Connect with us

ದಿನದ ಸುದ್ದಿ

ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ,15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ : ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ, ಸರ್ಕಾರ ಹಾಗೂ ಜಿಲ್ಲಾಡಳಿತ ನಮ್ಮ ನೆರವಿಗೆ ಇದೆ ಎಂಬ ಭಾವನೆ ಬಂದು ಅವರ ಕೆಲಸಗಳು ಆಗುವುದರಿಂದ ಸರ್ಕಾರದ ಮೇಲೆ ಅವರಿಗೆ ಭರವಸೆ ಮೂಡುತ್ತದೆ. ಹಾಗಾಗಿ ಪ್ರತಿ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿ ನಿಯಮಗಳನ್ವಯ ಅವರ ಕೆಲಸಗಳನ್ನು ಮಾಡಿಕೊಡಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಹಾಗೂ ಮುಂದಿನ ದಿನಗಳಲ್ಲಿ 15 ದಿನಕ್ಕೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳಲ್ಲಿ ಸಕಾರಾತ್ಮಕ ಮನೋಭಾವನೆ ಇರಬೇಕು. ಎಷ್ಟೋ ಸಮಸ್ಯೆಗಳನ್ನು ಮಾತಿನಿಂದ ಪರಿಹರಿಸಬಹುದು. ಹೀಗಿರುವಾಗ ಯಾವುದೇ ಸಮಸ್ಯೆಯಾಗಲೀ ತನ್ನಿಂದ ಆಗುವುದಿಲ್ಲ ಎನ್ನುವ ಬದಲು ಪರಿಶೀಲನೆ ನಡೆಸುತ್ತೇವೆ ಎಂದರೆ ಸಾರ್ವಜನಿಕರಲ್ಲಿ ಅಧಿಕಾರಿಗಳ ಮೇಲೆ ಆಶಾಭಾವನೆ ಬೆಳೆಯುತ್ತದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಚಿಕ್ಕಬೆನ್ನೂರು ಗ್ರಾಮದ ಕಲ್ಪನಾ ಅರ್ಜಿ ಸಲ್ಲಿಸಿ ಸರ್ವೇ ನಂ-25ರಲ್ಲಿ 3 ಎಕರೆ ಜಮೀನಿನ ಸಾಗುವಳಿ ಚೀಟಿಯನ್ನು ಪಡೆದುಕೊಂಡು ಖಾತೆ ಮತ್ತು ಪಹಣಿಯನ್ನು ಪಡೆದುಕೊಂಡಿದ್ದು, ಅದರಂತೆ ಸದರಿ ಜಮೀನನ್ನು ಪೋಡಿ ದುರಸ್ತಿ ಮತ್ತು ಹದ್ದುಬಸ್ತು ಮಾಡಿಸಿಕೊಡುವಂತೆ ಕೋರಿಕೊಂಡರು. ಇದಕ್ಕೆ ಜಿಲ್ಲಾಧಿಕಾರಿಗಳು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ಸದಸ್ಯರು ಮಹಾನಗರ ಪಾಲಿಕೆ ಚುನಾವಣೆ ಕೆಲಸಕ್ಕಾಗಿ ಕೆ.ಬಿ.ಬಡಾವಣೆಯ ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ 2 ದಿನಗಳ ಕಾಲ ಶಾಲಾ ವಾಹನವನ್ನು ಬಳಸಿಕೊಂಡಿದ್ದು, ವಾಹನದ ಬಾಡಿಗೆಯನ್ನು ಕೊಡದೆ ಅಲೆದಾಡಿಸಿದ್ದಾರೆ. ಕೂಡಲೇ ಬಾಡಿಗೆಯನ್ನು ಕೊಡಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಕೂಡಲೇ ಪರಿಹರಿಸಲಾಗುವುದು ಎಂದರು.

ಆನಗೋಡು ಹೋಬಳಿ ನೇರಿಗೆ ಗ್ರಾಮದಲ್ಲಿ ಕೃಷಿ ಸಹಾಯಕರ ವಾಸಕ್ಕಾಗಿ ಸರ್ಕಾರದಿಂದ ವಸತಿ ಗೃಹವನ್ನು ನಿರ್ಮಿಸಿದ್ದು, ಇತ್ತೀಚೆಗೆ ಈ ಹುದ್ದೆಯನ್ನು ರದ್ದು ಮಾಡಲಾಯಿತು. ಪ್ರಸ್ತುತ ಈ ಜಾಗದಲ್ಲಿ ಖಾಸಾಗಿ ವ್ಯಕ್ತಿಯೊಬ್ಬರು ವಾಸಮಾಡುತ್ತಿದ್ದು, ಬಾಡಿಗೆಯನ್ನು ನೀಡುತ್ತಿಲ್ಲ.

ಅವರನ್ನು ಕೂಡಲೇ ಈ ಜಾಗದಿಂದ ಖಾಲಿ ಮಾಡಿಸಿ ಇಲ್ಲಿ ಅಂಚೆ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಅಥವಾ ಪಶು ಚಿಕಿತ್ಸಾಲಯ ಕಚೇರಿಗಳ ಪೈಕಿ ಯಾವುದಾದರು ಒಂದನ್ನು ಈ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರೊಬ್ಬರು ಅರ್ಜಿ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ | ಹೆಚ್.ಎ.ಎಲ್ ನಲ್ಲಿ‌ ತರಬೇತಿಗಾಗಿ ಅರ್ಜಿ ಆಹ್ವಾನ

ವೆಂಕಟೇಶ್‍ನಾಯ್ಕ್ ಅರ್ಜಿ ಸಲ್ಲಿಸಿ ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ನನ್ನ ಹೆಂಡತಿ ಮೂಕಿ ಹಾಗೂ ಕಿವುಡಿಯಾಗಿದ್ದಾಳೆ. ಒಂದುವರೆ ವರ್ಷದ ಮಗನಿಗೆ ಕಣ್ಣಿನ ತೊಂದರೆಯಿದ್ದು ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಆಸ್ಪತ್ರೆಯಲ್ಲಿ ಗುರುತಿನ ಚೀಟಿ, ರೇಷನ್‍ಕಾರ್ಡ್, ಆಧಾರ್‍ಕಾರ್ಡ್‍ಗಳನ್ನು ಕೇಳುತ್ತಿದ್ದು, ತಮ್ಮ ಬಳಿ ಇದ್ಯಾವುದೇ ಅಗತ್ಯ ದಾಖಲೆಗಳಿಲ್ಲ ಎಂದು ಸಮಸ್ಯೆ ಕುರಿತು ಹೇಳುವಾಗ, ಜಿಲ್ಲಾಧಿಕಾರಿ ಮೊದಲು ಆಧಾರ್‍ಕಾರ್ಡ್, ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಿ ತದನಂತರ ನಿಮ್ಮ ಮಗನ ಚಿಕಿತ್ಸೆ ನಡೆಯುತ್ತದೆ ಎಂದು ಭರವಸೆ ನೀಡಿದರು.

ಶಿವಕುಮಾರ್ ಸ್ವಾಮಿ ಲೇಔಟ್, 2ನೇ ಹಂತದ, 8ನೇ ಕ್ರಾಸ್, ಡಾಬಾ ಸ್ಟಾಪ್ ಹತ್ತಿರವಿರುವ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾರ್ಕ್ ಆಗಿ ಅನುಮೋದಿತಗೊಂಡಿರುವ ಜಾಗದಲ್ಲಿ ಬಂಜಾರ ಸಮುದಾಯದವರು ದೇವಸ್ಥಾನ ನಿರ್ಮಿಸಿ 2 ಬಾವುಟಗಳನ್ನು ಹಾರಿಸಿದ್ದಾರೆ. ಸಾರ್ವಜನಿಕ ಉದ್ಯಾನವನದ ಜಾಗ ದುರ್ಬಳಕೆ ಮಾಡಿಕೊಂಡಿದ್ದು ಕೂಡಲೇ ದೇವಸ್ಥಾನವನ್ನು ತೆರವುಗೊಳಿಸಿ ಪಾರ್ಕ್ ಆಗಿ ಉಳಿಸಿಕೊಡಬೇಕು ಎಂದು ಬಡಾವಣೆಯ ನಿವಾಸಿಗಳು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕೂಡಲೇ ಪರಿಶೀಲನೆ ನಡೆಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಸ್.ಎಸ್.ಬಡಾವಣೆ ‘ಎ’ ಬ್ಲಾಕ್ ನೇತಾಜಿ ಸುಭಾಷ್‍ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದ ಎದುರು ಇರುವ ವಿದ್ಯುತ್ ಟ್ರಾನ್ಸ್‍ಫರ್ಮರ್ ಮತ್ತು ಕಂಬಗಳನ್ನು ಸ್ಥಳಾಂತರಿಸಿ, ಇದನ್ನು ಸೈಟ್ ನಂ.30, ಡೋರ್ ನಂಬರ್ 3989, 11ನೇ ಮುಖ್ಯ ರಸ್ತೆಗೆ ಮರುಸ್ಥಾಪಿಸಲು ಉದ್ದೇಶಿಸಲಾಗಿದೆ. ಆದರೆ ಈ ರಸ್ತೆಯು 20 ಅಡಿ ಅಗಲವಿದ್ದು, ಇದರಲ್ಲಿ ಚರಂಡಿ, ನೀರಿನ ಪೈಪ್‍ಲೈನ್, ಮತ್ತು ಯುಜಿಡಿ ಪೈಪ್‍ಲೈನ್ ಇದ್ದು, ಅರಣ್ಯ ಇಲಾಖೆಯ ಅನುಮತಿ ಇಲ್ಲದೇ ಈಗಾಗಲೇ ಹೊಂಗೆ ಮರವನ್ನು ಕಡಿದಿದ್ದಾರೆ.

ಸದರಿ ರಸ್ತೆಯಲ್ಲಿ ಬಹಳ ಜನ ಮತ್ತು ವಾಹನ ಸಂಚಾರವಿರುವುದರಿಂದ ಹಾಲಿ ಇರುವ ಅಂದರೆ ಒಳಾಂಗಣ ಕ್ರೀಡಾಂಗಣದ ಎದುರಿನಲ್ಲಿರುವ 80 ಅಡಿ ರಸ್ತೆಯಲ್ಲಿ ಎಲ್ಲಿ ಬೇಕಾದರೂ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನ್ನು ಮರುಸ್ಥಾಪಿಸಬೇಕು ಎಂದು ಬಡಾವಣೆ ನಿವಾಸಿಗಳು ಮನವಿ ಮಾಡಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಈ ಸ್ಥಳಕ್ಕೆ ಸ್ವತಃ ನಾನು ಖುದ್ದಾಗಿ ಭೇಟಿ ನೀಡಿದ್ದು ಸಮಸ್ಯೆಯ ಬಗ್ಗೆ ತಿಳುವಳಿಕೆ ಇದೆ ಎಂದ ಅವರು 80 ಅಡಿ ರಸ್ತೆಯಲ್ಲೆ ಟ್ರ್ಯಾನ್ಸ್‍ಫಾರ್ಮ್ ಮರುಸ್ಥಾಪಿಸಲು ಕೆಇಬಿ ಅಧಿಕಾರಿಗೆ ನಿರ್ದೇಶಿಸಿದರು.

ಬೂದಳ್ ರಸ್ತೆಯಲ್ಲಿರುವ ಆಶ್ರಯ ಮನೆಗಳ ಪೈಕಿ ಮನೆ ನಂ.6ರ ಮೇಲೆ ಏರ್‍ಟೇಲ್ ನೆಟ್‍ವರ್ಕ್ ಟವರ್ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾದಲ್ಲಿ ಅಕ್ಕಪಕ್ಕದ ನಿವಾಸಿಗಳ ಆರೋಗ್ಯದ ಮೇಲೆ ತೊಂದರೆಯುಂಟಾಗುತ್ತದೆ. ಆದ್ದರಿಂದ ಇದನ್ನು ತಡೆ ಹಿಡಿಯಬೇಕು ಎಂದು ವ್ಯಕ್ತಿಯೊಬ್ಬರು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಪಾಲಿಕೆ ಆಯುಕ್ತರಿಗೆ ಸೂಚಿಸಿ ಸಮಸ್ಯೆ ಪರಿಹರಿಸುತ್ತೇವೆ ಎಂದು ತಿಳಿಸಿದರು.

ಸಂಧ್ಯಾಸುರಕ್ಷ ಯೋಜನೆಯಡಿ ನನಗೆ ಒಂದು ಸಾವಿರ ರೂಪಾಯಿ ಬರುತ್ತಿದ್ದು, ಅದನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮ ಮಾಡಿ ಎಂದು ಶಾರದಮ್ಮ ಮನವಿ ಸಲ್ಲಿಸಿದರು.
ಕೆ.ಬಿ.ಪ್ರಕಾಶ್ ಅರ್ಜಿ ಸಲ್ಲಿಸಿ ರಸ್ತೆ ಅಪಘಾತದಲ್ಲಿ ತಮ್ಮ ಎಡಗಾಲನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ಚನ್ನಗಿರಿ ಆಸ್ಪತ್ರೆಯ ವೈದ್ಯರು ಮೆಡಿಕಲ್ ವರದಿಯಲ್ಲಿ ಶೇ.60 ರಷ್ಟು ಅಂಗನ್ಯೂನತೆ ಎಂದು ನಮೂದಿಸಿದ್ದಾರೆ. ಅದನ್ನು ಶೇಕಡಾ.75ರಷ್ಟು ಅಂಗನ್ಯೂನ್ಯತೆಗೆ ಹೆಚ್ಚಿಸಿ ಪರಿಹಾರ ಒದಗಿಸಬೇಕೆಂದು ಕೋರಿದರು. ಜಿಲ್ಲಾಧಿಕಾರಿ ಅವರನ್ನು ಸ್ಥಳದಲ್ಲೇ ಪರಿಶೀಲಿಸಿ ಇವರಿಗೆ ಕೂಡಲೇ ಶೇಕಡಾ. 75 ರಷ್ಟು ಅಂಗನ್ಯೂನತೆಗೆ ಹೆಚ್ಚಿಸಿ ಎಂದು ಆರೋಗ್ಯಾಧಿಕಾರಿಗೆ ಸೂಚಿಸಿದರು.

ಶಾಮನೂರು ಗ್ರಾಮ ಡಾಲರ್ಸ್ ಕಾಲೋನಿಯಲ್ಲಿ ಕೊಳಚೆ ನೀರಿನ ರಾಜ ಕಾಲುವೆಗೆ ಸಿ.ಸಿ. ಚರಂಡಿ ಹಾಗೂ ಡಕ್ ಸ್ಲ್ಯಾಬ್ ನಿರ್ಮಾಣ ಮಾಡುವಂತೆ ನಾಗರೀಕರ ಪರವಾಗಿ ಎಸ್.ಎಂ.ಪ್ರಭುದೇವಯ್ಯ ಹಾಗೂ ಕೆ.ಜಿ.ಲಕ್ಷ್ಮಿಕಾಂತ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿ ಮಯೂರ್ ಬಿಸೆ ಅರ್ಜಿ ಸಲ್ಲಿಸಿ ಪಿಯುಸಿಯಲ್ಲಿ ಶೇಕಡ 84ರಷ್ಟು ಫಲಿತಾಂಶ ಹೊಂದಿ ಇಂಜಿನಿಯರಿಂಗ್ ಮಾಡುತ್ತಿದ್ದು, ನನ್ನ ತಂದೆ ಒಂದು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಇದೀಗ ನಾನು ಇಂಜಿನಿಯರಿಂಗ್ ಮಾಡುತ್ತಿದ್ದು ನನಗೆ ಬಿಸಿಎಂ ಹಾಸ್ಟೆಲ್ ಅಲ್ಲಿ ಸೀಟ್ ಸಿಗದ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದರು.

ಇದಕ್ಕೆ ಜಿಲ್ಲಾಧಿಕಾರಿ ನಿನ್ನ ತಂದೆಯೊಂದಿಗೆ ನೀನು ಕೃಷಿಯಲ್ಲಿ ತೊಡಗಿಕೊಂಡು ನಿಮ್ಮ ಜಮೀನನ್ನು ಉನ್ನತಿಕರಣಗೊಳಿಸಬಹುದು ಎಂಬ ಸಲಹೆಗೆ ವಿದ್ಯಾರ್ಥಿ ಪ್ರತಿಕ್ರಿಯಿಸಿ ನನ್ನ ತಂದೆ ನನ್ನ ಹಾಗೆ ನೀನು ಕಷ್ಟಪಡಬೇಡ. ಉನ್ನತ ಮಟ್ಟದ ವಿದ್ಯಾಭ್ಯಾಸ ಪಡೆದು ಉದ್ಯೋಗ ಪಡೆದುಕೊಳ್ಳಬೇಕು ಎಂದಿದ್ದಾರೆ ಎಂದು ತಿಳಿಸಿದ. ಅದಕ್ಕೆ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿ ಈ ವಿದ್ಯಾರ್ಥಿಗೆ ಕೂಡಲೇ ಹಾಸ್ಟೆಲ್ ಸಿಗುವಂತೆ ನೋಡಿಕೊಳ್ಳಿ ಎಂದು ಆದೇಶಿಸಿದರು.

ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮ ಕೌಸರ್ ಮನವಿ ಮಾಡಿ, ಶಾಮನೂರಿಗೆ ಇರುವ ನಗರ ಸಾರಿಗೆಯನ್ನ ಜೆ.ಹೆಚ್.ಪಟೇಲ್ ಬಡಾವಣೆಯ ಮಹಿಳಾ ವಿದ್ಯಾರ್ಥಿ ನಿಲಯದವರೆಗೆ ವಿಸ್ತರಿಸಿದರೆ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ನಾಗರೀಕರಿಗೆ ಅನುಕೂಲವಾಗುವುದಾಗಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೆಎಸ್‍ಆರ್‍ಟಿಸಿ ಅಧಿಕಾರಿಗೆ ಸೂಚನೆ ನೀಡಿ ಈ ಬೇಡಿಕೆ ಕಳೆದ ವರ್ಷದಿಂದ ಇದ್ದು, ಈ ಕೂಡಲೇ ಅಂದರೆ ನಾಳೆಯಿಂದ ಅಲ್ಲಿಗೆ ಬಸ್ ಸಂಚಾರವನ್ನು ವಿಸ್ತರಿಸಲು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ದೂಡ ಆಯುಕ್ತ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending