ಬಹಿರಂಗ
ಸಂವಿಧಾನ ಚೌಕಟ್ಟಿನಲ್ಲೇ ಪ್ರಜಾತಂತ್ರದ ಹರಣ
- ನಾ ದಿವಾಕರ
ಪ್ರಜೆಗಳ ಸಾರ್ವಭೌಮತ್ವ ಮತ್ತು ಸ್ವಾವಲಂಬಿ ದೇಶದ ಕನಸುಗಳನ್ನು ಹೊತ್ತು ವಿಶ್ವದ ಶ್ರೇಷ್ಠ ಸಂವಿಧಾನವನ್ನು ಅಂಗೀಕರಿಸಿದ ಸ್ವತಂತ್ರ ಭಾರತದಲ್ಲಿ ಅಧಿಕಾರ ರಾಜಕಾರಣ ಸ್ವಾಭಿಮಾನಿ ಜನಪ್ರತಿನಿಧಿಗಳನ್ನು ಹುಟ್ಟುಹಾಕಬೇಕಿತ್ತು. ಜನಪರ ಕಾಳಜಿ, ಸಂವಿಧಾನ ಬದ್ಧತೆ, ಪ್ರಜಾತಂತ್ರದ ಬಗ್ಗೆ ಗೌರವ ಮತ್ತು ಸಾಂವಿಧಾನಿಕ ನಿಯಮ ಹಾಗೂ ಮೌಲ್ಯಗಳಲ್ಲಿ ಶ್ರದ್ಧೆ ಈ ಲಕ್ಷಣಗಳು ಮಾತ್ರ ಇಂತಹ ಸ್ವಾಭಿಮಾನಿ ಪ್ರತಿನಿಧಿಗಳನ್ನು ಸೃಷ್ಟಿಸಲು ಸಾಧ್ಯ. ದುರಂತ ಎಂದರೆ 70 ವರ್ಷಗಳ ಸ್ವತಂತ್ರ ಭಾರತ ಅಧಿಕಾರ ರಾಜಕಾರಣದ ಅಂಗಳದಲ್ಲಿ ಪರಾವಲಂಬಿ ಪ್ರತಿನಿಧಿಗಳನ್ನು ಸೃಷ್ಟಿಸಿದೆ. ಮಾರಿಕೊಂಡ ಸರಕುಗಳನ್ನು ಸೃಷ್ಟಿಸಿದೆ. ಸ್ವಾಭಿಮಾನ ಶೂನ್ಯ ಧನದಾಹಿಗಳನ್ನು ಸೃಷ್ಟಿಸಿದೆ. ಅಧಿಕಾರ ಮೋಹಿಗಳನ್ನು ಸೃಷ್ಟಿಸಿದೆ.
ಭಾರತ ತನ್ನ ಭೌಗೋಳಿಕ ಸ್ವಾತಂತ್ರ್ಯದ ರಕ್ಷಣೆಗೆ ಅಗತ್ಯವಾದ ಎಲ್ಲ ರಕ್ಷಣಾ ಪರಿಕರಗಳನ್ನೂ ಸೃಷ್ಟಿಸಿಕೊಂಡಿದೆ. ವಿಶ್ವದ ಯಾವುದೇ ಪ್ರಬಲ ರಾಷ್ಟ್ರಗಳನ್ನು ಎದುರಿಸಲು ಭಾರತದ ಸೇನೆ ಮತ್ತು ಶಸ್ತ್ರಾಸ್ತ್ರ ಸಂಗ್ರಹಾಗಾರ ಸಿದ್ಧವಾಗಿದೆ. ಬಾಹ್ಯ ಶತ್ರುಗಳು ಭಾರತದ ಮೇಲೆ ದಾಳಿ ನಡೆಸುವುದು ಸುಲಭವಲ್ಲ ಎನ್ನುವುದೂ ವಿಶ್ವ ಸಮುದಾಯಕ್ಕೆ ತಿಳಿದಿದೆ.
ಈ ಭೌಗೋಳಿಕ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವ ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿರಲಿಕ್ಕೂ ಸಾಕು. ಆದರೆ ದೇಶ ಎನ್ನುವ ಪರಿಕಲ್ಪನೆ ಭೂಪಟದಲ್ಲಿನ ರೇಖೆಗಳಿಗಷ್ಟೇ ಸೀಮಿತವಾಗುವುದಿಲ್ಲ. ಸುರಕ್ಷಿತ ಗಡಿ ರೇಖೆಗಳು ಭೌಗೋಳೀಕ ದೇಶವನ್ನು ರಕ್ಷಿಸುತ್ತವೆ, ಬೌದ್ಧಿಕ ದೇಶವನ್ನು ರಕ್ಷಿಸಲು ನಮ್ಮ ಅಂತಃಸತ್ವ ಮತ್ತು ಅಂತಃಶಕ್ತಿ ಸುಸ್ಥಿರವಾಗಿರುವುದು ಅವಶ್ಯ.
ಈ ಅಂತಃಶಕ್ತಿ ಅಥವಾ ಅಂತಃಸತ್ವ ಇರುವುದು ನಮ್ಮ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಬದುಕಿನಲ್ಲಿ. ಈ ಮೂರೂ ವಲಯಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳನ್ನು ನಮ್ಮ ನಡುವಿನಿಂದಲೇ ನಾವು ಕಾಲದಿಂದ ಕಾಲಕ್ಕೆ ಆಯ್ಕೆ ಮಾಡಿ ಶಾಸನ ಸಭೆಗಳಿಗೆ ಕಳಿಸುತ್ತಿದ್ದೇವೆ. ಈ ಪ್ರತಿನಿಧಿಗಳು ವಿಧಾನಸಭೆಗಳಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕುಳಿತು, ಚರ್ಚೆ ನಡೆಸಿ ಕೈಗೊಳ್ಳುವ ತೀರ್ಮಾನಗಳು ಈ ದೇಶದ ಬೌದ್ಧಿಕ ಅಂತಃಸತ್ವವನ್ನು, ಸಾಮಾಜಿಕ ಸ್ವಾಸ್ಥ್ಯವನ್ನು, ರಾಜಕೀಯ ಸುಸ್ಥಿರತೆಯನ್ನು ನಿರ್ಧರಿಸುತ್ತವೆ.
ಸ್ವಾತಂತ್ರ್ಯಾನಂತರದ ಮೊದಲ ನಾಲ್ಕು ದಶಕಗಳಲ್ಲಿ ನಿರ್ಮಿಸಲಾದ ಸ್ವಾವಲಂಬಿ ಭಾರತ ಇಂದು ಪರಾವಲಂಬನೆಯತ್ತ ವಾಲುತ್ತಿರುವುದನ್ನು ನೋಡಿದರೆ, ಈ ದೇಶದ ಪ್ರಜೆಗಳ ಆಯ್ಕೆ ತಪ್ಪಾಗಿರುವುದು ಸ್ಪಷ್ಟವಾಗುತ್ತದೆ.
2013ರಲ್ಲಿ ಚುನಾಯಿತ ಉದಾರವಾದಿ ಪ್ರಜಾತಂತ್ರ ರಾಷ್ಟ್ರವಾಗಿದ್ದ ಭಾರತ ಇಂದು ಚುನಾಯಿತ ನಿರಂಕುಶಾಧಿಪತ್ಯದ ರಾಷ್ಟ್ರವಾಗಿದೆ ಎಂದು ಜಾಗತಿಕ ಸಂಸ್ಥೆಯೊಂದು ಹೇಳಿದೆ. ಈ ಅಭಿಪ್ರಾಯ ಯಾವುದೋ ಒಂದು ಸಂಸ್ಥೆಯಿಂದ ವ್ಯಕ್ತವಾಗಿರುವುದರಿಂದ ತಳ್ಳಿಹಾಕುವುದು ಸುಲಭ. ಆದರೆ ಭಾರತದ ವಸ್ತುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವ ಯಾವುದೇ ಪ್ರಜ್ಞಾವಂತರಿಗೆ, ದೇಶದಲ್ಲಿ ಪ್ರಜಾತಂತ್ರದ ಅವಸಾನ ಸಮೀಪಿಸುತ್ತಿರುವುದು ಸ್ಪಷ್ಟವಾಗುತ್ತದೆ.
ದಿಶಾ ರವಿ ತೀರ್ಪಿನ ನಂತರ ಭಾರತದ ನ್ಯಾಯಾಂಗ ವ್ಯವಸ್ಥೆ ಕೊಂಚ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ಸರ್ಕಾರದ ವಿರುದ್ಧ ಅಥವಾ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಟೀಕೆ ಮಾಡುವುದು ದೇಶದ್ರೋಹ ಎನಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಆದರೆ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸಲು, ವಿಮರ್ಶಿಸಲು ಇರುವ ಎಲ್ಲ ವೇದಿಕೆಗಳನ್ನೂ ನಿಯಂತ್ರಿಸುವ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಈ ಬೆಳವಣಿಗೆ ನ್ಯಾಯಾಂಗದ ಪರಾಮರ್ಶೆಗೆ ಒಳಪಟ್ಟರೆ ಮಾತ್ರ ಸಾಂವಿಧಾನಿಕ ಹಕ್ಕುಗಳ ರಕ್ಷಣೆ ಸಾಧ್ಯ. ಡಿಜಿಟಲ್ ಸುದ್ದಿ ವೇದಿಕೆಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುವ ಸುದ್ದಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿರುವ ಆರು ಸದಸ್ಯರ ಸಚಿವರ ಕೂಟ ತನ್ನ ವರದಿಯನ್ನು ಸಲ್ಲಿಸಿದ್ದು, ಈ ವರದಿಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಹಲವು ಸಲಹೆಗಳನ್ನು ನೀಡಲಾಗಿದೆ.
ಕೋವಿದ್ 19 ಸಂದರ್ಭದಲ್ಲೇ ಆರು ಬಾರಿ ಸಭೆ ನಡೆಸಿರುವ ಈ ಸಚಿವರ ಕೂಟದಲ್ಲಿ ವಿದೇಶಾಂಗ ಸಚಿವರು, ಕಾನೂನು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಸರ್ಕಾರದ ಪರ ವಹಿಸದ ಪತ್ರಕರ್ತರನ್ನು, ಪತ್ರಿಕಾ ಸಮೂಹ ಮತ್ತು ಮಾಧ್ಯಮಗಳನ್ನು ಹೇಗೆ ಸೆಳೆಯಬೇಕು ಎನ್ನುವುದರ ಬಗ್ಗೆ ಕೆಲವು ಸಚಿವರು ಸಲಹೆಗಳನ್ನು ನೀಡಿದ್ದು, ಈ ನಿಟ್ಟಿನಲ್ಲಿ ಸುದ್ದಿ ಪ್ರಸರಣವನ್ನು ನಿಯಂತ್ರಿಸುವ ಬಗ್ಗೆ ಈಗಾಗಲೇ ‘ ಗೋದಿ ಮೀಡಿಯಾ ’ ಎಂದೇ ಹೆಸರಾಗಿರುವ ವಂದಿಮಾಗಧ ಮಾಧ್ಯಮಗಳಿಂದಲೇ ಸಲಹೆ ಪಡೆಯಲಾಗಿದೆ.
ಪತ್ರಕರ್ತರನ್ನು, ಸರ್ಕಾರದ ಪರ, ವಿರೋಧಿ ಮತ್ತು ತಟಸ್ಠ ಎಂದು ಮೂರು ವರ್ಗಗಳನ್ನಾಗಿ ವಿಂಗಡಿಸುವಂತೆ ಓರ್ವ ಸಚಿವರು ಸಲಹೆ ನೀಡಿದ್ದರೆ, ಮತ್ತೊಬ್ಬರು ಮಾಧ್ಯಮಗಳಲ್ಲಿ ಸರ್ಕಾರದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಸೃಷ್ಟಿಸುವ 50 ಪತ್ರಕರ್ತರನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲು ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ವರದಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಲಾಗುವುದಿಲ್ಲ. ಏಕೆಂದರೆ ಕರ್ನಾಟಕವನ್ನೂ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಲ್ಲಿ ಇರಬಹುದಾದ ಕ್ರಿಯಾಶೀಲತೆ ಮತ್ತು ಸೃಜನಶೀಲತೆಯ ಕತ್ತು ಹಿಸುಕುವಂತಹ ಕಾನೂನುಗಳನ್ನು ಜಾರಿಗೊಳಿಸಿವೆ. ಕಳೆದ ವರ್ಷ ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಯಾವುದೇ ಸರ್ಕಾರಿ ನೌಕರರು ಪೂರ್ವಾನುಮತಿ ಇಲ್ಲದೆ ಸಿನಿಮಾಗಳಲ್ಲಿ, ಟಿ ವಿ ಧಾರಾವಾಹಿಗಳಲ್ಲಿ ನಟಿಸುವಂತಿಲ್ಲ, ಯಾವುದೇ ರೀತಿಯ ಪುಸ್ತಕ ಪ್ರಕಟಿಸುವಂತಿಲ್ಲ, ಕೇಂದ್ರ ಮತ್ತು ಯಾವುದೇ ರಾಜ್ಯ ಸರ್ಕಾರಗಳ ಆಡಳಿತ ನೀತಿಗಳನ್ನು ಟೀಕಿಸಿ ಲೇಖನಗಳನ್ನು ಬರೆಯುವಂತಿಲ್ಲ.
ಮೊದಲಿನಿಂದಲೂ ಈ ರೀತಿಯ ಸೇವಾ ನಿಯಮ ಜಾರಿಯಲ್ಲಿತ್ತಾದರೂ ಕರ್ನಾಟಕ ನಾಗರಿಕ ಸೇವಾ ಕಾಯ್ದೆಯಲ್ಲಿ ನಿರ್ಬಂಧಗಳನ್ನು ನಮೂದಿಸಲಾಗಿರಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಅನೇಕ ಅಧ್ಯಾಪಕರು, ಶಿಕ್ಷಕರು, ಸರ್ಕಾರಿ ನೌಕರರು ತಮ್ಮ ಕಾವ್ಯ , ಕಾದಂಬರಿ, ಕಥೆ ಮತ್ತು ಇತರ ರೀತಿಯ ಬರಹಗಳ ಮೂಲಕ ಜನಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಸರ್ಕಾರಗಳ ಜನವಿರೋಧಿ ಆಡಳಿತ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಇಂದು ಸರ್ಕಾರದ ವಿರುದ್ಧ ಮಾತನಾಡುವುದೇ ದೇಶದ್ರೋಹ ಎನ್ನುವ ಆಡಳಿತ ವ್ಯವಸ್ಥೆಯ ಧೋರಣೆ ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ ಈ ರೀತಿಯ ನಿಯಮಗಳು ಸೃಜನಶೀಲ ಮನಸುಗಳನ್ನು ನಿಷ್ಕ್ರಿಯಗೊಳಿಸಿಬಿಡುತ್ತವೆ.
ಸರ್ಕಾರದ ಜನವಿರೋಧಿ, ಸಮಾಜವಿರೋಧಿ ನೀತಿಗಳನ್ನೂ ಟೀಕೆ ಮಾಡದಂತೆ ಸರ್ಕಾರಿ ನೌಕರರ ಮೇಲೆ ನಿರ್ಬಂಧ ಹೇರಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳ ಮೇಲೆ ಸರ್ಕಾರದ ಕಾಕದೃಷ್ಟಿ ಬಿದ್ದಿದೆ. ಆಡಳಿತ ವ್ಯವಸ್ಥೆಯನ್ನು ಪ್ರಶ್ನಾತೀತವನ್ನಾಗಿ ಮಾಡುವ ಇಂತಹ ನಿಯಮಗಳು ಭಾರತವನ್ನು ನಿರಂಕುಶಾಧಿಪತ್ಯದತ್ತ ಕೊಂಡೊಯ್ಯುತ್ತಿರುವುದು ಸ್ಪಷ್ಟ.
ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವಾಲಯ ಹೊರಡಿಸಿದ ಆದೇಶವೊಂದರ ಅನುಸಾರ ಸಾರ್ವಜನಿಕ ಹಣದಿಂದ ನಿರ್ವಹಿಸಲ್ಪಡುವ ಭಾರತದ ಯಾವುದೇ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು, ಅಧ್ಯಾಪಕರು ಅಂತರ ರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ನಡೆಸುವ ಮುನ್ನ ಸಚಿವಾಲಯದ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.
ಭಾರತದ ಆಂತರಿಕ ವಿಚಾರಗಳ ಬಗ್ಗೆ ವಿಚಾರಸಂಕಿರಣ ನಡೆಸುವುದಕ್ಕೆ ಬಹುತೇಕ ನಿರ್ಬಂಧ ಹೇರಲಾಗಿದ್ದು, ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು, ಭಾರತದ ಗಡಿ ರೇಖೆಗಳು ಹೀಗೆ ಹಲವು ವಿಚಾರಗಳನ್ನು ಆಂತರಿಕ ವಿಚಾರಗಳ ಪರಿಧಿಯಲ್ಲೇ ಪರಿಗಣಿಸಲಾಗುತ್ತದೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತ ಮುಷ್ಕರವನ್ನೂ ಭಾರತ ಸರ್ಕಾರ ಆಂತರಿಕ ವಿಚಾರ ಎಂದೇ ಭಾವಿಸುತ್ತದೆ. ಸೂಕ್ಷ್ಮ ವಿಚಾರಗಳನ್ನೂ ಈ ಚೌಕಟ್ಟಿನಲ್ಲೇ ಪರಿಗಣಿಸಲಾಗುವುದರಿಂದ, ಇಂದಿನ ಆಡಳಿತ ವ್ಯವಸ್ಥೆಯನ್ನು ಗಮನಿಸಿದರೆ ಕೋಮುವಾದ, ಮತಾಂಧತೆ, ಹಿಂದುತ್ವ, ಜಾತಿ ದೌರ್ಜನ್ಯ ಇವೆಲ್ಲವೂ ವಿಚಾರ ಸಂಕಿರಣಗಳಿಂದ ಹೊರಗುಳಿಯುವ ವಿಷಯಗಳೇ ಆಗಿಬಿಡುತ್ತವೆ.
ಇದು ಬಹುಮಟ್ಟಿಗೆ ವಿಚಾರ ಮಂಥನದ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಈಗಾಗಲೇ ವಿಶ್ವವಿದ್ಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ, ಸಮಾಜೋ ಸಾಂಸ್ಕೃತಿಕ ವಿಚಾರಗಳ ಬಗ್ಗೆ ವಿಚಾರ ಸಂಕಿರಣಗಳನ್ನು ನಡೆಸುವುದು ಅಸಾಧ್ಯವೇ ಆಗಿಹೋಗಿದೆ.
ಸರ್ಕಾರಿ ನೌಕರರು, ವೈದ್ಯರು, ವಿಜ್ಞಾನಿಗಳು, ಸಂಶೋಧಕರು, ಜಂಟಿ ಕಾರ್ಯದರ್ಶಿಗಿಂತಲೂ ಉನ್ನತ ಹುದ್ದೆ ಹೊಂದಿರುವವರು, ವಿಶ್ವವಿದ್ಯಾಲಯದ ಅಧ್ಯಾಪಕ ವರ್ಗ, ಬೋಧನಾ ಸಿಬ್ಬಂದಿ ಹೀಗೆ ಎಲ್ಲರೂ ಸಹ ಅಂತರ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕಾಗುತ್ತದೆ. ವಿದೇಶಿ ಗಣ್ಯರ ಉಪಸ್ಥಿತಿ ಇಲ್ಲದ ವಿಚಾರ ಸಂಕಿರಣಗಳಿಗೂ ಈ ನಿಯಮ ಅನ್ವಯಿಸುತ್ತದೆ.
ಆನ್ ಲೈನ್ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಬಳಸಲಾಗುವ ಆನ್ ಲೈನ್ ವೇದಿಕೆಗಳು ವಿದೇಶಿ ಕಂಪನಿಗಳ ನಿಯಂತ್ರಣದಲ್ಲಿದ್ದ ಪಕ್ಷದಲ್ಲಿ, ಉದಾಹರಣೆಗೆ ಝೂಂ, ಅದರ ಕೊಂಡಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಒದಗಿಸುವಂತೆ ಸೂಚಿಸಲಾಗಿದೆ.
ಒಂದು ಕಾರ್ಮಿಕ ಮುಷ್ಕರವನ್ನು, ರೈತ ಹೋರಾಟವನ್ನು, ವಿದ್ಯಾರ್ಥಿಗಳ ಸಂಘರ್ಷವನ್ನು ಬೆಂಬಲಿಸುವುದೇ ದೇಶದ್ರೋಹಿ ಕೃತ್ಯ ಎನ್ನುವ ವಿಕೃತ ಮನೋಭಾವ ಇಂದಿನ ಆಡಳಿತ ವ್ಯವಸ್ಥೆಯಲ್ಲಿ ಆಳವಾಗಿ ಬೇರೂರಿರುವುದು ಜೆಎನ್ಯು ಘಟನೆಗಳಿಂದಲೇ ಸ್ಪಷ್ಟವಾಗಿದೆ. ದೇಶದ ಬೌದ್ಧಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಮತ್ತಷ್ಟು ವೃದ್ಧಿಗೊಳಿಸುವಲ್ಲಿ ಪ್ರಧಾನ ಪಾತ್ರ ವಹಿಸುವ ಶೈಕ್ಷಣಿಕ ವಲಯವನ್ನು, ವಿಶೇಷವಾಗಿ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚಿಂತನ-ಮಂಥನ ಪ್ರಕ್ರಿಯೆಯನ್ನೇ ಅವಸಾನದ ಅಂಚಿಗೆ ಕೊಂಡೊಯ್ಯುತ್ತಿವೆ. ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಕ್ರಮೇಣ ಮರೀಚಿಕೆಯಾಗುತ್ತಿರುವುದು ಸ್ಪಷ್ಟ.
ಈ ಬೆಳವಣಿಗೆ ಅಪೇಕ್ಷಣೀಯವಲ್ಲ ಆದರೆ ಅನಿರೀಕ್ಷಿತವೂ ಅಲ್ಲ. 1990ರ ದಶಕದ ರಾಮಮಂದಿರ ವಿವಾದ, ಧರ್ಮ ಸಂಸತ್ತು, ವಾಜಪೇಯಿ ಸರ್ಕಾರದ ಸಂದರ್ಭದಲ್ಲಿನ ಸಂವಿಧಾನ ಪರಾಮರ್ಶೆಯ ಕಸರತ್ತು ಮತ್ತು ಇತರ ರಾಜಕೀಯ ಬೆಳವಣಿಗೆಗಳು ಇವತ್ತಿನ ಪರಿಸ್ಥಿಗೆ ಪೂರಕವಾಗಿಯೇ ಇದ್ದವು. ಸ್ಪಷ್ಟ ಬಹುಮತ ಇಲ್ಲದಿದ್ದುದು ಒಂದು ಅಡ್ಡಗೋಡೆಯಾಗಿತ್ತು. 2014ರ ಚುನಾವಣೆಗಳಲ್ಲಿ ಭಾರತದ ಪ್ರಜ್ಞಾವಂತ ಮತದಾರರು, ಆಯ್ಕೆಯ ಪರ್ಯಾಯ ಇಲ್ಲದೆ ನೀಡಿದ ಸ್ಪಷ್ಟ ಬಹುಮತ ಇಂದು ನಾವೇ ಸೃಷ್ಟಿಸಿಕೊಂಡ ಪೆಡಂಭೂತದಂತೆ ನಮ್ಮೆದುರು ನಿಂತಿದೆ.
ಇಂದಿಗೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂವಿಧಾನ ವಿರೋಧಿ ಕ್ರಮಗಳನ್ನು, ಕಾಯ್ದೆ ಕಾನೂನುಗಳನ್ನು ಮೌನವಾಗಿ ಸಹಿಸಿಕೊಳ್ಳುವ ನಿಷ್ಕ್ರಿಯ ಜನಸಮೂಹ ಒಂದೆಡೆ ಇದ್ದರೆ ಮತ್ತೊಂದೆಡೆ ಈ ಜನವಿರೋಧಿ ಕ್ರಮಗಳನ್ನು ಸಮರ್ಥಿಸಿಕೊಳ್ಳುವ ಬೃಹತ್ ಜನಸಮೂಹ ನಮ್ಮ ನಡುವೆ ಇದೆ.
ಸಮೂಹ ಸನ್ನಿಗೊಳಗಾಗಿರುವ ಈ ಸಮರ್ಥಕ ಪಡೆ, ಆಳುವ ವರ್ಗಗಳಿಗಿಂತಲೂ ಹೆಚ್ಚು ಅಪಾಯಕಾರಿಯಾಗಿ ಕಾಣುತ್ತಿದೆ. ಸಮಸ್ತ ಜನಕೋಟಿಯ ಜೀವನೋಪಾಯಕ್ಕೇ ಸಂಚಕಾರ ತರುವಂತಹ ತೈಲ ಬೆಲೆ ಹೆಚ್ಚಳ, ಭವಿಷ್ಯದ ಪೀಳಿಗೆಯ ಉಜ್ವಲ ಬದುಕಿಗೆ ಸಂಚಕಾರ ತರುವ ಎಗ್ಗಿಲ್ಲದ ಖಾಸಗೀಕರಣ ಮತ್ತು ದೇಶದ ಸಂಪತ್ತು-ಸಂಪನ್ಮೂಲದ ಮಾರಾಟ, ಇಂತಹ ಗಂಭೀರ ಸಮಸ್ಯೆಗಳೂ ಈ ಸನ್ನಿಗೊಳಗಾದ ಜನತೆಯನ್ನು ಜಾಗೃತಗೊಳಿಸುತ್ತಿಲ್ಲ. ವ್ಯಕ್ತಿ ಆರಾಧನೆ, ಸ್ವ ಹಿತಾಸಕ್ತಿ, ಸಂಕುಚಿತ ದೃಷ್ಟಿಕೋನ ಮತ್ತು ಸಮಷ್ಟಿ ಪ್ರಜ್ಞೆಯ ಕೊರತೆ ಒಂದು ಸಮಾಜವನ್ನು ಹೇಗೆ ನಿಷ್ಕ್ರಿಯಗೊಳಿಸುತ್ತದೆ ಎನ್ನುವುದಕ್ಕೆ 21ನೆಯ ಶತಮಾನದ ಆತ್ಮ ನಿರ್ಭರ ಭಾರತ ಅಜರಾಮರ ಸಾಕ್ಷಿಯಾಗಲಿದೆ.
ಇಂದು ಅಭಿವ್ಯಕ್ತಿಯ ಎಲ್ಲ ಮಾರ್ಗಗಳೂ ಗ್ರಾಂಥಿಕವಾಗಿ ಮುಕ್ತವಾಗಿವೆ. ಸಂವಿಧಾನ ದತ್ತ ಮೂಲಭೂತ ಹಕ್ಕುಗಳು ಯಥಾಸ್ಥಿತಿಯಲ್ಲಿ ಸಮಸ್ತ ಪ್ರಜೆಗಳಿಗೂ ಲಭ್ಯವಿದೆ. ಏಕೆಂದರೆ ಸಂವಿಧಾನದ ಯಾವ ಪರಿಚ್ಚೇದಗಳೂ ತಿದ್ದುಪಡಿಯಾಗಿಲ್ಲ. ಹಾಗಾಗಿ ನಾವು ಸಂವಿಧಾನವನ್ನು ಎದೆಗವುಚಿಕೊಂಡು ಮನೆಮನೆಗೆ ಹಂಚುತ್ತಿದ್ದೇವೆ.
ಇದು ಸ್ತುತ್ಯಾರ್ಹ ಕಾರ್ಯ. ಅತಿಹೆಚ್ಚು ಜನರು ಸಂವಿಧಾನವನ್ನು ಓದಿ, ಗ್ರಹಿಸಿ, ಮನನ ಮಾಡಿಕೊಂಡಷ್ಟೂ ಪ್ರಜಾತಂತ್ರದ ಬೇರುಗಳು ಗಟ್ಟಿಯಾಗುತ್ತವೆ. ನಮ್ಮ ಹಕ್ಕುಗಳು ಏನು ಮತ್ತು ಏಕೆ ನೀಡಲ್ಪಟ್ಟಿವೆ ಎನ್ನುವುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಇದು ಅವಶ್ಯವೂ ಹೌದು.
ಆದರೆ ಹೀಗೆ ಸಂವಿಧಾನವನ್ನು ಒಂದು ಕೈಯ್ಯಲ್ಲಿ ಎದೆಗವುಚಿಕೊಂಡೇ ತಮ್ಮ ಮತ್ತೊಂದು ಕೈಯ್ಯನ್ನು ಪ್ರಜೆಗಳ ಸಾಂವಿಧಾನಿಕ ಹಕ್ಕುಗಳನ್ನು ವಾಮಮಾರ್ಗಗಳ ಮೂಲಕ ಕಸಿದುಕೊಳ್ಳುತ್ತಿರುವ, ಪ್ರಜಾತಂತ್ರ ಮೌಲ್ಯಗಳ ಕತ್ತು ಹಿಸುಕುತ್ತಿರುವ , ಆಳುವ ವರ್ಗಗಳ ಹೆಗಲ ಮೇಲೆ ಹಾಕಿ ನಡೆಯುತ್ತಿರುವ ಜನಪ್ರತಿನಿಧಿಗಳನ್ನು ಹೇಗೆ ಬಣ್ಣಿಸುವುದು ? ಜೆಎನ್ಯು, ಪೌರತ್ವ ತಿದ್ದುಪಡಿ ಕಾಯ್ದೆ, ಶಹೀನ್ಭಾಗ್, ರೈತ ಮುಷ್ಕರ ಮತ್ತು ದಿಶಾ ರವಿ ಪ್ರಕರಣದವರೆಗೂ ಪ್ರಜಾತಂತ್ರ ಮೌಲ್ಯಗಳ ಕತ್ತುಹಿಸುಕುವ ಪ್ರಯತ್ನಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ. ಇದು ಮಿತಿ ಮೀರಿ ಹೋಗುತ್ತಿರುವುದರಿಂದಲೇ ಸುಪ್ರೀಂಕೋರ್ಟ್ ಸಹ “ ಸರ್ಕಾರ ಅಥವಾ ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸುವುದು ದೇಶದ್ರೋಹ ಎನಿಸುವುದಿಲ್ಲ ” ಎಂದು ಹೇಳಿದೆ.
ಆದಾಗ್ಯೂ ಈ ದಮನಕಾರಿ ನೀತಿಗಳು ಮುಂದುವರೆಯುತ್ತಲೇ ಇವೆ. ಸರ್ಕಾರಿ ನೌಕರರನ್ನು ಮತ್ತು ಸಾರ್ವಭೌಮ ಪ್ರಜೆಗಳನ್ನು, ಲೇಖಕರನ್ನು, ಬರಹಗಾರರನ್ನು, ಕಲಾವಿದರನ್ನು ಕಾಯ್ದೆ, ನಿಯಮ, ಕಾನೂನುಗಳ ಮೂಲಕ ಚಿಂತನಹೀನರನ್ನಾಗಿ ಮಾಡುವ, ಕ್ರಿಯಾಶೀಲತೆಯಿಂದ ವಂಚಿಸುವ, ಸೃಜನಶೀಲತೆಯಿಂದ ವಿಮುಖರಾಗುವಂತೆ ಮಾಡುವ, ಒಂದು ಆಡಳಿತ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಈ ಆಡಳಿತ ವ್ಯವಸ್ಥೆಯನ್ನು ಒಪ್ಪಿಕೊಂಡು ತಮ್ಮ ಸ್ವಾರ್ಥ ಸಾಧನೆಗಾಗಿ, ಅಧಿಕಾರ ರಾಜಕಾರಣದ ಹಂಬಲಕ್ಕಾಗಿ, ಸ್ವ-ಕಲ್ಪಿತ ಸೈದ್ಧಾಂತಿಕ ಬದ್ಧತೆಯ ನೆರಳಲ್ಲಿ ಸಂವಿಧಾನ ವಿರೋಧಿ ಆಡಳಿತ ನೀತಿಗಳನ್ನು ಬೆಂಬಲಿಸುವ ಜನಪ್ರತಿನಿಧಿಗಳು ಪ್ರಜೆಗಳ ದೃಷ್ಟಿಯಲ್ಲಿ ದ್ರೋಹಿಗಳಾಗಿ ಕಾಣುತ್ತಿದ್ದಾರೆ.
ಗಡಿ ಸುರಕ್ಷತೆ, ರಕ್ಷಣಾ ವ್ಯವಸ್ಥೆಯ ಸಬಲೀಕರಣ ಮತ್ತು ಶತ್ರು ರಾಷ್ಟ್ರಗಳನ್ನು ಹಿಮ್ಮೆಟ್ಟಿಸುವ ಆತ್ಮಸ್ಥೈರ್ಯ ಭೌಗೋಳಿಕವಾಗಿ ದೇಶವನ್ನು ರಕ್ಷಿಸುತ್ತದೆ. ಆದರೆ ಪ್ರಜಾಸತ್ತಾತ್ಮಕ ಮೌಲ್ಯಗಳೇ ದುರ್ಬಲವಾಗುತ್ತಿರುವಾಗ ದೇಶ ಆಂತರಿಕವಾಗಿ ಶಿಥಿಲವಾಗುತ್ತಾ ಹೋಗುತ್ತದೆ. ರಾಫೇಲ್, ಕ್ಷಿಪಣಿ, ಅಣುಬಾಂಬುಗಳು ಬಡತನ, ಅಪೌಷ್ಟಿಕತೆಯನ್ನು ಹೋಗಲಾಡಿಸುವುದೂ ಇಲ್ಲ, ಸಾಮಾಜಿಕ ಸಮಾನತೆಯನ್ನು ಕಾಪಾಡುವುದೂ ಇಲ್ಲ, ಸಾಂಸ್ಕೃತಿಕ ವೈವಿಧ್ಯತೆಯನ್ನು ಸಂರಕ್ಷಿಸುವುದೂ ಇಲ್ಲ.
ಇದನ್ನು ಸಾಧಿಸಬೇಕಾದರೆ ನಮ್ಮ ಸಂವಿಧಾನದ ಅಂತಃಸತ್ವ ಉಳಿಯಬೇಕು, ತಳಮಟ್ಟದಲ್ಲಿ ಉಳಿಯಬೇಕು, ಸಾರ್ವಭೌಮ ಪ್ರಜೆಗಳ ನಡುವೆ ಉಳಿಯಬೇಕು, ಗ್ರಾಂಥಿಕವಾಗಿ ಉಳಿದರೆ ಸಾಲದು. ಜನರ ನಾಡಿಮಿಡಿತವನ್ನೇ ಗ್ರಹಿಸಲಾರದಷ್ಟು ಭ್ರಷ್ಟರಾಗಿರುವ ಜನಪ್ರತಿನಿಧಿಗಳಿಗೆ ಈ ವಾಸ್ತವದ ಅರಿವು ಮೂಡಬೇಕು. ಆಗ ಮಾತ್ರ ನಾವು ಸಂವಿಧಾನವನ್ನು ಕೈಯ್ಯಲ್ಲಿ ಹಿಡಿದು ಎದೆಗವುಚಿಕೊಂಡು ಅಂಬೇಡ್ಕರರತ್ತ ನಡೆಯುವ ಅರ್ಹತೆ ಪಡೆಯಲು ಸಾಧ್ಯ.
ಸುದ್ದಿದಿನ. ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


