ದಿನದ ಸುದ್ದಿ
‘ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು..?’ : ರೈತ ಹೋರಾಟ ಕುರಿತು ಪಾಪ್ ಗಾಯಕಿ ರಿಹಾನ ಟ್ವೀಟ್..!
- ದಿನೇಶ್ ಕುಮಾರ್ ಎಸ್.ಸಿ.
ಇಷ್ಟೇ ಆಕೆ ಬರೆದದ್ದು. ಜತೆಗೆ ಸಿಎನ್ ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. ನೋಡನೋಡುತ್ತಿದ್ದಂತೆ ಅದು ಲಕ್ಷಾಂತರ ರೀಟ್ವೀಟ್ ಗಳಾದವು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು.
ಆಕೆ ರಿಹಾನಾ. ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿ. ಟ್ವಿಟರ್ ಒಂದರಲ್ಲೇ ಆಕೆಯ ಅನುಯಾಯಿಗಳ ಸಂಖ್ಯೆ ಹತ್ತು ಕೋಟಿ! ಒಂಭತ್ತು ಗ್ರಾಮಿ ಅವಾರ್ಡ್, ಹದಿಮೂರು ಅಮೆರಿಕನ್ ಮ್ಯೂಸಿಕ್ ಅವಾರ್ಡ್, ಹನ್ನೆರಡು ಬಿಲ್ ಬೋರ್ಡ್ ಮ್ಯೂಸಿಕ್ ಅವಾರ್ಡ್ ಜತೆಗೆ ಆರು ಗಿನ್ನೆಸ್ ದಾಖಲೆಗಳು ಈಕೆಯ ಮಡಿಲಲ್ಲಿವೆ! ಜಗತ್ತಿನ ಯಾವುದೇ ಮಹಿಳಾ ಸಂಗೀತಗಾರ್ತಿಗಿಂತ ಹೆಚ್ಚು ಶ್ರೀಮಂತೆ ಈಕೆ. ಟೈಂ ಮ್ಯಾಗಜೀನ್ ನ ಜಗತ್ತಿನ ಅತಿಹೆಚ್ಚು ಪ್ರಭಾವಶಾಲಿ ಸೆಲೆಬ್ರಿಟಿಗಳಲ್ಲಿ ಈಕೆ ಹಲವಾರು ವರ್ಷ ಖಾಯಂ ಸ್ಥಾನ ಪಡೆದಿದ್ದಾರೆ. ಆಕೆಯ ಆಸ್ತಿಯ ಒಟ್ಟು ಮೌಲ್ಯ ಎಷ್ಟು ಗೊತ್ತೇ? 600 ಮಿಲಿಯನ್ ಡಾಲರ್!
ರಿಹಾನಾ ಕೆರೆಬಿಯನ್ ದ್ವೀಪ ಸಮೂಹದ ಬಾರ್ಬಡೋಸ್ ಎಂಬ ದೇಶದವರು. ಆಕೆಯ ಬಾಲ್ಯವೇ ಆಘಾತಕಾರಿಯಾಗಿತ್ತು. ಕುಡುಕ ಅಪ್ಪ ದಿನವೂ ಈಕೆಯ ತಾಯಿಯನ್ನು ಹೊಡೆಯುತ್ತಿದ್ದ. ರಿಹಾನಾಗೆ ವಿಪರೀತ ತಲೆನೋವು. ಅಮ್ಮ ಅಕೌಂಟೆಂಟ್, ಅಪ್ಪ ವೇರ್ ಹೌಸ್ ಒಂದರ ಸೂಪರ್ ವೈಜರ್. ಸಣ್ಣ ವಯಸ್ಸಿನಲ್ಲೇ ರಿಹಾನ ಬಟ್ಟೆ ವ್ಯಾಪಾರ ಮಾಡುತ್ತಿದ್ದಳು.
ಕುಡುಕ ಅಪ್ಪ ಕೊಕೈನ್ ಗೆ ಅಡಿಕ್ಟ್ ಆಗಿದ್ದ. ಪ್ರತಿನಿತ್ಯ ಮನೆ ರಣರಂಗವಾಗುತ್ತಿತ್ತು, ರಿಹಾನಾಳ ತಲೆನೋವೂ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕೊನೆಗೊಂದು ದಿನ ಈಕೆಗೆ ಹದಿನಾಲ್ಕು ವರ್ಷವಾಗಿದ್ದಾಗ ಅಪ್ಪ-ಅಮ್ಮ ಬೇರೆಯಾದರು. ರಿಹಾನಾಳ ತಲೆನೋವು ಸಂಪೂರ್ಣ ನಿಂತುಹೋಯಿತು!
ರಿಹಾನಾಗೆ ಸಂಗೀತದಲ್ಲಿ ಆಸಕ್ತಿಯಿತ್ತು. ನೀವು ಹೆಸರಾಂತ ಕ್ರಿಕೆಟಿಗರಾದ ಕ್ರಿಸ್ ಜೋರ್ಡಾನ್, ಕಾರ್ಲೋಸ್ ಬ್ರಥ್ ವೈಟ್ ಹೆಸರು ಕೇಳಿರುತ್ತೀರಿ. ಅವರ ಜತೆಯಲ್ಲೇ ಈಕೆ ಶಾಲೆಯಲ್ಲಿ ಓದಿದವಳು. 2003ರಲ್ಲಿ ರಿಹಾನ ತನ್ನ ಇಬ್ಬರು ಗೆಳತಿಯರೊಂದಿಗೆ ಸೇರಿ ಸಣ್ಣ ತಂಡ ಮಾಡಿಕೊಂಡು ಸಂಗೀತಾಭ್ಯಾಸ ಆರಂಭಿಸಿದಳು. ಅಮೆರಿಕದ ಮ್ಯೂಸಿಕ್ ಪ್ರೊಡ್ಯೂಸರ್ ಇವಾನ್ ರೋಜರ್ಸ್ ಎಂಬಾತನ ಕಣ್ಣಿಗೆ ಬಿತ್ತು ಈ ತಂಡ. ಆ ನಂತರ ರಿಹಾನಾಳ ಬದುಕಲ್ಲಿ ನಡೆದಿದ್ದೆಲ್ಲ ಪವಾಡ. ಆಕೆ ಮುಟ್ಟಿದ್ದೆಲ್ಲ ಚಿನ್ನ. ಸಂಗೀತ ಜಗತ್ತು ಅವಳನ್ನು ಆರಾಧಿಸಿತು. ಆಕೆ ಇಡೀ ಜಗತ್ತು ಸುತ್ತಿದಳು.
ಹತ್ತಾರು ಮ್ಯೂಸಿಕ್ ಆಲ್ಬಮ್ ಗಳು ಜನಪ್ರಿಯವಾದವು. ಹಣ, ಪ್ರಶಸ್ತಿ, ಖ್ಯಾತಿ ಎಲ್ಲವೂ ಆಕೆಯನ್ನು ಮುತ್ತಿಕೊಂಡವು. 2008ರ ಫೆಬ್ರವರಿ 22 ರಂದು ಅಂದಿನ ಬಾರ್ಬಡೋಸ್ ಸರ್ಕಾರ ರಿಹಾನಾಗೆ ಗೌರವ ನೀಡಲೆಂದು “ರಿಹಾನಾ ದಿನಾಚರಣೆ” (ರಿಹಾನಾ ಡೇ) ಆಚರಿಸಿತು. ಅದಾದ ನಂತರ ಪ್ರತಿವರ್ಷ ಫೆ.22ರಂದು ಬಾರ್ಬಡೋಸ್ ದೇಶದಲ್ಲಿ ರಿಹಾನಾ ಡೇ ಆಚರಿಸಲಾಗುತ್ತಿದೆ. ಬದುಕಿರುವಾಗಲೇ, ಅದೂ ಇಷ್ಟು ಸಣ್ಣ ವಯಸ್ಸಿಗೆ ಇಂಥ ಗೌರವ ಎಷ್ಟು ಜನರಿಗೆ ಸಿಕ್ಕೀತು ಹೇಳಿ?
ಇಂಥ ರಿಹಾನಾ ಈಗ ಭಾರತೀಯ ರೈತರ ಪರವಾಗಿ ಮಾತನಾಡಿದ್ದಾರೆ, ಅದು ಈಗ ಜಾಗತಿಕ ಸುದ್ದಿ. ರಿಹಾನಾ ಬೆನ್ನಲ್ಲೇ ಹಲವು ಜಾಗತಿಕ ಸೆಲೆಬ್ರಿಟಿಗಳು ಭಾರತದ ರೈತರ ಪ್ರತಿಭಟನೆಗಳನ್ನು ಬೆಂಬಲಿಸಿ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ರೈತರ ಕೂಗಿಗೆ ಆನೆ ಬಲ ಬಂದಂತಾಗಿದೆ.
ಅಂದಹಾಗೆ ರಿಹಾನಾ ಈ ರೀತಿಯಲ್ಲಿ ಜಾಗತಿಕ ವಿದ್ಯಮಾನಗಳಿಗೆ ಸ್ಪಂದಿಸುವುದು ಹೊಸದೇನೂ ಅಲ್ಲ. ಸೂಡಾನ್, ನೈಜೀರಿಯಾಗಳಲ್ಲಿ ನಡೆಯುತ್ತಿರುವ ಸಾಮಾಜಿಕ ನ್ಯಾಯದ ಹೋರಾಟಗಳನ್ನು ಆಕೆ ಬೆಂಬಲಿಸಿದ್ದರು. ಮ್ಯಾನ್ಮಾರ್ ನ ಬೆಳವಣಿಗೆಗಳ ಕುರಿತೂ ಆಕೆ ಧ್ವನಿ ಎತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ನಂತರ ನಡೆದ ಐತಿಹಾಸಿಕ ಮಹಿಳಾ ರ್ಯಾಲಿಯಲ್ಲಿ ರಿಹಾನಾ ಭಾಗವಹಿಸಿದ್ದರು. ಹಲವಾರು ದೇಶಗಳ ಜನರಿಗೆ ವೀಸಾ ನಿರ್ಬಂಧಿಸಿದ ಟ್ರಂಪ್ ಸರ್ಕಾರದ ನಡೆಯನ್ನೂ ಅವರು ಹಿಂದೆ ಕಟುವಾಗಿ ಟೀಕಿಸಿದ್ದರು.
ಭಾರತದ ರೈತ ಹೋರಾಟದ ಕುರಿತು ರಿಹಾನಾ ನೀಡಿರುವ ಹೇಳಿಕೆ ಈಗ ‘ಗೇಮ್ ಚೇಂಜರ್’ ಎಂದೇ ಭಾವಿಸಲಾಗುತ್ತಿದೆ. ರಷ್ಯಾ, ಬ್ರೆಜಿಲ್ ಮತ್ತು ಭಾರತದಲ್ಲಿ ಈ ವರ್ಷದ ಬಹುದೊಡ್ಡ ಜನಹೋರಾಟಗಳು ನಡೆಯುತ್ತಿವೆ. ಆದರೆ ರಷ್ಯಾದ ಪ್ರತಿಭಟನೆಗಳಿಗೆ ಸಿಕ್ಕಷ್ಟು ಮಹತ್ವ ಭಾರತದ ರೈತರ ಪ್ರತಿಭಟನೆಗಳಿಗೆ ದೊರಕಿರಲಿಲ್ಲ. ಈಗ ರಿಹಾನಾ ಅವರ ಒಂದು ಟ್ವೀಟ್ ಎಲ್ಲವನ್ನೂ ಬದಲಿಸಿದೆ.
ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಒತ್ತಡ, ಮುಜುಗರಗಳಿಂದ ತಪ್ಪಿಸಿಕೊಳ್ಳಲು ಇರುವುದು ಏಕೈಕ ದಾರಿ, ರೈತರ ದಾರಿಯಲ್ಲಿ ಕಬ್ಬಿಣದ ಮುಳ್ಳುಗಳನ್ನು ನೆಡುವುದಲ್ಲ. ರೈತರು ಇಟ್ಟಿರುವ ಎರಡೇ ಬೇಡಿಕೆಗಳನ್ನು ಈಡೇರಿಸುವುದು. ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು, ಎಂಎಸ್ ಪಿಗೆ ಕಾನೂನಿಗೆ ಬಲ ನೀಡಬೇಕು. ರೈತರು ಇನ್ನೇನೂ ಕೇಳುತ್ತಿಲ್ಲ.
ಅದಕ್ಕೆ ಹೊರತಾಗಿ ಸರ್ಕಾರ ಬೇರೆ ಏನನ್ನು ಮಾಡಿದರೂ ಜಗತ್ತಿನಾದ್ಯಂತ ಟೀಕೆಗಳಿಗೆ ಒಳಪಡಲಿದೆ ಮತ್ತು ಇದರ ಪರಿಣಾಮವಾಗಿ ನಮ್ಮ ದೇಶದ ಹೆಸರು, ಮೌಲ್ಯವನ್ನೂ ಕಡಿಮೆ ಮಾಡಿದ ಜವಾಬ್ದಾರಿಯನ್ನು ಮೋದಿ ಸರ್ಕಾರವೇ ಹೊರಬೇಕಾಗುತ್ತದೆ.
ರಿಹಾನ ಟ್ವೀಟ್
why aren’t we talking about this?! #FarmersProtest https://t.co/obmIlXhK9S
— Rihanna (@rihanna) February 2, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

