ದಿನದ ಸುದ್ದಿ
ಜನಗಣರಾಜ್ಯೋತ್ಸವದ ಸಂದೇಶಕ್ಕೆ ಕಿವಿಗೊಡೋಣ
- ನಾ ದಿವಾಕರ
ಕಳೆದ 60 ದಿನಗಳಿಂದ ದೆಹಲಿಯ ಸುತ್ತಲೂ ಬೀಡುಬಿಟ್ಟಿರುವ ದೇಶದ ರೈತ ಸಮುದಾಯದ ದಿಟ್ಟ ಹೋರಾಟಕ್ಕೆ ಕೊನೆಗೂ ಆಡಳಿತ ವ್ಯವಸ್ಥೆ ಮಣಿದಿದೆ. ಗಣರಾಜ್ಯೋತ್ಸವ ದಿನದಂದು ರೈತರು ರಾಜಧಾನಿ ದೆಹಲಿಯಲ್ಲಿ ಟ್ರಾಕ್ಟರ್ ಮೆರವಣಿಗೆಯ ಮೂಲಕ ಜನಗಣರಾಜ್ಯೋತ್ಸವ ಆಚರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇಡೀ ದೇಶದಲ್ಲಿ ಹೋರಾಟದ ಅಲೆಗಳನ್ನು ಸೃಷ್ಟಿಸಿದೆ.
ಟ್ರಾಕ್ಟರ್ ಪೆರೇಡ್ಗೆ ಅನುಮತಿ ನೀಡುವುದಿಲ್ಲ ಎಂಬ ಹಠಮಾರಿ ಧೋರಣೆಯಿಂದ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸ್ ಇಲಾಖೆ ಹಿಂದೆ ಸರಿದಿದ್ದರೆ ಅದು ಔದಾರ್ಯವೇನೂ ಅಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಾಗ್ರಹಕ್ಕೆ ಎಂತಹುದೇ ಸರ್ಕಾರವಾದರೂ ಮಣಿಯಲೇಬೇಕು ಎನ್ನುವುದನ್ನು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕಿದೆ. ರೈತರ ಟ್ರಾಕ್ಟರ್ ಪೆರೇಡ್ನಲ್ಲಿ ಎರಡು ಲಕ್ಷ ಟ್ರಾಕ್ಟರ್ಗಳ ಮೆರವಣಿಗೆಯೇ ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಲಿದೆ. ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸರ್ಕಾರವೂ ಸೇರಿದಂತೆ ಬಿಜೆಪಿ ಆಡಳಿತದ ಎಲ್ಲ ರಾಜ್ಯಗಳಲ್ಲಿ ಈ ಜನಗಣರಾಜ್ಯೋತ್ಸವಕ್ಕೆ ಅಡ್ಡಿ ಆತಂಕ ಉಂಟುಮಾಡುವ ಪ್ರಯತ್ನಗಳು ನಡೆದಿವೆ. ಉತ್ತರಪ್ರದೇಶದ ಪೆಟ್ರೋಲ್ ಬಂಕ್ ಗಳಲ್ಲಿ ಟ್ರಾಕ್ಟರ್ ಗಳಿಗೆ ಪೆಟ್ರೋಲ್/ಡೀಸೆಲ್ ನೀಡುವುದಿಲ್ಲ ಎಂಬ ಬೋರ್ಡ್ಗಳನ್ನು ನೇತುಹಾಕಲಾಗಿದೆ. ಕರ್ನಾಟಕದ ಬೆಳಗಾವಿಯಲ್ಲಿ ಬೆಂಗಳೂರಿಗೆ ಹೊರಟಿದ್ದ ರೈತರ ಟ್ರಾಕ್ಟರ್ ಗಳನ್ನು ವಶಪಡಿಸಿಕೊಳ್ಳುವ ಬೆದರಿಕೆ ಹಾಕಲಾಗಿದೆ.
ದೆಹಲಿಯ ಸುತ್ತ ನೆರೆದಿರುವ ರೈತರ ಮುಷ್ಕರವನ್ನು ಭಂಗಗೊಳಿಸಲು ಸಾಕಷ್ಟು ವಿಧ್ವಂಸಕ ಪ್ರಯತ್ನಗಳು ನಡೆದಿವೆ. ಲಕ್ಷಾಂತರ ರೈತರು ಸೇರಿರುವ ಕಡೆ ಪ್ರಕ್ಷುಬ್ಧ ವಾತಾವರಣ ಉಂಟುಮಾಡಲು, ಗಲಭೆ ಸೃಷ್ಟಿಸಲು ಸಂಚು ನಡೆಸಿದ್ದನ್ನು ರೈತರೇ ಕಂಡುಹಿಡಿದು, ಈ ಕೃತ್ಯಕ್ಕೆ ಮುಂದಾಗಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂತಹ ಮೂರು ನಾಲ್ಕು ಘಟನೆಗಳು ಈಗಾಗಲೇ ನಡೆದಿವೆ.
ದೆಹಲಿಯಲ್ಲಿ ನೆರೆದಿರುವುದು ರೈತರೇ ಅಲ್ಲ ಎಂದಿದ್ದಾಯಿತು, ದಲ್ಲಾಳಿಗಳು , ಕಾಂಗ್ರೆಸ್ ಏಜೆಂಟರು ಎಂದು ಹೀಗಳೆದಿದ್ದಾಯಿತು. ಇದು ವಿರೋಧ ಪಕ್ಷಗಳ ಕುಮ್ಮಕ್ಕು, ಪಿತೂರಿ ಎಂದು ಆರೋಪ ಹೊರಿಸಿದ್ದಾಯಿತು. ದೆಹಲಿಯ ಸುತ್ತ ಐದು ಗಡಿಗಳಲ್ಲಿ ರಸ್ತೆ ಕಂದಕಗಳನ್ನು ತೋಡಿ ಮಾರ್ಗ ಬಂದ್ ಮಾಡಲಾಯಿತು. ಬೃಹತ್ ಗಾತ್ರದ ಸಿಮೆಂಟ್ ಬ್ಯಾರಿಕೇಡ್, ಮುಳ್ಳು ತಂತಿ, ಜೆಸಿಬಿ ಹೀಗೆ ಕೃತಕ ಗೋಡೆಗಳನ್ನು ನಿರ್ಮಿಸುವ ಮೂಲಕ ರೈತರು ರಾಜಧಾನಿಗೆ ಪ್ರವೇಶಿಸದಂತೆ ತಡೆಹಿಡಿಯಲಾಯಿತು.
ರೈತರ ನಡುವೆ ಖಲಿಸ್ತಾನಿಗಳಿದ್ದಾರೆ, ಭಯೋತ್ಪಾದಕರಿದ್ದಾರೆ, ನಗರ ನಕ್ಸಲರಿದ್ದಾರೆ, ತುಕಡೆ ತುಕಡೆ ಗ್ಯಾಂಗ್ ಇದೆ, ಇಸ್ಲಾಮಿಕ್ ಉಗ್ರರಿದ್ದಾರೆ, ಹೀಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಲೇ ದೇಶದ ಜನಸಾಮಾನ್ಯರ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ, ಗೃಹ ಸಚಿವಾಲಯ, ಆಡಳಿತಾರೂಢ ಬಿಜೆಪಿ ಮತ್ತು ಸಂಘಪರಿವಾರ ಮತ್ತು ಅವರ ಬಾಲಂಗೋಚಿ ಸಂಘಟನೆಗಳು, ಚಿಂತಕರು ಹುಯಿಲೆಬ್ಬಿಸಿದ್ದೂ ಆಯಿತು.
ಆದರೆ ಈ ಎಲ್ಲ ಆರೋಪಗಳನ್ನೂ ತಮ್ಮ ಶಾಂತಿಯುತ, ಪ್ರಜಾಸತ್ತಾತ್ಮಕ ಹೋರಾಟದ ಮೂಲಕ, ತಮ್ಮ ದಿಟ್ಟ ಛಲ, ಬದ್ಧತೆ ಮತ್ತು ಶಿಸ್ತುಬದ್ಧ ನಡವಳಿಕೆಯ ಮೂಲಕ ರೈತ ಸಮುದಾಯ ಒಮ್ಮೆಲೆ ತೊಡೆದುಹಾಕಿದೆ. ಮುಷ್ಕರವನ್ನು ಭಂಗಗೊಳಿಸಲು ನ್ಯಾಯಾಂಗವನ್ನೂ ಬಳಸಿಕೊಂಡ ಕೇಂದ್ರ ಸರ್ಕಾರ ,ನ್ಯಾಯಾಲಯದ ಮೂಲಕ ಕೃಷಿ ಮಸೂದೆಗಳ ಬಗ್ಗೆ ಚರ್ಚಿಸಲು ಏಕಪಕ್ಷೀಯ ಸಮಿತಿಯನ್ನು ರಚಿಸಲೂ ಮುಂದಾಗಿತ್ತು. ಮಹಿಳೆಯರೇಕೆ ಮುಷ್ಕರದಲ್ಲಿದ್ದಾರೆ ಎಂದು ಕೇಳುವ ಮೂಲಕ ದೇಶದ ಸರ್ವೋಚ್ಚ ನ್ಯಾಯಾಲಯ ಹೋರಾಟವನ್ನು ಭಂಗಗೊಳಿಸುವ ಮತ್ತೊಂದು ಮಾರ್ಗವನ್ನು ಅನುಸರಿಸಿತ್ತು. ಒಂದೂವರೆ ವರ್ಷದ ಕಾಲ ಮಸೂದೆಗಳನ್ನು ಅಮಾನತಿನಲ್ಲಿಡುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನೂ ರೈತ ಸಂಘಟನೆಗಳು ತಿರಸ್ಕರಿಸಿದವು.
ಭಾರತದ ರೈತರ ಪಾಲಿಗೆ ಮತ್ತು ಜನಸಾಮಾನ್ಯರ ಪಾಲಿಗೆ ಮರಣಶಾಸನವಾಗಿರುವ ಮೂರು ಕೃಷಿ ಮಸೂದೆಗಳು ನೇಣುಗಂಬದಂತೆ ನಮ್ಮೆದುರು ನಿಂತಿವೆ. “ ಇಂದು ಗಲ್ಲಿಗೇರಿಸುವ ಬದಲು ಇನ್ನು ಎರಡು ವರ್ಷದ ನಂತರ ಗಲ್ಲಿಗೇರಿಸುತ್ತೇವೆ ” (ಖ್ಯಾತ ಚಿಂತಕ ಶಿವಸುಂದರ್ ಅವರ ಮಾತುಗಳು) ಎನ್ನುವ ಕೇಂದ್ರ ಸರ್ಕಾರದ ವಿಕೃತ ಧೋರಣೆಗೆ ರೈತ ಸಂಘಟನೆಗಳು ಜಗ್ಗದೆ ಇರುವುದೇ ಜನಪರ ಹೋರಾಟಕ್ಕೆ ಸಂದ ದಿಗ್ವಿಜಯ. ಈ ಹೋರಾಟ ದೇಶದ ಶ್ರಮಜೀವಿಗಳಿಗೆ, ಕಾರ್ಮಿಕರಿಗೆ ಮತ್ತು ಶೋಷಿತ ಜನಸಮುದಾಯಗಳಿಗೆ ಹೊಸ ಶಕ್ತಿ ನೀಡುವ ಒಂದು ಜನಾಂದೋಲನವಾಗಿ ರೂಪುಗೊಂಡಿದೆ. ಜನಗಣರಾಜ್ಯೋತ್ಸವ ಮತ್ತು ಟ್ರಾಕ್ಟರ್ ಪೆರೇಡ್ಗೆ ದೇಶಾದ್ಯಂತ ದೊರೆಯುತ್ತಿರುವ ಜನಬೆಂಬಲವೇ ಇದಕ್ಕೆ ಸಾಕ್ಷಿಯಾಗಿದೆ.
ಇಷ್ಟಾಗಿಯೂ ಈ ಮಸೂದೆಗಳು ಜನಪರವಾಗಿವೆ, ಇದನ್ನು ವಿರೋಧಿಸುವವರು ದೇಶದ್ರೋಹಿಗಳು ಎಂದು ವಾದಿಸುವ ಒಂದು ವರ್ಗ ನಮ್ಮ ನಡುವೆ ಇರುವುದು ದುರಂತ. ಒಬ್ಬ ವ್ಯಕ್ತಿಯ ಸುತ್ತ ಪ್ರಭಾವಳಿಯನ್ನು ಸೃಷ್ಟಿಸುವುದು, ವ್ಯಕ್ತಿ ಆರಾಧನೆಯನ್ನು ಪೋಷಿಸುವುದು ಮತ್ತು ಅಂಧ ಅನುಸರಣೆ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗುತ್ತದೆ ಎಂದು ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದುದನ್ನು ಇಲ್ಲಿ ಸ್ಮರಿಸಬೇಕಾಗುತ್ತದೆ. ದೆಹಲಿಯ ಸುತ್ತ ನೆರೆದಿರುವ ಮುಷ್ಕರ ನಿರತರು ರೈತರೇ ಅಲ್ಲ ದಲ್ಲಾಳಿಗಳು ಎಂದು ವಾದಿಸುವ ಅಪ್ರಬುದ್ಧ ಸುಶಿಕ್ಷಿತರಿಗೆ, ಹಿತವಲಯದ ವಂದಿಮಾಗಧರಿಗೆ ಈ 26ರಂದು ನಡೆಯುವ ಪರ್ಯಾಯ ಗಣರಾಜ್ಯೋತ್ಸವ ಅಥವಾ ಜನಗಣರಾಜ್ಯೋತ್ಸವ ತಕ್ಕ ಉತ್ತರ ನೀಡಲಿದೆ.
ಇಂದು ಈ ‘ ದಲ್ಲಾಳಿಗಳಿಗೇ ’ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ಈ ‘ ದಲ್ಲಾಳಿಗಳ ’ ಆಗ್ರಹಗಳಿಗೆ ಕೇಂದ್ರ ಸರ್ಕಾರ ಮಣಿದಿದೆ. ಈ ‘ ದಲ್ಲಾಳಿಗಳ ’ ಟ್ರಾಕ್ಟರ್ ಪೆರೇಡ್ಗೆ ದೆಹಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಆತ್ಮನಿರ್ಭರ ಭಾರತದ ಭ್ರಮಾಲೋಕದಲ್ಲಿ ತೇಲಾಡುತ್ತಿರುವ ಹಿತವಲಯದ ಸುಶಿಕ್ಷಿತರು, ಇದೇ 26ರಂದು ತಾವು ಪರಿಭಾವಿಸಿರುವ ಖಲಿಸ್ತಾನಿಗಳು-ಭಯೋತ್ಪಾದಕರು-ನಗರ ನಕ್ಸಲರು- ಉಗ್ರರು-ತುಕಡೆ ತುಕಡೆ ಗುಂಪುಗಳು, ಭಾರತದ ತ್ರಿವರ್ಣ ಧ್ವಜವನ್ನು ಹೊತ್ತು ಲಕ್ಷ ಲಕ್ಷ ಸಂಖ್ಯೆಯಲ್ಲಿ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ದನಿ ಎತ್ತುವ ಒಂದು ಅದ್ಭುತ ಪ್ರದರ್ಶನವನ್ನು ನೋಡಲಿದ್ದಾರೆ.
ಈ ಪ್ರದರ್ಶನ ಮನರಂಜನೆಯಲ್ಲ, ದೇಶಭಕ್ತಿಯ ಉನ್ಮಾದದಲ್ಲಿ ಕುಣಿದು ಕುಪ್ಪಳಿಸುವ ಪ್ರಹಸನವಲ್ಲ, ಸೇನಾಬಲ-ಪ್ರಭುತ್ವದ ಸಾಮರ್ಥ್ಯ ಪ್ರದರ್ಶಿಸುವ ಮೆರವಣಿಗೆಯಲ್ಲ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲಿ, ಗಣತಂತ್ರದಲ್ಲಿ ಸಾರ್ವಭೌಮ ಪ್ರಜೆಗಳಿಗೆ ಇರುವ ಶಕ್ತಿ ಪ್ರದರ್ಶನ. ಇದು ಅಭೂತಪೂರ್ವ, ಚಾರಿತ್ರಿಕ ಮತ್ತು ಭವಿಷ್ಯದ ದೃಷ್ಟಿಯಿಂದ ಮಹತ್ತರವಾದ ಒಂದು ಘಳಿಗೆ.
ಈ ಶಕ್ತಿ ಪ್ರದರ್ಶನದ ಹಿಂದೆ ದಮನಿಸುವ ದನಿ ಇಲ್ಲ, ಕೂಡಿ ಬಾಳುವ ದನಿ ಇದೆ. ವಿಧ್ವಂಸಕ ಛಾಯೆ ಇಲ್ಲ ಸೌಹಾರ್ದತೆಯ ಧ್ವನಿ ಇದೆ. ಗುಂಡಿಟ್ಟು ಕೊಲ್ಲುವ ಮನಸುಗಳಿಲ್ಲ, ಪರಸ್ಪರ ಅಪ್ಪಿಕೊಂಡು ಬದುಕುವ ಪ್ರೀತಿ ಇದೆ. ಅನ್ಯರ ಚಿಂತನೆ ಇಲ್ಲ ಐಕ್ಯತೆಯ ಭಾವ ಇದೆ. ನಾವು-ಅವರು ಎನ್ನುವ ಭೇದ ಇಲ್ಲ. ನಾವು ಎನ್ನುವ ಉದಾತ್ತ ಭಾವನೆ ಮಾತ್ರ ಇದೆ. ಇದೇ ನಿಜವಾದ ಗಣತಂತ್ರ, ನೈಜ ಪ್ರಜಾತಂತ್ರ.
26ರಂದು ನಾವು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡ ದಿನವನ್ನು ಆಚರಿಸುತ್ತಿದ್ದೇವೆ.. ಈ ಸಂವಿಧಾನ ನಮ್ಮನ್ನು, ಅಂದರೆ ಈ ದೇಶದ ಕಟ್ಟಕಡೆಯ ಮನುಷ್ಯನನ್ನೂ ಒಳಗೊಂಡಂತಹ ಪ್ರಜೆಗಳನ್ನು, ಸಾರ್ವಭೌಮ ಪ್ರಜೆಗಳು ಎಂದೇ ಪರಿಗಣಿಸುತ್ತದೆ. ಈ ಸಾರ್ವಭೌಮತ್ವವೇ ಪ್ರಜಾತಂತ್ರದ ಅಂತಃಸತ್ವ ಎನ್ನುವುದನ್ನು ಆಳುವ ವರ್ಗಗಳು, ಜನಪ್ರತಿನಿಧಿಗಳು, ಆಳುವವರ ಭಟ್ಟಂಗಿಗಳು, ವಂದಿಮಾಗಧರು ಮತ್ತು ತಮ್ಮ ಸ್ವಂತಿಕೆಯನ್ನೇ ಕಳೆದುಕೊಂಡಿರುವ ಮಾಧ್ಯಮಗಳು, ಸುದ್ದಿಮನೆಗಳು ಅರ್ಥಮಾಡಿಕೊಳ್ಳಬೇಕಿದೆ. ತಮ್ಮ ಜೀವನೋಪಾಯದ ಹಕ್ಕುಗಳಿಗಾಗಿ, ಬದುಕುವ ಹಕ್ಕುಗಳಿಗಾಗಿ ಹೋರಾಡುವ ಜನರಲ್ಲಿ ವಿಧ್ವಂಸಕರನ್ನು ಕಾಣುವ ವಿಕೃತ ಮನೋಭಾವದಿಂದ ಈ ವರ್ಗ ಹೊರಬರಬೇಕಿದೆ. ಇಂದು ರೈತರು, ನಾಳೆ ಕಾರ್ಮಿಕರು ಮತ್ತೊಂದು ದಿನ ಸಮಸ್ತ ಶೋಷಿತರು.
ಶೋಷಕ ವ್ಯವಸ್ಥೆಯಲ್ಲಿ ಶೋಷಣೆಯ ಬಿಂದುಗಳು ತೊಟ್ಟಿಕ್ಕುತ್ತಲೇ ಕೆಳಹಂತವನ್ನು ನಿಧಾನವಾಗಿ ತಲುಪುತ್ತವೆ. ನೆಲಮಟ್ಟದಿಂದ ಆರಂಭವಾಗುವ ಶೋಷಣೆಯ ಹೆಜ್ಜೆಗಳು ಪಾತಾಳ ತಲುಪುವವರೆಗೂ ಜೀವಂತವಾಗಿರುತ್ತವೆ. ನೆಲದ ಮೇಲಿರುವವರು ಇದರ ಬಿಸಿ ತಮಗೆ ತಟ್ಟುವುದಿಲ್ಲ ಎಂದು ಭಾವಿಸುವುದು ಮೂರ್ಖತನವಾಗುತ್ತದೆ. ಏಕೆಂದರೆ ಶೋಷಣೆಗೆ ಹಲವು ಮುಖಗಳಿವೆ, ಹಲವು ಆಯಾಮಗಳೂ ಇವೆ. ಶೋಷಕರಿಗೆ ವಿಭಿನ್ನ ಮುಖವಾಡಗಳೂ ಇರುತ್ತವೆ. ಶೋಷಣೆಗೊಳಗಾಗುವವರಿಗೆ ಇರುವುದು ಒಂದೇ ಮುಖ. ಅದು ಶೋಷಿತರದ್ದು. ರೈತ ಚಳುವಳಿ ಇದನ್ನು ಸ್ಪಷ್ಟಪಡಿಸಿದೆ. ಟ್ರಾಕ್ಟರ್ ಪೆರೇಡ್ ಇದನ್ನು ಸಾಂಕೇತಿಕವಾಗಿ ಧೃಡೀಕರಿಸುತ್ತದೆ.
26ರಂದು ನಡೆಯಲಿರುವ ಜನಗಣರಾಜ್ಯೋತ್ಸವ ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಒಂದು ಹೊಸ ಆಯಾಮವನ್ನು ನೀಡುವ ಜನಾಂದೋಲನವಾಗಿ ರೂಪುಗೊಳ್ಳಲಿದೆ. ಈ ಸದಾಶಯದೊಂದಿಗೆ ಮುನ್ನಡೆಯೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ2 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

