ಬಹಿರಂಗ
ಸಂವಿಧಾನ ಚೌಕಟ್ಟಿನಲ್ಲೇ ಪ್ರಜಾತಂತ್ರದ ಹರಣ
- ನಾ ದಿವಾಕರ
ಪ್ರಜೆಗಳ ಸಾರ್ವಭೌಮತ್ವ ಮತ್ತು ಸ್ವಾವಲಂಬಿ ದೇಶದ ಕನಸುಗಳನ್ನು ಹೊತ್ತು ವಿಶ್ವದ ಶ್ರೇಷ್ಠ ಸಂವಿಧಾನವನ್ನು ಅಂಗೀಕರಿಸಿದ ಸ್ವತಂತ್ರ ಭಾರತದಲ್ಲಿ ಅಧಿಕಾರ ರಾಜಕಾರಣ ಸ್ವಾಭಿಮಾನಿ ಜನಪ್ರತಿನಿಧಿಗಳನ್ನು ಹುಟ್ಟುಹಾಕಬೇಕಿತ್ತು. ಜನಪರ ಕಾಳಜಿ, ಸಂವಿಧಾನ ಬದ್ಧತೆ, ಪ್ರಜಾತಂತ್ರದ ಬಗ್ಗೆ ಗೌರವ ಮತ್ತು ಸಾಂವಿಧಾನಿಕ ನಿಯಮ ಹಾಗೂ ಮೌಲ್ಯಗಳಲ್ಲಿ ಶ್ರದ್ಧೆ ಈ ಲಕ್ಷಣಗಳು ಮಾತ್ರ ಇಂತಹ ಸ್ವಾಭಿಮಾನಿ ಪ್ರತಿನಿಧಿಗಳನ್ನು ಸೃಷ್ಟಿಸಲು ಸಾಧ್ಯ. ದುರಂತ ಎಂದರೆ 70 ವರ್ಷಗಳ ಸ್ವತಂತ್ರ ಭಾರತ ಅಧಿಕಾರ ರಾಜಕಾರಣದ ಅಂಗಳದಲ್ಲಿ ಪರಾವಲಂಬಿ ಪ್ರತಿನಿಧಿಗಳನ್ನು ಸೃಷ್ಟಿಸಿದೆ. ಮಾರಿಕೊಂಡ ಸರಕುಗಳನ್ನು ಸೃಷ್ಟಿಸಿದೆ. ಸ್ವಾಭಿಮಾನ ಶೂನ್ಯ ಧನದಾಹಿಗಳನ್ನು ಸೃಷ್ಟಿಸಿದೆ. ಅಧಿಕಾರ ಮೋಹಿಗಳನ್ನು ಸೃಷ್ಟಿಸಿದೆ.
ಭಾರತ ತನ್ನ ಭೌಗೋಳಿಕ ಸ್ವಾತಂತ್ರ್ಯದ ರಕ್ಷಣೆಗೆ ಅಗತ್ಯವಾದ ಎಲ್ಲ ರಕ್ಷಣಾ ಪರಿಕರಗಳನ್ನೂ ಸೃಷ್ಟಿಸಿಕೊಂಡಿದೆ. ವಿಶ್ವದ ಯಾವುದೇ ಪ್ರಬಲ ರಾಷ್ಟ್ರಗಳನ್ನು ಎದುರಿಸಲು ಭಾರತದ ಸೇನೆ ಮತ್ತು ಶಸ್ತ್ರಾಸ್ತ್ರ ಸಂಗ್ರಹಾಗಾರ ಸಿದ್ಧವಾಗಿದೆ. ಬಾಹ್ಯ ಶತ್ರುಗಳು ಭಾರತದ ಮೇಲೆ ದಾಳಿ ನಡೆಸುವುದು ಸುಲಭವಲ್ಲ ಎನ್ನುವುದೂ ವಿಶ್ವ ಸಮುದಾಯಕ್ಕೆ ತಿಳಿದಿದೆ.
ಈ ಭೌಗೋಳಿಕ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವ ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿರಲಿಕ್ಕೂ ಸಾಕು. ಆದರೆ ದೇಶ ಎನ್ನುವ ಪರಿಕಲ್ಪನೆ ಭೂಪಟದಲ್ಲಿನ ರೇಖೆಗಳಿಗಷ್ಟೇ ಸೀಮಿತವಾಗುವುದಿಲ್ಲ. ಸುರಕ್ಷಿತ ಗಡಿ ರೇಖೆಗಳು ಭೌಗೋಳೀಕ ದೇಶವನ್ನು ರಕ್ಷಿಸುತ್ತವೆ, ಬೌದ್ಧಿಕ ದೇಶವನ್ನು ರಕ್ಷಿಸಲು ನಮ್ಮ ಅಂತಃಸತ್ವ ಮತ್ತು ಅಂತಃಶಕ್ತಿ ಸುಸ್ಥಿರವಾಗಿರುವುದು ಅವಶ್ಯ.
ಈ ಅಂತಃಶಕ್ತಿ ಅಥವಾ ಅಂತಃಸತ್ವ ಇರುವುದು ನಮ್ಮ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಬದುಕಿನಲ್ಲಿ. ಈ ಮೂರೂ ವಲಯಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳನ್ನು ನಮ್ಮ ನಡುವಿನಿಂದಲೇ ನಾವು ಕಾಲದಿಂದ ಕಾಲಕ್ಕೆ ಆಯ್ಕೆ ಮಾಡಿ ಶಾಸನ ಸಭೆಗಳಿಗೆ ಕಳಿಸುತ್ತಿದ್ದೇವೆ. ಈ ಪ್ರತಿನಿಧಿಗಳು ವಿಧಾನಸಭೆಗಳಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕುಳಿತು, ಚರ್ಚೆ ನಡೆಸಿ ಕೈಗೊಳ್ಳುವ ತೀರ್ಮಾನಗಳು ಈ ದೇಶದ ಬೌದ್ಧಿಕ ಅಂತಃಸತ್ವವನ್ನು, ಸಾಮಾಜಿಕ ಸ್ವಾಸ್ಥ್ಯವನ್ನು, ರಾಜಕೀಯ ಸುಸ್ಥಿರತೆಯನ್ನು ನಿರ್ಧರಿಸುತ್ತವೆ.
ಸ್ವಾತಂತ್ರ್ಯಾನಂತರದ ಮೊದಲ ನಾಲ್ಕು ದಶಕಗಳಲ್ಲಿ ನಿರ್ಮಿಸಲಾದ ಸ್ವಾವಲಂಬಿ ಭಾರತ ಇಂದು ಪರಾವಲಂಬನೆಯತ್ತ ವಾಲುತ್ತಿರುವುದನ್ನು ನೋಡಿದರೆ, ಈ ದೇಶದ ಪ್ರಜೆಗಳ ಆಯ್ಕೆ ತಪ್ಪಾಗಿರುವುದು ಸ್ಪಷ್ಟವಾಗುತ್ತದೆ.
2013ರಲ್ಲಿ ಚುನಾಯಿತ ಉದಾರವಾದಿ ಪ್ರಜಾತಂತ್ರ ರಾಷ್ಟ್ರವಾಗಿದ್ದ ಭಾರತ ಇಂದು ಚುನಾಯಿತ ನಿರಂಕುಶಾಧಿಪತ್ಯದ ರಾಷ್ಟ್ರವಾಗಿದೆ ಎಂದು ಜಾಗತಿಕ ಸಂಸ್ಥೆಯೊಂದು ಹೇಳಿದೆ. ಈ ಅಭಿಪ್ರಾಯ ಯಾವುದೋ ಒಂದು ಸಂಸ್ಥೆಯಿಂದ ವ್ಯಕ್ತವಾಗಿರುವುದರಿಂದ ತಳ್ಳಿಹಾಕುವುದು ಸುಲಭ. ಆದರೆ ಭಾರತದ ವಸ್ತುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವ ಯಾವುದೇ ಪ್ರಜ್ಞಾವಂತರಿಗೆ, ದೇಶದಲ್ಲಿ ಪ್ರಜಾತಂತ್ರದ ಅವಸಾನ ಸಮೀಪಿಸುತ್ತಿರುವುದು ಸ್ಪಷ್ಟವಾಗುತ್ತದೆ.
ದಿಶಾ ರವಿ ತೀರ್ಪಿನ ನಂತರ ಭಾರತದ ನ್ಯಾಯಾಂಗ ವ್ಯವಸ್ಥೆ ಕೊಂಚ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ಸರ್ಕಾರದ ವಿರುದ್ಧ ಅಥವಾ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಟೀಕೆ ಮಾಡುವುದು ದೇಶದ್ರೋಹ ಎನಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಆದರೆ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸಲು, ವಿಮರ್ಶಿಸಲು ಇರುವ ಎಲ್ಲ ವೇದಿಕೆಗಳನ್ನೂ ನಿಯಂತ್ರಿಸುವ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಈ ಬೆಳವಣಿಗೆ ನ್ಯಾಯಾಂಗದ ಪರಾಮರ್ಶೆಗೆ ಒಳಪಟ್ಟರೆ ಮಾತ್ರ ಸಾಂವಿಧಾನಿಕ ಹಕ್ಕುಗಳ ರಕ್ಷಣೆ ಸಾಧ್ಯ. ಡಿಜಿಟಲ್ ಸುದ್ದಿ ವೇದಿಕೆಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುವ ಸುದ್ದಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿರುವ ಆರು ಸದಸ್ಯರ ಸಚಿವರ ಕೂಟ ತನ್ನ ವರದಿಯನ್ನು ಸಲ್ಲಿಸಿದ್ದು, ಈ ವರದಿಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಹಲವು ಸಲಹೆಗಳನ್ನು ನೀಡಲಾಗಿದೆ.
ಕೋವಿದ್ 19 ಸಂದರ್ಭದಲ್ಲೇ ಆರು ಬಾರಿ ಸಭೆ ನಡೆಸಿರುವ ಈ ಸಚಿವರ ಕೂಟದಲ್ಲಿ ವಿದೇಶಾಂಗ ಸಚಿವರು, ಕಾನೂನು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಸರ್ಕಾರದ ಪರ ವಹಿಸದ ಪತ್ರಕರ್ತರನ್ನು, ಪತ್ರಿಕಾ ಸಮೂಹ ಮತ್ತು ಮಾಧ್ಯಮಗಳನ್ನು ಹೇಗೆ ಸೆಳೆಯಬೇಕು ಎನ್ನುವುದರ ಬಗ್ಗೆ ಕೆಲವು ಸಚಿವರು ಸಲಹೆಗಳನ್ನು ನೀಡಿದ್ದು, ಈ ನಿಟ್ಟಿನಲ್ಲಿ ಸುದ್ದಿ ಪ್ರಸರಣವನ್ನು ನಿಯಂತ್ರಿಸುವ ಬಗ್ಗೆ ಈಗಾಗಲೇ ‘ ಗೋದಿ ಮೀಡಿಯಾ ’ ಎಂದೇ ಹೆಸರಾಗಿರುವ ವಂದಿಮಾಗಧ ಮಾಧ್ಯಮಗಳಿಂದಲೇ ಸಲಹೆ ಪಡೆಯಲಾಗಿದೆ.
ಪತ್ರಕರ್ತರನ್ನು, ಸರ್ಕಾರದ ಪರ, ವಿರೋಧಿ ಮತ್ತು ತಟಸ್ಠ ಎಂದು ಮೂರು ವರ್ಗಗಳನ್ನಾಗಿ ವಿಂಗಡಿಸುವಂತೆ ಓರ್ವ ಸಚಿವರು ಸಲಹೆ ನೀಡಿದ್ದರೆ, ಮತ್ತೊಬ್ಬರು ಮಾಧ್ಯಮಗಳಲ್ಲಿ ಸರ್ಕಾರದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಸೃಷ್ಟಿಸುವ 50 ಪತ್ರಕರ್ತರನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲು ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ವರದಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಲಾಗುವುದಿಲ್ಲ. ಏಕೆಂದರೆ ಕರ್ನಾಟಕವನ್ನೂ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಲ್ಲಿ ಇರಬಹುದಾದ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯ ಕತ್ತು ಹಿಸುಕುವಂತಹ ಕಾನೂನುಗಳನ್ನು ಜಾರಿಗೊಳಿಸಿವೆ. ಕಳೆದ ವರ್ಷ ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಯಾವುದೇ ಸರ್ಕಾರಿ ನೌಕರರು ಪೂರ್ವಾನುಮತಿ ಇಲ್ಲದೆ ಸಿನಿಮಾಗಳಲ್ಲಿ, ಟಿ ವಿ ಧಾರಾವಾಹಿಗಳಲ್ಲಿ ನಟಿಸುವಂತಿಲ್ಲ, ಯಾವುದೇ ರೀತಿಯ ಪುಸ್ತಕ ಪ್ರಕಟಿಸುವಂತಿಲ್ಲ, ಕೇಂದ್ರ ಮತ್ತು ಯಾವುದೇ ರಾಜ್ಯ ಸರ್ಕಾರಗಳ ಆಡಳಿತ ನೀತಿಗಳನ್ನು ಟೀಕಿಸಿ ಲೇಖನಗಳನ್ನು ಬರೆಯುವಂತಿಲ್ಲ.
ಮೊದಲಿನಿಂದಲೂ ಈ ರೀತಿಯ ಸೇವಾ ನಿಯಮ ಜಾರಿಯಲ್ಲಿತ್ತಾದರೂ ಕರ್ನಾಟಕ ನಾಗರಿಕ ಸೇವಾ ಕಾಯ್ದೆಯಲ್ಲಿ ನಿರ್ಬಂಧಗಳನ್ನು ನಮೂದಿಸಲಾಗಿರಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಅನೇಕ ಅಧ್ಯಾಪಕರು, ಶಿಕ್ಷಕರು, ಸರ್ಕಾರಿ ನೌಕರರು ತಮ್ಮ ಕಾವ್ಯ , ಕಾದಂಬರಿ, ಕಥೆ ಮತ್ತು ಇತರ ರೀತಿಯ ಬರಹಗಳ ಮೂಲಕ ಜನಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಸರ್ಕಾರಗಳ ಜನವಿರೋಧಿ ಆಡಳಿತ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಇಂದು ಸರ್ಕಾರದ ವಿರುದ್ಧ ಮಾತನಾಡುವುದೇ ದೇಶದ್ರೋಹ ಎನ್ನುವ ಆಡಳಿತ ವ್ಯವಸ್ಥೆಯ ಧೋರಣೆ ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ ಈ ರೀತಿಯ ನಿಯಮಗಳು ಸೃಜನಶೀಲ ಮನಸುಗಳನ್ನು ನಿಷ್ಕ್ರಿಯಗೊಳಿಸಿಬಿಡುತ್ತವೆ.
ಸರ್ಕಾರದ ಜನವಿರೋಧಿ, ಸಮಾಜವಿರೋಧಿ ನೀತಿಗಳನ್ನೂ ಟೀಕೆ ಮಾಡದಂತೆ ಸರ್ಕಾರಿ ನೌಕರರ ಮೇಲೆ ನಿರ್ಬಂಧ ಹೇರಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳ ಮೇಲೆ ಸರ್ಕಾರದ ಕಾಕದೃಷ್ಟಿ ಬಿದ್ದಿದೆ. ಆಡಳಿತ ವ್ಯವಸ್ಥೆಯನ್ನು ಪ್ರಶ್ನಾತೀತವನ್ನಾಗಿ ಮಾಡುವ ಇಂತಹ ನಿಯಮಗಳು ಭಾರತವನ್ನು ನಿರಂಕುಶಾಧಿಪತ್ಯದತ್ತ ಕೊಂಡೊಯ್ಯುತ್ತಿರುವುದು ಸ್ಪಷ್ಟ.
ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವಾಲಯ ಹೊರಡಿಸಿದ ಆದೇಶವೊಂದರ ಅನುಸಾರ ಸಾರ್ವಜನಿಕ ಹಣದಿಂದ ನಿರ್ವಹಿಸಲ್ಪಡುವ ಭಾರತದ ಯಾವುದೇ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು, ಅಧ್ಯಾಪಕರು ಅಂತರ ರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ನಡೆಸುವ ಮುನ್ನ ಸಚಿವಾಲಯದ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.
ಭಾರತದ ಆಂತರಿಕ ವಿಚಾರಗಳ ಬಗ್ಗೆ ವಿಚಾರಸಂಕಿರಣ ನಡೆಸುವುದಕ್ಕೆ ಬಹುತೇಕ ನಿರ್ಬಂಧ ಹೇರಲಾಗಿದ್ದು, ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು, ಭಾರತದ ಗಡಿ ರೇಖೆಗಳು ಹೀಗೆ ಹಲವು ವಿಚಾರಗಳನ್ನು ಆಂತರಿಕ ವಿಚಾರಗಳ ಪರಿಧಿಯಲ್ಲೇ ಪರಿಗಣಿಸಲಾಗುತ್ತದೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತ ಮುಷ್ಕರವನ್ನೂ ಭಾರತ ಸರ್ಕಾರ ಆಂತರಿಕ ವಿಚಾರ ಎಂದೇ ಭಾವಿಸುತ್ತದೆ. ಸೂಕ್ಷ್ಮ ವಿಚಾರಗಳನ್ನೂ ಈ ಚೌಕಟ್ಟಿನಲ್ಲೇ ಪರಿಗಣಿಸಲಾಗುವುದರಿಂದ, ಇಂದಿನ ಆಡಳಿತ ವ್ಯವಸ್ಥೆಯನ್ನು ಗಮನಿಸಿದರೆ ಕೋಮುವಾದ, ಮತಾಂಧತೆ, ಹಿಂದುತ್ವ, ಜಾತಿ ದೌರ್ಜನ್ಯ ಇವೆಲ್ಲವೂ ವಿಚಾರ ಸಂಕಿರಣಗಳಿಂದ ಹೊರಗುಳಿಯುವ ವಿಷಯಗಳೇ ಆಗಿಬಿಡುತ್ತವೆ.
ಇದು ಬಹುಮಟ್ಟಿಗೆ ವಿಚಾರ ಮಂಥನದ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಈಗಾಗಲೇ ವಿಶ್ವವಿದ್ಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ, ಸಮಾಜೋ ಸಾಂಸ್ಕೃತಿಕ ವಿಚಾರಗಳ ಬಗ್ಗೆ ವಿಚಾರ ಸಂಕಿರಣಗಳನ್ನು ನಡೆಸುವುದು ಅಸಾಧ್ಯವೇ ಆಗಿಹೋಗಿದೆ.
ಸರ್ಕಾರಿ ನೌಕರರು, ವೈದ್ಯರು, ವಿಜ್ಞಾನಿಗಳು, ಸಂಶೋಧಕರು, ಜಂಟಿ ಕಾರ್ಯದರ್ಶಿಗಿಂತಲೂ ಉನ್ನತ ಹುದ್ದೆ ಹೊಂದಿರುವವರು, ವಿಶ್ವವಿದ್ಯಾಲಯದ ಅಧ್ಯಾಪಕ ವರ್ಗ, ಬೋಧನಾ ಸಿಬ್ಬಂದಿ ಹೀಗೆ ಎಲ್ಲರೂ ಸಹ ಅಂತರ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕಾಗುತ್ತದೆ. ವಿದೇಶಿ ಗಣ್ಯರ ಉಪಸ್ಥಿತಿ ಇಲ್ಲದ ವಿಚಾರ ಸಂಕಿರಣಗಳಿಗೂ ಈ ನಿಯಮ ಅನ್ವಯಿಸುತ್ತದೆ.
ಆನ್ ಲೈನ್ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಬಳಸಲಾಗುವ ಆನ್ ಲೈನ್ ವೇದಿಕೆಗಳು ವಿದೇಶಿ ಕಂಪನಿಗಳ ನಿಯಂತ್ರಣದಲ್ಲಿದ್ದ ಪಕ್ಷದಲ್ಲಿ, ಉದಾಹರಣೆಗೆ ಝೂಂ, ಅದರ ಕೊಂಡಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಒದಗಿಸುವಂತೆ ಸೂಚಿಸಲಾಗಿದೆ.
ಒಂದು ಕಾರ್ಮಿಕ ಮುಷ್ಕರವನ್ನು, ರೈತ ಹೋರಾಟವನ್ನು, ವಿದ್ಯಾರ್ಥಿಗಳ ಸಂಘರ್ಷವನ್ನು ಬೆಂಬಲಿಸುವುದೇ ದೇಶದ್ರೋಹಿ ಕೃತ್ಯ ಎನ್ನುವ ವಿಕೃತ ಮನೋಭಾವ ಇಂದಿನ ಆಡಳಿತ ವ್ಯವಸ್ಥೆಯಲ್ಲಿ ಆಳವಾಗಿ ಬೇರೂರಿರುವುದು ಜೆಎನ್ಯು ಘಟನೆಗಳಿಂದಲೇ ಸ್ಪಷ್ಟವಾಗಿದೆ. ದೇಶದ ಬೌದ್ಧಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಮತ್ತಷ್ಟು ವೃದ್ಧಿಗೊಳಿಸುವಲ್ಲಿ ಪ್ರಧಾನ ಪಾತ್ರ ವಹಿಸುವ ಶೈಕ್ಷಣಿಕ ವಲಯವನ್ನು, ವಿಶೇಷವಾಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚಿಂತನ-ಮಂಥನ ಪ್ರಕ್ರಿಯೆಯನ್ನೇ ಅವಸಾನದ ಅಂಚಿಗೆ ಕೊಂಡೊಯ್ಯುತ್ತಿವೆ. ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಕ್ರಮೇಣ ಮರೀಚಿಕೆಯಾಗುತ್ತಿರುವುದು ಸ್ಪಷ್ಟ.
ಈ ಬೆಳವಣಿಗೆ ಅಪೇಕ್ಷಣೀಯವಲ್ಲ ಆದರೆ ಅನಿರೀಕ್ಷಿತವೂ ಅಲ್ಲ. 1990ರ ದಶಕದ ರಾಮಮಂದಿರ ವಿವಾದ, ಧರ್ಮ ಸಂಸತ್ತು, ವಾಜಪೇಯಿ ಸರ್ಕಾರದ ಸಂದರ್ಭದಲ್ಲಿನ ಸಂವಿಧಾನ ಪರಾಮರ್ಶೆಯ ಕಸರತ್ತು ಮತ್ತು ಇತರ ರಾಜಕೀಯ ಬೆಳವಣಿಗೆಗಳು ಇವತ್ತಿನ ಪರಿಸ್ಥಿಗೆ ಪೂರಕವಾಗಿಯೇ ಇದ್ದವು. ಸ್ಪಷ್ಟ ಬಹುಮತ ಇಲ್ಲದಿದ್ದುದು ಒಂದು ಅಡ್ಡಗೋಡೆಯಾಗಿತ್ತು. 2014ರ ಚುನಾವಣೆಗಳಲ್ಲಿ ಭಾರತದ ಪ್ರಜ್ಞಾವಂತ ಮತದಾರರು, ಆಯ್ಕೆಯ ಪರ್ಯಾಯ ಇಲ್ಲದೆ ನೀಡಿದ ಸ್ಪಷ್ಟ ಬಹುಮತ ಇಂದು ನಾವೇ ಸೃಷ್ಟಿಸಿಕೊಂಡ ಪೆಡಂಭೂತದಂತೆ ನಮ್ಮೆದುರು ನಿಂತಿದೆ.
ಇಂದಿಗೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂವಿಧಾನ ವಿರೋಧಿ ಕ್ರಮಗಳನ್ನು, ಕಾಯ್ದೆ ಕಾನೂನುಗಳನ್ನು ಮೌನವಾಗಿ ಸಹಿಸಿಕೊಳ್ಳುವ ನಿಷ್ಕ್ರಿಯ ಜನಸಮೂಹ ಒಂದೆಡೆ ಇದ್ದರೆ ಮತ್ತೊಂದೆಡೆ ಈ ಜನವಿರೋಧಿ ಕ್ರಮಗಳನ್ನು ಸಮರ್ಥಿಸಿಕೊಳ್ಳುವ ಬೃಹತ್ ಜನಸಮೂಹ ನಮ್ಮ ನಡುವೆ ಇದೆ.
ಸಮೂಹ ಸನ್ನಿಗೊಳಗಾಗಿರುವ ಈ ಸಮರ್ಥಕ ಪಡೆ, ಆಳುವ ವರ್ಗಗಳಿಗಿಂತಲೂ ಹೆಚ್ಚು ಅಪಾಯಕಾರಿಯಾಗಿ ಕಾಣುತ್ತಿದೆ. ಸಮಸ್ತ ಜನಕೋಟಿಯ ಜೀವನೋಪಾಯಕ್ಕೇ ಸಂಚಕಾರ ತರುವಂತಹ ತೈಲ ಬೆಲೆ ಹೆಚ್ಚಳ, ಭವಿಷ್ಯದ ಪೀಳಿಗೆಯ ಉಜ್ವಲ ಬದುಕಿಗೆ ಸಂಚಕಾರ ತರುವ ಎಗ್ಗಿಲ್ಲದ ಖಾಸಗೀಕರಣ ಮತ್ತು ದೇಶದ ಸಂಪತ್ತು-ಸಂಪನ್ಮೂಲದ ಮಾರಾಟ, ಇಂತಹ ಗಂಭೀರ ಸಮಸ್ಯೆಗಳೂ ಈ ಸನ್ನಿಗೊಳಗಾದ ಜನತೆಯನ್ನು ಜಾಗೃತಗೊಳಿಸುತ್ತಿಲ್ಲ. ವ್ಯಕ್ತಿ ಆರಾಧನೆ, ಸ್ವ ಹಿತಾಸಕ್ತಿ, ಸಂಕುಚಿತ ದೃಷ್ಟಿಕೋನ ಮತ್ತು ಸಮಷ್ಟಿ ಪ್ರಜ್ಞೆಯ ಕೊರತೆ ಒಂದು ಸಮಾಜವನ್ನು ಹೇಗೆ ನಿಷ್ಕ್ರಿಯಗೊಳಿಸುತ್ತದೆ ಎನ್ನುವುದಕ್ಕೆ 21ನೆಯ ಶತಮಾನದ ಆತ್ಮ ನಿರ್ಭರ ಭಾರತ ಅಜರಾಮರ ಸಾಕ್ಷಿಯಾಗಲಿದೆ.
ಇಂದು ಅಭಿವ್ಯಕ್ತಿಯ ಎಲ್ಲ ಮಾರ್ಗಗಳೂ ಗ್ರಾಂಥಿಕವಾಗಿ ಮುಕ್ತವಾಗಿವೆ. ಸಂವಿಧಾನ ದತ್ತ ಮೂಲಭೂತ ಹಕ್ಕುಗಳು ಯಥಾಸ್ಥಿತಿಯಲ್ಲಿ ಸಮಸ್ತ ಪ್ರಜೆಗಳಿಗೂ ಲಭ್ಯವಿದೆ. ಏಕೆಂದರೆ ಸಂವಿಧಾನದ ಯಾವ ಪರಿಚ್ಚೇದಗಳೂ ತಿದ್ದುಪಡಿಯಾಗಿಲ್ಲ. ಹಾಗಾಗಿ ನಾವು ಸಂವಿಧಾನವನ್ನು ಎದೆಗವುಚಿಕೊಂಡು ಮನೆಮನೆಗೆ ಹಂಚುತ್ತಿದ್ದೇವೆ.
ಇದು ಸ್ತುತ್ಯಾರ್ಹ ಕಾರ್ಯ. ಅತಿಹೆಚ್ಚು ಜನರು ಸಂವಿಧಾನವನ್ನು ಓದಿ, ಗ್ರಹಿಸಿ, ಮನನ ಮಾಡಿಕೊಂಡಷ್ಟೂ ಪ್ರಜಾತಂತ್ರದ ಬೇರುಗಳು ಗಟ್ಟಿಯಾಗುತ್ತವೆ. ನಮ್ಮ ಹಕ್ಕುಗಳು ಏನು ಮತ್ತು ಏಕೆ ನೀಡಲ್ಪಟ್ಟಿವೆ ಎನ್ನುವುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಇದು ಅವಶ್ಯವೂ ಹೌದು.
ಆದರೆ ಹೀಗೆ ಸಂವಿಧಾನವನ್ನು ಒಂದು ಕೈಯ್ಯಲ್ಲಿ ಎದೆಗವುಚಿಕೊಂಡೇ ತಮ್ಮ ಮತ್ತೊಂದು ಕೈಯ್ಯನ್ನು ಪ್ರಜೆಗಳ ಸಾಂವಿಧಾನಿಕ ಹಕ್ಕುಗಳನ್ನು ವಾಮಮಾರ್ಗಗಳ ಮೂಲಕ ಕಸಿದುಕೊಳ್ಳುತ್ತಿರುವ, ಪ್ರಜಾತಂತ್ರ ಮೌಲ್ಯಗಳ ಕತ್ತು ಹಿಸುಕುತ್ತಿರುವ , ಆಳುವ ವರ್ಗಗಳ ಹೆಗಲ ಮೇಲೆ ಹಾಕಿ ನಡೆಯುತ್ತಿರುವ ಜನಪ್ರತಿನಿಧಿಗಳನ್ನು ಹೇಗೆ ಬಣ್ಣಿಸುವುದು ? ಜೆಎನ್ಯು, ಪೌರತ್ವ ತಿದ್ದುಪಡಿ ಕಾಯ್ದೆ, ಶಹೀನ್ಭಾಗ್, ರೈತ ಮುಷ್ಕರ ಮತ್ತು ದಿಶಾ ರವಿ ಪ್ರಕರಣದವರೆಗೂ ಪ್ರಜಾತಂತ್ರ ಮೌಲ್ಯಗಳ ಕತ್ತುಹಿಸುಕುವ ಪ್ರಯತ್ನಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ. ಇದು ಮಿತಿ ಮೀರಿ ಹೋಗುತ್ತಿರುವುದರಿಂದಲೇ ಸುಪ್ರೀಂಕೋರ್ಟ್ ಸಹ “ ಸರ್ಕಾರ ಅಥವಾ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸುವುದು ದೇಶದ್ರೋಹ ಎನಿಸುವುದಿಲ್ಲ ” ಎಂದು ಹೇಳಿದೆ.
ಆದಾಗ್ಯೂ ಈ ದಮನಕಾರಿ ನೀತಿಗಳು ಮುಂದುವರೆಯುತ್ತಲೇ ಇವೆ. ಸರ್ಕಾರಿ ನೌಕರರನ್ನು ಮತ್ತು ಸಾರ್ವಭೌಮ ಪ್ರಜೆಗಳನ್ನು, ಲೇಖಕರನ್ನು, ಬರಹಗಾರರನ್ನು, ಕಲಾವಿದರನ್ನು ಕಾಯ್ದೆ, ನಿಯಮ, ಕಾನೂನುಗಳ ಮೂಲಕ ಚಿಂತನಹೀನರನ್ನಾಗಿ ಮಾಡುವ, ಕ್ರಿಯಾಶೀಲತೆಯಿಂದ ವಂಚಿಸುವ, ಸೃಜನಶೀಲತೆಯಿಂದ ವಿಮುಖರಾಗುವಂತೆ ಮಾಡುವ, ಒಂದು ಆಡಳಿತ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಈ ಆಡಳಿತ ವ್ಯವಸ್ಥೆಯನ್ನು ಒಪ್ಪಿಕೊಂಡು ತಮ್ಮ ಸ್ವಾರ್ಥ ಸಾಧನೆಗಾಗಿ, ಅಧಿಕಾರ ರಾಜಕಾರಣದ ಹಂಬಲಕ್ಕಾಗಿ, ಸ್ವ-ಕಲ್ಪಿತ ಸೈದ್ಧಾಂತಿಕ ಬದ್ಧತೆಯ ನೆರಳಲ್ಲಿ ಸಂವಿಧಾನ ವಿರೋಧಿ ಆಡಳಿತ ನೀತಿಗಳನ್ನು ಬೆಂಬಲಿಸುವ ಜನಪ್ರತಿನಿಧಿಗಳು ಪ್ರಜೆಗಳ ದೃಷ್ಟಿಯಲ್ಲಿ ದ್ರೋಹಿಗಳಾಗಿ ಕಾಣುತ್ತಿದ್ದಾರೆ.
ಗಡಿ ಸುರಕ್ಷತೆ, ರಕ್ಷಣಾ ವ್ಯವಸ್ಥೆಯ ಸಬಲೀಕರಣ ಮತ್ತು ಶತ್ರು ರಾಷ್ಟ್ರಗಳನ್ನು ಹಿಮ್ಮೆಟ್ಟಿಸುವ ಆತ್ಮಸ್ಥೈರ್ಯ ಭೌಗೋಳಿಕವಾಗಿ ದೇಶವನ್ನು ರಕ್ಷಿಸುತ್ತದೆ. ಆದರೆ ಪ್ರಜಾಸತ್ತಾತ್ಮಕ ಮೌಲ್ಯಗಳೇ ದುರ್ಬಲವಾಗುತ್ತಿರುವಾಗ ದೇಶ ಆಂತರಿಕವಾಗಿ ಶಿಥಿಲವಾಗುತ್ತಾ ಹೋಗುತ್ತದೆ. ರಾಫೇಲ್, ಕ್ಷಿಪಣಿ, ಅಣುಬಾಂಬುಗಳು ಬಡತನ, ಅಪೌಷ್ಟಿಕತೆಯನ್ನು ಹೋಗಲಾಡಿಸುವುದೂ ಇಲ್ಲ, ಸಾಮಾಜಿಕ ಸಮಾನತೆಯನ್ನು ಕಾಪಾಡುವುದೂ ಇಲ್ಲ, ಸಾಂಸ್ಕೃತಿಕ ವೈವಿಧ್ಯತೆಯನ್ನು ಸಂರಕ್ಷಿಸುವುದೂ ಇಲ್ಲ.
ಇದನ್ನು ಸಾಧಿಸಬೇಕಾದರೆ ನಮ್ಮ ಸಂವಿಧಾನದ ಅಂತಃಸತ್ವ ಉಳಿಯಬೇಕು, ತಳಮಟ್ಟದಲ್ಲಿ ಉಳಿಯಬೇಕು, ಸಾರ್ವಭೌಮ ಪ್ರಜೆಗಳ ನಡುವೆ ಉಳಿಯಬೇಕು, ಗ್ರಾಂಥಿಕವಾಗಿ ಉಳಿದರೆ ಸಾಲದು. ಜನರ ನಾಡಿಮಿಡಿತವನ್ನೇ ಗ್ರಹಿಸಲಾರದಷ್ಟು ಭ್ರಷ್ಟರಾಗಿರುವ ಜನಪ್ರತಿನಿಧಿಗಳಿಗೆ ಈ ವಾಸ್ತವದ ಅರಿವು ಮೂಡಬೇಕು. ಆಗ ಮಾತ್ರ ನಾವು ಸಂವಿಧಾನವನ್ನು ಕೈಯ್ಯಲ್ಲಿ ಹಿಡಿದು ಎದೆಗವುಚಿಕೊಂಡು ಅಂಬೇಡ್ಕರರತ್ತ ನಡೆಯುವ ಅರ್ಹತೆ ಪಡೆಯಲು ಸಾಧ್ಯ.
ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ



