ದಿನದ ಸುದ್ದಿ
ಜನಗಣರಾಜ್ಯೋತ್ಸವದ ಸಂದೇಶಕ್ಕೆ ಕಿವಿಗೊಡೋಣ
- ನಾ ದಿವಾಕರ
ಕಳೆದ 60 ದಿನಗಳಿಂದ ದೆಹಲಿಯ ಸುತ್ತಲೂ ಬೀಡುಬಿಟ್ಟಿರುವ ದೇಶದ ರೈತ ಸಮುದಾಯದ ದಿಟ್ಟ ಹೋರಾಟಕ್ಕೆ ಕೊನೆಗೂ ಆಡಳಿತ ವ್ಯವಸ್ಥೆ ಮಣಿದಿದೆ. ಗಣರಾಜ್ಯೋತ್ಸವ ದಿನದಂದು ರೈತರು ರಾಜಧಾನಿ ದೆಹಲಿಯಲ್ಲಿ ಟ್ರಾಕ್ಟರ್ ಮೆರವಣಿಗೆಯ ಮೂಲಕ ಜನಗಣರಾಜ್ಯೋತ್ಸವ ಆಚರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇಡೀ ದೇಶದಲ್ಲಿ ಹೋರಾಟದ ಅಲೆಗಳನ್ನು ಸೃಷ್ಟಿಸಿದೆ.
ಟ್ರಾಕ್ಟರ್ ಪೆರೇಡ್ಗೆ ಅನುಮತಿ ನೀಡುವುದಿಲ್ಲ ಎಂಬ ಹಠಮಾರಿ ಧೋರಣೆಯಿಂದ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸ್ ಇಲಾಖೆ ಹಿಂದೆ ಸರಿದಿದ್ದರೆ ಅದು ಔದಾರ್ಯವೇನೂ ಅಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಾಗ್ರಹಕ್ಕೆ ಎಂತಹುದೇ ಸರ್ಕಾರವಾದರೂ ಮಣಿಯಲೇಬೇಕು ಎನ್ನುವುದನ್ನು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕಿದೆ. ರೈತರ ಟ್ರಾಕ್ಟರ್ ಪೆರೇಡ್ನಲ್ಲಿ ಎರಡು ಲಕ್ಷ ಟ್ರಾಕ್ಟರ್ಗಳ ಮೆರವಣಿಗೆಯೇ ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಲಿದೆ. ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸರ್ಕಾರವೂ ಸೇರಿದಂತೆ ಬಿಜೆಪಿ ಆಡಳಿತದ ಎಲ್ಲ ರಾಜ್ಯಗಳಲ್ಲಿ ಈ ಜನಗಣರಾಜ್ಯೋತ್ಸವಕ್ಕೆ ಅಡ್ಡಿ ಆತಂಕ ಉಂಟುಮಾಡುವ ಪ್ರಯತ್ನಗಳು ನಡೆದಿವೆ. ಉತ್ತರಪ್ರದೇಶದ ಪೆಟ್ರೋಲ್ ಬಂಕ್ ಗಳಲ್ಲಿ ಟ್ರಾಕ್ಟರ್ ಗಳಿಗೆ ಪೆಟ್ರೋಲ್/ಡೀಸೆಲ್ ನೀಡುವುದಿಲ್ಲ ಎಂಬ ಬೋರ್ಡ್ಗಳನ್ನು ನೇತುಹಾಕಲಾಗಿದೆ. ಕರ್ನಾಟಕದ ಬೆಳಗಾವಿಯಲ್ಲಿ ಬೆಂಗಳೂರಿಗೆ ಹೊರಟಿದ್ದ ರೈತರ ಟ್ರಾಕ್ಟರ್ ಗಳನ್ನು ವಶಪಡಿಸಿಕೊಳ್ಳುವ ಬೆದರಿಕೆ ಹಾಕಲಾಗಿದೆ.
ದೆಹಲಿಯ ಸುತ್ತ ನೆರೆದಿರುವ ರೈತರ ಮುಷ್ಕರವನ್ನು ಭಂಗಗೊಳಿಸಲು ಸಾಕಷ್ಟು ವಿಧ್ವಂಸಕ ಪ್ರಯತ್ನಗಳು ನಡೆದಿವೆ. ಲಕ್ಷಾಂತರ ರೈತರು ಸೇರಿರುವ ಕಡೆ ಪ್ರಕ್ಷುಬ್ಧ ವಾತಾವರಣ ಉಂಟುಮಾಡಲು, ಗಲಭೆ ಸೃಷ್ಟಿಸಲು ಸಂಚು ನಡೆಸಿದ್ದನ್ನು ರೈತರೇ ಕಂಡುಹಿಡಿದು, ಈ ಕೃತ್ಯಕ್ಕೆ ಮುಂದಾಗಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂತಹ ಮೂರು ನಾಲ್ಕು ಘಟನೆಗಳು ಈಗಾಗಲೇ ನಡೆದಿವೆ.
ದೆಹಲಿಯಲ್ಲಿ ನೆರೆದಿರುವುದು ರೈತರೇ ಅಲ್ಲ ಎಂದಿದ್ದಾಯಿತು, ದಲ್ಲಾಳಿಗಳು , ಕಾಂಗ್ರೆಸ್ ಏಜೆಂಟರು ಎಂದು ಹೀಗಳೆದಿದ್ದಾಯಿತು. ಇದು ವಿರೋಧ ಪಕ್ಷಗಳ ಕುಮ್ಮಕ್ಕು, ಪಿತೂರಿ ಎಂದು ಆರೋಪ ಹೊರಿಸಿದ್ದಾಯಿತು. ದೆಹಲಿಯ ಸುತ್ತ ಐದು ಗಡಿಗಳಲ್ಲಿ ರಸ್ತೆ ಕಂದಕಗಳನ್ನು ತೋಡಿ ಮಾರ್ಗ ಬಂದ್ ಮಾಡಲಾಯಿತು. ಬೃಹತ್ ಗಾತ್ರದ ಸಿಮೆಂಟ್ ಬ್ಯಾರಿಕೇಡ್, ಮುಳ್ಳು ತಂತಿ, ಜೆಸಿಬಿ ಹೀಗೆ ಕೃತಕ ಗೋಡೆಗಳನ್ನು ನಿರ್ಮಿಸುವ ಮೂಲಕ ರೈತರು ರಾಜಧಾನಿಗೆ ಪ್ರವೇಶಿಸದಂತೆ ತಡೆಹಿಡಿಯಲಾಯಿತು.
ರೈತರ ನಡುವೆ ಖಲಿಸ್ತಾನಿಗಳಿದ್ದಾರೆ, ಭಯೋತ್ಪಾದಕರಿದ್ದಾರೆ, ನಗರ ನಕ್ಸಲರಿದ್ದಾರೆ, ತುಕಡೆ ತುಕಡೆ ಗ್ಯಾಂಗ್ ಇದೆ, ಇಸ್ಲಾಮಿಕ್ ಉಗ್ರರಿದ್ದಾರೆ, ಹೀಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಲೇ ದೇಶದ ಜನಸಾಮಾನ್ಯರ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ, ಗೃಹ ಸಚಿವಾಲಯ, ಆಡಳಿತಾರೂಢ ಬಿಜೆಪಿ ಮತ್ತು ಸಂಘಪರಿವಾರ ಮತ್ತು ಅವರ ಬಾಲಂಗೋಚಿ ಸಂಘಟನೆಗಳು, ಚಿಂತಕರು ಹುಯಿಲೆಬ್ಬಿಸಿದ್ದೂ ಆಯಿತು.
ಆದರೆ ಈ ಎಲ್ಲ ಆರೋಪಗಳನ್ನೂ ತಮ್ಮ ಶಾಂತಿಯುತ, ಪ್ರಜಾಸತ್ತಾತ್ಮಕ ಹೋರಾಟದ ಮೂಲಕ, ತಮ್ಮ ದಿಟ್ಟ ಛಲ, ಬದ್ಧತೆ ಮತ್ತು ಶಿಸ್ತುಬದ್ಧ ನಡವಳಿಕೆಯ ಮೂಲಕ ರೈತ ಸಮುದಾಯ ಒಮ್ಮೆಲೆ ತೊಡೆದುಹಾಕಿದೆ. ಮುಷ್ಕರವನ್ನು ಭಂಗಗೊಳಿಸಲು ನ್ಯಾಯಾಂಗವನ್ನೂ ಬಳಸಿಕೊಂಡ ಕೇಂದ್ರ ಸರ್ಕಾರ ,ನ್ಯಾಯಾಲಯದ ಮೂಲಕ ಕೃಷಿ ಮಸೂದೆಗಳ ಬಗ್ಗೆ ಚರ್ಚಿಸಲು ಏಕಪಕ್ಷೀಯ ಸಮಿತಿಯನ್ನು ರಚಿಸಲೂ ಮುಂದಾಗಿತ್ತು. ಮಹಿಳೆಯರೇಕೆ ಮುಷ್ಕರದಲ್ಲಿದ್ದಾರೆ ಎಂದು ಕೇಳುವ ಮೂಲಕ ದೇಶದ ಸರ್ವೋಚ್ಚ ನ್ಯಾಯಾಲಯ ಹೋರಾಟವನ್ನು ಭಂಗಗೊಳಿಸುವ ಮತ್ತೊಂದು ಮಾರ್ಗವನ್ನು ಅನುಸರಿಸಿತ್ತು. ಒಂದೂವರೆ ವರ್ಷದ ಕಾಲ ಮಸೂದೆಗಳನ್ನು ಅಮಾನತಿನಲ್ಲಿಡುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನೂ ರೈತ ಸಂಘಟನೆಗಳು ತಿರಸ್ಕರಿಸಿದವು.
ಭಾರತದ ರೈತರ ಪಾಲಿಗೆ ಮತ್ತು ಜನಸಾಮಾನ್ಯರ ಪಾಲಿಗೆ ಮರಣಶಾಸನವಾಗಿರುವ ಮೂರು ಕೃಷಿ ಮಸೂದೆಗಳು ನೇಣುಗಂಬದಂತೆ ನಮ್ಮೆದುರು ನಿಂತಿವೆ. “ ಇಂದು ಗಲ್ಲಿಗೇರಿಸುವ ಬದಲು ಇನ್ನು ಎರಡು ವರ್ಷದ ನಂತರ ಗಲ್ಲಿಗೇರಿಸುತ್ತೇವೆ ” (ಖ್ಯಾತ ಚಿಂತಕ ಶಿವಸುಂದರ್ ಅವರ ಮಾತುಗಳು) ಎನ್ನುವ ಕೇಂದ್ರ ಸರ್ಕಾರದ ವಿಕೃತ ಧೋರಣೆಗೆ ರೈತ ಸಂಘಟನೆಗಳು ಜಗ್ಗದೆ ಇರುವುದೇ ಜನಪರ ಹೋರಾಟಕ್ಕೆ ಸಂದ ದಿಗ್ವಿಜಯ. ಈ ಹೋರಾಟ ದೇಶದ ಶ್ರಮಜೀವಿಗಳಿಗೆ, ಕಾರ್ಮಿಕರಿಗೆ ಮತ್ತು ಶೋಷಿತ ಜನಸಮುದಾಯಗಳಿಗೆ ಹೊಸ ಶಕ್ತಿ ನೀಡುವ ಒಂದು ಜನಾಂದೋಲನವಾಗಿ ರೂಪುಗೊಂಡಿದೆ. ಜನಗಣರಾಜ್ಯೋತ್ಸವ ಮತ್ತು ಟ್ರಾಕ್ಟರ್ ಪೆರೇಡ್ಗೆ ದೇಶಾದ್ಯಂತ ದೊರೆಯುತ್ತಿರುವ ಜನಬೆಂಬಲವೇ ಇದಕ್ಕೆ ಸಾಕ್ಷಿಯಾಗಿದೆ.
ಇಷ್ಟಾಗಿಯೂ ಈ ಮಸೂದೆಗಳು ಜನಪರವಾಗಿವೆ, ಇದನ್ನು ವಿರೋಧಿಸುವವರು ದೇಶದ್ರೋಹಿಗಳು ಎಂದು ವಾದಿಸುವ ಒಂದು ವರ್ಗ ನಮ್ಮ ನಡುವೆ ಇರುವುದು ದುರಂತ. ಒಬ್ಬ ವ್ಯಕ್ತಿಯ ಸುತ್ತ ಪ್ರಭಾವಳಿಯನ್ನು ಸೃಷ್ಟಿಸುವುದು, ವ್ಯಕ್ತಿ ಆರಾಧನೆಯನ್ನು ಪೋಷಿಸುವುದು ಮತ್ತು ಅಂಧ ಅನುಸರಣೆ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗುತ್ತದೆ ಎಂದು ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದುದನ್ನು ಇಲ್ಲಿ ಸ್ಮರಿಸಬೇಕಾಗುತ್ತದೆ. ದೆಹಲಿಯ ಸುತ್ತ ನೆರೆದಿರುವ ಮುಷ್ಕರ ನಿರತರು ರೈತರೇ ಅಲ್ಲ ದಲ್ಲಾಳಿಗಳು ಎಂದು ವಾದಿಸುವ ಅಪ್ರಬುದ್ಧ ಸುಶಿಕ್ಷಿತರಿಗೆ, ಹಿತವಲಯದ ವಂದಿಮಾಗಧರಿಗೆ ಈ 26ರಂದು ನಡೆಯುವ ಪರ್ಯಾಯ ಗಣರಾಜ್ಯೋತ್ಸವ ಅಥವಾ ಜನಗಣರಾಜ್ಯೋತ್ಸವ ತಕ್ಕ ಉತ್ತರ ನೀಡಲಿದೆ.
ಇಂದು ಈ ‘ ದಲ್ಲಾಳಿಗಳಿಗೇ ’ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ಈ ‘ ದಲ್ಲಾಳಿಗಳ ’ ಆಗ್ರಹಗಳಿಗೆ ಕೇಂದ್ರ ಸರ್ಕಾರ ಮಣಿದಿದೆ. ಈ ‘ ದಲ್ಲಾಳಿಗಳ ’ ಟ್ರಾಕ್ಟರ್ ಪೆರೇಡ್ಗೆ ದೆಹಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಆತ್ಮನಿರ್ಭರ ಭಾರತದ ಭ್ರಮಾಲೋಕದಲ್ಲಿ ತೇಲಾಡುತ್ತಿರುವ ಹಿತವಲಯದ ಸುಶಿಕ್ಷಿತರು, ಇದೇ 26ರಂದು ತಾವು ಪರಿಭಾವಿಸಿರುವ ಖಲಿಸ್ತಾನಿಗಳು-ಭಯೋತ್ಪಾದಕರು-ನಗರ ನಕ್ಸಲರು- ಉಗ್ರರು-ತುಕಡೆ ತುಕಡೆ ಗುಂಪುಗಳು, ಭಾರತದ ತ್ರಿವರ್ಣ ಧ್ವಜವನ್ನು ಹೊತ್ತು ಲಕ್ಷ ಲಕ್ಷ ಸಂಖ್ಯೆಯಲ್ಲಿ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ದನಿ ಎತ್ತುವ ಒಂದು ಅದ್ಭುತ ಪ್ರದರ್ಶನವನ್ನು ನೋಡಲಿದ್ದಾರೆ.
ಈ ಪ್ರದರ್ಶನ ಮನರಂಜನೆಯಲ್ಲ, ದೇಶಭಕ್ತಿಯ ಉನ್ಮಾದದಲ್ಲಿ ಕುಣಿದು ಕುಪ್ಪಳಿಸುವ ಪ್ರಹಸನವಲ್ಲ, ಸೇನಾಬಲ-ಪ್ರಭುತ್ವದ ಸಾಮರ್ಥ್ಯ ಪ್ರದರ್ಶಿಸುವ ಮೆರವಣಿಗೆಯಲ್ಲ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲಿ, ಗಣತಂತ್ರದಲ್ಲಿ ಸಾರ್ವಭೌಮ ಪ್ರಜೆಗಳಿಗೆ ಇರುವ ಶಕ್ತಿ ಪ್ರದರ್ಶನ. ಇದು ಅಭೂತಪೂರ್ವ, ಚಾರಿತ್ರಿಕ ಮತ್ತು ಭವಿಷ್ಯದ ದೃಷ್ಟಿಯಿಂದ ಮಹತ್ತರವಾದ ಒಂದು ಘಳಿಗೆ.
ಈ ಶಕ್ತಿ ಪ್ರದರ್ಶನದ ಹಿಂದೆ ದಮನಿಸುವ ದನಿ ಇಲ್ಲ, ಕೂಡಿ ಬಾಳುವ ದನಿ ಇದೆ. ವಿಧ್ವಂಸಕ ಛಾಯೆ ಇಲ್ಲ ಸೌಹಾರ್ದತೆಯ ಧ್ವನಿ ಇದೆ. ಗುಂಡಿಟ್ಟು ಕೊಲ್ಲುವ ಮನಸುಗಳಿಲ್ಲ, ಪರಸ್ಪರ ಅಪ್ಪಿಕೊಂಡು ಬದುಕುವ ಪ್ರೀತಿ ಇದೆ. ಅನ್ಯರ ಚಿಂತನೆ ಇಲ್ಲ ಐಕ್ಯತೆಯ ಭಾವ ಇದೆ. ನಾವು-ಅವರು ಎನ್ನುವ ಭೇದ ಇಲ್ಲ. ನಾವು ಎನ್ನುವ ಉದಾತ್ತ ಭಾವನೆ ಮಾತ್ರ ಇದೆ. ಇದೇ ನಿಜವಾದ ಗಣತಂತ್ರ, ನೈಜ ಪ್ರಜಾತಂತ್ರ.
26ರಂದು ನಾವು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡ ದಿನವನ್ನು ಆಚರಿಸುತ್ತಿದ್ದೇವೆ.. ಈ ಸಂವಿಧಾನ ನಮ್ಮನ್ನು, ಅಂದರೆ ಈ ದೇಶದ ಕಟ್ಟಕಡೆಯ ಮನುಷ್ಯನನ್ನೂ ಒಳಗೊಂಡಂತಹ ಪ್ರಜೆಗಳನ್ನು, ಸಾರ್ವಭೌಮ ಪ್ರಜೆಗಳು ಎಂದೇ ಪರಿಗಣಿಸುತ್ತದೆ. ಈ ಸಾರ್ವಭೌಮತ್ವವೇ ಪ್ರಜಾತಂತ್ರದ ಅಂತಃಸತ್ವ ಎನ್ನುವುದನ್ನು ಆಳುವ ವರ್ಗಗಳು, ಜನಪ್ರತಿನಿಧಿಗಳು, ಆಳುವವರ ಭಟ್ಟಂಗಿಗಳು, ವಂದಿಮಾಗಧರು ಮತ್ತು ತಮ್ಮ ಸ್ವಂತಿಕೆಯನ್ನೇ ಕಳೆದುಕೊಂಡಿರುವ ಮಾಧ್ಯಮಗಳು, ಸುದ್ದಿಮನೆಗಳು ಅರ್ಥಮಾಡಿಕೊಳ್ಳಬೇಕಿದೆ. ತಮ್ಮ ಜೀವನೋಪಾಯದ ಹಕ್ಕುಗಳಿಗಾಗಿ, ಬದುಕುವ ಹಕ್ಕುಗಳಿಗಾಗಿ ಹೋರಾಡುವ ಜನರಲ್ಲಿ ವಿಧ್ವಂಸಕರನ್ನು ಕಾಣುವ ವಿಕೃತ ಮನೋಭಾವದಿಂದ ಈ ವರ್ಗ ಹೊರಬರಬೇಕಿದೆ. ಇಂದು ರೈತರು, ನಾಳೆ ಕಾರ್ಮಿಕರು ಮತ್ತೊಂದು ದಿನ ಸಮಸ್ತ ಶೋಷಿತರು.
ಶೋಷಕ ವ್ಯವಸ್ಥೆಯಲ್ಲಿ ಶೋಷಣೆಯ ಬಿಂದುಗಳು ತೊಟ್ಟಿಕ್ಕುತ್ತಲೇ ಕೆಳಹಂತವನ್ನು ನಿಧಾನವಾಗಿ ತಲುಪುತ್ತವೆ. ನೆಲಮಟ್ಟದಿಂದ ಆರಂಭವಾಗುವ ಶೋಷಣೆಯ ಹೆಜ್ಜೆಗಳು ಪಾತಾಳ ತಲುಪುವವರೆಗೂ ಜೀವಂತವಾಗಿರುತ್ತವೆ. ನೆಲದ ಮೇಲಿರುವವರು ಇದರ ಬಿಸಿ ತಮಗೆ ತಟ್ಟುವುದಿಲ್ಲ ಎಂದು ಭಾವಿಸುವುದು ಮೂರ್ಖತನವಾಗುತ್ತದೆ. ಏಕೆಂದರೆ ಶೋಷಣೆಗೆ ಹಲವು ಮುಖಗಳಿವೆ, ಹಲವು ಆಯಾಮಗಳೂ ಇವೆ. ಶೋಷಕರಿಗೆ ವಿಭಿನ್ನ ಮುಖವಾಡಗಳೂ ಇರುತ್ತವೆ. ಶೋಷಣೆಗೊಳಗಾಗುವವರಿಗೆ ಇರುವುದು ಒಂದೇ ಮುಖ. ಅದು ಶೋಷಿತರದ್ದು. ರೈತ ಚಳುವಳಿ ಇದನ್ನು ಸ್ಪಷ್ಟಪಡಿಸಿದೆ. ಟ್ರಾಕ್ಟರ್ ಪೆರೇಡ್ ಇದನ್ನು ಸಾಂಕೇತಿಕವಾಗಿ ಧೃಡೀಕರಿಸುತ್ತದೆ.
26ರಂದು ನಡೆಯಲಿರುವ ಜನಗಣರಾಜ್ಯೋತ್ಸವ ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಒಂದು ಹೊಸ ಆಯಾಮವನ್ನು ನೀಡುವ ಜನಾಂದೋಲನವಾಗಿ ರೂಪುಗೊಳ್ಳಲಿದೆ. ಈ ಸದಾಶಯದೊಂದಿಗೆ ಮುನ್ನಡೆಯೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

