ದಿನದ ಸುದ್ದಿ
ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ,15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ : ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ, ಸರ್ಕಾರ ಹಾಗೂ ಜಿಲ್ಲಾಡಳಿತ ನಮ್ಮ ನೆರವಿಗೆ ಇದೆ ಎಂಬ ಭಾವನೆ ಬಂದು ಅವರ ಕೆಲಸಗಳು ಆಗುವುದರಿಂದ ಸರ್ಕಾರದ ಮೇಲೆ ಅವರಿಗೆ ಭರವಸೆ ಮೂಡುತ್ತದೆ. ಹಾಗಾಗಿ ಪ್ರತಿ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿ ನಿಯಮಗಳನ್ವಯ ಅವರ ಕೆಲಸಗಳನ್ನು ಮಾಡಿಕೊಡಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಹಾಗೂ ಮುಂದಿನ ದಿನಗಳಲ್ಲಿ 15 ದಿನಕ್ಕೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳಲ್ಲಿ ಸಕಾರಾತ್ಮಕ ಮನೋಭಾವನೆ ಇರಬೇಕು. ಎಷ್ಟೋ ಸಮಸ್ಯೆಗಳನ್ನು ಮಾತಿನಿಂದ ಪರಿಹರಿಸಬಹುದು. ಹೀಗಿರುವಾಗ ಯಾವುದೇ ಸಮಸ್ಯೆಯಾಗಲೀ ತನ್ನಿಂದ ಆಗುವುದಿಲ್ಲ ಎನ್ನುವ ಬದಲು ಪರಿಶೀಲನೆ ನಡೆಸುತ್ತೇವೆ ಎಂದರೆ ಸಾರ್ವಜನಿಕರಲ್ಲಿ ಅಧಿಕಾರಿಗಳ ಮೇಲೆ ಆಶಾಭಾವನೆ ಬೆಳೆಯುತ್ತದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಚಿಕ್ಕಬೆನ್ನೂರು ಗ್ರಾಮದ ಕಲ್ಪನಾ ಅರ್ಜಿ ಸಲ್ಲಿಸಿ ಸರ್ವೇ ನಂ-25ರಲ್ಲಿ 3 ಎಕರೆ ಜಮೀನಿನ ಸಾಗುವಳಿ ಚೀಟಿಯನ್ನು ಪಡೆದುಕೊಂಡು ಖಾತೆ ಮತ್ತು ಪಹಣಿಯನ್ನು ಪಡೆದುಕೊಂಡಿದ್ದು, ಅದರಂತೆ ಸದರಿ ಜಮೀನನ್ನು ಪೋಡಿ ದುರಸ್ತಿ ಮತ್ತು ಹದ್ದುಬಸ್ತು ಮಾಡಿಸಿಕೊಡುವಂತೆ ಕೋರಿಕೊಂಡರು. ಇದಕ್ಕೆ ಜಿಲ್ಲಾಧಿಕಾರಿಗಳು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ಸದಸ್ಯರು ಮಹಾನಗರ ಪಾಲಿಕೆ ಚುನಾವಣೆ ಕೆಲಸಕ್ಕಾಗಿ ಕೆ.ಬಿ.ಬಡಾವಣೆಯ ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ 2 ದಿನಗಳ ಕಾಲ ಶಾಲಾ ವಾಹನವನ್ನು ಬಳಸಿಕೊಂಡಿದ್ದು, ವಾಹನದ ಬಾಡಿಗೆಯನ್ನು ಕೊಡದೆ ಅಲೆದಾಡಿಸಿದ್ದಾರೆ. ಕೂಡಲೇ ಬಾಡಿಗೆಯನ್ನು ಕೊಡಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಕೂಡಲೇ ಪರಿಹರಿಸಲಾಗುವುದು ಎಂದರು.
ಆನಗೋಡು ಹೋಬಳಿ ನೇರಿಗೆ ಗ್ರಾಮದಲ್ಲಿ ಕೃಷಿ ಸಹಾಯಕರ ವಾಸಕ್ಕಾಗಿ ಸರ್ಕಾರದಿಂದ ವಸತಿ ಗೃಹವನ್ನು ನಿರ್ಮಿಸಿದ್ದು, ಇತ್ತೀಚೆಗೆ ಈ ಹುದ್ದೆಯನ್ನು ರದ್ದು ಮಾಡಲಾಯಿತು. ಪ್ರಸ್ತುತ ಈ ಜಾಗದಲ್ಲಿ ಖಾಸಾಗಿ ವ್ಯಕ್ತಿಯೊಬ್ಬರು ವಾಸಮಾಡುತ್ತಿದ್ದು, ಬಾಡಿಗೆಯನ್ನು ನೀಡುತ್ತಿಲ್ಲ.
ಅವರನ್ನು ಕೂಡಲೇ ಈ ಜಾಗದಿಂದ ಖಾಲಿ ಮಾಡಿಸಿ ಇಲ್ಲಿ ಅಂಚೆ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಅಥವಾ ಪಶು ಚಿಕಿತ್ಸಾಲಯ ಕಚೇರಿಗಳ ಪೈಕಿ ಯಾವುದಾದರು ಒಂದನ್ನು ಈ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರೊಬ್ಬರು ಅರ್ಜಿ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ | ಹೆಚ್.ಎ.ಎಲ್ ನಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ
ವೆಂಕಟೇಶ್ನಾಯ್ಕ್ ಅರ್ಜಿ ಸಲ್ಲಿಸಿ ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ನನ್ನ ಹೆಂಡತಿ ಮೂಕಿ ಹಾಗೂ ಕಿವುಡಿಯಾಗಿದ್ದಾಳೆ. ಒಂದುವರೆ ವರ್ಷದ ಮಗನಿಗೆ ಕಣ್ಣಿನ ತೊಂದರೆಯಿದ್ದು ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಆಸ್ಪತ್ರೆಯಲ್ಲಿ ಗುರುತಿನ ಚೀಟಿ, ರೇಷನ್ಕಾರ್ಡ್, ಆಧಾರ್ಕಾರ್ಡ್ಗಳನ್ನು ಕೇಳುತ್ತಿದ್ದು, ತಮ್ಮ ಬಳಿ ಇದ್ಯಾವುದೇ ಅಗತ್ಯ ದಾಖಲೆಗಳಿಲ್ಲ ಎಂದು ಸಮಸ್ಯೆ ಕುರಿತು ಹೇಳುವಾಗ, ಜಿಲ್ಲಾಧಿಕಾರಿ ಮೊದಲು ಆಧಾರ್ಕಾರ್ಡ್, ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಿ ತದನಂತರ ನಿಮ್ಮ ಮಗನ ಚಿಕಿತ್ಸೆ ನಡೆಯುತ್ತದೆ ಎಂದು ಭರವಸೆ ನೀಡಿದರು.
ಶಿವಕುಮಾರ್ ಸ್ವಾಮಿ ಲೇಔಟ್, 2ನೇ ಹಂತದ, 8ನೇ ಕ್ರಾಸ್, ಡಾಬಾ ಸ್ಟಾಪ್ ಹತ್ತಿರವಿರುವ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾರ್ಕ್ ಆಗಿ ಅನುಮೋದಿತಗೊಂಡಿರುವ ಜಾಗದಲ್ಲಿ ಬಂಜಾರ ಸಮುದಾಯದವರು ದೇವಸ್ಥಾನ ನಿರ್ಮಿಸಿ 2 ಬಾವುಟಗಳನ್ನು ಹಾರಿಸಿದ್ದಾರೆ. ಸಾರ್ವಜನಿಕ ಉದ್ಯಾನವನದ ಜಾಗ ದುರ್ಬಳಕೆ ಮಾಡಿಕೊಂಡಿದ್ದು ಕೂಡಲೇ ದೇವಸ್ಥಾನವನ್ನು ತೆರವುಗೊಳಿಸಿ ಪಾರ್ಕ್ ಆಗಿ ಉಳಿಸಿಕೊಡಬೇಕು ಎಂದು ಬಡಾವಣೆಯ ನಿವಾಸಿಗಳು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕೂಡಲೇ ಪರಿಶೀಲನೆ ನಡೆಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಸ್.ಎಸ್.ಬಡಾವಣೆ ‘ಎ’ ಬ್ಲಾಕ್ ನೇತಾಜಿ ಸುಭಾಷ್ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದ ಎದುರು ಇರುವ ವಿದ್ಯುತ್ ಟ್ರಾನ್ಸ್ಫರ್ಮರ್ ಮತ್ತು ಕಂಬಗಳನ್ನು ಸ್ಥಳಾಂತರಿಸಿ, ಇದನ್ನು ಸೈಟ್ ನಂ.30, ಡೋರ್ ನಂಬರ್ 3989, 11ನೇ ಮುಖ್ಯ ರಸ್ತೆಗೆ ಮರುಸ್ಥಾಪಿಸಲು ಉದ್ದೇಶಿಸಲಾಗಿದೆ. ಆದರೆ ಈ ರಸ್ತೆಯು 20 ಅಡಿ ಅಗಲವಿದ್ದು, ಇದರಲ್ಲಿ ಚರಂಡಿ, ನೀರಿನ ಪೈಪ್ಲೈನ್, ಮತ್ತು ಯುಜಿಡಿ ಪೈಪ್ಲೈನ್ ಇದ್ದು, ಅರಣ್ಯ ಇಲಾಖೆಯ ಅನುಮತಿ ಇಲ್ಲದೇ ಈಗಾಗಲೇ ಹೊಂಗೆ ಮರವನ್ನು ಕಡಿದಿದ್ದಾರೆ.
ಸದರಿ ರಸ್ತೆಯಲ್ಲಿ ಬಹಳ ಜನ ಮತ್ತು ವಾಹನ ಸಂಚಾರವಿರುವುದರಿಂದ ಹಾಲಿ ಇರುವ ಅಂದರೆ ಒಳಾಂಗಣ ಕ್ರೀಡಾಂಗಣದ ಎದುರಿನಲ್ಲಿರುವ 80 ಅಡಿ ರಸ್ತೆಯಲ್ಲಿ ಎಲ್ಲಿ ಬೇಕಾದರೂ ವಿದ್ಯುತ್ ಟ್ರಾನ್ಸ್ಫಾರ್ಮರ್ನ್ನು ಮರುಸ್ಥಾಪಿಸಬೇಕು ಎಂದು ಬಡಾವಣೆ ನಿವಾಸಿಗಳು ಮನವಿ ಮಾಡಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಈ ಸ್ಥಳಕ್ಕೆ ಸ್ವತಃ ನಾನು ಖುದ್ದಾಗಿ ಭೇಟಿ ನೀಡಿದ್ದು ಸಮಸ್ಯೆಯ ಬಗ್ಗೆ ತಿಳುವಳಿಕೆ ಇದೆ ಎಂದ ಅವರು 80 ಅಡಿ ರಸ್ತೆಯಲ್ಲೆ ಟ್ರ್ಯಾನ್ಸ್ಫಾರ್ಮ್ ಮರುಸ್ಥಾಪಿಸಲು ಕೆಇಬಿ ಅಧಿಕಾರಿಗೆ ನಿರ್ದೇಶಿಸಿದರು.
ಬೂದಳ್ ರಸ್ತೆಯಲ್ಲಿರುವ ಆಶ್ರಯ ಮನೆಗಳ ಪೈಕಿ ಮನೆ ನಂ.6ರ ಮೇಲೆ ಏರ್ಟೇಲ್ ನೆಟ್ವರ್ಕ್ ಟವರ್ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾದಲ್ಲಿ ಅಕ್ಕಪಕ್ಕದ ನಿವಾಸಿಗಳ ಆರೋಗ್ಯದ ಮೇಲೆ ತೊಂದರೆಯುಂಟಾಗುತ್ತದೆ. ಆದ್ದರಿಂದ ಇದನ್ನು ತಡೆ ಹಿಡಿಯಬೇಕು ಎಂದು ವ್ಯಕ್ತಿಯೊಬ್ಬರು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಪಾಲಿಕೆ ಆಯುಕ್ತರಿಗೆ ಸೂಚಿಸಿ ಸಮಸ್ಯೆ ಪರಿಹರಿಸುತ್ತೇವೆ ಎಂದು ತಿಳಿಸಿದರು.
ಸಂಧ್ಯಾಸುರಕ್ಷ ಯೋಜನೆಯಡಿ ನನಗೆ ಒಂದು ಸಾವಿರ ರೂಪಾಯಿ ಬರುತ್ತಿದ್ದು, ಅದನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮ ಮಾಡಿ ಎಂದು ಶಾರದಮ್ಮ ಮನವಿ ಸಲ್ಲಿಸಿದರು.
ಕೆ.ಬಿ.ಪ್ರಕಾಶ್ ಅರ್ಜಿ ಸಲ್ಲಿಸಿ ರಸ್ತೆ ಅಪಘಾತದಲ್ಲಿ ತಮ್ಮ ಎಡಗಾಲನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ಚನ್ನಗಿರಿ ಆಸ್ಪತ್ರೆಯ ವೈದ್ಯರು ಮೆಡಿಕಲ್ ವರದಿಯಲ್ಲಿ ಶೇ.60 ರಷ್ಟು ಅಂಗನ್ಯೂನತೆ ಎಂದು ನಮೂದಿಸಿದ್ದಾರೆ. ಅದನ್ನು ಶೇಕಡಾ.75ರಷ್ಟು ಅಂಗನ್ಯೂನ್ಯತೆಗೆ ಹೆಚ್ಚಿಸಿ ಪರಿಹಾರ ಒದಗಿಸಬೇಕೆಂದು ಕೋರಿದರು. ಜಿಲ್ಲಾಧಿಕಾರಿ ಅವರನ್ನು ಸ್ಥಳದಲ್ಲೇ ಪರಿಶೀಲಿಸಿ ಇವರಿಗೆ ಕೂಡಲೇ ಶೇಕಡಾ. 75 ರಷ್ಟು ಅಂಗನ್ಯೂನತೆಗೆ ಹೆಚ್ಚಿಸಿ ಎಂದು ಆರೋಗ್ಯಾಧಿಕಾರಿಗೆ ಸೂಚಿಸಿದರು.
ಶಾಮನೂರು ಗ್ರಾಮ ಡಾಲರ್ಸ್ ಕಾಲೋನಿಯಲ್ಲಿ ಕೊಳಚೆ ನೀರಿನ ರಾಜ ಕಾಲುವೆಗೆ ಸಿ.ಸಿ. ಚರಂಡಿ ಹಾಗೂ ಡಕ್ ಸ್ಲ್ಯಾಬ್ ನಿರ್ಮಾಣ ಮಾಡುವಂತೆ ನಾಗರೀಕರ ಪರವಾಗಿ ಎಸ್.ಎಂ.ಪ್ರಭುದೇವಯ್ಯ ಹಾಗೂ ಕೆ.ಜಿ.ಲಕ್ಷ್ಮಿಕಾಂತ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿ ಮಯೂರ್ ಬಿಸೆ ಅರ್ಜಿ ಸಲ್ಲಿಸಿ ಪಿಯುಸಿಯಲ್ಲಿ ಶೇಕಡ 84ರಷ್ಟು ಫಲಿತಾಂಶ ಹೊಂದಿ ಇಂಜಿನಿಯರಿಂಗ್ ಮಾಡುತ್ತಿದ್ದು, ನನ್ನ ತಂದೆ ಒಂದು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಇದೀಗ ನಾನು ಇಂಜಿನಿಯರಿಂಗ್ ಮಾಡುತ್ತಿದ್ದು ನನಗೆ ಬಿಸಿಎಂ ಹಾಸ್ಟೆಲ್ ಅಲ್ಲಿ ಸೀಟ್ ಸಿಗದ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದರು.
ಇದಕ್ಕೆ ಜಿಲ್ಲಾಧಿಕಾರಿ ನಿನ್ನ ತಂದೆಯೊಂದಿಗೆ ನೀನು ಕೃಷಿಯಲ್ಲಿ ತೊಡಗಿಕೊಂಡು ನಿಮ್ಮ ಜಮೀನನ್ನು ಉನ್ನತಿಕರಣಗೊಳಿಸಬಹುದು ಎಂಬ ಸಲಹೆಗೆ ವಿದ್ಯಾರ್ಥಿ ಪ್ರತಿಕ್ರಿಯಿಸಿ ನನ್ನ ತಂದೆ ನನ್ನ ಹಾಗೆ ನೀನು ಕಷ್ಟಪಡಬೇಡ. ಉನ್ನತ ಮಟ್ಟದ ವಿದ್ಯಾಭ್ಯಾಸ ಪಡೆದು ಉದ್ಯೋಗ ಪಡೆದುಕೊಳ್ಳಬೇಕು ಎಂದಿದ್ದಾರೆ ಎಂದು ತಿಳಿಸಿದ. ಅದಕ್ಕೆ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿ ಈ ವಿದ್ಯಾರ್ಥಿಗೆ ಕೂಡಲೇ ಹಾಸ್ಟೆಲ್ ಸಿಗುವಂತೆ ನೋಡಿಕೊಳ್ಳಿ ಎಂದು ಆದೇಶಿಸಿದರು.
ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮ ಕೌಸರ್ ಮನವಿ ಮಾಡಿ, ಶಾಮನೂರಿಗೆ ಇರುವ ನಗರ ಸಾರಿಗೆಯನ್ನ ಜೆ.ಹೆಚ್.ಪಟೇಲ್ ಬಡಾವಣೆಯ ಮಹಿಳಾ ವಿದ್ಯಾರ್ಥಿ ನಿಲಯದವರೆಗೆ ವಿಸ್ತರಿಸಿದರೆ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ನಾಗರೀಕರಿಗೆ ಅನುಕೂಲವಾಗುವುದಾಗಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೆಎಸ್ಆರ್ಟಿಸಿ ಅಧಿಕಾರಿಗೆ ಸೂಚನೆ ನೀಡಿ ಈ ಬೇಡಿಕೆ ಕಳೆದ ವರ್ಷದಿಂದ ಇದ್ದು, ಈ ಕೂಡಲೇ ಅಂದರೆ ನಾಳೆಯಿಂದ ಅಲ್ಲಿಗೆ ಬಸ್ ಸಂಚಾರವನ್ನು ವಿಸ್ತರಿಸಲು ಆದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ದೂಡ ಆಯುಕ್ತ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ10 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

