Connect with us

ದಿನದ ಸುದ್ದಿ

ಪರವಾನಗಿ ಹೊಂದಿದ ಮಾರಾಟಗಾರರಿಂದ ಮಾತ್ರ ತಂಬಾಕು ಮಾರಾಟವಾಗಬೇಕು : ಎನ್ಎಲ್ಎಸ್ಐಯು ವರದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಎಲ್ಲ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಪರವಾನಗಿ ಹೊಂದಿರಬೇಕು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಎಲ್ಲ ಆವರಣಗಳಲ್ಲಿ ಪರವಾನಗಿಯನ್ನು ಎದ್ದು ಕಾಣುವಂತೆ ಪ್ರದರ್ಶಿಸಬೇಕು ಹಾಗು ಪ್ರತಿ ವರ್ಷ ಪರವಾನಗಿಯನ್ನು ನವೀಕರಿಸಬೇಕು ಎಂದು ಇತ್ತೀಚೆಗೆ ಬಿಡುಗಡೆಗೊಂಡ ‘ಭಾರತದಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಜಾರಿ ಚೌಕಟ್ಟು’ (Framework for Implementation of Tobacco Vendor Licensing in India) ವರದಿ ಶಿಫಾರಸು ಮಾಡಿದೆ.

ತಂಬಾಕು ಉತ್ಪನ್ನಗಳ ಲಭ್ಯತೆಯನ್ನು ನಿಯಂತ್ರಿಸಿ, ವ್ಯಸನಕಾರಿ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಆಜೀವ ಯಾತನೆಯಿಂದ ಭಾರತೀಯರನ್ನು ರಕ್ಷಿಸಲು ತಂಬಾಕು ಮಾರಾಟಗಾರರ ಪರವಾನಗಿ ನಿರ್ಣಾಯಕವಾಗಿದೆ. ವರದಿಯ ಪ್ರಕಾರ, ಸಿಗರೇಟ್, ಬೀಡಿ ಮತ್ತು ಜಗಿಯುವ ತಂಬಾಕು ಉತ್ಪನ್ನ ಮಾರಾಟಕ್ಕೆ ಮಾರಾಟಗಾರರ ಪರವಾನಗಿಯನ್ನು ಅನುಷ್ಠಾನಗೊಳಿಸಿದರೆ, ತಂಬಾಕು ನಿಯಂತ್ರಣ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಜಾರಿಗೂ ಸಹಕಾರಿಯಾಗುತ್ತದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್ಎಲ್ಎಸ್ಐಯು) ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್ ಬಿಡುಗಡೆ ಮಾಡಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಫೆಬ್ರವರಿ 25ಕ್ಕೆ ಸಲ್ಲಿಸಲಾಗಿರುವ ಈ ವರದಿ, ಭಾರತದಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸಲು ಮಾರಾಟಗಾರರ ಪರವಾನಗಿ ಪರಿಕಲ್ಪನೆಯನ್ನು ವಿಶ್ಲೇಷಿಸಿದೆ.

ಇದನ್ನೂ ಓದಿ | ದಾವಣಗೆರೆ ಜಿ.ಪಂ ಸಾಮಾನ್ಯ ಸಭೆ | ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವಂತೆ ಸದಸ್ಯರ ಒತ್ತಾಯ

ಅಲ್ಲದೆ, ಭಾರತದ ವಿವಿಧ ರಾಜ್ಯ ಮತ್ತು ನಗರಗಳು ಮಾರಾಟಗಾರರ ಪರವಾನಗಿ ಕುರಿತು ಅಳವಡಿಸಿಕೊಂಡಿರುವ ಪದ್ಧತಿ ಮತ್ತು ಪ್ರಕ್ರಿಯೆಯನ್ನು ಪರಿಶೀಲಿಸಿದೆ. ತಂಬಾಕು ಮಾರಾಟಗಾರರ ಪರವಾನಗಿಗಾಗಿ ಅಸ್ತಿತ್ವದಲ್ಲಿರುವ ಕಾನೂನುಗಳು, ಜಾಗತಿಕವಾಗಿ ಆಚರಣೆಯಲ್ಲಿರುವ ಅತ್ಯುತ್ತಮ ಅಭ್ಯಾಸಗಳು ಮತ್ತು ವಿಶ್ವ ಅರೋಗ್ಯ ಸಂಸ್ಥೆಯ ಫ್ರೇಮ್ ವರ್ಕ್ ಕನ್ವೆನ್ಷನ್ ಆನ್ ಟೊಬ್ಯಾಕೋ ಕಂಟ್ರೋಲ್ (WHO FCTC) ತಂಬಾಕು ನಿಯಂತ್ರಣದ ಕುರಿತಾದ ಜಾಗತಿಕ ಸಾರ್ವಜನಿಕ ಆರೋಗ್ಯ ಒಪ್ಪಂದದಡಿ ಸೂಚಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ವರದಿ ಮಾದರಿ ಚೌಕಟ್ಟನ್ನು ಪ್ರಸ್ತಾಪಿಸಿದೆ.

ನಿಯಂತ್ರಕ ವಿಧಾನವಾಗಿ ಪರಿಗಣಿಸುವುದಾದರೆ, ತಂಬಾಕು ಮಾರಾಟಗಾರರ ಪರವಾನಗಿ ರಾಜ್ಯ/ಪುರಸಭೆ ಮಟ್ಟದಲ್ಲಿ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಬಹುದು. ಚಿಲ್ಲರೆ ವ್ಯಾಪಾರದಲ್ಲಿ ತಂಬಾಕು ಉತ್ಪನ್ನಗಳ ಲಭ್ಯತೆ ಕುಗ್ಗಿಸುವ ಗುರಿ ಹೊಂದಿರುವ ವಿವಿಧ ನೀತಿಗಳನ್ನು ಕಾರ್ಯಗತಗೊಳಿಸಿ ಜಾರಿಗೊಳಿಸಲು ಮಾರಾಟಗಾರರ ಪರವಾನಗಿ ಮಾದರಿ ಚೌಕಟ್ಟನ್ನು ಬಳಸಬಹುದಾಗಿದ್ದು, ಇದು ಸ್ಥಳೀಯ ಸರ್ಕಾರಗಳಿಗೆ ಉತ್ತಮ ನಿಯಂತ್ರಕ ಸಾಧನದ ಅಡಿಗಲ್ಲಾಗಿದೆ.

ಭಾರತದಲ್ಲಿ ತಂಬಾಕು ನಿಯಂತ್ರಣವನ್ನು ಪ್ರಾಥಮಿಕವಾಗಿ ಕೋಟ್ಪಾ (COTPA) ನಿಯಂತ್ರಿಸುತ್ತಿದ್ದರೂ, ತಂಬಾಕು ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಇತರ ಕಾನೂನುಗಳಿವೆ. ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿವಿಧ ಕಾನೂನುಗಳ ಪರಿಣಾಮಕಾರಿ ಮತ್ತು ಸಂಘಟಿತ ಜಾರಿಗೆ ರಾಜ್ಯ ಮತ್ತು ಪುರಸಭೆ ಸರ್ಕಾರಗಳಿಗೆ ತಂಬಾಕು ಮಾರಾಟಗಾರರ ಪರವಾನಗಿ ಒಂದು ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ.

“ತಂಬಾಕಿನ ಹಾನಿಕಾರಕ ಪರಿಣಾಮಗಳು ಜಗತಿನಾದ್ಯಂತ ಸಾಬೀತಾಗಿದ್ದು, ಅವುಗಳನ್ನು ಒಪ್ಪಿಕೊಳ್ಳಲಾಗಿದೆ. ಈ ವರದಿಯ ಮೂಲಕ, ಅಸ್ತಿತ್ವದಲ್ಲಿರುವ ಕಾನೂನು ಮತ್ತು ಜಾಗತಿಕ ಅತ್ಯುತ್ತಮ ಅಭ್ಯಾಸಗಳ ಆಧಾರದ ಮೇಲೆ ಪರವಾನಗಿ ಪಡೆದ ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮಾದರಿ ಕಾನೂನು ಚೌಕಟ್ಟನ್ನು ಎನ್‌ಎಲ್‌ಎಸ್‌ಐಯು ಶಿಫಾರಸು ಮಾಡಿದೆ.

ಈ ಮಾರಕ ಉತ್ಪನ್ನಗಳಿಂದ ಭಾರತೀಯರನ್ನು, ವಿಶೇಷವಾಗಿ ಮಕ್ಕಳು ಮತ್ತು ಯುವಕರನ್ನು ರಕ್ಷಿಸಲು ರಾಜ್ಯ ಮತ್ತು ಪುರಸಭ ಸರ್ಕಾರಗಳು ಈ ಶಿಫಾರಸುಗಳನ್ನು ಪರಿಗಣಿಸುತ್ತವೆ ಎಂದು ನಾವು ಆಶಿಸುತ್ತೇವೆ,” ಎಂದು ಪ್ರೊ. (ಡಾ.) ಅಶೋಕ್ ಆರ್. ಪಾಟೀಲ್, ಕಾನೂನು ಪ್ರಾಧ್ಯಾಪಕರು ಮತ್ತು ಚೇರ್ ಪ್ರೊಫೆಸರ್, ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್, ಎನ್‌ಎಲ್‌ಎಸ್‌ಐಯು, ಬೆಂಗಳೂರು, ಅವರು ತಿಳಿಸಿದರು.

ಎನ್‌ಎಲ್‌ಎಸ್‌ಐಯು ವರದಿಯ ತಂಬಾಕು ಮಾರಾಟಗಾರರ ಪರವಾನಗಿಯ ಮಾದರಿ ಕಾನೂನು ಚೌಕಟ್ಟಿನ ಪ್ರಕಾರ: ಎಲ್ಲ ತಂಬಾಕು ಮಾರಾಟಗಾರರು, ಚಿಲ್ಲರೆ ಅಥವಾ ಸಗಟು ವ್ಯಾಪಾರಿಗಳು, 12 ತಿಂಗಳ ಅವಧಿಯ ಮಾನ್ಯತೆಯುಳ್ಳ ಪರವಾನಗಿ ಹೊಂದಿರಬೇಕು, ಅದು ವರ್ಗಾಯಿಸಲಾಗದ ಪರವಾನಗಿಯಾಗಿರಬೇಕು ಮತ್ತು ಅದನ್ನು ಪ್ರತಿವರ್ಷ ನವೀಕರಿಸಬೇಕು; ಪರವಾನಗಿ ಪಡೆಯಲು ಉದ್ದೇಶಿಸುವ ಎಲ್ಲ ಅರ್ಜಿದಾರರು ತಂಬಾಕು ನಿಯಂತ್ರಣ ಕಾನೂನುಗಳನ್ನು ಅನುಸರಿಸಬೇಕು; ತಂಬಾಕು ಉತ್ಪನ್ನಗಳನ್ನು ಮಾತ್ರ ಮಾರುವ ಮಾಡುವ ಮಾರಾಟಗಾರರಿಗೆ ಪರವಾನಗಿ ನೀಡಬೇಕು ಮತ್ತು ತಂಬಾಕಿನೊಂದಿಗೆ ಚಾಕೊಲೇಟ್, ಮಿಠಾಯಿ, ಬಿಸ್ಕತ್ತು, ಚಿಪ್ಸ್ ಮುಂತಾದ ತಂಬಾಕೇತರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಬೇಕು; ತಂಬಾಕು ಉತ್ಪನ್ನಗಳ ಮಾರಾಟದ ಆವರಣದಲ್ಲಿ ತಂಬಾಕು ಪರವಾನಗಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು; ನಿಬಂಧನೆಗಳು ಮತ್ತು ಷರತ್ತುಗಳ ಉಲ್ಲಂಘನೆಗೆ ಹಂತ ಹಂತವಾಗಿ ದಂಡ ವಿಧಿಸುವುದು, ಪರವಾನಗಿ ಅಮಾನತುಗೊಳಿಸುವುದು ಮತ್ತು ಅಂತಿಮವಾಗಿ ಪರವಾನಗಿ ರದ್ದುಗೊಳಿಸುವ ಮೂಲಕ ಕ್ರಮಕೈಗೊಳ್ಳಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಭಾಗವಾದ ರಾಜ್ಯ ತಂಬಾಕು ನಿಯಂತ್ರಣ ಕೋಶದ (ಎಸ್‌ಟಿಸಿಸಿ) ಉಪನಿರ್ದೇಶಕರಾದ ಡಾ. ಸೆಲ್ವರಾಜನ್, “ವರದಿಯಲ್ಲಿ ಮುಖ್ಯವಾಗಿ ಉಲ್ಲೇಖಿಸಿರುವಂತೆ, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ಸಿಗುವುದನ್ನು ತಡೆಯಲು ಮತ್ತು ಮಾರಾಟವನ್ನು ನಿಯಂತ್ರಿಸಲು, ಮಾರಾಟಗಾರರ ಪರವಾನಗಿ ಅತ್ಯಗತ್ಯವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲವಿದ್ದು, ನೂರಾರು ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಬೆಂಬಲ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ದಾರೆ” ಎಂದರು.

ಮೈಸೂರಿನ ತಂಬಾಕು ವಿರೋಧಿ ವೇದಿಕೆಯ ಸಂಚಾಲಕರಾದ ಶ್ರೀ ವಸಂತ್‌ಕುಮಾರ್ ಮೈಸೂರಮಠ್, “ಜೀವನವಿಡಿ ದುಃಖ ಮತ್ತು ಸಂಕಟದಿಂದ ಯುವಕರು/ಮಕ್ಕಳನ್ನು ರಕ್ಷಿಸಲು ತಂಬಾಕು ಉತ್ಪನ್ನಗಳು ಅವರಿಗೆ ಸಿಗದಂತೆ ಮಾಡುವುದು ಅನಿವಾರ್ಯವಾಗಿದೆ. ವಿಶೇಷವಾಗಿ, ಈ ಸವಾಲಿನ ಸಂದರ್ಭದಲ್ಲಿ, ಭಾರತದಲ್ಲಿ ತಂಬಾಕು ಎಂಬ ಪೀಡೆಯನ್ನು ತಡೆಯಲು ಈ ವ್ಯಸನಕಾರಿ ಉತ್ಪನ್ನಗಳ ಮಾರಾಟ, ಪ್ರಚಾರ ಮತ್ತು ಬಳಕೆಯನ್ನು ನಿಯಂತ್ರಿಸುವುದು ಅತ್ಯಂತ ನಿರ್ಣಾಯಕವಾಗಿದೆ.

ಅಧಿಕೃತವಾಗಿ ಪರವಾನಗಿ ಪಡೆದ ಅಂಗಡಿಗಳು/ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟದಿಂದ ಜನರ ಆರೋಗ್ಯ ಹದಗೆಡುವುದನ್ನುತಪ್ಪಿಸಿದಂತಾಗುತ್ತದೆ ಮತ್ತುಸರ್ಕಾರದ ಮೂಲ ಕರ್ತವ್ಯವಾದ ಸಾರ್ವಜನಿಕ ಆರೋಗ್ಯ ಸುಧಾರಣೆ, ಸ್ವಾಸ್ಥ್ಯ ಹಾಗು ಯೋಗಕ್ಷೇಮ ರಕ್ಷಣೆಯನ್ನೂ ಮಾಡಿದಂತಾಗುತ್ತದೆ,” ಎಂದು ಅಭಿಪ್ರಾಯಪಟ್ಟರು.

2017ರ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಕ್ಕಳು ತಂಬಾಕು ಉತ್ಪನ್ನಗಳಿಗೆ ಒಡ್ಡಿಕೊಳ್ಳುವುದರಿಂದ ರಕ್ಷಿಸುವಂತೆ ಪುರಸಭೆ/ಸ್ಥಳೀಯ ಪ್ರಾಧಿಕಾರಗಳಿಗೆ ಸೂಚಿಸಿತ್ತು. ಇದಕ್ಕಾಗಿ ವ್ಯವಸ್ಥೆಯೊಂದನ್ನು ಅಭಿವೃದ್ಧಿಪಡಿಸಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಚಿಲ್ಲರೆ ಅಂಗಡಿಗಳಿಗೆ ಅನುಮತಿ ನೀಡುವುದರೊಂದಿಗೆ ಅಲ್ಲಿ ಮಿಠಾಯಿ, ಚಿಪ್ಸ್, ಬಿಸ್ಕತ್ತು, ತಂಪು ಪಾನೀಯ, ಇತ್ಯಾದಿ ತಂಬಾಕೇತರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಖಚಿತಪಡಿಸಿಕೊಳ್ಳಲು ಸೂಚಿಸಿತ್ತು.

ಇದರನ್ವಯ, ಅಯೋಧ್ಯೆ, ಲಕ್ನೋ, ಜೈಪುರ, ರಾಂಚಿ, ಪಾಟ್ನಾ, ಹೌರಾ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಗತ್ಯ ಆದೇಶ ಹೊರಡಿಸಿ ನಶ್ಯ, ಸಿಗಾರ್, ಸಿಗರೇಟ್ ಮತ್ತು ಬೀಡಿ ಸೇರಿದಂತೆ ಎಲ್ಲ ರೀತಿಯ ತಂಬಾಕಿನ ಸಂಗ್ರಹ, ಪ್ಯಾಕಿಂಗ್, ಶುದ್ಧೀಕರಣ ಸೇರಿದಂತೆ ತಂಬಾಕಿನ ಉತ್ಪಾದನೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಕಡ್ಡಾಯಗೊಳಿಸಿವೆ.

ತಂಬಾಕು ಬಳಕೆದಾರರ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಎರಡನೇ ಸ್ಥಾನದಲ್ಲಿದೆ (268 ಮಿಲಿಯನ್ ಅಥವಾ ದೇಶದ ಶೇಕಡಾ 28.6 % ವಯಸ್ಕರು). ಇದರಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ. ಧೂಮಪಾನದಿಂದಾಗಿ 10 ಲಕ್ಷ ಜನ ಮರಣ ಹೊಂದುತ್ತಿದ್ದರೆ, ಎರಡು ಲಕ್ಷಕ್ಕೂ ಹೆಚ್ಚು ಮಂದಿ ಧೂಮಪಾನಕ್ಕೆ ಒಡ್ಡಿಕೊಂಡು (ಸೆಕೆಂಡ್ ಹ್ಯಾಂಡ್ ಸ್ಮೋಕಿಂಗ್) ಸಾವನ್ನಪ್ಪುತ್ತಿದ್ದಾರೆ.

ಅಲ್ಲದೆ, 35,000ಕ್ಕೂ ಹೆಚ್ಚು ಜನ ಹೊಗೆರಹಿತ ತಂಬಾಕು ಬಳಕೆಯಿಂದ ಅಸುನೀಗುತ್ತಿದ್ದಾರೆ. ತಂಬಾಕು ಬಳಕೆ ಭಾರತದಲ್ಲಿನ ಶೇಕಡಾ 27 % ಎಲ್ಲ ವಿಧದ ಕ್ಯಾನ್ಸರ್ ಗಳಿಗೆ ಕಾರಣ. ತಂಬಾಕು ಸಂಬಂದಿತ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಪ್ರತಿವರ್ಷ 1,82,000 ಕೋಟಿ ರೂಪಾಯಿಗಳು ವ್ಯಯವಾಗುತ್ತಿದ್ದು, ಇದು ಭಾರತದ ಜಿಡಿಪಿಯ ಶೇಕಡಾ 1.8% ರಷ್ಟಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

Trending