Connect with us

ದಿನದ ಸುದ್ದಿ

ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ,15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ : ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ, ಸರ್ಕಾರ ಹಾಗೂ ಜಿಲ್ಲಾಡಳಿತ ನಮ್ಮ ನೆರವಿಗೆ ಇದೆ ಎಂಬ ಭಾವನೆ ಬಂದು ಅವರ ಕೆಲಸಗಳು ಆಗುವುದರಿಂದ ಸರ್ಕಾರದ ಮೇಲೆ ಅವರಿಗೆ ಭರವಸೆ ಮೂಡುತ್ತದೆ. ಹಾಗಾಗಿ ಪ್ರತಿ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿ ನಿಯಮಗಳನ್ವಯ ಅವರ ಕೆಲಸಗಳನ್ನು ಮಾಡಿಕೊಡಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಹಾಗೂ ಮುಂದಿನ ದಿನಗಳಲ್ಲಿ 15 ದಿನಕ್ಕೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳಲ್ಲಿ ಸಕಾರಾತ್ಮಕ ಮನೋಭಾವನೆ ಇರಬೇಕು. ಎಷ್ಟೋ ಸಮಸ್ಯೆಗಳನ್ನು ಮಾತಿನಿಂದ ಪರಿಹರಿಸಬಹುದು. ಹೀಗಿರುವಾಗ ಯಾವುದೇ ಸಮಸ್ಯೆಯಾಗಲೀ ತನ್ನಿಂದ ಆಗುವುದಿಲ್ಲ ಎನ್ನುವ ಬದಲು ಪರಿಶೀಲನೆ ನಡೆಸುತ್ತೇವೆ ಎಂದರೆ ಸಾರ್ವಜನಿಕರಲ್ಲಿ ಅಧಿಕಾರಿಗಳ ಮೇಲೆ ಆಶಾಭಾವನೆ ಬೆಳೆಯುತ್ತದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಚಿಕ್ಕಬೆನ್ನೂರು ಗ್ರಾಮದ ಕಲ್ಪನಾ ಅರ್ಜಿ ಸಲ್ಲಿಸಿ ಸರ್ವೇ ನಂ-25ರಲ್ಲಿ 3 ಎಕರೆ ಜಮೀನಿನ ಸಾಗುವಳಿ ಚೀಟಿಯನ್ನು ಪಡೆದುಕೊಂಡು ಖಾತೆ ಮತ್ತು ಪಹಣಿಯನ್ನು ಪಡೆದುಕೊಂಡಿದ್ದು, ಅದರಂತೆ ಸದರಿ ಜಮೀನನ್ನು ಪೋಡಿ ದುರಸ್ತಿ ಮತ್ತು ಹದ್ದುಬಸ್ತು ಮಾಡಿಸಿಕೊಡುವಂತೆ ಕೋರಿಕೊಂಡರು. ಇದಕ್ಕೆ ಜಿಲ್ಲಾಧಿಕಾರಿಗಳು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ಸದಸ್ಯರು ಮಹಾನಗರ ಪಾಲಿಕೆ ಚುನಾವಣೆ ಕೆಲಸಕ್ಕಾಗಿ ಕೆ.ಬಿ.ಬಡಾವಣೆಯ ಬಸವೇಶ್ವರ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ 2 ದಿನಗಳ ಕಾಲ ಶಾಲಾ ವಾಹನವನ್ನು ಬಳಸಿಕೊಂಡಿದ್ದು, ವಾಹನದ ಬಾಡಿಗೆಯನ್ನು ಕೊಡದೆ ಅಲೆದಾಡಿಸಿದ್ದಾರೆ. ಕೂಡಲೇ ಬಾಡಿಗೆಯನ್ನು ಕೊಡಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಕೂಡಲೇ ಪರಿಹರಿಸಲಾಗುವುದು ಎಂದರು.

ಆನಗೋಡು ಹೋಬಳಿ ನೇರಿಗೆ ಗ್ರಾಮದಲ್ಲಿ ಕೃಷಿ ಸಹಾಯಕರ ವಾಸಕ್ಕಾಗಿ ಸರ್ಕಾರದಿಂದ ವಸತಿ ಗೃಹವನ್ನು ನಿರ್ಮಿಸಿದ್ದು, ಇತ್ತೀಚೆಗೆ ಈ ಹುದ್ದೆಯನ್ನು ರದ್ದು ಮಾಡಲಾಯಿತು. ಪ್ರಸ್ತುತ ಈ ಜಾಗದಲ್ಲಿ ಖಾಸಾಗಿ ವ್ಯಕ್ತಿಯೊಬ್ಬರು ವಾಸಮಾಡುತ್ತಿದ್ದು, ಬಾಡಿಗೆಯನ್ನು ನೀಡುತ್ತಿಲ್ಲ.

ಅವರನ್ನು ಕೂಡಲೇ ಈ ಜಾಗದಿಂದ ಖಾಲಿ ಮಾಡಿಸಿ ಇಲ್ಲಿ ಅಂಚೆ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಅಥವಾ ಪಶು ಚಿಕಿತ್ಸಾಲಯ ಕಚೇರಿಗಳ ಪೈಕಿ ಯಾವುದಾದರು ಒಂದನ್ನು ಈ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರೊಬ್ಬರು ಅರ್ಜಿ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ | ಹೆಚ್.ಎ.ಎಲ್ ನಲ್ಲಿ‌ ತರಬೇತಿಗಾಗಿ ಅರ್ಜಿ ಆಹ್ವಾನ

ವೆಂಕಟೇಶ್‍ನಾಯ್ಕ್ ಅರ್ಜಿ ಸಲ್ಲಿಸಿ ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ನನ್ನ ಹೆಂಡತಿ ಮೂಕಿ ಹಾಗೂ ಕಿವುಡಿಯಾಗಿದ್ದಾಳೆ. ಒಂದುವರೆ ವರ್ಷದ ಮಗನಿಗೆ ಕಣ್ಣಿನ ತೊಂದರೆಯಿದ್ದು ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಆಸ್ಪತ್ರೆಯಲ್ಲಿ ಗುರುತಿನ ಚೀಟಿ, ರೇಷನ್‍ಕಾರ್ಡ್, ಆಧಾರ್‍ಕಾರ್ಡ್‍ಗಳನ್ನು ಕೇಳುತ್ತಿದ್ದು, ತಮ್ಮ ಬಳಿ ಇದ್ಯಾವುದೇ ಅಗತ್ಯ ದಾಖಲೆಗಳಿಲ್ಲ ಎಂದು ಸಮಸ್ಯೆ ಕುರಿತು ಹೇಳುವಾಗ, ಜಿಲ್ಲಾಧಿಕಾರಿ ಮೊದಲು ಆಧಾರ್‍ಕಾರ್ಡ್, ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಿ ತದನಂತರ ನಿಮ್ಮ ಮಗನ ಚಿಕಿತ್ಸೆ ನಡೆಯುತ್ತದೆ ಎಂದು ಭರವಸೆ ನೀಡಿದರು.

ಶಿವಕುಮಾರ್ ಸ್ವಾಮಿ ಲೇಔಟ್, 2ನೇ ಹಂತದ, 8ನೇ ಕ್ರಾಸ್, ಡಾಬಾ ಸ್ಟಾಪ್ ಹತ್ತಿರವಿರುವ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾರ್ಕ್ ಆಗಿ ಅನುಮೋದಿತಗೊಂಡಿರುವ ಜಾಗದಲ್ಲಿ ಬಂಜಾರ ಸಮುದಾಯದವರು ದೇವಸ್ಥಾನ ನಿರ್ಮಿಸಿ 2 ಬಾವುಟಗಳನ್ನು ಹಾರಿಸಿದ್ದಾರೆ. ಸಾರ್ವಜನಿಕ ಉದ್ಯಾನವನದ ಜಾಗ ದುರ್ಬಳಕೆ ಮಾಡಿಕೊಂಡಿದ್ದು ಕೂಡಲೇ ದೇವಸ್ಥಾನವನ್ನು ತೆರವುಗೊಳಿಸಿ ಪಾರ್ಕ್ ಆಗಿ ಉಳಿಸಿಕೊಡಬೇಕು ಎಂದು ಬಡಾವಣೆಯ ನಿವಾಸಿಗಳು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕೂಡಲೇ ಪರಿಶೀಲನೆ ನಡೆಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಸ್.ಎಸ್.ಬಡಾವಣೆ ‘ಎ’ ಬ್ಲಾಕ್ ನೇತಾಜಿ ಸುಭಾಷ್‍ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದ ಎದುರು ಇರುವ ವಿದ್ಯುತ್ ಟ್ರಾನ್ಸ್‍ಫರ್ಮರ್ ಮತ್ತು ಕಂಬಗಳನ್ನು ಸ್ಥಳಾಂತರಿಸಿ, ಇದನ್ನು ಸೈಟ್ ನಂ.30, ಡೋರ್ ನಂಬರ್ 3989, 11ನೇ ಮುಖ್ಯ ರಸ್ತೆಗೆ ಮರುಸ್ಥಾಪಿಸಲು ಉದ್ದೇಶಿಸಲಾಗಿದೆ. ಆದರೆ ಈ ರಸ್ತೆಯು 20 ಅಡಿ ಅಗಲವಿದ್ದು, ಇದರಲ್ಲಿ ಚರಂಡಿ, ನೀರಿನ ಪೈಪ್‍ಲೈನ್, ಮತ್ತು ಯುಜಿಡಿ ಪೈಪ್‍ಲೈನ್ ಇದ್ದು, ಅರಣ್ಯ ಇಲಾಖೆಯ ಅನುಮತಿ ಇಲ್ಲದೇ ಈಗಾಗಲೇ ಹೊಂಗೆ ಮರವನ್ನು ಕಡಿದಿದ್ದಾರೆ.

ಸದರಿ ರಸ್ತೆಯಲ್ಲಿ ಬಹಳ ಜನ ಮತ್ತು ವಾಹನ ಸಂಚಾರವಿರುವುದರಿಂದ ಹಾಲಿ ಇರುವ ಅಂದರೆ ಒಳಾಂಗಣ ಕ್ರೀಡಾಂಗಣದ ಎದುರಿನಲ್ಲಿರುವ 80 ಅಡಿ ರಸ್ತೆಯಲ್ಲಿ ಎಲ್ಲಿ ಬೇಕಾದರೂ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನ್ನು ಮರುಸ್ಥಾಪಿಸಬೇಕು ಎಂದು ಬಡಾವಣೆ ನಿವಾಸಿಗಳು ಮನವಿ ಮಾಡಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಈ ಸ್ಥಳಕ್ಕೆ ಸ್ವತಃ ನಾನು ಖುದ್ದಾಗಿ ಭೇಟಿ ನೀಡಿದ್ದು ಸಮಸ್ಯೆಯ ಬಗ್ಗೆ ತಿಳುವಳಿಕೆ ಇದೆ ಎಂದ ಅವರು 80 ಅಡಿ ರಸ್ತೆಯಲ್ಲೆ ಟ್ರ್ಯಾನ್ಸ್‍ಫಾರ್ಮ್ ಮರುಸ್ಥಾಪಿಸಲು ಕೆಇಬಿ ಅಧಿಕಾರಿಗೆ ನಿರ್ದೇಶಿಸಿದರು.

ಬೂದಳ್ ರಸ್ತೆಯಲ್ಲಿರುವ ಆಶ್ರಯ ಮನೆಗಳ ಪೈಕಿ ಮನೆ ನಂ.6ರ ಮೇಲೆ ಏರ್‍ಟೇಲ್ ನೆಟ್‍ವರ್ಕ್ ಟವರ್ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾದಲ್ಲಿ ಅಕ್ಕಪಕ್ಕದ ನಿವಾಸಿಗಳ ಆರೋಗ್ಯದ ಮೇಲೆ ತೊಂದರೆಯುಂಟಾಗುತ್ತದೆ. ಆದ್ದರಿಂದ ಇದನ್ನು ತಡೆ ಹಿಡಿಯಬೇಕು ಎಂದು ವ್ಯಕ್ತಿಯೊಬ್ಬರು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಪಾಲಿಕೆ ಆಯುಕ್ತರಿಗೆ ಸೂಚಿಸಿ ಸಮಸ್ಯೆ ಪರಿಹರಿಸುತ್ತೇವೆ ಎಂದು ತಿಳಿಸಿದರು.

ಸಂಧ್ಯಾಸುರಕ್ಷ ಯೋಜನೆಯಡಿ ನನಗೆ ಒಂದು ಸಾವಿರ ರೂಪಾಯಿ ಬರುತ್ತಿದ್ದು, ಅದನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮ ಮಾಡಿ ಎಂದು ಶಾರದಮ್ಮ ಮನವಿ ಸಲ್ಲಿಸಿದರು.
ಕೆ.ಬಿ.ಪ್ರಕಾಶ್ ಅರ್ಜಿ ಸಲ್ಲಿಸಿ ರಸ್ತೆ ಅಪಘಾತದಲ್ಲಿ ತಮ್ಮ ಎಡಗಾಲನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ಚನ್ನಗಿರಿ ಆಸ್ಪತ್ರೆಯ ವೈದ್ಯರು ಮೆಡಿಕಲ್ ವರದಿಯಲ್ಲಿ ಶೇ.60 ರಷ್ಟು ಅಂಗನ್ಯೂನತೆ ಎಂದು ನಮೂದಿಸಿದ್ದಾರೆ. ಅದನ್ನು ಶೇಕಡಾ.75ರಷ್ಟು ಅಂಗನ್ಯೂನ್ಯತೆಗೆ ಹೆಚ್ಚಿಸಿ ಪರಿಹಾರ ಒದಗಿಸಬೇಕೆಂದು ಕೋರಿದರು. ಜಿಲ್ಲಾಧಿಕಾರಿ ಅವರನ್ನು ಸ್ಥಳದಲ್ಲೇ ಪರಿಶೀಲಿಸಿ ಇವರಿಗೆ ಕೂಡಲೇ ಶೇಕಡಾ. 75 ರಷ್ಟು ಅಂಗನ್ಯೂನತೆಗೆ ಹೆಚ್ಚಿಸಿ ಎಂದು ಆರೋಗ್ಯಾಧಿಕಾರಿಗೆ ಸೂಚಿಸಿದರು.

ಶಾಮನೂರು ಗ್ರಾಮ ಡಾಲರ್ಸ್ ಕಾಲೋನಿಯಲ್ಲಿ ಕೊಳಚೆ ನೀರಿನ ರಾಜ ಕಾಲುವೆಗೆ ಸಿ.ಸಿ. ಚರಂಡಿ ಹಾಗೂ ಡಕ್ ಸ್ಲ್ಯಾಬ್ ನಿರ್ಮಾಣ ಮಾಡುವಂತೆ ನಾಗರೀಕರ ಪರವಾಗಿ ಎಸ್.ಎಂ.ಪ್ರಭುದೇವಯ್ಯ ಹಾಗೂ ಕೆ.ಜಿ.ಲಕ್ಷ್ಮಿಕಾಂತ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿ ಮಯೂರ್ ಬಿಸೆ ಅರ್ಜಿ ಸಲ್ಲಿಸಿ ಪಿಯುಸಿಯಲ್ಲಿ ಶೇಕಡ 84ರಷ್ಟು ಫಲಿತಾಂಶ ಹೊಂದಿ ಇಂಜಿನಿಯರಿಂಗ್ ಮಾಡುತ್ತಿದ್ದು, ನನ್ನ ತಂದೆ ಒಂದು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಇದೀಗ ನಾನು ಇಂಜಿನಿಯರಿಂಗ್ ಮಾಡುತ್ತಿದ್ದು ನನಗೆ ಬಿಸಿಎಂ ಹಾಸ್ಟೆಲ್ ಅಲ್ಲಿ ಸೀಟ್ ಸಿಗದ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದರು.

ಇದಕ್ಕೆ ಜಿಲ್ಲಾಧಿಕಾರಿ ನಿನ್ನ ತಂದೆಯೊಂದಿಗೆ ನೀನು ಕೃಷಿಯಲ್ಲಿ ತೊಡಗಿಕೊಂಡು ನಿಮ್ಮ ಜಮೀನನ್ನು ಉನ್ನತಿಕರಣಗೊಳಿಸಬಹುದು ಎಂಬ ಸಲಹೆಗೆ ವಿದ್ಯಾರ್ಥಿ ಪ್ರತಿಕ್ರಿಯಿಸಿ ನನ್ನ ತಂದೆ ನನ್ನ ಹಾಗೆ ನೀನು ಕಷ್ಟಪಡಬೇಡ. ಉನ್ನತ ಮಟ್ಟದ ವಿದ್ಯಾಭ್ಯಾಸ ಪಡೆದು ಉದ್ಯೋಗ ಪಡೆದುಕೊಳ್ಳಬೇಕು ಎಂದಿದ್ದಾರೆ ಎಂದು ತಿಳಿಸಿದ. ಅದಕ್ಕೆ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿ ಈ ವಿದ್ಯಾರ್ಥಿಗೆ ಕೂಡಲೇ ಹಾಸ್ಟೆಲ್ ಸಿಗುವಂತೆ ನೋಡಿಕೊಳ್ಳಿ ಎಂದು ಆದೇಶಿಸಿದರು.

ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮ ಕೌಸರ್ ಮನವಿ ಮಾಡಿ, ಶಾಮನೂರಿಗೆ ಇರುವ ನಗರ ಸಾರಿಗೆಯನ್ನ ಜೆ.ಹೆಚ್.ಪಟೇಲ್ ಬಡಾವಣೆಯ ಮಹಿಳಾ ವಿದ್ಯಾರ್ಥಿ ನಿಲಯದವರೆಗೆ ವಿಸ್ತರಿಸಿದರೆ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ನಾಗರೀಕರಿಗೆ ಅನುಕೂಲವಾಗುವುದಾಗಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೆಎಸ್‍ಆರ್‍ಟಿಸಿ ಅಧಿಕಾರಿಗೆ ಸೂಚನೆ ನೀಡಿ ಈ ಬೇಡಿಕೆ ಕಳೆದ ವರ್ಷದಿಂದ ಇದ್ದು, ಈ ಕೂಡಲೇ ಅಂದರೆ ನಾಳೆಯಿಂದ ಅಲ್ಲಿಗೆ ಬಸ್ ಸಂಚಾರವನ್ನು ವಿಸ್ತರಿಸಲು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ದೂಡ ಆಯುಕ್ತ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending