ಭಾವ ಭೈರಾಗಿ
ಕನ್ನಡದ ಕಾವ್ಯ ಲೋಕದ ಗಾರುಡಿಗ
- ಜಗದೀಶ್ ಕೊಪ್ಪ
ಕನ್ನಡದ ಸಾಹಿತ್ಯದಲ್ಲಿ ನವೋದಯದ ಕಾಲಘಟ್ಟ ಅತ್ಯಂತ ಮಹತ್ವವಾದುದು. ಜೈನಸಾಹಿತ್ಯದ ಕೊಡುಗೆ ಎಂದು ಕರೆಯಬಹುದಾದ ಹಳೆಗನ್ನಡ ಕಾವ್ಯವು ಕನ್ನಡ ಸಾಹಿತ್ಯ ಮತ್ತು ಭಾಷೆ ಹಾಗೂ ಸಂಸ್ಕೃತಿಗೆ ಭದ್ರ ಬುನಾದಿ ಹಾಕಿದ ನಂತರ, ನವೋದಯ ಸಾಹಿತ್ಯದ ಕಾಲಘಟ್ಟವು ತನ್ನ ಆಧುನಿಕ ಪರಿಭಾಷೆಯ ಮೂಲಕ ಕಾವ್ಯ, ನಾಟಕ, ವಿಮರ್ಶೆ ಹೀಗೆ ಕನ್ನಡ ಸಾಹಿತ್ಯಲೋಕವನ್ನು ಸಮೃದ್ಧಿಗೊಳಿಸಿತು. ನವೋದಯ ಕಾಲಘಟ್ಟದ ಕಾವ್ಯವನ್ನು ಕನ್ನಡದ ಸಾಹಿತ್ಯದ ಸುವರ್ಣಕಾಲ ಎಂದು ಬಣ್ಣಿಸಬಹುದು.
ಬಿ.ಎಂ.ಶ್ರೀ ಅವರ ಇಂಗ್ಲೀಷ್ ಗೀತಗಳು ಕಾವ್ಯದ ಮೂಲಕ ಆರಂಭವಾದ ನವೋದಯಕಾವ್ಯವನ್ನು ಬೇಂದ್ರೆ, ಕುವೆಂಪು, ಪು.ತಿ.ನ. ಮುಂತಾದ ದಿಗ್ಗಜರು ಕಾವ್ಯದ ಭಾಷೆ, ವಸ್ತು, ನಿರೂಪಣೆಯ ವೈವಿಧ್ಯತೆಯಿಂದ ಶ್ರೀಮಂತಗೊಳಿಸಿದರು. ನವೋದಯ ಕಾವ್ಯದ ಪ್ರಮುಖ ಕವಿಗಳಲ್ಲಿ ದ.ರಾ.ಬೇಂದ್ರೆ ಅತ್ಯಂತ ಪ್ರಮುಖರಾದವರು.
ಆ ಕಾಲದ ಪ್ರತಿಯೊಬ್ಬ ಬರಹಗಾರರ ಮೇಲೆ ಕನ್ನಡ ಸಾಹಿತ್ಯವನ್ನು ಪುನರುಜ್ಜೀವನಗೊಳಿಸುವ ನೈತಿಕ ಜವಾಬ್ದಾಯಿತ್ತು. ಹಾಗಾಗಿ ಬೇಂದ್ರೆ, ಕುವೆಂಪು ಆದಿಯಾಗಿ ಪ್ರತಿಯೊಬ್ಬ ಲೇಖಕನೂ ತನಗೆ ಇಷ್ಟವಾದ ಪ್ರಕಾರದ ಜೊತೆಗೆ ಇತರೆ ಪ್ರಕಾರಗಳಲ್ಲಿಯೂ ತೊಡಗಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿತ್ತು. ಈ ಕಾರಣಕ್ಕಾಗಿ ಬೇಂದ್ರೆ ಮತ್ತು ಕುವೆಂಪುರಂತಹ ಮಹಾನ್ ಕವಿಗಳು ಕಾವ್ಯದ ಜೊತೆ ಜೊತೆಯಲ್ಲಿ ನಾಟಕ, ವಿಮರ್ಶೆ. ಗದ್ಯ ಮುಂತಾದ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದರು.
ದ.ರಾ. ಬೇಂದ್ರೆಯವದು ಕಾವ್ಯ ಸೃಷ್ಟಿಯಲ್ಲಿ ವಿರಾಟ್ ಸ್ವರೂಪ ಎಂದು ಬಣ್ಣಿಸಬಹುದು. ಅವರು ತಮ್ಮ ಕಾವ್ಯ ಸೃಷ್ಟಿಗೆ ಬಳಸಿಕೊಂಡ ಭಾಷೆ, ಛಂದಸ್ಸು, ಲಯ, ವಸ್ತು ಎಲ್ಲವೂ ದೇಸಿಗುಣಗಳಿಂದ ಕೂಡಿರುವುದು ವಿಶೇಷ. ಹಾಗಾಗಿ ಬೇಂದ್ರೆಯವರ ಕಾವ್ಯಗಳು ಕೇವಲ ಹಾಳೆಯ ಮೇಲಿನ ಕವಿತೆಗಳಾಗಿರದೆ, ಜನಸಾಮಾನ್ಯರ ನಾಲಿಗೆಯ ಮೇಲೆ ಹಾಡುಗಳಾಗಿ ಅನುರಣಿಸಿದವು.
ಕನ್ನಡ ಭಾಷೆಯ ಬಂಧ, ಲಯ, ನುಡಿಗಟ್ಟು ಇವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಬಿ.ಎಂ.ಶ್ರೀ.ಯವರ ಇಂಗ್ಲೀಷ್ ಗೀತಗಳ ಪ್ರಭಾವದಿಂದ ಕಾವ್ಯ ಸೃಷ್ಟಿಗೆ ತೊಡಗಿದ ಕುವೆಂಪು ಮತ್ತು ಪು.ತಿ.ನ. ಅವರ ಕಾವ್ಯದ ಅಭಿವ್ಯಕ್ತಿಗೂ ಹಾಗೂ ಕನ್ನಡದ ದೇಶಿ ಪರಂಪರೆಯಿಂದ ಅಂದರೆ, ಲಾವಣಿ,ತತ್ವಪದ, ಜಾನಪದಗೀತೆಗಳಿಂದ ಪ್ರಭಾವಿತರಾದ ಮಧುರಚೆನ್ನ, ಬೇಂದ್ರೆ, ಆನಂದಕವಿ ಮುಂತಾದ ಕವಿಗಳ ಕಾವ್ಯರಚನೆಯಲ್ಲಿರುವ ಭಿನ್ನತೆಯನ್ನು ನಾವು ಕಾಣಬಹುದು.
ಕನ್ನದ ಕಾವ್ಯದ ಸಂದರ್ಭದಲ್ಲಿ ದ.ರಾ.ಬೇಂದ್ರೆಯವರ ರೀತಿಯಲ್ಲಿ ತಮ್ಮ ಭಾವನೆಗಳ ಅಭಿವ್ಯಕ್ತಿಗೆ ಕಾವ್ಯ ಪ್ರಕಾರವನ್ನು ಪರಿಣಾಮಕಾರಿಯಾಗಿ ಬಳಸಿದ ಕವಿ ಮತ್ತೊಬ್ಬರಿಲ್ಲ. ತಮ್ಮ ಬದುಕಿನ ಸುಖ,ಧುಃಖಗಳಿಂದ ಹಿಡಿದು, ಮನಸ್ಸು ಪ್ರಫುಲ್ಲವಾಗಿದ್ದ ಸಂದರ್ಭದಲ್ಲಿ ತಾವು ಕಂಡ ಲೋಕದ ಎಲ್ಲಾ ಸಂಗತಿಗಳನ್ನು ಕಾವ್ಯದಲ್ಲಿ ಹಿಡಿದಿಡಬೇಕೆಂಬ ದೀಕ್ಷೆ ತೊಟ್ಟವರಂತೆ ಬೇಂದ್ರೆಯವರು ನಮಗೆ ಕಾಣುತ್ತಾರೆ. ಕಾವ್ಯ ಸೃಷ್ಟಿಗೆ ಬೇಂದ್ರೆಯವರಿಗೆ ಇಂತಹದ್ದೇ ಎನ್ನುವ ನಿರ್ಧಿಷ್ಟ ಕಾರಣ ಬೇಕಾಗಿರಲಿಲ್ಲ.
ಕವಿ ಜೀವದ ಬ್ಯಾಸರ ಹರಿಸಾಕ
ಹಾಡ ನುಡಿಸಾಕ
ಹೆಚ್ಚಿಗೇನು ಬೇಕಾ?
ಒಂದು ಹೂತ ಹುಣಿಸ ಮರ ಸಾಕಾ.
ಇದು ಬೇಂದ್ರೆ ಎಂಬ ಕಾವ್ಯ ಗಾರುಡಿಗ ಜೀವನದ ದೃಷ್ಟಿ ಕೋನ. ತಮ್ಮ ಜೀವಿತಾವಧಿಯಲ್ಲಿ ಒಟ್ಟು ಮುವತ್ತೇಳು ಕವನ ಸಂಕಲಗಳನ್ನು ಹೊರತಂದಿರುವ ಬೇಂದ್ರೆಯವರು ಕಾವ್ಯವನ್ನೇ ಉಸಿರಾಡಿದ ಅಪರೂಪದ ಕನ್ನಡದ ಕವಿ ಎಂದು ನಿಸ್ಸಂದೇಹವಾಗಿ ಹೇಳಬಹುದು.
ಪಾದ ಪದ್ಧತಿಯಲಿ ಪದ ಕೂಡಿ ಬರುವಾಗ
ಯಾರಾರ ಗುರು-ಲಯ ಎಣಿಸುವರೆ
ಯಾವ ರಾಗವೆಂದರು ಯಾರಾಗ ಕೇಳುವರು
ಅನುರಾಗವನುರಣಿಸಿ ತಣಿಸುತಿರೆ
ಎಂದು ಬಲವಾಗಿ ನಂಬಿದ್ದ ಬೇಂದ್ರೆಯುವರು ಇಡೀ ಜಗತ್ತು ಮತ್ತು ಅದರ ಲೋಕ ವ್ಯವಹಾರವನ್ನು ಕಾವ್ಯದ ಕಣ್ಣಿನಿಂದ ನೋಡಿದವರು. ಅವರ ಪಾಲಿಗೂ ಕನಿಷ್ಟ ಅಥವಾ ತುಚ್ಛ ಎಂಬುದು ಯಾವುದೂ ಇರಲಿಲ್ಲ.
ಇಳೆ ಎಂದರೆ ಬರಿ ಮಣ್ಣಲ್ಲ
ನಮಗೋ ನೋಡುವ ಕಣ್ಣಿಲ್ಲ
ಏನು ತಿಂದರೂ ತೀರದಿದೆ
ಏನು ತುಂಬಿಯೂ ಮೀರದಿದೆ
ಎಂಬ ತಮ್ಮ ಜೀವನ ದೃಷ್ಟಿಕೋನವನ್ನು ಬದುಕಿನುದ್ದಕ್ಕು ಬಲವಾಗಿ ಪ್ರತಿಪಾದಿಸಿಕೊಂಡು ಬಂದವರು.
ಬೇಂದ್ರೆಯ ಹುಟ್ಟಿದ ಪರಿಸರ, ಬೆಳೆದ ಸಂಸ್ಕೃತಿ ಇವೆಲ್ಲವೂ ವೈದಿಕ ಪರಂಪರೆಗೆ ಸೇರಿದ ಕಾರಣ ಅವರಲ್ಲಿ ಆಸ್ತಿಕತೆ ಮನೆ ಮಾಡಿತ್ತು ನಿಜ. ಆದರೆ, ಆಸ್ತಿಕತೆಯನ್ನು ಮೀರುವಂತಹ ಅನುಭಾವ ಪ್ರಜ್ಞೆ ಮತ್ತು ಅಲೌಕಿಕತೆಯ ದೃಷ್ಟಿಕೋನ ಅವರಲ್ಲಿದ್ದ ಕಾರಣ ಅವರ ಬಹುತೇಕ ಕವಿತೆಗಳು ಎಲ್ಲಾ ಗಡಿಗಳನ್ನು ದಾಟಿ ಮನುಕುಲದ ಗೀತೆಗಳಂತೆ ಕನ್ನಡಿಗರ ಎದೆಯನ್ನು ಮುಟ್ಟಿವೆ.
ವೈಯಕ್ತಿಕ ಬದುಕಿನ ಕಷ್ಟ, ಸಾವು ಮತ್ತು ದುಃಖಗಳ ನಡುವೆ ಹಾಗೂ ಬದುಕಿನ ಅಭದ್ರತೆಯ ನಡುವೆಯೂ ಅವರ ಎದೆಯೊಳಗೆ ಅಪ್ರತಿಮ ಕಾವ್ಯ ಸೃಷ್ಟಿಯಾದದ್ದು ಹಾಗೂ ಬತ್ತದ ಚಿಲುಮೆಯಂತೆ ಅವರೊಳಗೆ ಜೀವಂತವಾಗಿದ್ದ ಸಂಗತಿ ಇಂದಿಗೂ ವಿಸ್ಮಯದ ಸಂಗತಿಯೇ ಸರಿ. ಪ್ರಕೃತಿಯ ಬಣ್ಣನೆಯೂ ಸೇರಿದಂತೆ, ಅವರ ಸಖಿಗೀತ ಮತ್ತು ವೈಯಕ್ತಿಕ ಬದುಕಿನ ದುರಂತದ ಸಮಯದಲ್ಲಿ ಅವರ ನೊಂದ ಎದೆಯೊಳಗೆ ಹುಟ್ಟಿದ ಕಾವ್ಯವನ್ನು ಗಮನಿಸಿದರೆ ಅಚ್ಚರಿಯಾಗುತ್ತದೆ.
ಬೆಳಗು ಕವಿತೆಯ ಮೂಲಕ ಕಾವ್ಯಾಸಕ್ತರನ್ನು ತಮ್ಮತ್ತ ಸೆಳೆದ ಬೇಂದ್ರೆಯವರು, ಹಕ್ಕಿ ಹಾರುತ್ತಿದೆ ನೋಡಿದಿರಾ ಕವಿತೆಯನ್ನು ಬರೆದು ಎಲ್ಲರಲ್ಲೂ ಬೆರಗು ಮೂಡಿಸಿದರು. ಇನ್ನು ಶ್ರಾವಣದ ಮಳೆ ಅದರಲ್ಲೂ ವಿಶೇಷವಾಗಿ ಧಾರವಾಡದ ಮಳೆ ಬೇಂದ್ರೆಯವರ ಕಾವ್ಯದ ಸ್ಪೂರ್ತಿಯ ಮೂಲ ಸೆಲೆಯಾಗಿತ್ತು.
ಶ್ರಾವಣ ಬಂತು ಕಾಡಿಗೆ, ಬಂತು ನಾಡಿಗೆ
ಬಂತು ಬೀಡಿಗೆ ಶ್ರಾವಣಾ ಬಂತು!
ಕಡಲಿಗೆ ಬಂತು ಶ್ರಾವಣಾ! ಕುಣಿದಾಂಗ ರಾವಣ
ಕುಣಿದಾವ ಗಾಳಿ ಭೈರವನ ರೂಪ ತಾಳಿ
ಶ್ರಾವಣಾ ಬಂತು ಘಟ್ಟಕ ರಾಜ್ಯ ಪಟ್ಟಕ
ಬಾನ ಮಟ್ಟಕ
ಎಂದು ಹುಚ್ಚೆದ್ದು ಹಾಡು ಕುಣಿಯುವ ಮನಸ್ಸು ಬೇಂದ್ರೆಯವರದು. ಆದ್ದರಿಂದಲೇ ಕನ್ನಡಸ ಸಾಂಸ್ಕೃತಿಕ ಜಗತ್ತು ಅವರನ್ನು ಶ್ರಾವಣದ ಪ್ರತಿಭೆ ಎಂದು ಗುರುತಿಸಿ ಗೌರವಿಸಿದೆ. ಇದರ ಜೊತೆಗೆ ತಾವು ಬದುಕಿದ ಧಾರವಾಡದ ಸಾಧನಕೇರಿಯ ಪ್ರದೇಶ ಅವರ ಪಾಲಿನ ಭಾವ ವಿಹಾರದ ಲೋಕವಾಗಿತ್ತು. ಸೊಲ್ಲಾಪುರದಲ್ಲಿ ತಮ್ಮ ಹನ್ನೆರೆಡು ವರ್ಷಗಳ ಉಪನ್ಯಾಸಕ ವೃತ್ತಿಗೆ ವಿದಾಯ ಹೇಳಿ ಬರಿಗೈಲಿ ಧಾರವಾಡಕ್ಕೆ ಹಿಂತಿರುವಾಗ, ಸಾಧನಕೆರೆಯನ್ನು ಅವರು ತುಂಬು ಹೃದಯದಿಂದ ಬಣ್ಣಿಸುವುದು ಹೀಗೆ..
ಅಲ್ಲಿ ಸಂಪಿಗೆಯಿತ್ತು, ಪಾರಿಜಾತವಿತ್ತು
ಮಾವು ಮಲ್ಲಿಗೆಯಿತ್ತು ಮನೆಯೆದುರು
ಮಾವು ಮಲ್ಲಿಗೆಯಿತ್ತು ತೆಂಗಿತ್ತು, ಹಲಸಿತ್ತು
ನಿಂಬಿಯಾ ಇಂಬಿತ್ತು ಎಡೆಯೆಡೆಗೆ
ಹೊಬೆಯ ಹೂವಿನ ರಂಗವಲ್ಲಿಯ ಬಿಡಿಸಿ
ನೆರಳನು ನೀಡುತ ನಿಲ್ಲುವುದು
ಮುತ್ತುಗ, ಬೂರಲ ದೀಪಮಾಲೆಯ ಕಂಬ
ಗಗನದ ಬಯಲೊಳಗೆತ್ತುವುದು.
ಬೇಂದ್ರೆಯವರು ಸಾಧನಕೇರಿಯನ್ನು ನೆನೆದು ರೋಮಾಂಚನಗೊಳ್ಳುವುದು ಹಾಗೂ ಇದೇ ಪರಿಯಲ್ಲಿ ಕುವೆಂಪು ತಾವು ಹುಟ್ಟಿ ಬೆಳೆದ ಮಲೆನಾಡನ್ನು ನೆನೆದು “ಹೋಗುವೆನು ನಾ ನನ್ನ ಒಲುಮೆಯ ನಾಡಿಗೆ/ ಮಲೆಯ ನಾಡಿಗೆ, ಮಳೆಯ ಬೀಡಿಗೆ” ಎಂದು ಬಣ್ಣಿಸಿರುವದು ಕನ್ನಡದ ಕಾವ್ಯ ಲೋಕದಲ್ಲಿ ವಿಶಿಷ್ಟ ಹಾಗೂ ಗಮನಾರ್ಹ ಸಂಗತಿ.
ನನ್ನ ಓದಿನ ಮಿತಿಯಲ್ಲಿ ಹೇಳುವುದಾದರೆ, ಬೇಂದ್ರೆಯವರು ವೈಯಕ್ತಿನ ಬದುಕಿನ ದುರಂತದ ಕ್ಷಣಗಳಲ್ಲಿ ಬರೆದ ಕವಿತೆಗಳು ಕವಿಯೊಬ್ಬನ ಭಾವನೆಗಳ ಪರಕಾಷ್ಟೆಯ ಪ್ರತೀಕ ಎನಿಸುತ್ತವೆ. ದುಂಃಖದಲ್ಲಿ ಮನುಷ್ಯನ ಎದೆಯೊಳಗೆ ಭಾವನೆಗಳು ಸತ್ತುಹೋಗಿ ಶೋನ್ಯತೆ ಆವರಿಸುವಾಗ ಬೇಂದ್ರೆಯವರು ದುಃಖ ಮತ್ತು ಕಣ್ಣೀರಿಗೂ ಕವಿತೆಯ ರೂಪ ನೀಡಿರುವುದನ್ನು ನೋಡಿ ನಾನು ಹಲವು ಬಾರಿ ಕಣ್ಣಿರು ಹಾಕಿರುವುದುಂಟು.
ಬಾಲ್ಯದಲ್ಲಿ ಧಾರವಾಡದ ಕಾಮನ ಕಟ್ಟೆಯಲ್ಲಿ ಖಾನಾವಳಿ ನಡೆಸುತ್ತಾ ತಮ್ಮನ್ನು ಸಾಕಿ ಸಲುಹಿದ ಅಜ್ಜಿ ನಿಧನ ಹೊಂದಿದಾಗ ಅವರ ಅಂತ್ಯಕ್ರಿಯೆ ನೆರವೇರಿ ಮನೆಗೆ ಬರುವಾಗ ಬೇಂದ್ರೆಯಲ್ಲಿ ಎದೆಯಲ್ಲಿ ಹುಟ್ಟಿದ ಕಾವ್ಯದ ಸಾಲುಗಳಿವು.
ಮರಳಿದೆ ಮನೆಯತ್ತ ಮರುಳಂತೆ ನರಳಂತೆ
ಕರುಳೆಲ್ಲಾ ಕಡಲೊಳು ಕುದಿಯುತಿರೆ.
ಅದೇ ರೀತಿ ಎದೆಯುದ್ದ ಬೆಳೆದ ಪ್ರೀತಿಯ ಪುತ್ರ ರಾಮು ತೀರಿಕೊಂಡಾಗ; ನೊಂದು ಬೆಂದು ಹೋದ ಬೇಂದ್ರೆಯವರ ಹೃದಯ ತನ್ನನ್ನು ತಾನು ಸಂತೈಸಿಕೊಳ್ಳುವುದು ಹೀಗೆ
ಸತ್ತ ದಶರಥ ಇದ್ದ ರಾಮನಾಗಿ ಅತ್ತನು ಅಂದಿಗೆ
ಸತ್ತ ರಾಮಗೆ ಅತ್ತೇ ಅಳುವನು ಇರುವ ದತ್ತನು ಇಂದಿಗೆ.
ಬೇಂದ್ರೆಯವರ ದಾಂಪತ್ಯದ ಜೀವನದ ಸುಖ ದುಃಖಗಳು ಮತ್ತು ನೋವು ನಲಿವು ಅವರ ಸಖಿಗೀತದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ದಾಖಲಾಗಿವೆ.
ಬೇಂದ್ರೆಯವರ ಕಾವ್ಯ ಅಭಿವ್ಯಕ್ತಿಯಲ್ಲಿ ಇಲ್ಲಿ ಉತ್ತುಂಗಕ್ಕೇರಿದೆ ಎಂದರೆ ಅತಿಶಯೋಕ್ತಿಯ ಮಾತಲಾಗಲಾರದು.
ನಾನು ಬಡವಿ ಆತ ಬಡವ ಒಲುವೆ ನಮ್ಮ ಬದುಕು
ಬಳಸಿಕೊಂಡವದನೆ ನಾವು ಅದಕು ಇದಕು ಎದಕು
ಎಂದು ತಮ್ಮ ಬದುಕಿನ ಬಡತನವನ್ನು ಪ್ರೀತಿಯ ಮೂಲಕ ಹಂಚಿಕೊಂಡ ಪರಿಯನ್ನು ಬಣ್ಣಿಸುವ ಬೇಂದ್ರೆಯವರು ಅದೇ ತಮ್ಮ ಬಾಲ ಸಂಗಾತಿ ನಿಧನ ಹೊಂದಿದಾಗ “ ಹೋದ ಬುಧುವಾರ ಬರೋಲ್ದು” ಕವಿತೆಯಲ್ಲಿ ಹೀಗೆ ದಾಖಲಿಸಿದ್ದಾರೆ.
ನೀ ಹೊರಗ ಬಿದ್ದಿ ಅಮತ ಪುಕಾರು ಆತು
ನೀ ಒಳಗೆ ಅಂತಾ ಪಿಸು ಮಾತು
ಭಾಷೆ ಯಾವುದೇ ಆಗಿರಲಿ, ಯಾವುದೇ ಕವಿ ಬರೆದ ಕಾವ್ಯವೆಲ್ಲಾ ಉತ್ಕೃಷ್ಟ ಕವಿತೆಗಳೇ ಆಗಬೇಕೆಂಬ ನಿಯಮವಿಲ್ಲ. ಬರೆದ ನೂರು ಕವಿತೆಗಳಲ್ಲಿ ಕೇವಲ ಮೂರು ಕವಿತೆಗಳು ಜನಮಾನಸದಲ್ಲಿ ಶಾಶ್ವತವಾಗಿ ಉಳಿದುಕೊಂಡರೆ ಸಾಕು ಅವನು ಯಶಸ್ವಿ ಕವಿ ಎಂತಲೇ ಅರ್ಥ. ಈ ವಿಷಯದಲ್ಲಿ ದ.ರಾ. ಬೇಂದ್ರೆಯವರು ಯಶಸ್ವಿ ಕವಿ ಮಾತ್ರವಲ್ಲ ಜಗದ ಕವಿಯಾಗಿ, ಜನರ ಕವಿಯಾಗಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆ.
( ಜನವರಿ 31, 2021,ವರಕವಿ ಬೇಂದ್ರೆಯವರ 125 ನೇ ಜನ್ಮದಿನಾಚರಣೆಯ ವರ್ಷ. ಲೇಖಕಿ ಗೀತಾವಸಂತ್ ಮತ್ತು ಯುವ ಕವಿ ರಾಜುಕುಮಾರ್ ಮಡಿವಾಳ ಇವರು ಬೇಂದ್ರೆ ಕುರಿತಾಗಿ ಸಂಪಾದಿಸಿರುವ : ಕಂಡವರಿಗಷ್ಟೇ” ಕೃತಿಯು ನಾಳೆ ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. ಅದಕ್ಕಾಗಿ ಸಿದ್ಧಪಡಿಸಿದ ಲೇಖನವಿದು. 25 ವರ್ಷದ ಹಿಂದೆ ನಾನು ಬರೆದಿದ್ದ “ ಸಾಧನಕೇರಿಯ ಕಿಂದರಿ ಜೋಗಿಗೆ” ಎಂಬ ಕವಿತೆ ಅವರ ನೂರನೇ ವರ್ಷದ ಜನ್ಮದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ವಾರ್ತಾ ಇಲಾಖೆಯ ಜನಪದ ಮಾಸಿಕ ಪತ್ರಿಕೆಯಲ್ಲಿ ವಿಶೇಷ ಕವಿತೆಯಾಗಿ ಪ್ರಕಟವಾಗಿತ್ತು. – ಜಗದೀಶ್ ಕೊಪ್ಪ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ7 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ8 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ8 hours agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ8 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

