ದಿನದ ಸುದ್ದಿ
ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ : ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.
ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂತೆಬೆನ್ನೂರು ಹೋಬಳಿ ಮಟ್ಟದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕಳೆದ 3 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರದಿಂದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲೂ ಜನರ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಲಿದೆ ಎಂದರು.
ಸೋಮವಾರ ಈ ಭಾಗದಲ್ಲಿ ರೂ.28.79 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳು ನೆರವೇರಿದ್ದು, ಶಾಸಕರ ಕಾಳಜಿಯಿಂದಾಗಿ ತಾಲ್ಲೂಕು ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಎಂದ ಅವರು ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನಾಯಕತ್ವದ ನಮ್ಮ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿ ದೃಷ್ಟಿಯಲ್ಲಿಟ್ಟುಕೊಂಡು ಕರೋನಾ ಸಂದರ್ಭದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಕಾರ್ಯಕ್ರಮಗಳನ್ನು ನೀಡಿದೆ ಎಂದರು.
ಇದನ್ನೂ ಓದಿ | ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ
ಈ ಜನಸ್ಪಂದನ ಕಾರ್ಯಕ್ರಮದ ಮುಖ್ಯ ಉದ್ದೇಶ ಗ್ರಾಮಗಳ ಅಭಿವೃದ್ಧಿಯಾಗಿದೆ. ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ದೇವಸ್ಥಾನಗಳ ಜೀರ್ಣೋದ್ದಾರ, ಸಮುದಾಯ ಭವನಗಳ ನಿರ್ಮಾಣ, ಶಾಲೆಗಳ ನವೀಕರಣಕ್ಕಾಗಿ ಸರ್ಕಾರದಿಂದ ರೂ28.79 ಲಕ್ಷವನ್ನು ಮಂಜೂರು ಮಾಡಲಾಗಿದೆ ಎಂದರು.
ರೈತರು, ಬಡವರು, ಮತ್ತು ದೀನದಲಿತರಿಗಾಗಿ ಕೃಷಿಯಂತ್ರೋಪಕರಣಗಳನ್ನು, ಹಾಗೂ ಕೈಗಾಡಿಗಳನ್ನು ಫಲಾನುಭವಿಗಳಿಗೆ ವಿತರಿಸಿದ ಅವರು, ಗ್ರಾಮದ ಜನರಿಗೆ ಆರ್ಥಿಕವಾಗಿ ಸಬಲರಾಗಬೇಕಾದರೆ ಸರ್ಕಾರದಿಂದ ಬರುವ ಅನುದಾನದ ಸೌಲಭ್ಯ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಪಡೆದು ವ್ಯವಸಾಯಕ್ಕೆ ರೈತರು ಬಳಸಿಕೊಳ್ಳಬಹುದು.
ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರದಿಂದ ರೂ.6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ರೂ.4 ಸಾವಿರ ಹಣ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಹಾಗೂ ಕೃಷಿ ಇಲಾಖೆಯಿಂದ ಕೃಷಿ ಯಂತ್ರೋಪಕರಣಗಳನ್ನು ನಿಗದಿತ ಬಾಡಿಗೆ ರೂಪದಲ್ಲಿ ಪಡೆದು ವ್ಯವಸಾಯಕ್ಕೆ ಅನುಕೂಲ ಪಡೆಯಬಹುದು.
ಹಾಗೆಯೇ ಈ ಬಾರಿಯ ಬಜೆಟ್ನಲ್ಲಿ ನಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ದಾವಣಗೆರೆ ಜಿಲ್ಲೆಯ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡಲು ಚರ್ಚಿಸಲಾಗಿದೆ. ಹಾಗೂ ನಮ್ಮ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜು ಸ್ಥಾಪನೆಯಾಗಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಡಿ.ಎಲ್. ನ ಅಧ್ಯಕ್ಷರು ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಕೆ.ಮಾಡಾಳ್ ವಿರುಪಾಕ್ಷಪ್ಪ, ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಹುಡುಕುವ ಬದಲಾಗಿ ಅವರೇ ಜನರ ಬಳಿ ಬಂದಾಗ ಸಮಸ್ಯೆಗಳು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ ಇದರಿಂದ ನಾವು ಮಾಡಬೇಕಾಗಿರುವ ಕೆಲಸದ ಅರಿವು ನಮಗಾಗುತ್ತದೆ ಎಂದರು.
ಅಧಿಕಾರಿಗಳ ಭೇಟಿಗೆ ಸಾಮಾನ್ಯ ಜನ ತೆರಳಿದರೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿಯಿದೆ. ಬದಲಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ನಡುವೆ ಇದ್ದಲ್ಲಿ ಜನರ ಕಷ್ಟ-ಸುಖಗಳನ್ನು ಮಕ್ತವಾಗಿ ಗ್ರಹಿಸುವ ಮತ್ತು ಅವರ ಬೇಡಿಕೆಗಳನ್ನು ಈಡೇರಿಸಲು ಈ ಕಾರ್ಯಕ್ರಮದಿಂದ ಸಾಧ್ಯವಾಗಲಿದೆ.
ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ವೇತನ, ಅಕ್ರಮ ಸಕ್ರಮ ಯೋಜನೆ ನಿವೇಶನ ಹಕ್ಕು ಪತ್ರಗಳಿಗಾಗಿ ವಿ.ಎ, ಆರ್.ಐ ಬಳಿ ತಿಂಗಳಗಟ್ಟಲೇ ಅಲೆದಾಡುವ ಸಮಸ್ಯೆ ಇತ್ತು. ಇಂದು ಸರ್ಕಾರ ಮತ್ತು ಅಧಿಕಾರಿಗಳು ನಿಮ್ಮ ಬಳಿಗೆ ಬಂದು ಸುಮಾರು ರೂ. 37.70 ಲಕ್ಷಗಳ ವಿವಿಧ ಪ್ರಯೋಜನಗಳನ್ನು ವಿತರಿಸಲಾಗಿದೆ. ಹಾಗೂ 60 ವರ್ಷ ಮೇಲ್ಪಟ್ಟಂತಹ ಜನರನ್ನು ಅಧಿಕಾರಿಗಳೇ ಗುರುತು ಮಾಡಿ ಅವರಿಗೆ ಮುಂದಿನ ತಿಂಗಳಿಂದಲೇ ಮಾಶಾಸನ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಇಂದು ಬಹಳ ಜನ ರೈತರು ಬಗರ್ ಹುಕುಂ ಸಾಗುವಳಿ ಮಾಡಿದ್ದು ಅಂತಹವರಿಗೆ ಸರ್ಕಾರದ ಜಮೀನನ್ನು ಕೊಡಲು ಅವಕಾಶವಿದ್ದರೆ ಹಾಗೂ ಅರಣ್ಯ ಇಲಾಖೆಯ ಆಕ್ಷೇಪಣೆ ಇಲ್ಲದಿದ್ದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಮರಡಿ ಗ್ರಾಮದಲ್ಲಿ 1965-66 ನೇ ಸಾಲಿನಲ್ಲಿ ನೀಲಕಂಠಪ್ಪ ಎಂಬುವರು ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಸುಮಾರು 40 ರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಂಡಿದ್ದು ಇದುವರೆಗೂ ಯಾವುದೇ ಕೈಗಾರಿಕೆ ಸ್ಥಾಪನೆಯಾಗಿಲ್ಲ.
ಇಂದಿಗೂ ಆ ಪ್ರದೇಶ ಕೈಗಾರಿಕೆ ಪ್ರದೇಶವಾಗಿಯೇ ಉಳಿದಿದೆ. ಆ ಪ್ರದೇಶವನ್ನು ಬಗರ್ ಹುಕುಂ ಸಾಗುವಳಿದಾರರಿಗೆ ವಿತರಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಬಹಳಷ್ಟು ಬಡ ಜನರು ಮರಣ ಹೊಂದಿದಲ್ಲಿ ಹೂಳಲು ಜಾಗವಿಲ್ಲದೆ ಪರದಾಡುವ ಸ್ಥಿತಿಯಿದೆ ಹಾಗಾಗಿ ಸರ್ಕಾರಿ ಜಮೀನು ಲಭ್ಯವಿರುವೆಡೆ ಗ್ರಾಮಕ್ಕೊಂದು ರುದ್ರಭೂಮಿ ನಿರ್ಮಾಣ ಮಾಡಲು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ. ಮಾದರಿಯಾಗಿ ಮಂಗೇನಹಳ್ಳಿ ಗ್ರಾಮದಲ್ಲಿ ಸುಮಾರು ರೂ.50 ಲಕ್ಷ ವೆಚ್ಚದಲ್ಲಿ ರುದ್ರಭೂಮಿ ನಿರ್ಮಾಣ ಮಾಡಲಾಗಿದೆ.
ಪ್ರತಿ ಗ್ರಾಮದಲ್ಲಿ ತಲಾ ರೂ.20 ಲಕ್ಷ ವೆಚ್ಚದಲ್ಲಿ ಎಸ್ ಟಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ತಾಲ್ಲೂಕಿನಲ್ಲಿ ಕೆ.ಇ.ಬಿ ಯಿಂದ ತಂತಿಗಳು ಮತ್ತು ಹಳೆ ಕಂಬಗಳನ್ನು ಬದಲಾಯಿಸಿ ಹೊಸ ಟಿ.ಸಿ ಗಳನ್ನು ಸ್ಥಾಪಿಸಲು ಸುಮಾರು ರೂ.120 ಕೋಟಿ ಹಣ ಮಂಜೂರಾತಿ ಮಾಡಿಸಲಾಗಿದೆ ಎಂದರು.
ಸಂಸದರಾದ ಜಿ.ಎಂ. ಸಿದ್ದೇಶ್ವರ ಮಾತನಾಡಿ ಈ ಕಾರ್ಯಕ್ರಮದ ಮೂಲಕ ಜನರು ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳ ಬಳಿ ಹಾಗೂ ವಿವಿಧ ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸಿ ಇಲಾಖೆಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ವಿವಿಧ ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮವನ್ನು ಆಯೋಜಿಸಿ ಅಲ್ಲಿನ ಗ್ರಾಮಗಳ ಜನರ ಸಮಸ್ಯೆಗಳನ್ನು ಪರಿಶೀಲಿಸಿದರೆ ಪರಿಹಾರ ನೀಡಲು ನೆರವಾಗುತ್ತದೆ.
ಸರ್ಕಾರದ ಮತ್ತೊಂದು ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿದೆ. ಜನರಿಗೆ ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ವೇತನ, ಮುಂತಾದ ಸೌಲಭ್ಯಗಳನ್ನು ಕಾಲವಿಳಂಬವಿಲ್ಲದೇ ಮಾಡಲು ಅನುಕೂಲವಾಗಿದೆ. ಸರ್ಕಾರವು ರೈತರಿಗಾಗಿ, ಬಡವರಿಗಾಗಿ ದೀನ-ದಲಿತರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಉಜ್ವಲ ಯೋಜನೆಯಡಿ ದೇಶದಲ್ಲಿ ಸುಮಾರು ರೂ.12 ಕೋಟಿ ಫಲಾನುಭವಿಗಳಿಗೆ ಉಚಿತ ಒಲೆ ಮತ್ತು ಗ್ಯಾಸ್ ಸೌಲಭ್ಯ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯೆಕ್ಷೆ ಕೆ.ವಿ.ಶಾಂತಕುಮಾರಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಚನ್ನಗಿರಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯೆಕ್ಷೆ ಚಂದ್ರಮ್ಮ ರುದ್ರಪ್ಪ, ತಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿ ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮುಖ್ಯ ಕಾರ್ಯನಿರ್ವಹಕಾಧಿಕಾರಿ ವಿಜಯ ಮಹಾಂತೇಶ ಬಿ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ, ಪ್ರಭಾರ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ ಎಸ್, ಚನ್ನಗಿರಿ ತಹಶೀಲ್ದಾರ್ ಡಾ. ಪಟ್ಟರಾಜ ಗೌಡ ಮುಂತಾದವರು ಉಪಸ್ಥತಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ6 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ6 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ3 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ6 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ4 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ


