ಈ ಸೂಕ್ಷ್ಮ ಅರ್ಥವಾಗದಿರಬಹುದು. ಆದರೆ ಕಾರ್ಯಾಂಗ ಮತ್ತು ಶಾಸಕಾಂಗಕ್ಕೆ ಅರ್ಥವಾಗಬೇಕಲ್ಲವೇ ?

ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ಅಸ್ಪೃಶ್ಯ ಸಮುದಾಯವನ್ನು, ಶೋಷಿತರನ್ನು ಮತ್ತು ದಲಿತರನ್ನು ಪ್ರತಿನಿಧಿಸುವ ದೇಹಗಳು ಹೇರಳವಾಗಿವೆ. ಮನಸುಗಳು ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಏಕೆಂದರೆ ಅಧಿಕಾರ ಕೇಂದ್ರಗಳು ಈ ಮನಸುಗಳಲ್ಲಿ ಮನುಸ್ಮೃತಿಯ ಚಿಂತನೆಗಳನ್ನೇ ಬಿತ್ತುತ್ತವೆ. ಮನುಸ್ಮೃತಿ ಕೇವಲ ಒಂದು ಮತಧಾರ್ಮಿಕ ಸಂಹಿತೆಯಲ್ಲ.

ಅಧಿಕಾರ ರಾಜಕಾರಣದ ಒಂದು ನೀತಿ ಸಂಹಿತೆಯೂ ಹೌದು. ಇದು ಕಳೆದ 20-30 ವರ್ಷಗಳ ರಾಜಕಾರಣದಲ್ಲಿ, ವಿಶೇಷವಾಗಿ ಹಿಂದುತ್ವ ರಾಜಕಾರಣ ಮತ್ತು ಸಾಂಸ್ಕೃತಿಕ ರಾಷ್ಟ್ರೀಯತೆಯ ನೆಲೆಯಲ್ಲಿ ಸ್ಪಷ್ಟವಾಗಿದೆ. ಸುಪ್ರೀಂಕೋರ್ಟ್‍ನ ತೀರ್ಪು, ಹಥ್ರಾಸ್ ಘಟನೆಯ ಬಗ್ಗೆ ಶೋಷಿತ ಸಮುದಾಯಗಳ ಮೌನ ಮತ್ತು ಈ ಸಮುದಾಯವನ್ನು ಪ್ರತಿನಿಧಿಸುವವರ ಜಾಣ ಕುರುಡು ಇದನ್ನು ಮತ್ತಷ್ಟು ದೃಢಪಡಿಸುತ್ತದೆ.

ಮನುಸ್ಮೃತಿ ಇಲ್ಲಿ ತನ್ನ ಅಸ್ತಿತ್ವ ಮತ್ತು ಪ್ರಾಬಲ್ಯವನ್ನು ತೋರುತ್ತದೆ. ಅಪರಾಧದ ಶ್ರೇಣೀಕರಣ ಮತ್ತು ಅಪರಾಧಿಗಳ ಶ್ರೇಣೀಕರಣವನ್ನೂ ಸಹ ಮನುಸ್ಮೃತಿಯ ನೆಲೆಯಲ್ಲೇ ಇಂದಿನ ಆಡಳಿತ ವ್ಯವಸ್ಥೆ ನಿರೂಪಿಸುತ್ತಿದೆ. ನಾವು ಮತಧಾರ್ಮಿಕ ಅಸ್ಮಿತೆ, ಜಾತಿ ಅಸ್ಮಿತೆ ಮತ್ತು ರಾಜಕೀಯ ನಿಷ್ಠೆಯ ಹೆಸರಿನಲ್ಲಿ ಇದನ್ನು ಗಮನಿಸುತ್ತಿಲ್ಲ.

ಸ್ಟಾನ್ ಸ್ವಾಮಿ, ಆನಂದ ತೇಲ್ತುಂಬ್ಡೆ, ಸುಧಾ ಭರದ್ವಾಜ್, ಗೌತಮ್ ನವಲಖಾ, ವರಾವರರಾವ್, ಪ್ರೊ. ಸಾಯಿಬಾಬಾ ಇವರೆಲ್ಲರನ್ನೂ ಒಂದೆಡೆ ನಿಲ್ಲಿಸಿ ಅರ್ನಾಬ್ ಗೋಸ್ವಾಮಿಯನ್ನು ಮುಖಾಮುಖಿಯಾಗಿಸಿದಾಗ ನಮಗೆ ಮನುಸ್ಮೃತಿಯ ಶ್ರೇಣೀಕೃತ ವ್ಯವಸ್ಥೆಯ ವಿಕೃತ ಸ್ವರೂಪ ಸ್ಪಷ್ಟವಾಗಿ ಗೋಚರಿಸುತ್ತದೆ. ನವ ಬ್ರಾಹ್ಮಣ್ಯ ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಯಲ್ಲಿ ಆಳವಾಗಿ ಬೇರೂರಿರುವಂತೆಯೇ ಆಡಳಿತ ವ್ಯವಸ್ಥೆಯಲ್ಲೂ ಬೇರೂರಿರುವುದನ್ನು ಈಗಲೂ ಗಮನಿಸದೆ ಹೋದರೆ ನಾವು ಸಂವಿಧಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳೇ ಹೆಚ್ಚು.

ಡಾ ಅಂಬೇಡ್ಕರ್ ಮನುಸ್ಮೃತಿಯ ಮುದ್ರಿತ ಅಕ್ಷರಗಳನ್ನು ಸುಟ್ಟುಹಾಕುವ ಮೂಲಕ ತಮ್ಮ ಹಾಗೂ ತಾವು ಪ್ರತಿನಿಧಿಸುವ ಶೋಷಿತ ಸಮುದಾಯದ ಆಕ್ರೋಶವನ್ನು ಸಾಂಕೇತಿಕವಾಗಿ ವ್ಯಕ್ತಪಡಿಸಿದ್ದರು. ಈ ಘಟನೆ ನಡೆದು ಶತಮಾನ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ನಾವು ಸುಡಬೇಕಿರುವುದು ನಮ್ಮ ಮನಸಿನಲ್ಲಿ ಬೇರೂರಿರುವ ಆ ಸ್ಮೃತಿಯ ಬೇರುಗಳನ್ನು ,ಪಳೆಯುಳಿಕೆಗಳನ್ನು. ಸುಶಿಕ್ಷಿತ, ಆಧುನಿಕ, ಪಾಶ್ಚಾತ್ಯ ಚಿಂತನೆ ಮತ್ತು ದೇಸಿ ಸಂಸ್ಕೃತಿಯನ್ನು ಮೇಳೈಸಿಕೊಂಡಿರುವ ಮಧ್ಯಮ ವರ್ಗಗಳಲ್ಲಿ, ಹಿತವಲಯದ “ನಾಗರಿಕ ಪ್ರಜೆಗಳಲ್ಲಿ”, ಇವರ ಪ್ರಜ್ಞೆಯಲ್ಲಿ ಬೇರೂರಿರುವ ಮನು ನಿರ್ವಚಿಸಿದ ಸ್ಮೃತಿಯನ್ನು ಸುಡುವುದು ನಮ್ಮ ಆದ್ಯತೆಯಾಗಬೇಕಿದೆ. ಈ ಸ್ಮೃತಿಯಿಂದ ಹೊರತಾಗಿದ್ದೇವೆ ಎಂದು ಮೇಲ್ನೋಟಕ್ಕೆ ಪ್ರದರ್ಶಿಸಿಕೊಳ್ಳುತ್ತಲೇ ಮನುಸ್ಮೃತಿಯ ಆರಾಧಕರೊಡನೆ ಗುರುತಿಸಿಕೊಂಡಿರುವವರೂ ಇದನ್ನು ತಮ್ಮ ಆದ್ಯತೆ ಎಂದೇ ಪರಿಗಣಿಸಬೇಕಿದೆ.

ಇಲ್ಲವಾದಲ್ಲಿ ಇಂದು ಮದುವೆಯಾಗಲು ಮತಾಂತರ ನಿಷಿದ್ಧ ಎನ್ನುವ ವ್ಯವಸ್ಥೆ ನಾಳೆ ಜಾತಿ ದೌರ್ಜನ್ಯದಿಂದ ಬೇಸತ್ತು ಮತಾಂತರವಾಗುವುದನ್ನೂ ನಿಷೇಧಿಸುತ್ತದೆ. ಅಂತರ್ ಧರ್ಮೀಯ ವಿವಾಹಗಳಂತೆಯೇ ಅಂತರ್ ಜಾತಿ ವಿವಾಹಗಳೂ ಸಹ ಮಸಣದಲ್ಲಿ ನ್ಯಾಯ ಕೇಳಬೇಕಾದ ವಿದ್ಯಮಾನಗಳಾಗಿಬಿಡುತ್ತವೆ. ನಾವು ಗ್ರಂಥದತ್ತ ನೋಡುತ್ತಿದ್ದೇವೆ ಅವರು ಸ್ಮೃತಿಯನ್ನು ವ್ಯವಸ್ಥಿತವಾಗಿ ಬಿತ್ತುತ್ತಿದ್ದಾರೆ. ಇದು ಯೋಚಿಸಬೇಕಾದ ವಿಚಾರವಲ್ಲವೇ ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್

Published

on

  • ~ ಸಿದ್ದು ಸತ್ಯಣ್ಣನವರ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು? ಎಂದು ಹೆಸರೇಳಿದರೆ ಗೊತ್ತಾಗದಿರುವವರು ಅವರ ಫೋಟೊ ನೋಡಿದರೆ ಕೂಡಲೇ ಮುಖದ ಮೇಲೆ ನಗು ಮೂಡಿರುತ್ತದೆ.

ತುಂಟ ಕಾಮೆಂಟ್ ಹಾಗೂ ಹಾಸ್ಯದ ತಿರುಳುಗಳ ಪೋಸ್ಟ್ ಮೂಲಕ ಗಮನ ಸೆಳೆಯುವ‌ ಕ್ಸೇವಿಯರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಸ್ಯಪ್ರಜ್ಞೆಯಿಂದ ಸಾಕಷ್ಟು ಪ್ರಸಿದ್ಧ. ಕ್ಸೇವಿಯರ್ ಹೆಸರಿನಿಂದ ಜನಪ್ರಿಯರಾದ ಇವರ ನಿಜವಾದ ಹೆಸರು ಓಂಪ್ರಕಾಶ್. ಅಸಂಖ್ಯ ಟ್ವೀಟರ್, ಫೇಸ್ಬುಕ್ ಪ್ರೋಫೈಲ್ ಗಳಲ್ಲಿ ಓಂಪ್ರಕಾಶ್ ಅವರ ಫೋಟೊ ಕ್ಸೇವಿಯರ್ ಎಂದೇ ಹಂಚಲ್ಪಟ್ಟಿದೆ.

ಮೀಮ್ಸ್ ಸ್ಟಾರ್ ಎಂದೇ ಪ್ರಖ್ಯಾತರಾಗಿರುವ ಇವರು ಮಧ್ಯವಯಸ್ಕ ಭಾರತೀಯರು ಹೆಚ್ಚಾಗಿ ಇಷ್ಟಪಡುವ ದಪ್ಪಮೀಸೆಯ ಫೋಟೊ ಹೊಂದಿರುವ ಪ್ರೋಫೈಲ್ ಮೂಲಕ ಟ್ವೀಟ್ಟರ್ ಮತ್ತು ಫೇಸ್ಬುಕ್ಕಿನ ಸಾಕಷ್ಟು ಟ್ರೋಲ್, ಮೀಮ್ ಪೇಜುಗಳಲ್ಲಿ ಕಾಣಸಿಗುತ್ತಾರೆ. ಕ್ಸೇವಿಯರ್ ಅಂಕಲ್, ಕ್ಸೇವಿಯರ್ ಮೀಮ್ಸ್, ಕ್ಸೇವಿಯರ್ ಪಾಂಡಾ, ಕ್ಸೇವಿಯರ್ ಮಿಮ್ ಬಾಯ್ ಹೀಗೆ ಇವರ ಹೆಸರಿನ ಮೂಲಕ ಸಾವಿರಾರು ಮೀಮ್ಸ್ ಮೇಕಿಂಗ್ ಪ್ರೋಫೈಲ್ ಗಳು ಲಕ್ಷಾಂತರ ಹಿಂಬಾಲಕರನ್ನು ಹೊಂದಿವೆ. ಮೀಮ್ಸ್ ಗಾಗಿಯೇ ವಿನ್ಯಾಸಗೊಳಿಸಲಾಗಿರುವ, ವಿದೇಶಗಳಲ್ಲೂ ಕೋಟ್ಯಂತರ ಜನರು ಹಿಂಬಾಲಿಸುವ 9gag ಎಂಬ ವೆಬ್ಸೈಟಿನಲ್ಲಿ ಇವರ ಸಾಕಷ್ಟು ಮೀಮ್ಸ್ ಗಳು ಜನಪ್ರಿಯವಾಗಿವೆ. ಫೇಸ್ಬುಕ್, ಟ್ವಿಟ್ಟರ್ ಬಳಸುವವರಿಗೆ ಕ್ಸೇವಿಯರ್ ಹಾಸ್ಯಪ್ರಜ್ಞೆ ಎಂಥದ್ದು ಎಂಬುದನ್ನ ಕೇಳಿದರೆ ನಗುವೇ ಅವರ ಉತ್ತರವಾಗಿರುತ್ತದೆ ಎಂಬುದಕ್ಕೆ ಸಹ ಚೆಂದದ ಮೀಮ್ ಒಂದಿದೆ.

ಕಾನ್ಪುರ ಐಐಟಿ ಸಿಬ್ಬಂದಿಯಾದ ಓಂಪ್ರಕಾಶ್ ಅವರು ಅಲ್ಲಿನ ಭೌತಶಾಸ್ತ್ರ ವಿಭಾಗದ ತಾಂತ್ರಿಕ ಮೇಲ್ವಿಚಾರಕ ಹುದ್ದೆಯಲ್ಲಿದ್ದಾರೆ. ಕ್ಸೇವಿಯರ್ ಎಂದು ಅವರು ಪ್ರಸಿದ್ಧರಾಗಲು ಕಾರಣ ಅವರ ಅಪರಿಮಿತ ಹಾಸ್ಯಪ್ರಜ್ಞೆಯ ‘ಪಕಾಲು ಪಾಪಿಟೋ’ ಎಂಬ ಕಾಲ್ಪನಿಕ ಗುಮಾಸ್ತನ ಪಾತ್ರವನ್ನು ಸೃಷ್ಟಿಸಿದ್ದಕ್ಕಾಗಿ. ಆ ಗುಮಾಸ್ತನ ಮೊದಲ ಟ್ವೀಟ್ ಟ್ವೀಟ್ಟರಿನಲ್ಲಿ ಹೆಚ್ಚುಕಡಿಮೆ 18 ಸಾವಿರ ರೀಟ್ವೀಟ್ ಆಗಿತ್ತು.

ಟ್ವೀಟ್ಟರ್ ನಿಯಮಗಳ ತಾಂತ್ರಿಕ ಕಾರಣಗಳಿಂದ ಸುಮಾರು ಲಕ್ಷ ಹಿಂಬಾಲಕರಿದ್ದ ಈ ಅಕೌಂಟ್ ಸ್ಥಗಿತಗೊಂಡಿತು. ನಂತರ ಕಾಮಿಕ್ ಮೀಮ್ ಗಳಿಂದ ಆರಂಭದಲ್ಲಿ ಪ್ರಸಿದ್ಧರಾಗಿದ್ದ ಓಂಪ್ರಕಾಶ್ ಅವರು ಕೊನೆಗೆ ಕ್ಸೇವಿಯರ್ ಹೆಸರಿನ ಮೂಲಕ ಮೀಮ್ ಪ್ರಿಯರಿಗೆ ಮನೆಮಾತಾದರು. ಓಂಪ್ರಕಾಶ್ ಅವರು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಕ್ರಮವಾಗಿ 1.4 ಮಿಲಿಯನ್ ಹಾಗೂ 3 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ‘ಪಕಾಲು ಪಾಪಿಟೋ’ ಅಕೌಂಟ್ ತಾಂತ್ರಿಕವಾಗಿ ಸ್ಥಗಿತಗೊಂಡ ಕಾರಣ ಕ್ಸೇವಿಯರ್ ಎಂಬ ಹೆಸರಿನ ತಮಾಷೆಯ ಮೀಮ್ಸ್ ಮೂಲಕ ಇನ್ಸ್ಟಾಗ್ರಾಂ, ಫೇಸ್ಬುಕ್, ಟ್ವಿಟ್ಟರ್ ಎಲ್ಲ ಕಡೆಗಳಲ್ಲಿ ಕಾಣಿಸುತ್ತಾರೆ. ( ಸಿದ್ದು ಸತ್ಯಣ್ಣನವರ್ ಅವರ ಫೇಸ್ ಬುಕ್ ಪೇಜ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending