Connect with us

ದಿನದ ಸುದ್ದಿ

ಕೆಎಸ್‍ಆರ್‍ಟಿಸಿ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸೊರಗಿದೆ ನಿಜ. ಒಟ್ಟಾರೆ 4 ಸಾವಿರ ಕೋಟಿ ಹಾನಿಗೊಳಗಾಗಿದೆ. ಹೀಗಂದ ಮಾತ್ರಕ್ಕೆ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ. ನೌಕರರ ಬದುಕನ್ನು ಬೀದಿಗೆ ಬರಲು ನಾನು ಬಿಡುವುದಿಲ್ಲವೆಂದು ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗ, ದಾವಣಗೆರೆ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕೆಎಸ್‍ಆರ್‍ಟಿಸಿ ನೌಕರರು ಇತ್ತೀಚೆಗೆ ನಡೆಸಿದ ಹೋರಾಟ ತಪ್ಪಲ್ಲ. ಆದರೆ ಸಮಯ, ಸಂದರ್ಭ ಗಮನದಲ್ಲಿಟ್ಟುಕೊಂಡು ಮಾಡಬೇಕಿತ್ತು. ಪ್ರತಿಭಟನೆಗೂ ಮುನ್ನ ನೋಟಿಸ್ ನೀಡಿ ಮಾಡಬೇಕು. ದಿಢೀರನೆ ಪ್ರತಿಭಟನೆಗೆ ನಿಲ್ಲುವುದು ಸರಿಯಲ್ಲ. ನೋಟಿಸ್ ನೀಡಿದ್ದರೆ ನಾನೇ ತಕ್ಷಣ ತಮ್ಮನ್ನು ಕರೆಸಿ ಸ್ಪಂದಿಸುತ್ತಿದ್ದೆ. ಕೊರೊನಾ ಹಿನ್ನೆಲೆಯಲ್ಲಿ ಸಹ ತಾವು ಕೇಳದಿದ್ದರೂ ನಾನು ಮುಖ್ಯಮಂತ್ರಿಗಳ ಮನವೊಲಿಸಿ ನಾಲ್ಕು ತಿಂಗಳ ವೇತನಕ್ಕೆ ವ್ಯವಸ್ಥೆ ಮಾಡಿದ್ದೆ. ತಾವು ತಮ್ಮ ಬೇಡಿಕೆಗಳಿಗೆ ಹೋರಾಟ ಮಾಡುವುದು ನಿಮ್ಮ ಹಕ್ಕಾದರೆ ನಾವು ಅದನ್ನು ಪೂರೈಸುವುದು ನಮ್ಮ ಕರ್ತವ್ಯ. ಆದರೆ ನಮ್ಮ ಚಾಲರು, ನಿರ್ವಾಹಕರೇ ತಮ್ಮ ಬಾಳಿಗೆ ಬೆಳಕಾದ ಬಸ್ಸಿಗೆ ಕಲ್ಲು ತೂರಿದ್ದು ಮನಸ್ಸಿಗೆ ಬೇಸರ ತಂದಿತು ಎಂದು ಖೇದ ವ್ಯಕ್ತಪಡಿಸಿದರು.

ಕಾಲ ಹೀಗೆಯೇ ಇರುವುದಿಲ್ಲ. ಅಭಿವೃದಿಯೆಡೆ ನಿಗಮ ಸಾಗಲಿದೆ. ಹಿಂದೆಲ್ಲ ಕೆಲವೇ ಕಂಪೆನಿಗಳ ವಾಹನಗಳು ನಮ್ಮಲ್ಲಿದ್ದವು. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅಂತರಾಷ್ಟ್ರೀಯ ವಾಹನಗಳು ಬರಲಿವೆ. ಎಲೆಕ್ಟ್ರಾನಿಕ್ ಬಸ್‍ಗಳನ್ನು ನಿಗಮದ ಮೂಲಕ ಓಡಿಸಲು ಒಪ್ಪಂದ ಮಾಡಲಾಗಿದೆ. ನಮ್ಮದೇ ಚಾಲಕರು/ನಿರ್ವಾಹಕರು ಈ ಬಸ್‍ಗಳನ್ನು ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಶೀಘ್ರದಲ್ಲಿ 4 ರಿಂದ 6 ಕಡೆ ತರಬೇತಿ ಕೇಂದ್ರಗಳನ್ನು ಆರಂಭಿಸಿ ತರಬೇತಿ ನೀಡಲಾಗುವುದು.

ವಾಯುಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ, ವಾಯುಮಾಲಿನ್ಯವನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲೆಕ್ಟ್ರಾನಿಕ್ ಬಸ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. 1 ಬಸ್ ವೆಚ್ಚ ರೂ.2 ಕೋಟಿ ಇದ್ದು ಕೇಂದ್ರ ಸರ್ಕಾರ ರೂ.55 ಲಕ್ಷ ಸಬ್ಸಿಡಿ ನೀಡಲಿದೆ. ಸಬ್ಸಿಡಿಯಲ್ಲಿ ಖರೀದಿಸಿದ ಏಜೆನ್ಸಿ ಬಸ್ ಇಲಾಖೆಗೆ ನೀಡುವ ಒಪ್ಪಂದ ಮಾಡಿಕೊಳ್ಳಲಾಗುವುದು. ತರಬೇತಿ ಹೊಂದಿದ ನಮ್ಮ ಸಿಬ್ಬಂದಿಗಳು ಇದನ್ನು ನಿರ್ವಹಿಸುವರು ಎಂದರು.

ಉತ್ತಮ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ನೀಡುವಂತೆ, ಪ್ರತಿ ಲೀಟರ್‍ಗೆ ಹೆಚ್ಚು ಕಿ.ಮೀ ಓಡಿಸುವ ಚಾಲಕರಿಗೆ 11 ಗ್ರಾಂ ಬಂಗಾರದ ಪದಕ ನೀಡುವ ಯೋಜನೆ ಇದೆ. ಈ ನಿಟ್ಟಿನಲ್ಲಿ ಚಾಲಕರು ಉತ್ತಮ ಸೇವೆ ಸಲ್ಲಿಸಬೇಕು. ಸಿಬ್ಬಂದಿಗಳ 10 ಬೇಡಿಕೆಗಳ ಪೈಕಿ 9 ನ್ನು ಪೂರೈಸಲಾಗಿದೆ. ಯಾರೂ ಆತಂತಕ್ಕೆ ಈಡಾಗದೇ ಕರ್ತವ್ಯ ನಿರ್ವಹಿಸಬೇಕು ಎಂದರು.

ಇಲಾಖೆ ಹಾನಿ ಆಗಲು ಕಾರಣ ರಾಜಕೀಯ ಇಚ್ಚಾಶಕ್ತಿ ಕೊರತೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಆಗಬಹುದೆಂಬ ಆತಂಕ. ಡೀಸೆಲ್ ದರ, ಟೈರ್ ದರ, ಸಂಬಳ ಎಲ್ಲವೂ ಹೆಚ್ಚಾಗುತ್ತಿದೆ. ಆದರೆ ಆದಾಯ ಹೆಚ್ಚಿಸಲು ಆಗುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಆದಾಯವನ್ನು ಸರಿದೂಗಿಸುವ ಬಗ್ಗೆ ನನ್ನದೇ ಪರಿಕಲ್ಪನೆಯಿದ್ದು ಈ ಪ್ರಕಾರ 4 ನಿಗಮಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದರು.


ಜೀವನದಲ್ಲಿ ಮೂರು ಸಂಗತಿಗಳನ್ನು ಅರಿತು ಬಾಳಬೇಕು. ಹುಟ್ಟು ಸಾವು ಮತ್ತು ಅದರ ನಡುವಿನ ಬದುಕು. ಅಧಿಕಾರ, ಐಶ್ವರ್ಯ, ಆಯುಷ್ಯ ಯಾವುದೂ ಶಾಶ್ವತ ಅಲ್ಲ. ಆದರೆ ಜೀವನದ ಮೌಲ್ಯವನ್ನು ಅರಿತಾಗ ಮಾತ್ರ ನಾವು ಈ ನೆಲದ ಋಣ ತೀರಿಸಲು ಏನಾದರೂ ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯ. ನಾವು ಮಾಡುವ ಉತ್ತಮ ಕಾರ್ಯಗಳು ಮಾತ್ರ ಶಾಶ್ವತವಾಗಿರುತ್ತವೆ. ಈ ನಿಟ್ಟಿನಲ್ಲಿ ತಮ್ಮ ಸೇವೆಯಲ್ಲಿ ಅಪಘಾತ ಮತ್ತು ಅಪರಾಧ ಮಾಡದೇ ಬೆಳ್ಳಿ ಪದಕ ಗೌರವಕ್ಕೆ ಭಾಜನರಾದ ಚಾಲಕರಂತೆ ಇತರರೂ ತಾವು ಉತ್ತಮ ಸೇವೆ ಸಲ್ಲಿಸಬೇಕೆಂಬ ಮನೋಭಾವ ಹೊಂದಬೇಕು.

ಸಂಸದರಿಗೆ ಅಭಿನಂದನೆ : ಈ ಕಾರ್ಯಕ್ರಮ ಆಗುವುದಕ್ಕೆ ಕಾರಣಕರ್ತರು ಸಂಸದ ಜಿ.ಎಂ.ಸಿದ್ದೇಶ್ವರರವರು. ಮೈಸೂರಿಗೆ ಲಭಿಸಬೇಕಿದ್ದ ಸ್ಮಾರ್ಟ್‍ಸಿಟಿ ಯೋಜನೆಯನ್ನು ಕೇಂದ್ರದ ಮೇಲೆ ಒತ್ತಡ ತಂದು ದಾವಣಗೆರೆಗೆ ಲಭಿಸುವಂತೆ ಮಾಡಿದರು. ಇದೀಗ ಸ್ಮಾರ್ಟ್‍ಸಿಟಿಯಿಂದ ರೂ.90 ಕೋಟಿ ಮತ್ತು ಇಲಾಖೆಯಿಂದ 30 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣವಾಗುತ್ತಿರುವುದಕ್ಕೆ ನಾನು ಸಂಸದರನ್ನು ಅಭಿನಂದಿಸುತ್ತೇನೆ.

|ಲಕ್ಷ್ಮಣ ಸಂ.ಸವದಿ, ಸಾರಿಗೆ ಸಚಿವರು


ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದಲ್ಲಿ ಹೈಟೆಕ್ ಬಸ್‍ನಿಲ್ದಾಣವಾಗುತ್ತಿರುವುದು ಸಂತಸದ ವಿಚಾರ. ಆದರೆ ಬಸ್‍ಸ್ಟ್ಯಾಂಡ್ ಕೆಡವಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ಕ್ಷಿಪ್ರವಾಗಿ ಕೆಲಸ ಮುಗಿಸಬೇಕೆಂದರು.

ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಒಟ್ಟು 9 ಎಕರೆ ಜಾಗದಲ್ಲಿ ಸ್ಮಾರ್ಟ್‍ಸಿಟಿಯ ರೂ.90 ಕೋಟಿ ಮತ್ತು ಸಾರಿಗೆ ಇಲಾಖೆಯ ರೂ.30 ಕೋಟಿ ಸೇರಿ ಒಟ್ಟು ರೂ.120 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೀಲಿನಕ್ಷೆ ತಯಾರಿಸಲಾಗಿದೆ. ನೆಲಮಹಡಿ ಸೇರಿ ಒಟ್ಟು ಆರು ಮಹಡಿಗಳಲ್ಲಿ ನಿಲ್ದಾಣದ ನಿರ್ಮಾಣ ಆಗಲಿದೆ.

ಬಸ್ ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್, ಮಹಿಳಾ ವಿಶ್ರಾಂತಿ ಕೊಠಡಿಗಳು, ಶೌಚಾಲಗಳು, ಭದ್ರತಾ ಕೊಠಡಿ, ಸೋಲಾರ್ ಸೌಲಭ್ಯ, ವಾಹನಗಳ ಪಾರ್ಕಿಂಗ್, ಎಲಿವೇಟರ್‍ಗಳು, ಎಸ್ಕಲೇಟರ್‍ಗಳು, ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಎಲೆಕ್ಟ್ರಾನಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ಸೌಲಭ್ಯ ಸಹ ಮಾಡಲಾಗುವುದು ಎಂದರು.

ಬೆಳ್ಳಿ ಪದಕ ಪ್ರದಾನ :ದಾವಣಗೆರೆ ವಿಭಾಗದಲ್ಲಿ 2018 ಮತ್ತು 2019 ನೇ ಸಾಲಿನಲ್ಲಿ ಸತತವಾಗಿ 5 ವರ್ಷ ಅಪಘಾತ/ಅಪರಾಧರಹಿತವಾಗಿ ಹಾಗೂ ಪ್ರತಿ ವರ್ಷ ಕನಿಷ್ಟ 200 ದಿನ ಹಾಜರಾತಿ ಹೊಂದಿ ಸೇವೆ ಸಲ್ಲಿಸಿದ ಒಟ್ಟು 27 ಚಾಲಕರು ಮತ್ತು ಚಾಲಕ/ನಿರ್ವಾಹಕರಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.

ಮಾಯಕೊಂಡ ಕ್ಷೇತ್ರದ ಶಾಸಕರಾದ ಪ್ರೊ.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ.ವೀರೇಶ್, ಸಾರಿಗೆ ಮಂಡಳಿ ನಿರ್ದೇಶಕರುಗಳಾದ ರಾಜು, ಆರುಂಡಿ ನಾಗರಾಜ್, ರುದ್ರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್‍ಪಿ ರಾಜೀವ್ ಮುಖ್ಯ ಇಂಜಿನಿಯರ್ ಜಗದೀಶ್ ಚಂದ್ರ ಇತರೆ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending