ದಿನದ ಸುದ್ದಿ
“ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ರೈತರೊಂದಿಗೊಂದು ದಿನ ಕಾರ್ಯಕ್ರಮ ಜಾರಿ” : ಕೃಷಿ ಸಚಿವ ಬಿ.ಸಿ. ಪಾಟೀಲ್
ಸುದ್ದಿದಿನ,ವಿಜಯಪುರ: ರೈತರ ಆತ್ಮಹತ್ಯೆ ತಡೆಯಲು ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬಲು ರೈತರ ಮನೆ ಬಾಗಿಲಿಗೆ ಸರ್ಕಾರವನ್ನು ಒಯ್ಯುವ ನಿಟ್ಟಿನಲ್ಲಿ ಸರ್ಕಾರವು ರೈತರೊಂದಿಗೆ ಒಂದು ದಿನದಂತಹ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಇಂದು ರೈತರಿಗೊಂದು ದಿನ ಕಾರ್ಯಕ್ರಮದ ಅಂಗವಾಗಿ ಪ್ರಗತಿಪರ ರೈತರಾದ ಪವಾಡೆಪ್ಪ ವಡ್ಡರ ಅವರ ಜಮೀನು ಭೇಟಿ ,ಪರಿಶೀಲನೆ ನಂತರ ರೈತ ಸಿದ್ಧು ಮೇಟಿ ಅವರ ತೋಟದಲ್ಲಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭ ಹಾಗೂ ಪ್ರಗತಿಪರ ರೈತ ಹೇಮರೆಡ್ಡಿ ಭೇಟಿ ತೋಟದಲ್ಲಿ ಎಲೆ ಬಳ್ಳಿ ಹಾಗೂ ದ್ರಾಕ್ಷಿ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ಕಿಸಾನ್ ಸಮ್ಮಾನ ಯೋಜನೆಯಡಿ ನೂರಕ್ಕೆ ಶೇ.97 ರಷ್ಟು ಸಾಧನೆ ಮಾಡಿದ ಹಿನ್ನೆಲೆ ದೇಶಕ್ಕೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನ ಲಭಿಸಿರುವುದು ಹೆಮ್ಮೆ ಹಾಗೂ ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.
ಕೃಷಿ ಕ್ಷೇತ್ರ ಹಾಗೂ ರೈತನನ್ನು ಸ್ವಾವಲಂಬಿಯಾಗಿ ಮಾಡಲು ಸರ್ಕಾರ ಬದ್ಧವಾಗಿರುವ ಈ ನಿಟ್ಟಿನಲ್ಲಿ ಗರಿಷ್ಠ ಸಬ್ಸಿಡಿ ಸಾಲ ಯೋಜನೆಗಳನ್ನು ರೂಪಿಸಿದೆ. ರೈತರು ಇದರ ಸದುಪಯೋಗ ಪಡಿಸಿಕೊಂಡು ತಮ್ಮ ಬದುಕನ್ನು ಹಸನಾಗಿಸಿಕೊಳ್ಳುವುದರೊಂದಿಗೆ ಆದರ್ಶ ರೈತ ಪ್ರಶಸ್ತಿ ಪುರಸ್ಕøತ ಪವಾಡೆಪ್ಪ ವಡ್ಡರ ರವರಂತೆ ಕೃಷಿಯಲ್ಲಿ ಪ್ರಗತಿ ಸಾಧಿಸಿ ಇತರರಿಗೂ ಮಾದರಿಯಾಗಬೇಕು ಎಂದು ಅವರು ಹೇಳಿದರು.
ರೈತರು ಸಾವಯವ ಸಮಗ್ರ ಕೃಷಿ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿ ಪವಾಡೆಪ್ಪ ವಡ್ಡರ ಅವರ ಜಮೀನಿನಲ್ಲಿ ಗೋ ಪೂಜೆ ಮಾಡಿ ನಾಟಿ ಕೋಳಿ, ಆಡು ಘಟಕಗಳು ಸೇರಿದಂತೆ ಬಾಳೆ ತೋಟ, ಎರೆ ಹುಳು ಗೊಬ್ಬರ ಘಟಕ, ಬೈಕ್ ಟ್ರಾಲಿ ಅವಿಷ್ಕಾರವನ್ನು. ಹಾಗೂ ಶೇಂಗಾ ಬೆಳೆಗೆ ಡ್ರಿಪ್ ನೀರಾವರಿ ಸೌಲಭ್ಯ ವಿಕ್ಷೀಸಿದ ಅವರು ನಂತರ 12 ಎಕರೆ ಜಮೀನಿನಲ್ಲಿ ಸಿದ್ಧುಮೇಟಿ ರೈತನ ಗೋಧಿ ಕಟಾವು ಯಂತ್ರವನ್ನು ಖುದ್ದಾಗಿ ತಾವೇ ಕಟಾಯಿಸಿ ಪ್ರೋತ್ಸಾಹಿಸಿ ಅದರಂತೆ ದ್ರಾಕ್ಷಿ ಎಲೆ ತೋಟ ವಿಕ್ಷಿಸಿ ಬೆಳೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಆದರ್ಶ ರೈತ ಪ್ರಶಸ್ತಿ ಪುರಸ್ಕøತ, ಪ್ರಗತಿ ಪರ ರೈತ ಪವಾಡೆಪ್ಪ ವಡ್ಡರ ಅವರು ರೈತರೊಂದಿಗೊಂದು ದಿನ ಕಾರ್ಯಕ್ರಮದ ಅಂಗವಾಗಿ ಕೃಷಿ ಸಚಿವರ ಆಗಮನದಿಂದ ಸರ್ಕಾರವೇ ತಮ್ಮ ಮನೆ ಬಾಗಿಲಿಗೆ ಬಂದತಾಗಿದ್ದು, ತನ್ನ ಜೀವನ ಸಾರ್ಥಕವಾಯಿತು. ನನ್ನನ್ನು ಗುರುತಿಸಿ, ಪ್ರೋತ್ಸಾಹಿಸಿದ ಸರ್ಕಾರ ಹಾಗೂ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಭಾವುಕರಾಗಿ ನುಡಿದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಮಾತನಾಡಿ ಸರ್ಕಾರವೇ ರೈತರ ಬಳಿ ಬಂದಿದ್ದು, ಕೃಷಿ ಸಚಿವರು ಪ್ರಗತಿಪರ ರೈತರಿಗೆ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗೆ ಇಂತಹ ಕಾರ್ಯಕ್ರಮಗಳ ಮೂಲಕ ರೈತರಿಗೆ ಪ್ರೋ ತ್ಸಾಹಿಸುತ್ತಿರುವುದು ರೈತರಲ್ಲಿ ಆತ್ಮಸ್ಥೈರ್ಯ ತುಂಬಲಿದೆ. ಅದರಂತೆ ಹತಾಶೆಗೊಂಡ ರೈತರಿಗೂ ಇಂತಹ ಸಚಿವರ ವಿಶೇಷ ಕಾರ್ಯಕ್ರಮಗಳಿಂದ ಹೆಚ್ಚಿನ ಉತ್ಸಾಹ ಮತ್ತು ಪೆÇ್ರೀತ್ಸಾಹ ದೊರೆಯಲಿದೆ. ಜಿಲ್ಲೆಯಲ್ಲಿಯೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕುಂದುಕೊರತೆ ಸಭೆಯನ್ನು ಸಹ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಕವಡಿಮಟ್ಟಿ ಗ್ರಾಮದಲ್ಲಿ ಕಾರ್ಯಕ್ರಮ
ನಂತರ ಕವಡಿಮಟ್ಟಿ ಗ್ರಾಮದಲ್ಲಿ ರೈತರೊಂದಿಗೊಂದು ದಿನ ಮುಕ್ತಾಯ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ರೈತರ ಹೊಲಗಳಿಗೆ ರಸ್ತೆ ಸುಧಾರಣೆ, ರೈತ ಮಿತ್ರ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ ಅವರು ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು.
ಆತ ಎದೆಯುಬ್ಬಿಸಿ ನಡೆಯುವಂತೆ ಮಾಡಬೇಕು. ಕೃಷಿ ಇದ್ದರೆ ಮಾತ್ರ ಜಗತ್ತು, ಜೀವನ ಅನ್ನೋದು ಇರುತ್ತೆ. ಕೃಷಿಯಿಲ್ಲದಿದ್ದರೆ ಏನೂ ಇಲ್ಲ ಎಲ್ಲವೂ ದುರ್ಭಿಕ್ಷವಾಗುತ್ತೆ. ಇದಕ್ಕಾಗಿಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರೈತರೊಂದಿಗೊಂದು ದಿನ ವಿನೂತನ ಕಾರ್ಯಕ್ರಮ ನಡೆಸುತ್ತಿದ್ದೇನೆ. ಎಲ್ಲಾ ಜಿಲ್ಲೆಗಳ ರೈತರ ಸ್ಥಿತಿಗತಿ ಅಧ್ಯಯನ ಮಾಡಿದ ಮೇಲೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ.
ರೈತರನ್ನು ನೋವಿನಿಂದ ಮುಕ್ತಗೊಳಿಸುವ ಮಾರ್ಗೋಪಾಯ ಕಂಡುಕೊಳ್ಳುತ್ತೇನೆ. ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆ ಅಗತ್ಯವಾಗಿದ್ದು ಕಡಿಮೆ ಖರ್ಚು ಹೆಚ್ಚು ಆದಾಯ ಪದ್ಧತಿ ಜಾರಿಗೆ ಬರಬೇಕಿದೆ. ಇಂದು ನಾವೆಲ್ಲ ಭೂಮಿಗೆ ವಿಷವುಣಿಸುತ್ತಿದ್ದೇವೆ, ವಿಷವನ್ನೇ ಸೇವಿಸ್ತಿದ್ದೇವೆ. ತಿನ್ನೋ ಅನ್ನ ವಿಷಪೂರಿತವಾಗಿದೆ. ನಾವೆಲ್ಲ ಸಾವಯವಕ್ಕೆ ಮಹತ್ವ ಕೊಡಬೇಕಿದೆ. ರೈತರು ನೇರವಾಗಿ ಮಾರುಕಟ್ಟೆ ಪ್ರವೇಶಿಸುವಂತಾಗಬೇಕು.
ರಾಜ್ಯದ 68 ಲಕ್ಷ ರೈತರಿಗೆ ಸ್ವಾಭಿಮಾನಿ ಕಾರ್ಡ ಕೊಡುವ ಯೋಜನೆ ಹಂತಹಂತವಾಗಿ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತದೆ. ನೀರಾವರಿ ಭೂಮಿಯಲ್ಲಿ ನಿರಂತರ ಹಣ ಬರಬೇಕಾದ್ರೆ ಸಮಗ್ರ ಕೃಷಿ ಅಳವಡಿಸಿಕೊಳ್ಳಬೇಕು. ಈ ಪದ್ಧತಿ ಕೋಲಾರದಲ್ಲಿದೆ. 1200 ವರ್ಷಗಳ ಹಿಂದೆ ಬಸವಣ್ಣ ಕೃಷಿ, ಕೃಷಿಕರಿಗೆ ಕೊಟ್ಟಿದ್ದ ಮಹತ್ವವನ್ನು ನಾವಿಂದು ಅನುಸರಿಸಬೇಕಾಗಿದೆ.
ಈ ದೇಶದಲ್ಲಿ ಶೇ.60ರಷ್ಟು ಉದ್ಯೋಗ ಕೊಡ್ತಿರೋದು ರೈತರು. ಶೇ.18ರಷ್ಟು ಜಿಎಸ್ಟಿ ರೈತರಿಂದಲೇ ಬರುತ್ತದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 8 ಎಫ್ಪಿಓಗಳನ್ನು ಮಂಜೂರು ಮಾಡಿದೆ. ಕೃಷಿಗೆ ಒಂದು ಲಕ್ಷ ಕೋಟಿ ರೂ ಮೀಸಲಿಟ್ಟಿದೆ ಎಂದು ಹೇಳಿದರು.
ಶಾಸಕ ಎ.ಎಸ್ ಪಾಟೀಲ (ನಡಹಳ್ಳಿ) ಮಾತನಾಡಿ ಮುದ್ದೇಬಿಹಾಳ ತಾಲೂಕಿನಲ್ಲಿ ಸಮಗ್ರ ಕೃಷಿ ಪದ್ಧತಿ, ಪಶುಸಂಗೋಪನೆ, ಮೀನುಗಾರಿಕೆ ಸೇರಿದಂತೆ ವಿವಿಧ ರೀತಿಯ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ಇದೆ. ಕಾರಣ ಕೃಷಿ ಸಂಶೋಧನಾ ಮತ್ತು ಕೌಶಲ್ಯ ಕೇಂದ್ರವನ್ನು ಮತ್ತು ಕೃಷಿ ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ಕೃಷಿ ಸಚಿವರಲ್ಲಿ ಮನವಿ ಮಾಡಿ ಸರ್ಕಾರಿ ಜಮೀನಿನ ಲಭ್ಯತೆಯೂ ಸಹ ಇದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೃಷಿ ಸಚಿವರು ಹಾಗೂ ಗಣ್ಯರು ಜಲಪುರ ಕೆರೆಗೆ ಬಾಗಿನ ಅರ್ಪಣೆ ಮಾಡಿದರು. ರೈತರ ಮೆರವಣಿಗೆ, ಕೃಷಿ ವಸ್ತು ಪ್ರದರ್ಶನ ವೀಕ್ಷಣೆ, ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಆತ್ಮಾ ಯೋಜನೆಯಡಿ ಪ್ರಶಸ್ತಿ ವಿಜೇತ ರೈತರಿಗೆ ಸನ್ಮಾನಿಸುವ ಮೂಲಕ ಅತ್ಯಂತ ಯಶಸ್ವಿ ಮತ್ತು ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಕ್ತಾಯಗೊಳಿಸಲಾಯಿತು.
ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಮಾತನಾಡಿ ಕೃಷಿ ಸಚಿವರ ಆಸಕ್ತಿಯಿಂದ ರೈತರ ಮನೆಬಾಗಿಲಿಗೆ ತೆರಳಿ ಹೊಲಗಳ ಮಣ್ಣು ಪರೀಕ್ಷೆಗೆ ಮೊಬೈಲ್ ವಾಹನ ಯೋಜನೆ ಜಾರಿಗೊಳಿಸಲಾಗಿದೆ. ರೈತರ ಮನೆಬಾಗಿಲಿಗೆ ಸರ್ಕಾರ ಬಂದಿದ್ದು, ರೈತರಿಗೆ ನೆರವು ನೀಡಲಾಗುತ್ತಿದೆ. ಈಗಾಗಲೇ ಅತಿವೃಷ್ಟಿಯಿಂದ ಹಾನಿಯಾದ ರೈತರಿಗೆ ಪರಿಹಾರ ವಿತರಿಸಲಾಗಿದೆ. ಫಸಲ್ ಬಿಮಾ ಯೋಜನೆ ಸಮಸ್ಯೆಗಳನ್ನು ಯಾವುದೇ ಅವಧಿಯಲ್ಲಿ ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಜಿಲ್ಲಾ ಪಂಚಾಯತ್ ಸಿ.ಇ.ಒ ಗೋವಿಂದ ರೆಡ್ಡಿ, ತಹಶೀಲ್ದಾರರು ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ45 minutes agoಆಯುರ್ವೇದ ಆರೋಗ್ಯಕರ ಜೀವನ ಶೈಲಿ

