ಬಹಿರಂಗ
ನಿರಂತರ ದೌರ್ಜನ್ಯದ ನಡುವೆ ಈ ಒಂದು ದಿನ
- ನಾ ದಿವಾಕರ
ಮತ್ತೊಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಮತ್ತೊಂದು ಒಕ್ಕೊರಲ ಪ್ರತಿರೋಧದ ದಿನ, ಮತ್ತೊಂದು ಕಪ್ಪು ಬಾವುಟ ಪ್ರದರ್ಶನ. ಭಾರತದಲ್ಲಿ ದೌರ್ಜನ್ಯಗಳ ವಿರುದ್ಧ ನಿರಂತರವಾಗಿ, ಶಾಶ್ವತವಾಗಿ ಹೋರಾಡುತ್ತಿರುವ ಸಮುದಾಯಗಳೆಂದರೆ ಅಸ್ಪೃಶ್ಯರು-ದಲಿತರು ಮತ್ತು ಮಹಿಳೆಯರು.
70 ವರ್ಷಗಳ ಸ್ವತಂತ್ರ ಆಳ್ವಿಕೆಯ ನಂತರವೂ ಒಂದು ಸಂವಿಧಾನಬದ್ಧ ಪ್ರಜಾಪ್ರಭುತ್ವದಲ್ಲಿ ಇದು ಅಪಭ್ರಂಶ ಎನಿಸಬಹುದು. ಆದರೆ ಇದು ಭಾರತದ ವಾಸ್ತವ. ವಸಾಹತು ಕಾಲಘಟ್ಟಕ್ಕಿಂತಲೂ ಕ್ರೂರವಾದ ಒಂದು ಆಡಳಿತ ವ್ಯವಸ್ಥೆಯನ್ನು ಈ ದೇಶದ ಮಹಿಳೆಯರು ಎದುರಿಸುತ್ತಿದ್ದಾರೆ.
ತುಳಿತಕ್ಕೊಳಗಾದ ಸಮುದಾಯಗಳ ಮಹಿಳೆಯರು ದಿನದಿಂದ ದಿನಕ್ಕೆ ಇನ್ನೂ ಹೆಚ್ಚಿನ ದೌರ್ಜನ್ಯ ಎದುರಿಸುತ್ತಿದ್ದಾರೆ. ಇತ್ತೀಚಿನ ಕೆಲವು ಪ್ರಸಂಗಗಳಲ್ಲಿ ನ್ಯಾಯ ವ್ಯವಸ್ಥೆಯೂ ಪಿತೃಪ್ರಧಾನ ಮೌಲ್ಯಗಳನ್ನು ಪುಷ್ಟೀಕರಿಸುವಂತಹ ತೀರ್ಪುಗಳನ್ನು ನೀಡುತ್ತಿದೆ.
ಮಹಿಳಾ ದಿನ ಎಂದ ಕೂಡಲೇ ಸಾಧಕರ ಪಟ್ಟಿಯನ್ನು ಸಿದ್ಧಪಡಿಸಲು ಮುದ್ರಣ-ವಿದ್ಯುನ್ಮಾನ ಮಾಧ್ಯಮಗಳು ತುದಿಗಾಲಲ್ಲಿ ನಿಂತಿರುತ್ತವೆ. ಮೇಡಂ ಕ್ಯೂರಿ ಇಂದ ಇತ್ತೀಚಿನ ಹಿಮಾದಾಸ್ವರೆಗೆ ಮಹಿಳಾ ಸಾಧಕಿಯರ ಚಿತ್ರಗಳು ರಾರಾಜಿಸುತ್ತವೆ. ಇದು ಅವಶ್ಯವೂ ಹೌದು.
ಏಕೆಂದರೆ ಈ ದೇಶದಲ್ಲಿ ಓರ್ವ ಹುಡುಗಿ ಹತ್ತನೆ ತರಗತಿಯಲ್ಲಿ ಪ್ರಥಮ ಸ್ಥಾನ ಗಳಿಸುವುದೇ ಪತ್ರಿಕೆಯ ಮುಖ್ಯ ಸುದ್ದಿಯಾಗುತ್ತದೆ. ಐಎಎಸ್ ತೇರ್ಗಡೆಯಾದ ಮಹಿಳೆ ಮುಖ್ಯ ಸುದ್ದಿಯಾಗುತ್ತಾಳೆ. ಅಂದರೆ ಮಹಿಳೆಯರ ಸಾಧನೆ ಸಹಜ ಸುದ್ದಿಯಾಗುವುದಕ್ಕಿಂತಲೂ ಸಂಭ್ರಮದ ಸುದ್ದಿಯಾಗುತ್ತದೆ. ಕಾರಣ, ಭಾರತದ ಪುರುಷ ಸಮಾಜದ ಆಂತರ್ಯದಲ್ಲಿ ಇನ್ನೂ ಸ್ತ್ರೀ ಸಂವೇದನೆ ಗಟ್ಟಿಯಾಗಿಲ್ಲ.
ಈ ಸೂಕ್ಷ್ಮ ದ್ವಂದ್ವ ನಮಗೆ ಅರ್ಥವಾಗುವುದು ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆದಾಗ. ಒಬ್ಬ ಆಟೋ ಚಾಲಕನ ಮಗಳು, ಬೀದಿ ವ್ಯಾಪಾರಿಯ ಮಗಳು ಹತ್ತನೆ ತರಗತಿಯಲ್ಲಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ ಅವರ ಮನೆ ಬಾಗಿಲಿಗೆ ಹೋಗಿ ಸಂದರ್ಶನ ನಡೆಸಿ ಮೇಳೈಸುವ ದೃಶ್ಯ ಮಾಧ್ಯಮಗಳು, ಇದೇ ಶ್ರಮಜೀವಿಗಳ ಹೆಣ್ಣು ಮಕ್ಕಳು ಬಾಲ್ಯ ವಿವಾಹದ ಪೀಡನೆಗೆ ಬಲಿಯಾದಾಗ, ವೇಶ್ಯಾವಾಟಿಕೆಗೆ ಬಲಿಯಾದಾಗ, ಮಾನವ ಸಾಕಾಣಿಕೆಗೆ ಬಲಿಯಾದಾಗ, ಅತ್ಯಾಚಾರ ಮತ್ತು ಹತ್ಯೆಗೀಡಾದಾಗ, ಮರ್ಯಾದಾ ಹತ್ಯೆಗೀಡಾದಾಗ ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಕುಳಿತುಬಿಡುತ್ತವೆ. ಪುರುಷ ಸಮಾಜ ಮಹಿಳೆಯರನ್ನು ಭೋಗದ ವಸ್ತುವನ್ನಾಗಿ ನೋಡುವಂತೆಯೇ ಮಾಧ್ಯಮಗಳು ಟಿ ಆರ್ ಪಿ ಸರಕುಗಳಂತೆ ನೋಡುತ್ತವೆ. ನಿರ್ಭಯಾಳಿಂದ ಹಥ್ರಾಸ್ವರೆಗೆ ಈ ದ್ವಂದ್ವವನ್ನು ಗಮನಿಸುತ್ತಲೇ ಬಂದಿದ್ದೇವೆ.
ಮಹಿಳೆ ಎಂದಾಕ್ಷಣ ತಾಯಿ, ಮಗಳು, ಮಡದಿ, ಸೋದರಿ ಹೀಗೆ ಮನುಜ ಸಂಬಂಧಗಳ ಸಂಕೋಲೆಗಳಲ್ಲಿ ಬಂಧಿಯಾಗುವ ಚಿತ್ರಣವನ್ನೇ ವೈಭವೀಕರಿಸುತ್ತಾ, ಭವ್ಯ ಪರಂಪರೆ, ಸಂಸ್ಕೃತಿಯ ನೆಲೆಗಳಲ್ಲಿ ಮಹಿಳೆಯರ ಸ್ಥಾನಮಾನಗಳನ್ನು ನಿಷ್ಕರ್ಷೆ ಮಾಡುವ ನಾವು ಇದೇ ತಾಯಂದಿರು, ಅಕ್ಕ ತಂಗಿಯರು, ಹೆಣ್ಣು ಮಕ್ಕಳು, ಮಡದಿಯರು ಈ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು, ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು, ಮನುಜ ಸೇತುವೆಗಳನ್ನು ಕಟ್ಟಲು, ಭವ್ಯ ಭಾರತವನ್ನು ಕಟ್ಟಲು ಹಗಲಿರುಳು ಶ್ರಮಿಸುವುದನ್ನು ಸಾಧನೆಗಳ ಶಿಖರಗಳ ಛಾಯೆಯಲ್ಲೇ ಕಾಣಲು ಬಯಸುತ್ತೇವೆ. ಈ ಸಾಧನೆಯ ಹಾದಿಯಲ್ಲಿ ಮಹಿಳೆಯರು ಅನುಭವಿಸುವ ನೋವು , ಸಂಕಷ್ಟ, ಬವಣೆ ಮತ್ತು ಕಿರುಕುಳಗಳು ನಮ್ಮ ಗಮನಕ್ಕೆ ಬರುವುದು ಹಾಳೆಗಳ ಮೇಲೆ ಮಾತ್ರ.
ಅಂಗನವಾಡಿ ಸಹಾಯಕರು, ಆಶಾ ಕಾರ್ಯಕರ್ತೆಯರು, ಆಸ್ಪತ್ರೆಗಳಲ್ಲಿ ದುಡಿಯುವ ದಾದಿಗಳು, ಪೌರ ಕಾರ್ಮಿಕರಾಗಿ ಶ್ರಮಿಸುವ ಕೋಟ್ಯಂತರ ಮಹಿಳೆಯರು ಪುರುಷ ಸಮಾಜದ ದರ್ಪ ಮತ್ತು ಅಟ್ಟಹಾಸದ ನಡುವೆಯೇ ನಿತ್ಯ ಕಿರುಕುಳ ಅನುಭವಿಸುವುದನ್ನು ಕಂಡೂ ಕಾಣದಂತೆ ಮೈಮರೆತಿರುತ್ತೇವೆ.
ಲೈಂಗಿಕ ಕಿರುಕುಳ ಅನುಭವಿಸುವವರಲ್ಲಿ ಈ ಕಾಯಕ ಜೀವಿಗಳಷ್ಟೇ ಇದ್ದಾರೆ ಎನ್ನುವುದು ಅರ್ಧಸತ್ಯ. ಸುಶಿಕ್ಷಿತ ಸಮಾಜದ ಒಂದು ಭಾಗವಾಗಿರುವ, ಮಧ್ಯಮ ವರ್ಗದವರೇ ತುಂಬಿರುವ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲೂ ಮಹಿಳೆಯರು ಪುರುಷ ಸಮಾಜದ ಕಾಕದೃಷ್ಟಿಗೆ ಬಲಿಯಾಗುತ್ತಲೇ, ಮೌನಕ್ಕೆ ಜಾರಿರುತ್ತಾರೆ. ಕಾರ್ಯಕ್ಷೇತ್ರದಲ್ಲಿ ಲೈಂಗಿಕ ಕಿರುಕುಳವನ್ನು ನಿರ್ಬಂಧಿಸಲು, ನಿಯಂತ್ರಿಸಲು ಕಾನೂನು ಜಾರಿಮಾಡಿದ್ದರೂ ಇಂದಿಗೂ ಕಚೇರಿಗಳಲ್ಲಿ ಕಿರುಕುಳ ನಿಂತಿಲ್ಲ ಎನ್ನುವುದನ್ನು ಅನುಭವಿಸಿದವರೇ ಬಲ್ಲರು. ಇದು ಕಟು ವಾಸ್ತವ.
ಭಾರತದ ಸುಶಿಕ್ಷಿತ ಸಮಾಜ ಆಧುನಿಕತೆಯತ್ತ ಹೊರಳುತ್ತಿರುವಂತೆಲ್ಲಾ ತನ್ನ ಸೂಕ್ಷ್ಮ ಸಂವೇದನೆಯನ್ನೂ ಕಳೆದುಕೊಳ್ಳುತ್ತಿರುವುದನ್ನು ಈ ಬೆಳವಣಿಗೆಗಳಲ್ಲಿ ಕಾಣಬಹುದು. ರಾಜಕೀಯ ವಲಯದಲ್ಲಿ ಇಂದು ಮಹಿಳೆ ನಿರ್ಲಕ್ಷಿತಳಾಗುತ್ತಿದ್ದಾಳೆ. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಚಾರಿತ್ರಿಕ ಮಸೂದೆ ಪುರುಷಾಧಿಪತ್ಯದ ಅಧಿಕಾರ ರಾಜಕಾರಣದಲ್ಲಿ ಶಾಶ್ವತವಾಗಿ ಕಳೆದುಹೋಗಿದೆ.
ತಮ್ಮ ಪ್ರಣಾಳಿಕೆಗಳಲ್ಲೂ ಈ ಮಸೂದೆಯನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಯಾವುದೇ ಪಕ್ಷಗಳು ನೀಡುತ್ತಿಲ್ಲ. ಏಕೆಂದರೆ ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ರಾಷ್ಟ್ರೀಯತೆಯ ಪರಿಕಲ್ಪನೆಯಲ್ಲಿ ಇದಕ್ಕೆ ಅವಕಾಶವೇ ಇರುವುದಿಲ್ಲ. ರಾಜಕೀಯ ಪಕ್ಷಗಳಲ್ಲೂ ಸಹ ಮಹಿಳಾ ಸದಸ್ಯರಿಂದ ಈ ನಿಟ್ಟಿನಲ್ಲಿ ಒತ್ತಾಯ ಕಾಣದೆ ಇರುವುದು ಗಮನಿಸಬೇಕಾದ ಅಂಶ.
ಇತ್ತೀಚಿನ ಕೆಲವು ಬೆಳವಣಿಗೆಗಳಲ್ಲಿ ನ್ಯಾಯಾಂಗದ ಆವರಣದಲ್ಲೂ ಸ್ತ್ರೀ ಸಂವೇದನೆಯೇ ಇಲ್ಲದ ಕೆಲವು ತೀರ್ಪುಗಳನ್ನು ಕಾಣುತ್ತಿದ್ದೇವೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರು ಒಂದು ಪ್ರಕರಣದಲ್ಲಿ ಸಂತ್ರಸ್ತೆಯು ಬಾಲಕಿಯಾಗಿದ್ದಾಗ ಆಕೆಯ ಮೇಲೆ ನಿರಂತರ ಲೈಂಗಿಕ ಅತ್ಯಾಚಾರ ನಡೆಸಿದ ವ್ಯಕ್ತಿಗೆ “ ಸಂತ್ರಸ್ತೆಯನ್ನು ಮದುವೆಯಾಗುವೆಯಾ ” ಎಂದು ಕೇಳುವ ಮೂಲಕ ಆಯ್ಕೆ ಸ್ವಾತಂತ್ರ್ಯವನ್ನು ನೀಡುತ್ತಾರೆ.
ಮದುವೆಯಾಗುವುದಾದರೆ ಶಿಕ್ಷೆಯಿಂದ ಪಾರಾಗಬಹುದಲ್ಲವೇ ? ಇದು ಸ್ತ್ರೀ ಸೂಕ್ಷ್ಮತೆಯನ್ನು ಕೊಲ್ಲುವಂತಹ ಒಂದು ಬೆಳವಣಿಗೆ. ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಬೇಗುದಿಯನ್ನು, ಅಂತರಿಕ ವೇದನೆಯನ್ನು ಮತ್ತು ಆಕೆಯ ಹೆಣ್ತನವನ್ನು ಗೌರವಿಸದ ಸಮಾಜದಲ್ಲಿ ಮಾತ್ರವೇ ಇಂತಹ ಪ್ರಸಂಗಗಳನ್ನು ಕಾಣಲು ಸಾಧ್ಯ.
ಇದರ ವ್ಯತಿರಿಕ್ತ ಅತಿರೇಕವನ್ನು ದೇಶಾದ್ಯಂತ ನಿರಂತರವಾಗಿ ನಡೆಯುತ್ತಲೇ ಇರುವ ಮರ್ಯಾದಾ-ಗೌರವ ಹತ್ಯೆಗಳಲ್ಲಿ ” ಕಾಣುತ್ತಿದ್ದೇವೆ. ಅನ್ಯ ಜಾತಿಯವನನ್ನು, ಅನ್ಯ ಕೋಮಿನ ವ್ಯಕ್ತಿಯನ್ನು ಪ್ರೀತಿಸುವ ಹೆಣ್ಣು ಮಕ್ಕಳನ್ನು ನಿರ್ಭೀತಿಯಿಂದ ಕೊಲೆ ಮಾಡುವ ಅಲಿಖಿತ ಕಾನೂನು ಭಾರತದಲ್ಲಿ ಇಂದಿಗೂ ಜಾರಿಯಲ್ಲಿದೆ. ಇಲ್ಲಿ ಹೆಣ್ಣು ಮಾತ್ರ ಅಪರಾಧಿಯಾಗುತ್ತಾಳೆ, ಗಂಡು ತನ್ನ ಹಕ್ಕು ಪ್ರತಿಪಾದಿಸುತ್ತಾನೆ.
ಈ ಹತ್ಯೆಗಳನ್ನು ಮರ್ಯಾದಾ-ಗೌರವ ಹತ್ಯೆ ಎಂದು ಸಾಮಾನ್ಯವಾಗಿ ಗುರುತಿಸಲಾಗುವುದಾದರೂ, ಇದು ಯಾರ ಗೌರವ ಅಥವಾ ಮರ್ಯಾದೆಯನ್ನು ಉಳಿಸುತ್ತದೆ ಎನ್ನುವ ಜಿಜ್ಞಾಸೆ ಕಾಡುವುದಂತೂ ಸತ್ಯ. ಒಂದು ಪ್ರಬುದ್ಧ ಸಮಾಜ ಇಂತಹ ಅಮಾನುಷ ಹತ್ಯೆಗಳಿಗೆ ಮುಂದಾಗುವುದರಿಂದ ತನ್ನ ಗೌರವವನ್ನು, ಮರ್ಯಾದೆಯನ್ನು ಕಳೆದುಕೊಳ್ಳುತ್ತದೆ.
ಮತಾಂಧತೆಯಿಂದ ಆವರಿಸಲ್ಪಟ್ಟಿರುವ ಭಾರತದ ಜಾತಿ ಪೀಡಿತ ಸಮಾಜದಲ್ಲಿ ಹೆಣ್ಣು ಲಕ್ಷ್ಮಣ ರೇಖೆಯನ್ನು ದಾಟುವುದೇ ಗೌರವಕ್ಕೆ ಚ್ಯುತಿ ಬರುವ ಕೃತ್ಯ ಎನಿಸಿಬಿಡುತ್ತದೆ. ನಮ್ಮ ಸುಶಿಕ್ಷಿತ ಸಮಾಜಕ್ಕೆ ಈ ಹತ್ಯೆಗಳು ಅಪರಾಧ ಎನಿಸುವುದೇ ಇಲ್ಲ. ಕೆಲವೊಮ್ಮೆ ಅತ್ಯಾಚಾರಗಳೂ ತಪ್ಪು ಎನಿಸುವುದಿಲ್ಲ ಎನ್ನುವುದನ್ನು ಹಥ್ರಾಸ್ ಸಂದರ್ಭದಲ್ಲಿ ಕಂಡಿದ್ದೇವೆ, ನಿರ್ಭಯಾ ಘಟನೆಯಲ್ಲೂ ಕಂಡಿದ್ದೇವೆ. ದಲಿತ ಅಥವಾ ಅಲ್ಪ ಸಂಖ್ಯಾತ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳು, ಅತ್ಯಾಚಾರಗಳು ಭಾರತದ ಒಂದು ಬೃಹತ್ ಬೌದ್ಧಿಕ ವಲಯಕ್ಕೆ ಸ್ವೀಕಾರಾರ್ಹವೇ ಆಗಿಬಿಡುತ್ತದೆ.
ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪುವ ಸಂತ್ರಸ್ತೆಯನ್ನು ನಡುರಾತ್ರಿಯಲ್ಲಿ ಪೊಲೀಸರೇ ಸುಟ್ಟುಹಾಕಿದರೂ ನಮ್ಮ ಸಮಾಜ ವಿಚಲಿತವಾಗುವುದಿಲ್ಲ. 2018ರಲ್ಲಿ ಉತ್ತರಪ್ರದೇಶದ ಹಥ್ರಾಸ್ನಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ತಂದೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಆರೋಪಿಯಿಂದಲೇ ಹತ್ಯೆಗೀಡಾಗಿರುವುದು ಈ ಅಸೂಕ್ಷ್ಮತೆಯ ಮತ್ತೊಂದು ಮಜಲನ್ನು ನಮಗೆ ಪರಿಚಯಿಸುತ್ತದೆ.
ಲಿಂಗತ್ವ ಸಮಾನತೆಯನ್ನು ಸಾಧಿಸಲು ದೇಶದಲ್ಲಿ ಸಾಕಷ್ಟು ಕಾಯ್ದೆ ಕಾನೂನುಗಳನ್ನು ಜಾರಿಮಾಡಲಾಗಿದೆ. ನಿರ್ಭಯ ಪ್ರಕರಣದ ನಂತರದಲ್ಲಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಕೆಲವು ಕಠಿಣ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಇಂತಹ ಕಾಯ್ದೆಗಳಲ್ಲಿ ಒಂದು.
ಆದರೆ ಈ ಕಾಯ್ದೆಗಳನ್ನು ಜಾರಿಮಾಡುವ ನಿಟ್ಟಿನಲ್ಲಿ ಕಾರ್ಯಾಂಗ ಮತ್ತು ನ್ಯಾಯಾಂಗ ಸೋಲುತ್ತಲೇ ಇದೆ. ಸಮಾಜದಲ್ಲಿ ಅಂತರ್ಗತವಾಗಿರುವ ಪಿತೃಪ್ರಧಾನ ಧೋರಣೆ ಮತ್ತು ಪುರುಷ ಪ್ರಧಾನ ಮನಸ್ಥಿತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಗಳು ಕೇವಲ ಮಹಿಳಾ ಚಳುವಳಿಗಳಿಂದ ನಡೆಯುತ್ತಿವೆ.
ಮಹಿಳೆಯ ಘನತೆ ಮತ್ತು ಜೀವಿಸುವ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಭಾರತದ ನ್ಯಾಯಾಂಗ ಹಲವು ಚಾರಿತ್ರಿಕ ತೀರ್ಪುಗಳನ್ನು ನೀಡಿದೆ. ಇದೇ ವೇಳೆ ದೌರ್ಜನ್ಯಕ್ಕೊಳಗಾಗುವ ಮಹಿಳೆಯ ರಕ್ಷಣೆಗೆ ಬರುವಲ್ಲಿ ವಿಫಲವಾಗಿರುವುದನ್ನೂ ಭಾವರಿ ದೇವಿಯಂತಹ ಪ್ರಕರಣಗಳಲ್ಲಿ ಕಂಡಿದ್ದೇವೆ. ಇಂದಿಗೂ ಕಾಣುತ್ತಿದ್ದೇವೆ.
ಪಿತೃ ಪ್ರಧಾನ ಜಾತಿಪೀಡಿತ ಸಮಾಜದಲ್ಲಿ ನ್ಯಾಯ ವ್ಯವಸ್ಥೆಯನ್ನು ಪ್ರತಿನಿಧಿಸುವವರು ಜಾತ್ಯತೀತ ಮನೋಭಾವದೊಂದಿಗೇ ಸ್ತ್ರೀ ಸಂವೇದನೆಯನ್ನೂ ಹೊಂದಿರುವುದು ಎಷ್ಟು ಮುಖ್ಯ ಎನ್ನುವುದನ್ನು ಅನೇಕ ಪ್ರಕರಣಗಳಲ್ಲಿ ಗಮನಿಸಬಹುದು. ಇತ್ತೀಚೆಗೆ ಹಿಂದುತ್ವ ರಾಜಕಾರಣದ ಒಂದು ಭಾಗವಾಗಿಯೇ ರೂಪುಗೊಂಡಿರುವ ಲವ್ ಜಿಹಾದ್ ಕಾಯ್ದೆಗಳೂ ಸಹ ಮೂಲತಃ ಮಹಿಳಾ ವಿರೋಧಿಯಾಗಿದ್ದು ಇಲ್ಲಿಯೂ ಸಹ ಮಹಿಳೆಯ ಜೀವಿಸುವ ಹಕ್ಕು, ಘನತೆಯ ಹಕ್ಕು ಹಲ್ಲೆಗೊಳಗಾಗುತ್ತಿದೆ.
ಆಡಳಿತಾರೂಢ ಸರ್ಕಾರಗಳು ತಮ್ಮ ಸಾಂವಿಧಾನಿಕ ಹೊಣೆಗಾರಿಕೆಯನ್ನು ಮರೆತು ಖಾಪ್ ಪಂಚಾಯತ್ಗಳಿಗೆ, ಸಾಂಸ್ಕೃತಿಕ ಆರಕ್ಷಕ ಪಡೆಗಳಿಗೆ ಮತ್ತು ಧರ್ಮರಕ್ಷಕ ಗುಂಪುಗಳಿಗೆ ಮಾನ್ಯತೆ ನೀಡುವ ಮೂಲಕ ಪಿತೃಪ್ರಧಾನ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ನೆರವಾಗುತ್ತಿವೆ. ಸಾಂಪ್ರದಾಯಿಕ ಶಕ್ತಿಗಳು ಮತ್ತು ಮತಾಂಧರು ಎಲ್ಲ ಧರ್ಮಗಳಲ್ಲೂ ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ಹೆಣ್ತನದ ಘನತೆಯನ್ನು ನಿರ್ಲಕ್ಷಿಸುತ್ತಿವೆ.
ಈ ಸಮಾಜೋ ಸಾಂಸ್ಕೃತಿಕ ಧೋರಣೆಗೆ ಪೂರಕವಾಗಿ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆಯೂ ಇಲ್ಲವಾಗುತ್ತಿರುವುದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಲು ಮುಖ್ಯ ಕಾರಣವಾಗಿದೆ. ಮಹಿಳಾ ಸಬಲೀಕರಣದ ಘೋಷಣೆಗಳು ಸಮಾಜದ ಮೇಲ್ ಸ್ತರದ ವರ್ಗಗಳನ್ನು ಮಾತ್ರವೇ ಹೆಚ್ಚಾಗಿ ತಲುಪುತ್ತಿದ್ದು, ತಳಮಟ್ಟದ ಗ್ರಾಮೀಣ ಮಹಿಳೆಯರು ಇಂದಿಗೂ ಪುರುಷ ಸಮಾಜದ ಅಧಿಪತ್ಯಕ್ಕೆ ಒಳಗಾಗಿದ್ದಾರೆ. ಕೃಷಿ ಕಾರ್ಮಿಕರಿಂದ ಹಿಡಿದು ಕಾರ್ಖಾನೆಯಲ್ಲಿ ದುಡಿಮೆ ಮಾಡುವ ಮಹಿಳೆಯರವರೆಗೆ, ವೇತನ ನಿಗದಿಪಡಿಸುವ ಸಂದರ್ಭದಲ್ಲೂ, ಈ ತಾರತಮ್ಯವನ್ನು ಗಮನಿಸಬಹುದಾಗಿದೆ.
ಇಂದು ಭಾರತೀಯ ಮಹಿಳೆ ನಾಲ್ಕೂ ದಿಕ್ಕುಗಳಿಂದ ತಾರತಮ್ಯ , ಕಿರುಕುಳ, ದೌರ್ಜನ್ಯ ಎದುರಿಸಬೇಕಿದೆ. ಆರ್ಥಿಕವಾಗಿ ಮಾರುಕಟ್ಟೆ ಆರ್ಥಿಕತೆ ಮಹಿಳೆಯರನ್ನು ಅಗ್ಗದ ಶ್ರಮ ಸರಕುಗಳಂತೆ ಭಾವಿಸುತ್ತದೆ. ತನ್ನ ಲಾಭ ಹೆಚ್ಚಿಸಿಕೊಳ್ಳಲು ಔದ್ಯಮಿಕ ವಲಯ ಕಡಿಮೆ ವೇತನ ನೀಡುವ ಮೂಲಕ, ಮುಷ್ಕರದ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ, ಹೆಚ್ಚಿನ ದುಡಿಮೆ ಮಾಡಿಸಿಕೊಳ್ಳುವ ಮೂಲಕ ಮಹಿಳೆಯರನ್ನು ಶೋಷಣೆಗೊಳಪಡಿಸುತ್ತಿದೆ.
ಇದನ್ನೂ ಓದಿ |ಎಸ್ ಎಸ್ ಸಿ ವತಿಯಿಂದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಸಾಮಾಜಿಕವಾಗಿ ಮಹಿಳೆ ಪುರುಷ ಸಮಾಜ ತನ್ನ ಸುತ್ತಲೂ ನಿರ್ಮಿಸಲಾಗಿರುವ ಬೇಲಿಗಳನ್ನು ದಾಟಲು ನಿರಂತರ ಹೋರಾಟ ಮಾಡಬೇಕಿದೆ. ಸಾಂಸ್ಕೃತಿಕವಾಗಿ ಸಾಂಪ್ರದಾಯಿಕ-ಮತಾಂಧ ಶಕ್ತಿಗಳು ಮಹಿಳೆಯರನ್ನು ನಾಲ್ಕು ಗೋಡೆಗಳ ನಡುವೆ ಬಂಧಿಸಲು ಸದಾ ಸನ್ನದ್ಧವಾಗಿರುತ್ತವೆ. ಶಹೀನ್ಭಾಗ್ ಪ್ರತಿಭಟನೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು “ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸುವುದೇಕೆ ?” ಎಂದು ಪ್ರಶ್ನಿಸುವ ಮೂಲಕ ಇದೇ ಮನಸ್ಥಿತಿಯನ್ನು ಬಿಂಬಿಸಿದ್ದರು.
ಇಷ್ಟರ ನಡುವೆ ಅತ್ಯಾಚಾರ ಇಂದು ನಿತ್ಯ ಸುದ್ದಿಯಾಗಿಬಿಟ್ಟಿದೆ. ಅತ್ಯಾಚಾರಕ್ಕೊಳಗಾದ ಮಹಿಳೆಯ ಹತ್ಯೆ ಮಾಡುವುದು ನಾಗರಿಕ ಸಮಾಜದ ಒಂದು ವರ್ಗಕ್ಕೆ ಸುದ್ದಿ ಎನಿಸುವುದೇ ಇಲ್ಲ. ಭಾರತದ ವಿದ್ಯುನ್ಮಾನ ಮಾಧ್ಯಮಗಳ ಸುದ್ದಿಮನೆಗಳಿಗೆ ಮಹಿಳೆಯರ ಮೇಲಿನ ಈ ದೌರ್ಜನ್ಯಗಳು ಟಿ ಆರ್ ಪಿ ಹೆಚ್ಚಿಸಿಕೊಳ್ಳುವ ರೋಚಕ ಸುದ್ದಿಗಳಾಗಿ ಕಾಣುತ್ತವೆ.
ಹಾಗಾಗಿಯೇ ಅವೈಜ್ಞಾನಿಕ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆ ಮತ್ತು ಅದರಲ್ಲೂ ಮಹಿಳಾ ವಲಸೆ ಕಾರ್ಮಿಕರು ಎದುರಿಸಿದ ದುರ್ಭರ ದಿನಗಳು ಮುನ್ನೆಲೆಗೆ ಬರಲೇ ಇಲ್ಲ. ಇಂದು ದೇಶಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ರೈತ ಮುಷ್ಕರದ ಸಂದರ್ಭದಲ್ಲೂ ಮಹಿಳಾ ಕೃಷಿ ಕಾರ್ಮಿಕರ ಮತ್ತು ಮಹಿಳಾ ರೈತರ ಸಮಸ್ಯೆಗಳು ಹೆಚ್ಚಾಗಿ ಮುನ್ನೆಲೆಗೆ ಬರುತ್ತಿಲ್ಲ ಎನ್ನುವುದೂ ಗಮನಿಸಬೇಕಾದ ಸಂಗತಿ.
ವಿಶ್ವ ಮಹಿಳಾ ದಿನ ಕೇವಲ ಮಹಿಳೆಯರ ಪ್ರತಿರೋಧದ ದಿನ ಆಗಬಾರದು, ಮಹಿಳೆಯರ ಹಕ್ಕೊತ್ತಾಯಗಳ ದಿನ ಆಗಬಾರದು. ಮಾರ್ಚ್ 8 ಭಾರತದಂತಹ ಸಾಂಪ್ರದಾಯಿಕ ಸಮಾಜಕ್ಕೆ ಆತ್ಮಾವಲೋಕನದ ದಿನ ಆಗಬೇಕು. ಈ ಒಂದು ದಿನವಾದರೂ ಆತ್ಮಾವಲೋಕನದ ಬಗ್ಗೆ ಆಲೋಚನೆ ಮಾಡುವ ಮನಸ್ಥಿತಿಯನ್ನು ಭಾರತದ ಪುರುಷ ಸಮಾಜ ಹೊಂದಿರಬೇಕು. ಆಗ ಮಾತ್ರ ಸ್ತ್ರೀ ಸಮಾನತೆ, ಸ್ತ್ರೀ ಸಂವೇದನೆ, ಹೆಣ್ತನದ ಘನತೆ, ಲಿಂಗತ್ವ ಸಮಾನತೆ ಮುಂತಾದ ಉದಾತ್ತ ಪದಗಳು ಅರ್ಥಪೂರ್ಣವಾಗುತ್ತವೆ.
ಕೃಪೆ : The Politic
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


